Home Blog

ಜಾನಪದ ಹಾಡುಗಳು ಜನಸಾಮಾನ್ಯರ ಜೀವನಾಡಿ: ತೋಂಟದ ಶ್ರೀ

0

ವಿಜಯಸಾಕ್ಷಿ ಸುದ್ದಿ, ಗದಗ: ಜನಪದ ಸಾಹಿತ್ಯವು ಕನ್ನಡ ಸಂಸ್ಕೃತಿಯ ಜೀವಂತ ಆಕರವಾಗಿದ್ದು, ಜಾನಪದ ಹಾಡುಗಳು ಜನಸಾಮಾನ್ಯರ ಬದುಕಿನ ಭಾವನೆ, ಅನುಭವ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಜೀವನಾಡಿಯಾಗಿವೆ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.

ಲಿಂಗಾಯತ ಪ್ರಗತಿಶೀಲ ಸಂಘದ 2802ನೇ ಶಿವಾನುಭವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಗ್ರಾಮೀಣ ಜನರು ತಮ್ಮ ಕಾಯಕ, ಸುಖ-ದುಃಖ ಹಾಗೂ ಬದುಕಿನ ವಿವಿಧ ಅನುಭವಗಳನ್ನು ಜಾನಪದ ಹಾಡುಗಳ ಮೂಲಕ ಅಭಿವ್ಯಕ್ತಿಪಡಿಸುತ್ತಿದ್ದರು. ಯಾವುದೇ ಪದವಿ ಅಥವಾ ಔಪಚಾರಿಕ ಶಿಕ್ಷಣವಿಲ್ಲದಿದ್ದರೂ ತಮ್ಮ ಆಶು ಕವಿತ್ವದ ಮೂಲಕ ಅಮೂಲ್ಯ ಸಾಹಿತ್ಯವನ್ನು ಸೃಷ್ಟಿಸಿದ್ದಾರೆ ಎಂದು ಹೇಳಿದರು.

ಜನಪದ ಕೋಗಿಲೆ ಗೌರಮ್ಮ ಚಲವಾದಿ ಅವರ ಕಥೆಗಳು ಅಪಾರ ಮೌಲಿಕತೆಯನ್ನು ಹೊಂದಿದ್ದು, ಅವುಗಳನ್ನು ಇಂಗ್ಲಿಷ್‌ಗೆ ಅನುವಾದಿಸಿದರೆ ವಿಶ್ವಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುವಷ್ಟು ಆಳವಾದ ವಿಚಾರಗಳನ್ನು ಒಳಗೊಂಡಿವೆ ಎಂದು ಅಭಿಪ್ರಾಯಪಟ್ಟರು.

‘ಜನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು’ ವಿಷಯದ ಕುರಿತು ಉಪನ್ಯಾಸ ನೀಡಿದ ಕುಷ್ಟಗಿಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಜೀವನಸಾಬ್ ಮಾ. ವಾಲಿಕಾರ, ಜನಪದರು ಸಂಸ್ಕೃತಿಯ ರಾಯಭಾರಿಗಳಾಗಿದ್ದು, ಸಮಾಜದಲ್ಲಿ ಸಮಷ್ಟಿ ಹಿತದ ಬದುಕಿಗೆ ಪ್ರೇರಣೆಯಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ಮಾಜಿ ಅಧ್ಯಕ್ಷ ಈಶ್ವರಪ್ಪ ಮುನವಳ್ಳಿ ದಂಪತಿಗಳನ್ನು ಸನ್ಮಾನಿಸಲಾಯಿತು. ಲಲಿತಕಲಾ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ತಿರುಪತಿ ಶಿವನಗುತ್ತಿ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವಚನ ಸಂಗೀತ, ಧರ್ಮಗ್ರಂಥ ಪಠಣ ಹಾಗೂ ವಚನ ಚಿಂತನ ಕಾರ್ಯಕ್ರಮಗಳು ಜರುಗಿದವು. ಸಂಘದ ಪದಾಧಿಕಾರಿಗಳು, ಭಕ್ತರು ಹಾಗೂ ಗಣ್ಯರು ಭಾಗವಹಿಸಿದ್ದರು.

ಕೋಟ್

“ಜನಪದ ಸಾಹಿತ್ಯವು ಕೇವಲ ಹಾಡು ಅಥವಾ ಕಥೆಗಳ ಸಂಗ್ರಹವಲ್ಲ; ಅದು ಕನ್ನಡಿಗರ ಬದುಕು, ಸಂಸ್ಕೃತಿ ಮತ್ತು ಜೀವನ ಮೌಲ್ಯಗಳನ್ನು ಪ್ರತಿಬಿಂಬಿಸುವ ಅಮೂಲ್ಯ ಪರಂಪರೆಯಾಗಿದೆ.”

ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

ಮಲೇರಿಯಾ ನಿರ್ಮೂಲನೆಗೆ ಜನಸಹಭಾಗಿತ್ವ ಅಗತ್ಯ: ಸಹದೇವಪ್ಪ ಹನಕನಹಳ್ಳಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: “ಮಲೇರಿಯಾ ಅಂತ್ಯಗೊಳಿಸಲು ಸಕಲರೂ ಸಂಕಲ್ಪ ಮಾಡೋಣ, ನಮಗಿದು ಸಾಧ್ಯವಿದೆ, ನಾವು ಇದನ್ನು ಮಾಡಲೇಬೇಕು” ಎಂಬ ಘೋಷವಾಕ್ಯದೊಂದಿಗೆ ಮಲೇರಿಯಾ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಹದೇವಪ್ಪ ಹನಕನಹಳ್ಳಿ ಹೇಳಿದರು.

ಶಿಗ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಲೇರಿಯಾ ಪರಾವಲಂಬಿ ಜೀವಿಗಳಿಂದ ಉಂಟಾಗುವ ಸಾಂಕ್ರಾಮಿಕ ರೋಗವಾಗಿದ್ದು, ಹೆಣ್ಣು ಅನೋಫಿಲೀಸ್ ಸೊಳ್ಳೆಯ ಕಡಿತದಿಂದ ಹರಡುತ್ತದೆ. ಸೋಂಕಿನ ಲಕ್ಷಣಗಳು ಸಾಮಾನ್ಯವಾಗಿ 7ರಿಂದ 14 ದಿನಗಳೊಳಗೆ ಕಾಣಿಸಿಕೊಳ್ಳುತ್ತವೆ. ಚಳಿ, ತೀವ್ರ ಜ್ವರ ಹಾಗೂ ಬೆವರುವುದು ಪ್ರಮುಖ ಲಕ್ಷಣಗಳಾಗಿದ್ದು, ಯಾವುದೇ ರೀತಿಯ ಜ್ವರ ಕಂಡುಬಂದರೂ ತಕ್ಷಣ ರಕ್ತ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.

ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡುವುದು, ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸೊಳ್ಳೆ ಪರದೆ ಹಾಗೂ ಸೊಳ್ಳೆ ನಿವಾರಕ ಕ್ರಮಗಳನ್ನು ಅನುಸರಿಸುವುದರಿಂದ ಮಲೇರಿಯಾ ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಫ್.ಸಿ. ಹೊಸಮಠ ಮಾತನಾಡಿ, ಆರೋಗ್ಯ ಇಲಾಖೆಯ ಜಾಗೃತಿ ಕಾರ್ಯಕ್ರಮಗಳು ಸಾರ್ವಜನಿಕರಲ್ಲಿ ಆರೋಗ್ಯ ಅರಿವು ಮೂಡಿಸುವುದರ ಜೊತೆಗೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೂ ಸಹಕಾರಿಯಾಗುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

“ಮಲೇರಿಯಾ ನಿರ್ಮೂಲನೆ ಕೇವಲ ಆರೋಗ್ಯ ಇಲಾಖೆಯ ಜವಾಬ್ದಾರಿ ಅಲ್ಲ. ಪ್ರತಿಯೊಬ್ಬ ನಾಗರಿಕರೂ ಸ್ವಚ್ಛತೆ ಕಾಪಾಡಿ ಸೊಳ್ಳೆ ನಿಯಂತ್ರಣ ಕ್ರಮಗಳನ್ನು ಪಾಲಿಸಿದರೆ ಮಾತ್ರ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಬಹುದು.”

ಸಹದೇವಪ್ಪ ಹನಕನಹಳ್ಳಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ

ಸಮರ್ಪಕ ಬಸ್ ಸೌಲಭ್ಯಕ್ಕೆ ಕರವೇ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ಕೋಗನೂರು, ಹೆಬ್ಬಾಳ, ಬೆಳಗಟ್ಟಿ ಸೇರಿದಂತೆ ಗಡಿಭಾಗದ ಗ್ರಾಮಗಳ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಮತ್ತು ಬಸ್‌ಪಾಸ್ ವ್ಯವಸ್ಥೆ ಕಲ್ಪಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವತಿಯಿಂದ ತಹಸೀಲ್ದಾರ್ ಕೆ. ರಾಘವೇಂದ್ರ ರಾವು ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ಶಿವು ಮಠದ, ಕೋಗನೂರು, ಗೋವನಕೊಪ್ಪ, ಹೆಬ್ಬಾಳ, ಬೆಳಗಟ್ಟಿ ಸೇರಿದಂತೆ ಹಲವು ಗ್ರಾಮಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಶಿಕ್ಷಣ, ಉದ್ಯೋಗ ಮತ್ತು ಆರೋಗ್ಯ ಸೇವೆಗಳಿಗಾಗಿ ನಿತ್ಯ ಗದಗ, ಶಿರಹಟ್ಟಿ ಹಾಗೂ ರಾಣೆಬೆನ್ನೂರುಗೆ ಸಂಚರಿಸುತ್ತಿದ್ದಾರೆ. ಆದರೆ ಸಮರ್ಪಕ ಬಸ್ ವ್ಯವಸ್ಥೆಯ ಕೊರತೆಯಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ಪ್ರಸ್ತುತ ಸಂಚರಿಸುತ್ತಿರುವ ಕೆಲವು ಬಸ್‌ಗಳ ಮಾರ್ಗ ಬದಲಾವಣೆ ಮಾಡಿ ಕೋಗನೂರು, ಗೋವನಕೊಪ್ಪ, ಹೆಬ್ಬಾಳ ಹಾಗೂ ಬೆಳಗಟ್ಟಿ ಮಾರ್ಗವಾಗಿ ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕು. ಹೆಚ್ಚುವರಿ ಬಸ್‌ಗಳಲ್ಲಿ ವಿದ್ಯಾರ್ಥಿ ಪಾಸ್‌ಗೆ ಅವಕಾಶ ಕಲ್ಪಿಸಬೇಕು ಹಾಗೂ ವೇಗದೂತ ಬಸ್‌ಗಳನ್ನು ಈ ಮಾರ್ಗದಲ್ಲಿ ಓಡಿಸಬೇಕು ಎಂದು ಆಗ್ರಹಿಸಿದರು.

ಬೇಡಿಕೆಗಳನ್ನು ಏಳು ದಿನಗಳೊಳಗೆ ಈಡೇರಿಸದಿದ್ದರೆ ರಾಜ್ಯ ಹೆದ್ದಾರಿ ತಡೆದು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಶರಣಪ್ಪ ಪುರ್ತಗೇರಿ, ಪ್ರಕಾಶ ಬಡೆಣ್ಣವರ, ರಾಹುಲ್ ಮಡಿವಾಳರ, ಜಗದೀಶ ಮೇಲಿನಮನಿ, ಕಿರಣಕುಮಾರ ಚನ್ನೂರ, ಮಣಿಕಂಠ ಕಟ್ಟಿ, ಗಾಳೆಪ್ಪ ಮರಚಣ್ಣನವರ, ಸಾಗರ ಡಿಳ್ಳೆಪ್ಪನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಗ್ಯಾರಂಟಿ ಯೋಜನೆಗಳಲ್ಲಿ ನಿರ್ಲಕ್ಷ್ಯ ಬೇಡ: ಸೊನ್ನದ ಗುರುಬಸವರಾಜ್

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ತಾಲೂಕು ಪಂಚಾಯಿತಿ ಮಹಾತ್ಮಗಾಂಧಿ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಸೊನ್ನದ ಗುರುಬಸವರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಆಹಾರ ಇಲಾಖೆ, ಕೆಇಬಿ ಹಾಗೂ ಉದ್ಯೋಗ ವಿನಿಮಯ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ತಮ್ಮ ಇಲಾಖೆಗಳ ಪ್ರಗತಿ ವರದಿಯನ್ನು ಮಂಡಿಸಿದರು.

ತಾಲೂಕಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುತ್ತಿದ್ದು, ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ ಕಾರ್ಯನಿರ್ವಹಿಸಬೇಕು ಎಂದು ಸೊನ್ನದ ಗುರುಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದರು.

ಯುವನಿಧಿ ಯೋಜನೆಯಡಿ ನೋಂದಾಯಿತ ಫಲಾನುಭವಿಗಳಿಗೆ “ಯುವನಿಧಿ ಪ್ಲಸ್” ಕಾರ್ಯಕ್ರಮದ ಮೂಲಕ ಕೌಶಲ್ಯ ತರಬೇತಿ ನೀಡಿ ವಿವಿಧ ಕಂಪನಿಗಳು ಹಾಗೂ ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಡಿಗ್ರಿ ಕಾಲೇಜಿನಲ್ಲಿ ಸಮಾವೇಶ ಆಯೋಜಿಸಲು ಪ್ರಯತ್ನಿಸಲಾಗಿತ್ತು. ಆದರೆ ಅದಕ್ಕೆ ಅವಕಾಶ ದೊರೆಯದಿರುವುದು ಯುವಕರಿಗೆ ಅನ್ಯಾಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅನುಮತಿ ಪಡೆದು ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಜಂದಿಸಾಹೇಬ್, ಸದಸ್ಯ ಪರಶುರಾಮ ಹೆಗ್ಡಾಳ, ತಾಲೂಕು ಸದಸ್ಯರಾದ ರಾಘು ಉಲವತ್ತಿ, ಮೇಟಿ ಮಂಜುನಾಥ, ತಂಬ್ರಳ್ಳಿ ಗಿರೀಶ್, ವೆಂಕಟೇಶ್ ನಾಯ್ಕ್, ಸಂತೋಷ, ಸರ್ದಾರ್ ರಾಮಣ್ಣ, ಪ್ರಕಾಶ್ ಉಪ್ಪಾರ್, ಸದ್ದಾಂ, ದೊಡ್ಡಬಸಪ್ಪ, ನಾಗಮ್ಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ಯಾರಂಟಿ ಸಮಿತಿ ಕಾರ್ಯದರ್ಶಿ ಪಾಲಯ್ಯನಕೋಟೆ ವಿಶ್ವನಾಥ್, ಯೋಜನಾ ಅಧಿಕಾರಿ ನಾಗರಾಜ್ ನಾಯ್ಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹರಿಗೆ ತಲುಪುವಲ್ಲಿ ಯಾವುದೇ ನಿರ್ಲಕ್ಷ್ಯವಾಗಬಾರದು. ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.”

 ಸೊನ್ನದ ಗುರುಬಸವರಾಜ್ಅ

ಧ್ಯಕ್ಷರು, ತಾಲೂಕು ಗ್ಯಾರಂಟಿ ಸಮಿತಿ

ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

0

ವಿಜಯಸಾಕ್ಷಿ ಸುದ್ದಿ, ಗದಗ: ಸ್ವಚ್ಛತೆ ದೇವರಿಗೆ ಸಮಾನವಾಗಿದ್ದು, ನಮ್ಮ ದೇಹದಂತೆ ಸುತ್ತಮುತ್ತಲಿನ ಪರಿಸರವನ್ನೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸ್ವಚ್ಛ ವಾತಾವರಣದಿಂದ ಅನಾರೋಗ್ಯವನ್ನು ದೂರವಿಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ನಗರಸಭೆ ಗದಗ-ಬೆಟಗೇರಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಕೆಲಸಗಾರರಿಗೆ ಘನ ತ್ಯಾಜ್ಯ ನಿರ್ವಹಣೆ ಹಾಗೂ ಸುರಕ್ಷತಾ ಪರಿಕರಗಳ ಬಳಕೆ ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತ್ಯಾಜ್ಯವನ್ನು ಹಸಿಕಸ, ಒಣಕಸ, ಸ್ಯಾನಿಟರಿ ತ್ಯಾಜ್ಯ ಹಾಗೂ ವಿಶೇಷ ಕಾಳಜಿ ತ್ಯಾಜ್ಯ ಎಂದು ಮೂಲದಲ್ಲಿಯೇ ವಿಂಗಡಿಸುವುದರಿಂದ ಸಮರ್ಪಕ ನಿರ್ವಹಣೆ ಸಾಧ್ಯವಾಗುತ್ತದೆ. ನಗರಗಳ ಬೆಳವಣಿಗೆಯೊಂದಿಗೆ ತ್ಯಾಜ್ಯದ ಪ್ರಮಾಣ ಹೆಚ್ಚುತ್ತಿರುವುದರಿಂದ ವೈಜ್ಞಾನಿಕ ನಿರ್ವಹಣೆ ಅಗತ್ಯವಾಗಿದೆ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶ ಸಿ.ಎಸ್. ಶಿವನಗೌಡ್ರ ಮಾತನಾಡಿ, 2013ರ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ನಿಷೇಧ ಮತ್ತು ಪುನರ್ವಸತಿ ಕಾಯ್ದೆಯಡಿ ಪೌರಕಾರ್ಮಿಕರ ಹಕ್ಕುಗಳಿಗೆ ವಿಶೇಷ ರಕ್ಷಣೆ ಕಲ್ಪಿಸಲಾಗಿದೆ. ಪೌರಕಾರ್ಮಿಕರಿಗೆ ಉಚಿತ ಕಾನೂನು ನೆರವು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪ್ರಾಧಿಕಾರ ಒದಗಿಸುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಸಫಾಯಿ ಕರ್ಮಚಾರಿ ಸಂಘದ ನಾಮನಿರ್ದೇಶಿತ ಸದಸ್ಯರಾದ ಎಸ್.ಎನ್. ಬಳ್ಳಾರಿ ಹಾಗೂ ಮುತ್ತು ಬಿಳೆಯಲಿ ಮಾತನಾಡಿ, ಪೌರಕಾರ್ಮಿಕರ ಆರೋಗ್ಯ, ಸುರಕ್ಷತೆ ಮತ್ತು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.

“ಸ್ವಚ್ಛತೆ ಕೇವಲ ಪೌರಕಾರ್ಮಿಕರ ಜವಾಬ್ದಾರಿ ಅಲ್ಲ. ಪ್ರತಿಯೊಬ್ಬ ನಾಗರಿಕನೂ ತ್ಯಾಜ್ಯವನ್ನು ಮೂಲದಲ್ಲಿಯೇ ವಿಂಗಡಿಸಿ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು.”

ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

ಶಾಂತಿ-ನೆಮ್ಮದಿಯ ಬದುಕಿಗೆ ಧರ್ಮವೇ ಆಶಾಕಿರಣ: ರಂಭಾಪುರಿ ಶ್ರೀ

0

ವಿಜಯಸಾಕ್ಷಿ ಸುದ್ದಿ, ಕಮಲಾಪುರ: ಭೌತಿಕ ಸಂಪತ್ತು ಎಷ್ಟೇ ಇದ್ದರೂ ಅದರಿಂದ ಶಾಶ್ವತ ಶಾಂತಿ ಮತ್ತು ನೆಮ್ಮದಿ ದೊರೆಯುವುದಿಲ್ಲ. ಪವಿತ್ರ ಧರ್ಮಾಚರಣೆಯಿಂದ ಮಾತ್ರ ಜೀವನ ಉಜ್ವಲಗೊಳ್ಳಲು ಸಾಧ್ಯ ಎಂದು ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.

ತಾಲೂಕಿನ ಗೊಣಗಿ ಗ್ರಾಮದಲ್ಲಿ ನೂತನ ಶ್ರೀ ಹನುಮಾನ್ ದೇವಸ್ಥಾನದ ಉದ್ಘಾಟನೆ ಹಾಗೂ ಕಳಸಾರೋಹಣ ಅಂಗವಾಗಿ ನಡೆದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಧರ್ಮದ ಮಹತ್ವ ಮತ್ತು ಮಾನವ ಜೀವನದಲ್ಲಿ ಅದರ ಪಾತ್ರದ ಕುರಿತು ವಿವರಿಸಿದರು.

ಹೊತ್ತ ಭೂಮಿ ಮತ್ತು ಹೆತ್ತ ತಾಯಿ ಎಷ್ಟು ಮುಖ್ಯವೋ ಅಷ್ಟೇ ಧರ್ಮವೂ ಮುಖ್ಯವಾಗಿದೆ. ಧರ್ಮವೆಂದರೆ ಜಾತಿಯಲ್ಲ, ಜಾತಿಗಿಂತ ಧರ್ಮ ದೊಡ್ಡದು. ಧರ್ಮದಲ್ಲಿರುವ ವಿಶಾಲ ಮನೋಭಾವನೆ ಮಾನವೀಯ ಮೌಲ್ಯಗಳನ್ನು ಬೆಳೆಸುತ್ತದೆ. ದೇವರು, ಧರ್ಮ ಮತ್ತು ಗುರುಗಳು ಜೀವನದ ವಿಕಾಸಕ್ಕೆ ಅವಶ್ಯಕವಾಗಿದ್ದು, ಸತ್ಯದ ತಳಹದಿಯ ಮೇಲೆ ಮಾನವ ಜೀವನ ರೂಪುಗೊಳ್ಳಬೇಕು ಎಂದು ಹೇಳಿದರು.

ಶ್ರೀ ಜಗದ್ಗುರು ರೇಣುಕಾಚಾರ್ಯರು ಹಾಗೂ ಶ್ರೀ ಜಗದ್ಗುರು ರೇವಣಸಿದ್ಧೇಶ್ವರರು ಬೋಧಿಸಿದ ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ. ಅವರ ದಶವಿಧ ಸೂತ್ರಗಳು ಬದುಕಿನ ವಿಕಾಸಕ್ಕೆ ಮಾರ್ಗದರ್ಶಿಯಾಗಿವೆ ಎಂದು ತಿಳಿಸಿದರು.

ಹೊನ್ನಕಿರಣಗಿ ಚಂದ್ರಗುಂಡ ಶಿವಾಚಾರ್ಯ ಸ್ವಾಮಿಗಳು ಧರ್ಮ ಜಾಗೃತಿ ಸಮಾರಂಭ ಉದ್ಘಾಟಿಸಿ ವೀರಶೈವ ಧರ್ಮದ ಮೌಲ್ಯಗಳ ಕುರಿತು ಮಾತನಾಡಿದರು. ಮೇಹಕರ ಹಿರೇಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳು ದೇವಾಲಯ ಸಂಸ್ಕೃತಿ ಹಾಗೂ ಅದರ ಸಾಮಾಜಿಕ ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀನಿವಾಸ ಸರಡಗಿ, ಸುಗೂರು, ನರನಾಳ, ಆಂದೋಲಾ, ಮಂಗಲಗಿ, ತೆಂಗಳಿ, ಕೊಡ್ಲಿ, ರಟಕಲ್, ನಾಗೂರು, ಹೊಸಳ್ಳಿ, ಐನಾಪುರ ಸೇರಿದಂತೆ ವಿವಿಧ ಮಠಗಳ ಶ್ರೀಗಳು ಪಾಲ್ಗೊಂಡಿದ್ದರು. ಕೆಪಿಸಿಸಿ ಉಪಾಧ್ಯಕ್ಷ ಸುಭಾಷ ರಾಠೋಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಗೊಣಗಿ ಗ್ರಾಮದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಸಡಗರ-ಸಂಭ್ರಮದಿಂದ ನಡೆಯಿತು. ನಂತರ ರೇವಗ್ಗಿ-ರಟಕಲ್‌ನ ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು.

“ಭೌತಿಕ ಸಂಪತ್ತು ಜೀವನಕ್ಕೆ ಸೌಕರ್ಯ ನೀಡಬಹುದು. ಆದರೆ ಶಾಂತಿ ಮತ್ತು ನೆಮ್ಮದಿಯನ್ನು ನೀಡುವುದು ಧರ್ಮಾಚರಣೆ ಮಾತ್ರ. ಜಾತಿಗಿಂತ ಧರ್ಮ ದೊಡ್ಡದು ಎಂಬ ಅರಿವು ಸಮಾಜದಲ್ಲಿ ಬೆಳೆಯಬೇಕು.”

ಡಾ. ವೀರಸೋಮೇಶ್ವರ ಜಗದ್ಗುರುಗಳು

ಶ್ರೀ ರಂಭಾಪುರಿ ಪೀಠ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಗರ್ಜನೆ: ಟಾಟಾ ಪವರ್‌ಗೆ ಪರವಾನಗಿ ನೀಡದಂತೆ ಒತ್ತಾಯ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಯಾವುದೇ ಕ್ರಮವೂ ರೈತರು, ವಿದ್ಯುತ್ ಬಳಕೆದಾರರು ಹಾಗೂ ವಿದ್ಯುತ್ ವಲಯದ ನೌಕರರ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಸಾರ್ವಜನಿಕ ಆಸ್ತಿಯನ್ನು ಖಾಸಗಿ ಸಂಸ್ಥೆಗಳಿಗೆ ಒಪ್ಪಿಸುವಂತಾಗಿದೆ ಎಂದು ಗದಗ ಪಾಲನಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರಾಜೇಶ ಕಲ್ಯಾಣಶೆಟ್ಟಿ ಹೇಳಿದರು.

ಪಟ್ಟಣದ ಹೆಸ್ಕಾಂ ಉಪವಿಭಾಗ ಕಚೇರಿ ಆವರಣದಲ್ಲಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಟಾಟಾ ಪವರ್ ಕಂಪನಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡದಂತೆ ಹಾಗೂ ವಿದ್ಯುತ್ ಕ್ಷೇತ್ರ ಖಾಸಗೀಕರಣವನ್ನು ವಿರೋಧಿಸಿ ರೈತರು, ಬಳಕೆದಾರರು ಮತ್ತು ಹೆಸ್ಕಾಂ ನೌಕರರಿಗಾಗಿ ಆಯೋಜಿಸಿದ್ದ ಆಕ್ಷೇಪಣಾ ಅರ್ಜಿ ಸಲ್ಲಿಕೆ ಹಾಗೂ ಜನಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೆಸ್ಕಾಂ ಸಂಸ್ಥೆಯು ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ವಿದ್ಯುತ್ ಕಂಬಗಳು, ಉಪಕೇಂದ್ರಗಳು ಹಾಗೂ ಇತರೆ ಮೂಲಸೌಕರ್ಯಗಳನ್ನು ಖಾಸಗಿ ಕಂಪನಿಗಳ ಬಳಕೆಗೆ ನೀಡುವುದು ಸರಿಯಲ್ಲ. ಖಾಸಗೀಕರಣ ಜಾರಿಯಾದರೆ ರೈತರಿಗೆ ದೊರೆಯುತ್ತಿರುವ ಉಚಿತ ವಿದ್ಯುತ್ ಸೌಲಭ್ಯ ಸ್ಥಗಿತಗೊಳ್ಳುವ ಸಾಧ್ಯತೆ ಇದ್ದು, ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಕೆ ಕಡ್ಡಾಯವಾಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸರ್ಕಾರದ ಗೃಹಜ್ಯೋತಿ, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಹಾಗೂ ಗಂಗಾ ಕಲ್ಯಾಣ ಸೇರಿದಂತೆ ಹಲವು ಜನಪರ ಯೋಜನೆಗಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಜೊತೆಗೆ ಕೈಮಗ್ಗ ನೇಕಾರರು ಹಾಗೂ ಕಾಫಿ ಬೆಳೆಗಾರರಿಗೆ ನೀಡಲಾಗುತ್ತಿರುವ ಸಬ್ಸಿಡಿ ಸೌಲಭ್ಯಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹೇಳಿದರು.

ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ಟಾಕಪ್ಪ ಸಾತಪುತೆ ಮಾತನಾಡಿ, ಖಾಸಗಿ ಕಂಪನಿಗಳ ಪ್ರವೇಶದಿಂದ ಕೆಲವು ರಾಜ್ಯಗಳಲ್ಲಿ ರೈತರು ಮತ್ತು ಗ್ರಾಹಕರು ಸಂಕಷ್ಟ ಅನುಭವಿಸಿರುವ ಉದಾಹರಣೆಗಳಿವೆ. ಆದ್ದರಿಂದ ಜೂನ್ 23ರೊಳಗೆ ಆಕ್ಷೇಪಣಾ ಪತ್ರ ಸಲ್ಲಿಕೆ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸುರೇಶ ಸ್ವಾದಿ, ಅಂಜುಮನ್-ಎ-ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಮುಕ್ತಾರ ಅಹ್ಮದ್ ಗದಗ, ಬಾಬಣ್ಣ ಉಮಚಗಿ, ಬಸವರಾಜ ಸೂರಣಗಿ ಹಾಗೂ ಬಸವರಾಜ ಟೋಕಾಳಿ ಮಾತನಾಡಿ, ಯಾವುದೇ ಕಾರಣಕ್ಕೂ ಟಾಟಾ ಪವರ್ ಕಂಪನಿಗೆ ವಿತರಣಾ ಪರವಾನಗಿ ನೀಡಬಾರದು. ಖಾಸಗೀಕರಣದ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಂಜನೇಪ್ಪ ಬಿ., ಶಾಖಾಧಿಕಾರಿಗಳಾದ ಕಿರಣಕುಮಾರ ಪಮ್ಮಾರ, ರಘುಪತಿ ನಾಯಕ, ಇರನಗೌಡ, ಬಸವರಾಜ, ವಿಜಯ, ಸಂತೋಷ ನಾಯಕ ಸೇರಿದಂತೆ ಅನೇಕ ರೈತರು, ಲೈನ್‌ಮನ್‌ಗಳು ಹಾಗೂ ವಿದ್ಯುತ್ ಬಳಕೆದಾರರು ಭಾಗವಹಿಸಿದ್ದರು.

“ವಿದ್ಯುತ್ ಕ್ಷೇತ್ರ ಖಾಸಗೀಕರಣಗೊಂಡರೆ ರೈತರಿಗೆ ನೀಡಲಾಗುತ್ತಿರುವ ಉಚಿತ ವಿದ್ಯುತ್ ಸೇರಿದಂತೆ ಹಲವು ಜನಪರ ಯೋಜನೆಗಳಿಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡಲು ಎಲ್ಲರೂ ಖಾಸಗೀಕರಣವನ್ನು ವಿರೋಧಿಸಬೇಕು.”

ರಾಜೇಶ ಕಲ್ಯಾಣಶೆಟ್ಟಿ

ಕಾರ್ಯನಿರ್ವಾಹಕ ಇಂಜಿನಿಯರ್, ಗದಗ

ಸಮೃದ್ಧ ಮಳೆ-ಬೆಳೆಗಾಗಿ ವಿಶೇಷ ಪೂಜೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮೃದ್ಧ ಮಳೆ ಮತ್ತು ಉತ್ತಮ ಬೆಳೆಗಾಗಿ ಲಕ್ಷ್ಮೇಶ್ವರದ ರೈತ ಸಮುದಾಯ ಮಂಗಳವಾರ ಮಂಜಲಾಪುರದ ಕೊಲ್ಲಾರೆಮ್ಮ ದೇವಿಗೆ ಸಾಂಪ್ರದಾಯಿಕವಾಗಿ ವಿಶೇಷ ಪೂಜೆ ಸಲ್ಲಿಸಿ ವರುಣ ದೇವನ ಕೃಪೆ ಕೋರಿತು.

ಪಟ್ಟಣದ ಸೊಪ್ಪಿನಕೇರಿ ಓಣಿಯ ರೈತರು ಜಂತ್ಲಿ ಬಸವೇಶ್ವರ ದೇವಸ್ಥಾನದಿಂದ ಭಜನೆ ಹಾಡುತ್ತಾ ಕೊಲ್ಲಾರೆಮ್ಮ ದೇವಿಯ ಸನ್ನಿಧಿಗೆ ತೆರಳಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ದೇವಿಯ ಪ್ರಾಂಗಣದ ಮುಂಭಾಗದಲ್ಲಿ ಹೊಂಡ ನಿರ್ಮಿಸಿ ಅದರಲ್ಲಿ ನೀರು ತುಂಬಿಸಿ, ವರುಣ ದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಜೊತೆಗೆ ಅಶ್ವತ್ಥ ಕಟ್ಟೆಗೂ ಪೂಜೆ ನೆರವೇರಿಸಲಾಯಿತು.

ಮಳೆ ಸಮೃದ್ಧಿಯಾಗಿ ಸುರಿದು ಕೃಷಿ ಚಟುವಟಿಕೆಗಳು ಯಶಸ್ವಿಯಾಗಲಿ ಹಾಗೂ ರೈತರ ಬದುಕು ಹಸನಾಗಲಿ ಎಂಬ ಆಶಯದೊಂದಿಗೆ ರೈತರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪೂಜಾರಿಯ ಮೂಲಕ ದೇವಿಯ ವಾಣಿ ತಿಳಿಸಲಾಯಿತು. ಸಂಪ್ರದಾಯದಂತೆ ದೇವಿಯ ವಾಣಿಯ ಬಳಿಕ ಮೂರು ದಿನಗಳೊಳಗೆ ಮಳೆಯಾಗುವ ನಂಬಿಕೆ ರೈತ ಸಮುದಾಯದಲ್ಲಿದೆ.

ಹಿರಿಯರ ಕಾಲದಿಂದಲೂ ಮಳೆಗಾಗಿ ಕೊಲ್ಲಾರೆಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯ ನಡೆದುಬಂದಿದ್ದು, ಐದು ಮಂಗಳವಾರಗಳ ವ್ರತಾಚರಣೆಯನ್ನೂ ರೈತರು ಪಾಲಿಸಿಕೊಂಡು ಬರುತ್ತಿದ್ದಾರೆ. ದೇವಿಯ ವಾಣಿಯಂತೆ ಮಳೆಯಾದ ಬಳಿಕ ರೈತರು ಒಟ್ಟಾಗಿ ಸೇರಿ ಗೋದಿ ಹುಗ್ಗಿ, ಜೋಳದ ಕಿಚಡಿ ಹಾಗೂ ಅನ್ನಪ್ರಸಾದ ಸಿದ್ಧಪಡಿಸಿ ಸಂಭ್ರಮದಿಂದ ಪೂಜೆ ನೆರವೇರಿಸುತ್ತಾರೆ.

ದೇವಿಯ ವಾಣಿ ಎಂದಿಗೂ ಸುಳ್ಳಾಗಿಲ್ಲ ಎಂಬ ನಂಬಿಕೆಯಿಂದ ರೈತರು ಈ ಸಂಪ್ರದಾಯವನ್ನು ಶ್ರದ್ಧಾಭಕ್ತಿಯಿಂದ ಮುಂದುವರಿಸಿಕೊಂಡು ಬರುತ್ತಿದ್ದಾರೆ ಎಂದು ಹಿರಿಯರಾದ ಭರಮಪ್ಪ ಗುಡಗೇರಿ ಹಾಗೂ ನೀಲಪ್ಪ ಕನವಳ್ಳಿ ತಿಳಿಸಿದರು.

ಕಾರ್ಯಕ್ರಮದಲ್ಲಿ ನೀಲಪ್ಪ ಕನವಳ್ಳಿ, ಭರಮಪ್ಪ ಕೊಡ್ಲಿ, ಚನ್ನಪ್ಪ ಆದಿ, ಭರಮಣ್ಣ ಗುಡಗೇರಿ, ಮುದಕನಗೌಡ ಪಾಟೀಲ, ಈರಣ್ಣ ಮುಳಗುಂದ, ಸೋಮಣ್ಣ ಚಿಂಚಲಿ, ವಿರೂಪಾಕ್ಷ ಆದಿ, ಮಯೂರಗೌಡ ಪಾಟೀಲ, ಮಂಜಪ್ಪ ಮುಳಗುಂದ, ಈರಪ್ಪ ಗುಡಗೇರಿ, ರಮೇಶ್ ಹೆಬ್ಬಾಳ, ಬಸವರಾಜ ಆದಿ, ಸಿದ್ದು ರಾಚನಾಯ್ಕರ, ಶೇಖಪ್ಪ ಪುಟಾಣಿ, ಈರಣ್ಣ ಹುಳಕನವರ, ಶಂಭು ತಂಡಿಗೇರ, ಪರಶುರಾಮ ಶಿರಹಟ್ಟಿ ಸೇರಿದಂತೆ ರೈತರು ಹಾಗೂ ಮಹಿಳೆಯರು ಭಾಗವಹಿಸಿದ್ದರು.

“ಹಿರಿಯರ ಕಾಲದಿಂದಲೂ ಮಳೆಗಾಗಿ ಕೊಲ್ಲಾರೆಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯ ನಡೆದುಕೊಂಡು ಬಂದಿದೆ. ದೇವಿಯ ವಾಣಿಯ ಮೇಲೆ ರೈತ ಸಮುದಾಯಕ್ಕೆ ಅಪಾರ ನಂಬಿಕೆ ಇದೆ.”

 ಭರಮಪ್ಪ ಗುಡಗೇರಿ ಹಾಗೂ ನೀಲಪ್ಪ ಕನವಳ್ಳಿ

ಸಚಿವ ಸ್ಥಾನಕ್ಕಾಗಿ ಎಚ್.ಕೆ. ಪಾಟೀಲ್ ಬೆಂಬಲಿಗರ ಪ್ರಾರ್ಥನೆ

ವಿಜಯಸಾಕ್ಷಿ ಸುದ್ದಿ, ಗದಗ: ಹಿರಿಯ ರಾಜಕೀಯ ಮುಖಂಡ ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸ್ಥಾನ ದೊರೆಯಲೆಂದು ನಗರದ ಗಂಗಿಮಡಿ ಅಬುಹರೇರ ಮಸೀದಿಯಲ್ಲಿ ಮಂಗಳವಾರ ವಿಶೇಷ ಸಾಮೂಹಿಕ ದುವಾ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಧರ್ಮಗುರುಗಳಾದ ಜನಾಬ್ ಇನಾಯತುಲ್ಲಾ ಸಾಹೇಬ್ ಪೀರಜಾದೆ, ಮೌಲಾನಾ ಅಬ್ದುಲ್ ಗಫೂರ್ ಸಾಹೇಬ್ ಪಲ್ಲೇದ್, ಮೌಲಾನಾ ಅಬ್ದುಲ್ ಸಮದ್ ಜಕಾತಿ, ಹಫೀಜ್ ಅಬೂಬಕರ್, ಹಫೀಜ್ ಸದ್ದಾಂ ಹಾಗೂ ಹಫೀಜ್ ಅಬ್ದುಲ್ಲಾ ಸೇರಿದಂತೆ ಹಲವರು ಭಾಗವಹಿಸಿ, ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸೈಯದ್ ಖಾಲಿದ್ ಕೊಪ್ಪಳ, ಉಸ್ಮಾನ್ ಮಾಳೆಕೊಪ್ಪ, ಫಾರೂಕ್ ಸಿಂದಗಿ, ಅಕ್ಬರ್ ಅತ್ತಾರ, ಮೊಹಮ್ಮದ್ ಬೆಟಗೇರಿ, ಉಜೈರ್, ಮೈನು ಗುಜಮಾಗಡಿ, ಚಾಂದ್ ಸಾಬ್ ಅಬ್ಬಿಗೇರಿ, ಮಹಮ್ಮದ್ ಬೋದ್ಲೆಖಾನ್, ಹಾಫೀಸ್ ರೋಣ, ಬಾಬಾಜಾನ್ ಹಣಗಿ, ಬಾಬಾಜಾನ್ ಕೊಡತಗೇರಿ ಸೇರಿದಂತೆ ಹಲವಾರು ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಎಚ್.ಕೆ. ಪಾಟೀಲ್ ಅವರ ಅನುಭವ, ಜನಪರ ಸೇವೆ ಹಾಗೂ ಆಡಳಿತಾತ್ಮಕ ಸಾಮರ್ಥ್ಯವನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಯಿತು.

ಕಾರ್ಯಕ್ರಮದ ಕೊನೆಯಲ್ಲಿ ರಾಜ್ಯದ ಅಭಿವೃದ್ಧಿ, ಶಾಂತಿ, ಸೌಹಾರ್ದತೆ ಹಾಗೂ ಜನರ ಸುಖ-ಸಮೃದ್ಧಿಗಾಗಿ ವಿಶೇಷ ದುವಾ ಮಾಡಲಾಯಿತು.

“ಎಚ್.ಕೆ. ಪಾಟೀಲ್ ಅವರು ದೀರ್ಘಕಾಲದ ರಾಜಕೀಯ ಅನುಭವ ಹೊಂದಿರುವ ಜನನಾಯಕರು. ಅವರ ಸೇವೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂಬುದು ಜನರ ಆಶಯವಾಗಿದೆ.”

ಸಯ್ಯದ್ ಖಾಲಿದ್ ಕೊಪ್ಪಳ

ಮನೆ ಕಳ್ಳತನ ಪ್ರಕರಣ ಭೇದಿಸಿದ ನವಲಗುಂದ ಪೊಲೀಸರು: ಮಹಿಳೆ ಬಂಧನ

0

ವಿಜಯಸಾಕ್ಷಿ ಸುದ್ದಿ, ನವಲಗುಂದ: ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ ಮಹಿಳಾ ಆರೋಪಿತೆಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿತೆಯಿಂದ ₹4.70 ಲಕ್ಷ ಮೌಲ್ಯದ 42.79 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಳ್ಳೂರ ಗ್ರಾಮದ ಶೈಲಾ ಸಿದ್ದಯ್ಯ ಹಿರೇಮಠ ಅವರು ತಮ್ಮ ಮನೆಯಲ್ಲಿ ಕಳ್ಳತನವಾಗಿರುವ ಕುರಿತು ನೀಡಿದ ದೂರಿನ ಆಧಾರದ ಮೇಲೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಕೂಡಲೇ ನವಲಗುಂದ ವೃತ್ತದ ಸಿಪಿಐ ರವಿಕುಮಾರ ಕಪ್ಪತನವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಳ್ಳಲಾಯಿತು.

ಗ್ರಾಮದ ಸುತ್ತಮುತ್ತಲಿನ ನಿವಾಸಿಗಳಿಂದ ಮಾಹಿತಿ ಸಂಗ್ರಹಿಸಿ, ದೊರೆತ ಸುಳಿವಿನ ಆಧಾರದ ಮೇಲೆ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾಳೆ. ಬಳಿಕ ಆರೋಪಿತೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿತೆಯಿಂದ 42.79 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಅಂದಾಜು ಮೌಲ್ಯ ₹4,70,690 ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ, ಡಿಎಸ್‌ಪಿ ಶಿವಾನಂದ ಕಟಗಿ ಹಾಗೂ ಪೊಲೀಸ್ ಉಪಾಧೀಕ್ಷಕ ವಿನೋದ ಮುಕ್ತೇದಾರ ಅವರ ಮಾರ್ಗದರ್ಶನದಲ್ಲಿ ನಡೆದಿದ್ದು, ಸಿಪಿಐ ರವಿಕುಮಾರ ಕಪ್ಪತನವರ ನೇತೃತ್ವದ ತಂಡದಲ್ಲಿ ಪಿಎಸ್‌ಐ ಜನಾರ್ಧನ ಬಿ. ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.

ಕೋಟ್

“ಪ್ರಕರಣ ದಾಖಲಾದ ತಕ್ಷಣವೇ ವಿಶೇಷ ತಂಡ ರಚಿಸಿ ತನಿಖೆ ಕೈಗೊಳ್ಳಲಾಯಿತು. ಸಾರ್ವಜನಿಕರ ಸಹಕಾರ ಮತ್ತು ಸಿಬ್ಬಂದಿಯ ಸಮನ್ವಯದಿಂದ ಆರೋಪಿತೆಯನ್ನು ಪತ್ತೆಹಚ್ಚಿ ಕಳುವಾದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲು ಸಾಧ್ಯವಾಯಿತು.”

ರವಿ. ಕಪ್ಪತನವರ್, ಸಿಪಿಐ, ನವಲಗುಂದ

 

error: Content is protected !!