ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಬಸ್ ನಿಲ್ದಾಣದ ಸಮೀಪ ಇರುವ ಪುರಸಭೆಯ ವಾಣಿಜ್ಯ ಮಳಿಗೆಗಳನ್ನು ಸೀಜ್ ಮಾಡಿದ್ದ ಪುರಸಭೆ ಅಧಿಕಾರಿಗಳು, ಕೋರ್ಟ್ ತಡೆಯಾಜ್ಞೆ ಹಿನ್ನೆಲೆ ಮತ್ತೆ ಸೀಲ್ ತೆರವುಗೊಳಿಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿದ ಘಟನೆ ಬುಧವಾರ ನಡೆದಿದೆ.
ವಾಣಿಜ್ಯ ಮಳಿಗೆಗಳ ಗುತ್ತಿಗೆ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಹೊಸದಾಗಿ ಟೆಂಡರ್ ಕರೆದು ಹರಾಜು ಪ್ರಕ್ರಿಯೆ ನಡೆಸಬೇಕು. ಅಲ್ಲದೆ, ಎಗ್ ರೈಸ್ ಹಾಗೂ ಚಿಕನ್ ಮಾರಾಟ ಅಂಗಡಿಗಳನ್ನು ತೆರವುಗೊಳಿಸಬೇಕು ಎಂದು ವಿವಿಧ ಕನ್ನಡಪರ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆಯ ಒತ್ತಡಕ್ಕೆ ಮಣಿದ ಪುರಸಭೆ ಅಧಿಕಾರಿಗಳು ಸಂಬಂಧಿಸಿದ ಅಂಗಡಿಗಳನ್ನು ಸೀಜ್ ಮಾಡಿದ್ದರು.
ಈ ನಡುವೆ ಅಂಗಡಿ ಮಾಲೀಕರು ಹಾಗೂ ಕೆಲವು ಸಂಘಟನೆಗಳ ಮುಖಂಡರು, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ (ಸ್ಟೇ) ಪಡೆದಿದ್ದರೂ ಪುರಸಭೆ ಅಧಿಕಾರಿಗಳು ಕಾನೂನುಬಾಹಿರವಾಗಿ ಅಂಗಡಿಗಳನ್ನು ಸೀಜ್ ಮಾಡಿದ್ದಾರೆ ಎಂದು ಆರೋಪಿಸಿದರು.
ಕರವೇ ಪ್ರವೀಣ ಶೆಟ್ಟಿ ಬಣದ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಕಲಘಟಗಿ ಹಾಗೂ ಡಿಎಸ್ಎಸ್ ಮುಖಂಡ ಸುರೇಶ ನಂದೆಣ್ಣವರ ಮಾತನಾಡಿ, “ಉಚ್ಚ ನ್ಯಾಯಾಲಯದ ಆದೇಶ ಜಾರಿಯಲ್ಲಿದ್ದರೂ ಅಂಗಡಿಗಳನ್ನು ಯಾವ ಆಧಾರದ ಮೇಲೆ ಸೀಜ್ ಮಾಡಲಾಗಿದೆ?” ಎಂದು ಪ್ರಶ್ನಿಸಿದರು.
ಚಿಕನ್ ಹಾಗೂ ಮಟನ್ ಮಾರಾಟದ ಬಗ್ಗೆ ನಮಗೂ ಆಕ್ಷೇಪವಿದೆ. ಆದರೆ ಕಾನೂನು ಪ್ರಕ್ರಿಯೆ ಅನುಸರಿಸದೆ ಏಕಾಏಕಿ ವ್ಯಾಪಾರಸ್ಥರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಇದರಿಂದ ಎಚ್ಚೆತ್ತ ಪುರಸಭೆ ಅಧಿಕಾರಿಗಳು ಪೊಲೀಸ್ ಬಂದೋಬಸ್ತ್ನೊಂದಿಗೆ ವಾಣಿಜ್ಯ ಸಂಕೀರ್ಣಕ್ಕೆ ಆಗಮಿಸಿ, ಕಂದಾಯ ಅಧಿಕಾರಿ ಸುರೇಶ ಪೂಜಾರ ಹಾಗೂ ವ್ಯವಸ್ಥಾಪಕಿ ಮಂಜುಳಾ ಹೂಗಾರ ನೇತೃತ್ವದಲ್ಲಿ ಅಂಗಡಿಗಳ ಸೀಲ್ ತೆರವುಗೊಳಿಸಿದರು.
ಅಂಗಡಿಗಳು ಪುನರಾರಂಭಗೊಂಡ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹರ್ಷ ವ್ಯಕ್ತಪಡಿಸಿದರು.
ಕ್ರೈಂ ವಿಭಾಗದ ಪಿಎಸ್ಐ ಟಿ.ಕೆ. ರಾಠೋಡ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಬಿಗಿ ಬಂದೋಬಸ್ತ್ ಒದಗಿಸಿದ್ದರು. ಬಸವರಾಜ ಹೊಗೆಸೊಪ್ಪಿನ, ಅನೀಲ ಮುಳಗುಂದ, ಬಸವಣ್ಣೆಪ್ಪ ನಂದೆಣ್ಣವರ, ಶಿವು ಕರಡಿ ಸೇರಿದಂತೆ ಹಲವಾರು ವ್ಯಾಪಾರಸ್ಥರು ಈ ವೇಳೆ ಉಪಸ್ಥಿತರಿದ್ದರು.
“ಮೊದಲು ನ್ಯಾಯಾಲಯದ ತಡೆಯಾಜ್ಞೆ ರದ್ದುಪಡಿಸಿಕೊಂಡು ಬಳಿಕ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ”
ಮಹೇಶ ಕಲಘಟಗಿ