Home Blog

ಸಿದ್ದರಾಮಯ್ಯರನ್ನು ಕಾಂಗ್ರೆಸ್ ಹೈಕಮಾಂಡ್ ಅಗೌರವದಿಂದ ನಡೆಸಿಕೊಂಡಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಅಗೌರವದಿಂದ ನಡೆಸಿಕೊಂಡಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಬೀದರ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಅವಮಾನಕರವಾಗಿ ನಡೆಸಿಕೊಂಡಿದೆ. ಆದರೆ ತಮ್ಮ ಹಿರಿತನದ ಗೌರವಕ್ಕೆ ಧಕ್ಕೆ ಬಾರದಿರಲಿ ಎಂಬ ಕಾರಣಕ್ಕೆ ಸಿದ್ದರಾಮಯ್ಯ ತಮ್ಮ ನೋವನ್ನು ಹೊರಹಾಕುತ್ತಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಸಂಸ್ಕೃತಿಯೇ ಇದೇ. ಇದು ಬಂಡವಾಳಶಾಹಿಗಳಿಗೆ ಮಣೆ ಹಾಕುವ ಪಕ್ಷವಾಗಿದೆ. ಮಾನವೀಯತೆಯಿಂದ ಹೈಕಮಾಂಡ್ ನಡೆದುಕೊಳ್ಳಬೇಕಿತ್ತು. ಆದರೆ ಆ ರೀತಿಯ ವರ್ತನೆ ಕಾಣಿಸಲಿಲ್ಲ ಎಂದು ಕಿಡಿಕಾರಿದರು.

ಮುಂದುವರಿದು, ಮೊದಲು ಹೈಕಮಾಂಡ್ ‘ಸಿದ್ದರಾಮಯ್ಯ ಜೀ’ ಎಂದು ಕರೆಯುತ್ತಿತ್ತು. ಈಗ ‘ಸಿದ್ದರಾಮಯ್ಯ ಯು ಮಸ್ಟ್ ರಿಸೈನ್’ ಎಂದು ಹೇಳುತ್ತಿದೆ. ನನ್ನನ್ನು ಹೈಕಮಾಂಡ್ ಗೌರವಿಸಿಲ್ಲ ಎಂದು ಸಿದ್ದರಾಮಯ್ಯ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲು ಒಂದು ತಿಂಗಳ ಕಾಲಾವಕಾಶ ಕೇಳಿದ್ದರು. ಆದರೆ ಹೈಕಮಾಂಡ್ ಒಂದು ದಿನವೂ ಸಮಯ ನೀಡದೇ ತಕ್ಷಣ ರಾಜೀನಾಮೆ ನೀಡುವಂತೆ ಸೂಚಿಸಿದೆ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

ಬಿಹಾರದ ಗಂಗಾ ನದಿಯಲ್ಲಿ ದೋಣಿ ದುರಂತ; ಇಬ್ಬರು ಸಾವು, ಐವರು ನಾಪತ್ತೆ

ಪಾಟ್ನಾ: 14 ಮಂದಿಯನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಗಂಗಾ ನದಿಯಲ್ಲಿ ಮುಳುಗಿದ ಪರಿಣಾಮ ಇಬ್ಬರು ಸಾವನ್ನಪ್ಪಿ, ಐವರು ನಾಪತ್ತೆಯಾಗಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

ಪ್ರವಾಹದಿಂದ ತತ್ತರಿಸಿರುವ ಪಾಟ್ನಾದ ಉಮಾನಾಥ್ ಗಂಗಾ ಘಾಟ್ ಸಮೀಪ ಈ ದುರಂತ ಸಂಭವಿಸಿದೆ. ಗಂಗಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದಲ್ಲದೆ, ಬಲವಾದ ಗಾಳಿಯೂ ಬೀಸುತ್ತಿದ್ದ ಹಿನ್ನೆಲೆ ದೋಣಿ ನಿಯಂತ್ರಣ ತಪ್ಪಿ ಮುಳುಗಿದೆ ಎಂದು ತಿಳಿದುಬಂದಿದೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಎಸ್ಡಿಆರ್‌ಎಫ್ ತಂಡ ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿತು. ದೋಣಿಯಲ್ಲಿದ್ದ ಏಳು ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಇಬ್ಬರ ಮೃತದೇಹಗಳನ್ನು ನೀರಿನಿಂದ ಹೊರತೆಗೆಯಲಾಗಿದೆ.

ಮೃತರನ್ನು ನೀಲಂ ಕುಮಾರಿ (30) ಹಾಗೂ ಕಾಶಿ ಕುಮಾರ್ (15) ಎಂದು ಗುರುತಿಸಲಾಗಿದೆ. ಇನ್ನೂ ಐವರು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ದೋಣಿಯಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ಕರೆದೊಯ್ಯಲಾಗಿತ್ತು. ಅಲ್ಲದೆ ಪ್ರಯಾಣಿಕರಿಗೆ ಯಾವುದೇ ಸುರಕ್ಷತಾ ಕವಚಗಳನ್ನು ಒದಗಿಸದಿರುವುದು ದುರಂತಕ್ಕೆ ಕಾರಣವಾಗಿದೆ ಎಂದು ವರದಿಗಳು ತಿಳಿಸಿವೆ.

ಪ್ರತಿಕೂಲ ಹವಾಮಾನ ಮತ್ತು ನದಿಯ ಅಪಾಯಕಾರಿ ಪರಿಸ್ಥಿತಿಗಳ ನಡುವೆಯೂ ಮುಳುಗು ತಜ್ಞರು ಹಾಗೂ ರಕ್ಷಣಾ ಸಿಬ್ಬಂದಿ ನದಿಯ ವಿವಿಧ ಭಾಗಗಳಲ್ಲಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಬೆಳಗಾವಿಯಲ್ಲಿ SDRF CPI ಆತ್ಮಹತ್ಯೆ! ಮನೆಯಲ್ಲಿ ನೇಣಿಗೆ ಶರಣಾದ ಅಧಿಕಾರಿ

ಬೆಳಗಾವಿ: SDRF ವಿಭಾಗದ ಸಿಪಿಐ ಅಧಿಕಾರಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಮೃತರನ್ನು ಸಿಪಿಐ ಶ್ರೀಶೈಲ ಚೌಗಲೆ (37) ಎಂದು ಗುರುತಿಸಲಾಗಿದೆ. ಅವರು ಬೆಳಗಾವಿಯ ಚನ್ನಮ್ಮ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಾಹಿತಿಯ ಪ್ರಕಾರ, ಶ್ರೀಶೈಲ ಚೌಗಲೆ ಅವರು ಮನೆಯ ಕೋಣೆಯ ಬಾಗಿಲು ಹಾಕಿಕೊಂಡು ನೇಣುಬಿಗಿದುಕೊಂಡಿದ್ದಾರೆ. ಅನುಮಾನಗೊಂಡ ಪತ್ನಿ ಈ ಕುರಿತು ಎಸ್ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಕೋಣೆಯ ಬಾಗಿಲು ಮುರಿದು ಅವರನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಿದರು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದು ತಿಳಿದುಬಂದಿದೆ.

ಶ್ರೀಶೈಲ ಚೌಗಲೆ ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹವನ್ನು ಬೆಳಗಾವಿಯ ಬೀಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಪ್ರಕರಣ ಸಂಬಂಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿದಿದೆ.

ನನಗೆ ಯಾವುದೇ ಅಸಮಾಧಾನವಿಲ್ಲ, ಹೈಕಮಾಂಡ್ ನಿರ್ಧಾರವನ್ನು ನಾನು ಗೌರವಿಸುತ್ತೇನೆ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದೆ ಎಂದು ವರದಿಗಳು ಹೇಳುತ್ತಿವೆ. ಕಾವೇರಿ ನಿವಾಸದಲ್ಲಿ ನಡೆದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ನಿರ್ಧಾರವನ್ನು ಸಚಿವರ ಮುಂದೆ ತಿಳಿಸಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಮಾತನಾಡಿದ ಅವರು, “ನನಗೆ ಯಾವುದೇ ಅಸಮಾಧಾನವಿಲ್ಲ, ಹೈಕಮಾಂಡ್ ನಿರ್ಧಾರವನ್ನು ನಾನು ಗೌರವಿಸುತ್ತೇನೆ” ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡದೆ, ಅಂತಿಮ ತೀರ್ಮಾನ ಹೈಕಮಾಂಡ್ ಕೈಯಲ್ಲಿದೆ ಎಂದು ತಿಳಿಸಿದ್ದಾರೆ ಎನ್ನಲಾಗುತ್ತಿದೆ.

ಸಭೆಯ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಸಭೆಗೆ ಮೊದಲು ಅವರು ಸಿಎಂ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿರುವ ದೃಶ್ಯವೂ ಗಮನ ಸೆಳೆದಿದೆ.

ಈ ಬೆಳವಣಿಗೆಯಿಂದ ರಾಜ್ಯ ರಾಜಕೀಯದಲ್ಲಿ ಅನಿಶ್ಚಿತತೆ ಹೆಚ್ಚಾಗಿದ್ದು, ಮುಂದಿನ ಹಂತದ ಹೈಕಮಾಂಡ್ ನಿರ್ಧಾರಗಳತ್ತ ಎಲ್ಲರ ಕಣ್ಣು ನೆಟ್ಟಿದೆ.

ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ತಾರಕಕ್ಕೇರಿರುವ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಕಾವೇರಿ ನಿವಾಸದಲ್ಲಿ ನಡೆದ ಈ ಹೈವೋಲ್ಟೇಜ್ ಸಭೆಯಲ್ಲಿ ಕಂಡ ದೃಶ್ಯಗಳು ಹಲವು ರಾಜಕೀಯ ಸಂದೇಶಗಳನ್ನು ರವಾನಿಸಿವೆ.

ಬೆಳಗ್ಗೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಅಪ್ಪಿಕೊಂಡು ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಈ ಭಾವನಾತ್ಮಕ ಕ್ಷಣ ಕಾಂಗ್ರೆಸ್ ಒಳರಾಜಕೀಯದ ಸೂಕ್ಷ್ಮ ಬೆಳವಣಿಗೆಗಳಿಗೆ ಹೊಸ ತಿರುವು ನೀಡಿದೆ.

ಇಬ್ಬರು ನಾಯಕರು ಮೊದಲು ಪ್ರತ್ಯೇಕವಾಗಿ ಮಾತುಕತೆ ನಡೆಸಿದ ಬಳಿಕ, ಹಿರಿಯ ಸಚಿವರ ಜೊತೆ ಮಹತ್ವದ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಸಿದ್ದರಾಮಯ್ಯ ಅವರ ಪಕ್ಕದಲ್ಲೇ ಡಿಕೆ ಶಿವಕುಮಾರ್ ಮತ್ತು ಡಾ. ಪರಮೇಶ್ವರ್ ಕುಳಿತಿರುವುದು ವಿಶೇಷ ಚರ್ಚೆಗೆ ಗ್ರಾಸವಾಗಿದೆ. ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಹಾಗೂ ಮುಂದಿನ ರಾಜಕೀಯ ತಂತ್ರಗಳ ಬಗ್ಗೆ ಇಲ್ಲಿ ಚರ್ಚೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಭೆಯಲ್ಲಿ ಸರ್ಕಾರದ ಪ್ರಮುಖ ಸಚಿವರು ಭಾಗಿಯಾಗಿದ್ದು, ಕಾಂಗ್ರೆಸ್ ಪಾಳಯದಲ್ಲಿ ಏಕತೆಯ ಸಂದೇಶ ರವಾನಿಸಲು ನಾಯಕರು ಪ್ರಯತ್ನಿಸಿದ್ದಾರೆ ಎಂಬ ವಿಶ್ಲೇಷಣೆ ಕೇಳಿಬರುತ್ತಿದೆ. ಸಭೆಯಲ್ಲಿ ಡಿಕೆ ಶಿವಕುಮಾರ್, ಪರಮೇಶ್ವರ್, ಭೈರತಿ ಸುರೇಶ್, ಸಂತೋಷ್ ಲಾಡ್, ಎಂಬಿ ಪಾಟೀಲ್, ಪ್ರಿಯಾಂಕ್ ಖರ್ಗೆ, ಕೆಜೆ ಜಾರ್ಜ್, ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೋಳಿ, ಮಹದೇವಪ್ಪ, ಮಧು ಬಂಗಾರಪ್ಪ, ಹೆಚ್.ಕೆ. ಪಾಟೀಲ್ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು.

ರಾಜಕೀಯ ಬೆಳವಣಿಗೆಗಳು ದಿನದಿಂದ ದಿನಕ್ಕೆ ವೇಗ ಪಡೆದುಕೊಳ್ಳುತ್ತಿರುವ ಹೊತ್ತಿನಲ್ಲಿ, ಕಾವೇರಿ ನಿವಾಸದಲ್ಲಿ ನಡೆದ ಈ ಸಭೆ ಕಾಂಗ್ರೆಸ್ ಭವಿಷ್ಯದ ದಿಕ್ಕು ನಿರ್ಧರಿಸುವ ಮಹತ್ವದ ಕ್ಷಣವಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಇಂಧನ ಕೊರತೆ: ಲಕ್ನೋದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ ಆಕಾಶ ಏರ್ ವಿಮಾನ!

ಲಕ್ನೋ: ಬೆಂಗಳೂರಿನಿಂದ ಭುವನೇಶ್ವರಕ್ಕೆ ತೆರಳುತ್ತಿದ್ದಆಕಾಶ ಏರ್ ಸಂಸ್ಥೆಯ ವಿಮಾನವು ಇಂಧನ ಕೊರತೆಯಿಂದಾಗಿ ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.

ವಿಮಾನದಲ್ಲಿ 194 ಪ್ರಯಾಣಿಕರು ಹಾಗೂ ಸಿಬ್ಬಂದಿ ಇದ್ದರು ಎಂದು ತಿಳಿದುಬಂದಿದೆ.

ನಿಗದಿತ ವೇಳಾಪಟ್ಟಿಯಂತೆ ವಿಮಾನವು ಭುವನೇಶ್ವರ ತಲುಪಬೇಕಾಗಿತ್ತು. ಆದರೆ ಅಲ್ಲಿ ಹವಾಮಾನ ಹದಗೆಟ್ಟ ಹಿನ್ನೆಲೆ ರಾತ್ರಿ ವೇಳೆ ವಿಮಾನವನ್ನು ಲಕ್ನೋ ಕಡೆಗೆ ತಿರುಗಿಸಲಾಯಿತು. ಈ ವೇಳೆ ವಿಮಾನದ ಇಂಧನ ಮಟ್ಟ ವೇಗವಾಗಿ ಕಡಿಮೆಯಾಗುತ್ತಿರುವುದನ್ನು ಪೈಲಟ್ ಗಮನಿಸಿದ್ದು, ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ತಕ್ಷಣವೇ ‘ಪ್ಯಾನ್-ಪ್ಯಾನ್’ ತುರ್ತು ಕರೆ ನೀಡಿದ್ದಾರೆ.

ಪೈಲಟ್‌ನ ಸಂದೇಶ ಸಿಕ್ಕ ತಕ್ಷಣ ಲಕ್ನೋ ವಾಯು ಸಂಚಾರ ನಿಯಂತ್ರಣ ಕೇಂದ್ರ ಎಚ್ಚೆತ್ತುಕೊಂಡು ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿತು. ರನ್‌ವೇ ಖಾಲಿ ಮಾಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಗ್ನಿಶಾಮಕ ವಾಹನಗಳು, ವೈದ್ಯಕೀಯ ತಂಡ, ಆಂಬ್ಯುಲೆನ್ಸ್ ಹಾಗೂ ಭದ್ರತಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ನಿಯೋಜಿಸಲಾಯಿತು.

ಎಲ್ಲಾ ಆತಂಕಗಳ ನಡುವೆಯೂ ಬೋಯಿಂಗ್ 737 ಮ್ಯಾಕ್ಸ್ ವಿಮಾನವು ರಾತ್ರಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿತು. ಬಳಿಕ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೈಲಟ್ ತಿಳಿಸಿದ ನಂತರ ಅಧಿಕಾರಿಗಳು ನಿರಾಳರಾದರು.

ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ವಿಮಾನ ಇಳಿದ ಬಳಿಕ ಕೆಲ ಪ್ರಯಾಣಿಕರು ಲಕ್ನೋದಲ್ಲೇ ಇಳಿದಿದ್ದು, ನಂತರ ವಿಮಾನಕ್ಕೆ ಮರು ಇಂಧನ ತುಂಬಿಸಿ ಮುಂದಿನ ಪ್ರಯಾಣಕ್ಕೆ ಸಿದ್ಧಪಡಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕ ದಾಳಿಗೆ ಇರಾನ್ ಪ್ರತಿದಾಳಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ!

ಇರಾನ್: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದ್ದು, ಬಂದರ್ ಅಬ್ಬಾಸ್ ಪ್ರದೇಶದಲ್ಲಿ ಅಮೆರಿಕ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾನ್ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ಬಂದರ್ ಅಬ್ಬಾಸ್ ವಿಮಾನ ನಿಲ್ದಾಣದ ಹೊರವಲಯದಲ್ಲಿರುವ ಸೈನಿಕ ತಾಣದ ಮೇಲೆ ಅಮೆರಿಕ ಸೇನೆ ದಾಳಿ ನಡೆಸಿದ ಬಳಿಕ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಪ್ರತಿದಾಳಿ ಆರಂಭಿಸಿದೆ. ಈ ಬೆಳವಣಿಗೆ ಅಮೆರಿಕ ಮತ್ತು ಇರಾನ್ ನಡುವಿನ ದುರ್ಬಲ ಕದನ ವಿರಾಮದ ಮೇಲೆ ಮತ್ತೊಮ್ಮೆ ಪ್ರಶ್ನೆ ಎಬ್ಬಿಸಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆಲ ದಿನಗಳ ಹಿಂದಷ್ಟೇ ಕದನ ವಿರಾಮ ವಿಸ್ತರಣೆ ಕುರಿತು ಹೇಳಿಕೆ ನೀಡಿದ್ದರೂ, ಎರಡೂ ದೇಶಗಳ ನಡುವೆ ಮತ್ತೆ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ.

ಸುದ್ದಿಸಂಸ್ಥೆಗಳ ವರದಿ ಪ್ರಕಾರ, ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಅಮೆರಿಕದ ಪಡೆಗಳು ಹಾಗೂ ವಾಣಿಜ್ಯ ಹಡಗುಗಳಿಗೆ ಬೆದರಿಕೆ ಉಂಟುಮಾಡುವ ಸೈನಿಕ ತಾಣಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಸೇನೆ ಹೊಸ ದಾಳಿಗಳನ್ನು ನಡೆಸಿದೆ. ಈ ವೇಳೆ ಅಮೆರಿಕದ ಪಡೆಗಳಿಗೆ ಅಪಾಯ ಉಂಟುಮಾಡುವ ಸಾಧ್ಯತೆಯಿದ್ದ ಹಲವಾರು ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿದುಬಂದಿದೆ.

ಇದೇ ವೇಳೆ, ಅಮೆರಿಕದ ಕ್ರಮವನ್ನು ಕದನ ವಿರಾಮ ಉಲ್ಲಂಘನೆ ಎಂದು ಇರಾನ್ ಆರೋಪಿಸಿದ್ದು, ಅಮೆರಿಕ ಸೇನಾ ಗುರಿಗಳ ವಿರುದ್ಧ ತನ್ನ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ ಎನ್ನಲಾಗಿದೆ.

ಕಳೆದ ಮೂರು ತಿಂಗಳಿಂದ ನಡೆಯುತ್ತಿರುವ ಉದ್ವಿಗ್ನತೆ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿದ್ದು, ಹಾರ್ಮುಜ್ ಜಲಸಂಧಿಯಲ್ಲಿನ ಪರಿಸ್ಥಿತಿ ಜಾಗತಿಕ ಸಮುದ್ರ ಸಂಚಾರದ ಮೇಲೂ ಆತಂಕ ಮೂಡಿಸಿದೆ.

ಒಟ್ಟಾರೆ, ಅಮೆರಿಕ–ಇರಾನ್ ನಡುವಿನ ಈ ಹೊಸ ಸಂಘರ್ಷ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಮತ್ತಷ್ಟು ಅಶಾಂತಿಗೆ ಕಾರಣವಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಎಸಿಯನ್ನು ಪದೇ ಪದೇ ಆನ್–ಆಫ್ ಮಾಡ್ತೀರಾ? ಹಾಗಿದ್ರೆ ಈ ಸುದ್ದಿ ಓದಿ!

ದೇಶದಾದ್ಯಂತ ಉಷ್ಣಾಂಶ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಜನರು ಫ್ಯಾನ್, ಕೂಲರ್ ಹಾಗೂ ಎಸಿಗಳ ಬಳಕೆಯನ್ನು ಹೆಚ್ಚಿಸಿದ್ದಾರೆ.

ಆದರೆ ಎಸಿಯನ್ನು ಪದೇ ಪದೇ ಆನ್ ಮತ್ತು ಆಫ್ ಮಾಡುವ ಅಭ್ಯಾಸದಿಂದ ವಿದ್ಯುತ್ ಬಿಲ್ ಮಾತ್ರವಲ್ಲ, ಯಂತ್ರದ ಕಾರ್ಯಕ್ಷಮತೆಯ ಮೇಲೂ ಗಂಭೀರ ಪರಿಣಾಮ ಬೀರುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಬಹುತೇಕರು ಕೊಠಡಿ ತಣ್ಣಗಾದ ತಕ್ಷಣ ಎಸಿ ಆಫ್ ಮಾಡಿ, ಮತ್ತೆ ಬಿಸಿಯಾಗುತ್ತಿದ್ದಂತೆ ಆನ್ ಮಾಡುತ್ತಾರೆ. ಆದರೆ ಈ ಕ್ರಮದಿಂದ ವಿದ್ಯುತ್ ಉಳಿತಾಯವಾಗುವುದಿಲ್ಲ. ಪ್ರತೀ ಬಾರಿ ಎಸಿ ಮತ್ತೆ ಪ್ರಾರಂಭವಾದಾಗ ಕೊಠಡಿಯನ್ನು ತಣ್ಣಗಾಗಿಸಲು ಹೆಚ್ಚಿನ ಪ್ರಮಾಣದ ವಿದ್ಯುತ್ ಬಳಸಬೇಕಾಗುತ್ತದೆ. ಇದರಿಂದ ತಿಂಗಳ ವಿದ್ಯುತ್ ಬಿಲ್ ಹೆಚ್ಚಾಗುವ ಸಾಧ್ಯತೆ ಇರುತ್ತದೆ.

ತಜ್ಞರ ಪ್ರಕಾರ, ಎಸಿಯ ಪ್ರಮುಖ ಭಾಗವಾದ ಕಂಪ್ರೆಸರ್ ಮೇಲೆ ಪದೇ ಪದೇ ಆನ್-ಆಫ್ ಮಾಡುವುದರಿಂದ ಹೆಚ್ಚುವರಿ ಒತ್ತಡ ಉಂಟಾಗುತ್ತದೆ. ಇದರಿಂದ ಯಂತ್ರ ಹೆಚ್ಚು ಬಿಸಿಯಾಗುವ ಸಾಧ್ಯತೆ ಇದ್ದು, ಕಂಪ್ರೆಸರ್‌ನ ಆಯುಷ್ಯ ಕೂಡ ಕಡಿಮೆಯಾಗಬಹುದು.

ಇದೇ ವೇಳೆ, ಎಸಿಯ ಒಳಗಿನ ವಿದ್ಯುತ್ ಘಟಕಗಳು, ವೈರಿಂಗ್ ಮತ್ತು ಕೆಪಾಸಿಟರ್‌ಗಳ ಮೇಲೂ ಪರಿಣಾಮ ಬೀಳಬಹುದು. ಕೆಲ ಸಂದರ್ಭಗಳಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸುವ ಅಪಾಯವೂ ಇರುತ್ತದೆ ಎಂದು ಎಚ್ಚರಿಸಲಾಗಿದೆ.

ಪದೇ ಪದೇ ಎಸಿ ಆಫ್ ಮಾಡಿದರೆ ಕೊಠಡಿಯ ತಾಪಮಾನ ಸ್ಥಿರವಾಗುವುದಿಲ್ಲ. ಗೋಡೆಗಳು ಹಾಗೂ ಪೀಠೋಪಕರಣಗಳು ಸಂಪೂರ್ಣ ತಣ್ಣಗಾಗಲು ಸಮಯ ಬೇಕಾಗುವುದರಿಂದ ನಿರಂತರ ತಂಪು ವಾತಾವರಣ ದೊರೆಯುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ.

ಹೀಗಾಗಿ ಎಸಿಯನ್ನು 24ರಿಂದ 26 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ನಿರಂತರವಾಗಿ ಬಳಸುವುದು ಉತ್ತಮ ಎಂದು ಸಲಹೆ ನೀಡಲಾಗಿದೆ. ಜೊತೆಗೆ ಸ್ಲೀಪ್ ಮೋಡ್, ಇಕೋ ಮೋಡ್ ಮತ್ತು ಟೈಮರ್ ಸೌಲಭ್ಯಗಳನ್ನು ಬಳಸುವುದರಿಂದ ವಿದ್ಯುತ್ ಉಳಿತಾಯ ಸಾಧ್ಯವಾಗುತ್ತದೆ. ಎಸಿ ಕಾರ್ಯನಿರ್ವಹಿಸುವ ವೇಳೆ ಕೊಠಡಿಯ ಬಾಗಿಲು ಮತ್ತು ಕಿಟಕಿಗಳನ್ನು ಮುಚ್ಚಿಟ್ಟರೆ ತಂಪು ಹೆಚ್ಚು ಕಾಲ ಉಳಿಯುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಬಕ್ರೀದ್ ಹಬ್ಬ! ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ, ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಹಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಮತ್ತು ಮಾರ್ಗ ಬದಲಾವಣೆಗಳನ್ನು ಜಾರಿಗೊಳಿಸಲಾಗಿದೆ ಎಂದು ಸಂಚಾರ ಪೊಲೀಸ್ ಇಲಾಖೆ ತಿಳಿಸಿದೆ.

ಬೆಂಗಳೂರಿನ ದಕ್ಷಿಣ ವಿಭಾಗದ ಸಂಚಾರ ಪೊಲೀಸ್ ಉಪ ಆಯುಕ್ತರು ತಮ್ಮ ಅಧಿಕೃತ X ಖಾತೆಯಲ್ಲಿ ಈ ಕುರಿತು ಸಂಚಾರ ಸಲಹೆ ಪ್ರಕಟಿಸಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಿದ್ದಾರೆ.

ಮೈಕೋಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬನ್ನೇರುಘಟ್ಟ ಮುಖ್ಯ ರಸ್ತೆಯ ಸಾಗರ್ ಆಸ್ಪತ್ರೆ ಜಂಕ್ಷನ್‌ನಿಂದ ಗುರಪ್ಪನಪಾಳ್ಯ ಜಂಕ್ಷನ್‌ವರೆಗೆ ಹಾಗೂ ಸಾಯಿರಾಂ ಜಂಕ್ಷನ್‌ನಿಂದ ಗುರಪ್ಪನಪಾಳ್ಯವರೆಗೆ ಸಂಚಾರ ನಿರ್ಬಂಧ ವಿಧಿಸಲಾಗಿದೆ. 39ನೇ ಕ್ರಾಸ್ ರಸ್ತೆಯಲ್ಲಿಯೂ ಗುರಪ್ಪನಪಾಳ್ಯದಿಂದ ರೆಡ್ಡಿ ಆಸ್ಪತ್ರೆ ಜಂಕ್ಷನ್‌ವರೆಗೆ ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ.

ಈ ಭಾಗದಲ್ಲಿ ವಾಹನ ಸವಾರರಿಗೆ ಡೈರಿ ಸರ್ಕಲ್, ತಿಲಕ ನಗರ, ಈಸ್ಟ್ ಎಂಡ್ ರಸ್ತೆ, ಜಯದೇವ ಜಂಕ್ಷನ್ ಸೇರಿದಂತೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಇದೇ ರೀತಿ ಕೆ.ಎಸ್. ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಕನಕಪುರ ಮುಖ್ಯ ರಸ್ತೆಯ ಸಾರಕ್ಕಿ ಸಿಗ್ನಲ್‌ನಿಂದ ಔಟರ್ ರಿಂಗ್ ರಸ್ತೆಯ ಕೆ.ಎಸ್. ಲೇಔಟ್ ಸಿಗ್ನಲ್ ವರೆಗೆ ಸಂಚಾರ ನಿರ್ಬಂಧ ವಿಧಿಸಲಾಗಿದೆ.

ಈ ಮಾರ್ಗದಲ್ಲಿ ಬರುವ ವಾಹನಗಳು ಬನಶಂಕರಿ, ಸಾರಕ್ಕಿ ಮಾರ್ಕೆಟ್, ಬೇಂದ್ರೆ ಸರ್ಕಲ್ ಮೂಲಕ ಪರ್ಯಾಯವಾಗಿ ಸಂಚರಿಸಬಹುದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಬ್ಬದ ಹಿನ್ನೆಲೆಯಲ್ಲಿ ಭಾರಿ ಜನಸಂದಣಿ ನಿರೀಕ್ಷೆಯಿರುವುದರಿಂದ ಸಾರ್ವಜನಿಕರು ಸಹಕರಿಸಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಮಾರ್ಚ್–ಮೇ ಬದಲು ಸೆಪ್ಟೆಂಬರ್–ಅಕ್ಟೋಬರ್‌ಗೆ ಐಪಿಎಲ್? ವೇಳಾಪಟ್ಟಿ ಬದಲಾವಣೆಗೆ ಬಿಸಿಸಿಐ ಚಿಂತನೆ!

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡುವ ಕುರಿತು ಬಿಸಿಸಿಐ ಚಿಂತನೆ ನಡೆಸುತ್ತಿದೆ.

ಇನ್ನುಮುಂದೆ ಐಪಿಎಲ್ ಅನ್ನು ಮಾರ್ಚ್–ಮೇ ಬದಲು ಸೆಪ್ಟೆಂಬರ್–ಅಕ್ಟೋಬರ್ ತಿಂಗಳಲ್ಲಿ ನಡೆಸುವ ಸಾಧ್ಯತೆ ಕುರಿತು ಚರ್ಚೆ ನಡೆಯುತ್ತಿದೆ.

ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ ಅವರು ಈ ಕುರಿತು ಮಾತನಾಡಿ, ವೇಳಾಪಟ್ಟಿ ಬದಲಾವಣೆಗೆ ಸಂಬಂಧಿಸಿ ಪ್ರಸಾರಕರ ಜೊತೆ ಚರ್ಚೆ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಸೆಪ್ಟೆಂಬರ್–ಅಕ್ಟೋಬರ್ ಅವಧಿ ದೀಪಾವಳಿ ಹಬ್ಬದ ಸಮಯವಾಗಿರುವುದರಿಂದ ಜಾಹೀರಾತು ಹಾಗೂ ವ್ಯವಹಾರ ದೃಷ್ಟಿಯಿಂದ ಹೆಚ್ಚು ಲಾಭದಾಯಕವಾಗಬಹುದು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

ಮೇ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣ ಆಟಗಾರರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವೇಳಾಪಟ್ಟಿಯನ್ನು ಬದಲಾಯಿಸುವ ಅಗತ್ಯವಿದೆ ಎಂಬ ಚರ್ಚೆಯೂ ನಡೆಯುತ್ತಿದೆ. ಪರ್ಯಾಯವಾಗಿ ಫೆಬ್ರವರಿ–ಏಪ್ರಿಲ್ ಅವಧಿಯನ್ನು ಪರಿಗಣಿಸಬಹುದಾದರೂ, ಈ ಅವಧಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಅಂತಿಮ ನಿರ್ಧಾರ ಇನ್ನೂ ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

ಒಟ್ಟಾರೆ, ಐಪಿಎಲ್ ವೇಳಾಪಟ್ಟಿ ಬದಲಾವಣೆ ಕುರಿತು ನಡೆಯುತ್ತಿರುವ ಈ ಚರ್ಚೆ ಕ್ರಿಕೆಟ್ ವಲಯದಲ್ಲಿ ದೊಡ್ಡ ಕುತೂಹಲಕ್ಕೆ ಕಾರಣವಾಗಿದೆ.

error: Content is protected !!