ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಿಜಾಬ್ ವಿಚಾರವನ್ನು ಮತ್ತೆ ಮುನ್ನೆಲೆಗೆ ತಂದು ಮಕ್ಕಳಲ್ಲಿ ಮತೀಯ ಭಾವನೆಗಳನ್ನು ಬಿತ್ತಲು ಯತ್ನಿಸುತ್ತಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಆರೋಪಿಸಿದ್ದಾರೆ. ಹಿಜಾಬ್ಗೆ ಅವಕಾಶ ನೀಡುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿದ ಅವರು, ಇದು ಅಲ್ಪಸಂಖ್ಯಾತರ ಓಲೈಕೆಯ ರಾಜಕೀಯದ ಭಾಗ ಎಂದು ಟೀಕಿಸಿದರು.
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “2022ರಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಶಾಲೆಗಳಲ್ಲಿ ವಸ್ತ್ರಸಂಹಿತೆ ಅಗತ್ಯ ಎಂಬುದನ್ನು ನ್ಯಾಯಾಲಯವೂ ಎತ್ತಿಹಿಡಿದಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಹಿಜಾಬ್ ಧರಿಸಲು ಅವಕಾಶ ನೀಡುವ ನಿರ್ಧಾರ ಕೈಗೊಂಡಿದೆ” ಎಂದು ದೂರಿದರು.
ದಾವಣಗೆರೆ ಉಪಚುನಾವಣೆಯ ಬಳಿಕ ಸರ್ಕಾರದಲ್ಲಿ ಆತಂಕ ಮತ್ತು ಗೊಂದಲ ಹೆಚ್ಚಾಗಿದ್ದು, ಅದನ್ನು ಮುಚ್ಚಿಹಾಕಲು ಈ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದರು. “ಅಲ್ಪಸಂಖ್ಯಾತರನ್ನು ಓಲೈಸುವ ಉದ್ದೇಶದಿಂದ ಸರ್ಕಾರ ಈ ರೀತಿಯ ಕ್ರಮ ಕೈಗೊಳ್ಳುತ್ತಿದೆ” ಎಂದರು.
ಶಿಕ್ಷಣ ಸಚಿವರು ಮತ್ತು ಸರ್ಕಾರ ಮಕ್ಕಳಲ್ಲಿ ಮತೀಯ ಭಾವನೆಗಳನ್ನು ಬಿತ್ತಬಾರದು ಎಂದು ಎಚ್ಚರಿಸಿದ ಅವರು, “ಶಿಕ್ಷಣ ಪಡೆಯಲು ಬರುವ ವಿದ್ಯಾರ್ಥಿಗಳು ಜಾತಿ, ಧರ್ಮ ಮತ್ತು ಪಂಥಗಳನ್ನು ಬದಿಗಿಟ್ಟು ಬರಬೇಕು. ಒಂದೇ ರೀತಿಯ ಸಮವಸ್ತ್ರ ಧರಿಸಿದಾಗ ಎಲ್ಲರೂ ಸಮಾನರು ಎಂಬ ಭಾವನೆ ಮೂಡುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಏಕತೆಯ ಮನೋಭಾವ ಬೆಳೆಸಬಹುದು” ಎಂದು ಹೇಳಿದರು.
ಯಾವುದೇ ಅಲ್ಪಸಂಖ್ಯಾತ ಸಮುದಾಯದಿಂದ ಬೇಡಿಕೆ ಇಲ್ಲದಿದ್ದರೂ ಸರ್ಕಾರ ಹಿಜಾಬ್ ವಿಚಾರವನ್ನು ಮತ್ತೆ ಮುಂದಕ್ಕೆ ತರುತ್ತಿದೆ ಎಂದು ಆರೋಪಿಸಿದ ಅವರು, “ಶಾಲೆಗಳಲ್ಲಿ ಹಿಜಾಬ್ಗೆ ಯಾರೂ ಅವಕಾಶ ಕೇಳಿಲ್ಲ. ಕಾಂಗ್ರೆಸ್ ಸರ್ಕಾರವೇ ಹಳೆಯ ವಿವಾದವನ್ನು ಜೀವಂತಗೊಳಿಸಲು ಈ ಪ್ರಯತ್ನ ಮಾಡುತ್ತಿದೆ” ಎಂದು ಟೀಕಿಸಿದರು.
ದಾವಣಗೆರೆ ಉಪಚುನಾವಣೆಯ ನಂತರ ಉಂಟಾದ ಆಂತರಿಕ ಭಿನ್ನಾಭಿಪ್ರಾಯಗಳನ್ನು ಮುಚ್ಚಿಹಾಕಲು ಸರ್ಕಾರ ಹಿಜಾಬ್ ವಿಚಾರ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, “ಈ ನಿರ್ಧಾರಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತದೆ. ಇದರ ವಿರುದ್ಧ ಹೋರಾಟ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

