ಉಡುಪಿ: ಅಯೋಧ್ಯೆ ರಾಮಮಂದಿರ ಟ್ರಸ್ಟ್ನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಕುರಿತು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ಜುಲೈ 11ರಂದು ನಡೆಯಲಿರುವ ಟ್ರಸ್ಟ್ ಸಭೆಯಲ್ಲಿ ವಿಷಯ ಚರ್ಚೆಗೆ ಬರಲಿದ್ದು, ಸಂಪೂರ್ಣ ಮಾಹಿತಿ ಪಡೆದ ಬಳಿಕವೇ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದ್ದಾರೆ.
ರಾಮಮಂದಿರ ಟ್ರಸ್ಟ್ನ ಸದಸ್ಯರಾಗಿರುವ ಶ್ರೀಗಳು, ಕೇವಲ ಮಾಧ್ಯಮ ವರದಿಗಳ ಆಧಾರದ ಮೇಲೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದು ಸರಿಯಲ್ಲ. ಸಭೆಯಲ್ಲಿ ವಿಷಯದ ಸತ್ಯಾಸತ್ಯತೆ ತಿಳಿದುಕೊಂಡ ನಂತರವೇ ಸೂಕ್ತ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು.
ಸಿಂಧಿ ಸಮುದಾಯವು 200 ಕೆ.ಜಿ. ಬೆಳ್ಳಿ ದೇಣಿಗೆ ನೀಡಿದ್ದರೂ ಗೌರವ ನೀಡಿಲ್ಲ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೇ ದೇಣಿಗೆ ನೀಡುವಾಗ ಕಡ್ಡಾಯವಾಗಿ ರಶೀದಿ ಪಡೆಯಬೇಕು. ರಶೀದಿ ನೀಡದಿರುವುದು ಗಂಭೀರ ತಪ್ಪಾಗಿದ್ದು, ಬಾಯಿಮಾತಿಗಿಂತ ದಾಖಲೆಗಳಿಗೆ ಹೆಚ್ಚಿನ ಮಹತ್ವವಿದೆ ಎಂದು ಹೇಳಿದರು.
ಅವ್ಯವಹಾರ ಆರೋಪಗಳ ತನಿಖೆಗೆ ಎಸ್ಐಟಿ ರಚಿಸಿರುವುದನ್ನು ಸ್ವಾಗತಿಸಿದ ಶ್ರೀಗಳು, ಆರೋಪಗಳಲ್ಲಿ ಸತ್ಯಾಂಶ ಇದ್ದರೆ ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದೇಶ-ವಿದೇಶದ ಕೋಟ್ಯಂತರ ಭಕ್ತರ ನಂಬಿಕೆಯ ಕೇಂದ್ರವಾಗಿರುವ ರಾಮಮಂದಿರದಲ್ಲಿ ಇಂತಹ ಆರೋಪಗಳು ಕೇಳಿಬರಬಾರದು ಎಂದರು.
ಟ್ರಸ್ಟ್ ಸದಸ್ಯನಾಗಿ ತಾವು ಹಲವು ಸಲಹೆಗಳನ್ನು ನೀಡಿದ್ದಾಗಿ ತಿಳಿಸಿದ ಶ್ರೀಗಳು, ಟ್ರಸ್ಟ್ನ ಜವಾಬ್ದಾರಿ ಹೊಂದಿರುವವರು ವಿಶ್ವಾಸಾರ್ಹವಾಗಿ ನಡೆದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಸೇವಾ ಪಟ್ಟಿ ಪ್ರಕಟಿಸದಿರುವ ಕುರಿತು ಈಗಾಗಲೇ ಟ್ರಸ್ಟ್ನಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು ಎಂದೂ ಸ್ಪಷ್ಟಪಡಿಸಿದರು.
ಇದೇ ವೇಳೆ, ರಾಮಮಂದಿರಕ್ಕೆ ದೊಡ್ಡ ಮೊತ್ತದ ದೇಣಿಗೆ ನೀಡುವುದಕ್ಕಿಂತ ಬಡವರಿಗೆ ಮನೆ ನಿರ್ಮಿಸಿಕೊಡುವಂತಹ ಸಮಾಜಸೇವೆ ಮಾಡುವುದೇ ನಿಜವಾದ ರಾಮಸೇವೆ ಎಂದು ಕರೆ ನೀಡಿದ ಅವರು, ರಾಜ್ಯ ಸರ್ಕಾರದ ತನಿಖೆಯ ಮೇಲೆ ವಿಶ್ವಾಸವಿದೆ ಎಂದು ಹೇಳಿದರು.
ಆರ್ಎಸ್ಎಸ್ ನೋಂದಣಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀಗಳು, ಸಂಘಟನೆಯನ್ನು ನೋಂದಣಿ ಮಾಡಿದರೆ ಅನಗತ್ಯ ಆರೋಪಗಳಿಗೆ ಅವಕಾಶ ಇರುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.