Home Blog

‘ಕ್ಲೀನ್ ಆಗಿದ್ದರೆ ಯಾಕೆ ಭಯ?’; ಇಡಿ ದಾಳಿ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ವಿರುದ್ಧ ಮುರುಗೇಶ್ ನಿರಾಣಿ ವಾಗ್ದಾಳಿ

0

ಬಾಗಲಕೋಟೆ: “ಇಡಿ ದಾಳಿ ಬಗ್ಗೆ ಭಯವಿದ್ದರೆ ಅದರ ಹಿಂದೆ ಕಾರಣವೇನು? ತಪ್ಪು ಮಾಡದೇ ಇದ್ದರೆ ಯಾಕೆ ಹೆದರಬೇಕು?” ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿ ಇಡಿ ಹಾಗೂ ಐಟಿ ದಾಳಿ ನಡೆಸುತ್ತಿದೆ. ಮುಂದೆ ನಮ್ಮ ಮೇಲೂ ದಾಳಿ ಆಗಬಹುದು ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ನಿರಾಣಿ, “ಕುಂಬಳಕಾಯಿ ಕಳ್ಳ ಎಂದರೆ ನೀವೇಕೆ ಹೆಗಲು ಮುಟ್ಟಿಕೊಳ್ಳುತ್ತೀರಿ?” ಎಂದು ಪ್ರಶ್ನಿಸಿದರು.

ಇಡಿ ಯಾವುದೇ ರಾಜಕೀಯ ಪಕ್ಷದ ಕೈಗೊಂಬೆಯಲ್ಲ. ಪೂರಕ ದಾಖಲೆಗಳು ಹಾಗೂ ದೃಢವಾದ ಸಾಕ್ಷ್ಯಗಳ ಆಧಾರದಲ್ಲಿಯೇ ತನಿಖೆ ಮತ್ತು ದಾಳಿ ನಡೆಸುತ್ತದೆ. ಕ್ಲೀನ್ ಆಗಿದ್ದರೆ ಆತಂಕಪಡುವ ಅಗತ್ಯವೇ ಇಲ್ಲ ಎಂದು ಹೇಳಿದರು.

ಪ್ರಿಯಾಂಕ್ ಖರ್ಗೆ ರಾಜಕೀಯವಾಗಿ ಉಜ್ವಲ ಭವಿಷ್ಯ ಹೊಂದಿದ್ದಾರೆ. ಹೀಗಾಗಿ ವಿವಾದಾತ್ಮಕ ಹೇಳಿಕೆಗಳ ಬದಲು ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ಕೈಗಾರಿಕೆ, ಕೃಷಿ ಮತ್ತು ಶಿಕ್ಷಣ ಕ್ಷೇತ್ರಗಳತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಆರ್‌ಎಸ್‌ಎಸ್ ಕುರಿತು ಮಾತನಾಡುವ ಮುನ್ನ ಅದರ ತತ್ವ-ಸಿದ್ಧಾಂತಗಳನ್ನು ತಿಳಿದುಕೊಳ್ಳಬೇಕು. ದಿನನಿತ್ಯ ನೆಗೆಟಿವ್ ಸುದ್ದಿಗಳಲ್ಲೇ ಕಾಣಿಸಿಕೊಳ್ಳುವ “ಪೇಪರ್ ಹುಲಿ” ಆಗಬಾರದು ಎಂದು ನಿರಾಣಿ ಕಿಡಿಕಾರಿದರು.

ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ; ಟೈರ್ ಬದಲಿಸುತ್ತಿದ್ದ ವೇಳೆ ಭೀಕರ ದುರಂತ, ಇಬ್ಬರು ಸ್ಥಳದಲ್ಲೇ ಸಾವು

0

ತುಮಕೂರು/ಧಾರವಾಡ: ರಾಜ್ಯದಲ್ಲಿ ಎರಡು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳು ನಾಲ್ವರಿಗೆ ಕಣ್ಣೀರಿನ ಮಳೆ ಸುರಿಸಿವೆ. ತುಮಕೂರಿನಲ್ಲಿ ಹೊಸ ಬೈಕ್ ಖರೀದಿಸಿದ ಮರುದಿನವೇ ಯುವಕ ಪ್ರಾಣ ಕಳೆದುಕೊಂಡಿದ್ದರೆ, ಧಾರವಾಡದಲ್ಲಿ ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಗಂಗಸಾಗರ ಕ್ರಾಸ್ ಬಳಿ ಸಂಭವಿಸಿದ ಅಪಘಾತದಲ್ಲಿ ದೊಡ್ಡಹಳ್ಳಿ ನಿವಾಸಿ 19 ವರ್ಷದ ನಂದೀಶ್ ಕುಮಾರ್ ಸಾವನ್ನಪ್ಪಿದ್ದಾರೆ. ನಿನ್ನೆಯಷ್ಟೇ ಹೊಸ ಬೈಕ್ ಖರೀದಿಸಿದ್ದ ಅವರು ಸ್ನೇಹಿತನೊಂದಿಗೆ ಮನೆಗೆ ಮರಳುತ್ತಿದ್ದ ವೇಳೆ ವೈಎನ್ ಹೊಸಕೋಟೆ ಕಡೆಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ನಂದೀಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪಾವಗಡ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದೆಡೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದ ಬಳಿ ಟೈರ್ ಬ್ಲಾಸ್ಟ್‌ನಿಂದ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಹಳೇ ತೇಗೂರು ನಿವಾಸಿ ಷಣ್ಮುಖ ಜೋಗಿ (28) ಹಾಗೂ ಉತ್ತರ ಪ್ರದೇಶ ಮೂಲದ ಸಾಗರ್ (30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕ ಟೈರ್ ಬದಲಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು, ಗರಗ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ; ಮದುವೆ ಬ್ಯಾಂಡ್ ವಾಹನಕ್ಕೆ ಲಾರಿ ಡಿಕ್ಕಿಯಾಗಿ 7 ಮಂದಿ ದುರ್ಮರಣ

0

ರಾಂಚಿ: ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ಕಲ್ಲಿದ್ದಲು ಸಾಗಿಸುತ್ತಿದ್ದ ಟ್ರಕ್ ಮತ್ತು ಪ್ರಯಾಣಿಕರ ವಾಹನದ ನಡುವೆ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ತೀವ್ರತೆಗೆ ಪ್ರಯಾಣಿಕರಿದ್ದ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತಪಟ್ಟವರೆಲ್ಲರೂ ಮದುವೆ ಸೇರಿದಂತೆ ವಿವಿಧ ಶುಭ ಸಮಾರಂಭಗಳಲ್ಲಿ ಸಂಗೀತ ವಾದನ ಮಾಡುತ್ತಿದ್ದ ಬ್ಯಾಂಡ್ ತಂಡದ ಸದಸ್ಯರು ಎಂದು ಪೊಲೀಸರು ತಿಳಿಸಿದ್ದಾರೆ.

ಹಜಾರಿಬಾಗ್ ಜಿಲ್ಲೆಯ ಬಾಲ್ಸಾಗ್ರ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ತಡರಾತ್ರಿ ತಮ್ಮ ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ರಾಜ್ರಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-23ರಲ್ಲಿ ರಾತ್ರಿ ಸುಮಾರು 12 ಗಂಟೆ ವೇಳೆಗೆ ಓವರ್‌ಟೇಕ್ ಮಾಡಲು ಮುಂದಾದ ಕಲ್ಲಿದ್ದಲು ತುಂಬಿದ್ದ ಟ್ರಕ್, ಎದುರಿನಿಂದ ಬರುತ್ತಿದ್ದ ಪ್ರಯಾಣಿಕರ ವಾಹನಕ್ಕೆ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಅಪಘಾತದ ಭೀಕರ ಶಬ್ದ ಕೇಳಿ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಹಾಗೂ ಮೃತದೇಹಗಳನ್ನು ರಾಮಗಢ ಸದರ್ ಆಸ್ಪತ್ರೆಗೆ ಸಾಗಿಸಿದರು.

ರಾಮಗಢ ಸದರ್ ಆಸ್ಪತ್ರೆಯ ಸಿವಿಲ್ ಸರ್ಜನ್ ಅನಿಲ್ ಕುಮಾರ್ ಮಾತನಾಡಿ, ಆಸ್ಪತ್ರೆಗೆ ಕರೆತರಲಾದ ಎಂಟು ಮಂದಿಯಲ್ಲಿ ಏಳು ಮಂದಿ ಮೃತಪಟ್ಟ ಸ್ಥಿತಿಯಲ್ಲೇ ಇದ್ದರು ಎಂದು ತಿಳಿಸಿದ್ದಾರೆ.

ತಲೆಗೆ ಗಂಭೀರ ಗಾಯಗೊಂಡಿದ್ದ ಮತ್ತೊಬ್ಬರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ರಾಂಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ರಾಮ ಮಂದಿರ ಕಾಣಿಕೆ ಹಣ ದುರ್ಬಳಕೆ ಪ್ರಕರಣ: ಚಂಪತ್ ರಾಯ್ ಆಪ್ತ ಸಹಾಯಕ ಸೇರಿ 8 ಮಂದಿ ಬಂಧನ

0

ಲಕ್ನೋ: ಅಯೋಧ್ಯೆಯ ಶ್ರೀರಾಮ ಮಂದಿರದ ಕಾಣಿಕೆ ಹಾಗೂ ದೇಣಿಗೆ ಹಣದ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ತನಿಖೆಯಲ್ಲಿ ವಿಶೇಷ ತನಿಖಾ ತಂಡ (SIT) ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಕರಣದಲ್ಲಿ ಹೆಸರಿಸಲಾದ ಎಂಟು ಪ್ರಮುಖ ಆರೋಪಿಗಳನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಲ್ಲಿ ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಾಯಕ ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್ ಕೂಡ ಸೇರಿದ್ದಾರೆ ಎನ್ನಲಾಗಿದೆ.

ಬಂಧಿತರಲ್ಲಿ ಟಿನ್ನು ಯಾದವ್ ಜೊತೆಗೆ ಅನುಕಲ್ಪ್ ಮಿಶ್ರಾ, ಅವಿನಾಶ್ ಶುಕ್ಲಾ, ಕರುಣೇಶ್ ಪಾಂಡೆ, ಲವ್ ಕುಶ್ ಮಿಶ್ರಾ, ರಾಮ ಶಂಕರ್ ಮಿಶ್ರಾ ಹಾಗೂ ಸುಭಾಷ್ ಶ್ರೀವಾಸ್ತವ ಸೇರಿದಂತೆ ಒಟ್ಟು ಎಂಟು ಮಂದಿ ಇದ್ದಾರೆ. ಇವರೆಲ್ಲರೂ ದೇವಸ್ಥಾನಕ್ಕೆ ಬಂದ ಕಾಣಿಕೆ ಹಾಗೂ ನಗದು ಹಣವನ್ನು ಎಣಿಸುವ ಜವಾಬ್ದಾರಿಯಲ್ಲಿದ್ದ ತಂಡದ ಸದಸ್ಯರಾಗಿದ್ದರು ಎಂದು ತಿಳಿದುಬಂದಿದೆ.

ದೇವಸ್ಥಾನದ ಒಳಾಂಗಣದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಗಳು ಹಾಗೂ ವಿಧಿವಿಜ್ಞಾನ (ಫೊರೆನ್ಸಿಕ್) ಸಾಕ್ಷ್ಯಗಳ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆ (BNS)ಯ ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಪ್ರಕರಣ ದಾಖಲಾಗಿದ ಒಂದೇ ದಿನದೊಳಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಹಗರಣಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ತನಿಖಾ ಮೂಲಗಳು ತಿಳಿಸಿವೆ. ಆದರೆ, ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅಥವಾ ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ವಿರುದ್ಧ ಇದುವರೆಗೆ ಯಾವುದೇ ಅಧಿಕೃತ ಎಫ್‌ಐಆರ್ ದಾಖಲಾಗಿಲ್ಲ.

ಈ ಪ್ರಕರಣ ಉತ್ತರ ಪ್ರದೇಶ ರಾಜಕೀಯದಲ್ಲೂ ಚರ್ಚೆಗೆ ಗ್ರಾಸವಾಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೆ ಮುನ್ನ ಹೊಸ ಸಂಚಲನ ಸೃಷ್ಟಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಹಣಕಾಸು ಸಚಿವ ಸುರೇಶ್ ಖನ್ನಾ,

ಯೋಗಿ ಆದಿತ್ಯನಾಥ್ ಸರ್ಕಾರ ಅಪರಾಧಗಳ ವಿರುದ್ಧ ಆರಂಭದಿಂದಲೂ ‘ಶೂನ್ಯ ಸಹಿಷ್ಣುತೆ’ ನೀತಿಯನ್ನು ಅನುಸರಿಸುತ್ತಿದೆ. ರಾಮ ಮಂದಿರದ ಪವಿತ್ರ ದೇಣಿಗೆ ಹಣದಲ್ಲಿ ಅಕ್ರಮ ಎಸಗಿರುವ ಯಾರನ್ನೂ ಬಿಡುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

9ನೇ ತರಗತಿ ಪಠ್ಯದಲ್ಲಿ ಚುನಾವಣಾ ಆಯೋಗದ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಸೇರ್ಪಡೆ

0

ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಸಕ್ತ ಶೈಕ್ಷಣಿಕ ವರ್ಷಕ್ಕಾಗಿ ಪ್ರಕಟಿಸಿರುವ 9ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಭಾರತೀಯ ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (Special Intensive Revision) ಪ್ರಕ್ರಿಯೆಯನ್ನು ಮೊದಲ ಬಾರಿಗೆ ವಿವರವಾಗಿ ಸೇರಿಸಲಾಗಿದೆ.

‘ಅಂಡರ್ಸ್ಟ್ಯಾಂಡಿಂಗ್ ಸೊಸೈಟಿ: ಇಂಡಿಯಾ ಆಂಡ್ ಬಿಯಾಂಡ್’ ಹೆಸರಿನ ಈ ಹೊಸ ಪಠ್ಯಪುಸ್ತಕದಲ್ಲಿ ಭಾರತೀಯ ಪ್ರಜಾಪ್ರಭುತ್ವದ ವಿವಿಧ ಅಂಶಗಳೊಂದಿಗೆ ತುರ್ತು ಪರಿಸ್ಥಿತಿ ಹಾಗೂ ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ವಿಶೇಷ ಸ್ಥಾನ ನೀಡಲಾಗಿದೆ.

‘ಚುನಾವಣೆಗಳು’ ಎಂಬ ಅಧ್ಯಾಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಕುರಿತು ವಿವರಿಸಲಾಗಿದ್ದು, ಯಾವುದೇ ಅರ್ಹ ನಾಗರಿಕ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹ ವ್ಯಕ್ತಿಗಳು ಪಟ್ಟಿಯಲ್ಲಿ ಸೇರದಂತೆ ನೋಡಿಕೊಳ್ಳುವುದು ಈ ಪ್ರಕ್ರಿಯೆಯ ಮುಖ್ಯ ಉದ್ದೇಶ ಎಂದು ತಿಳಿಸಲಾಗಿದೆ.

ವಿಶೇಷವಾಗಿ 18 ವರ್ಷ ಪೂರೈಸಿದರೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸದ ಯುವ ಮತದಾರರನ್ನು ಗುರುತಿಸಿ ಸೇರ್ಪಡೆಗೊಳಿಸುವಲ್ಲಿ ಈ ಪರಿಷ್ಕರಣೆ ಸಹಕಾರಿಯಾಗುತ್ತದೆ. ಜೊತೆಗೆ ಮೃತಪಟ್ಟವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ನಕಲಿ ಹೆಸರುಗಳು ಹಾಗೂ ಪತ್ತೆಯಾಗದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ವ್ಯವಸ್ಥೆಯನ್ನೂ ಪಠ್ಯದಲ್ಲಿ ವಿವರಿಸಲಾಗಿದೆ.

ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಪರಿಶೀಲನೆ ನಡೆಸಿದ ಬಳಿಕವೇ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸುತ್ತಿದೆ ಎಂಬುದನ್ನೂ ವಿದ್ಯಾರ್ಥಿಗಳಿಗೆ ಪರಿಚಯಿಸಲಾಗಿದೆ.

ಇದೇ ವೇಳೆ, 2024ರ ಲೋಕಸಭಾ ಚುನಾವಣೆಯ ವೇಳೆಗೆ ದೇಶದಲ್ಲಿ 96.8 ಕೋಟಿಗೂ ಹೆಚ್ಚು ನೋಂದಾಯಿತ ಮತದಾರರಿದ್ದರು ಎಂಬ ಅಂಕಿ-ಅಂಶವನ್ನು ನೀಡಲಾಗಿದೆ. ಭಾರತದಲ್ಲಿ ಮಹಿಳೆಯರಿಗೆ ಆರಂಭದಿಂದಲೇ ಸಮಾನ ಮತದಾನದ ಹಕ್ಕು ದೊರೆತಿರುವುದು, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಹಾಗೂ ಗುಜರಾತ್ ಮತ್ತು ಮಹಾರಾಷ್ಟ್ರದ ಮಹಿಳಾ ಸ್ನೇಹಿ ಪಂಚಾಯತ್‌ಗಳ ಉದಾಹರಣೆಗಳನ್ನೂ ಪಠ್ಯದಲ್ಲಿ ಸೇರಿಸಲಾಗಿದೆ.

ಇದಲ್ಲದೆ, ಎಲೆಕ್ಟ್ರಾನಿಕ್ ಮತಯಂತ್ರಗಳು (ಇವಿಎಂ), ಮತದಾರರು ಪರಿಶೀಲಿಸಬಹುದಾದ ಪೇಪರ್ ಆಡಿಟ್ ಟ್ರಯಲ್ (ವಿವಿಪ್ಯಾಟ್), ಮಾದರಿ ನೀತಿ ಸಂಹಿತೆ ಹಾಗೂ ಮತದಾರರ ಜಾಗೃತಿ ಅಭಿಯಾನಗಳ ಕುರಿತು ಸಹ ಹೊಸ ಪಠ್ಯದಲ್ಲಿ ಸಮಗ್ರ ಮಾಹಿತಿ ನೀಡಲಾಗಿದೆ.

ನನ್ನ ಮಗಳು ತಪ್ಪಿತಸ್ಥಳಾದರೆ ಅದೇ ಕೋಟೆಯಿಂದ ತಳ್ಳಿಬಿಡಿ: ಸಿಯಾ ಪೋಷಕರ ಆಕ್ರೋಶ

0

ಮುಂಬೈ: ಟ್ರೆಕ್ಕಿಂಗ್ ನೆಪದಲ್ಲಿ ಭಾವಿ ಪತಿ ಕೇತನ್ ಅಗರ್ವಾಲ್ ರನ್ನು ಕಂದಕಕ್ಕೆ ತಳ್ಳಿ ಕೊಲೆ ಮಾಡಿದ ಆರೋಪ ಎದುರಿಸುತ್ತಿರುವ ಸಿಯಾ ಗೋಯಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪೋಷಕರು ಭಾವನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.

ತಮ್ಮ ಮಗಳು ತಪ್ಪಿತಸ್ಥಳಾಗಿರುವುದು ಸಾಬೀತಾದರೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿರುವ ಅವರು, ಕೇತನ್ ಅವರನ್ನು ತಳ್ಳಿದ ಅದೇ ಸ್ಥಳದಿಂದ ಸಿಯಾಳನ್ನು ತಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಿಯಾಳ ತಾಯಿ ಪೂಜಾ ಗೋಯಲ್, ಮದುವೆ ವಿಚಾರದಲ್ಲಿ ತಮ್ಮ ಮಗಳು ಯಾವುದೇ ಅಸಮಾಧಾನ ವ್ಯಕ್ತಪಡಿಸಿರಲಿಲ್ಲ ಎಂದು ಹೇಳಿದ್ದಾರೆ.

ಸಿಯಾ ಮತ್ತು ಕೇತನ್ ಅವರ ವಿವಾಹ ಇದೇ ವರ್ಷದ ನವೆಂಬರ್‌ನಲ್ಲಿ ರಾಜಸ್ಥಾನದ ಉದಯಪುರ ಅರಮನೆಯಲ್ಲಿ ನಡೆಯಬೇಕಾಗಿತ್ತು. ಈ ದುರ್ಘಟನೆ ಕೇತನ್ ಕುಟುಂಬಕ್ಕೆ ಮಾತ್ರವಲ್ಲ, ನಮ್ಮ ಕುಟುಂಬಕ್ಕೂ ತೀವ್ರ ನೋವುಂಟು ಮಾಡಿದೆ ಎಂದು ಅವರು ಹೇಳಿದ್ದಾರೆ.

“ಕೇತನ್ ಕುಟುಂಬಕ್ಕಿಂತಲೂ ಹೆಚ್ಚು ನೋವು ನಮ್ಮ ಕುಟುಂಬ ಅನುಭವಿಸುತ್ತಿದೆ. ಆರೋಪಿ ನನ್ನ ಮಗಳಾಗಿದ್ದರೂ, ತಪ್ಪಿತಸ್ಥಳಾಗಿದ್ದರೆ ಆಕೆಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು. ಕೇತನ್ ಅವರನ್ನು ತಳ್ಳಿದ ಸ್ಥಳದಿಂದಲೇ ಅವಳನ್ನೂ ತಳ್ಳಬೇಕು” ಎಂದು ಪೂಜಾ ಗೋಯಲ್ ಹೇಳಿದ್ದಾರೆ.

ಸಿಯಾಳ ತಂದೆ ಪ್ರವೀಣ್ ಗೋಯಲ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದು, “ಆರೋಪಿ ನನ್ನ ಸ್ವಂತ ಮಗಳೇ ಆಗಿದ್ದರೂ, ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕು. ಕೇತನ್ ಅವರನ್ನು ತಳ್ಳಿದ ಅದೇ ಕೋಟೆಯಿಂದ ಅವಳನ್ನೂ ತಳ್ಳಬೇಕು” ಎಂದು ಹೇಳಿದ್ದಾರೆ.

ಈ ಘಟನೆಯನ್ನು ಇನ್ನೂ ನಂಬಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿರುವ ಅವರು, ಕೇತನ್ ಅವರನ್ನು ತಮ್ಮ ಮಗನಂತೆಯೇ ಪ್ರೀತಿಸುತ್ತಿದ್ದೆವು ಎಂದಿದ್ದಾರೆ. “ಕೇತನ್ ತಂದೆ-ತಾಯಿ ತಮ್ಮ ಮಗನನ್ನು ಕಳೆದುಕೊಂಡು ದುಃಖದಲ್ಲಿದ್ದಾರೆ. ಅದೇ ರೀತಿ ನಾವು ಕೂಡ ಅಪಾರ ನೋವಿನಲ್ಲಿದ್ದೇವೆ. ಒಬ್ಬ ಒಳ್ಳೆಯ ಹುಡುಗನನ್ನು ಕಳೆದುಕೊಂಡಿರುವುದು ನಮ್ಮೆಲ್ಲರಿಗೂ ದೊಡ್ಡ ಆಘಾತ” ಎಂದು ಭಾವುಕರಾಗಿ ಹೇಳಿದ್ದಾರೆ.

ಇದೇ ವೇಳೆ, ಚೇತನ್ ಎಂಬ ವ್ಯಕ್ತಿಯ ಬಗ್ಗೆ ತಮಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಸಿಯಾ ಪೋಷಕರು ಸ್ಪಷ್ಟಪಡಿಸಿದ್ದಾರೆ. ನಿಶ್ಚಿತಾರ್ಥವಾದ ಬಳಿಕ ಸಿಯಾ ಕೇತನ್ ಜೊತೆಯೇ ಮಾತನಾಡುತ್ತಿದ್ದಳು. ಚೇತನ್ ಯಾರು ಎಂಬುದೇ ಗೊತ್ತಿರಲಿಲ್ಲ. ಆತನನ್ನು ನಾವು ಎಂದಿಗೂ ನೋಡಿಲ್ಲ, ಮಾತನಾಡಿಲ್ಲ ಹಾಗೂ ಆತ ನಮ್ಮ ಮನೆಗೂ ಬಂದಿರಲಿಲ್ಲ ಎಂದು ತಿಳಿಸಿದ್ದಾರೆ.

ಕೇತನ್ ಕುಟುಂಬ ಸಿಯಾಳನ್ನು ತಮ್ಮ ಮನೆಯ ಮಗಳಂತೆ ನೋಡಿಕೊಳ್ಳುತ್ತಿತ್ತು. ಆಕೆಯ ಹುಟ್ಟುಹಬ್ಬ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಅವರು ಅದ್ಧೂರಿಯಾಗಿ ಆಯೋಜಿಸಿದ್ದರು. ಮದುವೆ ಸಿದ್ಧತೆಗಳು ಸುಗಮವಾಗಿ ನಡೆಯುತ್ತಿದ್ದು, ಈ ಸಂಬಂಧದ ಬಗ್ಗೆ ಸಿಯಾ ಎಂದಿಗೂ ಅಸಮಾಧಾನ ವ್ಯಕ್ತಪಡಿಸಿರಲಿಲ್ಲ ಎಂದು ಪೋಷಕರು ಹೇಳಿದ್ದಾರೆ.

ಪ್ರಸ್ತುತ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದು, ಸಿಯಾ ಗೋಯಲ್ ಹಾಗೂ ಚೇತನ್ ಚೌಧರಿ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ.

ವೈಶಾಖ್ ಆತ್ಮಹತ್ಯೆ ಪ್ರಕರಣ; ಕೃಷಿ ತಾಪಂಡ ಹೇಳಿಕೆ ದಾಖಲು, ಮೊಬೈಲ್ ಪರಿಶೀಲಿಸಿದ ಪೊಲೀಸರಿಗೆ ಸಿಕ್ಕಿದ್ದೇನು?

ಬೆಂಗಳೂರು: ಉದ್ಯಮಿ ವೈಶಾಖ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್.ನಗರ ಪೊಲೀಸರು ನಟಿ ಕೃಷಿ ತಾಪಂಡ ಅವರ ಹೇಳಿಕೆ ದಾಖಲಿಸಿಕೊಂಡಿದ್ದು, ಅವರ ಮೊಬೈಲ್ ಫೋನ್ ಪರಿಶೀಲನೆ ನಡೆಸಿದ್ದಾರೆ. ತನಿಖೆಯಲ್ಲಿ ಯಾವುದೇ ಅನುಮಾನಾಸ್ಪದ ಸಂದೇಶಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಮೊಬೈಲ್ ಅನ್ನು ವಾಪಸ್ ನೀಡಿದ್ದಾರೆ.

ಕೃಷಿ ತಾಪಂಡ, ತಾವು ಮೂರು ದಿನ ಕ್ಷೇಮವನದಲ್ಲಿದ್ದು, ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಫ್ಲ್ಯಾಟ್‌ಗೆ ಹಿಂದಿರುಗಿದ್ದಾಗಿ ತಿಳಿಸಿದ್ದಾರೆ. ತಮ್ಮ ಬಳಿಯಿದ್ದ ಕೀಯಿಂದ ಬಾಗಿಲು ತೆರೆದಾಗ ವೈಶಾಖ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿತ್ತು. ಬಳಿಕ ಸೀರೆಯನ್ನು ಕತ್ತರಿಸಿ ಮೃತದೇಹವನ್ನು ಕೆಳಗಿಳಿಸಿ, ಪೊಲೀಸರಿಗೆ ಹಾಗೂ ಕುಟುಂಬದವರಿಗೆ ಮಾಹಿತಿ ನೀಡಿದ್ದಾಗಿ ಹೇಳಿದ್ದಾರೆ.

ಪೊಲೀಸರು ಅವರ ಮೊಬೈಲ್‌ನಲ್ಲಿದ್ದ ಕಾಲ್ ಲಿಸ್ಟ್, ವಾಟ್ಸ್ಆಪ್ ಚಾಟ್ ಮತ್ತು ಮೆಸೇಜ್‌ಗಳನ್ನು ಪರಿಶೀಲಿಸಿದ್ದು, ಯಾವುದೇ ಅನುಮಾನಾಸ್ಪದ ಅಂಶ ಪತ್ತೆಯಾಗಿಲ್ಲ.

ಪ್ರಕರಣ ಸಂಬಂಧ ವೈಶಾಖ್ ಪತ್ನಿ ಮೇಘನಾ ನೀಡಿದ ದೂರಿನಲ್ಲಿ, ಎಲಿಗೆಂಟ್ ಟೆರಸ್ ಅಪಾರ್ಟ್‌ಮೆಂಟ್‌ನ 403ನೇ ಫ್ಲ್ಯಾಟ್‌ನಲ್ಲಿ ವೈಶಾಖ್ ಮೃತದೇಹ ಪತ್ತೆಯಾಗಿತ್ತು. ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದ ಸ್ಥಿತಿಯಲ್ಲಿ ಶವ ಕಂಡುಬಂದಿದ್ದು, ಕುತ್ತಿಗೆ ಭಾಗದಲ್ಲಿ ಗುರುತುಗಳಿದ್ದವು ಎಂದು ಉಲ್ಲೇಖಿಸಿದ್ದಾರೆ.

ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆತ್ಮಹತ್ಯೆ ಕುರಿತು ಯಾರ ಮೇಲೂ ಅನುಮಾನ ವ್ಯಕ್ತಪಡಿಸದ ಮೇಘನಾ, ಸಾವಿಗೆ ನಿಖರ ಕಾರಣ ಪತ್ತೆಹಚ್ಚುವಂತೆ ಮನವಿ ಮಾಡಿದ್ದಾರೆ. ಈ ದೂರಿನ ಆಧಾರದಲ್ಲಿ ಆರ್.ಆರ್.ನಗರ ಪೊಲೀಸರು ಅನುಮಾನಾಸ್ಪದ ಸಾವು (UDR) ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ಡೋರ್ ಗೈಡ್ ವೇಯಲ್ಲಿ ಸಿಲುಕಿದ ಮೆಟಲ್ ಚೈನ್: ಮೆಟ್ರೋ ಬಾಗಿಲು ಲಾಕ್ ಆಗದೇ ಇದ್ದುದರ ಅಸಲಿ ಕಾರಣ ಬಹಿರಂಗ

ಬೆಂಗಳೂರು: ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಬಾಗಿಲು ಮುಚ್ಚದೇ ಉಂಟಾದ ತಾತ್ಕಾಲಿಕ ಸೇವಾ ವ್ಯತ್ಯಯಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಸ್ಪಷ್ಟನೆ ನೀಡಿದೆ.

ರೈಲಿನಲ್ಲಿ ಯಾವುದೇ ತಾಂತ್ರಿಕ ದೋಷ ಕಂಡುಬಂದಿಲ್ಲ. ಪ್ರಯಾಣಿಕರೊಬ್ಬರ ಲೋಹದ ಸರ (ಮೆಟಲ್ ಚೈನ್) ಬಾಗಿಲಿನ ಡೋರ್ ಗೈಡ್‌ವೇಯಲ್ಲಿ ಸಿಲುಕಿದ್ದೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ನಿನ್ನೆ ಸಂಜೆ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಬಾಗಿಲು ಸರಿಯಾಗಿ ಮುಚ್ಚದ ಹಿನ್ನೆಲೆಯಲ್ಲಿ ಸಂಜೆ 7.36ರಿಂದ 7.54ರವರೆಗೆ ಮೆಟ್ರೋ ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಿತ್ತು. ಘಟನೆ ಬಳಿಕ ಕಾರ್ಯಾಚರಣೆ ಮತ್ತು ನಿರ್ವಹಣಾ ತಂಡಗಳು ಸ್ಥಳದಲ್ಲೇ ಪರಿಶೀಲನೆ ನಡೆಸಿ ಪ್ರಾಥಮಿಕ ತನಿಖೆ ಕೈಗೊಂಡಿದ್ದವು.

ತನಿಖೆ ವೇಳೆ, ಪ್ರಯಾಣಿಕರೊಬ್ಬರ ಲೋಹದ ಸರ ರೈಲಿನ ಬಾಗಿಲಿನ ಡೋರ್ ಗೈಡ್‌ವೇಯಲ್ಲಿ ಸಿಲುಕಿಕೊಂಡಿದ್ದರಿಂದ ಬಾಗಿಲು ಸಂಪೂರ್ಣವಾಗಿ ಮುಚ್ಚಲು ಸಾಧ್ಯವಾಗಿರಲಿಲ್ಲ ಎಂಬುದು ಪತ್ತೆಯಾಗಿದೆ. ಇದರಿಂದ ಸುರಕ್ಷತಾ ವ್ಯವಸ್ಥೆ ಸಕ್ರಿಯಗೊಂಡು ರೈಲು ಸಂಚಾರದಲ್ಲಿ ಕೆಲಕಾಲ ವಿಳಂಬ ಉಂಟಾಗಿದೆ.

ಘಟನೆ ಬಳಿಕ ರೈಲು ಹಾಗೂ ಬಾಗಿಲಿನ ವ್ಯವಸ್ಥೆಯನ್ನು ಸಂಪೂರ್ಣ ತಾಂತ್ರಿಕವಾಗಿ ಪರಿಶೀಲಿಸಲಾಗಿದ್ದು, ರೈಲಿನ ಉಪಕರಣಗಳಲ್ಲಿ ಯಾವುದೇ ತಾಂತ್ರಿಕ ದೋಷ ಕಂಡುಬಂದಿಲ್ಲ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ.

ಪ್ರಯಾಣಿಕರ ಸುರಕ್ಷತೆಯೇ ನಮ್ಮ ಅತ್ಯುನ್ನತ ಆದ್ಯತೆಯಾಗಿದ್ದು, ಸುರಕ್ಷಿತ, ವಿಶ್ವಾಸಾರ್ಹ ಮತ್ತು ನಿರಂತರ ಮೆಟ್ರೋ ಸೇವೆ ಒದಗಿಸುವುದು ನಮ್ಮ ಬದ್ಧತೆಯಾಗಿದೆ ಎಂದು ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಪ್ರಯಾಣಿಕರು ರೈಲು ಏರು-ಇಳಿಯುವ ವೇಳೆ ಬ್ಯಾಗ್, ಬಟ್ಟೆ, ಸರ ಸೇರಿದಂತೆ ಯಾವುದೇ ವಸ್ತುಗಳು ಬಾಗಿಲಿನ ನಡುವೆ ಸಿಲುಕದಂತೆ ಎಚ್ಚರಿಕೆ ವಹಿಸುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ.

ಏರ್ ಇಂಡಿಯಾ ಫ್ಲೈಟ್ ದುರಂತಕ್ಕೆ ಖಲಿಸ್ತಾನಿ ಉಗ್ರರೇ ಕಾರಣ; ನಾಲ್ಕು ದಶಕಗಳ ಬಳಿಕ ಕೆನಡಾ ಗುಪ್ತಚರ ಸಂಸ್ಥೆಯ ಮಹತ್ವದ ಹೇಳಿಕೆ

0

ಒಟ್ಟಾವ: 1985ರಲ್ಲಿ ಸಂಭವಿಸಿದ್ದ ಏರ್ ಇಂಡಿಯಾ ಫ್ಲೈಟ್ 182 (ಕನಿಷ್ಕ) ಬಾಂಬ್ ಸ್ಫೋಟ ಪ್ರಕರಣದ ಕುರಿತು ನಾಲ್ಕು ದಶಕಗಳ ಬಳಿಕ ಕೆನಡಾದ ಗುಪ್ತಚರ ಸಂಸ್ಥೆ (ಸಿಎಸ್ಐಎಸ್) ಮಹತ್ವದ ಒಪ್ಪಿಗೆಯನ್ನು ನೀಡಿದೆ. ಈ ಭೀಕರ ವಿಮಾನ ದುರಂತದ ಹಿಂದೆ ಕೆನಡಾ ಮೂಲದ ಖಲಿಸ್ತಾನಿ ಉಗ್ರರ ಕೈವಾಡವಿತ್ತು ಎಂದು ಸಂಸ್ಥೆ ಮೊದಲ ಬಾರಿಗೆ ಅಧಿಕೃತವಾಗಿ ಒಪ್ಪಿಕೊಂಡಿದೆ.

ಭಯೋತ್ಪಾದನೆ ಸಂತ್ರಸ್ತರ ರಾಷ್ಟ್ರೀಯ ಸ್ಮರಣ ದಿನದ ಅಂಗವಾಗಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ ಸಂದೇಶದಲ್ಲಿ ಸಿಎಸ್ಐಎಸ್, ಈ ಘಟನೆಯನ್ನು “ಕೆನಡಾದ ಇತಿಹಾಸದಲ್ಲೇ ಅತ್ಯಂತ ಭೀಕರ ಭಯೋತ್ಪಾದಕ ದಾಳಿ” ಎಂದು ಬಣ್ಣಿಸಿದೆ.

ಸಂಸ್ಥೆಯ ಹೇಳಿಕೆಯ ಪ್ರಕಾರ, 1985ರ ಜೂನ್ 23ರಂದು ಕೆನಡಾದಲ್ಲೇ ಕಾರ್ಯಾಚರಣೆ ನಡೆಸುತ್ತಿದ್ದ ಖಲಿಸ್ತಾನಿ ಉಗ್ರರು ಇರಿಸಿದ್ದ ಸೂಟ್‌ಕೇಸ್ ಬಾಂಬ್ ಸ್ಫೋಟಗೊಂಡ ಪರಿಣಾಮ ಏರ್ ಇಂಡಿಯಾ ಫ್ಲೈಟ್ 182 ಪತನಗೊಂಡಿತ್ತು. ಈ ದಾಳಿಯಲ್ಲಿ ವಿಮಾನದಲ್ಲಿದ್ದ ಎಲ್ಲಾ 329 ಪ್ರಯಾಣಿಕರು ಮತ್ತು ಸಿಬ್ಬಂದಿ ಸಾವನ್ನಪ್ಪಿದ್ದರು. ಮೃತರಲ್ಲಿ ಹೆಚ್ಚಿನವರು ಕೆನಡಾ ಪ್ರಜೆಗಳಾಗಿದ್ದರು ಎಂದು ಸಿಎಸ್ಐಎಸ್ ಉಲ್ಲೇಖಿಸಿದೆ.

ಇದೇ ವೇಳೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನೆ ಕೂಡ ಸಂತ್ರಸ್ತರಿಗೆ ಗೌರವ ನಮನ ಸಲ್ಲಿಸಿದ್ದು, ಕನಿಷ್ಕ ಬಾಂಬ್ ಸ್ಫೋಟವನ್ನು ದೇಶದ ಇತಿಹಾಸದಲ್ಲೇ ನಡೆದ ಅತ್ಯಂತ ಕ್ರೂರ ಭಯೋತ್ಪಾದಕ ದಾಳಿ ಎಂದು ಬಣ್ಣಿಸಿದ್ದಾರೆ. ಹಿಂಸಾತ್ಮಕ ಉಗ್ರವಾದವನ್ನು ನಿರ್ಮೂಲನೆ ಮಾಡಲು ಕೆನಡಾ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.

1985ರ ಜೂನ್ 23ರಂದು ಮಾಂಟ್ರಿಯಲ್‌ನಿಂದ ಲಂಡನ್ ಮಾರ್ಗವಾಗಿ ನವದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ಫ್ಲೈಟ್ 182, ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣ ತಲುಪಲು ಸುಮಾರು 45 ನಿಮಿಷಗಳು ಬಾಕಿ ಇರುವಾಗ ಐರ್ಲೆಂಡ್ ಕರಾವಳಿ ಸಮೀಪದ ಅಟ್ಲಾಂಟಿಕ್ ಮಹಾಸಾಗರದ ಮೇಲೆ ಹಾರುತ್ತಿದ್ದ ವೇಳೆ ಸೂಟ್‌ಕೇಸ್‌ನಲ್ಲಿದ್ದ ಬಾಂಬ್ ಸ್ಫೋಟಗೊಂಡಿತ್ತು.

ಸ್ಫೋಟದ ತೀವ್ರತೆಗೆ ವಿಮಾನ ಸಮುದ್ರಕ್ಕೆ ಅಪ್ಪಳಿಸಿದ್ದು, ವಿಮಾನದಲ್ಲಿದ್ದ ಎಲ್ಲ 329 ಮಂದಿ ಮೃತಪಟ್ಟಿದ್ದರು. ಮೃತರಲ್ಲಿ 268 ಕೆನಡಾ ಪ್ರಜೆಗಳು, ಅವರಲ್ಲಿ ಹೆಚ್ಚಿನವರು ಭಾರತೀಯ ಮೂಲದವರಾಗಿದ್ದು, 24 ಮಂದಿ ಭಾರತೀಯ ಪ್ರಜೆಗಳೂ ಸೇರಿದ್ದರು. ದುರಂತದ ಬಳಿಕ ಮಹಾಸಾಗರದಿಂದ ಕೇವಲ 131 ಮೃತದೇಹಗಳನ್ನು ಮಾತ್ರ ಪತ್ತೆಹಚ್ಚಲಾಗಿತ್ತು.

1984ರಲ್ಲಿ ಅಮೃತಸರದ ಸ್ವರ್ಣ ಮಂದಿರದಲ್ಲಿ ಅಡಗಿದ್ದ ಸಶಸ್ತ್ರ ಉಗ್ರರನ್ನು ಹೊರಹಾಕಲು ಭಾರತೀಯ ಸೇನೆ ನಡೆಸಿದ್ದ ‘ಆಪರೇಷನ್ ಬ್ಲೂ ಸ್ಟಾರ್’ಗೆ ಪ್ರತೀಕಾರವಾಗಿ ಖಲಿಸ್ತಾನಿ ಉಗ್ರರು ಈ ಸಂಚು ರೂಪಿಸಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ನಾಲ್ಕು ದಶಕಗಳ ಬಳಿಕ ಕೆನಡಾದ ಗುಪ್ತಚರ ಸಂಸ್ಥೆಯ ಈ ಅಧಿಕೃತ ಒಪ್ಪಿಗೆ, ಕನಿಷ್ಕ ವಿಮಾನ ದುರಂತ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.

ಫಾರ್ಮ್‌ಹೌಸ್ ಗೇಟ್ ಬಳಿ ಭೀಕರ ಸ್ಫೋಟ: ನಾಡಬಾಂಬ್ ಮೇಲೆ ಕಾಲಿಟ್ಟ ವಕೀಲನ ಸ್ಥಿತಿ ಗಂಭೀರ ಗಾಯ

0

ರಾಮನಗರ: ಹಾರೋಹಳ್ಳಿ ತಾಲೂಕಿನ ಸುಂಡಗಟ್ಟ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟಗೊಂಡು ಬೆಂಗಳೂರಿನ ವಕೀಲ ಮೋಹನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಫಾರ್ಮ್‌ಹೌಸ್ ಗೇಟ್ ಬಳಿ ಇರಿಸಲಾಗಿದ್ದ ಸ್ಫೋಟಕದ ಮೇಲೆ ಕಾಲಿಟ್ಟಾಗ ಈ ದುರ್ಘಟನೆ ಸಂಭವಿಸಿದೆ.

ಸುಂಡಗಟ್ಟ ಗ್ರಾಮದಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಲ್ಲಿ ಗುರುವಾರ ರಾತ್ರಿ ತಂಗಿದ್ದ ಮೋಹನ್, ಶುಕ್ರವಾರ ಬೆಳಗ್ಗೆ ಹೊರಬರುವಾಗ ಗೇಟ್ ಸಮೀಪ ಇರಿಸಿದ್ದ ನಾಡಬಾಂಬ್ ಗಮನಿಸದೆ ಅದರ ಮೇಲೆ ಕಾಲಿಟ್ಟಿದ್ದಾರೆ. ಕೂಡಲೇ ಸ್ಫೋಟ ಸಂಭವಿಸಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳು ಮೋಹನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಕೋಡಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಡು ಪ್ರಾಣಿಗಳ ಬೇಟೆ ಉದ್ದೇಶದಿಂದ ನಾಡಬಾಂಬ್ ಇರಿಸಲಾಗಿರಬಹುದು ಎಂಬ ಶಂಕೆಯಡಿ ತನಿಖೆ ಮುಂದುವರಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಫೋಟಕವನ್ನು ಇಟ್ಟವರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.