ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ರಾಜ್ಯದ ಅಧಿಕಾರಿಗಳು ಪ್ರಬಲವಾಗಿ ವಾದ ಮಂಡಿಸಿದರೂ, ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮಹತ್ವದ ಸೂಚನೆ ನೀಡಿದೆ.
ಈ ಮೂಲಕ ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂಬ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು CWMA ಎತ್ತಿಹಿಡಿದಿದೆ.
CWMA ಅಧ್ಯಕ್ಷ ಎಸ್.ಕೆ. ಹಲ್ದಾರ್ ಅವರ ನೇತೃತ್ವದಲ್ಲಿ ಇಂದು ಪ್ರಾಧಿಕಾರದ ಕಚೇರಿಯಲ್ಲಿ ಸಭೆ ನಡೆದಿದ್ದು, ಸಭೆಯ ಬಳಿಕ ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ. ಸಭೆಯಲ್ಲಿ ತಮಿಳುನಾಡಿನ ಅಧಿಕಾರಿಗಳು ವರ್ಚ್ಯುವಲ್ ಮೂಲಕ ಭಾಗವಹಿಸಿದ್ದರು. ಕರ್ನಾಟಕದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಕೂಡ ವರ್ಚ್ಯುವಲ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸು ಮಾಡಿತ್ತು. ಇದೀಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವೂ ಅದೇ ಪ್ರಮಾಣದ ನೀರು ಹರಿಸಲು ಸೂಚನೆ ನೀಡಿರುವುದು ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿಚಾರವನ್ನು ಮತ್ತೆ ಚರ್ಚೆಗೆ ತಂದಿದೆ.

