Home Blog

ತಾಯಿಯ ಎದೆಹಾಲು ಸಿಗದ ಶಿಶುಗಳಿಗೆ ವರದಾನ; ಮಂಡ್ಯ ಮಿಮ್ಸ್‌ನಲ್ಲಿ ಮಿಲ್ಕ್ ಬ್ಯಾಂಕ್‌ ಸ್ಥಾಪನೆ!

0

ಮಂಡ್ಯ: ಹುಟ್ಟುತ್ತಲೇ ತಾಯಿಯ ಎದೆಹಾಲಿನಿಂದ ವಂಚಿತವಾಗುವ ನವಜಾತ ಶಿಶುಗಳಿಗೆ ಆಸರೆಯಾಗುವ ನಿಟ್ಟಿನಲ್ಲಿ ಮಂಡ್ಯ ಮಿಮ್ಸ್‌ ಆಸ್ಪತ್ರೆಯಲ್ಲಿ ಎದೆಹಾಲು ಶೇಖರಣಾ ಘಟಕ ಸ್ಥಾಪಿಸಲಾಗಿದೆ.

ಜಾಗೃತಿ ಕಾರ್ಯಕ್ರಮಗಳಿಗಾಗಿ ಪೋಸ್ಟರ್‌ಗಳಿಗೆ ಖರ್ಚಾಗುತ್ತಿದ್ದ ಹಣವನ್ನು ನವಜಾತ ಶಿಶುಗಳ ಆರೋಗ್ಯಕ್ಕಾಗಿ ಬಳಸಿರುವ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಇಡೀ ರಾಜ್ಯಕ್ಕೆ ಮಾದರಿಯಾಗುವ ರೀತಿಯಲ್ಲಿ ಮಿಮ್ಸ್‌ನಲ್ಲಿ ಎದೆಹಾಲು ಶೇಖರಣಾ ಘಟಕ ಸ್ಥಾಪಿಸಲು ಮಂಡ್ಯ ಜಿಲ್ಲಾ ಪಂಚಾಯತ್‌ ಸಿಇಒ ಕೆ.ಆರ್. ನಂದಿನಿ ಮುಂದಾಗಿದ್ದಾರೆ. ವೈದ್ಯರ ಸಹಕಾರದೊಂದಿಗೆ ಆಸ್ಪತ್ರೆಯಲ್ಲಿ ನಿರುಪಯುಕ್ತವಾಗಿ ಬಿದ್ದಿದ್ದ ಕೊಠಡಿಯನ್ನೇ ಸ್ವಚ್ಛಗೊಳಿಸಿ, ಸುಮಾರು ₹24.50 ಲಕ್ಷ ವೆಚ್ಚದಲ್ಲಿ ಮಿಲ್ಕ್ ಬ್ಯಾಂಕ್‌ ಸಿದ್ಧಪಡಿಸಲಾಗಿದೆ.

ತಿಂಗಳಿಗೆ 250ಕ್ಕೂ ಹೆಚ್ಚು ನವಜಾತ ಶಿಶುಗಳ ದಾಖಲು:

ಮಂಡ್ಯ ಮಿಮ್ಸ್‌ ಆಸ್ಪತ್ರೆಗೆ ಪ್ರತಿ ತಿಂಗಳು ಸುಮಾರು 250ಕ್ಕೂ ಹೆಚ್ಚು ನವಜಾತ ಶಿಶುಗಳು ದಾಖಲಾಗುತ್ತವೆ. ಈ ಪೈಕಿ ಕನಿಷ್ಠ 50ರಿಂದ 60 ಶಿಶುಗಳಿಗೆ ತಾಯಿಯ ಎದೆಹಾಲು ಲಭ್ಯವಾಗದ ಪರಿಸ್ಥಿತಿ ಎದುರಾಗುತ್ತಿತ್ತು.

ಈ ಸಮಸ್ಯೆಯನ್ನು ಮನಗಂಡು ಮಿಲ್ಕ್ ಬ್ಯಾಂಕ್‌ ಸ್ಥಾಪಿಸಲಾಗಿದ್ದು, ತಾಯಿಯ ಎದೆಹಾಲು ಸಿಗದ ಶಿಶುಗಳಿಗೆ ದಾನಿ ತಾಯಂದಿರಿಂದ ಸಂಗ್ರಹಿಸಿದ ಎದೆಹಾಲು ಒದಗಿಸುವ ವ್ಯವಸ್ಥೆ ಮಾಡಲು ಮುಂದಾಗಿದೆ.

ಈ ಸತ್ಕಾರ್ಯಕ್ಕೆ ಜಿಲ್ಲೆಯ ಶಾಸಕರು ಕೂಡ ₹10.50 ಲಕ್ಷ ಅನುದಾನ ನೀಡಿ ಬೆಂಬಲ ನೀಡಿದ್ದಾರೆ. ಇದರೊಂದಿಗೆ ಮಂಡ್ಯದಲ್ಲಿ ಸ್ಥಾಪನೆಯಾಗುತ್ತಿರುವ ಈ ಮಿಲ್ಕ್ ಬ್ಯಾಂಕ್‌ ರಾಜ್ಯದಲ್ಲೇ ಸ್ಥಾಪನೆಯಾಗುತ್ತಿರುವ 5ನೇ ಎದೆಹಾಲು ಶೇಖರಣಾ ಘಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಮಿಮ್ಸ್‌ ಆಸ್ಪತ್ರೆಯಲ್ಲಿ ಮಿಲ್ಕ್ ಬ್ಯಾಂಕ್‌ಗಾಗಿ ಕೊಠಡಿ ಸಿದ್ಧವಾಗಿದ್ದು, ಸಿಬ್ಬಂದಿಯನ್ನೂ ನಿಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ ಎದೆಹಾಲನ್ನು ಸುರಕ್ಷಿತವಾಗಿ ಸಂಗ್ರಹಿಸಿ ಸಂರಕ್ಷಿಸಲು ಅಗತ್ಯವಿರುವ ಮೂರು ಪ್ರಮುಖ ಯಂತ್ರಗಳು ಇನ್ನೂ ಅಳವಡಿಕೆಯಾಗಬೇಕಿದೆ.

ಪಾಶ್ಚರೈಸರ್, ವರ್ಟಿಕಲ್ ಲ್ಯಾಮಿನಾರ್ ಮತ್ತು ಡೀಪ್ ಫ್ರೀಜರ್ ಯಂತ್ರಗಳನ್ನು ಅಳವಡಿಸಲು ಸುಮಾರು ₹36 ಲಕ್ಷ ಅನುದಾನದ ಅಗತ್ಯವಿದೆ.

ಈ ಯಂತ್ರಗಳು ಅಳವಡಿಕೆಯಾದ ಬಳಿಕ ದಾನಿ ತಾಯಂದಿರಿಂದ ಸಂಗ್ರಹಿಸುವ ಎದೆಹಾಲನ್ನು ಸುರಕ್ಷಿತವಾಗಿ ಸಂರಕ್ಷಿಸಿ, ಅಗತ್ಯವಿರುವ ನವಜಾತ ಶಿಶುಗಳಿಗೆ ನೀಡಲು ಸಾಧ್ಯವಾಗಲಿದೆ. ಸಂಗ್ರಹಿಸಿದ ಎದೆಹಾಲನ್ನು ಸುಮಾರು 6 ತಿಂಗಳವರೆಗೆ ಸಂರಕ್ಷಿಸಿಡಲು ಸಾಧ್ಯವಾಗಲಿದೆ ಎಂದು ತಿಳಿಸಲಾಗಿದೆ.

ತಾಯಿಯ ಎದೆಹಾಲಿನಿಂದ ವಂಚಿತವಾಗುವ ನವಜಾತ ಶಿಶುಗಳಿಗೆ ಪೌಷ್ಟಿಕ ಆಹಾರ ಹಾಗೂ ಅಗತ್ಯ ಪೋಷಕಾಂಶಗಳನ್ನು ಒದಗಿಸುವಲ್ಲಿ ಈ ಮಿಲ್ಕ್ ಬ್ಯಾಂಕ್‌ ಮಹತ್ವದ ಪಾತ್ರ ವಹಿಸುವ ನಿರೀಕ್ಷೆಯಿದೆ.

ಮಹಿಳೆಯರೇ ಎಚ್ಚರ! ಮೆನೋಪಾಸ್‌ಗೂ ಮುನ್ನವೇ ಈ ಲಕ್ಷಣಗಳು ಕಾಣಿಸಿಕೊಳ್ಳಬಹುದು; ನಿರ್ಲಕ್ಷ್ಯ ಬೇಡ

0

ಮಹಿಳೆಯರ ಜೀವನದಲ್ಲಿ ಮೆನೋಪಾಸ್‌ ಒಂದು ಸಹಜ ಹಾರ್ಮೋನಲ್ ಬದಲಾವಣೆಯ ಹಂತ. ಆದರೆ ಮೆನೋಪಾಸ್‌ ಏಕಾಏಕಿ ಆರಂಭವಾಗುವುದಿಲ್ಲ.

ಅದಕ್ಕೂ ಹಲವು ವರ್ಷಗಳ ಮುನ್ನವೇ ಮಹಿಳೆಯರ ದೇಹದಲ್ಲಿ ಹಾರ್ಮೋನ್‌ಗಳ ಏರಿಳಿತ ಆರಂಭವಾಗಬಹುದು. ಈ ಪರಿವರ್ತನಾ ಹಂತವನ್ನೇ ಪೆರಿಮೆನೋಪಾಸ್‌ ಎಂದು ಕರೆಯಲಾಗುತ್ತದೆ.

ಈ ಅವಧಿಯಲ್ಲಿ ಪಿರಿಯಡ್ಸ್‌ ಅನಿಯಮಿತವಾಗುವುದು, ಹಠಾತ್ ದೇಹದಲ್ಲಿ ಬಿಸಿ ಹೆಚ್ಚಾಗುವುದು, ರಾತ್ರಿ ವೇಳೆ ಅತಿಯಾಗಿ ಬೆವರುವುದು, ನಿದ್ರೆಯ ಸಮಸ್ಯೆ, ಮೂಡ್ ಬದಲಾವಣೆ ಸೇರಿದಂತೆ ಹಲವು ಲಕ್ಷಣಗಳು ಕಾಣಿಸಿಕೊಳ್ಳಬಹುದು. ಬಹುತೇಕ ಮಹಿಳೆಯರು ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ಭಾವಿಸಿ ನಿರ್ಲಕ್ಷ್ಯ ಮಾಡುತ್ತಾರೆ.

ಆದರೆ ಪೆರಿಮೆನೋಪಾಸ್‌ ಅವಧಿಯಲ್ಲಿ ದೇಹದಲ್ಲಿ ಹಲವು ಹಾರ್ಮೋನಲ್ ಬದಲಾವಣೆಗಳು ಸಂಭವಿಸುವುದರಿಂದ ಈ ಬಗ್ಗೆ ಮಹಿಳೆಯರು ಅರಿವು ಹೊಂದಿರುವುದು ಅಗತ್ಯ ಎಂದು ಯಥಾರ್ಥ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ರುಚಿ ಭಂಡಾರಿ ಸಲಹೆ ನೀಡಿದ್ದಾರೆ.

ಪೆರಿಮೆನೋಪಾಸ್‌ ಎಂದರೇನು?

ಮೆನೋಪಾಸ್‌ಗೂ ಮುನ್ನ ಮಹಿಳೆಯ ದೇಹದಲ್ಲಿ ಈಸ್ಟ್ರೋಜನ್ ಮತ್ತು ಪ್ರೊಜೆಸ್ಟೆರೋನ್ ಹಾರ್ಮೋನ್‌ಗಳ ಮಟ್ಟದಲ್ಲಿ ಏರಿಳಿತ ಆರಂಭವಾಗುತ್ತದೆ. ಈ ಹಂತವೇ ಪೆರಿಮೆನೋಪಾಸ್‌.

ಸತತ 12 ತಿಂಗಳ ಕಾಲ ಪಿರಿಯಡ್ಸ್‌ ಆಗದೇ ಇರುವ ಸ್ಥಿತಿಯನ್ನು ಮೆನೋಪಾಸ್‌ ಎಂದು ಕರೆಯಲಾಗುತ್ತದೆ. ಅದಕ್ಕೂ ಮುನ್ನ ನಡೆಯುವ ಪರಿವರ್ತನಾ ಅವಧಿಯೇ ಪೆರಿಮೆನೋಪಾಸ್‌.

ಪಿರಿಯಡ್ಸ್‌ನಲ್ಲಿ ಬದಲಾವಣೆ”

ಪೆರಿಮೆನೋಪಾಸ್‌ನ ಪ್ರಮುಖ ಲಕ್ಷಣಗಳಲ್ಲಿ ಪಿರಿಯಡ್ಸ್‌ನಲ್ಲಿ ಆಗುವ ಬದಲಾವಣೆಯೂ ಒಂದು.

  • ಪಿರಿಯಡ್ಸ್‌ ಬೇಗ ಅಥವಾ ತಡವಾಗಿ ಬರಬಹುದು.
  • ಎರಡು ಪಿರಿಯಡ್ಸ್‌ಗಳ ನಡುವಿನ ಅಂತರ ಹೆಚ್ಚಾಗಬಹುದು.
  • ಕೆಲವು ತಿಂಗಳು ಪಿರಿಯಡ್ಸ್‌ ಆಗದೇ ಇರಬಹುದು.
  • ರಕ್ತಸ್ರಾವದ ಪ್ರಮಾಣ ಕಡಿಮೆಯಾಗಬಹುದು ಅಥವಾ ಹೆಚ್ಚಾಗಬಹುದು.

ಆದರೆ ಪಿರಿಯಡ್ಸ್‌ ಅನಿಯಮಿತವಾಗಿರುವುದೆಲ್ಲವೂ ಪೆರಿಮೆನೋಪಾಸ್‌ನ ಲಕ್ಷಣ ಎಂದೇನಲ್ಲ. ಬೇರೆ ಆರೋಗ್ಯ ಸಮಸ್ಯೆಗಳೂ ಇದಕ್ಕೆ ಕಾರಣವಾಗಿರಬಹುದು.

ಹಠಾತ್ ದೇಹದಲ್ಲಿ ಬಿಸಿ ಹೆಚ್ಚಾಗುವುದು:

ಯಾವುದೇ ಕಾರಣವಿಲ್ಲದೆ ದೇಹದಲ್ಲಿ ಏಕಾಏಕಿ ಬಿಸಿ ಹೆಚ್ಚಾದಂತೆ ಅನಿಸುವುದನ್ನು ಹಾಟ್ ಫ್ಲ್ಯಾಶ್ ಎಂದು ಕರೆಯಲಾಗುತ್ತದೆ. ಈ ಸಂದರ್ಭದಲ್ಲಿ ಮುಖ, ಕುತ್ತಿಗೆ ಹಾಗೂ ಎದೆಯ ಭಾಗದಲ್ಲಿ ಬಿಸಿ ಹೆಚ್ಚಾಗಿ ನಂತರ ಬೆವರು ಕಾಣಿಸಿಕೊಳ್ಳಬಹುದು.

ರಾತ್ರಿ ವೇಳೆ ಅತಿಯಾಗಿ ಬೆವರುವುದು:

ನಿದ್ರೆಯಲ್ಲಿರುವಾಗ ಅತಿಯಾಗಿ ಬೆವರುವುದು ಕೂಡ ಪೆರಿಮೆನೋಪಾಸ್‌ನ ಸಾಮಾನ್ಯ ಲಕ್ಷಣಗಳಲ್ಲಿ ಒಂದಾಗಿದೆ. ಇದರಿಂದ ಪದೇಪದೇ ನಿದ್ರೆ ಕೆಡುವುದು, ಬೆಳಗ್ಗೆ ಎದ್ದಾಗ ದಣಿವಿನ ಅನುಭವವಾಗುವುದು ಸೇರಿದಂತೆ ಹಲವು ಸಮಸ್ಯೆಗಳು ಉಂಟಾಗಬಹುದು.

ನಿದ್ರೆಯ ಸಮಸ್ಯೆ:

ಪೆರಿಮೆನೋಪಾಸ್‌ ಅವಧಿಯಲ್ಲಿ ಕೆಲ ಮಹಿಳೆಯರಿಗೆ ನಿದ್ರೆ ಬರಲು ಕಷ್ಟವಾಗಬಹುದು. ಮಧ್ಯರಾತ್ರಿ ಪದೇಪದೇ ಎಚ್ಚರವಾಗುವುದು ಅಥವಾ ಬೆಳಗ್ಗೆ ಬೇಗ ಎಚ್ಚರವಾಗುವುದು ಕೂಡ ಸಂಭವಿಸಬಹುದು.

ಹಾಟ್ ಫ್ಲ್ಯಾಶ್‌, ರಾತ್ರಿ ಬೆವರು, ಮೂಡ್ ಬದಲಾವಣೆ ಮತ್ತು ಆತಂಕದಂತಹ ಸಮಸ್ಯೆಗಳು ನಿದ್ರೆಯ ಗುಣಮಟ್ಟವನ್ನು ಮತ್ತಷ್ಟು ಕಡಿಮೆ ಮಾಡಬಹುದು.

ಮೂಡ್ ಬದಲಾವಣೆ ಮತ್ತು ಕಿರಿಕಿರಿ:

ಹಾರ್ಮೋನಲ್ ಬದಲಾವಣೆಗಳಿಂದ ಕೆಲ ಮಹಿಳೆಯರಲ್ಲಿ ಕಿರಿಕಿರಿ, ಆತಂಕ, ಮೂಡ್ ಸ್ವಿಂಗ್‌ ಹಾಗೂ ಭಾವನಾತ್ಮಕ ಬದಲಾವಣೆಗಳು ಕಾಣಿಸಿಕೊಳ್ಳಬಹುದು.

ಸಾಕಷ್ಟು ನಿದ್ರೆ ಮಾಡಿದರೂ ದೇಹದಲ್ಲಿ ಶಕ್ತಿ ಇಲ್ಲದಂತೆ ಅನಿಸುವುದು ಅಥವಾ ದಿನವಿಡೀ ಆಯಾಸವಾಗಿರುವ ಅನುಭವವೂ ಕಾಣಿಸಿಕೊಳ್ಳಬಹುದು. ಹಾರ್ಮೋನಲ್ ಬದಲಾವಣೆ ಮತ್ತು ನಿದ್ರೆಯ ಕೊರತೆ ಇದಕ್ಕೆ ಕಾರಣವಾಗಬಹುದು.

ಪೆರಿಮೆನೋಪಾಸ್‌ ಅವಧಿಯಲ್ಲಿ ಕೆಲ ಮಹಿಳೆಯರಿಗೆ ಬ್ರೇನ್ ಫಾಗ್ ರೀತಿಯ ಅನುಭವವಾಗಬಹುದು. ಅಂದರೆ ಕೆಲಸದ ಮೇಲೆ ಗಮನ ಕೇಂದ್ರೀಕರಿಸಲು ಕಷ್ಟವಾಗುವುದು, ವಿಷಯಗಳನ್ನು ನೆನಪಿಸಿಕೊಳ್ಳಲು ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುವುದು ಮುಂತಾದ ಬದಲಾವಣೆಗಳು ಕಂಡುಬರಬಹುದು.

ಈಸ್ಟ್ರೋಜನ್‌ ಮಟ್ಟದಲ್ಲಿನ ಬದಲಾವಣೆಯಿಂದ ಕೆಲ ಮಹಿಳೆಯರಲ್ಲಿ ಯೋನಿ ಒಣತನ ಉಂಟಾಗಬಹುದು. ಇದರಿಂದ ಅಸಹಜತೆ ಅಥವಾ ಲೈಂಗಿಕ ಸಂಪರ್ಕದ ಸಂದರ್ಭದಲ್ಲಿ ನೋವು ಕಾಣಿಸಿಕೊಳ್ಳುವ ಸಾಧ್ಯತೆಯೂ ಇದೆ.

ಈ ರೀತಿಯ ಸಮಸ್ಯೆ ಎದುರಾದರೆ ಮುಜುಗರಪಡದೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ತೂಕದಲ್ಲೂ ಬದಲಾವಣೆಯಾಗಬಹುದು:

ಪೆರಿಮೆನೋಪಾಸ್‌ ಸಮಯದಲ್ಲಿ ಹಾರ್ಮೋನಲ್ ಬದಲಾವಣೆಗಳ ಜೊತೆಗೆ ವಯಸ್ಸು, ದೈಹಿಕ ಚಟುವಟಿಕೆ, ಆಹಾರ ಪದ್ಧತಿ ಮತ್ತು ನಿದ್ರೆಯಂತಹ ಅಂಶಗಳಿಂದ ತೂಕದಲ್ಲಿ ಬದಲಾವಣೆ ಕಾಣಿಸಿಕೊಳ್ಳಬಹುದು.

ಮಿಡ್‌ಲೈಫ್‌ ನಂತರ ಮಹಿಳೆಯರು ಕೇವಲ ಪಿರಿಯಡ್ಸ್‌ ಬದಲಾವಣೆಗಳತ್ತ ಮಾತ್ರ ಗಮನ ಹರಿಸದೆ ಮೂಳೆಗಳ ಆರೋಗ್ಯ, ರಕ್ತದೊತ್ತಡ, ತೂಕ ಮತ್ತು ಹೃದಯದ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು.

ಕ್ಯಾಲ್ಸಿಯಂ ಮತ್ತು ಪ್ರೋಟೀನ್‌ಯುಕ್ತ ಸಮತೋಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ ಹಾಗೂ ಸಾಕಷ್ಟು ನಿದ್ರೆ ಆರೋಗ್ಯಕರ ಜೀವನಶೈಲಿಯ ಪ್ರಮುಖ ಭಾಗಗಳಾಗಿವೆ.

ಮಹಿಳೆಯರು 35-40ರ ವಯಸ್ಸಿನ ನಂತರ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಮುಖ್ಯ. ವಿಶೇಷವಾಗಿ ತುಂಬಾ ಅಧಿಕ ರಕ್ತಸ್ರಾವ, ಅಸಹಜ ರಕ್ತಸ್ರಾವ, ದೀರ್ಘಕಾಲ ಪಿರಿಯಡ್ಸ್‌ ನಿಂತ ಬಳಿಕ ಮತ್ತೆ ರಕ್ತಸ್ರಾವವಾಗುವುದು ಅಥವಾ ಯಾವುದೇ ಲಕ್ಷಣಗಳು ದಿನನಿತ್ಯದ ಜೀವನಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದರೆ ವೈದ್ಯರನ್ನು ಸಂಪರ್ಕಿಸಬೇಕು.

ಸೂಚನೆ: ಈ ಮಾಹಿತಿ ಸಾಮಾನ್ಯ ಆರೋಗ್ಯ ಜಾಗೃತಿಗಾಗಿ ಮಾತ್ರ. ಪೆರಿಮೆನೋಪಾಸ್‌ ಅಥವಾ ಮೆನೋಪಾಸ್‌ಗೆ ಸಂಬಂಧಿಸಿದ ಲಕ್ಷಣಗಳು ಕಂಡುಬಂದರೆ ವೈಯಕ್ತಿಕ ಚಿಕಿತ್ಸೆ ಪಡೆಯುವ ಮೊದಲು ಅರ್ಹ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ.

ಕಾವೇರಿ ನೀರು ತಮಿಳುನಾಡಿಗೆ ಹರಿಯುತ್ತಿದೆಯಾ? KRSನಿಂದ 5,500 ಕ್ಯೂಸೆಕ್ ನೀರು ಹೊರಕ್ಕೆ

0

ಮಂಡ್ಯ: ರಾಜ್ಯದಲ್ಲಿ ನೀರಿನ ಅಭಾವದ ಆತಂಕ ಎದುರಾಗಿರುವ ನಡುವೆಯೇ ಕೆಆರ್‌ಎಸ್‌ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ.

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಿದ್ದರೂ, ಕೆಆರ್‌ಎಸ್‌ನಿಂದ ಹೊರಹೋಗುತ್ತಿರುವ ನೀರಿನ ಪ್ರಮಾಣ ಇದೀಗ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಕೆಆರ್‌ಎಸ್‌ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ಪ್ರಸ್ತುತ 3,864 ಕ್ಯೂಸೆಕ್‌ ಒಳಹರಿವು ದಾಖಲಾಗಿದೆ. ಆದರೆ ಜಲಾಶಯದಿಂದ ಬರೋಬ್ಬರಿ 8,544 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಈ ಪೈಕಿ ಸುಮಾರು 5,500 ಕ್ಯೂಸೆಕ್‌ ನೀರು ನದಿಯ ಮೂಲಕ ತಮಿಳುನಾಡಿನತ್ತ ಹರಿಯುತ್ತಿದೆ ಎನ್ನಲಾಗಿದೆ.

KRSನಲ್ಲಿ ಎಷ್ಟು ನೀರಿದೆ?

124.80 ಅಡಿ ಗರಿಷ್ಠ ಸಾಮರ್ಥ್ಯದ ಕೆಆರ್‌ಎಸ್‌ ಜಲಾಶಯದಲ್ಲಿ ಸದ್ಯ 109.32 ಅಡಿ ನೀರು ಸಂಗ್ರಹವಾಗಿದೆ. ಟಿಎಂಸಿ ಲೆಕ್ಕದಲ್ಲಿ ಸುಮಾರು 31.044 ಟಿಎಂಸಿ ನೀರು ಜಲಾಶಯದಲ್ಲಿದೆ.

ಒಂದೆಡೆ ಮಳೆಯ ಕೊರತೆಯಿಂದ ಜಲಾಶಯಕ್ಕೆ ಹರಿದುಬರುವ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಮತ್ತೊಂದೆಡೆ ಒಳಹರಿವಿಗಿಂತ ದುಪ್ಪಟ್ಟಿಗೂ ಹೆಚ್ಚು ಪ್ರಮಾಣದಲ್ಲಿ ನೀರನ್ನು ಹೊರಬಿಡುತ್ತಿರುವುದು ಕಾವೇರಿ ಕೊಳ್ಳದ ರೈತರಲ್ಲಿ ಆತಂಕ ಹೆಚ್ಚಿಸಿದೆ.

ತಮಿಳುನಾಡಿಗೆ ನೀರು ಹರಿಸುತ್ತಿಲ್ಲ ಎಂದ ಸರ್ಕಾರ:

ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿಲ್ಲ ಎಂದು ಪ್ರತಿಪಾದಿಸುತ್ತಿದೆ. ಆದರೆ ಕೆಆರ್‌ಎಸ್‌ನಿಂದ ಕಾವೇರಿ ನದಿಗೆ ಹರಿಸಲಾಗುತ್ತಿರುವ ನೀರಿನ ಒಂದು ಭಾಗ ನದಿಯ ಮೂಲಕ ತಮಿಳುನಾಡಿಗೆ ಸೇರುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಇದೇ ರೀತಿಯಲ್ಲಿ ಹೆಚ್ಚಿನ ಪ್ರಮಾಣದ ನೀರಿನ ಹೊರಹರಿವು ಮುಂದುವರಿದರೆ, ಮುಂದಿನ ದಿನಗಳಲ್ಲಿ ಕಾವೇರಿ ಕೊಳ್ಳದ ರೈತರ ಬೆಳೆಗಳಿಗೆ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೆ ಬೆಂಗಳೂರು ಸೇರಿದಂತೆ ಹಲವು ನಗರಗಳ ಕುಡಿಯುವ ನೀರಿನ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗುತ್ತಿದೆ.

ಹೀಗಾಗಿ ಕೆಆರ್‌ಎಸ್‌ ಜಲಾಶಯದ ಒಳಹರಿವು, ಹೊರಹರಿವು ಹಾಗೂ ನೀರಿನ ಬಳಕೆ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ರೈತರು ಹಾಗೂ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಅಕ್ರಮ ವಾಸ ಆರೋಪ: ಬೆಂಗಳೂರಿನಲ್ಲಿ ಬಂಧಿತರಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳು ಗಡಿಪಾರು!

0

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದ ಮೇಲೆ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದ ಒಟ್ಟು 31 ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಗಡಿಪಾರು ಮಾಡಿದ್ದಾರೆ.

ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಈ 31 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಅವರ ದಾಖಲೆಗಳು ಹಾಗೂ ಭಾರತದಲ್ಲಿ ವಾಸ್ತವ್ಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ, ಅಗತ್ಯ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ಗಡಿಪಾರು ಮಾಡಲಾಗಿದೆ.

ಪೊಲೀಸ್ ಭದ್ರತೆಯೊಂದಿಗೆ 31 ಮಂದಿಯನ್ನು ಬೆಂಗಳೂರಿನ ರೈಲ್ವೆ ಟರ್ಮಿನಲ್‌ಗೆ ಕರೆದೊಯ್ಯಲಾಯಿತು. ಸುಮಾರು 20 ಪೊಲೀಸ್ ಸಿಬ್ಬಂದಿಯ ಭದ್ರತೆಯಲ್ಲಿ ಅವರನ್ನು ರೈಲಿನ ಮೂಲಕ ಪಶ್ಚಿಮ ಬಂಗಾಳದ ಗಡಿ ಭಾಗಕ್ಕೆ ಕರೆದೊಯ್ದ ಪೊಲೀಸರು, ಅಲ್ಲಿಂದ ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಗರದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ವಿದೇಶಿ ಪ್ರಜೆಗಳ ಕುರಿತು ಪೊಲೀಸರು ನಡೆಸಿದ ಪರಿಶೀಲನೆ ಹಾಗೂ ಕಾರ್ಯಾಚರಣೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಬಂಧಿತ 31 ಮಂದಿಯ ದಾಖಲೆಗಳು, ಭಾರತದಲ್ಲಿ ವಾಸ್ತವ್ಯಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಅವರ ಹಿನ್ನೆಲೆಯನ್ನು ಪರಿಶೀಲಿಸಿದ ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಗಡಿಪಾರು ಮಾಡಲಾಗಿದೆ.

ಇನ್ನು ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ವಿದೇಶಿ ಪ್ರಜೆಗಳ ವಿರುದ್ಧ ಮುಂದಿನ ದಿನಗಳಲ್ಲಿಯೂ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆಯಿದೆ.

ವಿಜಯಪುರದಲ್ಲಿ ತಡರಾತ್ರಿ ಎಟಿಎಂಗೆ ಕನ್ನ; ಲಕ್ಷಾಂತರ ನಗದು ಸಮೇತ ಮಷಿನ್ ಹೊತ್ತೊಯ್ದ ಮುಸುಕುಧಾರಿ ಕಳ್ಳರು!

0

ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ತಡರಾತ್ರಿ ಎಟಿಎಂ ಕಳ್ಳತನ ನಡೆದಿರುವ ಘಟನೆ ನಡೆದಿದೆ.

ಗೊಳಸಂಗಿ ಗ್ರಾಮದ ಕೆನರಾ ಬ್ಯಾಂಕ್‌ಗೆ ಸೇರಿದ ಎಟಿಎಂ ಅನ್ನು ಮುಸುಕುಧಾರಿಗಳ ಗುಂಪೊಂದು ಕಳ್ಳತನ ಮಾಡಿಕೊಂಡು ಪರಾರಿಯಾಗಿದೆ. ತಡರಾತ್ರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳರು, ಎಟಿಎಂ ಮಷಿನ್‌ನ್ನೇ ಹೊತ್ತೊಯ್ದಿದ್ದಾರೆ ಎನ್ನಲಾಗಿದೆ.

ಎಟಿಎಂ ಮಷಿನ್‌ನಲ್ಲಿ ಲಕ್ಷಾಂತರ ರೂಪಾಯಿ ನಗದು ಇತ್ತು ಎಂದು ಶಂಕಿಸಲಾಗಿದೆ. ಕಳ್ಳರು ಎಟಿಎಂ ಮಷಿನ್‌ ಸಮೇತ ಪರಾರಿಯಾಗಿರುವುದರಿಂದ ನಗದು ಎಷ್ಟು ಇತ್ತು ಎಂಬುದು ಪೊಲೀಸ್‌ ತನಿಖೆ ಬಳಿಕವಷ್ಟೇ ತಿಳಿಯಬೇಕಿದೆ.

ಘಟನೆ ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಸುಳಿವು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ದಾರುಣ ಕೃತ್ಯ: ಅವಳಿ ಹೆಣ್ಣು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!

0

ಬೆಂಗಳೂರು: ಬೆಂಗಳೂರಿನ ತಲಘಟ್ಟಪುರದ ವಾಜರಹಳ್ಳಿಯಲ್ಲಿ ದಾರುಣ ಘಟನೆಯೊಂದು ನಡೆದಿದೆ.

ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ ತಾಯಿ ತನ್ನ ಅವಳಿ ಹೆಣ್ಣು ಮಕ್ಕಳನ್ನು ಕೊಂದು ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಆರೋಪ ಕೇಳಿಬಂದಿದೆ.

ವಾಜರಹಳ್ಳಿಯ ನಿವಾಸಿ ಉಮಾದೇವಿ (42) ಎಂಬುವವರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. IVF ಮೂಲಕ ದಂಪತಿ ಅವಳಿ ಹೆಣ್ಣು ಮಕ್ಕಳನ್ನು ಪಡೆದಿದ್ದರು. ಆದರೆ ಮಕ್ಕಳ ಜನನದ ಬಳಿಕ ಉಮಾದೇವಿ ಮಾನಸಿಕವಾಗಿ ಅಸ್ವಸ್ಥರಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ನಿನ್ನೆ ಸಂಜೆ ಮಕ್ಕಳನ್ನು ಕೊಂದು ಬಳಿಕ ಉಮಾದೇವಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಮನೆಗೆ ಬಂದ ಪತಿ ಪತ್ನಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಮಾಹಿತಿ ತಿಳಿದು ಸ್ಥಳಕ್ಕೆ ತಲಘಟ್ಟಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಉಮಾದೇವಿಯನ್ನು ಬೆಂಗಳೂರಿನ ನಿಮ್ಹಾನ್ಸ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪತಿ ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ತಲಘಟ್ಟಪುರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಘಟನೆಯ ನಿಖರ ಕಾರಣ ಹಾಗೂ ಮಕ್ಕಳ ಸಾವಿನ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ರೇಣುಕಾಸ್ವಾಮಿ ಕೇಸ್‌ನಲ್ಲಿ ಇಂದು ಮಹತ್ವದ ದಿನ; ದರ್ಶನ್‌ಗೆ ಮತ್ತೆ ಟೆನ್ಷನ್! ಇಂದು ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲಾಗುತ್ತಾ?

0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್‌ಗೆ ಇಂದು ಮತ್ತೊಂದು ಮಹತ್ವದ ದಿನವಾಗಿದೆ.

ಪ್ರಕರಣದಲ್ಲಿ ಆರೋಪಿ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಅರ್ಜಿಯನ್ನು 59ನೇ ಸಿಸಿಹೆಚ್‌ ನ್ಯಾಯಾಲಯ ಅಂಗೀಕರಿಸಿದ್ದು, ಇಂದು ಅವರ ಸಾಕ್ಷಿ ಹೇಳಿಕೆ ದಾಖಲಾಗುತ್ತಾ ಎಂಬ ಕುತೂಹಲ ಮೂಡಿದೆ.

ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ನ್ಯಾಯಾಲಯ ಸಮ್ಮತಿ ನೀಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 2ರಂದು ಸಾಕ್ಷಿ ಹೇಳಿಕೆ ದಾಖಲಿಸಿಕೊಳ್ಳಲು ವಿಟ್ನೆಸ್‌ ಸಮನ್ಸ್‌ ಜಾರಿಗೊಳಿಸಲಾಗಿತ್ತು. ನ್ಯಾಯಾಲಯದ ಮುಂದೆ ಹಾಜರಾಗಿ ಸಾಕ್ಷಿ ನುಡಿಯುವಂತೆ ಜೈಲಾಧಿಕಾರಿಗಳ ಮೂಲಕ ಸಮನ್ಸ್‌ ಜಾರಿ ಮಾಡುವಂತೆ ನ್ಯಾಯಾಧೀಶರಾದ ಸುಜಾತ ಮಡಿವಾಳಪ್ಪ ಸಾಂಬ್ರಾಣಿ ಸೂಚಿಸಿದ್ದರು.

ಇದರ ಬೆನ್ನಲ್ಲೇ ಇಂದು ಪ್ರದೋಷ್‌ ನ್ಯಾಯಾಲಯದ ಮುಂದೆ ಹಾಜರಾಗಿ ಸಾಕ್ಷಿ ಹೇಳಿಕೆ ನೀಡುತ್ತಾರಾ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಒಂದು ವೇಳೆ ಪ್ರದೋಷ್‌ ಮಾಫಿ ಸಾಕ್ಷಿಯಾಗಿ ಹೇಳಿಕೆ ನೀಡಿದರೆ ಪ್ರಕರಣದ ತನಿಖೆ ಹಾಗೂ ವಿಚಾರಣೆಯಲ್ಲಿ ಅದು ಮಹತ್ವದ ಬೆಳವಣಿಗೆಯಾಗಲಿದೆ.

ಇದೇ ವೇಳೆ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಸೆಷನ್ಸ್‌ ಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಆರೋಪಿ ದರ್ಶನ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ದರ್ಶನ್‌ ಪರ ವಕೀಲರು ಸಲ್ಲಿಸಿರುವ ಅರ್ಜಿ ಹೈಕೋರ್ಟ್‌ನ ಪಟ್ಟಿಯಲ್ಲಿ 49ನೇ ಮ್ಯಾಟರ್‌ ಆಗಿದೆ. ಇಂದು ಬೆಳಗ್ಗೆ 11.30ರ ಸುಮಾರಿಗೆ ಈ ಅರ್ಜಿಯ ಕುರಿತು ಆದೇಶ ಹೊರಬೀಳುವ ಸಾಧ್ಯತೆಯಿದೆ.

ಹೀಗಾಗಿ ಹೈಕೋರ್ಟ್‌ನ ಆದೇಶದ ಬಳಿಕ ಮಧ್ಯಾಹ್ನ 12ರ ಸುಮಾರಿಗೆ ಪ್ರದೋಷ್‌ ಅವರ ಹೇಳಿಕೆ ದಾಖಲಿಸಲು ಕೆಳ ನ್ಯಾಯಾಲಯದಲ್ಲಿ ಸಿದ್ಧತೆ ನಡೆಯುತ್ತಿದೆ. ಹೈಕೋರ್ಟ್‌ ಆದೇಶ ಏನಾಗಲಿದೆ? ಪ್ರದೋಷ್‌ ಮಾಫಿ ಸಾಕ್ಷಿಯಾಗಿ ಹೇಳಿಕೆ ನೀಡುತ್ತಾರಾ? ಎಂಬುದರ ಮೇಲೆ ಇದೀಗ ಎಲ್ಲರ ಗಮನ ನೆಟ್ಟಿದೆ.

ಸಾರ್ವಜನಿಕವಾಗಿ ಮದ್ಯಪಾನ ಮಾಡಿ ಗಲಾಟೆ; ₹1 ಸಾವಿರ ದಂಡ, 50 ಸಸಿ ನೆಡುವಂತೆ ಕೋರ್ಟ್ ಆದೇಶ

0

ಚಿಕ್ಕೋಡಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಅವಾಚ್ಯ ಶಬ್ದಗಳಿಂದ ಸಾರ್ವಜನಿಕರನ್ನು ನಿಂದಿಸಿದ ಪ್ರಕರಣದಲ್ಲಿ ಚಿಕ್ಕೋಡಿ ಪ್ರಥಮ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ವಿನೂತನ ಶಿಕ್ಷೆ ವಿಧಿಸಿದೆ.

ಯಕ್ಸಂಬಾ ಪಟ್ಟಣದ ಅನಿಲ್ ಪೂಜಾರಿ ಎಂಬಾತ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣದ ವಿಚಾರಣೆ ವೇಳೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆತನಿಗೆ ₹1,000 ದಂಡ ವಿಧಿಸಿದೆ.

ಇದರ ಜತೆಗೆ ಪರಿಸರ ಸಂರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಒಟ್ಟು 50 ಸಸಿಗಳನ್ನು ನೆಡುವಂತೆ ನ್ಯಾಯಾಲಯ ಆದೇಶಿಸಿದೆ. ಸದಲಗಾ ಪೊಲೀಸ್ ಠಾಣೆ ಆವರಣದಲ್ಲಿ 25 ಸಸಿ ಹಾಗೂ ಚಿಕ್ಕೋಡಿ ನ್ಯಾಯಾಲಯದ ಆವರಣದಲ್ಲಿ 25 ಸಸಿ ನೆಡುವಂತೆ ಸೂಚಿಸಲಾಗಿದೆ.

ನ್ಯಾಯಾಲಯದ ಆದೇಶದಂತೆ ಸಸಿಗಳನ್ನು ನೆಡುವ ಕಾರ್ಯವನ್ನು ಪೂರ್ಣಗೊಳಿಸದಿದ್ದರೆ 30 ದಿನಗಳ ಕಾರಾಗೃಹ ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಿದ ಪ್ರಕರಣದಲ್ಲಿ ದಂಡದ ಜತೆಗೆ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನೂ ವಹಿಸುವಂತೆ ಸೂಚಿಸಿರುವ ನ್ಯಾಯಾಲಯದ ಈ ವಿನೂತನ ತೀರ್ಪು ಗಮನ ಸೆಳೆದಿದೆ.

ಗದಗ ಬರಕ್ಕೆ ಸಿಎಂ ಸ್ಪಂದನೆ: ಶೀಘ್ರವೇ ಎರಡನೇ ಹಂತದ ಬರಪೀಡಿತ ತಾಲೂಕುಗಳ ಪಟ್ಟಿ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಬರಪೀಡಿತ ತಾಲೂಕುಗಳನ್ನು ಘೋಷಿಸುವ ಪ್ರಕ್ರಿಯೆಯನ್ನು ಸರ್ಕಾರದ ಮಾರ್ಗಸೂಚಿಗಳ ಅನುಸಾರವೇ ಕೈಗೊಳ್ಳಲಾಗುತ್ತಿದ್ದು, ವಾಸ್ತವಿಕ ಪರಿಸ್ಥಿತಿಯ ಅಧ್ಯಯನ ನಡೆಸಿ ಶೀಘ್ರವೇ ಬರಪೀಡಿತ ತಾಲೂಕುಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಗದಗ ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಕುರಿತು ಮಂಗಳವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಪ್ರತಿಯೊಂದು ತಾಲೂಕಿಗೂ ಭೇಟಿ ನೀಡಿ ವಾಸ್ತವಾಂಶಗಳ ವರದಿ ನೀಡಿದ್ದಾರೆ. ಇದರೊಂದಿಗೆ ಅಧಿಕಾರಿಗಳು ಕೂಡ ಬರ ಪರಿಸ್ಥಿತಿಯ ಅಧ್ಯಯನ ನಡೆಸುತ್ತಿದ್ದಾರೆ. ಎರಡೂ ವರದಿಗಳನ್ನು ಪರಿಶೀಲಿಸಿ ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಬೇಕಾಗಿದೆ ಎಂದು ವಿವರಿಸಿದರು.

ಗದಗ ಜಿಲ್ಲೆಯಲ್ಲಿ ರೈತರ ಬದುಕು ಅಪಾಯದಲ್ಲಿದ್ದು, ಜನತೆ ಆತಂಕಕ್ಕೆ ಒಳಗಾಗಿದ್ದಾರೆ. ಕಳೆದ 50 ವರ್ಷಗಳಲ್ಲೇ ಕಂಡುಬರದಷ್ಟು ಭೀಕರ ಬರ ಪರಿಸ್ಥಿತಿಗೆ ಜಿಲ್ಲೆ ತುತ್ತಾಗಿದೆ. ಈ ವರ್ಷ ಜಿಲ್ಲೆಯಲ್ಲಿ ಶೇ.40ರಷ್ಟು ಮಳೆ ಕೊರತೆಯಾಗಿದೆ. ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುವಾಗಲೂ ಹಲವು ಪ್ರದೇಶಗಳಲ್ಲಿ ಬಿತ್ತನೆಯೇ ಆಗದಿರುವುದು ಕಂಡುಬಂದಿದೆ ಎಂದು ಹೇಳಿದರು.

ಬಿತ್ತನೆ ಮಾಡಿರುವ ಪ್ರದೇಶಗಳಲ್ಲಿಯೂ ರೈತರ ಕೈಗೆ ಶೇ.10ರಿಂದ 15ರಷ್ಟು ಬೆಳೆ ಕೂಡ ಸಿಗದಂತಹ ದುಸ್ಥಿತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ತಾವು ರೈತರ ಜಮೀನುಗಳಿಗೆ ತೆರಳಿ ಹತ್ತಿ, ಕಡಲೆಕಾಯಿ, ಜೋಳ ಹಾಗೂ ಸೂರ್ಯಕಾಂತಿ ಬೆಳೆಗಳನ್ನು ಪರಿಶೀಲಿಸಿದ್ದು, ರೈತರು ಯಾವ ಪ್ರಮಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬುದು ಮನವರಿಕೆಯಾಗಿದೆ ಎಂದರು. ರೈತರೊಂದಿಗೆ ನೇರವಾಗಿ ಚರ್ಚೆ ನಡೆಸಿ ಅವರ ನೋವುಗಳನ್ನು ಆಲಿಸಲಾಗಿದೆ. ಜನರು ಉದ್ಯೋಗ ಅರಸಿ ವಲಸೆ ಹೋಗುವುದನ್ನು ತಪ್ಪಿಸಲು ವಿಬಿಜಿ ರಾಮ್ ಜಿ ಯೋಜನೆ ಯಾವ ರೀತಿಯಲ್ಲಿ ನೆರವಾಗಬೇಕು ಎಂಬ ಬಗ್ಗೆಯೂ ರೈತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಪ್ರಸ್ತುತ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಶಾಸಕರು ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ ಎಂದು ಹೇಳಿದರು.

ಶಾಸಕ ಡಾ. ಎಚ್.ಕೆ. ಪಾಟೀಲ ಅವರು ಮೋಡ ಬಿತ್ತನೆ ಕುರಿತು ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ. ಉಳಿದ ಶಾಸಕರು ಸಹ ವಿವಿಧ ವಿಷಯಗಳ ಕುರಿತು ಸರ್ಕಾರದ ಗಮನ ಸೆಳೆದಿದ್ದಾರೆ. ನೀರಾವರಿ, ಬೆಣ್ಣೆಹಳ್ಳ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಲಾಗಿದ್ದು, ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೇಂದ್ರದ ವರದಿಗೂ ಹೊಂದಾಣಿಕೆಯಾಗಬೇಕು

ರಾಜ್ಯ ಸರ್ಕಾರದ ಬರ ಪರಿಸ್ಥಿತಿ ವರದಿಯು ಕೇಂದ್ರ ಸರ್ಕಾರದ ಅಧ್ಯಯನ ವರದಿಯೊಂದಿಗೆ ಹೊಂದಾಣಿಕೆಯಾಗುವುದು ಅಗತ್ಯವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ದೆಹಲಿ ಕೇಂದ್ರದಿಂದ ಆಗಮಿಸುವ ಬರ ಅಧ್ಯಯನ ತಂಡಕ್ಕೆ ರಾಜ್ಯ ಸರ್ಕಾರದ ವರದಿ ಒಪ್ಪಿಗೆಯಾಗಬೇಕು. ಆಗ ಮಾತ್ರ ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ದೊರೆಯಲು ಸಾಧ್ಯ. ಸರ್ಕಾರ ತನ್ನ ಮಟ್ಟದಲ್ಲಿ ಕೈಗೊಳ್ಳಬೇಕಾದ ಎಲ್ಲ ಕ್ರಮಗಳನ್ನು ಈಗಾಗಲೇ ಆರಂಭಿಸಿದೆ ಎಂದು ಹೇಳಿದರು.

ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ₹1 ಕೋಟಿ ಅನುದಾನ ನೀಡಲಾಗಿದ್ದು, ಜಿಲ್ಲಾಧಿಕಾರಿಗಳ ಖಾತೆಯಲ್ಲಿಯೂ ಹೆಚ್ಚುವರಿ ಹಣವನ್ನು ಲಭ್ಯವಾಗುವಂತೆ ಮಾಡಲಾಗಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಮತ್ತಷ್ಟು ಚುರುಕುಗೊಳ್ಳಬೇಕು. ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಸೆಪ್ಟೆಂಬರ್ 5ರಿಂದ ಪ್ರಜಾಸೇವಾ ಆಂದೋಲನ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸರಿಯಾದ ರೀತಿಯಲ್ಲಿ ತಲುಪಬೇಕು. ಯೋಜನೆಗಳ ದುರ್ಬಳಕೆಯಾಗಬಾರದು ಎಂಬ ಉದ್ದೇಶದಿಂದ ಮರುಪರಿಶೀಲನೆ ನಡೆಸಲಾಗುತ್ತಿದ್ದು, ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದರು.

ನಮ್ಮ ಸರ್ಕಾರ 100 ದಿನಗಳಲ್ಲಿ ಕೈಗೊಂಡಿರುವ ಕಾರ್ಯಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ಯೋಜನೆಗಳ ಕುರಿತು ವಿಧಾನಸಭೆ ಅಧಿವೇಶನದಲ್ಲಿ ವಿವರಿಸಲು ನಿರ್ಧರಿಸಲಾಗಿತ್ತು. ಆದರೆ ವಿರೋಧ ಪಕ್ಷಗಳು ಅದಕ್ಕೆ ಅವಕಾಶ ನೀಡಲಿಲ್ಲ. ಆದ್ದರಿಂದ ಸರ್ಕಾರದ 100 ದಿನಗಳ ಕಾರ್ಯಕ್ರಮದ ಸಂದರ್ಭದಲ್ಲಿ ಈ ಎಲ್ಲ ವಿಷಯಗಳನ್ನು ಜನತೆಗೆ ತಿಳಿಸಲಾಗುವುದು ಎಂದು ಹೇಳಿದರು.

ಬರ ಪ್ರದೇಶ ಘೋಷಣೆಯನ್ನು ಸರ್ಕಾರ ಮಾರ್ಗಸೂಚಿಯ ಅನುಸಾರವೇ ಮಾಡಬೇಕು. ಗದಗ ಜಿಲ್ಲೆಯ ರೈತರ ಪರಿಸ್ಥಿತಿಯನ್ನು ನಾನು ಸ್ವತಃ ಕಣ್ಣಾರೆ ಕಂಡಿದ್ದೇನೆ. ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ರೈತರ ಸಂಕಷ್ಟ ತೀವ್ರವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿ, ಕೇಂದ್ರ ಸರ್ಕಾರದ ವರದಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಶೀಘ್ರವೇ ಬರಪೀಡಿತ ತಾಲೂಕುಗಳ ಎರಡನೇ ಪಟ್ಟಿಯನ್ನು ಪ್ರಕಟಿಸುತ್ತೇವೆ.

— ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ

ದೇವರ ಆಶೀರ್ವಾದ ಇದ್ದರೆ ಎಲ್ಲವೂ ಸರಿ: ಡಿಕೆಶಿ ಕುರಿತು ಮಹತ್ವದ ಹೇಳಿಕೆ ನೀಡಿದ ಮುಕ್ತಿಮಂದಿರ ಶ್ರೀಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಗಟ್ಟಿಯಾಗಿ ಕೂರಲಿದ್ದಾರೆಯೇ ಎಂಬ ಪ್ರಶ್ನೆಗೆ ಲಕ್ಷ್ಮೇಶ್ವರ ಸಮೀಪದ ಮುಕ್ತಿಮಂದಿರದ ಜಗದ್ಗುರು ಶ್ರೀ 1008 ವಿಮಲ ರೇಣುಕ ವೀರಗಂಗಾಧರ ಸ್ವಾಮೀಜಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಏನೂ ಹೇಳಲ್ಲ. ಬೇಕಾದಷ್ಟು ಜನ ಈಗಾಗಲೇ ಹೇಳಿದ್ದಾರೆ. ದೇವರ ಆಶೀರ್ವಾದ ಇರುವ ತನಕ ಎಲ್ಲವೂ ಸರಿಯಾಗುತ್ತದೆ, ಒಳ್ಳೆಯದಾಗುತ್ತದೆ ಎಂದು ಶ್ರೀಗಳು ಹೇಳಿದರು.

ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪದ ಮುಕ್ತಿಮಂದಿರಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಅವರು ಶ್ರೀಗಳ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಮುಕ್ತಿಮಂದಿರಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಗದ್ಗುರು ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ 1008 ಪ್ರಸನ್ನ ರೇಣುಕ ವೀರಗಂಗಾಧರ ಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆದರು. ಗದ್ದುಗೆಗೆ ಪೂಜೆ ಸಲ್ಲಿಸಿ, ಶ್ರೀಗಳ ಸ್ಮರಣೆ ಮಾಡಿದರು.

ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಕೈ-ಕಾಲು ತೊಳೆದುಕೊಂಡು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ವೇಳೆ ಮಠದ ನೋಣವಿನಕೆರೆ ಶ್ರೀಗಳು ಹಾಗೂ ಜಗದ್ಗುರು ಶ್ರೀ 1008 ವಿಮಲ ರೇಣುಕ ವೀರಗಂಗಾಧರ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಹಿಂದೆ ನೀಡಿದ್ದ ರುದ್ರಾಕ್ಷಿ, ಅಜ್ಜನವರ ಮೂರ್ತಿ

ಈ ಹಿಂದೆ ಡಿ.ಕೆ. ಶಿವಕುಮಾರ್ ಅವರು ಮುಕ್ತಿಮಂದಿರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಜ್ಜನವರ ರುದ್ರಾಕ್ಷಿ ಹಾಗೂ ಅಜ್ಜನವರ ಮೂರ್ತಿಯನ್ನು ನೀಡಲಾಗಿತ್ತು ಎಂದು ಜಗದ್ಗುರು ಶ್ರೀ 1008 ವಿಮಲ ರೇಣುಕ ವೀರಗಂಗಾಧರ ಸ್ವಾಮೀಜಿ ತಿಳಿಸಿದರು.

ಡಿ.ಕೆ. ಶಿವಕುಮಾರ್ ಅವರು ಭಸ್ಮವನ್ನು ತೆಗೆದುಕೊಂಡಿದ್ದು, ಅವರು ಭಸ್ಮ ಹಚ್ಚಿಕೊಂಡು ಅಜ್ಜನವರನ್ನು ಸ್ಮರಿಸುತ್ತಾರೆ ಎಂದೂ ಹೇಳಿದರು.

ರಾಯರೆಡ್ಡಿ ಹೇಳಿಕೆಗೆ ಪ್ರತಿಕ್ರಿಯೆ ನಿರಾಕರಣೆ

ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಅವರು ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಹೇಳಿಕೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಶ್ರೀಗಳು, “ಬೇಕಾದವರು ಬೇಕಾದ ರೀತಿಯಲ್ಲಿ ಮಾತನಾಡುತ್ತಾರೆ. ರಾಜಕೀಯದಲ್ಲಿ ಎಲ್ಲರೂ ಒಂದೇ ಧರ್ಮದವರಲ್ಲ. ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ” ಎಂದರು.

ನಮ್ಮ ಗುರುಗಳು ಮಾನವ ಧರ್ಮ ಒಂದೇ ಎಂದು ಹೇಳಿದ್ದಾರೆ. ಸರ್ವಧರ್ಮ ಸಮನ್ವಯದ ಮೂರ್ತಿಗಳನ್ನು ನಮ್ಮ ಮಠದಲ್ಲಿ ಅಜ್ಜನವರು ಸ್ಥಾಪಿಸಿದ್ದಾರೆ ಎಂದು ಅವರು ತಿಳಿಸಿದರು.

“ಯಾರಾದರೂ ಮಠದಲ್ಲಿ ಮಹಮ್ಮದ್ ಪೈಗಂಬರ್ ಅವರ ಮೂರ್ತಿ ಸ್ಥಾಪಿಸಿರುವುದನ್ನು ನೋಡಿದ್ದೀರಾ? ನಮ್ಮ ಮಠದಲ್ಲಿ ಇದೆ. ನಾವು ಅದರ ಬಗ್ಗೆ ಮಾತಾಡಲ್ಲ. ಮುಂದೆ ಏನೇನು ಆಗಬೇಕೋ ಆಗುತ್ತದೆ” ಎಂದರು.

ದೇವರಾಜ ಅರಸು ಪ್ರಸಂಗ ನೆನಪಿಸಿದ ಶ್ರೀಗಳು

ಯಾರೂ ಸ್ಥಿರವಾಗಿರುವುದಿಲ್ಲ, ಮನುಷ್ಯ ಎಂದ ಮೇಲೆ ಹುಟ್ಟು-ಸಾವು ಇದ್ದೇ ಇರುತ್ತದೆ ಎಂದು ಹೇಳಿದ ಶ್ರೀಗಳು, ಹಿಂದೆ ದೇವರಾಜ ಅರಸು ಅವರು 11 ವರ್ಷ ಮುಖ್ಯಮಂತ್ರಿಯಾಗಿದ್ದ ಪ್ರಸಂಗವನ್ನು ನೆನಪಿಸಿಕೊಂಡರು.

1971ರಲ್ಲಿ ದೇವರಾಜ ಅರಸು ಅವರು ಮುಕ್ತಿಮಂದಿರಕ್ಕೆ ಭೇಟಿ ನೀಡಿದ್ದರು. ಆಗ ಅಜ್ಜನವರು ಅವರಿಗೆ ಬಂಗಾರದ ರುದ್ರಾಕ್ಷಿ, ಎರಡು ವಿಭೂತಿ ಹಾಗೂ ರೇಣುಕ ದೇವಿಯ ಮೂರ್ತಿಯನ್ನು ನೀಡಿದ್ದರು ಎಂದು ಶ್ರೀಗಳು ಹೇಳಿದರು.

ರೇಣುಕ ದೇವಿಯ ಮೂರ್ತಿಯನ್ನು ಮನೆಯಲ್ಲಿ ಸ್ಥಾಪಿಸಿ ಪೂಜೆ ಮಾಡುವಂತೆ ಅರಸು ಅವರಿಗೆ ತಿಳಿಸಲಾಗಿತ್ತು. ಅಲ್ಲದೆ, ಅವರ ಕೊರಳಿಗೆ ಮಾಲೆ ಹಾಕಿ, ಕೊರಳಿನಲ್ಲಿರುವ ಮಾಲೆಯನ್ನು ತೆಗೆಯಬಾರದು ಎಂದೂ ಅಜ್ಜನವರು ಹೇಳಿದ್ದರು ಎಂದು ವಿವರಿಸಿದರು.

ಮುಖ್ಯಮಂತ್ರಿ ಮುಕ್ತಿಮಂದಿರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಮಠದ ಆವರಣದಿಂದ ಹೊರಗಡೆ ಕಳುಹಿಸಲಾಗಿತ್ತು.