Home Blog

ಲಿವ್-ಇನ್ ಸಂಬಂಧ ದುರಂತ ಅಂತ್ಯ… ಯುವತಿ ಕತ್ತು ಹಿಸುಕಿ ಕೊಲೆ!

ಬೆಂಗಳೂರು: ಲಿವ್-ಇನ್ ಸಂಬಂಧದ ಜಗಳ ದುರಂತ ಅಂತ್ಯ ಕಂಡ ಘಟನೆ ಮಲ್ಲೇಶ್ವರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಶನಿವಾರ ರಾತ್ರಿ ನಡೆದ ಈ ಘಟನೆಯಲ್ಲಿ 20 ವರ್ಷದ ಅನುಷಾ ಮೃತಪಟ್ಟಿದ್ದು, ಆಕೆಯ ಲಿವ್-ಇನ್ ಸಂಗಾತಿ ಶರತ್ (25) ಬಂಧಿತನಾಗಿದ್ದಾನೆ.

ಮೂಲಗಳ ಪ್ರಕಾರ, ಅನುಷಾ ಮತ್ತು ಶರತ್ ಹಾಸನ ಮೂಲದವರು ಆಗಿದ್ದು, ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದರು. ನಂತರ ಇಬ್ಬರೂ ಬೆಂಗಳೂರಿಗೆ ಬಂದು ಕಳೆದ ಆರು ತಿಂಗಳಿನಿಂದ ಮಲ್ಲೇಶ್ವರದ ಮನೆಯಲ್ಲಿ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದರು.

ಘಟನೆಯ ದಿನ ವೈಯಕ್ತಿಕ ವಿಚಾರಕ್ಕೆ ಇಬ್ಬರ ನಡುವೆ ತೀವ್ರ ಜಗಳ ನಡೆದಿದೆ. ಈ ವೇಳೆ ಶರತ್ ಅನುಷಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಂತರ ಆರೋಪಿ ಈ ವಿಷಯವನ್ನು ತನ್ನ ವಕೀಲರಿಗೆ ತಿಳಿಸಿದ್ದಾನೆ. ವಕೀಲರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಶೇಷಾದ್ರಿಪುರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಂತರ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶರತ್‌ನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ಯುವ ಬಾಡಿಬಿಲ್ಡರ್ ಹಠಾತ್ ಸಾವು… ಲೋ BP, ಹೃದಯಾಘಾತ ಶಂಕೆ!?

ದಾವಣಗೆರೆ: ಜಿಮ್‌ ಮುಗಿಸಿ ಮನೆಗೆ ಮರಳಿದ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದು ಯುವ ಬಾಡಿಬಿಲ್ಡರ್ ಒಬ್ಬರು ಮೃತಪಟ್ಟಿರುವ ದುರಂತ ಘಟನೆ ದಾವಣಗೆರೆಯ ಕೆಟಿಜೆ ನಗರದಲ್ಲಿ ನಡೆದಿದೆ.

ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಹಾಗೂ ಅಂತರರಾಷ್ಟ್ರೀಯ ಬಾಡಿಬಿಲ್ಡಿಂಗ್ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದ 26 ವರ್ಷದ ಸುಶೀಲ್ ಕುಮಾರ್ ಮೃತಪಟ್ಟವರು. ರಾತ್ರಿ ಸುಮಾರು 8:30ರ ವೇಳೆಗೆ ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದ ಸುಶೀಲ್, ತಲೆ ಸುತ್ತುವುದಾಗಿ ಹೇಳಿ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಮಾರ್ಗ ಮಧ್ಯದಲ್ಲೇ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ ಲೋ ಬಿಪಿ ಹಾಗೂ ಹೃದಯಾಘಾತದ ಕಾರಣದಿಂದ ಸಾವು ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಬಾಡಿಬಿಲ್ಡಿಂಗ್‌ನಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದ ಸುಶೀಲ್ ಕುಮಾರ್, ಯುವಕರಿಗೆ ತರಬೇತಿ ನೀಡುವ ಮೂಲಕವೂ ಪರಿಚಿತರಾಗಿದ್ದರು. ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ.

“ನನ್ನನ್ನು ಸತ್ತವನೆಂದು ಪೋಸ್ಟ್ ಮಾಡಿದ್ದಾರೆ”: ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ನಟ ದೊಡ್ಡಣ್ಣ!

ಬೆಂಗಳೂರು: ಸ್ಯಾಂಡಲ್‌ವುಡ್ ಹಿರಿಯ ನಟ ದೊಡ್ಡಣ್ಣ ಅವರ ನಿಧನವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಪ್ರಕರಣ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ.

ಬದುಕಿರುವ ನಟನನ್ನು ‘ಮೃತರು’ ಎಂದು ಘೋಷಿಸಿ ನಕಲಿ ಶ್ರದ್ಧಾಂಜಲಿ ಪೋಸ್ಟ್ ಹಂಚಿದ ಕಿಡಿಗೇಡಿಗಳ ವಿರುದ್ಧ  ಸ್ವತಃ ದೊಡ್ಡಣ್ಣ ಅವರೇ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ಇತ್ತೀಚೆಗೆ ‘ಪಬ್ಲಿಕ್ ಫ್ರೆಂಡ್’ ಎಂಬ ಸಾಮಾಜಿಕ ಜಾಲತಾಣ ಖಾತೆಯಲ್ಲಿ ದೊಡ್ಡಣ್ಣ ಅವರ ನಿಧನಕ್ಕೆ ಸಂಬಂಧಿಸಿದಂತೆ ಶ್ರದ್ಧಾಂಜಲಿ ಸಂದೇಶವನ್ನು ಹಂಚಲಾಗಿತ್ತು. ಈ ಪೋಸ್ಟ್ ಕೆಲವೇ ಕ್ಷಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದವರಲ್ಲಿ ಆತಂಕ ಸೃಷ್ಟಿಸಿತ್ತು. ಬಳಿಕ ದೊಡ್ಡಣ್ಣ ಅವರೇ ಮಾಧ್ಯಮಗಳ ಮುಂದೆ ಬಂದು ತಾವು ಆರೋಗ್ಯವಾಗಿದ್ದು, ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಸ್ಪಷ್ಟನೆ ನೀಡಿದ್ದರು.

ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿ ದೊಡ್ಡಣ್ಣ ಅವರು ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಮಾನಸಿಕವಾಗಿ ತೊಂದರೆ ನೀಡಲಾಗಿದೆ ಎಂದು ಆರೋಪಿಸಿರುವ ಅವರು, ಕಿಡಿಗೇಡಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಸೈಬರ್ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ‘ಪಬ್ಲಿಕ್ ಫ್ರೆಂಡ್’ ಖಾತೆಯ ಐಪಿ ವಿಳಾಸ ಹಾಗೂ ಸಂಬಂಧಿಸಿದವರ ಗುರುತಿಗಾಗಿ ತನಿಖೆ ಆರಂಭಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್ ಮತ್ತು ವೀವ್ಸ್‌ಗಾಗಿ ಇಂತಹ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾವೇರಿ ಬಿಕ್ಕಟ್ಟು ತೀವ್ರ: KRS‌ನಲ್ಲಿ ಇನ್ನಿರೋದು ಕೇವಲ 11 ಟಿಎಂಸಿ ನೀರು!

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಆರಂಭದಲ್ಲೇ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಮಂಡ್ಯ–ಮೈಸೂರು ಭಾಗದ ರೈತರಲ್ಲಿ ಆತಂಕ ಹೆಚ್ಚಾಗಿದೆ.

ಈ ನಡುವೆ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ಸದ್ಯಕ್ಕೆ ಕೇವಲ 11 ಟಿಎಂಸಿ ನೀರು ಮಾತ್ರ ಉಳಿದಿದೆ. ಅದರಲ್ಲಿ 5 ಟಿಎಂಸಿ ಡೆಡ್ ಸ್ಟೋರೇಜ್ ಆಗಿರುವುದರಿಂದ ಬಳಕೆಗೆ ಲಭ್ಯವಿರುವುದು ಕೇವಲ 6 ಟಿಎಂಸಿ ನೀರು ಮಾತ್ರ.

ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡುವ ಉದ್ದೇಶದಿಂದ ಮುಂದಿನ ಮೂರು ತಿಂಗಳುಗಳ ಕಾಲ ನಾಲೆಗಳಿಗೆ ನೀರು ಹರಿಸುವ ಸಾಧ್ಯತೆ ಬಹುತೇಕ ಇಲ್ಲ ಎಂದು ಜಿಲ್ಲಾಡಳಿತ ಮೂಲಗಳು ತಿಳಿಸಿವೆ. ಈ ನಿರ್ಧಾರದಿಂದ ಮಂಡ್ಯ, ಮೈಸೂರು ಹಾಗೂ ಕೊಡಗು ಭಾಗದ ರೈತರಿಗೆ ದೊಡ್ಡ ಹೊಡೆತ ಬಿದ್ದಂತಾಗಿದೆ.

ಮಳೆ ಕೊರತೆಯಿಂದ ಕಬ್ಬು ಸೇರಿದಂತೆ ಬೆಳೆಗಳು ಒಣಗುವ ಹಂತಕ್ಕೆ ತಲುಪಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾವೇರಿ ನೀರನ್ನೇ ನಂಬಿಕೊಂಡು ಕೃಷಿ ಮಾಡುತ್ತಿದ್ದ ಸಾವಿರಾರು ರೈತರ ಬದುಕು ಇದೀಗ ಅನಿಶ್ಚಿತತೆಯತ್ತ ಸಾಗುತ್ತಿದೆ.

ಇನ್ನು ಮಳೆಯಾಗದೆ ಇದ್ದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದ್ದು, ಕೆಆರ್‌ಎಸ್ ಜಲಾಶಯ ಶೀಘ್ರ ಭರ್ತಿಯಾಗಲಿ ಎಂಬುದು ರೈತರ ಆಶೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಮಳೆ! ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ವರದಿಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಲ್ಲಿ ಬಲವಾದ ಗಾಳಿಯೂ ಬೀಸುವ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ಉತ್ತರ ಕನ್ನಡ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನಲ್ಲಿ ಕಲ್ಬುರ್ಗಿ, ಬೀದರ್, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಸೇರಿದಂತೆ ಹಲವು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ ಬಳ್ಳಾರಿ, ಮೈಸೂರು, ಚಿಕ್ಕಮಗಳೂರು, ಕೊಡಗು, ಹಾಸನ, ತುಮಕೂರು, ಚಾಮರಾಜನಗರ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಹವಾಮಾನ ಇಲಾಖೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಿದ್ದು, ಬಿರುಗಾಳಿ ಸಂದರ್ಭಗಳಲ್ಲಿ ಮರಗಳ ಕೆಳಗೆ ಅಥವಾ ಹಳೆಯ ಕಟ್ಟಡಗಳ ಬಳಿ ಆಶ್ರಯ ಪಡೆಯಬಾರದೆಂದು ಸಲಹೆ ನೀಡಿದೆ. ವಾಹನ ಚಾಲಕರು ಸಹ ಜಾಗರೂಕತೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

 

ಮಳೆಯ ನಿರೀಕ್ಷೆಯಲ್ಲಿ ಗುರ್ಜಿ ಪೂಜೆ: ಅಬ್ಬಿಗೇರಿಯಲ್ಲಿ ಜೀವಂತವಾದ ಜನಪದ ಸಂಪ್ರದಾಯ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: “ಗುರ್ಜಿ… ಗುರ್ಜಿ… ಎಲ್ಲಾಡಿ ಬಂದೆ… ಹಳ್ಳ-ಕೊಳ್ಳ ತಿರುಗಾಡಿ ಬಂದೆ… ಕಾರ ಮಳೆಯೇ, ಕಪ್ಪತ್ತ ಮಳೆಯೇ…” ಎಂಬ ಜನಪದ ಗೀತೆಯ ನಿನಾದದೊಂದಿಗೆ ಸಮೀಪದ ಅಬ್ಬಿಗೇರಿ ಗ್ರಾಮದ ಗೌಡ್ರ ಓಣಿಯ ರೈತ ಮಹಿಳೆಯರು ಸಾಂಪ್ರದಾಯಿಕ ಗುರ್ಜಿ ಪೂಜೆ ನೆರವೇರಿಸಿ ಮಳೆರಾಯನಿಗೆ ಮೊರೆ ಹೋದರು.

ಮುಂಗಾರು ಆರಂಭದಲ್ಲಿ ಸುರಿದ ಅಲ್ಪ ಪ್ರಮಾಣದ ಮಳೆಯನ್ನೇ ನಂಬಿ ರೈತರು ಶೇಂಗಾ, ತೊಗರಿ, ಹೆಸರು ಹಾಗೂ ಗೋವಿನ ಜೋಳ ಸೇರಿದಂತೆ ವಿವಿಧ ಬೆಳೆಗಳ ಬಿತ್ತನೆ ಪೂರ್ಣಗೊಳಿಸಿದ್ದರು. ಆದರೆ ಕಳೆದ ಹಲವು ದಿನಗಳಿಂದ ಮಳೆ ಕಾಣಿಸದ ಕಾರಣ ಮೊಳಕೆ ಒಡೆಯುತ್ತಿರುವ ಬೀಜಗಳಿಗೆ ತೇವಾಂಶದ ಕೊರತೆ ಎದುರಾಗಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಗ್ರಾಮದ ಮಹಿಳೆಯರು ಶತಮಾನಗಳಿಂದ ನಡೆದುಕೊಂಡು ಬಂದಿರುವ ಜನಪದ ಸಂಪ್ರದಾಯದಂತೆ ಗುರ್ಜಿ ಪೂಜೆ ಆಚರಿಸಿದರು. ರೊಟ್ಟಿ ಬೇಯಿಸುವ ಹಂಚಿನ ಮೇಲೆ ಆಕಳ ಸಗಣಿಯಿಂದ ತಯಾರಿಸಿದ ಗುರ್ಜಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಹಸಿರು ಹುಲ್ಲಿನ ಸಸಿಗಳಿಂದ ಅಲಂಕರಿಸಿ ಗ್ರಾಮದ ಓಣಿ-ಓಣಿಗಳಲ್ಲಿ ಸಂಚರಿಸಿದರು.

ಮಹಿಳೆಯರು ಜನಪದ ಹಾಡುಗಳನ್ನು ಹಾಡುತ್ತಾ ಪ್ರತಿ ಮನೆಯ ಮುಂದೆ ತೆರಳಿದಾಗ, ಮನೆಯವರು ಗುರ್ಜಿ ಹೊತ್ತ ಮಹಿಳೆಯರ ತಲೆ ಮೇಲೆ ನೀರು ಸುರಿದು ಪೂಜೆ ಸಲ್ಲಿಸಿದರು. ಜೋಳ, ರೊಟ್ಟಿ-ಪಲ್ಲೆ, ಧಾನ್ಯ, ಪುಡಿಗಾಸು ಸೇರಿದಂತೆ ವಿವಿಧ ದವಸಧಾನ್ಯಗಳನ್ನು ಸಮರ್ಪಿಸಿದರು.

ಪೂಜೆಯ ನಂತರ ಸಂಗ್ರಹವಾದ ದವಸಧಾನ್ಯಗಳಿಂದ ಗೋಧಿ ಹುಗ್ಗಿ, ಜೋಳದ ಸಂಗಟಿ ಹಾಗೂ ಸಾರು ತಯಾರಿಸಿ ಹಳ್ಳದ ದಡದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಬಳಿಕ ಜಂಗಮರಾಧನೆ ಮತ್ತು ಅನ್ನಸಂತರ್ಪಣೆ ನಡೆಯಿತು.

ರೈತ ಮಹಿಳೆಯರಾದ ಮಲ್ಲಮ್ಮ ಬೇಲೇರಿ, ಮಂಜಕ್ಕ ಸೊಬರದ, ಶಿವಲೀಲಾ ಪಾಟೀಲ, ಸಂಗಮ್ಮ ಬಾಗೂರ, ಅಕ್ಕಮ್ಮ ಚನ್ನಪ್ಪಗೌಡ್ರ, ವೀಣಾ ಬೇಲೇರಿ ಹಾಗೂ ಕವಿತಾ ಕಿರಟಗೇರಿ ಮಾತನಾಡಿ, ಇನ್ನೂ ಕೆಲವೇ ದಿನಗಳಲ್ಲಿ ಮಳೆಯಾಗದಿದ್ದರೆ ಬಿತ್ತಿದ ಬೀಜಗಳು ಒಣಗುವ ಭೀತಿ ಇದೆ. ಈಗಾಗಲೇ ಬೀಜ, ಗೊಬ್ಬರ ಮತ್ತು ಉಳುಮೆಗೆ ಹೆಚ್ಚಿನ ವೆಚ್ಚ ಮಾಡಿದ್ದು, ಮಳೆ ಕೈಕೊಟ್ಟರೆ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

“ಗುರ್ಜಿ ಪೂಜೆ ನಮ್ಮ ಸಂಪ್ರದಾಯ ಮಾತ್ರವಲ್ಲ, ರೈತರ ಬದುಕಿನ ಭರವಸೆಯ ಸಂಕೇತ. ಮಳೆರಾಯ ಕೃಪೆ ತೋರಿ ಬೆಳೆ ಉಳಿಸಲಿ ಎಂಬುದೇ ನಮ್ಮ ಪ್ರಾರ್ಥನೆ.”

 ಶಿವಲೀಲಾ ಪಾಟೀಲ, ರೈತ ಮಹಿಳೆ

ಕನ್ನಡ ವಿದ್ಯಾರ್ಥಿಗಳಿಗೆ ‘ಬಿ ಶ್ರೇಣಿ’ ನೀಡುವುದು ಖಂಡನೀಯ

0

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮದ ಹೆಸರಿನಲ್ಲಿ ಕನ್ನಡ ಮಾಧ್ಯಮದಲ್ಲಿ ಉತ್ತರಿಸುವ ವಿದ್ಯಾರ್ಥಿಗಳಿಗೆ ‘ಬಿ ಶ್ರೇಣಿ’ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಉತ್ತರಿಸುವವರಿಗೆ ಮಾತ್ರ ‘ಎ ಶ್ರೇಣಿ’ ನೀಡುತ್ತಿರುವ ಕ್ರಮವನ್ನು ಎಐಡಿಎಸ್ಓ (ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ) ತೀವ್ರವಾಗಿ ಖಂಡಿಸಿದೆ.

ಸೇತುಬಂಧ ಪರೀಕ್ಷೆಗಳ ಮೌಲ್ಯಮಾಪನದಲ್ಲಿ ಈ ಮಾನದಂಡವನ್ನು ಅನುಸರಿಸುತ್ತಿರುವುದು ಭಾಷಾ ಆಯ್ಕೆಯ ಸ್ವಾತಂತ್ರ್ಯದ ಉಲ್ಲಂಘನೆಯಾಗಿದ್ದು, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳ ವಿರುದ್ಧ ತಾರತಮ್ಯ ಎಸಗಿದಂತಾಗಿದೆ ಎಂದು ಸಂಘಟನೆ ಆರೋಪಿಸಿದೆ.

ಪ್ರಾಥಮಿಕ ಶಿಕ್ಷಣದಲ್ಲಿ ಮಾತೃಭಾಷೆಗೆ ಉತ್ತೇಜನ ನೀಡಬೇಕೆಂದು ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನಗಳಿಗೂ ಈ ಕ್ರಮ ವಿರುದ್ಧವಾಗಿದೆ. ಪ್ರಾಥಮಿಕ ಹಂತದಲ್ಲಿ ಮಾತೃಭಾಷಾ ಶಿಕ್ಷಣವನ್ನು ಬಲಪಡಿಸುವ ಬದಲು ಕನ್ನಡಕ್ಕೆ ಎರಡನೇ ಸ್ಥಾನ ನೀಡುವ ರೀತಿಯಲ್ಲಿ ಸರ್ಕಾರ ನಡೆದುಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರೊಂದಿಗೆ ಸಮಾಲೋಚನೆ ನಡೆಸದೆ ದ್ವಿಭಾಷಾ ಮಾಧ್ಯಮವನ್ನು ಜಾರಿಗೊಳಿಸಿರುವುದೇ ಇಂತಹ ಸಮಸ್ಯೆಗಳಿಗೆ ಕಾರಣವಾಗಿದೆ. ಮಾತೃಭಾಷಾ ಶಿಕ್ಷಣವು ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆಗೆ ಮೂಲಾಧಾರವಾಗಿದ್ದು, ಶಿಕ್ಷಣ ತಜ್ಞರ ಅಭಿಪ್ರಾಯಗಳನ್ನು ಕಡೆಗಣಿಸಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಎಐಡಿಎಸ್ಓ ಆರೋಪಿಸಿದೆ.

ಕನ್ನಡ ಮಾಧ್ಯಮದ ಆಯ್ಕೆ ಸ್ವಾತಂತ್ರ್ಯವನ್ನು ರಕ್ಷಿಸಿ ಉತ್ತೇಜನ ನೀಡಬೇಕು ಹಾಗೂ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಕ್ರಮವನ್ನು ಕೂಡಲೇ ಕೈಬಿಡಬೇಕು ಎಂದು ಎಐಡಿಎಸ್ಓ ಜಿಲ್ಲಾ ಸಂಚಾಲಕಿ ಎಂ. ಶಾಂತಿ ಆಗ್ರಹಿಸಿದ್ದಾರೆ.

“ಕನ್ನಡದಲ್ಲಿ ಉತ್ತರ ಬರೆದ ವಿದ್ಯಾರ್ಥಿಗಳಿಗೆ ಕಡಿಮೆ ಶ್ರೇಣಿ ನೀಡುವುದು ಭಾಷಾ ತಾರತಮ್ಯವಾಗಿದೆ. ಸರ್ಕಾರ ಕೂಡಲೇ ಈ ಕ್ರಮವನ್ನು ಹಿಂಪಡೆದು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಬೇಕು.”

ಎಂ. ಶಾಂತಿ, ಜಿಲ್ಲಾ ಸಂಚಾಲಕಿ, ಎಐಡಿಎಸ್ಓ ಗದಗ

ಜನ್ಮದಿನಕ್ಕೆ ಸಮಾಜಸೇವೆ ಸ್ಪರ್ಶ: ವಿದ್ಯಾರ್ಥಿಗಳಿಗೆ ವಿದ್ಯಾಕಿಟ್, ರೈತರಿಗೆ ಸಾವಯವ ಗೊಬ್ಬರ ವಿತರಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕನ್ನಡ ಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿಗಳಾದ, ರೈತಪರ ಯುವ ಮುಖಂಡ ಪ್ರಭುರಾಜಗೌಡ ವಿ. ಪಾಟೀಲ ಅವರ ಜನ್ಮದಿನದ ಅಂಗವಾಗಿ ನಗರದ ಶ್ರೀ ದುರ್ಗಾದೇವಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾಕಿಟ್ ಹಾಗೂ ರೈತರಿಗೆ ಸಾವಯವ ಗೊಬ್ಬರದ ಕಿಟ್‌ಗಳನ್ನು ವಿತರಿಸುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಪ್ರಭುರಾಜಗೌಡ ಪಾಟೀಲ ಅವರ ಸ್ನೇಹಿತರ ಬಳಗದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಇತರೆ ಶೈಕ್ಷಣಿಕ ಸಾಮಗ್ರಿಗಳ ಕಿಟ್ ವಿತರಿಸಲಾಯಿತು. ಇದೇ ವೇಳೆ ರೈತರಿಗೆ ಸಾವಯವ ಕೃಷಿ ಉತ್ತೇಜಿಸುವ ಉದ್ದೇಶದಿಂದ ಸಾವಯವ ಗೊಬ್ಬರದ ಕಿಟ್‌ಗಳನ್ನು ಉಚಿತವಾಗಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ವೈದ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ. ಗಣೇಶ ಸುಲ್ತಾನಪೂರ ಮಾತನಾಡಿ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಿಟ್ ಹಾಗೂ ರೈತರಿಗೆ ಸಾವಯವ ಕೃಷಿ ಕಿಟ್ ವಿತರಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಲಾಗಿದೆ. ಕಳೆದ ಎರಡು ದಶಕಗಳಿಂದ ಕನ್ನಡಪರ, ರೈತಪರ ಹಾಗೂ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಪ್ರಭುರಾಜಗೌಡ ಪಾಟೀಲ ಯುವಜನತೆಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ದುರ್ಗಾದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಇಮರಾಪೂರ ಮಾತನಾಡಿ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ಹಾಗೂ ರೈತರಿಗೆ ಸಾವಯವ ಗೊಬ್ಬರ ವಿತರಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ರೈತರು ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ವಿಷಮುಕ್ತ ಆಹಾರ ಉತ್ಪಾದನೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ದುರ್ಗಾದೇವಿ ಶಿಕ್ಷಣ ಸಂಸ್ಥೆ ಹಾಗೂ ಡಾ. ಗಣೇಶ ಸುಲ್ತಾನಪೂರ ಅವರ ವತಿಯಿಂದ ಪ್ರಭುರಾಜಗೌಡ ಪಾಟೀಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಭುರಾಜಗೌಡ ಪಾಟೀಲ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣದೊಂದಿಗೆ ಶಿಸ್ತು, ಸಂಸ್ಕಾರಗಳನ್ನು ರೂಢಿಸಿಕೊಳ್ಳಬೇಕು. ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಂಠಿತವಾಗುತ್ತಿದ್ದು, ರೈತರು ಸಾವಯವ ಕೃಷಿಯತ್ತ ಮುಖ ಮಾಡಿದರೆ ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಪಡೆಯಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಾದ ಈರಪ್ಪ ಜಡಿ, ವಿರುಪಾಕ್ಷಪ್ಪ ಕೋತಂಬ್ರಿ, ಬಾಪುಗೌಡ ಮಲ್ಲಾಪೂರ, ಯುವ ಮುಖಂಡರಾದ ಚೇತನಕುಮಾರ ಹುಡೇದ, ಅಜಯ ಕುಲಕರ್ಣಿ, ಸಂತೋಷ ಪಾಟೀಲ, ಯಲ್ಲಪ್ಪ ಜಡಿ, ಸಂಗಪ್ಪ ಮೇಟಿ, ಶಿಕ್ಷಣ ಸಂಸ್ಥೆಯ ಪ್ರಮುಖರಾದ ಡಾ. ಮುತ್ತು ಜಡಿ, ಹೀರಾಲಾಲ ಸಿಂಗ್ರಿ, ರುದ್ರಗೌಡ ಪಾಟೀಲ, ಲೋಕೇಶ ಮಲ್ಲಿಗವಾಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ರೈತರಿಗೆ ಸಾವಯವ ಕೃಷಿಯ ಅರಿವು ನೀಡುವ ಕಾರ್ಯಗಳು ಸಮಾಜಮುಖಿ ಚಟುವಟಿಕೆಗಳಾಗಿವೆ. ಯುವಕರು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ.”

ಡಾ. ಗಣೇಶ ಸುಲ್ತಾನಪೂರ

ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನಕ್ಕೆ ಗದಗದಲ್ಲಿ ಬೃಹತ್ ಪ್ರತಿಭಟನೆ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಹಿರಿಯ ಕಾಂಗ್ರೆಸ್ ನಾಯಕ, ಶಾಸಕ ಎಚ್.ಕೆ. ಪಾಟೀಲರಿಗೆ ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಸೂಕ್ತ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಮಂಗಳವಾರ ಗದಗ ನಗರದಲ್ಲಿ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು.

ದಿ. ಕಾಟನ್ ಸೇಲ್ ಸೊಸೈಟಿ ಆವರಣದಿಂದ ಆರಂಭವಾದ ಮೆರವಣಿಗೆ ಭೂಮರಡ್ಡಿ ಸರ್ಕಲ್, ಮಹಾತ್ಮ ಗಾಂಧಿ ಸರ್ಕಲ್, ಮಹೇಂದ್ರಕರ್ ಸರ್ಕಲ್, ಟಾಂಗಾ ಕೂಟ, ಬಸವೇಶ್ವರ ಸರ್ಕಲ್, ಪಂಚರ ಹೊಂಡ ಹಾಗೂ ಐತಿಹಾಸಿಕ ಜೋಡ ಮಾರುತಿ ದೇವಸ್ಥಾನದ ಮಾರ್ಗವಾಗಿ ಮುಳಗುಂದ ನಾಕಾವರೆಗೆ ಸಾಗಿತು. ಮೆರವಣಿಗೆಯುದ್ದಕ್ಕೂ ಕಾರ್ಯಕರ್ತರು ಎಚ್.ಕೆ. ಪಾಟೀಲರ ಪರ ಘೋಷಣೆಗಳನ್ನು ಕೂಗಿ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದರು.

ಗದಗ-ಬೆಟಗೇರಿ ಅವಳಿ ನಗರದ 35 ವಾರ್ಡ್‌ಗಳ ಜೊತೆಗೆ ಗದಗ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗಗಳಿಂದಲೂ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಆಟೋ ಚಾಲಕರು, ರೈತರು, ಯುವಕರು, ಮಹಿಳೆಯರು, ಎತ್ತು ಚಕ್ಕಡಿಗಳು ಹಾಗೂ ಟ್ರ್ಯಾಕ್ಟರ್‌ಗಳ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಗಮನ ಸೆಳೆಯಿತು.

ಮೆರವಣಿಗೆಯಲ್ಲಿ ಎಚ್.ಕೆ. ಪಾಟೀಲರ ರಾಜಕೀಯ ಅನುಭವ, ಆಡಳಿತಾತ್ಮಕ ಸಾಮರ್ಥ್ಯ ಹಾಗೂ ರಾಜ್ಯದ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳನ್ನು ಬಿಂಬಿಸುವ ಬ್ಯಾನರ್‌ಗಳು ಮತ್ತು ಫಲಕಗಳು ರಾರಾಜಿಸುತ್ತಿದ್ದವು. ಬಿರು ಬಿಸಿಲಿನ ನಡುವೆಯೂ ಕಾರ್ಯಕರ್ತರು ಉತ್ಸಾಹದಿಂದ ಹೆಜ್ಜೆ ಹಾಕಿದರು. ಪ್ರತಿಭಟನಾಕಾರರಿಗಾಗಿ ಸ್ಥಳೀಯ ಮುಖಂಡರು ಮಜ್ಜಿಗೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದರು.

ಸಮಾವೇಶದಲ್ಲಿ ಏಕಸ್ವರದ ಆಗ್ರಹ

ಮುಳಗುಂದ ನಾಕಾದಲ್ಲಿ ಮೆರವಣಿಗೆ ಬೃಹತ್ ಸಮಾವೇಶವಾಗಿ ಮಾರ್ಪಟ್ಟಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಎಚ್.ಕೆ. ಪಾಟೀಲ ಅವರು ಕೇವಲ ಗದಗ ಕ್ಷೇತ್ರದ ಶಾಸಕರಲ್ಲ, ಇಡೀ ರಾಜ್ಯದ ರಾಜಕೀಯ ಆಸ್ತಿ. ಆಡಳಿತ, ಕಾನೂನು, ಅಭಿವೃದ್ಧಿ ಮತ್ತು ಸಾರ್ವಜನಿಕ ಜೀವನದ ಅಪಾರ ಅನುಭವ ಹೊಂದಿರುವ ಅವರನ್ನು ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳುವುದು ರಾಜ್ಯದ ಹಿತದೃಷ್ಟಿಯಿಂದ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಹಾವೇರಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೊಟ್ರಪ್ಪ ಬಸೇಗಣ್ಣಿ, ಸುಜಾತಾ ದೊಡ್ಡಮನಿ, ಗುರಣ್ಣ ಬಳಗಾನೂರ, ರವಿ ಮೂಲಿಮನಿ, ಬಸವರಾಜ ಸುಂಕಾಪೂರ, ನೀಲಮ್ಮ ಬೋಳನವರ, ಅಶೋಕ ಮಂದಾಲಿ, ಬರಕತ್ ಅಲಿ ಮುಲ್ಲಾ, ವಾಸಣ್ಣ ಕುರುಡಗಿ, ಬಸವರಾಜ ಕಡೆಮನಿ, ಶಾಂತಣ್ಣ ಮುಳವಾಡ, ಬಿ.ಆರ್. ದೇವರಡ್ಡಿ, ಮಹಮ್ಮದ್ ಶಾಲಗಾರ, ಮಾಂತೇಶ ಮಡಿವಾಳರ, ಪರಪ್ಪ ಕಮತರ, ಸರಫರಾಜ್ ಬಬರ್ಚಿ, ಮೋಹನ ದುರಗಣ್ಣವರ, ಚಂದ್ರಪ್ಪ ಕರಿಕಟ್ಟಿ, ಪೀರಸಾಬ ಕೌತಾಳ, ಅಕ್ಬರ್ ಸಾಬ್ ಬಬರ್ಚಿ, ಎಸ್.ಪಿ. ಬಳಿಗಾರ ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದರು.

“ಎಚ್.ಕೆ. ಪಾಟೀಲರು ಈ ರಾಜ್ಯದ ನೆಲ, ಜಲ, ಭಾಷೆ ಮತ್ತು ಸಮಗ್ರ ಅಭಿವೃದ್ಧಿಗಾಗಿ ನಿರಂತರವಾಗಿ ಹೋರಾಡಿದ ನಾಯಕರು. ಅವರ ಅನುಭವ ಮತ್ತು ದೂರದೃಷ್ಟಿ ಸಚಿವ ಸಂಪುಟದಲ್ಲಿ ರಾಜ್ಯಕ್ಕೆ ಅಗತ್ಯವಾಗಿದೆ. ಅವರಿಗೆ ಸಚಿವ ಸ್ಥಾನ ನೀಡುವುದು ಗದಗ ಜಿಲ್ಲೆಯ ಬೇಡಿಕೆಯಷ್ಟೇ ಅಲ್ಲ, ರಾಜ್ಯದ ಜನರ ಆಶಯವಾಗಿದೆ.”

ಸಯ್ಯದ್ ಖಾಲಿದ್ ಕೊಪ್ಪಳ

ಕಾಂಗ್ರೆಸ್ ಯುವ ಮುಖಂಡ

ಸಾಧಕರಿಗೆ ಸನ್ಮಾನಿಸಿ ಮಾದರಿಯಾದ ಐಎಂಎ

0

ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಎಸ್‌ಎಸ್‌ಎಲ್‌ಸಿ ಹಂತ ಮಹತ್ವದ ಘಟ್ಟವಾಗಿದ್ದು, ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗದಗ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.

ನಗರದ ಭಾರತೀಯ ವೈದ್ಯಕೀಯ ಸಂಘ (ಐಎಂಎ), ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಐಎಂಎ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಆಯೋಜಿಸಿದ್ದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗದಗದ ಐಎಂಎ ಸಂಸ್ಥೆಗೆ ಶತಮಾನಕ್ಕೂ ಮೀರಿದ ಇತಿಹಾಸವಿದ್ದು, ಸಮಾಜಕ್ಕೆ ಮರಳಿ ಏನನ್ನಾದರೂ ನೀಡಬೇಕು ಎಂಬ ಧ್ಯೇಯದೊಂದಿಗೆ ವೈದ್ಯರು ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಸಾಧಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಸನ್ಮಾನ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯವನ್ನು ಐಎಂಎ ಮಾಡುತ್ತಿದೆ. ವಿದ್ಯಾರ್ಥಿಗಳು ತಮ್ಮ ಸಾಧನೆಯ ಹಾದಿಯನ್ನು ಮುಂದುವರಿಸಿಕೊಂಡು ಯಶಸ್ಸಿನ ಶಿಖರ ತಲುಪಬೇಕು ಎಂದು ಕರೆ ನೀಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಹಾಗೂ ಕುಲಸಚಿವ ಪ್ರೊ. ಡಾ. ಸುರೇಶ ನಾಡಗೌಡರ ಮಾತನಾಡಿ, ಅಂಕಗಳ ಜೊತೆಗೆ ಉತ್ತಮ ನಡತೆ, ಕೃತಜ್ಞತೆ ಮತ್ತು ಸಂವಹನ ಕೌಶಲ್ಯವೂ ವಿದ್ಯಾರ್ಥಿಗಳ ಯಶಸ್ಸಿಗೆ ಅಗತ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

“ಸಮಾಜಕ್ಕೆ ಕೊಡುಗೆ ನೀಡುವುದರಲ್ಲಿ ಸಿಗುವ ಆತ್ಮತೃಪ್ತಿ ಅತ್ಯಂತ ದೊಡ್ಡದು. ಐಎಂಎ ವೈದ್ಯರು ಶಿಕ್ಷಣ, ಆರೋಗ್ಯ ಮತ್ತು ಸಮಾಜಮುಖಿ ಕಾರ್ಯಗಳ ಮೂಲಕ ಮಾದರಿಯಾಗಿದ್ದಾರೆ.”

 ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

error: Content is protected !!