Home Blog

KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದ ತನಿಖೆಯನ್ನು CID ತೀವ್ರಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 329 ಅಭ್ಯರ್ಥಿಗಳಿಗೆ CID ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಸೂಚಿಸಿದೆ.

ಜಾರಿ ನಿರ್ದೇಶನಾಲಯ (ED) ನಡೆಸಿದ ವಿಚಾರಣೆ ವೇಳೆ ಕೆಲವರು ಅಕ್ರಮದ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ CID ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ED ವಿಚಾರಣೆಯಲ್ಲಿ ಲಭ್ಯವಾದ ಮಾಹಿತಿ ಹಾಗೂ ಹೇಳಿಕೆಗಳನ್ನು ಆಧರಿಸಿ 329 ಅಭ್ಯರ್ಥಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ನೋಟಿಸ್ ಪಡೆದಿರುವ ಎಲ್ಲ 329 ಅಭ್ಯರ್ಥಿಗಳು ಇಂದೇ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ CID ಅಧಿಕಾರಿಗಳು ಸೂಚಿಸಿದ್ದಾರೆ. ಅಭ್ಯರ್ಥಿಗಳ ವಿಚಾರಣೆ ಮೂಲಕ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆಯೇ, ಅಕ್ರಮದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಕಲೆಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ.

ಇಷ್ಟು ದೊಡ್ಡ ಸಂಖ್ಯೆಯ ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ನೋಟಿಸ್ ನೀಡಿರುವುದು ಪ್ರಕರಣದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ. ತನಿಖೆಯ ವೇಳೆ ಅಕ್ರಮದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳು ಹಾಗೂ ಪ್ರಭಾವಿಗಳ ಹೆಸರುಗಳು ಹೊರಬರುವ ಸಾಧ್ಯತೆಯೂ ಇದೆ.

ಈಗಾಗಲೇ 329 ಅಭ್ಯರ್ಥಿಗಳಿಂದ ವಶಪಡಿಸಿಕೊಂಡಿರುವ 658 OMR ಕಾರ್ಬನ್ ಶೀಟ್‌ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಲಾಗಿದೆ.

ಅಭ್ಯರ್ಥಿಗಳ ಮೂಲ OMR ಶೀಟ್‌ಗಳು ಮತ್ತು ಅವರಿಂದ ವಶಪಡಿಸಿಕೊಂಡಿರುವ ಕಾರ್ಬನ್ ಶೀಟ್‌ಗಳನ್ನು ತಾಳೆ ಹಾಕಿ ಪರಿಶೀಲಿಸುವ ಉದ್ದೇಶದಿಂದ FSLಗೆ ಕಳುಹಿಸಲಾಗಿದೆ. ಪರೀಕ್ಷೆಯ ಬಳಿಕ ಪರೀಕ್ಷಾ ಉತ್ತರ ಪತ್ರಿಕೆಗಳಲ್ಲಿ ಯಾವುದೇ ರೀತಿಯ ತಿದ್ದುಪಡಿ ಅಥವಾ ಅಕ್ರಮ ನಡೆದಿದೆಯೇ ಎಂಬ ಬಗ್ಗೆ ಮಹತ್ವದ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.

ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಗೋಲ್‌ಮಾಲ್‌ ಕುರಿತು CID ಅಧಿಕಾರಿಗಳು ಅಭ್ಯರ್ಥಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲು ಸಿದ್ಧತೆ ನಡೆಸಿದ್ದಾರೆ. ಅಭ್ಯರ್ಥಿಗಳ ಹೇಳಿಕೆಗಳು, OMR ಶೀಟ್‌ಗಳ ಪರಿಶೀಲನೆ ಹಾಗೂ EDಯಿಂದ ಲಭ್ಯವಾದ ಮಾಹಿತಿಯನ್ನು ಆಧರಿಸಿ ತನಿಖೆ ಮುಂದುವರಿಯಲಿದೆ.

ಈ ಪ್ರಕರಣದ ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸ್ಫೋಟಕ ಮಾಹಿತಿಗಳು ಹಾಗೂ ಅಕ್ರಮದಲ್ಲಿ ಭಾಗಿಯಾಗಿರುವವರ ವಿವರಗಳು ಹೊರಬರುವ ಸಾಧ್ಯತೆಯಿದೆ.

ಶ್ರೀಲಂಕಾ ವಿರುದ್ಧದ ಕೊಲಂಬೊ ಟೆಸ್ಟ್ʼನಲ್ಲಿ ಜಡೇಜಾಗೆ ವಿಶೇಷ ಮೈಲಿಗಲ್ಲು: WTC ಇತಿಹಾಸದಲ್ಲಿ 50 ಪಂದ್ಯಗಳ ದಾಖಲೆ

0

ಕೊಲಂಬೊ: ಜಗತ್ತಿನ ನಂಬರ್ ಒನ್ ಟೆಸ್ಟ್ ಆಲ್ರೌಂಡರ್ ರವೀಂದ್ರ ಜಡೇಜಾ, ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಕೊಲಂಬೊ ಟೆಸ್ಟ್ ಪಂದ್ಯ ಜಡೇಜಾ ಪಾಲಿಗೆ ವಿಶೇಷವಾಗಿದ್ದು, ಇದು ಅವರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವೃತ್ತಿಜೀವನದ 50ನೇ ಟೆಸ್ಟ್ ಪಂದ್ಯವಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ 50 ಟೆಸ್ಟ್ ಪಂದ್ಯಗಳನ್ನು ಆಡಿದ ಭಾರತದ ಹಾಗೂ ಏಷ್ಯಾದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ರವೀಂದ್ರ ಜಡೇಜಾ ಪಾತ್ರರಾಗಿದ್ದಾರೆ. ಟೀಂ ಇಂಡಿಯಾದ ಪ್ರಮುಖ ಬೌಲಿಂಗ್ ಆಲ್ರೌಂಡರ್ ಆಗಿ ಗುರುತಿಸಿಕೊಂಡಿರುವ ಜಡೇಜಾ, ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ತಂಡಕ್ಕೆ ಮಹತ್ವದ ಕೊಡುಗೆ ನೀಡುತ್ತಾ ಬಂದಿದ್ದಾರೆ.

2012ರಲ್ಲಿ ಭಾರತ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿದ ರವೀಂದ್ರ ಜಡೇಜಾ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೊದಲ ಆವೃತ್ತಿಯಿಂದಲೂ ತಂಡದ ಪ್ರಮುಖ ಸದಸ್ಯರಾಗಿದ್ದಾರೆ. 2019-21ರ ಮೊದಲ WTC ಆವೃತ್ತಿಯಲ್ಲಿ ಜಡೇಜಾ ಭಾರತ ಪರ 11 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಬಳಿಕ 2021-23ರ ಅವಧಿಯಲ್ಲಿ 13 ಟೆಸ್ಟ್ ಪಂದ್ಯಗಳು ಹಾಗೂ 2023-25ರ WTC ಅವಧಿಯಲ್ಲಿ 25 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. 2025-27ರ ಸಾಲಿನಲ್ಲೂ 11 ಪಂದ್ಯಗಳನ್ನು ಆಡಿರುವ ಜಡೇಜಾ ಇದೀಗ ಒಟ್ಟು 50 WTC ಪಂದ್ಯಗಳನ್ನು ಪೂರ್ಣಗೊಳಿಸಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ 50 ಪಂದ್ಯಗಳನ್ನು ಆಡಿರುವ ಜಡೇಜಾ, ಐದು ಶತಕಗಳ ಸಹಿತ 2,632 ರನ್‌ಗಳನ್ನು ಗಳಿಸಿದ್ದಾರೆ. ಬೌಲಿಂಗ್‌ನಲ್ಲಿ 160 ವಿಕೆಟ್‌ಗಳನ್ನು ಕಬಳಿಸಿರುವ ಅವರು, ಆಲ್ರೌಂಡರ್ ಆಗಿ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

WTC ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರರ ಪಟ್ಟಿಯಲ್ಲಿ ಜಡೇಜಾ ಅಗ್ರಸ್ಥಾನದಲ್ಲಿದ್ದಾರೆ. 47 ಪಂದ್ಯಗಳೊಂದಿಗೆ ಮೊಹಮ್ಮದ್ ಸಿರಾಜ್ ಎರಡನೇ ಸ್ಥಾನದಲ್ಲಿದ್ದರೆ, ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವ ವಿರಾಟ್ ಕೊಹ್ಲಿ 46 ಪಂದ್ಯಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ರಿಷಭ್ ಪಂತ್ ಹಾಗೂ ಶುಭ್‌ಮನ್ ಗಿಲ್ ತಲಾ 42 ಟೆಸ್ಟ್ ಪಂದ್ಯಗಳೊಂದಿಗೆ ನಂತರದ ಸ್ಥಾನಗಳಲ್ಲಿದ್ದಾರೆ.

ಇನ್ನು ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ದೇವದತ್ ಪಡಿಕ್ಕಲ್ ಸತತ ಎರಡನೇ ಶತಕ ದಾಖಲಿಸಿ 117 ರನ್ ಗಳಿಸಿದರೆ, ಶುಭ್‌ಮನ್ ಗಿಲ್ 50 ಹಾಗೂ ರಿಷಭ್ ಪಂತ್ 63 ರನ್‌ಗಳ ಕೊಡುಗೆ ನೀಡಿದರು.

ಧ್ರುವ್ ಜುರೆಲ್ ಅಜೇಯ 89 ರನ್ ಗಳಿಸಿ ಶತಕದತ್ತ ಮುನ್ನಡೆಯುತ್ತಿದ್ದು, 131 ಓವರ್‌ಗಳ ಅಂತ್ಯಕ್ಕೆ ಭಾರತ 8 ವಿಕೆಟ್ ಕಳೆದುಕೊಂಡು 469 ರನ್ ಗಳಿಸಿತ್ತು. ಈ ಮೂಲಕ ಟೀಂ ಇಂಡಿಯಾ ಕೊಲಂಬೊ ಟೆಸ್ಟ್‌ನಲ್ಲಿ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ.

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

0

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ.

ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿವಮೊಗ್ಗದಲ್ಲಿ ಭಾರಿ ಮಳೆ, ಬಲವಾದ ಗಾಳಿ ಸಾಧ್ಯತೆ:

ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಜಿಲ್ಲೆಯ ಜನರು ಹಾಗೂ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲೂ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಸಲಹೆ ನೀಡಿದೆ.

ಕರಾವಳಿ-ಮಲೆನಾಡಿಗೆ ಯೆಲ್ಲೋ ಅಲರ್ಟ್:

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲೂ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಿಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಕೂಡ ಯೆಲ್ಲೋ ಅಲರ್ಟ್ ಘೋಷಿಸಿದೆ.

ಭಾರಿ ಮಳೆಯ ಮುನ್ಸೂಚನೆ ಇರುವ ಪ್ರದೇಶಗಳಲ್ಲಿ ನದಿ, ಹಳ್ಳ-ಕೊಳ್ಳಗಳು ಹಾಗೂ ಜಲಾಶಯಗಳ ಸಮೀಪ ತೆರಳುವಾಗ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮಳೆ ಮತ್ತು ಗಾಳಿಯ ತೀವ್ರತೆ ಹೆಚ್ಚಾದ ಸಂದರ್ಭದಲ್ಲಿ ಅಗತ್ಯವಿಲ್ಲದ ಪ್ರಯಾಣವನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ.

Tipu Cutout Row: ಪಾಕ್ ಪರ ಹಾಡು ಪೋಸ್ಟ್ ಮಾಡಿದ ಆರೋಪ; ಚಿಕ್ಕಮಗಳೂರಿನಲ್ಲಿ ಪ್ರಮುಖ ಆರೋಪಿ ಅರೆಸ್ಟ್!

0

ಚಿಕ್ಕಮಗಳೂರು: ಜಿಲ್ಲೆಯ ಟಿಪ್ಪು ನಗರದ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಹಾಕಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಟಿಪ್ಪು ನಗರದ ನಿವಾಸಿ ಅಫ್ರಿದ್ (23) ಎಂದು ಗುರುತಿಸಲಾಗಿದೆ. ಖಾಸಗಿ ಕಾರು ಶೋರೂಮ್‌ನಲ್ಲಿ ಕೆಲಸ ಮಾಡುತ್ತಿದ್ದ ಅಫ್ರಿದ್, ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್‌ಸ್ಟಾಗ್ರಾಂ ಖಾತೆಯನ್ನು ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಇದೇ ಖಾತೆಯ ಮೂಲಕ ವಿವಾದಾತ್ಮಕ ವಿಡಿಯೋವನ್ನು ಹಂಚಿಕೊಂಡಿದ್ದ ಆರೋಪ ಆತನ ಮೇಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಫ್ರಿದ್ ಹಾಗೂ ಮತ್ತೊಬ್ಬ ಆರೋಪಿ ರೋಷನ್ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ:

ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವಿವಾದಾತ್ಮಕ ವಿಡಿಯೋವನ್ನು ಸೃಷ್ಟಿಸಿ ಪೋಸ್ಟ್ ಮಾಡಿದವರಷ್ಟೇ ಅಲ್ಲದೆ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದವರು ಹಾಗೂ ವಾಟ್ಸಾಪ್, ಇನ್‌ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿಕೊಂಡವರ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಇತ್ತೀಚೆಗೆ ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಸುಮಾರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ನಿರ್ಮಿಸಲಾಗಿತ್ತು. ಈ ಕಟೌಟ್‌ ಹಿನ್ನೆಲೆಯಲ್ಲಿಟ್ಟು ಪಾಕಿಸ್ತಾನದ ‘ಮುಜಾಹಿದ್’ ಬೆಂಬಲಿತ ಹಾಗೂ ದೇಶವಿರೋಧಿ ಧಾಟಿಯ ಹಾಡನ್ನು ಅಳವಡಿಸಿ ವಿಡಿಯೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು ಎನ್ನಲಾಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಘಟನೆ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ವಿಡಿಯೋ ಹರಡುವಿಕೆಯಲ್ಲಿ ಭಾಗಿಯಾಗಿರುವ ಇತರರ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಘಟನೆ ರಾಜ್ಯ ರಾಜಕಾರಣದಲ್ಲೂ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ಇಂತಹ ಘಟನೆಗಳಿಗೆ ಅವಕಾಶ ಸಿಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಈ ನಡುವೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಚಿಕ್ಕಮಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ನಿಗಾ ವಹಿಸಿದ್ದಾರೆ.

ಬೆಂಗಳೂರಿನಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್; ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್ ಸವಾರನಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಸಾವು!

0

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಹಿಂಬದಿಯಿಂದ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 33 ವರ್ಷದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ವಿಜ್ಞಾನ ನಗರದಲ್ಲಿ ನಡೆದಿದೆ.

ಮೃತರನ್ನು ನವೀನ್ (33) ಎಂದು ಗುರುತಿಸಲಾಗಿದೆ. ಕಗ್ಗದಾಸಪುರ ಮುಖ್ಯ ರಸ್ತೆಯ ವಿಜ್ಞಾನ ನಗರ ಸಿಗ್ನಲ್‌ನಲ್ಲಿ ನಿನ್ನೆ ಬೆಳಗ್ಗೆ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

ನವೀನ್ ಅವರು ಬೈಕ್‌ನಲ್ಲಿ ಸಿಗ್ನಲ್‌ನಲ್ಲಿ ನಿಂತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಏಕಾಏಕಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನವೀನ್ ಬೈಕ್‌ನಿಂದ ಸುಮಾರು 50 ಅಡಿ ದೂರಕ್ಕೆ ಹಾರಿ ಬಿದ್ದಿದ್ದಾರೆ ಎನ್ನಲಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ನವೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ಕಟಿಂಗ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪಘಾತದ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಜೀವನ್ ಭೀಮಾನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ 63 ವರ್ಷದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅಪಘಾತದ ಸಂಪೂರ್ಣ ಮಾಹಿತಿ ಹಾಗೂ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

ಸರ್ವರ್ ಕೈಕೊಟ್ಟು ಅನ್ನಭಾಗ್ಯ ಅಕ್ಕಿಗೆ ಪರದಾಟ; ಬೆಳಗ್ಗೆಯಿಂದ ಕಾದು ಕಾದು ಹೈರಾಣಾದ ಫಲಾನುಭವಿಗಳು!

0

ಗದಗ: ಅನ್ನಭಾಗ್ಯ ಯೋಜನೆಯಡಿ ಪಡಿತರ ಅಕ್ಕಿ ಪಡೆಯಲು ಬಂದ ಫಲಾನುಭವಿಗಳು ಸರ್ವರ್ ಸಮಸ್ಯೆಯಿಂದ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಪರದಾಡಿದ ಘಟನೆ ಗದಗ ನಗರದಲ್ಲಿ ನಡೆದಿದೆ.

ನಗರದ ಎಪಿಎಂಸಿ ಯಾರ್ಡ್‌ನಲ್ಲಿರುವ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ಫಲಾನುಭವಿಗಳು ಪಡಿತರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ಆದರೆ ಸರ್ವರ್ ಸಮಸ್ಯೆಯಿಂದ ವಿತರಣೆ ಪ್ರಕ್ರಿಯೆ ಆರಂಭವಾಗದೆ, ಬೆಳಗ್ಗೆಯಿಂದ ಸುಮಾರು ಮೂರು ಗಂಟೆಗಳ ಕಾಲ ಕಾದು ನಿಲ್ಲುವಂತಾಯಿತು.

ಅಕ್ಕಿ ಪಡೆಯುವ ನಿರೀಕ್ಷೆಯಲ್ಲಿ ಬಂದ ವೃದ್ಧರು, ಮಹಿಳೆಯರು ಸೇರಿದಂತೆ ನೂರಾರು ಫಲಾನುಭವಿಗಳು ಬಿಸಿಲಿನಲ್ಲಿಯೇ ಸರತಿ ಸಾಲಿನಲ್ಲಿ ನಿಂತು ತಮ್ಮ ಸರದಿ ಬರುವುದನ್ನು ಕಾಯಬೇಕಾಯಿತು. ಅಂಗಡಿಯ ಮುಂದೆ ಜನದಟ್ಟಣೆ ಹೆಚ್ಚಾಗಿದ್ದರೂ ಸರ್ವರ್ ಸಮಸ್ಯೆ ಬಗೆಹರಿಯದ ಕಾರಣ ಫಲಾನುಭವಿಗಳಲ್ಲಿ ಅಸಮಾಧಾನ ಹೆಚ್ಚಾಯಿತು.

ಕೈಯಲ್ಲಿ ಚೀಲ; ಎದುರು ಸರ್ವರ್ ಸಮಸ್ಯೆ!

ಪಡಿತರ ಅಕ್ಕಿ ಪಡೆಯಲು ಚೀಲ ಹಿಡಿದುಕೊಂಡು ಬಂದಿದ್ದ ಫಲಾನುಭವಿಗಳು ಸರ್ವರ್ ಯಾವಾಗ ಸರಿಯಾಗುತ್ತದೆ ಎಂದು ಕಾದು ಕುಳಿತ ದೃಶ್ಯ ಕಂಡುಬಂತು. ಕೆಲವರು ಹಲವು ಗಂಟೆಗಳ ಕಾಲ ಕಾಯ್ದರೂ ಪಡಿತರ ಪಡೆಯಲು ಸಾಧ್ಯವಾಗದೆ ನಿರಾಸೆಯಿಂದ ಮನೆಗೆ ಮರಳುವ ಸ್ಥಿತಿ ನಿರ್ಮಾಣವಾಯಿತು.

ಗದಗ ಜಿಲ್ಲೆಯಾದ್ಯಂತ ಇದೇ ರೀತಿಯ ಸರ್ವರ್ ಸಮಸ್ಯೆ ಎದುರಾಗಿದೆ ಎಂದು ಫಲಾನುಭವಿಗಳು ದೂರಿದರು. ಪ್ರತಿ ತಿಂಗಳು ಪಡಿತರಕ್ಕಾಗಿ ನ್ಯಾಯಬೆಲೆ ಅಂಗಡಿಗೆ ಬರುವ ಬಡ ಕುಟುಂಬಗಳು ತಾಂತ್ರಿಕ ಸಮಸ್ಯೆಯಿಂದ ಪದೇಪದೇ ತೊಂದರೆ ಅನುಭವಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದುಡಿಮೆ ಬಿಟ್ಟು ಪಡಿತರಕ್ಕಾಗಿ ಕಾಯುವ ಸ್ಥಿತಿ:

ದಿನಗೂಲಿ ಕೆಲಸವನ್ನೇ ನಂಬಿಕೊಂಡು ಜೀವನ ನಡೆಸುವ ಅನೇಕ ಕುಟುಂಬಗಳ ಸದಸ್ಯರು ಬೆಳಗ್ಗೆಯೇ ಕೆಲಸಕ್ಕೆ ತೆರಳುವ ಬದಲು ಪಡಿತರಕ್ಕಾಗಿ ಸರತಿ ಸಾಲಿನಲ್ಲಿ ನಿಲ್ಲಬೇಕಾಯಿತು. ಗಂಟೆಗಟ್ಟಲೆ ಕಾಯಬೇಕಾದ ಕಾರಣ ಆ ದಿನದ ದುಡಿಮೆಯೂ ಕೈತಪ್ಪುವ ಆತಂಕ ಫಲಾನುಭವಿಗಳಲ್ಲಿದೆ.

“ಮನೆಯಲ್ಲಿ ಅಕ್ಕಿ ಖಾಲಿಯಾಗಿದೆ. ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದೇವೆ. ಬೆಳಗ್ಗೆಯಿಂದ ಬಂದು ನಿಂತಿದ್ದರೂ ಸರ್ವರ್ ಸಮಸ್ಯೆಯಿಂದ ಅಕ್ಕಿ ಸಿಗುತ್ತಿಲ್ಲ” ಎಂದು ಫಲಾನುಭವಿಗಳು ಅಳಲು ತೋಡಿಕೊಂಡರು.

ಆಹಾರ ಇಲಾಖೆ ವಿರುದ್ಧ ಆಕ್ರೋಶ:

ಸರ್ವರ್ ಸಮಸ್ಯೆ ಪ್ರತಿಬಾರಿಯೂ ಫಲಾನುಭವಿಗಳನ್ನೇ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದು, ಆಹಾರ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸಿದರು.

ತಾಂತ್ರಿಕ ಸಮಸ್ಯೆ ಇದ್ದಲ್ಲಿ ಅದನ್ನು ಶೀಘ್ರ ಬಗೆಹರಿಸಿ, ಪಡಿತರ ವಿತರಣೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಬಡವರು, ವೃದ್ಧರು ಮತ್ತು ಮಹಿಳೆಯರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ತಪ್ಪಿಸಬೇಕು ಎಂದು ಒತ್ತಾಯಿಸಿದರು.

ಪಡಿತರ ಪಡೆಯಲು ಬರುವ ಫಲಾನುಭವಿಗಳಿಗೆ ಅನಗತ್ಯ ತೊಂದರೆಯಾಗದಂತೆ ಸರ್ವರ್ ಸಮಸ್ಯೆಯನ್ನು ಕೂಡಲೇ ಬಗೆಹರಿಸಿ, ಬಾಕಿ ಇರುವ ಪಡಿತರವನ್ನು ಸಮರ್ಪಕವಾಗಿ ವಿತರಿಸಬೇಕು. ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ತೊಂದರೆಯಾಗದಂತೆ ಆಹಾರ ಇಲಾಖೆ ಅಧಿಕಾರಿಗಳು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

Kodagu Rain: ಕಾವೇರಿ ತವರು ಕೊಡಗಿನಲ್ಲಿ ಧಾರಾಕಾರ ಮಳೆ; ತ್ರಿವೇಣಿ ಸಂಗಮ ಜಲಾವೃತ

0

ಮಡಿಕೇರಿ: ರಾಜ್ಯದ ಕೆಲವೆಡೆ ಮಳೆ ಕೊರತೆ ಎದುರಾಗಿರುವ ನಡುವೆ ಕಾವೇರಿಯ ತವರು ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ.

ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಭಾಗಮಂಡಲ ಹಾಗೂ ಬ್ರಹ್ಮಗಿರಿ ತಪ್ಪಲಿನಲ್ಲಿ ನಿರಂತರ ಮಳೆಯಾಗುತ್ತಿರುವ ಪರಿಣಾಮ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಪವಿತ್ರ ತ್ರಿವೇಣಿ ಸಂಗಮ ಹಾಗೂ ಸಮೀಪದ ಉದ್ಯಾನವನ ಈ ಮಳೆಗಾಲದಲ್ಲಿ ಮೂರನೇ ಬಾರಿಗೆ ಸಂಪೂರ್ಣ ಜಲಾವೃತಗೊಂಡಿದೆ.

ಹಾರಂಗಿ ಜಲಾಶಯಕ್ಕೂ ಹೆಚ್ಚಿದ ಒಳಹರಿವು:

ಜಿಲ್ಲೆಯ ಹಾರಂಗಿ ಜಲಾನಯನ ಪ್ರದೇಶದಲ್ಲೂ ವ್ಯಾಪಕ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಸೋಮವಾರ ರಾತ್ರಿಯಿಂದ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಸಿನ ಮಳೆ ಮುಂದುವರಿದಿದೆ.

ನಿರಂತರ ಮಳೆಯಿಂದಾಗಿ ನದಿ ಪಾತ್ರದ ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ನದಿ ಪಾತ್ರದ ಜನರು ಹಾಗೂ ಪ್ರವಾಸಿಗರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಕಾಫಿ, ಮೆಣಸು ಬೆಳೆಗಾರರಲ್ಲಿ ಆತಂಕ:

ಇನ್ನು ಕೊಡಗಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಕಾಫಿ, ಮೆಣಸು ಸೇರಿದಂತೆ ಹಲವು ಬೆಳೆಗಳ ಮೇಲೂ ಪರಿಣಾಮ ಬೀರುವ ಆತಂಕ ರೈತರಲ್ಲಿ ಮೂಡಿದೆ.

ನಿರಂತರ ಮಳೆಯಿಂದ ಕಾಫಿ ತೋಟಗಳಲ್ಲಿರುವ ಹೂವು ಹಾಗೂ ಕಾಯಿಗಳು ಉದುರುವ ಸಾಧ್ಯತೆ ಇದ್ದು, ಇದರಿಂದ ಇಳುವರಿ ಮೇಲೆ ಪರಿಣಾಮ ಬೀರುವ ಭೀತಿ ಬೆಳೆಗಾರರನ್ನು ಕಾಡುತ್ತಿದೆ.

ಒಂದೆಡೆ ರಾಜ್ಯದಲ್ಲಿ ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆ ಕುರಿತು ಚರ್ಚೆಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ಕೊಡಗಿನಲ್ಲಿ ವರುಣನ ಅಬ್ಬರದಿಂದ ಕಾವೇರಿ ಉಕ್ಕಿ ಹರಿಯುತ್ತಿರುವುದು ಗಮನ ಸೆಳೆದಿದೆ.

ಕರಾವಳಿಗೆ ಇಂದು ಸರ್ಕಾರಿ ರಜೆ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಈದ್ ಮಿಲಾದ್ ಸಂಭ್ರಮ

0

ಬೆಂಗಳೂರು: ಈದ್ ಮಿಲಾದ್‌ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದು  ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಈದ್ ಮಿಲಾದ್‌ ಆಚರಣೆ ಆಗಸ್ಟ್ 25ರಂದು ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಜೆ ದಿನಾಂಕದಲ್ಲಿ ಬದಲಾವಣೆ ಮಾಡಿದೆ.

ರಾಜ್ಯದಾದ್ಯಂತ ಈದ್ ಮಿಲಾದ್‌ ಹಬ್ಬದ ಪ್ರಯುಕ್ತ ಆಗಸ್ಟ್ 26ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿತ್ತು. ಆದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯ ಪರಿಸ್ಥಿತಿ ಹಾಗೂ ಹಬ್ಬದ ಆಚರಣೆಯ ದಿನಾಂಕವನ್ನು ಪರಿಗಣಿಸಿ ಒಂದು ದಿನ ಮುಂಚಿತವಾಗಿ ರಜೆ ನೀಡಲಾಗಿದೆ.

ಜಿಲ್ಲಾಧಿಕಾರಿಗಳ ಮನವಿ ಪರಿಗಣಿಸಿದ ಸರ್ಕಾರ;

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್‌ ಆಚರಣೆಯನ್ನು ಆಗಸ್ಟ್ 25ರಂದು ನಡೆಸಲಾಗುತ್ತಿರುವ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಜೆ ದಿನಾಂಕ ಬದಲಾಯಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು.

ಜಿಲ್ಲಾಧಿಕಾರಿಗಳ ಮನವಿಯನ್ನು ಪರಿಗಣಿಸಿದ ರಾಜ್ಯ ಸರ್ಕಾರ, ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದೇ ಈ ಎರಡು ಜಿಲ್ಲೆಗಳಿಗೆ ಸಾರ್ವತ್ರಿಕ ರಜೆ ಘೋಷಿಸಿದೆ.

ಉಳಿದ ಜಿಲ್ಲೆಗಳಲ್ಲಿ ಆ.26ರಂದು ರಜೆ:

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಆಗಸ್ಟ್ 26ರಂದು ಈದ್ ಮಿಲಾದ್‌ ಸಾರ್ವತ್ರಿಕ ರಜೆ ಮುಂದುವರಿಯಲಿದೆ.

ಹೀಗಾಗಿ ಕರಾವಳಿಯ ಎರಡು ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಇಂದು ಸರ್ಕಾರಿ ಕಚೇರಿಗಳು ಸೇರಿದಂತೆ ರಜೆಗೆ ಒಳಪಡುವ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಅನ್ವಯವಾಗಲಿದೆ.

ಕಪ್ಪತಗುಡ್ಡದ ಮಡಿಲಲ್ಲಿ ಕವಿಗಳ ಸಮಾಗಮ; ಕವಿತೆಗಳ ಕಲರವ!

0

ವಿಜಯಸಾಕ್ಷಿ ಸುದ್ದಿ, ಗದಗ: ಮನುಷ್ಯ ಪರಿಸರದ ಕೂಸು. ಪ್ರಕತಿಯ ಎಲ್ಲ ಅಂಶಗಳನ್ನು ಒಳಗೊಂಡೇ ಮಾನವ ರೂಪುಗೊಂಡಿದ್ದು, ಪರಿಸರದಲ್ಲಿನ ಪ್ರತಿಯೊಂದು ಚಟುವಟಿಕೆಯ ಪ್ರಭಾವವೂ ಮನುಷ್ಯನ ದೇಹದ ಮೇಲಾಗುತ್ತದೆ. ಹೀಗಾಗಿ ಕವಿ ಸದಾ ಪರಿಸರ ಪ್ರೇಮ ಬೆಳೆಸಿಕೊಂಡು, ತನ್ನ ಕವಿತೆಗಳ ಮೂಲಕ ಪ್ರಕೃತಿಯ ಋಣ ತೀರಿಸುವ ಪ್ರಯತ್ನ ಮಾಡಬೇಕು. ಕವಿಯಲ್ಲಿ ಪರಿಸರ ಪ್ರಜ್ಞೆ ಸದಾ ಜಾಗೃತವಾಗಿರಬೇಕು ಹಾಗೂ ಅದು ಕಾವ್ಯದಲ್ಲಿ ಪ್ರತಿಬಿಂಬಿಸಬೇಕು ಎಂದು ಸಾಹಿತಿ ಡಿ.ವಿ. ಬಡಿಗೇರ ಹೇಳಿದರು.

ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ತಾಲೂಕುಗಳ ಕನ್ನಡ ಸಾಹಿತ್ಯ ಪರಿಷತ್ತುಗಳ ಆಶ್ರಯದಲ್ಲಿ ಕಪ್ಪತಗುಡ್ಡದ ಸೆರಗಿನ ದೇವರೆಡ್ಡಿ ಅಗಸನಕೊಪ್ಪ ಕೃಷಿ ಆಶ್ರಮದಲ್ಲಿ ನಡೆದ ಜಿಲ್ಲಾ ಮಟ್ಟದ ಕವಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಕೃತಿಯ ಆರಾಧನೆಯನ್ನು ಎಲ್ಲ ಕವಿಗಳು ಮಾಡಿಕೊಂಡು ಬಂದಿದ್ದಾರೆ. ಕುವೆಂಪು ಹಾಗೂ ಬೇಂದ್ರೆ ಅವರ ಕಾವ್ಯಗಳಲ್ಲಿ ಪ್ರಕೃತಿ ಪ್ರೇಮ ಹಾಸುಹೊಕ್ಕಾಗಿದೆ. ಪ್ರಕೃತಿಯಲ್ಲಿ ನಿತ್ಯ ನಡೆಯುವ ಕ್ರಿಯೆಗಳನ್ನು ಪ್ರತಿಮೆ ಹಾಗೂ ರೂಪಕಗಳನ್ನಾಗಿಸಿಕೊಂಡು ಅವರು ಅದ್ಭುತ ಕಾವ್ಯವನ್ನು ಸೃಷ್ಟಿಸಿದ್ದಾರೆ ಎಂದು ಬಡಿಗೇರ ತಿಳಿಸಿದರು. ಇದೇ ಸಂದರ್ಭದಲ್ಲಿ ಕುವೆಂಪು ಅವರ ‘ಪಕ್ಷಿಕಾಶಿ’ ಕವಿತೆಗಳನ್ನು ವಾಚಿಸಿದರು.

ಸಾನ್ನಿಧ್ಯ ವಹಿಸಿದ್ದ ಡೋಣಿ ನಂದಿವೇರಿ ಮಠದ ಶ್ರೀ ಶಿವಕುಮಾರ ಸ್ವಾಮಿಗಳು ಮಾತನಾಡಿ, ಕಾವ್ಯ, ಸಾಹಿತ್ಯ ಹಾಗೂ ಕವನಗಳು ಕವಿಯ ಒಳತುಡಿತದಿಂದ ರೂಪುಗೊಳ್ಳುತ್ತವೆ. ಪರಿಸರದಿಂದ ದೊರೆಯುವ ಏಕಾಂತತೆ ಕವನ ರಚನೆಗೆ ಪೂರಕವಾಗಿರುತ್ತದೆ ಎಂದರು.

ಮನುಷ್ಯ ಪರಿಸರದಿಂದ ದೂರವಾಗುತ್ತಾ ರೋಗಗಳನ್ನು ಹತ್ತಿರ ಮಾಡಿಕೊಳ್ಳುತ್ತಿದ್ದಾನೆ. ಕವಿಗಳು ಕಪ್ಪತಗುಡ್ಡದ ಪರಿಸರದ ಮಡಿಲಿಗೆ ಆಗಮಿಸಿರುವುದು ತವರುಮನೆಗೆ ಬಂದಂತಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ಹಿರಿಯ ಕವಿಗಳು ಕಿರಿಯ ಕವಿಗಳನ್ನು ಪ್ರೋತ್ಸಾಹಿಸುವ ಮೂಲಕ ಕಾವ್ಯವು ಹುಲುಸಾಗಿ ಹಾಗೂ ಸತ್ವಯುತವಾಗಿ ಬೆಳೆಯಲು ಸಹಕರಿಸಬೇಕು ಎಂದರು.

ಈ ಹಿನ್ನೆಲೆಯಲ್ಲಿ ಕವಿಗಳ ಸಮಾಗಮದ ಉದ್ದೇಶವನ್ನು ಈ ಸಮ್ಮೇಳನ ಹೊಂದಿದೆ. ಯುವ ಕವಿಗಳು ಹೆಚ್ಚು ಓದು ಹಾಗೂ ಚರ್ಚೆಗಳ ಮೂಲಕ ಕಾವ್ಯ ಪರಂಪರೆಯನ್ನು ಮುಂದುವರಿಸಬೇಕು ಎಂದು ಹೇಳಿದರು.

ವಲಯ ಅರಣ್ಯಾಧಿಕಾರಿ ಮಂಜುನಾಥ ಮೇಗಲಮನಿ ಕಪ್ಪತಗುಡ್ಡದ ಜೀವವೈವಿಧ್ಯತೆ ಕುರಿತು ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಮಾಜಿ ಸಚಿವ ಎಸ್.ಎಸ್. ಪಾಟೀಲ, ಚಂದ್ರಶೇಖರ ವಸ್ತ್ರದ, ಡಾ. ಬಿ.ಜಿ. ಪಾಟೀಲ, ದೇವರೆಡ್ಡಿ ಅಗಸನಕೊಪ್ಪ, ಸುಶೀಲಮ್ಮ ಅಗಸನಕೊಪ್ಪ, ರಮಾಕಾಂತ ಕಮತಗಿ, ಎಂ.ಜಿ. ಗಚ್ಚಣ್ಣವರ, ಸುರೇಶ ಕುಂಬಾರ, ಡಿ.ಎಲ್. ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಿಶೋರಬಾಬು ಸ್ವಾಗತಿಸಿದರು. ಈಶ್ವರ ಮೆಡ್ಲೇರಿ ನಿರೂಪಿಸಿದರು. ಡಿ.ಎಸ್. ಬಾಪುರಿ ವಂದಿಸಿದರು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಕವಿಗಳು ಕವಿ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಧ್ವಜಾರೋಹಣ ಹಾಗೂ ಭುವನೇಶ್ವರಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.

ಕೂಲಿಕಾರ್ಮಿಕರಿಗೆ ಆರೋಗ್ಯ ತಪಾಸಣೆ; ಕೆಮ್ಮಣ್ಣುಗುಂಡಿ ಕೆರೆ ಕಾಮಗಾರಿಗೆ ಚಾಲನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಶಿರಹಟ್ಟಿ ತಾಲ್ಲೂಕಿನ ವಡವಿ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ನಡೆಸಿ, ಕೆಮ್ಮಣ್ಣುಗುಂಡಿ ಕೆರೆಯಲ್ಲಿ ವಿ.ಬಿ.ಜಿ.-ಆರ್‌ಎಎಂಜಿ (VBG-RAMG) ಯೋಜನೆಯಡಿ ಕಾಮಗಾರಿಗೆ ಚಾಲನೆ ನೀಡಲಾಯಿತು.

ಸರ್ಕಾರದ ಆದೇಶದಂತೆ ಯೋಜನೆಯಡಿ ಪುರುಷರು ಹಾಗೂ ಮಹಿಳೆಯರಿಗೆ ಸಮಾನವಾಗಿ ದಿನಕ್ಕೆ ₹382 ಕೂಲಿ ನೀಡಲಾಗುತ್ತಿದ್ದು, ಪ್ರತಿ ಕುಟುಂಬಕ್ಕೆ 125 ದಿನಗಳ ಕೆಲಸ ಒದಗಿಸಲಾಗುತ್ತಿದೆ. ಶಿರಹಟ್ಟಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಅವರ ನಿರ್ದೇಶನದಂತೆ ಕಾಮಗಾರಿ ಆರಂಭಿಸಲಾಯಿತು.

ಯೋಜನೆಯಡಿ ಕೆಲಸ ಪಡೆಯಲು ಕೂಲಿ ಕಾರ್ಮಿಕರಿಂದ ನಮೂನೆ-6ರಲ್ಲಿ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಅರ್ಜಿ ಸಲ್ಲಿಸಿದವರಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ.

ಕಾಮಗಾರಿ ಆರಂಭಕ್ಕೂ ಮುನ್ನ ಕೂಲಿ ಕಾರ್ಮಿಕರಿಗೆ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಆರೋಗ್ಯ ಸಿಬ್ಬಂದಿಗಳಾದ ಪ್ರತಿಭಾ ಸಿದ್ದರಡ್ಡಿ, ಮಾಂತೇಶ ತಿಮ್ಮಾಪೂರ ಹಾಗೂ ಆಶಾ ಕಾರ್ಯಕರ್ತೆ ನಾಗರತ್ನಾ ತಿಕ್ಕುಂಡಿ ಅವರ ನೇತೃತ್ವದಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು.

ವಡವಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಶಿರಹಟ್ಟಿ ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಪ್ರಶಾಂತ ಆರ್. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಆರೋಗ್ಯ ತಪಾಸಣೆ ಮತ್ತು ಕಾಮಗಾರಿ ಆರಂಭದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಅಭಿವೃದ್ಧಿ ಅಧಿಕಾರಿ ಎಚ್.ಟಿ. ತಳವಾರ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎ.ಎಂ. ಹೀರೆಮಠ, ಇಂಜಿನಿಯರ್ ಲಿಂಗರಾಜು ಅರಸಿಣದ, ಸಿಬ್ಬಂದಿ ಮಂಜುನಾಥ ರಾಜೂರ, ಮೇಟೆಗಳಾದ ನಾಗರಾಜ ತಂಗೋಡ, ಅಶೋಕ ದಾಸರ, ನಾಗರಾಜ ಇಟಗಿ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.