Home Blog

ಲಿಂಕ್ ಗೊಬ್ಬರ ದಂಧೆ ಬಂದ್ ಮಾಡ್ರಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಕೆಲ ಗೊಬ್ಬರ ಅಂಗಡಿಗಳಲ್ಲಿ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪಟ್ಟಣದ ಪಾದಗಟ್ಟಿ ಸಮೀಪ ಬಜಾರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಹೊಗೆಸೊಪ್ಪಿನ ಹಾಗೂ ತಾಲೂಕು ಅಧ್ಯಕ್ಷ ಲೋಕೇಶ ಸುತಾರ, “ಡಿ.ಎ.ಪಿ. ಗೊಬ್ಬರ ದಾಸ್ತಾನು ಇದ್ದರೂ ಇಲ್ಲವೆಂದು ಹೇಳಿ ರೈತರಿಗೆ ವಿತರಣೆ ಮಾಡುತ್ತಿಲ್ಲ. ಕೆಲ ಅಂಗಡಿ ಮಾಲೀಕರು ಡಿ.ಎ.ಪಿ. ಜೊತೆ ಇತರೆ ಗೊಬ್ಬರಗಳನ್ನು ಕಡ್ಡಾಯವಾಗಿ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ. ಅಲ್ಲದೇ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಕೆಲ ವ್ಯಾಪಾರಿಗಳು ಗೊಬ್ಬರವನ್ನು ಬೇರೆ ಬೇರೆ ಸ್ಥಳಗಳಲ್ಲಿ ಸಂಗ್ರಹಿಸಿಟ್ಟಿದ್ದು, ಇದು ನಿಯಮ ಉಲ್ಲಂಘನೆಯಾಗಿದೆ. ಗೊಬ್ಬರ ಅಂಗಡಿಗಳ ಮುಂಭಾಗದಲ್ಲಿ ಸರ್ಕಾರ ನಿಗದಿಪಡಿಸಿದ ದರಪಟ್ಟಿ ಪ್ರದರ್ಶಿಸಬೇಕು. ನಕಲಿ ಬಿಲ್ ನೀಡುತ್ತಿರುವ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ಪರವಾನಗಿ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ವಾರದೊಳಗೆ ಸಮಸ್ಯೆ ಬಗೆಹರಿಸದಿದ್ದರೆ ರಾಜ್ಯ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆ ವೇಳೆ ಶಿರಹಟ್ಟಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ ಕಾಶಪ್ಪನವರ ಅವರನ್ನು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡರು. “ಇಷ್ಟು ದಿನಗಳಿಂದ ಅಕ್ರಮ ನಡೆಯುತ್ತಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಈ ಅಕ್ರಮದಲ್ಲಿ ಕೆಲ ಅಧಿಕಾರಿಗಳ ಕೈವಾಡವೂ ಇದೆ” ಎಂದು ಆರೋಪಿಸಿದರು.

ಸ್ಥಳಕ್ಕೆ ಆಗಮಿಸಿದ ಗ್ರೇಡ್-2 ತಹಸೀಲ್ದಾರ್ ಮಂಜುನಾಥ ಅಮಾಸಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ಕೃಷಿ ಅಧಿಕಾರಿ ಚಂದ್ರಶೇಖರಗೌಡ ನರಸಮ್ಮನವರ, ಪಿಎಸ್‌ಐ ನಾಗರಾಜ ಗಡದ ಹಾಗೂ ಕ್ರೈಂ ಪಿಎಸ್‌ಐ ಟಿ.ಕೆ. ರಾಠೋಡ ಭದ್ರತಾ ವ್ಯವಸ್ಥೆ ಕೈಗೊಂಡಿದ್ದರು.

ಪ್ರತಿಭಟನೆಯಲ್ಲಿ ತಾಲೂಕು ಗೌರವಾಧ್ಯಕ್ಷ ಪ್ರವೀಣ ಗಾಣಗೇರ, ಬಸವರಾಜ ಮಲ್ಲೂರ, ಅರುಣ ಮೆಕ್ಕಿ, ಗಂಗಾಧರ ಕರ್ಜಕಣ್ಣವರ, ಗಂಗಾಧರ ಕೊಂಚಿಗೇರಿಮಠ, ಮಂಜುನಾಥ ಕೊಡಳ್ಳಿ, ಫಕ್ಕೀರೇಶ ಅಣ್ಣಿಗೇರಿ, ಚನ್ನಬಸಯ್ಯ ಗಡ್ಡದೇವರಮಠ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಸಾವಿತ್ರಿ ಅತ್ತಿಗೇರಿ, ಹುಲಿಗೆಮ್ಮ ಮೇವುಂಡಿ, ಜಯಮ್ಮ ತುಪ್ಪದ, ಲಕ್ಷ್ಮಕ್ಕ ಪಶುಪತಿಹಾಳ, ರೇಷ್ಮಾ ಜಾದವ, ಸಾವಕ್ಕ ಮಳ್ಳೋಳ್ಳಿ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

“ರೈತರಿಗೆ ಬೇಕಾದ ಗೊಬ್ಬರವನ್ನು ಕೃತಕವಾಗಿ ತಡೆದು ಹೆಚ್ಚುವರಿ ದರಕ್ಕೆ ಮಾರಾಟ ಮಾಡುವುದು ರೈತರ ಮೇಲಿನ ದೌರ್ಜನ್ಯ. ಕೂಡಲೇ ಅಕ್ರಮ ತಡೆಗಟ್ಟಬೇಕು.”
ಬಸವರಾಜ ಹೊಗೆಸೊಪ್ಪಿನ, ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ

ಶಿಕ್ಷಣದ ಜೊತೆಗೆ ಸಂಸ್ಕಾರವೂ ಅಗತ್ಯ: ಜಗದೀಶ ಪೂಜಾರ

ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನ ಮಕ್ಕಳಿಗೆ ಕೇವಲ ಸೌಕರ್ಯಗಳಿಗಿಂತ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವುದು ಅತ್ಯಂತ ಮುಖ್ಯವಾಗಿದೆ ಎಂದು ರತ್ನಾಕರವಾಣಿ ದಿನಪತ್ರಿಕೆಯ ಸಂಪಾದಕರಾದ ಜಗದೀಶ ಪೂಜಾರ ಹೇಳಿದರು.

ನಗರದ ಗಂಗಾಪೂರ ಪೇಟೆಯಲ್ಲಿರುವ ಶ್ರೀ ದುರ್ಗಾದೇವಿ ಶಿಕ್ಷಣ ಸಮಿತಿ ವತಿಯಿಂದ ಆಯೋಜಿಸಿದ್ದ ಶಾಲಾ ಆರಂಭೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೆನ್ಸಿಲ್ ಹಾಗೂ ಸಿಹಿ ವಿತರಿಸಿ ಮಾತನಾಡಿದ ಅವರು, “ಇಂದು ಮಕ್ಕಳಲ್ಲಿ ಸಂಸ್ಕಾರದ ಕೊರತೆಯಿಂದ ದುಶ್ಚಟಗಳು ಹೆಚ್ಚುತ್ತಿವೆ. ಗುರು-ಹಿರಿಯರಿಗೆ ಗೌರವ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ” ಎಂದು ಅಭಿಪ್ರಾಯಪಟ್ಟರು.

ಸಂಸ್ಥೆಯಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಶಿಕ್ಷಣ ಹಾಗೂ ಸಂಸ್ಕಾರವನ್ನು ಶ್ಲಾಘಿಸಿದ ಅವರು, “ಪ್ರತಿ ಮನೆ ಮತ್ತು ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಮೌಲ್ಯಾಧಾರಿತ ಸಂಸ್ಕಾರ ನೀಡಬೇಕು” ಎಂದು ಕರೆ ನೀಡಿದರು.

ಇಂದಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆ ನಡೆಸುವುದು ಸುಲಭದ ಕೆಲಸವಲ್ಲ. ಒಂದು ಸಂಸ್ಥೆ ಯಶಸ್ವಿಯಾಗಿ ಬೆಳೆಯಬೇಕಾದರೆ ಶಿಕ್ಷಕರು ಹಾಗೂ ಪೋಷಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಸಂಸ್ಥೆ ತನ್ನದೇ ಸ್ವಂತ ಕಟ್ಟಡ ನಿರ್ಮಿಸಿ ಬಡ ಮಕ್ಕಳಿಗೆ ಪದವಿ ಮಟ್ಟದವರೆಗೆ ಶಿಕ್ಷಣ ಸೇವೆ ನೀಡಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಇಮರಾಪೂರ, ಕಾರ್ಯದರ್ಶಿ ಕವಿತಾ ಇಮರಾಪೂರ, ನಿರ್ದೇಶಕ ಮೋಹನ ಇಮರಾಪೂರ, ಸಲಹಾ ಸಮಿತಿ ಸದಸ್ಯರಾದ ಮುತ್ತು ಜಡಿ ಹಾಗೂ ಚನ್ನಬಸಮ್ಮ ಹಾಳಕೇರಿ, ಆಡಳಿತಾಧಿಕಾರಿ ಸಾವಿತ್ರಿ ಕವಡಕಿ, ಮುಖ್ಯೋಪಾಧ್ಯಾಯಿನಿ ಎಚ್.ಎಂ. ನದಾಫ್, ಶಿಕ್ಷಕಿಯರಾದ ಮಂಜುಳಾ ಹಿಡ್ಕಿಮಠ, ರೇಖಾ ಅಂಗಡಿ, ಸುಧಾ ತಿರಕಣ್ಣವರ, ವಂದನಾ ಕಲ್ಮನಿ, ಶೋಭಾ ಸಂಬರಗಿಮಠ, ಸಿಬ್ಬಂದಿ ಲಕ್ಷ್ಮೀ ಕಮಡೊಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಶಾಲಾ ಮಕ್ಕಳಿಗೆ ಗುಲಾಬಿ ಹೂ ನೀಡಿ, ಹಣೆಗೆ ತಿಲಕವಿಟ್ಟು, ಆರತಿ ಬೆಳಗಿ ಹಾಗೂ ಸಿಹಿ ಹಂಚುವ ಮೂಲಕ ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಳ್ಳಲಾಯಿತು.

“ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡಿದಾಗ ಮಾತ್ರ ಸಮಾಜಕ್ಕೆ ಉತ್ತಮ ನಾಗರಿಕರನ್ನು ರೂಪಿಸಲು ಸಾಧ್ಯ.”

ಜಗದೀಶ ಪೂಜಾರ

ಸಂಪಾದಕರು, ರತ್ನಾಕರವಾಣಿ ದಿನಪತ್ರಿಕೆ

ಮಳೆ ಹಾನಿ ಪರಿಹಾರದಲ್ಲಿ ವಿಳಂಬ ಬೇಡ: ಡಿಸಿ ಶ್ರೀಧರ್

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಕುಡಿಯುವ ನೀರಿನ ಪೂರೈಕೆ, ಮಳೆ ಹಾನಿ ಪರಿಹಾರ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯ ಬೀಜ ಮತ್ತು ರಸಗೊಬ್ಬರಗಳ ಲಭ್ಯತೆ ಕುರಿತು ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್‌ನಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಮಳೆಯಿಂದ ಉಂಟಾಗುವ ಹಾನಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ, ನಿರ್ಲಕ್ಷ್ಯ ಅಥವಾ ನಿಷ್ಕಾಳಜಿಯನ್ನು ಜಿಲ್ಲಾಡಳಿತ ಸಹಿಸುವುದಿಲ್ಲ” ಎಂದು ಎಚ್ಚರಿಸಿದರು.
ಸಭೆಯಲ್ಲಿ ಮನೆ ಹಾನಿ, ಬೆಳೆ ಹಾನಿ, ಕುಡಿಯುವ ನೀರಿನ ಸಮಸ್ಯೆ, ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಅಪೂರ್ಣ ಅಥವಾ ಸುಳ್ಳು ಮಾಹಿತಿ ನೀಡುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು.
ತಾಲ್ಲೂಕುವಾರು ಮಳೆಯಿಂದ ಹಾನಿಗೀಡಾದ ಮನೆಗಳು, ಬೆಳೆಗಳು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಮಾಹಿತಿ ಪಡೆದು ಅರ್ಹ ಫಲಾನುಭವಿಗಳಿಗೆ ತ್ವರಿತ ಪರಿಹಾರ ವಿತರಣೆ ಮಾಡಬೇಕು ಎಂದು ಸೂಚಿಸಿದರು.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ ವ್ಯತ್ಯಯವಾಗದಂತೆ ಅಧಿಕಾರಿಗಳು ನಿರಂತರ ನಿಗಾವಹಿಸಬೇಕು. ಪ್ರವಾಹ ಸಾಧ್ಯತೆ ಇರುವ ತಗ್ಗು ಪ್ರದೇಶಗಳ ಕುಟುಂಬಗಳನ್ನು ಮುಂಚಿತವಾಗಿ ಗುರುತಿಸಿ ಅಗತ್ಯವಿದ್ದರೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ನಿರ್ದೇಶನ ನೀಡಿದರು.
ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದ 23 ಕೆರೆಗಳ ನಿರ್ವಹಣೆ, ನೀರು ಸಂಗ್ರಹ ಸಾಮರ್ಥ್ಯ ವೃದ್ಧಿ ಹಾಗೂ ಅಗತ್ಯ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದ ಜಿಲ್ಲಾಧಿಕಾರಿಗಳು, ಸರ್ಕಾರಕ್ಕೆ ಅಗತ್ಯ ಅನುದಾನ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ಪ್ರವಾಹ ಪರಿಸ್ಥಿತಿಯಲ್ಲಿ ರಕ್ಷಣಾ ಕಾರ್ಯಗಳಿಗೆ ಅಗ್ನಿಶಾಮಕ ಇಲಾಖೆಗೆ ಅಗತ್ಯ ಬೋಟ್‌ಗಳ ಖರೀದಿಗಾಗಿ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ನೀಡಿದ ಮಾಹಿತಿಯ ಪ್ರಕಾರ, ಮೇ 18ರಂದು ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಗದಗ ಮತ್ತು ಲಕ್ಷ್ಮೇಶ್ವರ ತಾಲ್ಲೂಕುಗಳಲ್ಲಿ ತಲಾ ಒಬ್ಬರಂತೆ ಇಬ್ಬರು ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ವಿತರಿಸಲಾಗಿದೆ.
ಮಳೆಯಿಂದ ಮೃತಪಟ್ಟ 31 ಸಣ್ಣ ಸಾಕು ಪ್ರಾಣಿಗಳ ಮಾಲೀಕರಿಗೆ ₹1.52 ಲಕ್ಷ ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿ 14 ಮನೆಗಳು ಭಾಗಶಃ ಹಾನಿಗೀಡಾಗಿದ್ದು ₹91 ಸಾವಿರ ಪರಿಹಾರ ವಿತರಿಸಲಾಗಿದೆ. 96 ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ₹4.80 ಲಕ್ಷ ಪರಿಹಾರ ನೀಡಲಾಗಿದೆ.
ಮಳೆಯಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ 907 ವಿದ್ಯುತ್ ಕಂಬಗಳು ಹಾಗೂ 10 ಶಾಲಾ ಕೊಠಡಿಗಳು ಹಾನಿಗೀಡಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (NDRF) ಮಾನದಂಡಗಳ ಪ್ರಕಾರ ₹69.35 ಲಕ್ಷ ನಷ್ಟ ಅಂದಾಜಿಸಲಾಗಿದೆ.
ಜಿಲ್ಲೆಯ 92 ರೈತರಿಗೆ ಸೇರಿದ 34.58 ಎಕರೆ ತೋಟಗಾರಿಕೆ ಪ್ರದೇಶ ಹಾನಿಗೀಡಾಗಿದ್ದು, ₹6.70 ಲಕ್ಷ ನಷ್ಟ ಅಂದಾಜಿಸಲಾಗಿದೆ.
ಜಿಲ್ಲೆಯ ಕುಡಿಯುವ ನೀರಿನ ಸ್ಥಿತಿಗತಿ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ನವಿಲುತೀರ್ಥ ಜಲಾಶಯದಲ್ಲಿ 5.905 ಟಿಎಂಸಿ, ಭದ್ರಾ ಜಲಾಶಯದಲ್ಲಿ 16.497 ಟಿಎಂಸಿ ಹಾಗೂ ಹಮ್ಮಿಗಿ ಬ್ಯಾರೇಜ್‌ನಲ್ಲಿ 1.978 ಟಿಎಂಸಿ ನೀರು ಸಂಗ್ರಹವಿದ್ದು, ಮುಂದಿನ 90 ದಿನಗಳವರೆಗೆ ಕುಡಿಯುವ ನೀರು ಪೂರೈಸಲು ಸಾಧ್ಯವಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಕೆ.ಆರ್. ದುರಗೇಶ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಡಿಡಿಪಿಐ ಆರ್.ಎಸ್. ಬುರಡಿ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಎಚ್.ಬಿ. ಹುಲಗಣ್ಣನವರ, ಪೌರಾಯುಕ್ತ ರಾಜಾರಾಮ್ ಪವಾರ, ಕಾರ್ಮಿಕ ಇಲಾಖೆ ಜಿಲ್ಲಾ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
“ಮಳೆ ಹಾನಿ ಪರಿಹಾರ ವಿತರಣೆಯಲ್ಲಿ ವಿಳಂಬ ಅಥವಾ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.”
 ಸಿ.ಎನ್. ಶ್ರೀಧರ, ಜಿಲ್ಲಾಧಿಕಾರಿ
ಗೈರಾದ ಅಧಿಕಾರಿಗೆ ಶೋಕಾಸ್ ನೋಟಿಸ್
ಸಭೆಗೆ ಅಂತರ್ಜಲ ಇಲಾಖೆಯ ಹಿರಿಯ ಭೂವಿಜ್ಞಾನಿಗಳು ಗೈರಾಗಿದ್ದಲ್ಲದೇ ಅಗತ್ಯ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸದಿರುವುದನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿದರು. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲು ಸೂಚನೆ ನೀಡಿದರು.
ರೈತರಿಗೆ ಗೊಬ್ಬರಕ್ಕಾಗಿ ಬಲವಂತ ಬೇಡ!
ಮುಂಗಾರು ಹಂಗಾಮು ಆರಂಭವಾಗಿರುವುದರಿಂದ ರೈತರಿಗೆ ಅಗತ್ಯ ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಯೂರಿಯಾ ವಿತರಣೆಯ ವೇಳೆ ರೈತರಿಗೆ ಅನಗತ್ಯವಾಗಿ ಇತರೆ ಗೊಬ್ಬರ ಖರೀದಿಸಲು ಒತ್ತಾಯಿಸಿದರೆ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.

ಜೂ.12ರಿಂದ ಮಕ್ಕಳ ರಕ್ಷಣೆಗೆ ಅಭಿಯಾನ

ವಿಜಯಸಾಕ್ಷಿ ಸುದ್ದಿ, ಗದಗ: ವಿಶ್ವ ಬಾಲಕಾರ್ಮಿಕರ ವಿರೋಧಿ ದಿನಾಚರಣೆಯನ್ನು ಜೂನ್ 12ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆ ಹಾಗೂ ಜಿಲ್ಲಾ ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಷ್ಟಾಚಾರದಂತೆ ಆಮಂತ್ರಣ ಮುದ್ರಣ, ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಡಂಗುರ ಸಾರುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಸರ್ಕಾರಿ ಕಚೇರಿಗಳಲ್ಲಿ ಬಾಲಕಾರ್ಮಿಕ ವಿರೋಧಿ ಪ್ರಮಾಣ ವಚನ ಸ್ವೀಕಾರ, ಶಾಲಾ-ಕಾಲೇಜುಗಳಲ್ಲಿ ಜಾಥಾ ಕಾರ್ಯಕ್ರಮ, ಪ್ರಬಂಧ, ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲೆಯಾದ್ಯಂತ ಜೂನ್ 13ರಿಂದ 30ರವರೆಗೆ ಬಾಲ ಮತ್ತು ಕಿಶೋರ ಕಾರ್ಮಿಕರ ರಕ್ಷಣಾ ಅಭಿಯಾನ ಹಮ್ಮಿಕೊಳ್ಳಲಾಗುವುದು. ಬಾಲಕಾರ್ಮಿಕ ವಿರೋಧಿ ಸಂದೇಶ ಸಾರುವ ಧ್ವನಿ ಮುದ್ರಿಕೆಗಳನ್ನು ಜಿಲ್ಲೆಯಾದ್ಯಂತ ಪ್ರಸಾರ ಮಾಡಲು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಸಭೆಯಲ್ಲಿ ವೇದಿಕೆ ವ್ಯವಸ್ಥೆ, ಅಲಂಕಾರ ಹಾಗೂ ಸ್ಪರ್ಧೆಗಳ ಆಯೋಜನೆ ಕುರಿತು ಚರ್ಚೆ ನಡೆಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಎಸ್. ಸೋಮನಕಟ್ಟಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧ ಮಣ್ಣೂರ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಯಶ್ರೀ ತೊಟಗೇರ, ನಗರಾಭಿವೃದ್ಧಿ ಯೋಜನೆ ನಿರ್ದೇಶಕ ಬಸವರಾಜ ಕೊಟೂರು, ಯೋಜನೆ ನಿರ್ದೇಶಕ ಸಂದೇಶ ಪಾಟೀಲ್, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ, ಸ್ಪಂದನ ಸಂಸ್ಥೆಯ ಎನ್‌ಜಿಒ ಅಶ್ವಿನಿ ಹಿರೇಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

“ವಿಶ್ವ ಬಾಲಕಾರ್ಮಿಕರ ವಿರೋಧಿ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗಬಾರದು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ದಿಕ್ಕಿನಲ್ಲಿ ಪರಿಣಾಮಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.” 

ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

ಮಳೆಗಾಲದಲ್ಲಿ ಸ್ವಚ್ಛತೆ ನಿರ್ಲಕ್ಷ್ಯ ಬೇಡ: ಚಂದ್ರಶೇಖರ ಬಿ. ಕಂದಕೂರ

ವಿಜಯಸಾಕ್ಷಿ ಸುದ್ದಿ, ರೋಣ: ಮಳೆಗಾಲದ ಸಂದರ್ಭದಲ್ಲಿ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆ ಅತ್ಯಂತ ಮಹತ್ವದ್ದಾಗಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು ಎಂದು ರೋಣ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಹೊಳೆಆಲೂರು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.

ಹೊಳೆಆಲೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಮಳೆಗಾಲದಲ್ಲಿ ಚರಂಡಿಗಳಲ್ಲಿ ನೀರು ನಿಲ್ಲುವುದು, ಕಸ ಸಂಗ್ರಹವಾಗುವುದು ಹಾಗೂ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಗ್ರಾಮಗಳಲ್ಲಿ ನಿರಂತರ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ಗ್ರಾಮದ ಮುಖ್ಯ ರಸ್ತೆ, ಬೀದಿಗಳು, ಚರಂಡಿಗಳು, ಸಾರ್ವಜನಿಕ ಸ್ಥಳಗಳು ಹಾಗೂ ಕುಡಿಯುವ ನೀರಿನ ಮೂಲಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡುವ ಮೂಲಕ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯಬಹುದು ಎಂದು ಹೇಳಿದರು. ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸ್ವಚ್ಛತಾಗಾರರು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಸ್ವಚ್ಛ ಮತ್ತು ಆರೋಗ್ಯಕರ ಗ್ರಾಮ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಸ್ವಚ್ಛತಾಗಾರರ ಸುರಕ್ಷತೆಯ ಬಗ್ಗೆ ವಿಶೇಷ ಒತ್ತು ನೀಡಿದ ಅವರು, ಸ್ವಚ್ಛತಾ ಕಾರ್ಯಗಳಲ್ಲಿ ತೊಡಗುವ ಸಿಬ್ಬಂದಿ ಕಡ್ಡಾಯವಾಗಿ ಗ್ಲೌಸ್, ಬೂಟು, ಮಾಸ್ಕ್ ಹಾಗೂ ಸುರಕ್ಷತಾ ಜಾಕೆಟ್ ಧರಿಸಿ ಕರ್ತವ್ಯ ನಿರ್ವಹಿಸಬೇಕು. ಸುರಕ್ಷತಾ ಕ್ರಮ ಪಾಲಿಸುವುದರಿಂದ ಸೋಂಕು ಹಾಗೂ ಅಪಘಾತಗಳಿಂದ ರಕ್ಷಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ, ಕಸ ವಿಂಗಡಣೆ, ಚರಂಡಿಗಳ ನಿರ್ವಹಣೆ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಗಿರಿತಮ್ಮನ್ನವರ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಸ್ವಚ್ಛತಾಗಾರರಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು. ಗ್ರಾಮದಲ್ಲಿ ನಿಯಮಿತ ಸ್ವಚ್ಛತಾ ಕಾರ್ಯ ನಡೆಸುವುದು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಮಳೆಗಾಲದಲ್ಲಿ ವಿಶೇಷ ಸ್ವಚ್ಛತಾ ಅಭಿಯಾನಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಸ್ವಚ್ಛತಾಗಾರರು ಹಾಗೂ ಸಾರ್ವಜನಿಕರು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

“ಗ್ರಾಮದ ರಸ್ತೆ, ಚರಂಡಿ, ಸಾರ್ವಜನಿಕ ಸ್ಥಳಗಳು ಹಾಗೂ ಕುಡಿಯುವ ನೀರಿನ ಮೂಲಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಿದರೆ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯಬಹುದು.” 

ಚಂದ್ರಶೇಖರ ಬಿ. ಕಂದಕೂರ, ಸಿಇಒ-ರೋಣ

ಡಿಕೆ ಸಿಎಂ: ಶಿರಹಟ್ಟಿಯಲ್ಲಿ ವಿಜಯೋತ್ಸವ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಡಿ.ಕೆ. ಶಿವಕುಮಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಶಿರಹಟ್ಟಿಯಲ್ಲಿ ಅವರ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.

ಪಟ್ಟಣದ ಶ್ರೀ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಕೇಕ್ ಕತ್ತರಿಸುವ ಮೂಲಕ ವಿಜಯೋತ್ಸವ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾ ಕಾರ್ಯಾಧ್ಯಕ್ಷ ಮಹಾಂತೇಶ ದಶಮನಿ, “ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿರುವ ಡಿ.ಕೆ. ಶಿವಕುಮಾರ ಮುಖ್ಯಮಂತ್ರಿ ಆಗಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ. ಅವರ ಆಡಳಿತದಲ್ಲಿ ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗಲಿದೆ” ಎಂದು ಹೇಳಿದರು.

ಅಶ್ರಫ್ ಅಲಿ ಢಾಲಾಯತ, ಬಸವರಾಜ ಕಂಬಳಿ, ಈರಣ್ಣ ಕೋಟಿ, ಮಾಬುಸಾಬ ಟಪಾಲ, ಶೌಕತ್ ಅಲಿ ಮನಿಯಾರ, ಸಮದ ಢಾಲಾಯತ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಾಲ ಮರುಪಾವತಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

ವಿಜಯಸಾಕ್ಷಿ ಸುದ್ದಿ, ಗದಗ: ರೈತರ ಬೆಳೆ ಸಾಲ, ಕಿರು ವ್ಯಾಪಾರ ಸಾಲ ಸೇರಿದಂತೆ ವಿವಿಧ ಯೋಜನೆಗಳಡಿ ನೀಡಿದ ಸಾಲಗಳ ಮರುಪಾವತಿಯಲ್ಲಿ ಗದಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಬಳಗಾನೂರ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯ ಸಿಬ್ಬಂದಿಯನ್ನು ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು.
ಗ್ರಾಹಕರು ನಿಗದಿತ ಸಮಯಕ್ಕೆ ಸಾಲ ಮರುಪಾವತಿಸಿ ಬ್ಯಾಂಕ್‌ನೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದರ ಜೊತೆಗೆ, ಶಾಖಾ ವ್ಯವಸ್ಥಾಪಕ ಅಶೋಕ ಬಾರಕೇರ ಹಾಗೂ ಸಿಬ್ಬಂದಿಯ ಕರ್ತವ್ಯನಿಷ್ಠೆ, ಸಮಯಪಾಲನೆ ಮತ್ತು ಗ್ರಾಹಕ ಸ್ನೇಹಿ ಸೇವೆಯನ್ನು ಗುರುತಿಸಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಡಾ. ಹನುಮಂತಗೌಡ ಆರ್. ಕಲ್ಮನಿ ಮಾತನಾಡಿ, “ಗ್ರಾಮೀಣ ಭಾಗದ ಜನರಿಗೆ ವಿಶ್ವಾಸಾರ್ಹ ಬ್ಯಾಂಕಿಂಗ್ ಸೇವೆ ನೀಡುತ್ತಿರುವ ಬಳಗಾನೂರು ಶಾಖೆ ಜಿಲ್ಲೆಯಲ್ಲೇ ಮಾದರಿಯಾಗಿದೆ” ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಶೇಖರಯ್ಯ ನನ್ನಯ್ಯನಮಠ, ಪ್ರೊ. ವಿ.ಬಿ. ಕರಮುಡಿ, ಎಂ.ಎ. ಪಾಟೀಲ, ಸಂಗಪ್ಪ ಗೂಳರಡ್ಡಿ, ಅರ್ಜುನ್ ಸಾಲಿ, ನಿಂಗಪ್ಪ ಮಡಿವಾಳರ, ರಾಜು ಪಡೇಸೂರ, ಶರಣಪ್ಪ ಹೊಂಬಳ ಸೇರಿದಂತೆ ಗ್ರಾಮದ ನಾಗರಿಕರು ಉಪಸ್ಥಿತರಿದ್ದರು.
ಸಿದ್ದಪ್ಪ ವಗ್ಗನವರ ಸ್ವಾಗತಿಸಿದರು. ಎಂ.ಆರ್. ಪಡೇಸೂರ ವಂದಿಸಿದರು.

ಜಮೀರ್‌ಗೆ ಡಿಸಿಎಂ ಪಟ್ಟ ಕೊಡದಿದ್ದರೆ ರಾಜ್ಯಾದ್ಯಂತ ಹೋರಾಟ!

ವಿಜಯಸಾಕ್ಷಿ ಸುದ್ದಿ, ಗದಗ: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಮುಂಬರುವ ಸಚಿವ ಸಂಪುಟದಲ್ಲಿ ಸೂಕ್ತ ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು. ಇಲ್ಲವಾದರೆ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ಎಚ್ಚರಿಕೆ ನೀಡಿದೆ.

ನಗರದಲ್ಲಿ ಬುಧವಾರ ನಡೆದ ತುರ್ತು ಖಂಡನಾ ಸಭೆಯಲ್ಲಿ ಮಾತನಾಡಿದ ಮಹಾಸಭಾದ ರಾಜ್ಯಾಧ್ಯಕ್ಷ ಮಹ್ಮದಶಫಿ ನಾಗರಕಟ್ಟಿ, “ಜಮೀರ್ ಅಹ್ಮದ್ ಖಾನ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಬಡವರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಕ್ಷದ ಸಂಘಟನೆ ಹಾಗೂ ಚುನಾವಣಾ ಯಶಸ್ಸಿನಲ್ಲಿ ಅವರ ಕೊಡುಗೆ ಅನನ್ಯವಾಗಿದೆ” ಎಂದು ಹೇಳಿದರು.

“ಇತ್ತೀಚೆಗೆ ಕೆಲ ರಾಜಕೀಯ ವಿರೋಧಿಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳು ಅವರ ಜನಪ್ರಿಯತೆಯನ್ನು ಸಹಿಸದೇ ವ್ಯವಸ್ಥಿತ ಷಡ್ಯಂತ್ರ ರೂಪಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತ ಮತ್ತು ನಿರಾಧಾರ” ಎಂದು ಆರೋಪಿಸಿದರು.

“ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಅನಿವಾರ್ಯ. ಜೊತೆಗೆ ಉತ್ತರ ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಶಾಸಕರಿಗೂ ಸಚಿವ ಸ್ಥಾನ ನೀಡಬೇಕು” ಎಂದು ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ಜಾಫರ್ ಡಾಲಾಯತ್ ಮಾತನಾಡಿ, “ಸರ್ಕಾರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸದಿದ್ದರೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಗದಗ ಶಹರ ಅಧ್ಯಕ್ಷ ತಾಜುದ್ದೀನ್ ಪಾಪಣ್ಣನವರ್ ಮಾತನಾಡಿ, “ಯಾವುದೇ ರಾಜಕೀಯ ಪಿತೂರಿಗಳಿಗೆ ಮಣಿಯದೆ ಜಮೀರ್ ಅಹ್ಮದ್ ಖಾನ್ ಅವರಿಗೆ ಸೂಕ್ತ ಸ್ಥಾನಮಾನ ಘೋಷಿಸಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ರಿಯಾಜ್ ಅಹ್ಮದ್ ದೊಡ್ಡಮನಿ, ಕುತ್ಬುದ್ದೀನ್ ಶೇಖ್, ಭಾಷಾಸಾಬ್ ಖಾಜಿ, ರಫೀಕ್ ಈಟಿ, ನಿಜಾಮುದ್ದೀನ್ ಕಾಟಾಪುರ ಸೇರಿದಂತೆ ಮಹಾಸಭಾದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಛಾಯಾಗ್ರಾಹಕರಿಗೆ ಕೆಪಿಎ ‘ಆಸರೆ’

ವಿಜಯಸಾಕ್ಷಿ ಸುದ್ದಿ, ಗದಗ: ಛಾಯಾಗ್ರಾಹಕರ ಸಾಮಾಜಿಕ ಭದ್ರತೆಗೆ ಮಹತ್ವದ ಹೆಜ್ಜೆಯಾಗಿ ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘ (ಕೆಪಿಎ) “ಆಸರೆ ಯೋಜನೆ”ಯನ್ನು ಜಾರಿಗೆ ತಂದಿದ್ದು, ನೋಂದಾಯಿತ ಛಾಯಾಗ್ರಾಹಕ ಆಕಸ್ಮಿಕವಾಗಿ ನಿಧನರಾದಲ್ಲಿ ಅವರ ಕುಟುಂಬಕ್ಕೆ ₹1 ಲಕ್ಷ ಆರ್ಥಿಕ ನೆರವು ನೀಡುವ ಘೋಷಣೆ ಮಾಡಲಾಗಿದೆ.

ನಗರದ ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಮಠದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕೆಪಿಎ ಆಸರೆ ಯೋಜನೆಯ ಪೋಸ್ಟರ್‌ಗಳನ್ನು ಅನಾವರಣಗೊಳಿಸಿ ಯೋಜನೆಗೆ ಅಧಿಕೃತ ಚಾಲನೆ ನೀಡಲಾಯಿತು. ಗದಗ ಜಿಲ್ಲಾ ಛಾಯಾಗ್ರಾಹಕರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಅನೇಕ ಛಾಯಾಗ್ರಾಹಕರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸಂಘದ ಜಿಲ್ಲಾಧ್ಯಕ್ಷ ಪವನ್ ಕೆ. ಮೆಹರ್‌ವಾಡೆ, ಮುಖ್ಯ ಕಾರ್ಯದರ್ಶಿ ಮಹದೇವಗೌಡ ಸಂಕನಗೌಡ್ರು, ಹಾಗೂ ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘ ಬೆಂಗಳೂರು (ಕೆಪಿಎ) ನೂತನ ನಿರ್ದೇಶಕ ಮಂಜುನಾಥ ಎಸ್. ಲಕ್ಷಟ್ಟಿ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಮಹದೇವಗೌಡ ಸಂಕನಗೌಡ್ರು, “ರಾಜ್ಯದಲ್ಲಿಯೇ ಮೊದಲ ಬಾರಿಗೆ ಛಾಯಾಗ್ರಾಹಕರಿಗಾಗಿ ಇಂತಹ ಆಸರೆ ಯೋಜನೆ ಜಾರಿಗೆ ತರಲಾಗಿದೆ. ಸ್ವಾಭಾವಿಕ ಮರಣ, ಅಪಘಾತ ಅಥವಾ ಅನಾರೋಗ್ಯದಿಂದ ಛಾಯಾಗ್ರಾಹಕ ಮೃತಪಟ್ಟರೆ ಅವರ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಯೋಜನೆ ರೂಪಿಸಲಾಗಿದೆ. ಎಲ್ಲ ಛಾಯಾಗ್ರಾಹಕರು ಜಾಗೃತರಾಗಿ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಬೇಕು,” ಎಂದು ಮನವಿ ಮಾಡಿದರು.

ಕೆಪಿಎ ನಿರ್ದೇಶಕ ಮಂಜುನಾಥ ಎಸ್. ಲಕ್ಷಟ್ಟಿ ಮಾತನಾಡಿ, “ಜೂನ್ 1ರಿಂದ ರಾಜ್ಯಾದ್ಯಂತ ಯೋಜನೆ ನೋಂದಣಿ ಆರಂಭಗೊಂಡಿದೆ. ನೋಂದಾಯಿತ ಸದಸ್ಯರು ಆಕಸ್ಮಿಕವಾಗಿ ನಿಧನರಾದಲ್ಲಿ ಅವರ ಕುಟುಂಬಕ್ಕೆ ₹1 ಲಕ್ಷ ನೆರವು ನೀಡಲಾಗುವುದು. ಗದಗ ಜಿಲ್ಲೆಯ ಛಾಯಾಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಯ ಸದುಪಯೋಗ ಪಡೆಯಬೇಕು,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಹಾಗೂ ತಾಲೂಕಿನ ಸಮಸ್ತ ಛಾಯಾಗ್ರಾಹಕರು ಉಪಸ್ಥಿತರಿದ್ದರು.

ಡಿ.ಕೆ. ಶಿವಕುಮಾರ ಸಿಎಂ: ಗದಗದಲ್ಲಿ ಸಂಭ್ರಮಾಚರಣೆ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ ಹಾಗೂ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಜಿ. ಪರಮೇಶ್ವರ ಅವರಿಗೆ ಶುಭಾಶಯ ಕೋರಿ ಗದಗ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.

ನಗರಸಭೆ ಮುಂಭಾಗದಲ್ಲಿರುವ ವಾಯ್.ಎಚ್. ಪರಾಪೂರ ಫೈನಾನ್ಸ್ ಕಚೇರಿ ಎದುರು ಸಿಬ್ಬಂದಿ ಹಾಗೂ ಅಭಿಮಾನಿಗಳಿಂದ ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ಈ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ದಲಿತ ಸಮುದಾಯದ ಹಿರಿಯ ನಾಯಕ ಡಾ. ಜಿ. ಪರಮೇಶ್ವರ ಪರ ಜಯಘೋಷಣೆಗಳು ಮೊಳಗಿದವು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ವಿನಾಯಕ ಪರಾಪೂರ, “ರಾಜ್ಯದ ಚುಕ್ಕಾಣೆಯನ್ನು ಡಿ.ಕೆ. ಶಿವಕುಮಾರ ಅವರು ಹಿಡಿದಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಹೊಸ ಉತ್ಸಾಹ ತಂದಿದೆ. ಪಕ್ಷ ಸಂಕಷ್ಟದಲ್ಲಿದ್ದ ಪ್ರತಿಯೊಂದು ಸಂದರ್ಭದಲ್ಲೂ ಅವರು ನಿಷ್ಠೆಯಿಂದ ಪಕ್ಷದ ಪರ ನಿಂತಿದ್ದರು. ಅವರ ಪರಿಶ್ರಮ ಹಾಗೂ ಪಕ್ಷನಿಷ್ಠೆಗೆ ಹೈಕಮಾಂಡ್ ಸೂಕ್ತ ಗೌರವ ನೀಡಿದೆ” ಎಂದು ಹೇಳಿದರು.

“ಈ ಹಿಂದೆ ಸಿದ್ದರಾಮಯ್ಯ ಅವರು ಜನಪರ ಯೋಜನೆಗಳ ಮೂಲಕ ಜನಮನ ಗೆದ್ದಿದ್ದರು. ಇದೀಗ ಆ ಆಡಳಿತ ಪರಂಪರೆಯನ್ನು ಮುಂದುವರಿಸುವ ದೊಡ್ಡ ಜವಾಬ್ದಾರಿ ಡಿ.ಕೆ. ಶಿವಕುಮಾರ ಮೇಲಿದೆ. ಒಬ್ಬ ರೈತನ ಮಗ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೇರಿರುವುದು ಹೆಮ್ಮೆಯ ಸಂಗತಿ. ಬಡವರ ಪರ ಇನ್ನಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರಲಿದ್ದಾರೆ ಎಂಬ ವಿಶ್ವಾಸವಿದೆ” ಎಂದು ಅಭಿಪ್ರಾಯಪಟ್ಟರು.

ಪಂಚ ಗ್ಯಾರಂಟಿ ಯೋಜನೆಗಳು ದೇಶದ ಗಮನ ಸೆಳೆದಿದ್ದು, ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ನೆರವಾಗಿವೆ. ಮೊದಲು ಟೀಕಿಸಿದ್ದವರೇ ಈಗ ಬೇರೆ ರಾಜ್ಯಗಳಲ್ಲಿ ಇದೇ ಮಾದರಿಯ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ವಿಶಾಲ ಗೋಶಲ್ಯನವರ, ಮಂಜುನಾಥ ಕೊರವರ, ಅರವಿಂದ ಗಾಗಡೆ, ಅಜಯ ಗೌಡರ, ಶ್ರೀನಿವಾಸ್ ಮುದರೆಡ್ಡಿ, ಸಿದ್ದಪ್ಪ ಗೋಶಲ್ಯನವರ, ಬಸಣ್ಣ ಹಾತಲಗೇರಿ, ಕೃಷ್ಣ ಹಡಪದ, ಬಸವರಾಜ, ಪವನ, ಸಿದ್ದಣ್ಣ ಗೋಶಲ್ಯನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಡಿ.ಕೆ. ಶಿವಕುಮಾರ ಅವರು ಸಾಮಾನ್ಯ ಕಾರ್ಯಕರ್ತರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ, ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಸುಮಾರು 45 ವರ್ಷಗಳ ರಾಜಕೀಯ ಅನುಭವ ಹೊಂದಿರುವ ಅವರು ರಾಜ್ಯವನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯುವ ವಿಶ್ವಾಸವಿದೆ.

ಪೃಥ್ವಿ ಕೆ. ಪರಾಪೂರ, ಕಾಂಗ್ರೆಸ್ ಯುವ ಮುಖಂಡ

error: Content is protected !!