ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸರ್ಕಾರಿ ಬಸ್ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಎಂ.ಗೊಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ.
ಗೌರಿಬಿದನೂರು ಕೆಎಸ್ಆರ್ಟಿಸಿ ಘಟಕಕ್ಕೆ ಸೇರಿದ ಬಸ್ ನಗರದಿಂದ ಮರಿಪಡಿಗು ಗ್ರಾಮದತ್ತ ತೆರಳುತ್ತಿತ್ತು. ಎಂ.ಗೊಲ್ಲಹಳ್ಳಿ ಗ್ರಾಮದ ಸಮೀಪ ಬರುತ್ತಿದ್ದ ವೇಳೆ ಬಸ್ನಲ್ಲಿ ಏಕಾಏಕಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಬಸ್ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಸಮಯಪ್ರಜ್ಞೆ ಮೆರೆದು ತಕ್ಷಣ ಬಸ್ ಅನ್ನು ಸುರಕ್ಷಿತವಾಗಿ ನಿಲ್ಲಿಸಿದ್ದಾರೆ. ಬಳಿಕ ಬಸ್ನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಹೀಗಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದ್ದು, ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ನೋಡನೋಡುತ್ತಿದ್ದಂತೆ ಬೆಂಕಿ ಬಸ್ನ ವಿವಿಧ ಭಾಗಗಳಿಗೆ ವ್ಯಾಪಿಸಿದ್ದು, ಬಹುತೇಕ ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮಾಹಿತಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಬಸ್ಗೆ ಭಾರೀ ಪ್ರಮಾಣದ ಹಾನಿಯಾಗಿತ್ತು.
ಘಟನೆಗೆ ನಿಖರ ಕಾರಣ ಏನು ಎಂಬುದರ ಕುರಿತು ಕೆಎಸ್ಆರ್ಟಿಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ತಾಂತ್ರಿಕ ಪರಿಶೀಲನೆ ಬಳಿಕ ಬೆಂಕಿ ಹೊತ್ತಿಕೊಳ್ಳಲು ಕಾರಣ ತಿಳಿದುಬರಬೇಕಿದೆ.
ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಸರ್ಕಾರಿ ಬಸ್ಗಳ ತಾಂತ್ರಿಕ ತಪಾಸಣೆ ಹಾಗೂ ನಿರ್ವಹಣೆಯನ್ನು ಮತ್ತಷ್ಟು ಕಟ್ಟುನಿಟ್ಟಾಗಿ ನಡೆಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

