ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪ ಹಾಗೂ ಹಣ ದುರ್ಬಳಕೆಯ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಯೋಜನೆಯನ್ನು ಸಮಗ್ರವಾಗಿ ಪರಿಷ್ಕರಿಸಲು ಸರ್ಕಾರ ಮುಂದಾಗಿದೆ.
ಯೋಜನೆಯಡಿ ನೋಂದಾಯಿಸಿಕೊಂಡಿದ್ದ ಹಲವು ಫಲಾನುಭವಿಗಳು ಮೃತಪಟ್ಟಿದ್ದರೂ, ಅವರ ಹೆಸರಿನ ಬ್ಯಾಂಕ್ ಖಾತೆಗಳಿಗೆ ಕಳೆದ ಕೆಲವು ತಿಂಗಳುಗಳಿಂದ ಹಣ ಜಮೆಯಾಗುತ್ತಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ನಡೆಸಿದ ಪರಿಶೀಲನೆ ಮತ್ತು ತಾಂತ್ರಿಕ ಆಡಿಟ್ ವೇಳೆ, ಸುಮಾರು 1.48 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ₹2,000 ನೆರವು ಹಣ ಜಮೆಯಾಗಿರುವ ಮಾಹಿತಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಈ ಪ್ರಕ್ರಿಯೆಯಿಂದ ಸಾರ್ವಜನಿಕ ಹಣದ ದುರ್ಬಳಕೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಕೆಲವು ಪ್ರಕರಣಗಳಲ್ಲಿ ಮೃತ ಫಲಾನುಭವಿಗಳ ಸಂಬಂಧಿಕರು ಎಟಿಎಂ ಮತ್ತು ಯುಪಿಐ ಮೂಲಕ ಹಣವನ್ನು ವಿತ್ಡ್ರಾ ಮಾಡಿಕೊಂಡಿರುವ ಸಾಧ್ಯತೆಯೂ ಪರಿಶೀಲನೆಯಲ್ಲಿದೆ.
ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಸಂಪೂರ್ಣವಾಗಿ ಪರಿಷ್ಕರಿಸುವಂತೆ ಸೂಚಿಸಿದ್ದಾರೆ.
ಪರಿಶೀಲನೆ ವೇಳೆ ಮತ್ತೊಂದು ತಾಂತ್ರಿಕ ಸಮಸ್ಯೆಯೂ ಬೆಳಕಿಗೆ ಬಂದಿದ್ದು, ಕೆಲವಡೆ ಬ್ಯಾಂಕ್ ಖಾತೆ ಹೊಂದಿರುವ ವ್ಯಕ್ತಿ ಮತ್ತು ನೋಂದಾಯಿತ ಮೊಬೈಲ್ ಸಂಖ್ಯೆ ಹೊಂದಿರುವ ವ್ಯಕ್ತಿ ಬೇರೆಬೇರೆಯಾಗಿರುವುದು ಕಂಡುಬಂದಿದೆ. ಇದರಿಂದ ನಿಜವಾದ ಫಲಾನುಭವಿಗಳಿಗೆ ಹಣ ತಲುಪುವಲ್ಲಿ ತೊಂದರೆ ಉಂಟಾಗುತ್ತಿರುವ ಬಗ್ಗೆ ಅಧಿಕಾರಿಗಳು ಗಮನಸೆಳೆದಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ಫಲಾನುಭವಿಗಳ ಪಟ್ಟಿಯನ್ನು ತಾತ್ಕಾಲಿಕವಾಗಿ ಮರುಪರಿಶೀಲನೆಗೆ ಒಳಪಡಿಸಿ, ಅರ್ಹ ಮಹಿಳೆಯರಿಂದ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.
ಇದೇ ವೇಳೆ, ಇ-ಜನ್ಮ ಪೋರ್ಟಲ್ ಮೂಲಕ ಮರಣ ಪ್ರಮಾಣಪತ್ರಗಳನ್ನು ಬ್ಯಾಂಕ್ ಖಾತೆಗಳೊಂದಿಗೆ ಸಂಪರ್ಕಿಸುವುದು, ಫಲಾನುಭವಿಗಳ ಜೀವಿತ ಸ್ಥಿತಿಯನ್ನು ವಾರ್ಷಿಕವಾಗಿ ದೃಢೀಕರಿಸುವ ‘ಜೀವಿತ ಪ್ರಮಾಣ ಪತ್ರ’ ಅಥವಾ ಬಯೋಮೆಟ್ರಿಕ್ ದೃಢೀಕರಣವನ್ನು ಕಡ್ಡಾಯಗೊಳಿಸುವ ಕುರಿತು ಸರ್ಕಾರ ಚರ್ಚೆ ನಡೆಸುತ್ತಿದೆ.

