Home Blog

ವಿಚ್ಛೇದನದ ಬಳಿಕವೂ ಮಕ್ಕಳ ಜವಾಬ್ದಾರಿ ಇಬ್ಬರದ್ದೇ.. ಅಪರೂಪದ ಡಿವೋರ್ಸ್ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ

0

ಬೆಂಗಳೂರು: ಅಪರೂಪದ ವಿಚ್ಛೇದನ ಪ್ರಕರಣವೊಂದರಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ದಂಪತಿಯ ವಿವಾಹವನ್ನು ವಿಚ್ಛೇದನಗೊಳಿಸಿರುವ ನ್ಯಾಯಾಲಯ, ಪತ್ನಿಗೆ ₹50 ಲಕ್ಷ ಶಾಶ್ವತ ಜೀವನಾಂಶ ನೀಡುವಂತೆ ಪತಿಗೆ ಸೂಚಿಸಿದೆ. ಜೊತೆಗೆ, ಇಬ್ಬರು ಅಪ್ರಾಪ್ತ ಮಕ್ಕಳ ಪೋಷಕರಾಗಿ ಇಬ್ಬರೂ ತಮ್ಮ ಜವಾಬ್ದಾರಿಯನ್ನು ಮುಂದುವರಿಸಬೇಕು ಎಂದು ನಿರ್ದೇಶಿಸಿದೆ.

ನ್ಯಾಯಮೂರ್ತಿ ಡಿ.ಕೆ. ಸಿಂಗ್ ಮತ್ತು ನ್ಯಾಯಮೂರ್ತಿ ಎಚ್. ಶಾಂತಿ ಭೂಷಣ್ ಅವರಿದ್ದ ವಿಭಾಗೀಯ ಪೀಠವು ಮಂಗಳೂರಿನ 40 ವರ್ಷದ ವ್ಯಕ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿ ಈ ಆದೇಶ ನೀಡಿದೆ.

ಪತ್ನಿಗೆ ₹2 ಕೋಟಿ ಶಾಶ್ವತ ಜೀವನಾಂಶ ಪಾವತಿಸುವಂತೆ ಜೂನ್ 20, 2026ರಂದು ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಪತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಕಾಲೇಜು ಸಹಪಾಠಿಗಳಾಗಿದ್ದ ದಂಪತಿ 2011ರಲ್ಲಿ ಮಂಗಳೂರಿನಲ್ಲಿ ವಿವಾಹವಾಗಿದ್ದರು. ಬಳಿಕ ಬ್ರಿಟನ್‌ಗೆ ತೆರಳಿದ್ದ ಅವರಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ.

ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾದ ಹಿನ್ನೆಲೆಯಲ್ಲಿ ಪತ್ನಿ 2021ರಲ್ಲಿ ಪತಿಯಿಂದ ದೂರವಾಗಿದ್ದರು. ಬಳಿಕ ಭಾರತದಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಲಾಗಿತ್ತು.

ಪತ್ನಿ ವೈದ್ಯೆಯಾಗಿರುವುದು ಹಾಗೂ ಅವರ ಆರ್ಥಿಕ ಸ್ಥಿತಿಗತಿಗಳನ್ನು ಪರಿಗಣಿಸಿದ ಹೈಕೋರ್ಟ್, ಕೌಟುಂಬಿಕ ನ್ಯಾಯಾಲಯ ನಿಗದಿಪಡಿಸಿದ್ದ ₹2 ಕೋಟಿ ಶಾಶ್ವತ ಜೀವನಾಂಶವನ್ನು ₹50 ಲಕ್ಷಕ್ಕೆ ಇಳಿಸಿದೆ.

ಆದರೆ, ಮಕ್ಕಳ ನಿರ್ವಹಣೆ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಹಾಗೂ ಇತರ ಅಗತ್ಯ ವೆಚ್ಚಗಳಿಗಾಗಿ ಪತಿ ಪ್ರತಿ ಮಗುವಿಗೆ ತಿಂಗಳಿಗೆ ₹25 ಸಾವಿರ ಪಾವತಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಪ್ರತಿ ತಿಂಗಳ 10ನೇ ತಾರೀಖಿನೊಳಗೆ ಈ ಮೊತ್ತವನ್ನು ಪಾವತಿಸಬೇಕು ಎಂದು ನಿರ್ದೇಶಿಸಿದೆ.

ಅಲ್ಲದೆ, ಪ್ರತಿ ವರ್ಷ ಪೂರ್ಣಗೊಂಡ ಬಳಿಕ ಮಕ್ಕಳ ಮಾಸಿಕ ನಿರ್ವಹಣಾ ಮೊತ್ತವನ್ನು ಪ್ರತಿ ಮಗುವಿಗೆ ₹5 ಸಾವಿರದಂತೆ ಹೆಚ್ಚಿಸಬೇಕು. ಮಕ್ಕಳು ಪ್ರಾಪ್ತ ವಯಸ್ಸಿಗೆ ತಲುಪುವವರೆಗೆ ಈ ಹೆಚ್ಚಳ ಮುಂದುವರಿಯಬೇಕು ಎಂದು ನ್ಯಾಯಾಲಯ ತಿಳಿಸಿದೆ.

ವಿವಾಹ ಸಂಬಂಧ ಅಂತ್ಯಗೊಂಡರೂ ಮಕ್ಕಳ ಮೇಲಿನ ಪೋಷಕರ ಜವಾಬ್ದಾರಿಗಳು ಮುಂದುವರಿಯುತ್ತವೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಮಕ್ಕಳ ವಿವಾಹದ ಸಂದರ್ಭದಲ್ಲಿ ತನ್ನ ಆರ್ಥಿಕ ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಾಹ ವೆಚ್ಚಕ್ಕೆ ಪ್ರೀತಿ ಮತ್ತು ವಾತ್ಸಲ್ಯದಿಂದ ಕೊಡುಗೆ ನೀಡಬೇಕು ಎಂದು ಪತಿಗೆ ಸೂಚಿಸಿದೆ.

ಇದೇ ವೇಳೆ ಮಕ್ಕಳ ಹಿತದೃಷ್ಟಿಯಿಂದ ಹಲವು ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ. ಮಕ್ಕಳ ಎದುರು ಅಥವಾ ಮಕ್ಕಳು ಕೇಳುವಂತೆ ದಂಪತಿ ಪರಸ್ಪರರ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆಗಳನ್ನು ನೀಡಬಾರದು. ಮಕ್ಕಳು ತಂದೆ-ತಾಯಿ ಇಬ್ಬರೊಂದಿಗೂ ಪ್ರೀತಿಯ, ಆರೋಗ್ಯಕರ ಹಾಗೂ ಯಾವುದೇ ಅಡೆತಡೆಯಿಲ್ಲದ ಸಂಬಂಧ ಹೊಂದುವಂತೆ ಇಬ್ಬರೂ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ಪತ್ನಿಯು ಪತಿಯ ಮುಂಚಿತ ಮಾಹಿತಿ ನೀಡದೆ ಹಾಗೂ ನ್ಯಾಯಾಲಯದ ಅನುಮತಿ ಪಡೆಯದೆ ಮಕ್ಕಳನ್ನು ತಾತ್ಕಾಲಿಕವಾಗಿ ಅಥವಾ ಶಾಶ್ವತವಾಗಿ ಭಾರತದ ಹೊರಗೆ ಸ್ಥಳಾಂತರಿಸಬಾರದು ಎಂದು ನ್ಯಾಯಾಲಯ ಸೂಚಿಸಿದೆ.

ಇನ್ನು ಮಕ್ಕಳನ್ನು ಭೇಟಿಯಾಗಲು ಪತಿಗೆ ಅವಕಾಶ ಕಲ್ಪಿಸಿರುವ ನ್ಯಾಯಾಲಯ, ಪ್ರತಿ ಶನಿವಾರ ಮತ್ತು ಭಾನುವಾರ ತಲಾ ಮೂರು ಗಂಟೆಗಳ ಕಾಲ ತಾಯಿಯ ಸಮ್ಮುಖದಲ್ಲಿ ಮಕ್ಕಳನ್ನು ಭೇಟಿ ಮಾಡಬಹುದು ಎಂದು ತಿಳಿಸಿದೆ. ಇದರ ಜೊತೆಗೆ ಆಡಿಯೋ ಅಥವಾ ವಿಡಿಯೋ ಕಾಲ್ ಮೂಲಕವೂ ಮಕ್ಕಳೊಂದಿಗೆ ಸಂಪರ್ಕದಲ್ಲಿರಲು ಪತಿಗೆ ಅವಕಾಶ ನೀಡಿದೆ.

ಹೀಗೆ, ದಂಪತಿಯ ವೈವಾಹಿಕ ಸಂಬಂಧವನ್ನು ಅಂತ್ಯಗೊಳಿಸಿದರೂ, ಮಕ್ಕಳ ಹಿತಾಸಕ್ತಿ ಮತ್ತು ಇಬ್ಬರೂ ಪೋಷಕರ ಜವಾಬ್ದಾರಿಯನ್ನು ಮುಂದುವರಿಸುವುದಕ್ಕೆ ಹೈಕೋರ್ಟ್ ತನ್ನ ಆದೇಶದಲ್ಲಿ ವಿಶೇಷ ಒತ್ತು ನೀಡಿದೆ.

ಲಂಡನ್ʼನಲ್ಲಿ ವಿಜಯ್ ನೋಡಲು ಮುಗಿಬಿದ್ದ ಅಭಿಮಾನಿಗಳು: ಭಾರಿ ಜನದಟ್ಟಣೆ ಹಿನ್ನೆಲೆ ಕಾರ್ಯಕ್ರಮ ರದ್ದು!

0

ಲಂಡನ್: ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್‌ ಸದ್ಯ ಯುಕೆ ಪ್ರವಾಸದಲ್ಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಈ ನಡುವೆ ಲಂಡನ್‌ನಲ್ಲಿ ವಿಜಯ್‌ ಅವರನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ, ಅವರು ಭಾಗವಹಿಸಬೇಕಿದ್ದ ಕಾರ್ಯಕ್ರಮವನ್ನು ಭದ್ರತಾ ಕಾರಣಗಳಿಂದ ರದ್ದುಗೊಳಿಸಲಾಗಿದೆ.

ಲಂಡನ್‌ನ ಪ್ರತಿಷ್ಠಿತ ಶಾಂಗ್ರಿ-ಲಾ ದಿ ಶಾರ್ಡ್‌ ಹೋಟೆಲ್‌ನಲ್ಲಿ ಹೈಪ್ರೊಫೈಲ್ ಕಾರ್ಯಕ್ರಮವೊಂದರಲ್ಲಿ ವಿಜಯ್‌ ಭಾಗವಹಿಸಬೇಕಿತ್ತು. ಸೆಪ್ಟೆಂಬರ್‌ 15ರಂದು ಯುಕೆ ಸ್ಥಳೀಯ ಕಾಲಮಾನದ ಪ್ರಕಾರ ಕಾರ್ಯಕ್ರಮ ನಡೆಯಬೇಕಿದ್ದ ಹಿನ್ನೆಲೆಯಲ್ಲಿ, ವಿಜಯ್‌ ಅವರನ್ನು ನೋಡಲು ನೂರಾರು ಅಭಿಮಾನಿಗಳು ಸ್ಥಳದಲ್ಲಿ ಜಮಾಯಿಸಿದ್ದರು.

ಗಂಟೆಗಟ್ಟಲೆ ಅಭಿಮಾನಿಗಳು ದಂಡು ದಂಡಾಗಿ ಕಾಯುತ್ತಿದ್ದರಿಂದ ಸ್ಥಳದಲ್ಲಿ ಭಾರಿ ಜನದಟ್ಟಣೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗಿದ್ದು, ಅಗತ್ಯ ಅನುಮತಿಗಳ ವಿಚಾರದಲ್ಲೂ ಸಮಸ್ಯೆ ಎದುರಾಗಿದೆ ಎನ್ನಲಾಗಿದೆ. ಬಳಿಕ ಲಂಡನ್ ಮೆಟ್ರೋಪಾಲಿಟನ್ ಪೊಲೀಸರು ಮಧ್ಯಪ್ರವೇಶಿಸಿ ಆಯೋಜಕರೊಂದಿಗೆ ವಿಚಾರಣೆ ನಡೆಸಿದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಗೊಳಿಸಲಾಗಿದೆ ಎಂದು ಘೋಷಿಸಲಾಯಿತು.

ಈ ಬಗ್ಗೆ ವಿಜಯ್‌ ತಂಡದ ಸದಸ್ಯರೊಬ್ಬರು ಧ್ವನಿವರ್ಧಕದ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದು, ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಹಾಗೂ ಅಗತ್ಯ ಅನುಮತಿ ಲಭ್ಯವಾಗದ ಕಾರಣ ಕಾರ್ಯಕ್ರಮವನ್ನು ರದ್ದುಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದರಿಂದ ವಿಜಯ್‌ ಅವರನ್ನು ನೋಡಲು ಗಂಟೆಗಟ್ಟಲೆ ಕಾದಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಈ ಕುರಿತು ತಮಿಳುನಾಡಿನ ವಿಜಯ್‌ ಅವರ ಪಕ್ಷ ಟಿವಿಕೆ ಕೂಡ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಕಾರ್ಯಕ್ರಮ ರದ್ದಾದ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಲಂಡನ್ ಮೆಟ್ರೋಪಾಲಿಟನ್ ಪೊಲೀಸರ ಮನವಿಯನ್ನು ಪರಿಗಣಿಸಿ, ವಿಜಯ್‌ ಅವರನ್ನು ಭೇಟಿ ಮಾಡಲು ಸಾಧ್ಯವಾಗದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಯಾರೂ ಅವರನ್ನು ಭೇಟಿ ಮಾಡಲು ಪ್ರಯತ್ನಿಸಬಾರದು ಎಂದು ಪಕ್ಷ ಅಭಿಮಾನಿಗಳಲ್ಲಿ ಮನವಿ ಮಾಡಿದೆ.

ಇನ್ನು ಲಂಡನ್‌ನಲ್ಲಿ ವಿಜಯ್‌ ಕಾರ್ಯಕ್ರಮಕ್ಕಾಗಿ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಸೇರಿದ್ದ ದೃಶ್ಯಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಶಾರ್ಡ್‌ ಹಾಗೂ ಲಂಡನ್‌ ಬ್ರಿಡ್ಜ್‌ ಪ್ರದೇಶದಲ್ಲಿ ಜನದಟ್ಟಣೆ ಹೆಚ್ಚಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುವುದು ಭದ್ರತಾ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಷ್ಟವಾಗುತ್ತಿದೆ ಎಂದು ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಒಟ್ಟಿನಲ್ಲಿ ನೆಚ್ಚಿನ ನಾಯಕ ಹಾಗೂ ನಟ ವಿಜಯ್‌ ಅವರನ್ನು ಕಣ್ತುಂಬಿಕೊಳ್ಳಲು ಗಂಟೆಗಟ್ಟಲೆ ಕಾದಿದ್ದ ಅಭಿಮಾನಿಗಳು, ಕೊನೆ ಕ್ಷಣದಲ್ಲಿ ಕಾರ್ಯಕ್ರಮ ರದ್ದಾದ ಕಾರಣ ನಿರಾಸೆ ಅನುಭವಿಸಿದ್ದಾರೆ.

ಸೆ.17ರಂದು ಪುಟ್ಟರಾಜ ಗವಾಯಿಗಳ 16ನೇ ಪುಣ್ಯಾರಾಧನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಗಾನಗಂಧರ್ವ ಕಲಾ ಟ್ರಸ್ಟ್ ಹಾಗೂ ನಾದಶ್ರೀ ಸಂಗೀತ ಪಾಠಶಾಲೆ, ಗದಗ ಇವರ ಸಹಯೋಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಕಾರದೊಂದಿಗೆ ಪದ್ಮಭೂಷಣ ಡಾ. ಪಂ. ಪುಟ್ಟರಾಜ ಗವಾಯಿಗಳವರ 16ನೇ ಪುಣ್ಯಸ್ಮರಣೋತ್ಸವ ಹಾಗೂ ನಾದಶ್ರೀ ಸಂಗೀತ ಪಾಠಶಾಲೆಯ 3ನೇ ವಾರ್ಷಿಕೋತ್ಸವವನ್ನು ಸೆ.17ರಂದು ಸಂಜೆ 6 ಗಂಟೆಗೆ ನಗರದ ವಿವೇಕಾನಂದ ಬಡಾವಣೆಯ ನಾದಶ್ರೀ ಸಂಗೀತ ಪಾಠಶಾಲೆಯಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮಕ್ಕೆ ಗದಗ ಮುಕ್ಕಣ್ಣೇಶ್ವರ ಮಠದ ಸದ್ಗುರು ಪೂಜ್ಯ ಶ್ರೀ ಶಂಕರಾನಂದ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಮುಂಡರಗಿ ಬೃಹನ್ಮಠದ ವೀರೇಶ್ವರ ಶರಣರು ಸಮ್ಮುಖ ವಹಿಸುವರು. ಗಾನಗಂಧರ್ವ ಕಲಾ ಟ್ರಸ್ಟ್ ಅಧ್ಯಕ್ಷ ಬಿ.ಎಂ. ಪಂಚಾಕ್ಷರಿ ಅಧ್ಯಕ್ಷತೆ ವಹಿಸುವರು.

ಸೌಖ್ಯ ಆಸ್ಪತ್ರೆಯ ಮೂತ್ರರೋಗ ಶಸ್ತ್ರಚಿಕಿತ್ಸಕ ಹಾಗೂ ಮೂತ್ರಪಿಂಡ ಕಸಿ ತಜ್ಞ ಡಾ. ಪ್ರವೀಣ ಡಂಬಳ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಕಾರ್ಯಕ್ರಮ ಉದ್ಘಾಟಿಸುವರು.

ಇದೇ ಸಂದರ್ಭದಲ್ಲಿ ಜಯದೇವಿ ಎ. ಕವಲೂರ ಅವರಿಗೆ ‘ಶ್ರೀಗುರು ಪುಟ್ಟರಾಜ ಪುರಸ್ಕಾರ’ ಶಿಕ್ಷಣ ಶ್ರೀ ಗೌರವ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕವಿತಾ ಕೆ. ಕೊನ್ನೂರು, ಸಿದ್ಧರಾಮಪ್ಪ ಶಿವನಣತ್ತಿ, ಬಸವರಾಜ ಅಂಗಡಿ ಹಾಗೂ ಗಂಗಣ್ಣ ಡಿ. ಮಲ್ಲಾಡದ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು.

ಸ್ವರನಮನ ಕಾರ್ಯಕ್ರಮದಲ್ಲಿ ಹನುಮಂತ ಎ. ಹೂಗಾರ ತಬಲಾ ವಾದನ, ಕುಮಾರಿ ಭಾಗ್ಯ ಶೇಖರಯ್ಯ ವಿಭೂತಿ ಬಾನ್ಸುರಿ ವಾದನ ಪ್ರಸ್ತುತಪಡಿಸಲಿದ್ದು, ನಾದಶ್ರೀ ಸಂಗೀತ ಪಾಠಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ರಾಷ್ಟ್ರೀಯ ಶೂಟಿಂಗ್‌ನಲ್ಲಿ ರಿಯಾನ್‌ಗೆ ತ್ರಿವಳಿ ಚಿನ್ನ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಗುರುದೇವ್ಸ್ ಜೆಜಿ ಪಿಯು ಕಾಲೇಜಿನ ವಿದ್ಯಾರ್ಥಿ ರಿಯಾನ್ ಅಹಮದ್ ರಾಷ್ಟ್ರೀಯ ಮಟ್ಟದ 10 ಮೀಟರ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಗದಗ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಕೇರಳದ ತಿರುವನಂತಪುರದ ಇಂಟರ್‌ನ್ಯಾಷನಲ್ ಶೂಟಿಂಗ್ ಅಕಾಡೆಮಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ತಮಿಳುನಾಡು, ಕೇರಳ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಸ್ಪರ್ಧಿಗಳು ಭಾಗವಹಿಸಿದ್ದರು.

ಅತ್ಯುತ್ತಮ ಏಕಾಗ್ರತೆ, ನಿಖರತೆ ಹಾಗೂ ಆತ್ಮವಿಶ್ವಾಸದೊಂದಿಗೆ ಸ್ಪರ್ಧಿಸಿದ ರಿಯಾನ್ ಅಹಮದ್ ಅವರು ಜೂನಿಯರ್, ಯೂತ್ ಹಾಗೂ ಸಬ್-ಯೂತ್ ವಿಭಾಗಗಳಲ್ಲಿ ತಲಾ ಒಂದು ಚಿನ್ನದ ಪದಕ ಗೆದ್ದು ತ್ರಿವಳಿ ಚಿನ್ನದ ಸಾಧನೆ ಮಾಡಿದ್ದಾರೆ. ಜತೆಗೆ ಜನರಲ್ ವಿಭಾಗದಲ್ಲಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಮೂರು ಚಿನ್ನ ಹಾಗೂ ಒಂದು ಬೆಳ್ಳಿ ಪದಕ ಗೆದ್ದಿರುವುದು ರಿಯಾನ್ ಅವರ ಪ್ರತಿಭೆ, ಕಠಿಣ ಪರಿಶ್ರಮ ಹಾಗೂ ಶೂಟಿಂಗ್ ಕ್ರೀಡೆಯಲ್ಲಿನ ಬದ್ಧತೆಗೆ ಸಾಕ್ಷಿಯಾಗಿದೆ.

ರಿಯಾನ್ ಅವರ ಸಾಧನೆಗೆ ಗುರುದೇವ್ಸ್ ಜೆಜಿ ಪಿಯು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ದೇಶವನ್ನು ಪ್ರತಿನಿಧಿಸಿ ಯಶಸ್ಸು ಗಳಿಸಲಿ ಎಂದು ಹಾರೈಸಿದ್ದಾರೆ.

ಅಹಿಂದ ಧ್ವನಿ ಅಡಗಿಸಲು ಇಡಿ ದಾಳಿ: ಸಂಗನಗೌಡ ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಡಂಬಳ: ಅಹಿಂದ ವರ್ಗಗಳ ಪ್ರಬಲ ಧ್ವನಿಯಾಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬಸ್ಥರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿರುವುದು ರಾಜಕೀಯ ಪ್ರೇರಿತ ಕ್ರಮವಾಗಿದೆ ಎಂದು ರೋಣ ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗನಗೌಡ (ಮಿಥುನ) ಜಿ. ಪಾಟೀಲ ಆರೋಪಿಸಿದರು.

ಡಂಬಳ ಹೋಬಳಿಯ ಹಿರೇವಡ್ಡಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಭ್ರಷ್ಟಾಚಾರ ನಡೆಸಿದವರು ಯಾರೂ ಇಲ್ಲವೇ? ಅಹಿಂದ ವರ್ಗಗಳ ಧ್ವನಿಯಾಗಿರುವ ಸತೀಶ್ ಜಾರಕಿಹೊಳಿ ಅವರನ್ನು ಮಾತ್ರ ಏಕೆ ಟಾರ್ಗೆಟ್ ಮಾಡಲಾಗುತ್ತಿದೆ? ಎಂದು ಪ್ರಶ್ನಿಸಿದರು.

ಸತೀಶ್ ಜಾರಕಿಹೊಳಿ ಅವರ ರಾಜಕೀಯ ಬೆಳವಣಿಗೆಯನ್ನು ಸಹಿಸಲಾಗದೆ ಬಿಜೆಪಿ ಇಡಿ ಹಾಗೂ ಆದಾಯ ತೆರಿಗೆ (ಐಟಿ) ಸಂಸ್ಥೆಗಳನ್ನು ಬಳಸಿಕೊಂಡು ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ಈ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲೂ ಇದೇ ರೀತಿಯ ದಾಳಿ ನಡೆಸಿ ಅವರ ರಾಜಕೀಯ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿತ್ತು ಎಂದು ಹೇಳಿದರು.

ನಮ್ಮ ನಾಯಕರು ಕಾನೂನುಬದ್ಧವಾಗಿಯೇ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ತನಿಖೆಗೆ ಮುಂದಾಗಿರುವ ಇಡಿ ಹಾಗೂ ಐಟಿ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳನ್ನು ನೀಡಿ ಕಾನೂನುಬದ್ಧವಾಗಿ ಉತ್ತರಿಸಲಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಸತ್ಯತೆ ಹೊರಬರಲಿದೆ” ಎಂದು ಸಂಗನಗೌಡ ಪಾಟೀಲ ಹೇಳಿದರು.

ಸತೀಶ್ ಜಾರಕಿಹೊಳಿ ಅವರು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯದ ಪ್ರಭಾವಿ ನಾಯಕರಾಗಿದ್ದು, ಅಹಿಂದ ವರ್ಗಗಳ ಪರವಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ರಾಜಕೀಯ ಪ್ರಭಾವವನ್ನು ಕುಗ್ಗಿಸುವ ಉದ್ದೇಶದಿಂದಲೇ ದಾಳಿ ನಡೆಸಲಾಗಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ಅವರು ಆರೋಪಿಸಿದರು.

ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸುವ ಪ್ರವೃತ್ತಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಆರೋಗ್ಯಕರವಲ್ಲ. ರಾಜಕೀಯ ವಿರೋಧಿಗಳನ್ನು ತನಿಖೆಯ ಹೆಸರಿನಲ್ಲಿ ಹತ್ತಿಕ್ಕುವ ಪ್ರಯತ್ನ ನಡೆಯಬಾರದು ಎಂದು ಅವರು ಹೇಳಿದರು.

ಸುಳ್ಳು ವದಂತಿಗಳಿಗೆ ಯಾರೂ ಕಿವಿಗೊಡಬಾರದು. ತನಿಖೆ ಬಳಿಕ ಸತ್ಯ ಹೊರಬರಲಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ.

— ಸಂಗನಗೌಡ ಪಾಟೀಲ

UPI ವಹಿವಾಟಿಗೂ ತೆರಿಗೆ ವಿಧಿಸಲು ಕಾಂಗ್ರೆಸ್ ವಿರೋಧ: ‘ಇದು ದೇಶದ ಜನರಿಗೆ ಮಾಡಿದ ಮೋಸ’ – ಸುರ್ಜೇವಾಲಾ ಕಿಡಿ!

0

ಬೆಂಗಳೂರು: ಯುಪಿಐ ವಹಿವಾಟುಗಳಿಗೆ ಶುಲ್ಕ ವಿಧಿಸುವ ಕೇಂದ್ರದ ನಿರ್ಧಾರವನ್ನು ಖಂಡಿಸಿ ಕಾಂಗ್ರೆಸ್ ನಾಯಕ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಈ ಕ್ರಮ ದೇಶದ ಜನರಿಗೆ ಮಾಡಿದ ಮೋಸ ಎಂದು ಆರೋಪಿಸಿದ್ದಾರೆ.

ಬಡವರು, ಮಧ್ಯಮ ವರ್ಗ ಸೇರಿದಂತೆ ಎಲ್ಲರ ಮೇಲೂ ಇದರ ಪರಿಣಾಮ ಬೀರಲಿದೆ ಎಂದು ಸುರ್ಜೇವಾಲ ಹೇಳಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ ಅಮೆರಿಕದ ಕಂಪನಿಗಳಿಗೆ ಶರಣಾಗಿದೆ ಎಂದು ಆರೋಪಿಸಿದ ಅವರು, ಯುಪಿಐ ವಹಿವಾಟಿನ ಮೇಲಿನ ಶುಲ್ಕದಿಂದ ಜನರಿಗೆ ಹೊರೆಯಾಗಲಿದೆ ಎಂದಿದ್ದಾರೆ.

ಇತ್ತೀಚಿನ ನಿಯಮದ ಪ್ರಕಾರ, ₹2,000ಕ್ಕಿಂತ ಹೆಚ್ಚಿನ ಮೊತ್ತದ ವ್ಯಕ್ತಿಯಿಂದ-ವ್ಯಾಪಾರಿಗೆ (P2M) ಯುಪಿಐ ವಹಿವಾಟುಗಳಿಗೆ ಅಕ್ಟೋಬರ್ 15ರಿಂದ ಶೇ.0.4ರಷ್ಟು ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಅನ್ವಯವಾಗಲಿದೆ. ₹75,000 ಅಥವಾ ಅದಕ್ಕಿಂತ ಹೆಚ್ಚಿನ ವಹಿವಾಟಿಗೆ ಪ್ರತಿ ವಹಿವಾಟಿಗೆ ಗರಿಷ್ಠ ₹300 ಮಿತಿ ಇದೆ. ಆದರೆ ವ್ಯಕ್ತಿಯಿಂದ ವ್ಯಕ್ತಿಗೆ (P2P) ನಡೆಯುವ ಯುಪಿಐ ವಹಿವಾಟುಗಳಿಗೆ ಯಾವುದೇ ಶುಲ್ಕವಿಲ್ಲ. ಸರ್ಕಾರದ ಸ್ಪಷ್ಟನೆಯ ಪ್ರಕಾರ, ಈ MDR ಅನ್ನು ಗ್ರಾಹಕರಿಂದ ವಸೂಲಿ ಮಾಡಬಾರದು.

ಈ ಶುಲ್ಕ ವ್ಯವಸ್ಥೆಯನ್ನು ಟೀಕಿಸಿರುವ ಸುರ್ಜೇವಾಲ, ಯುಪಿಐ ಅನ್ನು ಮೋದಿ ಸರ್ಕಾರ ‘ಕಲೆಕ್ಷನ್ ಮಷಿನ್’ ಆಗಿ ಪರಿವರ್ತಿಸುತ್ತಿದೆ ಎಂದು ಆರೋಪಿಸಿದ್ದಾರೆ. ಮುಂದಿನ ದಿನಗಳಲ್ಲಿ ವಹಿವಾಟು ಶುಲ್ಕವನ್ನು ಎಲ್ಲರಿಗೂ ವಿಸ್ತರಿಸುವ ಆತಂಕವಿದೆ ಎಂದು ಅವರು ಹೇಳಿದ್ದಾರೆ.

ಇನ್ನು ರಾಜ್ಯ ಸರ್ಕಾರ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವಂತೆ ನೀಡಿರುವ ಆದೇಶದ ಬಗ್ಗೆಯೂ ಸುರ್ಜೇವಾಲ ಪ್ರತಿಕ್ರಿಯಿಸಿದ್ದಾರೆ. ಕೇಂದ್ರದ ಮಾರ್ಗಸೂಚಿಗಳಿಗೆ ಬದ್ಧವಾಗಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರ ವಂದೇ ಮಾತರಂಗೆ ಗೌರವ ನೀಡುವ ಕೆಲಸ ಮಾಡಿದೆ. ರಾಷ್ಟ್ರಪತಿ, ರಾಜ್ಯಪಾಲರು ಹಾಗೂ ಪ್ರಧಾನಮಂತ್ರಿ ಆಗಮಿಸುವ ಸಂದರ್ಭದಲ್ಲಿ ಪೂರ್ಣ ಗೀತೆಯನ್ನು ಹಾಡಲಾಗುತ್ತದೆ. ವಂದೇ ಮಾತರಂ ಹಾಡುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಸತೀಶ್ ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್ ನಾಯಕರ ಮೇಲೆ ಕೇಂದ್ರ ತನಿಖಾ ಸಂಸ್ಥೆಗಳ ದಾಳಿ ನಡೆಯುತ್ತಿರುವ ವಿಚಾರವಾಗಿ ಸುರ್ಜೇವಾಲ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಎಸ್‌ಟಿ ಸಮುದಾಯದ ನಾಯಕ ಎಂಬ ಕಾರಣಕ್ಕೆ ಅವರನ್ನು ಎರಡು ಬಾರಿ ಟಾರ್ಗೆಟ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ಡಿಕೆ ಸಹೋದರರು, ಸಿದ್ದರಾಮಯ್ಯ, ಭೈರತಿ ಸುರೇಶ್, ಜಮೀರ್ ಅಹ್ಮದ್ ಖಾನ್, ಕೆ.ವಿ. ವೀರೇಂದ್ರ ಪಪ್ಪಿ, ಡಾ. ಜಿ. ಪರಮೇಶ್ವರ್, ನಾರಾ ಭರತ್ ರೆಡ್ಡಿ, ನಾಗೇಂದ್ರ ಹಾಗೂ ದದ್ದಲ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಮೇಲೆ ತನಿಖಾ ಸಂಸ್ಥೆಗಳ ದಾಳಿ ನಡೆದಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಈ ಎಲ್ಲ ದಾಳಿಗಳಿಗೆ ಪ್ರಮುಖ ಕಾರಣ ಕಾಂಗ್ರೆಸ್‌ನಲ್ಲಿರುವ ಎಸ್‌ಸಿ, ಎಸ್‌ಟಿ ಸಮುದಾಯದ ನಾಯಕರು ಎಂಬುದು ಎಂದು ಸುರ್ಜೇವಾಲ ಆರೋಪಿಸಿದ್ದಾರೆ. ಯಾವುದೇ ಕಾರಣಕ್ಕೂ ಕೇಂದ್ರದ ಮುಂದೆ ಕಾಂಗ್ರೆಸ್ ನಾಯಕರು ತಲೆಬಾಗುವುದಿಲ್ಲ. ನಾವೆಲ್ಲರೂ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಇದ್ದೇವೆ ಎಂದು ಅವರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ, ಜನಾರ್ದನ ರೆಡ್ಡಿ ಹಾಗೂ ರೇಣುಕಾಚಾರ್ಯ ಅವರ ವಿರುದ್ಧದ ಪ್ರಕರಣಗಳ ಕುರಿತು ಪ್ರಶ್ನಿಸಿದ ಸುರ್ಜೇವಾಲ, ಅವರ ಮೇಲಿನ ಪ್ರಾಸಿಕ್ಯೂಷನ್ ವಿಚಾರಗಳು ಬಾಕಿ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

 

ಮತದಾನವೇ ಪ್ರಜಾಪ್ರಭುತ್ವದ ಶಕ್ತಿ: ಶಾಸಕ ಡಾ. ಎಚ್.ಕೆ. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಜಾಪ್ರಭುತ್ವದ ರಕ್ಷಣೆಗೆ ಮತದಾನದ ಹಕ್ಕು ಪ್ರಬಲ ಅಸ್ತ್ರವಾಗಿದೆ. ಮತದಾನದ ಹಕ್ಕು ಉಳಿದರೆ ಮಾತ್ರ ಪ್ರಜಾಪ್ರಭುತ್ವ ಬಲಿಷ್ಠವಾಗುತ್ತದೆ. ಸಂವಿಧಾನದ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶಾಸಕ ಡಾ. ಎಚ್.ಕೆ. ಪಾಟೀಲ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಂಗಳವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಸಂವಿಧಾನದ ಪೀಠಿಕೆಯ ಆಶಯದಂತೆ ಪ್ರತಿಯೊಬ್ಬರೂ ಬದುಕಬೇಕು. ಎಲ್ಲರಿಗೂ ಸಮಾನ ಅವಕಾಶ ಹಾಗೂ ಸ್ಥಾನಮಾನ ದೊರೆಯಬೇಕು. ಪ್ರಜಾಪ್ರಭುತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.

ದೇಶದಲ್ಲಿ ಬಡತನ ನಿರ್ಮೂಲನೆಗೆ ಸಾಕಷ್ಟು ಪ್ರಗತಿ ಸಾಧಿಸಿದ್ದರೂ ಅಸ್ಪೃಶ್ಯತೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಸಾಮಾಜಿಕ ಸಮಾನತೆಗಾಗಿ ಇನ್ನಷ್ಟು ಪರಿಣಾಮಕಾರಿ ಪ್ರಯತ್ನಗಳು ನಡೆಯಬೇಕು ಎಂದು ಹೇಳಿದರು.

ಸರ್ಕಾರ ಜಗಜ್ಯೋತಿ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಬಸವಣ್ಣನವರ ಅನುಭವ ಮಂಟಪವನ್ನು ಮೊದಲ ಸಂಸತ್ತು ಎಂದು ಪರಿಗಣಿಸಬಹುದು. ಅನುಭವ ಮಂಟಪದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳಲ್ಲಿ ಸಾಮ್ಯತೆ ಕಾಣಬಹುದು. ಸಂವಿಧಾನದ ಆಶಯಗಳನ್ನು ಗೌರವಿಸಿ ಪಾಲಿಸುವುದರಿಂದಲೇ ದೇಶ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ಎಚ್.ಕೆ. ಪಾಟೀಲ ಹೇಳಿದರು.

ಸಹಾಯಕ ಕಾನೂನು ನೆರವು ಅಭಿರಕ್ಷಕ ಗುರುರಾಜ ಗೌರಿ ಉಪನ್ಯಾಸ ನೀಡಿ, ಪ್ರಜಾಪ್ರಭುತ್ವ ಕೇವಲ ಆಡಳಿತ ವ್ಯವಸ್ಥೆಯಲ್ಲ; ಅದೊಂದು ಜೀವನ ವಿಧಾನವಾಗಿದೆ. ಪ್ರಜಾಪ್ರಭುತ್ವವನ್ನು ಕೇವಲ ಮೇಲ್ನೋಟಕ್ಕೆ ನೋಡುವುದಲ್ಲ, ಅದರ ಮೌಲ್ಯಗಳನ್ನು ಜೀವನದಲ್ಲಿ ಅನುಭವಿಸಿ ಅನುಸರಿಸಬೇಕು ಎಂದರು.

ಪ್ರಜಾಪ್ರಭುತ್ವ ದಿನಾಚರಣೆಯ ಹಿನ್ನೆಲೆಯಲ್ಲಿ ನೆಲ್ಸನ್ ಮಂಡೇಲಾ ಅವರ ಕೊಡುಗೆಯನ್ನು ಸ್ಮರಿಸಬೇಕು. ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಅದ್ಭುತ ಪ್ರತಿಭೆ ಹಾಗೂ ದೂರದೃಷ್ಟಿಯನ್ನು ಪ್ರತಿಯೊಬ್ಬರೂ ಅರಿಯಬೇಕು. ಸಂವಿಧಾನ ರಚನಾ ಚರ್ಚೆಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಓದಬೇಕು. ಕಾನೂನುಗಳ ಸಮರ್ಪಕ ಅನುಷ್ಠಾನವಾಗಬೇಕು; ಅವುಗಳ ದುರುಪಯೋಗವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು. ಷರೀಫ್ ಬಿಳಿಯಲಿ ಹಾಗೂ ಸಂಗಡಿಗರು ಸಂವಿಧಾನದ ಕುರಿತು ಗೀತೆಗಳನ್ನು ಪ್ರಸ್ತುತಪಡಿಸಿದರು. ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು.

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಆರ್‌ಡಿಪಿಆರ್ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅಮರೇಶ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಎಸ್.ಜಿ. ಪಲ್ಲೇದ, ಎಸ್.ಎನ್. ಬಳ್ಳಾರಿ, ಆದಪ್ಪನವರ, ಬಸವರಾಜ ಕಡೆಮನಿ, ಆನಂದ ಸಿಂಗಾಡೆ, ಮಾರ್ತಾಂಡ ಹಾದಿಮನಿ, ಪ್ರೊ. ಕೆ.ಎಚ್. ಬೇಲೂರ ಸೇರಿದಂತೆ ಜಿಲ್ಲಾ ಜಾಗೃತ ಸಮಿತಿಯ ನಾಮನಿರ್ದೇಶಿತ ಸದಸ್ಯರು, ನಗರಸಭೆ ಸದಸ್ಯರು, ಸಫಾಯಿ ಕರ್ಮಚಾರಿ ನಾಮನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಸ್ವಾಗತಿಸಿದರು. ಪ್ರೊ. ಬಾಹುಬಲಿ ಜೈನರ್ ಹಾಗೂ ನಂದಿತಾ ಹಂಪಿಹೊಳಿ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಬಿಡಿಸಲಾಗಿದ್ದ ರಂಗೋಲಿ ಗಮನ ಸೆಳೆಯಿತು.

ಮತದಾನದ ಹಕ್ಕು ಉಳಿದರೆ ಮಾತ್ರ ಪ್ರಜಾಪ್ರಭುತ್ವ ಬಲಿಷ್ಠವಾಗುತ್ತದೆ. ಸಂವಿಧಾನವನ್ನು ಗೌರವಿಸುವುದು ಮತ್ತು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ.

— ಡಾ. ಎಚ್.ಕೆ. ಪಾಟೀಲ, ಶಾಸಕ

ಗಣೇಶೋತ್ಸವಕ್ಕೆ ಮಾತ್ರ ‘ಪೊಲೀಸ್ ಗಿರಿ’ ಏಕೆ? ಶಾಸಕ ಸಿ.ಸಿ. ಪಾಟೀಲ ಆಕ್ರೋಶ

0

ವಿಜಯಸಾಕ್ಷಿ ಸುದ್ದಿ, ಗದಗ: ಗಣೇಶೋತ್ಸವ ಸೇರಿದಂತೆ ಹಿಂದೂಗಳ ಹಬ್ಬಗಳ ಆಚರಣೆಗೆ ಅನಗತ್ಯ ನಿರ್ಬಂಧ ವಿಧಿಸುವುದು, ಧ್ವನಿವರ್ಧಕ, ಪಟಾಕಿ ಹಾಗೂ ಮೆರವಣಿಗೆ ವಿಚಾರದಲ್ಲಿ ತಾರತಮ್ಯ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ, ಶಾಸಕ ಸಿ.ಸಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣೇಶೋತ್ಸವ ಬಂದಾಗ ಮಾತ್ರ ಪೊಲೀಸರು ವಿವಿಧ ಷರತ್ತುಗಳನ್ನು ವಿಧಿಸುತ್ತಾರೆ. ಇತರ ಸಮುದಾಯಗಳ ಹಬ್ಬಗಳಲ್ಲಿ ಡಿಜೆ, ಬೆಳಕು ಹಾಗೂ ಪೆಂಡಾಲ್‌ಗಳಿಗೆ ಅನುಮತಿ ನೀಡಲಾಗುತ್ತದೆ. ಹೀಗಿರುವಾಗ ಹಿಂದೂಗಳ ಹಬ್ಬಗಳಿಗೆ ಮಾತ್ರ ಹೆಚ್ಚಿನ ನಿಯಮ ಏಕೆ? ಎಲ್ಲ ಧರ್ಮಗಳ ಹಬ್ಬಗಳಿಗೂ ಒಂದೇ ರೀತಿಯ ನಿಯಮ ಅನ್ವಯಿಸಬೇಕು ಎಂದು ಒತ್ತಾಯಿಸಿದರು.

ಪರಿಸರ ಮಾಲಿನ್ಯದ ಹೆಸರಿನಲ್ಲಿ ಗಣೇಶೋತ್ಸವದ ವೇಳೆ ಪಟಾಕಿ ಸಿಡಿಸುವುದಕ್ಕೆ ವಿರೋಧ ವ್ಯಕ್ತಪಡಿಸಲಾಗುತ್ತದೆ. ಆದರೆ ಮಾಲಿನ್ಯಕ್ಕೆ ಕಾರಣವಾಗುವ ಕೈಗಾರಿಕೆಗಳ ವಿಚಾರದಲ್ಲಿ ಇದೇ ರೀತಿಯ ಕಾಳಜಿ ಏಕೆ ತೋರುವುದಿಲ್ಲ ಎಂದು ಪ್ರಶ್ನಿಸಿದರು. ಗದಗ ಜಿಲ್ಲೆಯಲ್ಲಿ ಎಲ್ಲ ಧರ್ಮಗಳ ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ದದಿಂದ ಆಚರಿಸುವ ಪರಂಪರೆಯಿದ್ದು, ಅದನ್ನು ಮುಂದುವರಿಸಬೇಕು ಎಂದರು.

ಟಿ. ನರಸೀಪುರದ ಹಿಂದೂ ಕಾರ್ಯಕರ್ತರ ಕುರಿತು ಪೊಲೀಸ್ ಅಧಿಕಾರಿಯೊಬ್ಬರು ನೀಡಿರುವ ಹೇಳಿಕೆ ಹಾಗೂ ನಡೆ ಖಂಡನೀಯ. ಇಂತಹ ನಡೆ ಸಮಾಜದಲ್ಲಿ ವಿಭಜನೆಯ ವಾತಾವರಣಕ್ಕೆ ಕಾರಣವಾಗುತ್ತದೆ ಎಂದು ಆರೋಪಿಸಿದರು. ಸಂಬಂಧಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆ ಅಂಗವಾಗಿ ಸೆ.17ರಿಂದ ಅ.17ರವರೆಗೆ ಬಿಜೆಪಿ ವತಿಯಿಂದ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಸ್ವಚ್ಛತಾ ಅಭಿಯಾನ, ಗಿಡ ನೆಡುವುದು, ಅನಾಥಾಶ್ರಮ ಹಾಗೂ ವೃದ್ಧಾಶ್ರಮಗಳಿಗೆ ಭೇಟಿ, ಬೀದಿ ನಾಟಕ, ಸೇವಾ ಜ್ಯೋತಿ ಯಾತ್ರೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರುಡಗಿ, ಎಂ.ಎಸ್. ಕರಿಗೌಡ್ರ, ಎಂ.ಎಂ. ಹಿರೇಮಠ, ನಿರ್ಮಲಾ ಕೊಳ್ಳಿ, ಉಷಾ ದಾಸರ, ಲಿಂಗರಾಜ ಪಾಟೀಲ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಬರ ಘೋಷಣೆಗೆ ಸೆ.23ರ ನಿರೀಕ್ಷೆ

ಗದಗ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ವಿಚಾರದಲ್ಲಿ ಆಶಾಭಾವನೆ ಹೊಂದಿದ್ದೇವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರೂ ಎಲ್ಲ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ಬರ ಪರಿಸ್ಥಿತಿ ಕುರಿತು ಚರ್ಚೆಯಾಗಲಿದ್ದು, ಸೆ.23ರಂದು ಬರ ಘೋಷಣೆಯಾಗುವ ನಿರೀಕ್ಷೆಯಿದೆ ಎಂದು ಸಿ.ಸಿ. ಪಾಟೀಲ ಹೇಳಿದರು.

ಸಚಿವ ಬಾಲಕೃಷ್ಣ ಹೇಳಿಕೆಗೆ ಮುತ್ತು ರಾಯರಡ್ಡಿ ಆಕ್ರೋಶ

0

ವಿಜಯಸಾಕ್ಷಿ ಸುದ್ದಿ, ನರಗುಂದ: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಗ್ರಾಮ ಪಂಚಾಯಿತಿ ಸದಸ್ಯರಿಗೆ ಹೋಲಿಕೆ ಮಾಡಿ ಸಚಿವ ಎಚ್.ಸಿ. ಬಾಲಕೃಷ್ಣ ಅವರು ನೀಡಿರುವ ಹೇಳಿಕೆಯನ್ನು ತಾಲೂಕಿನ ಚಿಕ್ಕ ನರಗುಂದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ ತೀವ್ರವಾಗಿ ಖಂಡಿಸಿದ್ದಾರೆ.

ಕುಮಾರಸ್ವಾಮಿ ಅವರು ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿ ಹಾಗೂ ಪ್ರಸ್ತುತ ಕೇಂದ್ರ ಸಚಿವರಾಗಿ ಸಾರ್ವಜನಿಕ ಜೀವನದಲ್ಲಿ ಮಹತ್ವದ ಜವಾಬ್ದಾರಿ ಹೊಂದಿದ್ದಾರೆ. ಅಂತಹ ವ್ಯಕ್ತಿಯನ್ನು ಗ್ರಾಮ ಪಂಚಾಯಿತಿ ಸದಸ್ಯರಿಗೆ ಹೋಲಿಕೆ ಮಾಡುವುದು ಅವರ ಸ್ಥಾನಮಾನಕ್ಕೆ ಅಗೌರವ ತೋರಿದಂತಾಗಿದೆ ಎಂದು ಮುತ್ತು ರಾಯರಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು, ಆರೋಪ-ಪ್ರತ್ಯಾರೋಪಗಳು ಸಹಜ. ಆದರೆ ಟೀಕಿಸುವ ಭರದಲ್ಲಿ ವ್ಯಕ್ತಿಯ ಸ್ಥಾನಮಾನವನ್ನು ಹಗುರವಾಗಿ ಕಾಣುವ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ. ಸಚಿವ ಬಾಲಕೃಷ್ಣ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದು, ಕುಮಾರಸ್ವಾಮಿ ಅವರ ಬಗ್ಗೆ ಗೌರವಯುತವಾಗಿ ಮಾತನಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕುಮಾರಸ್ವಾಮಿ ಅವರು ಗ್ರಾಮ ಪಂಚಾಯಿತಿ ಸದಸ್ಯರಲ್ಲ, ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರು. ಅವರನ್ನು ಗ್ರಾಮ ಪಂಚಾಯಿತಿ ಸದಸ್ಯರಿಗೆ ಹೋಲಿಕೆ ಮಾಡಿರುವುದು ಖಂಡನೀಯ. ರಾಜಕೀಯ ಟೀಕೆಗಳಿಗೆ ಮಿತಿಯಿರಬೇಕು. ವೈಯಕ್ತಿಕವಾಗಿ ಅಥವಾ ಸ್ಥಾನಮಾನವನ್ನು ಹಗುರಗೊಳಿಸುವ ರೀತಿಯಲ್ಲಿ ಮಾತನಾಡುವುದು ರಾಜಕೀಯ ಸಂಸ್ಕೃತಿಯಲ್ಲ ಎಂದು ಮುತ್ತು ರಾಯರಡ್ಡಿ ತಿಳಿಸಿದ್ದಾರೆ.

ಕುಮಾರಸ್ವಾಮಿ ಅವರ ರಾಜಕೀಯ ಹೇಳಿಕೆಗಳಿಗೆ ಸಚಿವ ಬಾಲಕೃಷ್ಣ ಅವರು ವಿಚಾರಾಧಾರಿತವಾಗಿ ಉತ್ತರಿಸಲಿ. ಆದರೆ ಕೇಂದ್ರ ಸಚಿವರ ಸ್ಥಾನಮಾನವನ್ನು ಕಡೆಗಣಿಸಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ಹೋಲಿಕೆ ಮಾಡಿರುವುದು ಸರಿಯಾದ ನಡೆಯಲ್ಲ. ಸಾರ್ವಜನಿಕ ಜೀವನದಲ್ಲಿರುವವರು ಪರಸ್ಪರರ ಸ್ಥಾನಮಾನಕ್ಕೆ ಗೌರವ ನೀಡುವ ಮೂಲಕ ಆರೋಗ್ಯಕರ ರಾಜಕೀಯ ಸಂಸ್ಕೃತಿ ಬೆಳೆಸಬೇಕು ಎಂದು ಮುತ್ತು ರಾಯರಡ್ಡಿ ಹೇಳಿದ್ದಾರೆ.

ಕ್ರೀಡೆಯಲ್ಲಿ ನಿರಂತರ ಪ್ರಯತ್ನವೇ ಮುಖ್ಯ: ಚಂದ್ರು ಲಮಾಣಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ, ಕ್ರೀಡಾಸ್ಫೂರ್ತಿ ಹಾಗೂ ನಿರಂತರ ಪ್ರಯತ್ನವೇ ಮುಖ್ಯ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಸಮೀಪದ ಒಡೆಯರ ಮಲ್ಲಾಪುರ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಂಗಳವಾರ ನಡೆದ ಶಿಗ್ಲಿ ಗ್ರೂಪ್ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆ ಕಲ್ಪಿಸುವುದರ ಜತೆಗೆ ನಾಯಕತ್ವ ಗುಣ, ಆತ್ಮವಿಶ್ವಾಸ, ಶಿಸ್ತು ಹಾಗೂ ತಂಡಭಾವ ಬೆಳೆಸುತ್ತವೆ. ಸದೃಢ ದೇಹದಲ್ಲಿ ಸದೃಢ ಮನಸ್ಸು ನೆಲೆಸಲು ಸಾಧ್ಯ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಸಾಮರ್ಥ್ಯದ ಜತೆಗೆ ಮಾನಸಿಕ ಸ್ಥೈರ್ಯವೂ ವೃದ್ಧಿಯಾಗುತ್ತದೆ ಎಂದರು.

ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದಾಗ ಅಹಂಕಾರಪಡದೆ, ಸೋಲು ಎದುರಾದಾಗ ಕುಗ್ಗದೆ, ತಮ್ಮ ತಪ್ಪುಗಳನ್ನು ವಿಶ್ಲೇಷಿಸಿಕೊಂಡು ಮುಂದಿನ ಸಾಧನೆಗೆ ಸಿದ್ಧರಾಗಬೇಕು. ಕ್ರೀಡೆಯಿಂದ ಶಿಸ್ತು, ಸಮಯಪ್ರಜ್ಞೆ, ಸಹಕಾರ ಮನೋಭಾವ ಹಾಗೂ ತಂಡವಾಗಿ ಕಾರ್ಯನಿರ್ವಹಿಸುವ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬಹುದು ಎಂದು ಹೇಳಿದರು.

ಗ್ರಾಮೀಣ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಅವಕಾಶ ಕಲ್ಪಿಸಬೇಕು. ಆಗ ಮಾತ್ರ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ. ಶಾಲೆಗಳು ಪಠ್ಯ ಚಟುವಟಿಕೆಗಳ ಜತೆಗೆ ಕ್ರೀಡೆಗೂ ಸಮಾನ ಆದ್ಯತೆ ನೀಡಬೇಕು ಎಂದು ಲಮಾಣಿ ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ನಾಗರಾಜ ಕಳಸಾಪುರ ಮಾತನಾಡಿ, ಕ್ರೀಡೆಯು ದೈಹಿಕ ಆರೋಗ್ಯದ ಜತೆಗೆ ಆತ್ಮವಿಶ್ವಾಸ, ಶಿಸ್ತು, ಸಮಯಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮೊಬೈಲ್, ಟಿವಿಯಂತಹ ಸಾಧನಗಳಿಗೆ ಹೆಚ್ಚು ಸಮಯ ಮೀಸಲಿಡುವ ಬದಲು ದೈಹಿಕ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದರು.

ಬಿಆರ್‌ಸಿ ಎಸ್.ಕೆ. ಹವಾಲ್ದಾರ್, ಬಿ.ಎಂ. ಯರಗುಪ್ಪಿ, ಸಿಆರ್‌ಪಿ ಜ್ಯೋತಿ ಗಾಯಕವಾಡ, ಕೆ.ಆರ್. ಲಮಾಣಿ, ಎಚ್‌ಎಂ ಸಪ್ಪಿನ, ಗಂಗಾಧರ ಮೆಣಸಿನಕಾಯಿ, ಅಶೋಕ ಮೆಣಸಿನಕಾಯಿ, ಭೀಮಣ್ಣ ಯಂಗಾಡಿ ಉಪಸ್ಥಿತರಿದ್ದರು.

ಪ್ರವೀಣ ಗಾಯಕರ್ ಸ್ವಾಗತಿಸಿದರು. ದೈಹಿಕ ಶಿಕ್ಷಕ ಸಿದ್ದಣ್ಣ ಬೆಟಗೇರಿ ಪ್ರತಿಜ್ಞಾವಿಧಿ ಬೋಧಿಸಿದರು. ಅರ್ಜುನ ವಠಾರ ವಂದಿಸಿದರು. ರೂಪಾ ಮನ್ನಂಗಿ ನಿರೂಪಿಸಿದರು. ಒಡೆಯರ ಮಲ್ಲಾಪುರ, ಶಿಗ್ಲಿ ಹಾಗೂ ರಾಮಗೇರಿ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕ್ರೀಡೆಯಲ್ಲಿ ಗೆಲುವು ಸಾಧಿಸಿದಾಗ ಅಹಂಕಾರಪಡದೆ, ಸೋಲಿನಿಂದ ಕುಗ್ಗದೆ ತಪ್ಪುಗಳನ್ನು ವಿಶ್ಲೇಷಿಸಿಕೊಂಡು ಮುಂದಿನ ಸಾಧನೆಗೆ ಸಿದ್ಧರಾಗಬೇಕು.

— ಡಾ. ಚಂದ್ರು ಲಮಾಣಿ, ಶಾಸಕ