Home Blog

ಕರ್ನಾಟಕದ 4 ಸ್ಥಾನ ಸೇರಿ, ರಾಜ್ಯಸಭೆಯ 24 ಸ್ಥಾನಗಳ ಚುನಾವಣೆಗೆ ದಿನಾಂಕ ಘೋಷಣೆ

ನವದೆಹಲಿ/ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಜೂನ್ 18ರಂದು ಮತದಾನ ನಡೆಯಲಿದ್ದು, ಕರ್ನಾಟಕದ ನಾಲ್ಕು ಸ್ಥಾನಗಳಿಗೂ ಚುನಾವಣೆ ನಡೆಯಲಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೇರಿದಂತೆ ಹಲವು ಹಾಲಿ ಸದಸ್ಯರ ಅವಧಿ ಜೂನ್ ಹಾಗೂ ಜುಲೈ ತಿಂಗಳಲ್ಲಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯುತ್ತಿದೆ.

ಚುನಾವಣೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಜೂನ್ 1ರಂದು ಹೊರಡಿಸಲಾಗುತ್ತದೆ. ಜೂನ್ 1ರಿಂದ 8ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಜೂನ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂನ್ 11ರವರೆಗೆ ನಾಮಪತ್ರ ಹಿಂಪಡೆಯಲು ಕಾಲಾವಕಾಶ ಇರುತ್ತದೆ.

ಜೂನ್ 18ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆಯೂ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಜೂನ್ 20ರೊಳಗೆ ಸಂಪೂರ್ಣ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ರಾಜ್ಯವಾರು ನೋಡಿದರೆ ಕರ್ನಾಟಕ, ಆಂಧ್ರಪ್ರದೇಶ ಹಾಗೂ ಗುಜರಾತ್ ರಾಜ್ಯಗಳಲ್ಲಿ ತಲಾ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ ಮೂರು ಸ್ಥಾನಗಳು ಖಾಲಿಯಾಗಲಿವೆ.

ಇನ್ನೂ ಜಾರ್ಖಂಡ್‌ನಲ್ಲಿ ಎರಡು ಸ್ಥಾನಗಳಿಗೆ ಹಾಗೂ ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಇದೇ ವೇಳೆ, ಜಾರ್ಖಂಡ್, ತಮಿಳುನಾಡು ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ನಿವೃತ್ತಿಯಾಗಲಿರುವ ಸದಸ್ಯರಲ್ಲಿ ಬಿಜೆಪಿಯ 11 ಮಂದಿ ಹಾಗೂ ಕಾಂಗ್ರೆಸ್‌ನ ನಾಲ್ವರು ಸಂಸದರು ಸೇರಿದ್ದಾರೆ. ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ್ ಸಿಂಗ್ ಹಾಗೂ ಎಚ್.ಡಿ. ದೇವೇಗೌಡರ ಅವಧಿಯೂ ಅಂತ್ಯಗೊಳ್ಳಲಿದೆ.

ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ವಿಶೇಷ ಸೂಚನೆಗಳನ್ನು ನೀಡಿರುವ ಚುನಾವಣಾ ಆಯೋಗ, ಮತದಾನದ ವೇಳೆ ಚುನಾವಣಾಧಿಕಾರಿಗಳು ನೀಡುವ ವಿಶೇಷ ನೇರಳೆ ಬಣ್ಣದ ಸ್ಕೆಚ್ ಪೆನ್ ಅನ್ನು ಮಾತ್ರ ಬಳಸಬೇಕು ಎಂದು ಸ್ಪಷ್ಟಪಡಿಸಿದೆ.

ದಶಕದ ಹೋರಾಟಕ್ಕೆ ಸಿಕ್ಕ ಫಲ! ಕೊಪ್ಪಳದಲ್ಲಿ ಮಾಲಿನ್ಯ ಕಾರ್ಖಾನೆಗಳಿಗೆ ಬೀಗ

0

ಕೊಪ್ಪಳ: ಪರಿಸರ ಮಾಲಿನ್ಯದಿಂದ ಜನಜೀವನ ಅಸ್ತವ್ಯಸ್ತವಾಗುತ್ತಿದೆ ಎಂಬ ಆರೋಪಗಳ ನಡುವೆ ಕೊಪ್ಪಳ ಜಿಲ್ಲಾಡಳಿತ ಮಹತ್ವದ ಕ್ರಮ ಕೈಗೊಂಡಿದ್ದು, ತಾಲೂಕಿನ ಎರಡು ಪ್ರಮುಖ ಕಾರ್ಖಾನೆಗಳನ್ನು ಸೀಜ್ ಮಾಡಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನಿರ್ದೇಶನದಂತೆ ಈ ಕಾರ್ಯಾಚರಣೆ ನಡೆದಿದ್ದು, ಸಾರ್ವಜನಿಕರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹಾಲುವರ್ತಿ ಸಮೀಪದ ಪಿಬಿಎಸ್-1 ಕಾರ್ಖಾನೆ ಮತ್ತು ಅಲ್ಲಾನಗರ ವ್ಯಾಪ್ತಿಯ ಹೊಸಪೇಟೆ ಇಸ್ಪಾತ್ ಕಾರ್ಖಾನೆಗಳಿಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಪರಿಸರ ನಿಯಮ ಉಲ್ಲಂಘನೆ ಹಾಗೂ ವಾಯುಮಾಲಿನ್ಯ ಹೆಚ್ಚಳದ ಹಿನ್ನೆಲೆಯಲ್ಲಿ ಈ ಕ್ರಮ ಜಾರಿಗೊಂಡಿದೆ.

ಕಾರ್ಖಾನೆಗಳಿಂದ ಹೊರಸೂಸುತ್ತಿದ್ದ ಹೊಗೆ ಮತ್ತು ದೂಳಿನಿಂದ ಕೃಷಿ ಜಮೀನುಗಳು, ಕುಡಿಯುವ ನೀರು ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ಹಲವು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದರು.

ಕಳೆದ ತಿಂಗಳು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರ ಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಒಟ್ಟು ಐದು ಕಾರ್ಖಾನೆಗಳಿಗೆ ಕ್ಲೋಸರ್ ನೋಟಿಸ್ ಜಾರಿಗೊಳಿಸಲಾಗಿತ್ತು. ಇದೀಗ ಅದರ ಭಾಗವಾಗಿ ಎರಡು ಕಾರ್ಖಾನೆಗಳಿಗೆ ಸೀಲ್ ಹಾಕಲಾಗಿದೆ.

ಆದರೆ ಜಿಲ್ಲಾಡಳಿತದ ಕ್ರಮದ ಬಗ್ಗೆ ಪ್ರಶ್ನೆಗಳೂ ಕೇಳಿಬರುತ್ತಿವೆ. ಸೀಜ್ ಮಾಡಲಾಗಿರುವ ಹೊಸಪೇಟೆ ಇಸ್ಪಾತ್ ಕಾರ್ಖಾನೆ ಕಳೆದ ಒಂದು ವರ್ಷದಿಂದಲೇ ಕಾರ್ಯನಿರ್ವಹಿಸುತ್ತಿರಲಿಲ್ಲ ಎಂಬ ಮಾಹಿತಿ ಹರಿದಾಡುತ್ತಿದೆ.

ಹೀಗಾಗಿ ಈಗಾಗಲೇ ಬಂದ್ ಆಗಿದ್ದ ಘಟಕವನ್ನು ಸೀಜ್ ಮಾಡಿ ಅಧಿಕಾರಿಗಳು ಕೇವಲ ತೋರಿಕೆಗೆ ಕ್ರಮ ಕೈಗೊಂಡರಾ ಎಂಬ ಅನುಮಾನ ಸ್ಥಳೀಯರಲ್ಲಿ ಮೂಡಿದೆ. ದಿನನಿತ್ಯ ಪರಿಸರ ಮಾಲಿನ್ಯ ಉಂಟುಮಾಡುತ್ತಿರುವ ಉಳಿದ ಮೂರು ಕಾರ್ಖಾನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಯಾವಾಗ ಎನ್ನುವ ಪ್ರಶ್ನೆ ಇದೀಗ ತೀವ್ರವಾಗಿದೆ.

ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ತತ್ತರಿಸಿದ ಬೆಂಗಳೂರು: ಹತ್ತಾರು ಅವಾಂತರಗಳಿಂದ ಜನ ಹೈರಾಣು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ಮಳೆರಾಯ ಎಂಟ್ರಿ ಕೊಟ್ಟಿದ್ದು, ಗುರುವಾರ ಸಂಜೆ ಸುರಿದ ಭಾರೀ ಮಳೆ ಹಲವು ಅವಾಂತರಗಳಿಗೆ ಕಾರಣವಾಗಿದೆ. ನಗರದ ವಿವಿಧ ಭಾಗಗಳಲ್ಲಿ ಬೃಹತ್ ಮರಗಳು ಧರೆಗುರುಳಿದ್ದು, ವಾಹನಗಳು ಜಖಂಗೊಂಡಿವೆ. ಕೆಲವೆಡೆ ರಸ್ತೆ ಕುಸಿತವೂ ಸಂಭವಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ರಾಜಾಜಿನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಬೃಹದಾಕಾರದ ಮರವೊಂದು ಏಕಾಏಕಿ ರಸ್ತೆಗೆ ಉರುಳಿಬಿದ್ದಿದೆ. ಪರಿಣಾಮ ಅಲ್ಲೇ ನಿಂತಿದ್ದ ಎರಡು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆ ಮಾರ್ಗದಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಇನ್ನೊಂದೆಡೆ, ಯುಬಿ ಸಿಟಿಯ ಸದರ್ನ್ ಸ್ಟಾರ್ ಹೋಟೆಲ್ ಮುಂಭಾಗ ಭಾರೀ ಮಳೆಗೆ ರಸ್ತೆ ಕುಸಿದಿದ್ದು, ಅಲ್ಲೇ ನಿಂತಿದ್ದ ಇನ್ನೋವಾ ಕಾರೊಂದು ಕುಸಿದ ಭಾಗದಲ್ಲಿ ಸಿಲುಕಿಕೊಂಡಿದೆ. ರಸ್ತೆ ಕುಸಿದ ದೃಶ್ಯ ಕಂಡು ಜನರು ಬೆಚ್ಚಿಬಿದ್ದಿದ್ದು, ಕಳಪೆ ಕಾಮಗಾರಿಯೇ ಈ ಘಟನೆಗೆ ಕಾರಣ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನಂದಿನಿ ಲೇಔಟ್‌ನ 4ನೇ ಬ್ಲಾಕ್‌ನಲ್ಲಿ ಒಂದೇ ರಸ್ತೆಯಲ್ಲಿ ಐದಾರು ಮರಗಳು ನೆಲಕ್ಕುರುಳಿವೆ. ಪರಿಣಾಮ ಐದಕ್ಕೂ ಹೆಚ್ಚು ವಾಹನಗಳು ಹಾನಿಗೊಳಗಾಗಿವೆ. ಅಂಗಡಿಗಳ ಮುಂಭಾಗದ ಶೆಡ್‌ಗಳು ಹಾಗೂ ಮನೆಗಳ ಮೇಲೂ ಮರಗಳು ಬಿದ್ದಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸ್ಥಳಕ್ಕೆ ದೌಡಾಯಿಸಿರುವ ಬಿಬಿಎಂಪಿ ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಹಾಲಕ್ಷ್ಮಿ ಲೇಔಟ್‌ನ ಪೈಪ್‌ಲೈನ್ ರಸ್ತೆಯಲ್ಲೂ ಭಾರೀ ಗಾತ್ರದ ಮರವೊಂದು ಕಾರಿನ ಮೇಲೆ ಬಿದ್ದು ಕಾರು ಜಖಂಗೊಂಡಿದೆ. ಅಲ್ಲದೆ ವರದರಾಜಸ್ವಾಮಿ ದೇವಸ್ಥಾನದ ಆವರಣದಲ್ಲಿದ್ದ ಮರ ದೇವಾಲಯದ ಮೇಲ್ಚಾವಣಿ ಮೇಲೆ ಬಿದ್ದಿದೆ.

ಇನ್ನೂ ಪುಲಿಕೇಶಿನಗರ ಮುಖ್ಯರಸ್ತೆ, ವಿಜಯನಗರ ಹಾಗೂ ಮಲ್ಲೇಶ್ವರದ 7ನೇ ಅಡ್ಡರಸ್ತೆಯಲ್ಲೂ ಮರಗಳು ಧರೆಗುರುಳಿವೆ. ವಿಜಯನಗರದಲ್ಲಿ ಮರದ ಕೆಳಗೆ ನಿಲ್ಲಿಸಿದ್ದ ಬೈಕ್ ಜಖಂಗೊಂಡಿದ್ದು, ಮಲ್ಲೇಶ್ವರದಲ್ಲಿ ವಿದ್ಯುತ್ ಕಂಬಗಳಿಗೂ ಹಾನಿಯಾಗಿದೆ.

ನಗರದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಕಾರವಾರಕ್ಕೆ 100 ಕೋಟಿ ರೂ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಸಂಪುಟ ಗ್ರೀನ್ ಸಿಗ್ನಲ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನಗಳೊಂದಿಗೆ ಮುಕ್ತಾಯಗೊಂಡಿದೆ. ಆರೋಗ್ಯ, ಶಿಕ್ಷಣ, ನೀರಾವರಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಉತ್ತರ ಕನ್ನಡ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿಯೂ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಸರ್ಕಾರಿ ಶಾಲೆಗಳಲ್ಲಿ ಓದಿ 10ನೇ ತರಗತಿಯಲ್ಲಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ 500 ವಿದ್ಯಾರ್ಥಿಗಳಿಗೆ ಉಚಿತ ವಸತಿ ಸಹಿತ ಪಿಯುಸಿ ಶಿಕ್ಷಣ ಹಾಗೂ NEET, JEE, CET ಪರೀಕ್ಷಾ ಪೂರ್ವ ತರಬೇತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಗೆ 15 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ.

ಇನ್ನೊಂದೆಡೆ, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆಯಡಿ 53 ಸರ್ಕಾರಿ ಪದವಿ ಕಾಲೇಜುಗಳು, 14 ಪಾಲಿಟೆಕ್ನಿಕ್ ಕಾಲೇಜುಗಳು ಹಾಗೂ ಐದು ಉತ್ಕೃಷ್ಟತಾ ಕೇಂದ್ರಗಳಿಗೆ ಒಟ್ಟು 802 ಕೋಟಿ ರೂಪಾಯಿ ಮೌಲ್ಯದ ವಸ್ತುಗಳ ಖರೀದಿಗೆ ಅನುಮೋದನೆ ದೊರೆತಿದೆ.

ಆರೋಗ್ಯ ಕ್ಷೇತ್ರದಲ್ಲಿ ನಗರ ಆರೋಗ್ಯ ಕೇಂದ್ರಗಳು, ನಮ್ಮ ಕ್ಲಿನಿಕ್‌ಗಳು ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಗೆ ಅಗತ್ಯ ಉಪಕರಣ ಮತ್ತು ಡಿಜಿಟಲೀಕರಣ ಕಾಮಗಾರಿಗಳಿಗೆ ಕೋಟ್ಯಂತರ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ಹಾಗೂ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ತಲಾ 50 ಹಾಸಿಗೆಗಳ ಎಂಸಿಎಚ್ ಆಸ್ಪತ್ರೆ ನಿರ್ಮಾಣಕ್ಕೂ ಸಂಪುಟ ಅನುಮೋದನೆ ನೀಡಿದೆ.

ನೀರಾವರಿ ಹಾಗೂ ಅಭಿವೃದ್ಧಿ ಯೋಜನೆಗಳಿಗೂ ಒಪ್ಪಿಗೆ ದೊರೆತಿದ್ದು, ರಾಯಚೂರು ಜಿಲ್ಲೆಯ ಮಟಮಾರಿ ವೀರಭದ್ರೇಶ್ವರ ಏತ ನೀರಾವರಿ ಯೋಜನೆಗೆ 182.70 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ.

ಮಂಡ್ಯ ಜಿಲ್ಲೆಯ ದಾಸನಕೆರೆ ಅಭಿವೃದ್ಧಿ ಕಾಮಗಾರಿಗಳು, ಮೈಸೂರು ಜಿಲ್ಲೆಯ ಕಬಿನಿ ನದಿಗೆ ವಿಯರ್ ನಿರ್ಮಾಣ, ಜೋಯಿಡಾ ತಾಲೂಕು ಪ್ರಜಾಸೌಧ ಕಟ್ಟಡ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.

ಇದಲ್ಲದೆ, ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಕ್ರಿಮಿನಲ್ ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆಯಲು ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ.

ಬೆಂಗಳೂರು ಕೇಂದ್ರ ಕಾರಾಗೃಹದ ಆವರಣದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ವತಿಯಿಂದ ಪೆಟ್ರೋಲ್ ಬಂಕ್ ಮತ್ತು ಮಾರಾಟ ಮಳಿಗೆ ಸ್ಥಾಪಿಸಲು ಕೂಡ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕರ್ತವ್ಯದಲ್ಲಿದ್ದ ಬ್ರಿಮ್ಸ್ ವೈದ್ಯನ ಮೇಲೆ ಹಲ್ಲೆ

0

ಬೀದರ್: ತಡರಾತ್ರಿ ಕರ್ತವ್ಯದಲ್ಲಿದ್ದ ಬ್ರಿಮ್ಸ್ ಆಸ್ಪತ್ರೆಯ ವೈದ್ಯರ ಮೇಲೆ ರೋಗಿಯ ಸಂಬಂಧಿಕರು ಹಲ್ಲೆ ನಡೆಸಿದ ಘಟನೆ ಬೀದರ್ ನಗರದಲ್ಲಿ ಆತಂಕಕ್ಕೆ ಕಾರಣವಾಗಿದೆ. ಆಸ್ಪತ್ರೆಯ ಕ್ಯಾಜುವಾಲಿಟಿ ವಾರ್ಡ್‌ನಲ್ಲೇ ನಡೆದ ಈ ಘಟನೆ ವೈದ್ಯಕೀಯ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಮಾಹಿತಿಯ ಪ್ರಕಾರ, ರಾತ್ರಿ ಸುಮಾರು ೧ ಗಂಟೆ ವೇಳೆಗೆ ಇನ್ನೋವಾ ಕಾರಿನಲ್ಲಿ ಬಂದಿದ್ದ ಕೆಲವರು ಕುಡಿದ ಅಮಲಿನಲ್ಲಿ ಕ್ಯಾಜುವಾಲಿಟಿ ವಾರ್ಡ್‌ಗೆ ನುಗ್ಗಿ ಗಲಾಟೆ ನಡೆಸಿದ್ದಾರೆ. ಬಳಿಕ ಕರ್ತವ್ಯದಲ್ಲಿದ್ದ ವೈದ್ಯ ಡಾ. ತುಕರಾಮ ಮಚ್ಚಂದ್ರ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಹಲ್ಲೆಯಿಂದ ಡಾ. ತುಕರಾಮ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯೊಳಗೆ ಭಯಭೀತ ವಾತಾವರಣ ನಿರ್ಮಾಣವಾಗಿದ್ದು, ಸಿಬ್ಬಂದಿ ಕೆಲಕಾಲ ಆತಂಕಗೊಂಡಿದ್ದರು.

ಈ ಸಂಬಂಧ ಆದಿತ್ಯ, ವಿನೋದ ಚಾಂಚೋಳ, ಗೋವಿಂದ ಬೆನಕನಳ್ಳಿ, ಅನಿಲ ಬೆನಕನಳ್ಳಿ, ಮಹಾದೇವ ಬೆನಕನಳ್ಳಿ, ಬಾಲಾಜಿ ತಾಜಲಾಪೂರ, ಪವನ ಚಾಂಬೋಳ ಸೇರಿದಂತೆ ಇತರರ ವಿರುದ್ಧ ದೂರು ದಾಖಲಾಗಿದೆ.

ಘಟನೆ ಕುರಿತು ಬೀದರ್ ನಗರದ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರಿಗರೇ ಎಚ್ಚರ! ಮುಂದಿನ ಮೂರು ದಿನ ನಗರದಲ್ಲಿ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಇಂದೂ ಮಳೆಯ ಅಬ್ಬರ ಮುಂದುವರಿಯಲಿದ್ದು, ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಹ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲೂ ಗಾಳಿಯ ವೇಗ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಒಣಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದ ಕರ್ನಾಟಕ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಮೇ 25ರವರೆಗೆ ಭಾರೀ ಮಳೆಯ ಎಚ್ಚರಿಕೆ

ಮೇ 22ರಿಂದ ಮೇ 25ರವರೆಗೆ ರಾಜ್ಯದ ಒಳನಾಡು ಭಾಗಗಳಲ್ಲಿ ಗುಡುಗು-ಸಿಡಿಲಿನ ಅಬ್ಬರ ಹೆಚ್ಚಾಗಲಿದ್ದು, ಗಂಟೆಗೆ 50-60 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಮೇ 21ರಿಂದ ಮೇ 25ರವರೆಗೆ ಮಿಂಚು ಹಾಗೂ ಸಿಡಿಲಿನ ಮುನ್ನೆಚ್ಚರಿಕೆ ನೀಡಲಾಗಿದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರಲು ಸೂಚಿಸಲಾಗಿದೆ.

ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸೂಚನೆ

ತೀವ್ರ ಮಳೆ ಮತ್ತು ಗಾಳಿಯಿಂದ ತಗ್ಗು ಪ್ರದೇಶಗಳಲ್ಲಿ ಜಲಾವೃತ, ಸಂಚಾರ ದಟ್ಟಣೆ ಹಾಗೂ ವಿದ್ಯುತ್ ವ್ಯತ್ಯಯ ಸಂಭವಿಸುವ ಸಾಧ್ಯತೆ ಇದೆ. ಬಲವಾದ ಗಾಳಿಗೆ ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳುವ ಅಪಾಯವೂ ಇದೆ ಎಂದು ಇಲಾಖೆ ತಿಳಿಸಿದೆ.

ಸಾರ್ವಜನಿಕರು ಮಳೆ-ಗಾಳಿಯ ವೇಳೆ ಅನಗತ್ಯವಾಗಿ ಹೊರಗೆ ಸಂಚರಿಸದಂತೆ, ಮರಗಳ ಕೆಳಗೆ ಆಶ್ರಯ ಪಡೆಯದಂತೆ ಹಾಗೂ ಸುರಕ್ಷಿತ ಸ್ಥಳಗಳಲ್ಲಿ ಇರಲು ಸೂಚಿಸಲಾಗಿದೆ. ಜೊತೆಗೆ ರೈತರು ತೆರೆದ ಪ್ರದೇಶಗಳಲ್ಲಿ ಸಂಗ್ರಹಿಸಿರುವ ಬೆಳೆಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿಕೊಳ್ಳುವಂತೆ ಜಾಗೃತಿ ಮೂಡಿಸಲಾಗಿದೆ.

‘ಮ್ಯಾಂಗೋ ಪಚ್ಚ’ಗೆ ಯಾಕಿಲ್ಲ ಹೈಪ್? ಸುದೀಪ್ ಬೆಂಬಲ ಇದ್ದರೂ ಸೋಶಿಯಲ್ ಮೀಡಿಯಾದಲ್ಲಿ ಶುರುವಾಯ್ತು ಚರ್ಚೆ!

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸದ್ಯ ದೊಡ್ಡ ಮಟ್ಟದ ನಿರೀಕ್ಷೆ ಮೂಡಿಸಿರುವ ಸಿನಿಮಾಗಳಲ್ಲಿ ‘ಮ್ಯಾಂಗೋ ಪಚ್ಚ’ ಕೂಡ ಒಂದು. ಕಿಚ್ಚ ಸುದೀಪ್ ಕುಟುಂಬದ ಹಿನ್ನೆಲೆಯೊಂದಿಗೆ ಬರುತ್ತಿರುವ ಈ ಸಿನಿಮಾ ಜೂನ್ 5ರಂದು ಬಿಡುಗಡೆಯಾಗಲಿದ್ದು, ಚಿತ್ರತಂಡ ಈಗ ಪ್ರಚಾರ ಚಟುವಟಿಕೆಗಳನ್ನು ವೇಗಗೊಳಿಸಿದೆ.

ಸಂಚಿತ್ ಅಭಿನಯದ ಮೊದಲ ಸಿನಿಮಾವಾದ ‘ಮ್ಯಾಂಗೋ ಪಚ್ಚ’ ಮೈಸೂರು ಹಿನ್ನೆಲೆಯ ಕಥೆಯನ್ನು ಹೊಂದಿದ್ದು, 25 ವರ್ಷ ಹಿಂದಿನ ಕಾಲಘಟ್ಟವನ್ನು ತೆರೆಗೆ ತರಲು ಚಿತ್ರತಂಡ ವಿಶೇಷ ಕಾಳಜಿ ವಹಿಸಿದೆ. ರೆಟ್ರೋ ಲುಕ್, ಹಳೆಯ ಮೈಸೂರು ವಾತಾವರಣ ಮತ್ತು ಯುವಕರ ಭಾವನಾತ್ಮಕ ಕಥಾಹಂದರ ಚಿತ್ರದ ಪ್ರಮುಖ ಆಕರ್ಷಣೆ ಎನ್ನಲಾಗುತ್ತಿದೆ.

ಆದರೆ ಸಿನಿಮಾ ಬಿಡುಗಡೆಯ ದಿನಾಂಕ ಸಮೀಪಿಸುತ್ತಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಬಝ್ ಸೃಷ್ಟಿಯಾಗಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ. ವಿಶೇಷವಾಗಿ ಎರಡು ದೊಡ್ಡ ನಿರ್ಮಾಣ ಸಂಸ್ಥೆಗಳ ಬ್ಯಾನರ್ ಅಡಿಯಲ್ಲಿ ಸಿನಿಮಾ ಮೂಡಿಬಂದಿದ್ದರೂ, ಪ್ರಚಾರ ಕಡಿಮೆ ಎನ್ನುವ ಚರ್ಚೆ ಸಿನಿ ವಲಯದಲ್ಲೇ ಶುರುವಾಗಿದೆ.

ಈ ಬಗ್ಗೆ ನಿರ್ಮಾಪಕ ಕಾರ್ತಿಕ್ ಗೌಡ ಸ್ಪಷ್ಟನೆ ನೀಡಿದ್ದು, “ನಾವು ಹಂತ ಹಂತವಾಗಿ ಪ್ರಚಾರ ಮಾಡುತ್ತಿದ್ದೇವೆ. ಇತ್ತೀಚೆಗೆ ಟೀಸರ್ ಬಿಡುಗಡೆ ಮಾಡಿದ್ದೇವೆ. ಶೀಘ್ರದಲ್ಲೇ ಟ್ರೇಲರ್ ಬರುತ್ತದೆ. ಸಂಚಿತ್ ಸೇರಿದಂತೆ ಚಿತ್ರತಂಡ ಸಂದರ್ಶನಗಳು ಹಾಗೂ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದೆ” ಎಂದು ತಿಳಿಸಿದ್ದಾರೆ.

ಕಿಚ್ಚ ಸುದೀಪ್ ಧ್ವನಿಯಲ್ಲಿ ಬಂದಿರುವ ಚಿತ್ರದ ಪರಿಚಯ ಟೀಸರ್ ಈಗಾಗಲೇ ಸಿನಿಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿದ್ದು, “ಇವ್ನೇ ಪಚ್ಚ.. ಇದು ಇವನ ಕಥೆ” ಎನ್ನುವ ಡೈಲಾಗ್ ವೈರಲ್ ಆಗಿದೆ.

ವಿವೇಕ್ ನಿರ್ದೇಶಿಸಿರುವ ಈ ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಿದ್ದು, ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದಾರೆ. ಮಯೂರ್ ಪಟೇಲ್, ಉಗ್ರಂ ಮಂಜು, ಪ್ರಶಾಂತ್ ಹಿರೇಮಠ್ ಹಾಗೂ ಹಂಸ ನಾರಾಯಣಸ್ವಾಮಿ ತಾರಾಗಣದಲ್ಲಿ ಇದ್ದಾರೆ.

ಡಾಲಿ ಧನಂಜಯ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಸಹ ಹರಿದಾಡುತ್ತಿದೆ. ಈಗಾಗಲೇ ಬಿಡುಗಡೆಯಾದ ಹಾಡುಗಳು ಹಿಟ್ ಆಗಿದ್ದು, ಮುಂದಿನ ದಿನಗಳಲ್ಲಿ ಚಿತ್ರದ ಟ್ರೇಲರ್ ಸಿನಿಮಾ ಹವಾ ಹೆಚ್ಚಿಸುವ ನಿರೀಕ್ಷೆಯಿದೆ.

ದಿಲೀಪ್ ರಾಜ್ ನೆನೆದು ಕಣ್ಣೀರಾದ ನವೀನ್ ಕೃಷ್ಣ; ಗೆಳೆಯನಿಗಾಗಿ ಹಾಡಿದ ಭಾವುಕ ಗಾನ ನಮನ ವೈರಲ್

ಬೆಂಗಳೂರು: ನಟ ದಿಲೀಪ್ ರಾಜ್ ಅಗಲಿಕೆಯ ನೋವಿನಿಂದ ಕನ್ನಡ ಚಿತ್ರರಂಗ ಇನ್ನೂ ಹೊರಬಂದಿಲ್ಲ. ಅವರ ನಿಧನದ ಬಳಿಕ ಸ್ನೇಹಿತರು, ಸಹ ಕಲಾವಿದರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾವುಕ ನೆನಪುಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ನಟ ಹಾಗೂ ನಿರ್ದೇಶಕ ನವೀನ್ ಕೃಷ್ಣ ತಮ್ಮ ಆಪ್ತ ಗೆಳೆಯ ದಿಲೀಪ್ ರಾಜ್ ಅವರಿಗೆ ಹಾಡಿನ ಮೂಲಕ ಭಾವುಕ ನಮನ ಸಲ್ಲಿಸಿದ್ದಾರೆ.

ಕಾಲೇಜು ದಿನಗಳಿಂದಲೂ ದಿಲೀಪ್ ರಾಜ್ ಮತ್ತು ನವೀನ್ ಕೃಷ್ಣ ಆತ್ಮೀಯ ಸ್ನೇಹಿತರಾಗಿದ್ದರು. ಕೇವಲ ನಟನೆಯಲ್ಲ, ಜೀವನದ ಅನೇಕ ಹಂತಗಳಲ್ಲಿ ಇಬ್ಬರೂ ಜೊತೆಯಾಗಿದ್ದರು. ನಿರ್ದೇಶನದತ್ತ ಹೆಜ್ಜೆ ಇಡಲು ಕೂಡ ದಿಲೀಪ್ ರಾಜ್ ಅವರೇ ಪ್ರೇರಣೆ ಎಂದು ನವೀನ್ ಕೃಷ್ಣ ಹಲವು ಬಾರಿ ಹೇಳಿಕೊಂಡಿದ್ದರು.

ಗೆಳೆಯನ ಅಗಲಿಕೆಯಿಂದ ಮನನೊಂದಿರುವ ನವೀನ್ ಕೃಷ್ಣ, ಇದೀಗ ದಿಲೀಪ್ ರಾಜ್ ಅವರ ವ್ಯಕ್ತಿತ್ವ ಮತ್ತು ಮಾನವೀಯತೆಯನ್ನು ಹಾಡಿನ ಮೂಲಕ ಸ್ಮರಿಸಿದ್ದಾರೆ.

“ಕಲೆಯೇ ಅವನ ಉಸಿರಾಯ್ತು.. ನಗುವೇ ಅವನ ಹೆಸರಾಯ್ತು.. ಸಾಧನೆ ರೂಢಿಯಾಯ್ತು.. ಹಸಿದವರ ಅನ್ನದಾತ..” ಎಂಬ ಸಾಲುಗಳು ದಿಲೀಪ್ ರಾಜ್ ಬದುಕಿನ ನೈಜ ಚಿತ್ರಣದಂತಿವೆ.

ಹಾಡಿನ ಕೊನೆಯಲ್ಲಿ “ವಿಧಿಯೂ ಬಂದು ಕರೆದರೂ ಸಾವಿಗೂ ಕೈ ಚಾಚಿದಾತ” ಎಂಬ ಸಾಲು ಕೇಳುಗರನ್ನು ಕಣ್ಣೀರಾಗಿಸುವಂತಿದೆ.

ಈ ಹಾಡಿನ ವಿಡಿಯೋ ಹಂಚಿಕೊಂಡಿರುವ ನವೀನ್ ಕೃಷ್ಣ, “ನೀನಿಲ್ಲ ಅಂತ ನಾನು ಒಪ್ಪಲ್ಲ.. ನೀನು ಎಲ್ಲಿದ್ದರೂ ಎಂದಿನಂತೆ ನಗು ನಗ್ತಾ ಇರು” ಎಂದು ಬರೆದುಕೊಂಡಿದ್ದು, ಆ ಪೋಸ್ಟ್ ಈಗ ಭಾರೀ ವೈರಲ್ ಆಗಿದೆ.

ಚಿತ್ರರಂಗದ ಅನೇಕ ಕಲಾವಿದರು ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿ ದಿಲೀಪ್ ರಾಜ್ ಅವರನ್ನು ನೆನಪಿಸಿಕೊಂಡಿದ್ದಾರೆ. ಅಭಿಮಾನಿಗಳೂ ಸಹ “ಒಬ್ಬ ನಿಜವಾದ ಸ್ನೇಹಿತ ಮಾತ್ರ ಇಷ್ಟು ಹೃದಯಸ್ಪರ್ಶಿಯಾಗಿ ಗೆಳೆಯನನ್ನು ನೆನಪಿಸಿಕೊಳ್ಳಬಹುದು” ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ದಿಲೀಪ್ ರಾಜ್ ಅವರ ಸರಳತೆ, ನಗುಮುಖ ಮತ್ತು ಮಾನವೀಯತೆ ಅವರನ್ನು ಇಂದಿಗೂ ಅಭಿಮಾನಿಗಳ ಮನಸ್ಸಿನಲ್ಲಿ ಜೀವಂತವಾಗಿರಿಸಿದೆ.

ವಿಜಯ್ ಟಿವಿಕೆ, ಪವನ್ ಜನಸೇನಾ ಕರ್ನಾಟಕದತ್ತ? ದಕ್ಷಿಣ ರಾಜಕೀಯದಲ್ಲಿ ಹೊಸ ಸಮೀಕರಣ!

ಬೆಂಗಳೂರು: ತಮಿಳು ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಕರ್ನಾಟಕ ರಾಜಕೀಯಕ್ಕೆ ಕಾಲಿಡಲಿದೆ ಎಂಬ ಚರ್ಚೆ ಜೋರಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಯಲ್ಲಿ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ 2026ರ ಆಗಸ್ಟ್ ಅಂತ್ಯದೊಳಗೆ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಬಳಿಕ, ಹಲವು ಹೊಸ ರಾಜಕೀಯ ಲೆಕ್ಕಾಚಾರಗಳು ಆರಂಭವಾಗಿವೆ. ವಿಶೇಷವಾಗಿ ತಮಿಳು ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಬೆಂಗಳೂರಿನ ಕೆಲ ವಾರ್ಡ್‌ಗಳಲ್ಲಿ ಟಿವಿಕೆ ಪಕ್ಷ ಸಂಘಟನೆ ಮಾಡುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದೆ.

ತಮಿಳುನಾಡಿನಲ್ಲಿ ವಿಜಯ್ ಪಕ್ಷ ಸಾಧಿಸಿದ ಜನಪ್ರಿಯತೆಯನ್ನು ಕರ್ನಾಟಕದಲ್ಲೂ ಬಳಸಿಕೊಳ್ಳಲು ಅಭಿಮಾನಿ ಬಳಗ ಮತ್ತು ಕೆಲ ಸಂಘಟಕರು ತೆರೆಮರೆಯಲ್ಲಿ ಚರ್ಚೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಆರಂಭಿಕ ಹಂತದಲ್ಲಿ ಸಣ್ಣ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ ನಂತರ ವಿಸ್ತರಣೆ ಮಾಡುವ ಚಿಂತನೆ ಇದೆ ಎಂದು ಹೇಳಲಾಗುತ್ತಿದೆ.

ಇದೇ ಸಮಯದಲ್ಲಿ ಆಂಧ್ರ ಪ್ರದೇಶದ ಜನಸೇನಾ ಪಕ್ಷವೂ ಕರ್ನಾಟಕದಲ್ಲಿ ತನ್ನ ಪ್ರಭಾವ ಹೆಚ್ಚಿಸಲು ಮುಂದಾಗಿದೆ. ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಗಬಾಬು ಭಾಗವಹಿಸಿದ್ದರಿಂದ, ಪವನ್ ಕಲ್ಯಾಣ್ ಪಕ್ಷದ ಚಟುವಟಿಕೆಗಳ ಮೇಲೂ ಗಮನ ಸೆಳೆಯಲಾಗಿದೆ.

ಕರ್ನಾಟಕದಲ್ಲಿ ಬಿಜೆಪಿ-ಕಾಂಗ್ರೆಸ್ ಪ್ರಾಬಲ್ಯ ಮುಂದುವರಿದಿರುವಾಗ, ಪ್ರಾದೇಶಿಕ ರಾಜಕೀಯ ಪರ್ಯಾಯದ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ. ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ಬಗ್ಗೆ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಮರುಚರ್ಚೆ ನಡೆಯುತ್ತಿದೆ.

ದಕ್ಷಿಣ ಭಾರತದ ರಾಜಕೀಯ ಪಕ್ಷಗಳು ಕರ್ನಾಟಕದಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿರುವುದು ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎನ್ನುವುದು ಕುತೂಹಲದ ವಿಷಯವಾಗಿದೆ.

‘ಪುನೀತ್ ಜೊತೆಯೇ ಆ ಕಥೆಯೂ ಹೋಯಿತು’: ಅಪ್ಪು ನೆನೆದು ಪ್ರಶಾಂತ್ ನೀಲ್ ಭಾವುಕ

ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕಾಂಬಿನೇಷನ್‌ನಲ್ಲಿ ಸಿನಿಮಾ ಬರಬೇಕಿತ್ತು ಎಂಬ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಅಪ್ಪುಗಾಗಿ ವಿಶೇಷವಾಗಿ ಸಿದ್ಧಪಡಿಸಿದ್ದ ಕಥೆಯನ್ನು ಈಗ ಯಾರಿಗೂ ಮಾಡಲು ಮನಸ್ಸಿಲ್ಲ ಎಂದು ಪ್ರಶಾಂತ್ ನೀಲ್ ಭಾವುಕರಾಗಿ ಹೇಳಿದ್ದು, ಅಭಿಮಾನಿಗಳ ಮನ ಮುಟ್ಟಿದೆ.

‘ಕೆಜಿಎಫ್’ ಸಿನಿಮಾ ಆರಂಭಕ್ಕೂ ಮುನ್ನವೇ ಪ್ರಶಾಂತ್ ನೀಲ್ ಒಂದು ಫ್ಯಾಮಿಲಿ ಡ್ರಾಮಾ ಕಥೆ ಸಿದ್ಧಪಡಿಸಿದ್ದರು. ಆ ಕಥೆಯನ್ನು ಪುನೀತ್ ರಾಜ್‌ಕುಮಾರ್ ಅವರನ್ನು ಗಮನದಲ್ಲಿಟ್ಟುಕೊಂಡೇ ಬರೆಯಲಾಗಿತ್ತು. ಹೊಂಬಾಳೆ ಫಿಲ್ಮ್ಸ್ ಎದುರು ಮೊದಲಿಗೆ ಇದೇ ಕಥೆ ಹೇಳಲಾಗಿತ್ತಾದರೂ, ನಂತರ ‘ಕೆಜಿಎಫ್’ ಕಥೆ ಕೇಳಿದ ನಿರ್ಮಾಪಕರು ಅದನ್ನೇ ಮೊದಲು ಕೈಗೆತ್ತಿಕೊಂಡಿದ್ದರು.

ಈ ಕುರಿತು ಮಾತನಾಡಿರುವ ಪ್ರಶಾಂತ್ ನೀಲ್, ‘ಆ ಕಥೆ ಸಂಪೂರ್ಣವಾಗಿ ಪುನೀತ್ ಸರ್‌ಗಾಗಿ ಮಾಡಿದ್ದೆ. ಅವರ ಅಗಲಿಕೆಯ ನಂತರ ಆ ಕಥೆಯನ್ನು ಮತ್ತಾರಿಗೂ ಮಾಡಲು ಸಾಧ್ಯವೆನಿಸಲಿಲ್ಲ. ಅವರ ಜೊತೆ ಆ ಕಥೆಯೂ ಹೋಗಿಬಿಟ್ಟಿತು’ ಎಂದು ಹೇಳಿದ್ದಾರೆ.

ಪುನೀತ್ ಜೊತೆ ಸಿನಿಮಾ ಮಾಡಲು ಆಗದೇ ಹೋದದ್ದೇ ತಮ್ಮ ವೃತ್ತಿಜೀವನದ ಅತಿ ದೊಡ್ಡ ಬೇಸರ ಎಂದು ನೀಲ್ ಹೇಳಿದ್ದಾರೆ. ಅಪ್ಪು ಅವರ ವ್ಯಕ್ತಿತ್ವ, ಸ್ಕ್ರೀನ್ ಪ್ರೆಸೆನ್ಸ್ ಮತ್ತು ಭಾವನಾತ್ಮಕ ತೂಕವನ್ನು ಮನಸ್ಸಿನಲ್ಲಿ ಇಟ್ಟುಕೊಂಡೇ ಕಥೆ ನಿರ್ಮಿಸಲಾಗಿತ್ತು ಎನ್ನಲಾಗಿದೆ.

ಪ್ರಸ್ತುತ ಪ್ರಶಾಂತ್ ನೀಲ್ ‘ಡ್ರ್ಯಾಗನ್’ ಸಿನಿಮಾದ ಕೆಲಸಗಳಲ್ಲಿ ನಿರತರಾಗಿದ್ದಾರೆ. ಜೂನಿಯರ್ ಎನ್‌ಟಿಆರ್ ನಟನೆಯ ಈ ಚಿತ್ರದ ಗ್ಲಿಂಪ್ಸ್ ಈಗಾಗಲೇ ದೊಡ್ಡ ಮಟ್ಟದಲ್ಲಿ ವೈರಲ್ ಆಗಿದೆ. ಸುಮಾರು 9 ನಿಮಿಷಗಳ ವಿಶೇಷ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ ಎಂಬ ಮಾಹಿತಿ ಹೊರಬಿದ್ದಿದೆ.

error: Content is protected !!