ಗದಗ: ಗದಗ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ಟೆಂಡರ್ ಪ್ರಕ್ರಿಯೆ ಭಾರೀ ವಿವಾದದ ಕೇಂದ್ರಬಿಂದುವಾಗಿ ಪರಿಣಮಿಸಿದ್ದು, ಗಣಿ ಇಲಾಖೆ ವಿರುದ್ಧ ಗೋಲ್ಮಾಲ್ ಹಾಗೂ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿ ಬಂದಿವೆ. ಮುಂಡರಗಿ ಹಾಗೂ ಶಿರಹಟ್ಟಿ ತಾಲೂಕು ವ್ಯಾಪ್ತಿಯ ತುಂಗಭದ್ರಾ ನದಿಯ ಮರಳು ಟೆಂಡರ್ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಗುತ್ತಿಗೆದಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು.
ತಮಗೆ ಬೇಕಾದ ಟೆಂಡರ್ ದಾರರನ್ನು ಆಯ್ಕೆ ಮಾಡಿಕೊಂಡು, ಬೇಡವಾದವರ ಅರ್ಜಿಗಳನ್ನು ಯಾವುದೇ ಸ್ಪಷ್ಟ ಕಾರಣ ನೀಡದೇ ತಿರಸ್ಕರಿಸಲಾಗಿದೆ ಎಂದು ಆರೋಪಿಸಿರುವ ಟೆಂಡರ್ ದಾರರು, “ರಾತ್ರೋರಾತ್ರಿ ಧಂಧೆಕೋರರ ಜೊತೆ ಸೇರಿ ಟೆಂಡರ್ ಫೈನಲ್ ಮಾಡಲಾಗಿದೆ” ಎಂದು ಗಣಿ ಇಲಾಖೆ ವಿರುದ್ಧ ಗಂಭೀರ ಆರೋಪ ಹೊರಿಸಿದ್ದಾರೆ.
ಕಾನೂನು ಸಚಿವರ ತವರಲ್ಲೇ ಗಣಿ ಇಲಾಖೆ ಅಧಿಕಾರಿಗಳ “ಅಂಧಾ ದರ್ಬಾರ್” ನಡೆಯುತ್ತಿದೆ ಎಂದು ಕಿಡಿಕಾರಿದ ಗುತ್ತಿಗೆದಾರರು, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹಾಗೂ ಗಣಿ ಇಲಾಖೆ ಅಧಿಕಾರಿ ನಾಗಭೂಷಣ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಟೆಂಡರ್ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಅನ್ಯಾಯಕ್ಕೊಳಗಾದ ಟೆಂಡರ್ ದಾರರು ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದರು. ಈ ವೇಳೆ ಸಚಿವರು ಟೆಂಡರ್ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿರಬೇಕು ಎಂದು ಸೂಚನೆ ನೀಡಿ, ಮರು ಟೆಂಡರ್ ಕರೆಯುವಂತೆ ಜಿಲ್ಲಾಧಿಕಾರಿಗಳಿಗೆ ಖಡಕ್ ತಾಕೀತು ಮಾಡಿದರೆಂದು ತಿಳಿದು ಬಂದಿದೆ.
ಭ್ರಷ್ಟಾಚಾರದ ಆರೋಪ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಗಣಿ ಇಲಾಖೆ ಅಧಿಕಾರಿ ನಾಗಭೂಷಣ ಅವರಿಗೆ ಸಚಿವರು ಸಿಟ್ಟಿನಿಂದಲೇ “ಇದು ಲಾಸ್ಟ್ ವಾರ್ನಿಂಗ್” ಎಂದು ಎಚ್ಚರಿಕೆ ನೀಡಿದರೆಂಬ ಮಾಹಿತಿ ಲಭ್ಯವಾಗಿದೆ.
ಜಿಲ್ಲಾಡಳಿತ ಭವನಕ್ಕೆ ದೌಡಾಯಿಸಿದ ಟೆಂಡರ್ ದಾರರು, ಟೆಂಡರ್ ಪ್ರಕ್ರಿಯೆಯಲ್ಲಿ ನಡೆದ ಅನ್ಯಾಯದ ಬಗ್ಗೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರನ್ನು ಪ್ರಶ್ನಿಸಿದರು. ಈ ವೇಳೆ ಡಿಸಿ ಹಾಗೂ ಗುತ್ತಿಗೆದಾರರ ನಡುವೆ ಕೆಲ ಹೊತ್ತು ಮಾತಿನ ಚಕಮಕಿ ನಡೆಯಿತು.
ಪರಿಸ್ಥಿತಿ ನಿಯಂತ್ರಣ ತಪ್ಪುವ ಹಂತಕ್ಕೆ ತಲುಪುತ್ತಿದ್ದಂತೆ ಮಧ್ಯ ಪ್ರವೇಶ ಮಾಡಿದ ಎಸ್ಪಿ ರೋಹನ್ ಜಗದೀಶ್ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
“ಸಚಿವ ಎಚ್.ಕೆ. ಪಾಟೀಲ್ ಮರು ಟೆಂಡರ್ ಮಾಡುವಂತೆ ಸೂಚಿಸಿದ್ದಾರೆ. ಆದರೆ ಜಿಲ್ಲಾಧಿಕಾರಿಗಳು ‘ಮಾಡಲ್ಲ’ ಎಂದು ಹೇಳುತ್ತಿದ್ದಾರೆ. ಸಚಿವರ ಮಾತಿಗೂ ಗೌರವ ಇಲ್ಲದಂತಾಗಿದೆ” ಎಂದು ಟೆಂಡರ್ ದಾರರು ಆಕ್ರೋಶ ವ್ಯಕ್ತಪಡಿಸಿದರು. ಗಣಿ ಇಲಾಖೆ ಹಾಗೂ ಜಿಲ್ಲಾಡಳಿತದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿರುವ ಟೆಂಡರ್ ದಾರರು, ಟೆಂಡರ್ ಪ್ರಕ್ರಿಯೆಯು ಸಂಪೂರ್ಣ ತನಿಖೆಗೆ ಒತ್ತಾಯಿಸಿದ್ದಾರೆ.

