Home Blog

ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಲೋಪ: ಮೃತರ ಖಾತೆಗೂ ಹಣ ಜಮೆ, ಸರ್ಕಾರದಿಂದ ಪರಿಷ್ಕರಣೆಗೆ ಸಿದ್ಧತೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪ ಹಾಗೂ ಹಣ ದುರ್ಬಳಕೆಯ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಯೋಜನೆಯನ್ನು ಸಮಗ್ರವಾಗಿ ಪರಿಷ್ಕರಿಸಲು ಸರ್ಕಾರ ಮುಂದಾಗಿದೆ.

ಯೋಜನೆಯಡಿ ನೋಂದಾಯಿಸಿಕೊಂಡಿದ್ದ ಹಲವು ಫಲಾನುಭವಿಗಳು ಮೃತಪಟ್ಟಿದ್ದರೂ, ಅವರ ಹೆಸರಿನ ಬ್ಯಾಂಕ್ ಖಾತೆಗಳಿಗೆ ಕಳೆದ ಕೆಲವು ತಿಂಗಳುಗಳಿಂದ ಹಣ ಜಮೆಯಾಗುತ್ತಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ನಡೆಸಿದ ಪರಿಶೀಲನೆ ಮತ್ತು ತಾಂತ್ರಿಕ ಆಡಿಟ್ ವೇಳೆ, ಸುಮಾರು 1.48 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ₹2,000 ನೆರವು ಹಣ ಜಮೆಯಾಗಿರುವ ಮಾಹಿತಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಈ ಪ್ರಕ್ರಿಯೆಯಿಂದ ಸಾರ್ವಜನಿಕ ಹಣದ ದುರ್ಬಳಕೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಕೆಲವು ಪ್ರಕರಣಗಳಲ್ಲಿ ಮೃತ ಫಲಾನುಭವಿಗಳ ಸಂಬಂಧಿಕರು ಎಟಿಎಂ ಮತ್ತು ಯುಪಿಐ ಮೂಲಕ ಹಣವನ್ನು ವಿತ್‌ಡ್ರಾ ಮಾಡಿಕೊಂಡಿರುವ ಸಾಧ್ಯತೆಯೂ ಪರಿಶೀಲನೆಯಲ್ಲಿದೆ.

ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಸಂಪೂರ್ಣವಾಗಿ ಪರಿಷ್ಕರಿಸುವಂತೆ ಸೂಚಿಸಿದ್ದಾರೆ.

ಪರಿಶೀಲನೆ ವೇಳೆ ಮತ್ತೊಂದು ತಾಂತ್ರಿಕ ಸಮಸ್ಯೆಯೂ ಬೆಳಕಿಗೆ ಬಂದಿದ್ದು, ಕೆಲವಡೆ ಬ್ಯಾಂಕ್ ಖಾತೆ ಹೊಂದಿರುವ ವ್ಯಕ್ತಿ ಮತ್ತು ನೋಂದಾಯಿತ ಮೊಬೈಲ್ ಸಂಖ್ಯೆ ಹೊಂದಿರುವ ವ್ಯಕ್ತಿ ಬೇರೆಬೇರೆಯಾಗಿರುವುದು ಕಂಡುಬಂದಿದೆ. ಇದರಿಂದ ನಿಜವಾದ ಫಲಾನುಭವಿಗಳಿಗೆ ಹಣ ತಲುಪುವಲ್ಲಿ ತೊಂದರೆ ಉಂಟಾಗುತ್ತಿರುವ ಬಗ್ಗೆ ಅಧಿಕಾರಿಗಳು ಗಮನಸೆಳೆದಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ಫಲಾನುಭವಿಗಳ ಪಟ್ಟಿಯನ್ನು ತಾತ್ಕಾಲಿಕವಾಗಿ ಮರುಪರಿಶೀಲನೆಗೆ ಒಳಪಡಿಸಿ, ಅರ್ಹ ಮಹಿಳೆಯರಿಂದ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಇದೇ ವೇಳೆ, ಇ-ಜನ್ಮ ಪೋರ್ಟಲ್ ಮೂಲಕ ಮರಣ ಪ್ರಮಾಣಪತ್ರಗಳನ್ನು ಬ್ಯಾಂಕ್ ಖಾತೆಗಳೊಂದಿಗೆ ಸಂಪರ್ಕಿಸುವುದು, ಫಲಾನುಭವಿಗಳ ಜೀವಿತ ಸ್ಥಿತಿಯನ್ನು ವಾರ್ಷಿಕವಾಗಿ ದೃಢೀಕರಿಸುವ ‘ಜೀವಿತ ಪ್ರಮಾಣ ಪತ್ರ’ ಅಥವಾ ಬಯೋಮೆಟ್ರಿಕ್ ದೃಢೀಕರಣವನ್ನು ಕಡ್ಡಾಯಗೊಳಿಸುವ ಕುರಿತು ಸರ್ಕಾರ ಚರ್ಚೆ ನಡೆಸುತ್ತಿದೆ.

ಆಗುಂಬೆ ಘಾಟಿಗೆ ಶಾಶ್ವತ ಪರಿಹಾರಕ್ಕೆ ಹೆಜ್ಜೆ: ಸುರಂಗ ಮಾರ್ಗ, ಡಬಲ್ ರಸ್ತೆ ಯೋಜನೆಗೆ ಟೆಂಡರ್ ಪ್ರಕ್ರಿಯೆ ಆರಂಭ

0

ಕಾರ್ಕಳ: ಆಗುಂಬೆ ಘಾಟಿಯಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಜಾಮ್, ಭೂಕುಸಿತದ ಆತಂಕ ಹಾಗೂ ರಸ್ತೆ ಸುರಕ್ಷತಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳು ಆರಂಭವಾಗಿವೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಘಾಟಿಯ ಅಪಾಯಕಾರಿ ತಿರುವುಗಳನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

ಹುಲಿಕಲ್ ಘಾಟಿಯಲ್ಲಿ ನಿರ್ಬಂಧ ಹೇರಿರುವ ಕಾರಣ ಆಗುಂಬೆ ಮಾರ್ಗದಲ್ಲಿ ವಾಹನ ದಟ್ಟಣೆ ಗಣನೀಯವಾಗಿ ಏರಿಕೆಯಾಗಿದೆ. ಅದರಲ್ಲೂ ಭಾರೀ ತೂಕದ ವಾಹನಗಳು ಮತ್ತು ಜಲ್ಲಿಕಲ್ಲು ಸಾಗಣೆ ವಾಹನಗಳ ನಿರಂತರ ಸಂಚಾರದಿಂದ ಘಾಟಿಯ ತಿರುವು ಭಾಗಗಳಲ್ಲಿ ಭೂ ಕುಸಿತದ ಅಪಾಯ ಹೆಚ್ಚಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.

ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡ ಸಂಸದರು ಪ್ರಯಾಣಿಕರ ಸುರಕ್ಷತೆಗಾಗಿ ತಿರುವುಗಳ ಅಪಾಯಕಾರಿ ದಂಡೆ ಭಾಗದಲ್ಲಿ ಸುಮಾರು ಸಾವಿರ ಮೀಟರ್ ತಡೆಬೇಲಿ ನಿರ್ಮಿಸಲು ಸೂಚಿಸಿದ್ದಾರೆ. ಅಲ್ಲದೇ ರಸ್ತೆ ದುರಸ್ತಿ ಹಾಗೂ ಕುಸಿತ ತಡೆ ಕಾಮಗಾರಿಗಳಿಗೆ ಕೇಂದ್ರ ಸರ್ಕಾರ ಈಗಾಗಲೇ 15 ಕೋಟಿ ರೂಪಾಯಿ ಮಂಜೂರು ಮಾಡಿದ್ದು, ಮಳೆಗಾಲದ ಬಳಿಕ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಆಗುಂಬೆ ಘಾಟಿಯ ಭವಿಷ್ಯದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸುರಂಗ ಮಾರ್ಗ ನಿರ್ಮಾಣ ಹಾಗೂ ರಸ್ತೆ ದ್ವಿಪಥೀಕರಣ ಯೋಜನೆಗೂ ವೇಗ ನೀಡಲಾಗಿದೆ. ಈ ಸಂಬಂಧ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಪ್ರಕ್ರಿಯೆ ಆರಂಭವಾಗಿದ್ದು, ಸಾಧ್ಯತಾ ವರದಿ ಆಧರಿಸಿ ಶೀಘ್ರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.

ಘಾಟಿ ರಸ್ತೆಯ ಸ್ಥಿರತೆ ಕಾಪಾಡಲು ಭಾರೀ ವಾಹನಗಳ ನಿಯಂತ್ರಣ ಅಗತ್ಯವಾಗಿದ್ದು, ಮಳೆಗಾಲದಲ್ಲಿ ಯಾವುದೇ ಅಪಾಯ ಸಂಭವಿಸದಂತೆ ಜಿಲ್ಲಾಡಳಿತ ಹಾಗೂ ಹೆದ್ದಾರಿ ಇಲಾಖೆ ಸಮನ್ವಯದಿಂದ ಕ್ರಮ ಕೈಗೊಳ್ಳಬೇಕೆಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಉಡುಪಿಯಲ್ಲಿ ಕಾರಿಗೆ ಸೈಡ್ ಕೊಡುವ ವಿಚಾರಕ್ಕೆ ಮಾರಾಮಾರಿ: ಪ್ರವಾಸಿಗರು-ಸ್ಥಳೀಯರ ನಡುವೆ ಘರ್ಷಣೆ

ಉಡುಪಿ: ಜಿಲ್ಲೆಯ ಪ್ರಸಿದ್ಧ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ತಡರಾತ್ರಿ ಪ್ರವಾಸಿಗರು ಮತ್ತು ಸ್ಥಳೀಯ ವ್ಯಕ್ತಿಯೊಬ್ಬರ ನಡುವೆ ಭಾರೀ ಗಲಾಟೆ ನಡೆದಿರುವ ಘಟನೆ ವರದಿಯಾಗಿದೆ.

ಆಂಧ್ರಪ್ರದೇಶದ ಹೈದರಾಬಾದ್ ಮೂಲದ ಪ್ರವಾಸಿಗರು ಹಾಗೂ ಉಡುಪಿಯ ಕೊರಂಗ್ರಪಾಡಿ ನಿವಾಸಿ ಸುಪ್ರೀತ್ ನಡುವೆ ಈ ಘರ್ಷಣೆ ಸಂಭವಿಸಿದೆ ಎನ್ನಲಾಗಿದೆ.

ಮಹಿಳೆಯರು ಮತ್ತು ಮಕ್ಕಳೊಂದಿಗೆ ಮಠದ ದರ್ಶನಕ್ಕೆ ಬಂದಿದ್ದ ಪ್ರವಾಸಿಗರು, ಕಾರು ನಿಧಾನವಾಗಿ ಚಲಾಯಿಸುವಂತೆ ಸೂಚಿಸಿದ್ದರಿಂದ ಮಾತಿನ ಚಕಮಕಿ ಆರಂಭವಾಗಿದೆ ಎಂದು ತಿಳಿದುಬಂದಿದೆ. ಬಳಿಕ ವಾಗ್ವಾದ ತೀವ್ರಗೊಂಡು ಹಲ್ಲೆ ಹಂತಕ್ಕೆ ತಲುಪಿದೆ.

ಪ್ರವಾಸಿಗರ ಆರೋಪದ ಪ್ರಕಾರ, ಸ್ಥಳೀಯ ವ್ಯಕ್ತಿ ಕಾರು ಹಾಯಿಸಲು ಯತ್ನಿಸಿದ್ದು, ಬಳಿಕ ಕಂಬಳದ ಕೋಲಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿವೆ.

ಇನ್ನೊಂದೆಡೆ, ಸ್ಥಳೀಯ ವ್ಯಕ್ತಿ ಕೂಡ ಪ್ರತಿದೂರು ನೀಡಿದ್ದು, ಪ್ರವಾಸಿಗರೇ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಾರ್ವಜನಿಕರು ಧಾವಿಸಿ ಗಲಾಟೆಯನ್ನು ನಿಯಂತ್ರಿಸಿದ್ದು, ಬಳಿಕ ಎರಡೂ ಕಡೆಯವರು ಪೊಲೀಸರಿಗೆ ದೂರು ನೀಡಿದ್ದಾರೆ.

ಸದ್ಯ ಎರಡೂ ಪಕ್ಷಗಳ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮೋದಿ ಐತಿಹಾಸಿಕ ದಾಖಲೆ: ನೆಹರೂ ದಾಖಲೆಯನ್ನು ಹಿಂದಿಕ್ಕಿದ ಪ್ರಧಾನಿ!

0

ನವದೆಹಲಿ: ಭಾರತದ ರಾಜಕೀಯ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು ದಾಖಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ದೀರ್ಘಾವಧಿ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಮೋದಿ ಅವರು ಪ್ರಧಾನಿಯಾಗಿ ಸತತ 4,399 ದಿನಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದ್ದು, ಇದು ನೆಹರೂ ಅವರ 4,398 ದಿನಗಳ ದಾಖಲೆಯನ್ನು ಮೀರಿದೆ.

ಹಿಂದಿನ ದಾಖಲೆ ಪಂಡಿತ್ ಜವಾಹರಲಾಲ್ ನೆಹರೂ ಅವರ ಹೆಸರಿನಲ್ಲಿ ಇತ್ತು. ಅವರು 1952ರಿಂದ 1964ರವರೆಗೆ ನಿರಂತರವಾಗಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು.

ನರೇಂದ್ರ ಮೋದಿ ಅವರು 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ, 2019ರಲ್ಲಿ ಪುನಃ ಭಾರೀ ಬಹುಮತದೊಂದಿಗೆ ಆಯ್ಕೆಯಾಗಿದ್ದರು. 2024ರಲ್ಲಿ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿ ಆಡಳಿತ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸಾಧನೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಎನ್‌ಡಿಎ ವತಿಯಿಂದ ವಿಶೇಷ ಸಮಾವೇಶ ಆಯೋಜಿಸಲಾಗಿದ್ದು, ಹಲವು ರಾಜ್ಯಗಳ ನಾಯಕರು ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ಅವರು ತಮ್ಮ ಸಂದೇಶದಲ್ಲಿ ಈ 12 ವರ್ಷಗಳ ಆಡಳಿತ ದೇಶದ ಅಭಿವೃದ್ಧಿ, ಜನಕಲ್ಯಾಣ ಮತ್ತು ಮೂಲಸೌಕರ್ಯ ವಿಕಾಸಕ್ಕೆ ಸಮರ್ಪಿತವಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ದೇಶದ ವಿವಿಧ ಭಾಗಗಳಲ್ಲಿ ಈ ಮೈಲಿಗಲ್ಲನ್ನು ಸಂಭ್ರಮಿಸಲು ವಿಶೇಷ ಕಾರ್ಯಕ್ರಮಗಳು ಹಾಗೂ ಪೂಜೆಗಳು ನಡೆಯಲಿದೆ.

 

ಕುಮುದ್ ರಾಣೆ ನಿಧನ: ಆಪ್ತ ಸ್ನೇಹಿತೆಯನ್ನು ಕಳೆದುಕೊಂಡು ಕಣ್ಣೀರಿಟ್ಟ ಸಲ್ಮಾನ್ ಖಾನ್

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಕುಟುಂಬದ ಆಪ್ತ ಸದಸ್ಯೆಯಂತಿದ್ದ ಖ್ಯಾತ ಕೇಶ ವಿನ್ಯಾಸಕಿ ಕುಮುದ್ ರಾಣೆ ಅವರ ನಿಧನ ಖಾನ್ ಕುಟುಂಬಕ್ಕೆ ಭಾರೀ ಆಘಾತ ಉಂಟುಮಾಡಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕುಮುದ್ ರಾಣೆ ಅವರ ಹೋರಾಟ ಅಂತ್ಯಗೊಂಡಿದ್ದು, ಅಂತಿಮ ವಿಧಿವಿಧಾನಗಳ ವೇಳೆ ಸಲ್ಮಾನ್ ಖಾನ್ ಸೇರಿದಂತೆ ಇಡೀ ಕುಟುಂಬ ಭಾವುಕಗೊಂಡಿದೆ.

ಮುಂಬೈನ ಬಾಂದ್ರಾದಲ್ಲಿ ಸಲೂನ್ ನಡೆಸುತ್ತಿದ್ದ ಕುಮುದ್ ರಾಣೆ, ಹಲವು ವರ್ಷಗಳಿಂದ ಸಲ್ಮಾನ್ ಖಾನ್ ಕುಟುಂಬದೊಂದಿಗೆ ಅತ್ಯಂತ ನಿಕಟ ಸಂಬಂಧ ಹೊಂದಿದ್ದರು. ಅವರ ಅಗಲಿಕೆಯ ಸುದ್ದಿ ತಿಳಿಯುತ್ತಿದ್ದಂತೆ ಸಲ್ಮಾನ್ ಖಾನ್ ಅಂತಿಮ ದರ್ಶನಕ್ಕೆ ಆಗಮಿಸಿದ್ದು, ದುಃಖವನ್ನು ತಡೆಹಿಡಿಯಲು ಸಾಧ್ಯವಾಗದೆ ಭಾವನಾತ್ಮಕವಾಗಿ ಕುಗ್ಗಿದ ದೃಶ್ಯಗಳು ವೈರಲ್ ಆಗಿವೆ.

ಅಂತಿಮ ನಮನ ಕಾರ್ಯಕ್ರಮದಲ್ಲಿ ಅರ್ಬಾಜ್ ಖಾನ್, ಸೊಹೈಲ್ ಖಾನ್, ಸಲ್ಮಾ ಖಾನ್, ಹೆಲೆನ್, ನಿರ್ವಾಣ ಖಾನ್ ಮತ್ತು ಅರ್ಹಾನ್ ಖಾನ್ ಭಾಗವಹಿಸಿದರು. ವಿಶೇಷವಾಗಿ ಸೊಹೈಲ್ ಖಾನ್ ಪುತ್ರ ನಿರ್ವಾಣ ಕಣ್ಣೀರಿಟ್ಟ ದೃಶ್ಯಗಳು ನೆರೆದವರ ಮನಕಲಕಿದವು. ಈ ವೇಳೆ ಅರ್ಹಾನ್ ಖಾನ್ ನಿರ್ವಾಣಗೆ ಸಾಂತ್ವನ ಹೇಳುತ್ತಿರುವುದು ವಿಡಿಯೋಗಳಲ್ಲಿ ಕಾಣಿಸಿಕೊಂಡಿದೆ.

2025ರ ಹೊಸ ವರ್ಷಾಚರಣೆಯನ್ನೂ ಸಲ್ಮಾನ್ ಖಾನ್ ಜೊತೆಗೂಡಿ ಆಚರಿಸಿದ್ದ ಕುಮುದ್ ರಾಣೆ, ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಟನೊಂದಿಗಿನ ಚಿತ್ರಗಳನ್ನು ಹಂಚಿಕೊಂಡಿದ್ದರು. ಆಪ್ತ ಸ್ನೇಹಿತೆಯನ್ನು ಕಳೆದುಕೊಂಡ ನೋವು ಸಲ್ಮಾನ್ ಮುಖದಲ್ಲಿ ಸ್ಪಷ್ಟವಾಗಿ ಕಾಣಿಸಿಕೊಂಡಿದೆ.

ವೃತ್ತಿಪರವಾಗಿ ಸಕ್ರಿಯವಾಗಿರುವ ಸಲ್ಮಾನ್ ಖಾನ್, ಸದ್ಯ ವಂಶಿ ಪೈಡಿಪಲ್ಲಿ ನಿರ್ದೇಶನದ ಹೊಸ ಆಕ್ಷನ್-ಡ್ರಾಮಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ನಯನತಾರಾ ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರ ಮುಂದಿನ ವರ್ಷ ಈದ್ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ. ಜೊತೆಗೆ ‘ಮಾತೃಭೂಮಿ’ ಚಿತ್ರವೂ ಈ ವರ್ಷ ತೆರೆಗೆ ಬರಲು ಸಜ್ಜಾಗಿದೆ.

ವಿಡಿಯೋ ಕಾಲ್ ಮೂಲಕ ಅಭಿಮಾನಿಗೆ ಸರ್ಪ್ರೈಸ್ ಕೊಟ್ಟ ಅಜಿತ್

ಚೆನ್ನೈ: ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್ ಅವರ ಅಪರೂಪದ ನಡೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಯಾವುದೇ ಪ್ರಚಾರ ಕಾರ್ಯಕ್ರಮ, ಆಡಿಯೋ ಲಾಂಚ್ ಅಥವಾ ಅಭಿಮಾನಿ ಸಂವಾದಗಳಿಂದ ದೂರ ಉಳಿಯುವ ಅಜಿತ್, ತಮ್ಮ ಸ್ನೇಹಿತನ ಮಕ್ಕಳಿಗೆ ಸ್ವತಃ ವಿಡಿಯೋ ಕಾಲ್ ಮಾಡಿ ಅಚ್ಚರಿ ನೀಡಿದ್ದಾರೆ.

ಸಿನಿಮಾ ಮತ್ತು ವೈಯಕ್ತಿಕ ಬದುಕನ್ನು ಪ್ರತ್ಯೇಕವಾಗಿಟ್ಟುಕೊಳ್ಳುವ ಅಜಿತ್ ಕುಮಾರ್, ಸದ್ಯ ಅಂತರರಾಷ್ಟ್ರೀಯ ರೇಸಿಂಗ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದೇ ವೇಳೆ ತಮ್ಮ ಆಪ್ತ ಸ್ನೇಹಿತನ ಇಬ್ಬರು ಮಕ್ಕಳೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿ ಅವರ ಕನಸಿನ ಕ್ಷಣವನ್ನು ಸಾಕಾರಗೊಳಿಸಿದ್ದಾರೆ.

ರೇಸಿಂಗ್ ಉಡುಪಿನಲ್ಲೇ ಕಾಣಿಸಿಕೊಂಡ ಅಜಿತ್, ಮಕ್ಕಳೊಂದಿಗೆ ಅತ್ಯಂತ ಪ್ರೀತಿಯಿಂದ ಮಾತನಾಡಿ ಅವರ ಶಿಕ್ಷಣ, ದಿನನಿತ್ಯದ ಚಟುವಟಿಕೆಗಳ ಬಗ್ಗೆ ವಿಚಾರಿಸಿದರು. ಜೊತೆಗೆ “ಶೀಘ್ರದಲ್ಲೇ ನಿಮ್ಮನ್ನು ಖುದ್ದಾಗಿ ಭೇಟಿ ಮಾಡುತ್ತೇನೆ. ದೇವರು ನಿಮ್ಮನ್ನು ಸದಾ ಕಾಪಾಡಲಿ” ಎಂದು ಶುಭ ಹಾರೈಸಿದರು.

ಸೂಪರ್‌ಸ್ಟಾರ್ ಜೊತೆ ನೇರವಾಗಿ ಮಾತನಾಡಿದ ಖುಷಿಯಲ್ಲಿ ಮಕ್ಕಳು ಸಂಭ್ರಮಿಸಿದ ದೃಶ್ಯಗಳು ಇದೀಗ ವೈರಲ್ ಆಗಿವೆ. ಅಭಿಮಾನಿಗಳು ವಿಡಿಯೋ ನೋಡಿ ಭಾವುಕರಾಗಿದ್ದು, ಅಜಿತ್ ಅವರ ಸರಳತೆ ಮತ್ತು ವಿನಯಶೀಲತೆಯನ್ನು ಕೊಂಡಾಡುತ್ತಿದ್ದಾರೆ.

“ಇದು ನಿಜವಾದ ಸ್ಟಾರ್‌ಡಮ್”, “ಅಜಿತ್ ಸರ್ ಅವರಂತಹ ವ್ಯಕ್ತಿತ್ವ ಅಪರೂಪ”, “ಕೋಟ್ಯಂತರ ಅಭಿಮಾನಿಗಳಿದ್ದರೂ ನೆಲದ ಜೊತೆಗಿನ ನಂಟು ಕಳೆದುಕೊಂಡಿಲ್ಲ” ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

90ರ ದಶಕದಿಂದ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ತನ್ನದೇ ಆದ ಸ್ಥಾನ ನಿರ್ಮಿಸಿಕೊಂಡಿರುವ ಅಜಿತ್, ಇಂದಿಗೂ ಪ್ರಚಾರದ ಗಿಮಿಕ್‌ಗಳಿಗಿಂತ ತಮ್ಮ ಕೆಲಸದ ಮೂಲಕವೇ ಜನರನ್ನು ತಲುಪುವ ನಟರಾಗಿದ್ದಾರೆ. ಇತ್ತೀಚೆಗೆ ತಾಯಿಯ ಅಗಲಿಕೆಯ ದುಃಖ ಅನುಭವಿಸಿದ್ದರೂ, ಮತ್ತೆ ರೇಸಿಂಗ್ ಟ್ರ್ಯಾಕ್‌ಗೆ ಮರಳಿರುವ ಅವರು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ದಕ್ಷಿಣ ಭಾರತೀಯ ಚಿತ್ರರಂಗದ ದಂತಕಥೆ ಭಾರತಿರಾಜ ನಿಧನ

ಚೆನ್ನೈ: ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ಕ್ರಾಂತಿ ಮೂಡಿಸಿದ್ದ ಖ್ಯಾತ ನಿರ್ದೇಶಕ, ನಟ ಭಾರತಿ ರಾಜ (86) ಅವರು ಬುಧವಾರ ಮುಂಜಾನೆ ನಿಧನರಾಗಿದ್ದಾರೆ. ವೃದ್ಧಾಪ್ಯ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಗ್ರಾಮೀಣ ಬದುಕಿನ ಸೊಗಡನ್ನು ಬೆಳ್ಳಿತೆರೆಯಲ್ಲಿ ಅದ್ಭುತವಾಗಿ ಕಟ್ಟಿಕೊಟ್ಟ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ಭಾರತಿ ರಾಜ, 1977ರ ‘16 ವಯತಿನಿಲೆ’ ಚಿತ್ರದ ಮೂಲಕ ನಿರ್ದೇಶಕರಾಗಿ ಭಾರೀ ಯಶಸ್ಸು ಕಂಡಿದ್ದರು. ನಂತರ ‘ಕಿಲಕ್ಕೆ ಪೋಗುಂ ರೈಲು’, ‘ಸಿಗಪ್ಪು ರೋಜಕ್ಕಲ್’, ‘ಅಲೈಗಲ್ ಓಯಿವತಿಲ್ಲೈ’, ‘ಕಾದಲ್ ಓವಿಯಂ’ ಹಾಗೂ ‘ಮುದಲ್ ಮರಿಯಾಥೈ’ ಚಿತ್ರಗಳ ಮೂಲಕ ತಮಿಳು ಚಿತ್ರರಂಗದ ದಿಕ್ಕನ್ನೇ ಬದಲಿಸಿದ್ದರು.

ಚಿತ್ರರಂಗದ ಪಯಣ ಆರಂಭಿಸುವ ಮುನ್ನ ಕನ್ನಡದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಬಳಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ಭಾರತಿ ರಾಜ, ಅಲ್ಲಿಯೇ ನಿರ್ದೇಶನದ ಸೂಕ್ಷ್ಮತೆಗಳನ್ನು ಕಲಿತಿದ್ದರು. ಕನ್ನಡದಲ್ಲಿ ಸಿನಿಮಾ ಮಾಡದಿದ್ದರೂ ಕನ್ನಡಿಗರೊಂದಿಗೆ ವಿಶೇಷ ನಂಟು ಹೊಂದಿದ್ದರು.

ತೆಲುಗಿನಲ್ಲಿ ‘ಸೀತಕೋಕ ಚಿಲುಕ’, ‘ಆರಾಧನಾ’, ‘ಜಮದಗ್ನಿ’, ‘ಈ ತರಂ ಇಲ್ಲು’, ‘ಎರ್ರಾ ಗುಲಾಬಿಲು’, ‘ಟಿಕ್ ಟಿಕ್ ಟಿಕ್’, ‘ಕೊತ್ತ ಜೀವನಲು’ ಹಾಗೂ ‘ಯುವತರಂ ಪಿಲಿಚಿಂಡಿ’ ಸೇರಿದಂತೆ ಅನೇಕ ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿ ಅಪಾರ ಮೆಚ್ಚುಗೆ ಗಳಿಸಿದ್ದರು.

2020ರಲ್ಲಿ ಬಿಡುಗಡೆಯಾದ ‘ಮೀಂದುಮ್ ಒರು ಮರಿಯಾಥೈ’ ಅವರ ಕೊನೆಯ ನಿರ್ದೇಶನದ ಸಿನಿಮಾ. ಬಳಿಕ ಅವರು ಯಾವುದೇ ಚಿತ್ರ ನಿರ್ದೇಶಿಸಿರಲಿಲ್ಲ. ನಟನಾಗಿಯೂ ಯಶಸ್ವಿ ವೃತ್ತಿಜೀವನ ಕಟ್ಟಿಕೊಂಡಿದ್ದ ಅವರು, ಅನೇಕ ಚಿತ್ರಗಳಲ್ಲಿ ತಮ್ಮ ಅಭಿನಯದ ಮೂಲಕ ಗಮನ ಸೆಳೆದಿದ್ದರು.

ಕಳೆದ ವರ್ಷ ಪುತ್ರ ಹಾಗೂ ನಟ-ನಿರ್ದೇಶಕ ಮನೋಜ್ ಭಾರತಿರಾಜ ಅವರ ನಿಧನದಿಂದ ಭಾರತಿ ರಾಜ ತೀವ್ರವಾಗಿ ಮನನೊಂದಿದ್ದರು. ಆ ದುಃಖದಿಂದ ಹೊರಬರಲು ಕುಟುಂಬದೊಂದಿಗೆ ಕೆಲಕಾಲ ವಿದೇಶದಲ್ಲಿ ಕಾಲ ಕಳೆದಿದ್ದರು. ಇದೀಗ ಅವರ ಅಗಲಿಕೆಯಿಂದ ಭಾರತೀಯ ಸಿನಿರಂಗದ ದಿಗ್ಗಜರ ಪೀಳಿಗೆಯ ಮತ್ತೊಂದು ಕೊಂಡಿ ಕಳಚಿದಂತಾಗಿದೆ. ಚಿತ್ರರಂಗದ ಗಣ್ಯರು, ಅಭಿಮಾನಿಗಳು ಹಾಗೂ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

97 ವರ್ಷದ ತಾತನನ್ನು ಭೇಟಿಯಾಗಲು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮೊಮ್ಮಗನಿಗೆ ಪೆರೋಲ್‌ ಮಂಜೂರು

ಬೆಂಗಳೂರು: ಮರಣಶಯ್ಯೆಯಲ್ಲಿರುವ 97 ವರ್ಷದ ತಾತನನ್ನು ಭೇಟಿ ಮಾಡಿ ಕೊನೆಯ ಕ್ಷಣಗಳಲ್ಲಿ ಆರೈಕೆ ಮಾಡುವ ಅವಕಾಶ ಕಲ್ಪಿಸುವ ಉದ್ದೇಶದಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಯೊಬ್ಬರಿಗೆ ಕರ್ನಾಟಕ ಹೈಕೋರ್ಟ್ 15 ದಿನಗಳ ತುರ್ತು ಪೆರೋಲ್ ಮಂಜೂರು ಮಾಡಿದೆ.

ಮೈಸೂರು ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಎನ್.ಡಿ. ನವೀನ್ ಅಲಿಯಾಸ್ ಸಬ್ಸಿಡಿ ನವೀನ್ ಅವರಿಗೆ ಪೆರೋಲ್ ನೀಡುವಂತೆ ಅವರ ತಂದೆ ಎನ್.ಎನ್. ದೇವರಾಜು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠ, ಪ್ರಕರಣದ ಪರಿಸ್ಥಿತಿಯನ್ನು ಪರಿಗಣಿಸಿ 15 ದಿನಗಳ ತುರ್ತು ಪೆರೋಲ್ ಮಂಜೂರು ಮಾಡಿ ಆದೇಶ ಹೊರಡಿಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕೊಲೆ ಪ್ರಕರಣದಲ್ಲಿ ನವೀನ್ ಅವರಿಗೆ 2024ರ ಡಿಸೆಂಬರ್ 18ರಂದು ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಅವರು 2022ರ ಅಕ್ಟೋಬರ್ 2ರಿಂದ ಜೈಲಿನಲ್ಲಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಪ್ರಸ್ತುತ ಅವರ 97 ವರ್ಷದ ತಾತ ಗಂಭೀರ ಅನಾರೋಗ್ಯದಿಂದ ಮರಣಶಯ್ಯೆಯಲ್ಲಿದ್ದು, ಅವರನ್ನು ಭೇಟಿ ಮಾಡಲು ಪೆರೋಲ್ ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲರು, ಈ ಹಿಂದೆ ನವೀನ್ ಅವರಿಗೆ ಮೂರು ಬಾರಿ ಪೆರೋಲ್ ಮಂಜೂರಾಗಿದ್ದು, ಎಲ್ಲ ಸಂದರ್ಭಗಳಲ್ಲೂ ಅವರು ವಿಧಿಸಲಾದ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಪೆರೋಲ್ ಅವಧಿ ಪೂರ್ಣಗೊಂಡ ಕೂಡಲೇ ಅವರು ಜೈಲಿಗೆ ಶರಣಾಗಿದ್ದು, ಯಾವುದೇ ನಿಯಮ ಉಲ್ಲಂಘನೆಯೂ ನಡೆದಿಲ್ಲ ಎಂದು ವಿವರಿಸಿದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಪೀಠ, ಮಾನವೀಯ ನೆಲೆಯಲ್ಲಿ ನವೀನ್ ಅವರಿಗೆ 15 ದಿನಗಳ ತುರ್ತು ಪೆರೋಲ್ ಮಂಜೂರು ಮಾಡಿತು.

ಆದರೆ, ಪೆರೋಲ್ ಅವಧಿಯಲ್ಲಿ ಕೆಲವು ಷರತ್ತುಗಳನ್ನು ವಿಧಿಸಲಾಗಿದ್ದು, ವಾರಕ್ಕೊಮ್ಮೆ ಸಂಬಂಧಿತ ಪೊಲೀಸ್ ಠಾಣೆಗೆ ಹಾಜರಾಗಿ ಸಹಿ ಮಾಡಬೇಕು ಎಂದು ಸೂಚಿಸಲಾಗಿದೆ. ಜೊತೆಗೆ, ಪೆರೋಲ್ ಅವಧಿಯಲ್ಲಿ ಯಾವುದೇ ಅಪರಾಧಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬಾರದು ಹಾಗೂ ಅವಧಿ ಮುಗಿದ ಕೂಡಲೇ ಜೈಲಿಗೆ ಮರಳಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.

ಗದಗ ಜಂಕ್ಷನ್‌ಗೆ ಯಶವಂತಪುರ ರೈಲು ನಿಲುಗಡೆಗೆ ಒತ್ತಾಯ

0

ವಿಜಯಸಾಕ್ಷಿ ಸುದ್ದಿ, ಗದಗ: ಯಶವಂತಪುರ-ವಿಜಯಪುರ ನಡುವೆ ಸಂಚರಿಸುವ ರೈಲಿಗೆ ಗದಗ ಮೇನ್ ಜಂಕ್ಷನ್‌ನಲ್ಲಿ ನಿಲುಗಡೆ ಕಲ್ಪಿಸಬೇಕು ಹಾಗೂ ಗದಗ-ಹರಪನಹಳ್ಳಿ ನೂತನ ರೈಲು ಮಾರ್ಗ ಕಾಮಗಾರಿಯನ್ನು ಶೀಘ್ರ ಆರಂಭಿಸಬೇಕು ಎಂದು ಗದಗ ಜಿಲ್ಲಾ ವಿಕಾಸ ವೇದಿಕೆ ವತಿಯಿಂದ ಮಾಜಿ ಮುಖ್ಯಮಂತ್ರಿ ಹಾಗೂ ಗದಗ-ಹಾವೇರಿ ಲೋಕಸಭಾ ಸದಸ್ಯ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.

ಟ್ರೇನ್ ಸಂಖ್ಯೆ 06577/06578 ಯಶವಂತಪುರ-ವಿಜಯಪುರ ರೈಲು ವಾರಕ್ಕೆ ಎರಡು ಬಾರಿ ಸಂಚರಿಸುವಂತೆ ವಿಸ್ತರಿಸಲಾಗಿದ್ದರೂ, ಗದಗ ಬೈಪಾಸ್‌ನಲ್ಲಿ ನೀಡಲಾಗಿದ್ದ ಎರಡು ನಿಮಿಷಗಳ ತಾತ್ಕಾಲಿಕ ನಿಲುಗಡೆಯನ್ನೂ ರದ್ದುಪಡಿಸಿರುವುದು ಜಿಲ್ಲೆಯ ಪ್ರಯಾಣಿಕರಿಗೆ ಅನ್ಯಾಯವಾಗಿದೆ ಎಂದು ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪೂರ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ಹಾಗೂ ವಿಜಯಪುರ ನಗರಗಳಿಗೆ ಪ್ರತಿನಿತ್ಯ ಪ್ರಯಾಣಿಸುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಈ ರೈಲು ಅತ್ಯಂತ ಅನುಕೂಲಕರವಾಗಿದೆ. ಗದಗವು ಐತಿಹಾಸಿಕ ರೈಲ್ವೆ ಜಂಕ್ಷನ್ ಆಗಿದ್ದು, ಗದಗ-ಕುಷ್ಟಗಿ, ಗದಗ-ಗಂಗಾವತಿ, ಸಿಂಧನೂರು ಭಾಗಗಳ ಸಂಪರ್ಕಕ್ಕೂ ಪ್ರಮುಖ ಕೇಂದ್ರವಾಗಿದೆ. ಕೇವಲ ಇಂಜಿನ್ ಬದಲಾವಣೆಗೆ 15 ನಿಮಿಷಗಳ ಕಾಲಾವಕಾಶ ಬೇಕಿರುವ ಕಾರಣ ಗದಗ ಮೇನ್ ಜಂಕ್ಷನ್‌ನಲ್ಲಿ ನಿಲುಗಡೆ ನೀಡಲು ಯಾವುದೇ ತೊಂದರೆ ಇರುವುದಿಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಮನವಿಗೆ ಸ್ಪಂದಿಸಿದ ಬಸವರಾಜ ಬೊಮ್ಮಾಯಿ ರೈಲ್ವೆ ಇಲಾಖೆಯ ಗಮನಕ್ಕೆ ವಿಷಯವನ್ನು ಮತ್ತೊಮ್ಮೆ ತಂದು ಗದಗ ಜಂಕ್ಷನ್‌ನಲ್ಲಿ ನಿಲುಗಡೆ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಗದಗ-ಹರಪನಹಳ್ಳಿ ನೂತನ ರೈಲು ಮಾರ್ಗದ ಸರ್ವೇ ಹಾಗೂ ಕಾಮಗಾರಿಯನ್ನು ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಹಾಗೂ ರಾಜ್ಯ ಸಚಿವ ವಿ. ಸೋಮಣ್ಣ ಅವರ ಗಮನಕ್ಕೆ ತರುವುದಾಗಿ ಹೇಳಿದರು.

ಈ ಯೋಜನೆಗೆ ವೇಗ ನೀಡುವಂತೆ ಗದಗ ಮತ್ತು ವಿಜಯನಗರ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ವಿಜಯನಗರ ಲೋಕಸಭಾ ಸದಸ್ಯ ತುಕಾರಾಮ್ ಹಾಗೂ ಹರಪನಹಳ್ಳಿ ಶಾಸಕಿಯಾದ ಲತಾ ಮಲ್ಲಿಕಾರ್ಜುನ್ ಅವರಿಗೂ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ವಿಶ್ವನಾಥ ಖಾನಾಪೂರ ತಿಳಿಸಿದರು.

ಈ ಸಂದರ್ಭದಲ್ಲಿ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ನರಗುಂದ ಶಾಸಕ ಹಾಗೂ ಮಾಜಿ ಸಚಿವ ಸಿ.ಸಿ‌. ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸತೀಶ ಪರ್ವತಗೌಡರ, ಜಗದೀಶ ಕಂಗೂರಿ, ವೆಂಕಟೇಶ ಕಬಾಡಿ, ಬಸವರಾಜ ತಳವಾರ, ಸಿದ್ದಪ್ಪ ಜರತಕನ್ನಿ, ರಜಾಕ್ ನೂರಭಾಷಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.

 “ಗದಗ ಐತಿಹಾಸಿಕ ರೈಲ್ವೆ ಜಂಕ್ಷನ್‌. ಜಿಲ್ಲೆಯ ಸಾವಿರಾರು ಪ್ರಯಾಣಿಕರ ಹಿತದೃಷ್ಟಿಯಿಂದ ಯಶವಂತಪುರ-ವಿಜಯಪುರ ರೈಲು ಗದಗ ಮೇನ್ ಜಂಕ್ಷನ್‌ನಲ್ಲಿ ನಿಲ್ಲಿಸುವುದು ಅತ್ಯಗತ್ಯ.”

ವಿಶ್ವನಾಥ ಖಾನಾಪೂರ

ಅಧ್ಯಕ್ಷರು, ಗದಗ ಜಿಲ್ಲಾ ವಿಕಾಸ ವೇದಿಕೆ

 

ಜೂ. 16ರ ಬೃಹತ್ ಪ್ರತಿಭಟನೆಗೆ ಇಂದು ಪೂರ್ವಭಾವಿ ಸಭೆ

0

ವಿಜಯಸಾಕ್ಷಿ ಸುದ್ದಿ, ಗದಗ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಶಾಸಕ ಎಚ್.ಕೆ.ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಜೂನ್ 16ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಅದರ ಪೂರ್ವಸಿದ್ಧತೆಯ ಅಂಗವಾಗಿ ಎಚ್‌.ಕೆ. ಪಾಟೀಲ ಅಭಿಮಾನಿ ಬಳಗದ ವತಿಯಿಂದ ಜೂನ್ 10ರಂದು ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.

ನಗರದ ದಿ. ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ನಡೆಯಲಿರುವ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ಘಟಕಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಎಪಿಎಂಸಿ, ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಗಳ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಪಕ್ಷದ ವಿವಿಧ ಸಂಘಟನೆಗಳ ಪ್ರತಿನಿಧಿಗಳಿಗೆ ಸಭೆಗೆ ಆಹ್ವಾನ ನೀಡಲಾಗಿದೆ.

ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ ಘಟಕ, ಅಲ್ಪಸಂಖ್ಯಾತರ ಘಟಕ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗಗಳ ಘಟಕ, ಸಾಮಾಜಿಕ ಜಾಲತಾಣ ವಿಭಾಗ, ರಾಜೀವ್ ಗಾಂಧಿ ಪಂಚಾಯತ್ ಸಂಘಟನೆ, ಮಾಜಿ ಸೈನಿಕರ ವಿಭಾಗ, ಕಾರ್ಮಿಕರ ವಿಭಾಗ, ಐಎನ್‌ಟಿಯುಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಹಾಗೂ ಖೇತ್ ಮಜದೂರ ವಿಭಾಗ, ವೈದ್ಯರ ಮತ್ತು ವೃತ್ತಿಪರ ವಿಭಾಗ, ಶಿಕ್ಷಕರ ಹಾಗೂ ಪದವಿಧರರ ವಿಭಾಗ, ಐಟಿ ಮತ್ತು ಡಾಟಾ ವಿಭಾಗ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಸುಂಕಾಪುರ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಪತ್ರಿಕಾ ಪ್ರಕಟಣೆ ಮೂಲಕ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

 

error: Content is protected !!