Home Blog

ಕಿಯಾರಾ ಜನ್ಮದಿನಕ್ಕೆ ‘ಟಾಕ್ಸಿಕ್’ ಹೊಸ ಚಿತ್ರ ಬಿಡುಗಡೆ: ‘ನಾಡಿಯಾ’ ಲುಕ್‌ಗೆ ಸಿನಿಪ್ರಿಯರು ಫಿದಾ!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಟಾಕ್ಸಿಕ್’ ಮತ್ತೊಮ್ಮೆ ಸುದ್ದಿಯಲ್ಲಿದೆ. ಬಾಲಿವುಡ್ ಸ್ಟಾರ್ ನಟಿ ಕಿಯಾರಾ ಅಡ್ವಾಣಿ ಅವರ ಜನ್ಮದಿನದ ಪ್ರಯುಕ್ತ ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಭಿತ್ತಿಚಿತ್ರ ಸಿನಿ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ.

ಚಿತ್ರದಲ್ಲಿ ‘ನಾಡಿಯಾ’ ಪಾತ್ರ ನಿರ್ವಹಿಸುತ್ತಿರುವ ಕಿಯಾರಾ ಅಡ್ವಾಣಿ ಅವರ ಹೊಸ ರೂಪ ಭಾರೀ ಮೆಚ್ಚುಗೆ ಪಡೆಯುತ್ತಿದೆ. ಕೆಂಪು ಬಣ್ಣದ ವೇಷಭೂಷಣ, ಆಕರ್ಷಕ ಮೇಕಪ್ ಹಾಗೂ ಗಂಭೀರ ಭಾವಭಂಗಿಯೊಂದಿಗೆ ಕಾಣಿಸಿಕೊಂಡಿರುವ ಕಿಯಾರಾ ಅವರ ಈ ಲುಕ್ ಚಿತ್ರದ ಪಾತ್ರದ ಮೇಲಿನ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದೆ.

ಈ ಹಿಂದೆ ಬಿಡುಗಡೆಯಾದ ‘ತಬಾಹಿ’ ಹಾಡಿನಲ್ಲಿ ಯಶ್ ಮತ್ತು ಕಿಯಾರಾ ನಡುವಿನ ರೊಮ್ಯಾಂಟಿಕ್ ದೃಶ್ಯಗಳು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದ್ದವು. ಚಿತ್ರದಲ್ಲಿ ಕಿಯಾರಾ ಸರ್ಕಸ್‌ನ ಪ್ರಮುಖ ಕಲಾವಿದೆಯಾಗಿ ಕಾಣಿಸಿಕೊಳ್ಳಲಿದ್ದು, ಕಥೆಯ ಕೇಂದ್ರಬಿಂದುವಾಗಿರುವ ಪಾತ್ರವನ್ನು ನಿರ್ವಹಿಸಿದ್ದಾರೆ ಎನ್ನಲಾಗಿದೆ.

ಒಂದು ಸಂದರ್ಶನದಲ್ಲಿ ಮಾತನಾಡಿದ್ದ ಕಿಯಾರಾ, ‘ಟಾಕ್ಸಿಕ್’ ಮಹಿಳಾ ಪಾತ್ರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ವಿಶಿಷ್ಟ ಸಿನಿಮಾ ಎಂದು ಹೇಳಿದ್ದರು. ಯಶ್ ಅಭಿನಯದ ಮಾಸ್ ಸಿನಿಮಾವನ್ನು ಮಹಿಳಾ ಪ್ರಧಾನ ಕಥೆಯೆಂದು ಅವರು ವಿವರಿಸಿದ್ದರಿಂದ ಚಿತ್ರದ ಕಥಾಹಂದರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮತ್ತಷ್ಟು ಹೆಚ್ಚಿದೆ.

ಗೀತು ಮೋಹನ್‌ದಾಸ್ ನಿರ್ದೇಶನದ ಈ ಬಿಗ್ ಬಜೆಟ್ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಿಸುತ್ತಿವೆ. ಯಶ್ ದ್ವಿಪಾತ್ರದಲ್ಲಿ ಅಭಿನಯಿಸುತ್ತಿದ್ದು, ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಕಾರಣದಿಂದಲೇ ‘ಟಾಕ್ಸಿಕ್’ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.

ರಾವಣನ ಎದುರು ರಾಧಿಕಾ ಪಂಡಿತ್ ಪೋಸ್: ಯಶ್ ಅಭಿಮಾನಿಗಳಲ್ಲಿ ಹೊಸ ಚರ್ಚೆ

ಬೆಂಗಳೂರು: ‘ರಾಮಾಯಣ’ ಟ್ರೇಲರ್ ವಿಶ್ವಾದ್ಯಂತ ಸದ್ದು ಮಾಡುತ್ತಿರುವ ಬೆನ್ನಲ್ಲೇ, ನಟಿ ರಾಧಿಕಾ ಪಂಡಿತ್ ಅವರ ಒಂದು ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಾವಣನ ಪಾತ್ರದಲ್ಲಿ ಯಶ್ ಅಬ್ಬರಿಸುತ್ತಿರುವ ಸಮಯದಲ್ಲೇ ರಾವಣನ ಬೃಹತ್ ಪ್ರತಿಮೆಯ ಮುಂದೆ ತೆಗೆಸಿಕೊಂಡ ಫೋಟೋವನ್ನು ರಾಧಿಕಾ ಹಂಚಿಕೊಂಡಿದ್ದಾರೆ.

ಸಮುದ್ರ ತೀರದಲ್ಲಿರುವ ದಶಮುಖ ರಾವಣನ ಪ್ರತಿಮೆಯ ಎದುರು ಸ್ಟೈಲಿಷ್ ಆಗಿ ನಿಂತಿರುವ ಫೋಟೋಗೆ “ಗೊತ್ತಿರೋರಿಗೆ ಮಾತ್ರ ಗೊತ್ತು” ಎಂದು ಕ್ಯಾಪ್ಶನ್ ನೀಡಿರುವುದು ಅಭಿಮಾನಿಗಳಲ್ಲಿ ಚರ್ಚೆ ಹುಟ್ಟುಹಾಕಿದೆ.

‘ರಾಮಾಯಣ’ ಟ್ರೇಲರ್‌ನಲ್ಲಿ ಯಶ್ ಅವರ ರಾವಣನ ಲುಕ್‌ಗೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಈ ಪೋಸ್ಟ್‌ನ್ನು ಅಭಿಮಾನಿಗಳು ಚಿತ್ರದ ಜೊತೆ ಸಂಪರ್ಕಿಸಿ ವ್ಯಾಖ್ಯಾನಿಸುತ್ತಿದ್ದಾರೆ. “ಇವರೇ ನಮ್ಮ ರಾವಣನ ಮಂಡೋದರಿ”, “ರಾವಣನಿಗೆ ಪರ್ಫೆಕ್ಟ್ ಸಪೋರ್ಟ್” ಎಂಬ ಕಾಮೆಂಟ್‌ಗಳು ವೈರಲ್ ಆಗಿವೆ.

ಬಿಳಿ ಬಣ್ಣದ ಲಾಂಗ್ ಫ್ರಾಕ್ ಹಾಗೂ ಕಪ್ಪು ಕನ್ನಡಕದಲ್ಲಿ ರಾಧಿಕಾ ಪಂಡಿತ್ ಮಿಂಚಿದ್ದು, ಅವರ ಸ್ಟೈಲ್ ಕೂಡ ನೆಟ್ಟಿಗರ ಗಮನ ಸೆಳೆದಿದೆ. ಟ್ರೇಲರ್‌ನಿಂದ ಈಗಾಗಲೇ ಭಾರೀ ಹೈಪ್ ಸೃಷ್ಟಿಸಿರುವ ‘ರಾಮಾಯಣ’ ಚಿತ್ರದ ಚರ್ಚೆಯನ್ನು ರಾಧಿಕಾ ಅವರ ಈ ಪೋಸ್ಟ್ ಮತ್ತಷ್ಟು ಉತ್ತುಂಗಕ್ಕೇರಿಸಿದೆ.

‘ಇದು ಸೂಕ್ತ ಸಮಯವಲ್ಲ’: ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಲು ಡಿಕೆ ಶಿವಕುಮಾರ್ ಮನವಿ

ಬೆಂಗಳೂರು: ಆಗಸ್ಟ್‌ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಕರ್ನಾಟಕ ಭೇಟಿಯನ್ನು ಮುಂದೂಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ನಿರ್ಮಾಣವಾಗಿರುವ ಸೂಕ್ಷ್ಮ ಪರಿಸ್ಥಿತಿಯಲ್ಲಿ ಈ ಭೇಟಿ ಸೂಕ್ತವಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, “ಈ ವಾತಾವರಣದಲ್ಲಿ ವಿಜಯ್ ಅವರನ್ನು ಕರೆಸುವುದು ಸರಿಯಲ್ಲ. ನಾನು ಆಹ್ವಾನ ನೀಡುವುದು, ಕೆಲವರು ಪ್ರತಿಭಟನೆ ಅಥವಾ ಮುತ್ತಿಗೆ ಹಾಕುವುದು ಯಾವುದೇ ದೃಷ್ಟಿಯಿಂದಲೂ ಸಮಂಜಸವಲ್ಲ. ಈ ವಿಚಾರದಲ್ಲಿ ಕೆಲವರು ನಡೆದುಕೊಳ್ಳುತ್ತಿರುವ ರೀತಿ ನನಗೆ ಸಮಾಧಾನ ತರುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಸ್ವತಃ ಕರ್ನಾಟಕಕ್ಕೆ ಬಂದು ಸೌಹಾರ್ದಯುತವಾಗಿ ಚರ್ಚೆ ನಡೆಸಲು ಆಸಕ್ತಿ ತೋರಿದ್ದರು ಎಂದು ತಿಳಿಸಿದ ಅವರು, ಈ ಹಿಂದೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರೊಂದಿಗೂ ಮಾತುಕತೆ ನಡೆಸಲು ಪ್ರಯತ್ನಿಸಿದ್ದರೂ ಅದು ಸಾಧ್ಯವಾಗಿರಲಿಲ್ಲ ಎಂದರು. ಆದರೆ ಸದ್ಯದ ಪರಿಸ್ಥಿತಿಯನ್ನು ಗಮನಿಸಿ, ಆಗಸ್ಟ್‌ 3ರ ನಿಗದಿತ ಭೇಟಿಯನ್ನು ಮುಂದೂಡುವಂತೆ ವಿಜಯ್ ಅವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಇದೇ ವೇಳೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಸಿಡಬ್ಲ್ಯೂಎಂಎ 4.5 ಟಿಎಂಸಿ ನೀರು ಹರಿಸುವಂತೆ ನಿರ್ದೇಶನ ನೀಡಿದೆ. ಆದರೆ ಭಾನುವಾರ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಎಲ್ಲ ಪಕ್ಷಗಳ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ರಾಜಕೀಯ ಅಖಾಡಕ್ಕೆ? ವಕೀಲ ಸುನೀಲ್ ಹೇಳಿದ್ದೇನು? 

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೈಕೋರ್ಟ್‌ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಮಂಜೂರು ಮಾಡುವುದರ ಜೊತೆಗೆ, ಕೆಳಹಂತದ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ.

ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್ ಮತ್ತು ಜಿ. ಬಸವರಾಜ ಅವರಿದ್ದ ವಿಭಾಗೀಯ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ. ವಿನಯ್ ಕುಲಕರ್ಣಿ ಅವರಿಗೆ 5 ಲಕ್ಷ ರೂಪಾಯಿ ಬಾಂಡ್ ಹಾಗೂ ಶ್ಯೂರಿಟಿ ಒದಗಿಸುವಂತೆ ನ್ಯಾಯಾಲಯ ಸೂಚಿಸಿದೆ.

ವಿನಯ್ ಕುಲಕರ್ಣಿ ಪರ ವಕೀಲ ಸುನೀಲ್ ಮಾತನಾಡಿ, ಇದು ಕಾನೂನು ಹೋರಾಟದ ಒಂದು ಮಧ್ಯಂತರ ಜಯ ಎಂದು ಹೇಳಿದ್ದಾರೆ. ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೂ ವಿನಯ್ ಕುಲಕರ್ಣಿಗೂ ಯಾವುದೇ ಸಂಬಂಧವಿಲ್ಲ. ಸಿಬಿಐ ತನಿಖೆಯ ಬಳಿಕ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂಬುದು ತಮ್ಮ ಪ್ರಮುಖ ವಾದವಾಗಿತ್ತು ಎಂದು ತಿಳಿಸಿದ್ದಾರೆ.

ಸೆಷನ್ಸ್ ನ್ಯಾಯಾಲಯವು ವಿನಯ್ ಕುಲಕರ್ಣಿಗೆ ಶಿಕ್ಷೆ ವಿಧಿಸುವಾಗ ಅಪ್ರೂವರ್ ಸಾಕ್ಷಿಯ ಮೇಲೆ ಹೆಚ್ಚು ಅವಲಂಬಿತವಾಗಿತ್ತು. ಅಲ್ಲದೇ, ಸಾಕ್ಷ್ಯಾಧಾರಗಳನ್ನು ಸಮರ್ಪಕವಾಗಿ ಪರಿಶೀಲಿಸದೆ ಕೇವಲ ಸಿಬಿಐ ಚಾರ್ಜ್‌ಶೀಟ್ ಆಧರಿಸಿ ತೀರ್ಪು ನೀಡಲಾಗಿದೆ ಎಂದು ವಕೀಲರು ವಾದಿಸಿದ್ದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ಹೈಕೋರ್ಟ್, ವಿನಯ್ ಕುಲಕರ್ಣಿ ಅವರ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ಮಂಜೂರು ಮಾಡಿದೆ.

ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 10 ಆರೋಪಿಗಳಿದ್ದು, ಚನ್ನಕೇಶವ ಟಿಂಗರಿಕರ್ ಸೇರಿದಂತೆ ಕೆಲ ಆರೋಪಿಗಳಿಗೆ ಜಾಮೀನು ದೊರೆತಿದೆ. ಆದರೆ ಎಲ್ಲ ಆರೋಪಿಗಳಿಗೂ ಇನ್ನೂ ಜಾಮೀನು ಮಂಜೂರಾಗಿಲ್ಲ ಎಂದು ವಕೀಲರು ಸ್ಪಷ್ಟಪಡಿಸಿದ್ದಾರೆ.

ಇನ್ನು ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೆ ಸಂಬಂಧಿಸಿದಂತೆ, ಈ ಹಿಂದೆ ಸ್ಪೀಕರ್ ಆದೇಶದಲ್ಲಿ ಹೈಕೋರ್ಟ್‌ನ ಅಂತಿಮ ತೀರ್ಪಿನ ಮೇಲೆ ಅನರ್ಹತೆ ನಿರ್ಧಾರವಾಗಲಿದೆ ಎಂದು ತಿಳಿಸಲಾಗಿತ್ತು. ಇದೀಗ ಹೈಕೋರ್ಟ್ ಶಿಕ್ಷೆಗೆ ತಡೆ ನೀಡಿರುವ ಹಿನ್ನೆಲೆಯಲ್ಲಿ ಅವರ ಶಾಸಕ ಸ್ಥಾನಕ್ಕೆ ಮತ್ತೆ ಅವಕಾಶ ದೊರೆಯುವ ಸಾಧ್ಯತೆ ಹೆಚ್ಚಾಗಿದೆ.

ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿ ಅಗತ್ಯ ಶ್ಯೂರಿಟಿ ಸಲ್ಲಿಸಿದ ಬಳಿಕ ವಿನಯ್ ಕುಲಕರ್ಣಿ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ರಾಜ್ಯಾದ್ಯಂತ ಕಾವೇರಿ ಹೋರಾಟ: ಆಗಸ್ಟ್‌ 13 ರಂದು ಅಖಂಡ ಕರ್ನಾಟಕ ಬಂದ್‌!

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶಗಳ ವಿರುದ್ಧ ರಾಜ್ಯದಲ್ಲಿ ರೈತರ ಹೋರಾಟ ತೀವ್ರಗೊಂಡಿದೆ. ಇದರ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಮುಂದಾಗಿವೆ.

ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಆಗ್ರಹಿಸಿ ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್ ನಡೆಸಲು ಕನ್ನಡಪರ ಸಂಘಟನೆಗಳು ಕರೆ ನೀಡಿವೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕನ್ನಡ ಒಕ್ಕೂಟಗಳ ಸಭೆ ನಡೆದಿದ್ದು, ಸಭೆಯ ಬಳಿಕ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸುದ್ದಿಗೋಷ್ಠಿ ನಡೆಸಿ ಬಂದ್ ನಿರ್ಧಾರವನ್ನು ಪ್ರಕಟಿಸಿದರು.

ಆಗಸ್ಟ್ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ರಾಜ್ಯಾದ್ಯಂತ ಸಂಪೂರ್ಣ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಬಂದ್‌ಗೆ ರಾಜ್ಯದ ಎಲ್ಲಾ ಕನ್ನಡಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ರೈತ ಸಂಘಟನೆಗಳು ಹಾಗೂ ಸಾರಿಗೆ ಚಾಲಕರ ಸಂಘಗಳು ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಕಾವೇರಿ ನೀರು ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಪಾಡಬೇಕು. CWRC ಹಾಗೂ CWMA ಆದೇಶಗಳನ್ನು ವಿರೋಧಿಸಿ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಈ ಬಂದ್‌ಗೆ ಕರೆ ನೀಡಲಾಗಿದೆ ಎಂದು ಸಂಘಟನೆಗಳು ತಿಳಿಸಿವೆ.

ಸರ್ವಪಕ್ಷ ಸಭೆಗೂ ಮುನ್ನ ತಮಿಳುನಾಡಿಗೆ ನೀರಿಲ್ಲ: ರಾಮಲಿಂಗಾ ರೆಡ್ಡಿ ಖಡಕ್ ಘೋಷಣೆ

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದ್ದು, ಸರ್ವಪಕ್ಷ ಸಭೆ ನಡೆಯುವವರೆಗೂ ತಮಿಳುನಾಡಿಗೆ ನೀರು ಹರಿಸುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಖಡಕ್‌ವಾಗಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರು ಹರಿಸುವಂತೆ ನೀಡಿರುವ ಆದೇಶದ ಕುರಿತು ಪ್ರತಿಕ್ರಿಯಿಸಿದರು.

“CWMA ಆದೇಶ ನೀಡಿದೆ. ಕಳೆದ 30 ವರ್ಷಗಳಿಂದ ಯಾವ ವಿಚಾರದಲ್ಲಿ ವಾದ ನಡೆಯುತ್ತಿದೆಯೋ ಅದೇ ವಿಚಾರ ಮುಂದುವರಿದಿದೆ. ಆದರೆ ಸದ್ಯ ಮುಖ್ಯಮಂತ್ರಿಗಳು ಭಾನುವಾರ ಸರ್ವಪಕ್ಷ ಸಭೆ ಕರೆದಿದ್ದಾರೆ. ವಿಪಕ್ಷಗಳ ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಸಭೆ ಮುಗಿಯುವವರೆಗೂ ನೀರು ಬಿಡುವುದಿಲ್ಲ” ಎಂದು ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಕುಡಿಯುವ ನೀರಿಗೆ ಸದ್ಯ ಸಮಸ್ಯೆ ಇಲ್ಲವಾದರೂ, ರೈತರ ಬೆಳೆಗಳಿಗೆ ಅಗತ್ಯ ಪ್ರಮಾಣದ ನೀರು ಒದಗಿಸುವುದು ಸವಾಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಬಿಜೆಪಿ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, “ಬಿಜೆಪಿ ಪ್ರತಿಭಟನೆ ಮಾಡುವ ಅಗತ್ಯ ಇರಲಿಲ್ಲ. ರೈತರ ಹಿತದೃಷ್ಟಿಯಿಂದ ಈಗಾಗಲೇ ಮೇಲ್ಮನವಿ ಸಲ್ಲಿಸಿದ್ದೇವೆ. ಸರ್ವಪಕ್ಷ ಸಭೆ ಕರೆದು ಎಲ್ಲರ ಅಭಿಪ್ರಾಯ ಪಡೆಯುತ್ತಿದ್ದೇವೆ. ನೆಲ, ಜಲ, ಭಾಷೆ ವಿಚಾರ ಬಂದಾಗ ಎಲ್ಲರೂ ಒಗ್ಗಟ್ಟಾಗಿ ಹೋಗಬೇಕು” ಎಂದರು.

ರಾಜ್ಯಕ್ಕೆ ಪ್ರತಿವರ್ಷ ಕುಡಿಯುವ ನೀರಿಗಾಗಿ ಸುಮಾರು 40 ಟಿಎಂಸಿ ನೀರು ಅಗತ್ಯವಿದೆ. ಕಳೆದ ವರ್ಷ ಉತ್ತಮ ಮಳೆಯಾಗಿದ್ದರಿಂದ ಸಮಸ್ಯೆ ಎದುರಾಗಲಿಲ್ಲ. ಆದರೆ ಈ ಬಾರಿ ಮಳೆ ಕೊರತೆ ಇರುವುದರಿಂದ ಪರಿಸ್ಥಿತಿ ಸವಾಲಾಗಿದೆ ಎಂದು ತಿಳಿಸಿದರು.

ಮೆಟ್ಟೂರು ಜಲಾಶಯದಲ್ಲಿ ನೀರಿನ ಲಭ್ಯತೆ ಇದ್ದು, ತಮಿಳುನಾಡಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಹೇಳಿದ ಸಚಿವರು, ಮೇಕೆದಾಟು ಯೋಜನೆ ವಿಚಾರದಲ್ಲೂ ಪ್ರತಿಕ್ರಿಯಿಸಿದರು.

“ಮೇಕೆದಾಟು ಡಿಪಿಆರ್‌ ಅನ್ನು ವಾಪಸ್ ಕಳುಹಿಸಲಾಗಿದೆ. ಅಲೊಕೇಶನ್ ಆಗಿರುವುದರಿಂದ ಡಿಪಿಆರ್‌ ಸಲ್ಲಿಸಿ ಎಂದು ಸೂಚಿಸಿದ್ದಾರೆ. ಒಂದು ವಾರದೊಳಗೆ ಸರಿಪಡಿಸಿ ಮತ್ತೆ ಸಲ್ಲಿಸಲಾಗುವುದು” ಎಂದು ರಾಮಲಿಂಗಾ ರೆಡ್ಡಿ ಹೇಳಿದರು.

ವಸಂತ್ ನಾಯ್ಕ್ ಹತ್ಯೆ ಪ್ರಕರಣ: ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಆರೋಪಿಗಳ ಜಾಮೀನು ಅರ್ಜಿ ವಜಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ನಡೆದಿದ್ದ ವಸಂತ್ ನಾಯ್ಕ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಏಳು ಆರೋಪಿಗಳಿಗೆ ಶಿರಸಿಯ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ಮಹತ್ವದ ಹಿನ್ನಡೆ ನೀಡಿದೆ. ಮಧ್ಯಂತರ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದ್ದು, ಆರೋಪಿಗಳು ಸದ್ಯ ಜೈಲಿನಲ್ಲೇ ಮುಂದುವರಿಯಬೇಕಾಗಿದೆ.

ಕಳೆದ ಫೆಬ್ರವರಿಯಲ್ಲಿ ನಡೆದಿದ್ದ ಈ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲಾಕರ್ ಭಟ್, ಸುಚಿತ್ರಾ ಸೇರಿದಂತೆ ಒಟ್ಟು ಒಂಬತ್ತು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಒಬ್ಬ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ. ಬಂಧಿತರಲ್ಲಿ ಒಬ್ಬರಿಗೆ ಈಗಾಗಲೇ ಜಾಮೀನು ದೊರೆತಿದ್ದು, ಉಳಿದ ಏಳು ಆರೋಪಿಗಳು ಮಧ್ಯಂತರ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು.

ಕಮಲಾಕರ್ ಭಟ್, ಸುಚಿತ್ರಾ, ಲೋಕನಾಥ್, ಮೊಹಮ್ಮದ್ ಮೆಹಫೂಜ್, ಮೊಹಮ್ಮದ್ ಫೈಸಲ್, ಇರ್ಫಾನ್ ಹಾಗೂ ಆಕಾಶ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಶಿರಸಿಯ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯವು ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದೆ.

ಇದರೊಂದಿಗೆ ಕಳೆದ ಆರು ತಿಂಗಳಿಂದ ಕಾರವಾರ ಜೈಲಿನಲ್ಲಿರುವ ಆರೋಪಿಗಳಿಗೆ ಸದ್ಯ ಯಾವುದೇ ಕಾನೂನು ಪರಿಹಾರ ದೊರಕದಂತಾಗಿದೆ.

ಈ ನಡುವೆ ಕಮಲಾಕರ್ ಭಟ್ ವಿರುದ್ಧ ಮತ್ತೊಂದು ಗಂಭೀರ ಪ್ರಕರಣವೂ ದಾಖಲಾಗಿದೆ. ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಆ ಸಂಬಂಧವೂ ನ್ಯಾಯಾಂಗ ಪ್ರಕ್ರಿಯೆ ಮುಂದುವರಿದಿದೆ. ಹೀಗಾಗಿ ಕಮಲಾಕರ್ ಭಟ್ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

ಕೆಲಸದ ಬಾಕಿ ಹಣ ಕೇಳಿದ್ದಕ್ಕೆ ಬೆದರಿಕೆ? ಕಲಬುರಗಿಯಲ್ಲಿ ವ್ಯಕ್ತಿ ಆತ್ಮಹತ್ಯೆ! ಕಾಂಗ್ರೆಸ್ ಮುಖಂಡ ವಿರುದ್ಧ FIR

0

ಕಲಬುರಗಿ: ಗುತ್ತಿಗೆ ಕಾಮಗಾರಿಯ ಬಾಕಿ ಹಣ ಕೇಳಿದ ಹಿನ್ನೆಲೆಯಲ್ಲಿ ಬೆದರಿಕೆ ಮತ್ತು ಕಿರುಕುಳ ಎದುರಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಕಾಂಗ್ರೆಸ್ ಮುಖಂಡ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ನಿವಾಸಿ ಖದೀರ್ ಪಾಷಾ (38) ಆತ್ಮಹತ್ಯೆ ಮಾಡಿಕೊಂಡವರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಅರವಿಂದ್ ಚವ್ಹಾಣ್ ಹಾಗೂ ಅವರ ಅಳಿಯ ಅಮಿತ್ ರಾಠೋಡ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಸೇಡಂನ ಸಿಮೆಂಟ್ ಕಾರ್ಖಾನೆಯ ಕಾಮಗಾರಿಯನ್ನು ಗುತ್ತಿಗೆ ಪಡೆದಿದ್ದ ಅರವಿಂದ್ ಚವ್ಹಾಣ್ ಅವರು ಕಾಮಗಾರಿಗೆ ಖದೀರ್ ಪಾಷಾ ಅವರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದರು. ಕೆಲಸ ಪೂರ್ಣಗೊಂಡ ಬಳಿಕ ಬಾಕಿ ಹಣವನ್ನು ಕೇಳಿದಾಗ, ಅರವಿಂದ್ ಚವ್ಹಾಣ್ ಹಾಗೂ ಅಮಿತ್ ರಾಠೋಡ್ ಬೆದರಿಕೆ ಹಾಕಿ ಮಾನಸಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಲಾಗಿದೆ.

ಈ ಕಿರುಕುಳದಿಂದ ಮನನೊಂದ ಖದೀರ್ ಪಾಷಾ ಅವರು ರಟಕಲ್ ಗ್ರಾಮದ ಜಮೀನೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಕುಟುಂಬ ಆರೋಪಿಸಿದೆ.

ಮೃತರ ಪತ್ನಿ ಅನೀಸಾ ಬೇಗಂ ನೀಡಿದ ದೂರಿನ ಆಧಾರದ ಮೇಲೆ ಅರವಿಂದ್ ಚವ್ಹಾಣ್ ಹಾಗೂ ಅಮಿತ್ ರಾಠೋಡ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಅರವಿಂದ್ ಚವ್ಹಾಣ್ ಅವರು 2028ರ ಕಲಬುರಗಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಹಾಗೂ ಆರೋಪಗಳ ಸತ್ಯಾಸತ್ಯತೆಯನ್ನು ಪೊಲೀಸರು ತನಿಖೆ ಮೂಲಕ ಪರಿಶೀಲಿಸುತ್ತಿದ್ದಾರೆ.

ಆಗಸ್ಟ್ 1ರಿಂದ ಹೊಸ ರೂಲ್ಸ್: ಸಿಲಿಂಡರ್ ಬುಕ್ಕಿಂಗ್‌ʼನಿಂದ ಹೊಸ ಸಂಪರ್ಕದವರೆಗೆ ಏನೆಲ್ಲ ಬದಲಾಗಲಿದೆ?

ಬೆಂಗಳೂರು: ಆಗಸ್ಟ್ 1ರಿಂದ ದೇಶಾದ್ಯಂತ ಹಣಕಾಸು, ಬ್ಯಾಂಕಿಂಗ್, ರೈಲ್ವೆ ಹಾಗೂ ಇಂಧನ ಕ್ಷೇತ್ರಗಳಿಗೆ ಸಂಬಂಧಿಸಿದ ಹಲವು ಪ್ರಮುಖ ನಿಯಮಗಳು ಜಾರಿಗೆ ಬರುತ್ತಿವೆ. ಈ ಬದಲಾವಣೆಗಳು ಸಾರ್ವಜನಿಕರ ದೈನಂದಿನ ವ್ಯವಹಾರಗಳ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಆಗಸ್ಟ್ ತಿಂಗಳಿನಿಂದ ಜಾರಿಗೆ ಬರುತ್ತಿರುವ ಪ್ರಮುಖ ಐದು ಬದಲಾವಣೆಗಳ ವಿವರ ಇಲ್ಲಿದೆ.

1. ತತ್ಕಾಲ್ ರೈಲು ಟಿಕೆಟ್ ಬುಕ್ಕಿಂಗ್‌ಗೆ ಹೊಸ ವ್ಯವಸ್ಥೆ

ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಮತ್ತಷ್ಟು ಸುಗಮಗೊಳಿಸಲು ಹೊಸ ವ್ಯವಸ್ಥೆ ಜಾರಿಗೆ ತರುತ್ತಿದೆ. ಬುಕ್ಕಿಂಗ್ ಕೌಂಟರ್‌ಗಳಲ್ಲಿ ದೀರ್ಘ ಸಾಲು ತಪ್ಪಿಸಲು ಮುಂಗಡ ಟೋಕನ್ ವಿತರಣೆ ಮಾಡಲಾಗುತ್ತದೆ. ಇದರಿಂದ ನೂಕುನುಗ್ಗಲು ಕಡಿಮೆಯಾಗುವ ಜೊತೆಗೆ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಹೆಚ್ಚು ವೇಗವಾಗಿ ಮತ್ತು ಪಾರದರ್ಶಕವಾಗಿ ನಡೆಯಲಿದೆ.

2. ಕ್ರೆಡಿಟ್ ಕಾರ್ಡ್ ನಿಯಮಗಳಲ್ಲಿ ಬದಲಾವಣೆ

ಪ್ರಮುಖ ಬ್ಯಾಂಕ್‌ಗಳು ತಮ್ಮ ಕ್ರೆಡಿಟ್ ಕಾರ್ಡ್ ಸೇವಾ ನಿಯಮಗಳನ್ನು ಪರಿಷ್ಕರಿಸುತ್ತಿವೆ. ರಿವಾರ್ಡ್ ಪಾಯಿಂಟ್‌ಗಳ ಮೌಲ್ಯ, ಮೈಲ್‌ಸ್ಟೋನ್ ಪ್ರಯೋಜನಗಳು, ಆನ್‌ಲೈನ್ ಯುಟಿಲಿಟಿ ಬಿಲ್ ಪಾವತಿಗಳ ನಿಯಮಗಳು, ಎಸ್‌ಎಂಎಸ್ ಸೇವಾ ಶುಲ್ಕ ಹಾಗೂ ವಾರ್ಷಿಕ ನಿರ್ವಹಣಾ ಶುಲ್ಕಗಳಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ.

3. CKYC 2.0 ಜಾರಿ

ಬ್ಯಾಂಕಿಂಗ್, ವಿಮೆ ಮತ್ತು ಮ್ಯೂಚುವಲ್ ಫಂಡ್ ಕ್ಷೇತ್ರಗಳಲ್ಲಿ ಡಿಜಿಟಲ್ ಭದ್ರತೆ ಹೆಚ್ಚಿಸುವ ಉದ್ದೇಶದಿಂದ CKYC 2.0 ವ್ಯವಸ್ಥೆ ಜಾರಿಗೆ ಬರುತ್ತಿದೆ. ಗ್ರಾಹಕರ KYC ದಾಖಲೆಗಳನ್ನು ಕೇಂದ್ರ ನೋಂದಣಿ ವ್ಯವಸ್ಥೆಯಲ್ಲಿ ಸುರಕ್ಷಿತವಾಗಿ ಸಂಗ್ರಹಿಸಲಾಗುತ್ತದೆ. ಇದರಿಂದ ಹೊಸ ಖಾತೆ ತೆರೆಯುವಾಗ ಅಥವಾ ವಿಮೆ ಪಡೆಯುವಾಗ ಪದೇ ಪದೇ ದಾಖಲೆಗಳನ್ನು ಸಲ್ಲಿಸುವ ಅಗತ್ಯ ಇರುವುದಿಲ್ಲ.

4. LPG ಸಿಲಿಂಡರ್ ದರ ಪರಿಷ್ಕರಣೆ

ಪ್ರತಿ ತಿಂಗಳ ಮೊದಲ ದಿನದಂತೆ ಆಗಸ್ಟ್ 1ರಂದು ಕೂಡ ತೈಲ ಮಾರುಕಟ್ಟೆ ಕಂಪನಿಗಳು ಗೃಹಬಳಕೆ ಮತ್ತು ವಾಣಿಜ್ಯ LPG ಸಿಲಿಂಡರ್‌ಗಳ ಹೊಸ ದರಗಳನ್ನು ಪ್ರಕಟಿಸಲಿವೆ. ಅಂತರರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಮತ್ತು ಮಾರುಕಟ್ಟೆ ಪರಿಸ್ಥಿತಿಯನ್ನು ಆಧರಿಸಿ ಬೆಲೆ ಪರಿಷ್ಕರಣೆ ನಡೆಯಲಿದೆ.

5. ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಗಡುವು

ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವವರಿಗೆ ಪ್ರಮುಖ ಗಡುವುಗಳು ಅನ್ವಯವಾಗುತ್ತವೆ. ವೇತನದಾರರಿಗೆ ಜುಲೈ 31 ಕೊನೆಯ ದಿನವಾಗಿದ್ದರೆ, ಸ್ವಯಂ ಉದ್ಯೋಗಿಗಳು, ಫ್ರೀಲಾನ್ಸರ್‌ಗಳು ಮತ್ತು ಸಣ್ಣ ಉದ್ಯಮಿಗಳಿಗೆ ಆಗಸ್ಟ್ 31ರವರೆಗೆ ಅವಕಾಶ ನೀಡಲಾಗಿದೆ.

ಆಗಸ್ಟ್ ತಿಂಗಳಿನಿಂದ ಜಾರಿಗೆ ಬರುತ್ತಿರುವ ಈ ಬದಲಾವಣೆಗಳ ಬಗ್ಗೆ ಸಾರ್ವಜನಿಕರು ಮುಂಚಿತವಾಗಿಯೇ ಮಾಹಿತಿ ಪಡೆದು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತವಾಗಿದೆ.

ಮುಂದಿನ ಮೂರು ದಿನ ರಾಜ್ಯಕ್ಕೆ ಭಾರೀ ಮಳೆ ಎಚ್ಚರಿಕೆ: 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಎಂಟು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ತೀವ್ರಗೊಳ್ಳುವ ಮುನ್ಸೂಚನೆ ನೀಡಿರುವ ಇಲಾಖೆ, ಸಾರ್ವಜನಿಕರು ಮತ್ತು ಮೀನುಗಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ. ಇದೇ ವೇಳೆ ಕೊಡಗು, ಹಾಸನ, ಧಾರವಾಡ, ಗದಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಭಾಗದಲ್ಲಿ ಗಂಟೆಗೆ 60 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ತೆರಳುವ ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ. ತಗ್ಗು ಪ್ರದೇಶದ ನಿವಾಸಿಗಳು ಹಾಗೂ ಸಾರ್ವಜನಿಕರು ಕೂಡ ಹವಾಮಾನ ಮುನ್ಸೂಚನೆ ಗಮನಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.