Home Blog

ಗುರುಭಕ್ತಿ ಇದ್ದರೆ ಬದುಕಿಗೆ ದಿಕ್ಕು: ವೀರಮುಕ್ತಿಮುನಿ ಶಿವಾಚಾರ್ಯರು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: “ಜೀವನ ಎಂಬ ಭವಸಾಗರವನ್ನು ದಾಟಿಸುವವನೇ ಗುರು. ಉಸಿರು ಇರುವವರೆಗೂ ದೇವರು, ಹೆತ್ತವರು ಹಾಗೂ ಗುರುವನ್ನು ಸ್ಮರಿಸುತ್ತ ಸನ್ಮಾರ್ಗದಲ್ಲಿ ಬದುಕಬೇಕು. ಗುರುನಾಮ ಸ್ಮರಣೆ ಜೀವನಕ್ಕೆ ಆತ್ಮಬಲ ಮತ್ತು ಸರಿದಾರಿಯನ್ನು ತೋರಿಸುತ್ತದೆ” ಎಂದು ಮುಕ್ತಿಮಂದಿರದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು ಹೇಳಿದರು.

ಪಟ್ಟಣದ ಶ್ರೀ ಬಾಳೇಹಳ್ಳಿಮಠ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಗುರುವಂದನೆ, ಸಾಧಕರ ಸನ್ಮಾನ, ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ಕಾರ್ಯಚಟುವಟಿಕೆಗಳು, ಚಿತ್ರಕಲಾ ಪ್ರದರ್ಶನ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಜಿ.ಎಂ. ಮುಂದಿನಮನಿ ಅವರ ನಿವೃತ್ತಿ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ತಂದೆ-ತಾಯಿ ಜನ್ಮ ನೀಡಿದರೆ, ಗುರು ಬದುಕಿಗೆ ದಿಕ್ಕು, ಗುರಿ ಮತ್ತು ಅರ್ಥ ಕಲ್ಪಿಸುತ್ತಾರೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗುವುದೇ ಗುರುಗಳಿಗೆ ಸಲ್ಲಿಸುವ ನಿಜವಾದ ಗೌರವ. ಹುಟ್ಟು ಅನಿಶ್ಚಿತ, ಸಾವು ನಿಶ್ಚಿತ. ಆದರೆ ಈ ಎರಡರ ನಡುವಿನ ಬದುಕಿನಲ್ಲಿ ಸಮಾಜಕ್ಕೆ ಸಲ್ಲಿಸುವ ಸೇವೆ, ಮಾನವೀಯ ಮೌಲ್ಯಗಳು ಹಾಗೂ ಶಿಕ್ಷಣದ ಮೂಲಕ ಮೂಡಿಸುವ ಸಂಸ್ಕಾರಗಳೇ ಶಾಶ್ವತವಾಗಿ ಉಳಿಯುತ್ತವೆ ಎಂದು ಶ್ರೀಗಳು ಹೇಳಿದರು.

ಟಿಬೇಟಿಯನ್ ಕ್ಯಾಂಪ್‌ನ ಜಂಪಾ ಲೋಬ್ಸಂಗ್ ಗುರೂಜಿ, ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ ಹಾಗೂ ಸಣ್ಣೀರಪ್ಪ ಹಳೆಪ್ಪನವರ ಮಾತನಾಡಿ, ನಿವೃತ್ತ ಶಿಕ್ಷಣಾಧಿಕಾರಿ ಜಿ.ಎಂ. ಮುಂದಿನಮನಿ ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಸ್ಮರಣೀಯವಾಗಿದೆ. “ಶಿಕ್ಷಕ ಎಂದಿಗೂ ನಿವೃತ್ತನಾಗುವುದಿಲ್ಲ; ಆತ ತನ್ನ ವಿದ್ಯಾರ್ಥಿಗಳ ಸಾಧನೆಗಳಲ್ಲಿ ಸದಾ ಜೀವಂತವಾಗಿರುತ್ತಾನೆ” ಎಂದು ಹೇಳಿದರು.

ಜಿ.ಎಂ. ಮುಂದಿನಮನಿ ಅವರು ತಮ್ಮ ಸುದೀರ್ಘ ಸೇವಾವಧಿಯಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣ, ಗುಣಮಟ್ಟದ ಶಿಕ್ಷಣದ ವಿಸ್ತರಣೆ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಶಿಕ್ಷಣದ ಮೂಲಕ ಸಮಾಜ ಪರಿವರ್ತನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಶಾಲೆಯನ್ನು ಉತ್ತಮ ನಾಗರಿಕರನ್ನು ರೂಪಿಸುವ ದೇವಾಲಯವನ್ನಾಗಿ ರೂಪಿಸುವಲ್ಲಿ ಅವರ ಸೇವೆ ಆದರ್ಶಪ್ರಾಯವಾಗಿದೆ ಎಂದು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್.ಎಸ್. ಪಟ್ಟಣಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಡಾ. ಎಂ. ರಾಮಚಂದ್ರ, ಐ.ಬಿ. ಬೆನಕೊಪ್ಪ, ಸುಲೇಮಾನ ಕಣಕೆ, ಮಂಜುನಾಥ ಮಾಗಡಿ, ತಿಮ್ಮರಡ್ಡಿ ಮರಡ್ಡಿ, ಸೋಮಣ್ಣ ಡಾಣಗಲ್, ಪ್ರವೀಣ ಬಾಳಿಕಾಯಿ, ಮಹೇಂದ್ರ ಉಡಚಪ್ಪನವರ, ಅಬ್ದುಲ್ ಸತ್ತೂರ, ಶರಣಪ್ರಕಾಶ ಪಾಟೀಲ, ಎಂ.ಕೆ. ಲಮಾಣಿ, ವಿ.ಎ. ಹುಡೇದ, ಜಿ.ಎನ್. ಉಪ್ಪಿನ, ಹರೀಶ ಲಕ್ಷ್ಮೇಶ್ವರ, ಬಸವರಾಜ ಹಿರೇಮನಿ, ಡಾ. ಸಂಗಮೇಶ ತಮ್ಮನಗೌಡ್ರ, ಬಿ.ಎಸ್. ಹರ್ಲಾಪೂರ, ವಿಜು ಕಿರೇಸೂರ, ಎಂ.ಎನ್. ಭರಮಗೌಡ್ರ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಲಿಸಿದ ಗುರುಗಳಿಗೆ ಗುರುವಂದನೆ ಸಲ್ಲಿಸಲಾಯಿತು. ಪುಸ್ತಕ ಬಿಡುಗಡೆ ನೆರವೇರಿತು. ಕು. ಪ್ರೀತಂ ಕಬ್ಬೇರಹಳ್ಳಿ, ಕು. ಜ್ಞಾನಾ ಗುರುರಾಜ, ಫಕ್ಕೀರಪ್ಪ ದೊಡ್ಡಮನಿ ಹಾಗೂ ಡಾ. ಎಚ್.ಸಿ. ದಿವುಶಂಕರ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಬಳಿಕ ಜಿ.ಎಂ. ಮುಂದಿನಮನಿ ದಂಪತಿಗಳನ್ನು ಅಭಿಮಾನಿ ಬಳಗ ಹಾಗೂ ಶಿಕ್ಷಕ ಬಳಗದವರು ಪಟ್ಟಣದಲ್ಲಿ ಸಾರೋಟ ಮೆರವಣಿಗೆ ನಡೆಸಿ ಅದ್ಧೂರಿಯಾಗಿ ಸನ್ಮಾನಿಸಿದರು.

“ಉಸಿರು ಇರುವವರೆಗೂ ದೇವರು, ಹೆತ್ತವರು ಹಾಗೂ ಗುರುವನ್ನು ಸ್ಮರಿಸುತ್ತ ಬದುಕಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ.”

– ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು, ಮುಕ್ತಿಮಂದಿರ

ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಗೈರು!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಕುತೂಹಲ ಕೆರಳಿಸುವ ಬೆಳವಣಿಗೆ ನಡೆದಿದ್ದು, ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿದ್ದಾರೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ರಾಜಭವನದಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಅವರು ನಿರ್ಧರಿಸಿದ್ದು, ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿದೆ.

ಮಾಹಿತಿಯ ಪ್ರಕಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿನದ ಆರಂಭದಲ್ಲೇ ತಮ್ಮ ಆಪ್ತರಿಗೆ ತಾವು ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದರು. ಬಳಿಕ ಅವರು ತಮ್ಮ ಅಧಿಕೃತ ಕಾವೇರಿ ನಿವಾಸದಲ್ಲೇ ಉಳಿದಿದ್ದರು ಎಂದು ತಿಳಿದುಬಂದಿದೆ.

ಸಚಿವ ಸಂಪುಟ ವಿಸ್ತರಣೆ ಹಾಗೂ ಹೊಸ ಸಚಿವರ ಆಯ್ಕೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕೆಲವು ಶಾಸಕರಲ್ಲಿ ಅಸಮಾಧಾನ ವ್ಯಕ್ತವಾಗಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರ ಈ ನಡೆ ಮತ್ತಷ್ಟು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಮಾಜಿ ಸಿಎಂ ಕಾರ್ಯಕ್ರಮಕ್ಕೆ ಗೈರಾಗಿರುವುದು ಪಕ್ಷದೊಳಗಿನ ಬೆಳವಣಿಗೆಗಳ ಬಗ್ಗೆ ಹೊಸ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಇತ್ತ ಸೋಮವಾರ ಸಂಜೆ ಲೋಕಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು 19 ಮಂದಿ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವ್ಯಾಪಾರಕ್ಕೆ ತೆರಳಿದ ಮೈಸೂರಿನ 9 ಮಂದಿಗೆ ಆಫ್ರಿಕಾದಲ್ಲಿ ಸಂಕಷ್ಟ: ಸ್ಥಳೀಯ ಪೊಲೀಸರ ವಶಕ್ಕೆ

0

ಮೈಸೂರು: ಆಯುರ್ವೇದ ತೈಲ ಮಾರಾಟದ ಉದ್ದೇಶದಿಂದ ಆಫ್ರಿಕಾ ಪ್ರವಾಸ ಕೈಗೊಂಡಿದ್ದ ಮೈಸೂರು ಜಿಲ್ಲೆಯ ಒಂಬತ್ತು ಮಂದಿ, ಅಗತ್ಯ ಸರ್ಕಾರಿ ಅನುಮತಿ ಇಲ್ಲದೆ ವ್ಯಾಪಾರ ನಡೆಸಿದ ಆರೋಪದಡಿ ಸ್ಥಳೀಯ ಪೊಲೀಸರ ವಶವಾಗಿದ್ದಾರೆ. ಈ ಬೆಳವಣಿಗೆಯಿಂದ ಕುಟುಂಬಸ್ಥರಲ್ಲಿ ಆತಂಕ ಮನೆಮಾಡಿದೆ.

ಹುಣಸೂರು ತಾಲೂಕಿನ ಪಕ್ಷಿರಾಜಪುರ ಗ್ರಾಮದ ನಿವಾಸಿಗಳಾದ ಈ ಒಂಬತ್ತು ಮಂದಿ ಸುಮಾರು ಎರಡು ತಿಂಗಳ ಹಿಂದೆ ಆಫ್ರಿಕಾಕ್ಕೆ ತೆರಳಿದ್ದರು. ಆಯುರ್ವೇದ ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ವೇಳೆ ಸ್ಥಳೀಯ ಕಾನೂನು ಹಾಗೂ ವಾಣಿಜ್ಯ ನಿಯಮಗಳನ್ನು ಉಲ್ಲಂಘಿಸಿರುವ ಆರೋಪ ಕೇಳಿಬಂದಿದ್ದು, ಪೊಲೀಸರು ಬಂಧಿಸಿದ್ದಾರೆ.

ಬಂಧಿತರಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ನಿರೋಣಿ, ಪ್ರಭುದೇವ, ಗಿರೀಶ್, ಷಹಜಹಾನ್, ಶಾಂತಿ ಸೇರಿದಂತೆ ಇತರರು ಸೇರಿದ್ದಾರೆ.

ಸರ್ಕಾರದ ಮಧ್ಯಪ್ರವೇಶಕ್ಕೆ ಮನವಿ

ಬಂಧಿತರ ಕುಟುಂಬ ಸದಸ್ಯರು ಹುಣಸೂರು ಕ್ಷೇತ್ರದ ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್ ಅವರನ್ನು ಭೇಟಿ ಮಾಡಿ ನೆರವು ಕೋರಿದ್ದಾರೆ. ಬಳಿಕ ಅವರು ಸಚಿವ ಡಾ. ಯತೀಂದ್ರ ಅವರೊಂದಿಗೆ ವಿಷಯ ಚರ್ಚಿಸಿ, ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ.

ಕೇಂದ್ರ ವಿದೇಶಾಂಗ ಸಚಿವಾಲಯ ಹಾಗೂ ಆಫ್ರಿಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮೂಲಕ ಅಗತ್ಯ ರಾಜತಾಂತ್ರಿಕ ಕ್ರಮ ಕೈಗೊಂಡು, ಬಂಧಿತರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಮನವಿ ಸಲ್ಲಿಸಲಾಗಿದೆ.

‘ಜೇಬುಗಳ್ಳರಂತೆ ಕಾಣ್ತೀಯ’ ಎಂದ ಕಂಗನಾ! ಸೋನಾಕ್ಷಿ ಸಿನ್ಹಾಗೆ ಟಾಂಗ್‌? ಬಾಲಿವುಡ್‌ನಲ್ಲಿ ಹೊಸ ವಿವಾದ

ಮುಂಬೈ: ಕಂಗನಾ ರಣಾವತ್ ಅವರ ಇನ್‌ಸ್ಟಾಗ್ರಾಮ್ ಸ್ಟೋರಿ ಮತ್ತೆ ಬಾಲಿವುಡ್‌ನಲ್ಲಿ ವಿವಾದ ಹುಟ್ಟುಹಾಕಿದೆ. ಯಾವುದೇ ಹೆಸರನ್ನು ಉಲ್ಲೇಖಿಸದೇ ನಟಿಯೊಬ್ಬಳ ಉಡುಗೆ, ವರ್ತನೆ ಹಾಗೂ ಪ್ರತಿಭಟನೆಗಳ ಬಗ್ಗೆ ತೆಗೆದುಕೊಂಡ ನಿಲುವನ್ನು ಟೀಕಿಸಿರುವ ಕಂಗನಾ, ಪರೋಕ್ಷವಾಗಿ ಸೋನಾಕ್ಷಿ ಸಿನ್ಹಾ ಅವರನ್ನೇ ಗುರಿಯಾಗಿಸಿಕೊಂಡಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ.

ನೀಟ್ ಹಾಗೂ ಜಾರ್ಖಂಡ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಕುರಿತ ಪೋಸ್ಟ್‌ಗೆ ತಾವು ಲೈಕ್ ಮಾಡಿದ್ದಾಗಿ ವೈರಲ್ ಆಗಿದ್ದ ಸ್ಕ್ರೀನ್‌ಶಾಟ್ ನಕಲಿ ಎಂದು ಕಂಗನಾ ಸ್ಪಷ್ಟಪಡಿಸಿದ್ದಾರೆ. ಆದರೆ ಅದಾದ ಬಳಿಕ ಹಂಚಿಕೊಂಡ ಪೋಸ್ಟ್ ಹೊಸ ಚರ್ಚೆಗೆ ಕಾರಣವಾಗಿದೆ.

ಸ್ಟೈಲಿಂಗ್‌ಗೂ ಕ್ಲಾಸ್ ತೆಗೆದುಕೊಂಡ ಕಂಗನಾ

‘ಹಾಫ್ ಪ್ಯಾಂಟ್, ಉಲ್ಟಾ ಕ್ಯಾಪ್ ಧರಿಸಿ ಜೇಬುಗಳ್ಳರಂತೆ ಮಾತನಾಡುವ ನಟಿಯೊಬ್ಬಳು ಪ್ರತಿಭಟನಾಕಾರರನ್ನು ಬೆಂಬಲಿಸುತ್ತಿದ್ದಾಳೆ. ಉಡುಗೆ ಕೂಡ ವ್ಯಕ್ತಿತ್ವದ ಭಾಗ’ ಎಂದು ಕಂಗನಾ ಬರೆದುಕೊಂಡಿದ್ದಾರೆ.

‘ನಿನ್ನ ಸಂಗಾತಿ ನಿನ್ನನ್ನು ಜೇಬುಗಳ್ಳನಂತೆ ಕಾಣುವಂತೆ ಮಾಡಿದ್ದಾರೆ. ಹಿಂದೆ ನೀನು ತುಂಬಾ ಅಚ್ಚುಕಟ್ಟಾಗಿದ್ದೆ. ನಿನ್ನ ಅಭಿಪ್ರಾಯಗಳು ನಿನ್ನವೇ ಆಗಿರಲಿ. ಆದರೆ ಸ್ಟೈಲಿಂಗ್‌ನಲ್ಲಿ ಬದಲಾವಣೆ ಬೇಕು. ಸಹಾಯ ಬೇಕಾದರೆ ನಾನು ಇದ್ದೇನೆ’ ಎಂದು ಅವರು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ವ್ಯಂಗ್ಯವಾಡಿದ್ದಾರೆ.

ಏಕೆ ಸೋನಾಕ್ಷಿ ಹೆಸರು ಕೇಳಿಬರುತ್ತಿದೆ?

ಇತ್ತೀಚೆಗೆ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಪರವಾಗಿ ಸೋನಾಕ್ಷಿ ಸಿನ್ಹಾ ಸಾರ್ವಜನಿಕವಾಗಿ ಧ್ವನಿ ಎತ್ತಿದ್ದರು. ಆ ವೇಳೆ ಟಿ-ಶರ್ಟ್, ಶಾರ್ಟ್ಸ್ ಹಾಗೂ ಕ್ಯಾಪ್ ಧರಿಸಿದ್ದ ಅವರ ವಿಡಿಯೋ ಕೂಡ ವೈರಲ್ ಆಗಿತ್ತು.

ಕಂಗನಾ ಪೋಸ್ಟ್‌ನಲ್ಲಿರುವ ಉಲ್ಲೇಖಗಳು ಅದಕ್ಕೆ ಹೋಲಿಕೆಯಾಗಿರುವ ಕಾರಣ ನೆಟ್ಟಿಗರು ಸೋನಾಕ್ಷಿ ಸಿನ್ಹಾ ಅವರ ಹೆಸರನ್ನೇ ಮುಂದಿಟ್ಟಿದ್ದಾರೆ. ಆದರೆ ಕಂಗನಾ ಯಾವುದೇ ಹೆಸರನ್ನು ಉಲ್ಲೇಖಿಸಿಲ್ಲ. ಆದರೂ ಅವರ ಪೋಸ್ಟ್ ಬಾಲಿವುಡ್‌ನಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ.

ಸಚಿವ ಸ್ಥಾನಕ್ಕಾಗಿ ರಾಜೀನಾಮೆ ಬೆದರಿಕೆ ಹಾಕಿಲ್ಲ; ಸಿಎಂ ಕರೆ ಮೇರೆಗೆ ಬಂದಿದ್ದೇನೆ ಎಂದ ಎಸ್‌.ಎಸ್‌. ಮಲ್ಲಿಕಾರ್ಜುನ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೊನೆ ಕ್ಷಣದಲ್ಲಿ ಸಚಿವರ ಪಟ್ಟಿಯಲ್ಲಿ ನಡೆದ ಬದಲಾವಣೆ ಹಾಗೂ ಪಕ್ಷದೊಳಗಿನ ಗೊಂದಲಗಳ ಕುರಿತು ನೂತನ ಸಚಿವರಾಗಿ ಆಯ್ಕೆಯಾಗಿರುವ ದಾವಣಗೆರೆ ಶಾಸಕ ಎಸ್‌.ಎಸ್‌. ಮಲ್ಲಿಕಾರ್ಜುನ್ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವರ ಪಟ್ಟಿಯಲ್ಲಿ ಕೊನೆಯ ಕ್ಷಣದಲ್ಲಿ ಏಕೆ ಬದಲಾವಣೆ ನಡೆದಿದೆ ಎಂಬ ಮಾಹಿತಿ ತಮ್ಮ ಬಳಿ ಇಲ್ಲ ಎಂದು ಸ್ಪಷ್ಟಪಡಿಸಿದರು.

“ಪಟ್ಟಿಯಲ್ಲಿ ಕೊನೆ ಕ್ಷಣದಲ್ಲಿ ಯಾಕೆ ಬದಲಾವಣೆ ಆಯಿತು ಎಂಬುದು ನನಗೆ ಗೊತ್ತಿಲ್ಲ. ಮುಖ್ಯಮಂತ್ರಿ ಅವರು ಅವಕಾಶ ನೀಡಲಾಗಿದೆ, ಬನ್ನಿ ಎಂದು ಕರೆದ ಹಿನ್ನೆಲೆಯಲ್ಲಿ ನಾನು ಬಂದಿದ್ದೇನೆ. ಮಂಕಾಳು ವೈದ್ಯ ಅವರ ಹೆಸರು ತಪ್ಪಾಗಿ (ಬೈ ಮಿಸ್ಟೇಕ್) ಪಟ್ಟಿಯಲ್ಲಿ ಸೇರಿತ್ತು ಎಂದು ನನಗೆ ತಿಳಿಸಲಾಗಿದೆ” ಎಂದು ಹೇಳಿದರು.

ಸಚಿವ ಸ್ಥಾನ ಸಿಗದಿದ್ದರೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಸಚಿವ ಸ್ಥಾನಕ್ಕಾಗಿ ನಾನು ಯಾವುದೇ ರಾಜೀನಾಮೆ ಬೆದರಿಕೆ ಹಾಕಿಲ್ಲ. ಈ ಬಗ್ಗೆ ನನ್ನೊಂದಿಗೆ ಯಾವುದೇ ಚರ್ಚೆಯೂ ನಡೆದಿಲ್ಲ” ಎಂದು ಸ್ಪಷ್ಟನೆ ನೀಡಿದರು.

ತಮಗೆ ಸಚಿವ ಸ್ಥಾನ ನೀಡಿರುವ ಕುರಿತು ಮಾತನಾಡಿದ ಅವರು, ಜಿಲ್ಲಾವಾರು ಹಾಗೂ ಜಾತಿ ಸಮೀಕರಣವನ್ನು ಪರಿಗಣಿಸಿ ಪಕ್ಷದ ನಾಯಕತ್ವ ಈ ಅವಕಾಶ ನೀಡಿದೆ ಎಂದು ಹೇಳಿದರು.

“ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರು ಸೇರಿದಂತೆ ಎಲ್ಲ ಸಮುದಾಯಗಳಿಗೂ ಸಮಾನ ಪ್ರಾತಿನಿಧ್ಯ ನೀಡುವ ಉದ್ದೇಶದಿಂದಲೇ ಸಚಿವ ಸಂಪುಟ ರಚಿಸಲಾಗಿದೆ” ಎಂದು ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

ಪಕ್ಷದೊಳಗಿನ ಅಸಮಾಧಾನ ಹಾಗೂ ಸಚಿವರ ಪಟ್ಟಿಯಲ್ಲಿ ನಡೆದ ಬದಲಾವಣೆಗಳ ಕುರಿತು ಸ್ಪಷ್ಟ ಮಾಹಿತಿ ಇಲ್ಲ ಎಂದು ಹೇಳಿದ ಅವರು, “ಈಗ ಹೋಗಿ ಪರಿಸ್ಥಿತಿ ನೋಡಬೇಕಿದೆ. ಯಾವುದೇ ಗೊಂದಲಗಳಿದ್ದರೂ ಪಕ್ಷದ ಹಿರಿಯ ನಾಯಕರು ಹಾಗೂ ಮುಖ್ಯಮಂತ್ರಿ ಎಲ್ಲವನ್ನೂ ಸರಿಪಡಿಸಲಿದ್ದಾರೆ. ಸಿಎಂ ಅವರನ್ನು ಭೇಟಿ ಮಾಡಿ ಮುಂದಿನ ಹೆಜ್ಜೆ ಇಡುತ್ತೇನೆ” ಎಂದು ತಿಳಿಸಿದರು.

ಸಂಪುಟ ವಿಸ್ತರಣೆಯಲ್ಲಿ ಕೊನೆ ಕ್ಷಣದ ಟ್ವಿಸ್ಟ್; ಮೂರು ಬಾರಿ ಬದಲಾದ ಸಚಿವರ ಪಟ್ಟಿ, ಹೆಚ್ಚಿದ ಕುತೂಹಲ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಹಾಗೂ ವಿಧಾನಸಭೆ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಸುತ್ತ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಹಲವು ಹೈಡ್ರಾಮಾ ಬೆಳವಣಿಗೆಗಳು ನಡೆದಿವೆ.

ಸರ್ಕಾರದ ಮಟ್ಟದಲ್ಲಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಹಂತದಲ್ಲಿ ಕೊನೆ ಕ್ಷಣದವರೆಗೂ ನಡೆದ ಕಸರತ್ತಿನಿಂದಾಗಿ, ಕೆಲವೇ ಗಂಟೆಗಳ ಅವಧಿಯಲ್ಲಿ ಸಚಿವರು ಹಾಗೂ ಸ್ಪೀಕರ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂರು ಬಾರಿ ಬದಲಾವಣೆ ನಡೆದಿದೆ ಎನ್ನಲಾಗಿದೆ.

ಬೆಳಗ್ಗೆ ಮುಖ್ಯಮಂತ್ರಿ ಅವರು ಸ್ಪೀಕರ್ ಸ್ಥಾನಕ್ಕೆ ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರ ಹೆಸರನ್ನು ಅಂತಿಮಗೊಳಿಸಿ ರಾಜ್ಯಪಾಲರಿಗೆ ಶಿಫಾರಸು ಪತ್ರ ಕಳುಹಿಸಿದ್ದರು ಎನ್ನಲಾಗಿದೆ. ಆದರೆ, ಕೆಲವೇ ಗಂಟೆಗಳಲ್ಲಿ ಎಐಸಿಸಿ ಕಡೆಯಿಂದ ಜಿ.ಎಸ್‌. ಪಾಟೀಲ್ ಅವರ ಹೆಸರನ್ನು ಸ್ಪೀಕರ್ ಸ್ಥಾನಕ್ಕೆ ಶಿಫಾರಸು ಮಾಡಲಾಗಿದ್ದು, ಈ ಬೆಳವಣಿಗೆ ಅಚ್ಚರಿಗೆ ಕಾರಣವಾಗಿದೆ.

ಇದೇ ವೇಳೆ, ಸಚಿವ ಸಂಪುಟದ ಪಟ್ಟಿಯಲ್ಲೂ ಕೊನೆ ಕ್ಷಣದ ಬದಲಾವಣೆಗಳು ನಡೆದಿವೆ. ಎಐಸಿಸಿ ಬಿಡುಗಡೆ ಮಾಡಿದ್ದ ಮೊದಲ ಪಟ್ಟಿಯಲ್ಲಿ ಭಟ್ಕಳ ಶಾಸಕ ಮಂಕಾಳು ವೈದ್ಯ ಅವರ ಹೆಸರು ಕಾಣಿಸಿಕೊಂಡಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಅವರ ಹೆಸರನ್ನು ಕೈಬಿಟ್ಟು, ದಾವಣಗೆರೆ ಉತ್ತರ ಶಾಸಕ ಎಸ್‌.ಎಸ್‌. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ತಿಳಿದುಬಂದಿದೆ.

ಮಹಿಳಾ ಕೋಟಾದಡಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು ಎನ್ನಲಾಗಿತ್ತು. ಆದರೆ ತಮ್ಮ ಆಪ್ತರಾದ ಶಿವಣ್ಣನವರ್ ಅವರಿಗೆ ಸಚಿವ ಸ್ಥಾನ ಸಿಗದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನಗೊಂಡಿದ್ದು, ಗಾಯತ್ರಿ ಶಾಂತೇಗೌಡ ಅವರು ಪ್ರಮಾಣವಚನ ಸ್ವೀಕರಿಸದಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.

ಸಚಿವ ಸಂಪುಟದ ಅಧಿಕೃತ ಪಟ್ಟಿ ಪ್ರಕಟವಾದ ಬಳಿಕ ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಅಸಮಾಧಾನ ಹಾಗೂ ಗೊಂದಲಗಳು ಮತ್ತಷ್ಟು ಹೆಚ್ಚಾಗಿವೆ. ಸಚಿವ ಸ್ಥಾನ ಕೈತಪ್ಪಿದ ಹಲವು ಶಾಸಕರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡಿದೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಪ್ರಿಯಾಕೃಷ್ಣ ಬೆಂಬಲಿಗರ ತೀವ್ರ ಆಕ್ರೋಶ: ಡಿಕೆಶಿ ಕಾರಿಗೆ ಮುತ್ತಿಗೆ ಯತ್ನ

ಬೆಂಗಳೂರು: ಗೋವಿಂದರಾಜನಗರ ಕ್ಷೇತ್ರದ ಶಾಸಕ ಪ್ರಿಯಾಕೃಷ್ಣ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ವಿರೋಧಿಸಿ ಬೆಂಬಲಿಗರು ಹಾಗೂ ಮಾಜಿ ಶಾಸಕ ಎಂ. ಕೃಷ್ಣಪ್ಪ ಅಭಿಮಾನಿಗಳು ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ನಾಗರಭಾವಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರು, ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ದೊರೆತ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಗರಭಾವಿಯ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ರಸ್ತೆಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಸಿಎಂ ಕಾರನ್ನು ತಡೆಯಲು ಮುಂದಾಗಿದ್ದಾರೆ.

ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಭದ್ರತಾ ಸಿಬ್ಬಂದಿ ಎಚ್ಚರಿಕೆ ವಹಿಸಿದ್ದು, ಮುಖ್ಯಮಂತ್ರಿ ಕಾರು ಯು-ಟರ್ನ್ ಪಡೆದು ಹಿಂತಿರುಗಿದೆ. ಆದರೂ ಆಕ್ರೋಶಗೊಂಡ ಕಾರ್ಯಕರ್ತರು ಕಾರಿನ ಹಿಂದೆಯೇ ಓಡಿ ಪ್ರತಿಭಟನೆ ಮುಂದುವರಿಸಿದ್ದಾರೆ.

ನಾಗರಭಾವಿ ಸರ್ಕಲ್ ಹಾಗೂ ವಿಜಯನಗರ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಕೃಷ್ಣಪ್ಪ ಬೆಂಬಲಿಗರು ಮತ್ತು ಮಹಿಳಾ ಕಾರ್ಯಕರ್ತೆಯರು ರಸ್ತೆ ಮಧ್ಯೆಯೇ ಕುಳಿತು, ಮಲಗಿ ಪ್ರತಿಭಟನೆ ನಡೆಸಿದರು. ಇದರಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

ಪ್ರತಿಭಟನಾಕಾರರು ಟೈರ್‌ಗಳಿಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಪ್ರತಿಭಟನೆಯ ಪರಿಣಾಮ ಮೈಸೂರು ರಸ್ತೆಯಲ್ಲಿ ಸುಮಾರು 4 ಕಿಲೋಮೀಟರ್‌ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿ ಸಂಚಾರ ವ್ಯವಸ್ಥೆ ಸರಿಪಡಿಸಲು ಕ್ರಮ ಕೈಗೊಂಡಿದ್ದಾರೆ.

ಕಂಟೇನರ್‌ಗೆ ವೋಲ್ವೋ ಬಸ್ ಡಿಕ್ಕಿ: ಬೆಂಗಳೂರಿಗೆ ಬರುತ್ತಿದ್ದ ಟೆಕ್ಕಿ ಯುವತಿ ಸಾವು

0

ಚಿಕ್ಕಬಳ್ಳಾಪುರ: ಬೆಂಗಳೂರಿನತ್ತ ಬರುತ್ತಿದ್ದ ಖಾಸಗಿ ವೋಲ್ವೋ ಬಸ್ ಭೀಕರ ಅಪಘಾತಕ್ಕೀಡಾಗಿ ಟೆಕ್ಕಿ ಯುವತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ-44ರ ಅಗಲಗುರ್ಕಿ ಬಳಿ ಕಂಟೇನರ್‌ಗೆ ಬಸ್ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ಛಿದ್ರವಾಗಿದೆ.

ಹೈದರಾಬಾದ್‌ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಐಷಾರಾಮಿ ವೋಲ್ವೋ ಬಸ್, ಮಾರ್ಗಮಧ್ಯೆ ಮುಂದೆ ಚಲಿಸುತ್ತಿದ್ದ ಕಂಟೇನರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಬಸ್‌ನ ಮುಂಭಾಗದ ಬಾಗಿಲಿನ ಸಮೀಪ ಕುಳಿತಿದ್ದ ಅನಂತಪುರ ಜಿಲ್ಲೆಯ ಚಿಲ್ಲಮತ್ತೂರು ನಿವಾಸಿ ಕೌಸರ್ ತಾಜ್ (28) ಗಂಭೀರವಾಗಿ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ರಕ್ಷಣಾ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಕ್ರೇನ್ ಬಳಸಿ ಬಸ್‌ನ ಮುಂಭಾಗವನ್ನು ತೆರವುಗೊಳಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ನಂತರ ಶವವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.

ಮೃತ ಯುವತಿ ಕೊಡಿಕೊಂಡ ಚೆಕ್‌ಪೋಸ್ಟ್ ಬಳಿ ಬಸ್ ಹತ್ತಿದ್ದು, ಬೆಂಗಳೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರೂ, ಉಳಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಸ್ಥಳಕ್ಕೆ ಧಾವಿಸಿದ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ ಸಂಚಾರ ವ್ಯವಸ್ಥೆಯನ್ನು ನಿಯಂತ್ರಿಸಿದರು.

ಕಾಂಗ್ರೆಸ್ʼನಲ್ಲಿ ಅಸಮಾಧಾನದ ಸ್ಫೋಟ; ಬೇಳೂರು ಗೋಪಾಲಕೃಷ್ಣ, ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಎಚ್ಚರಿಕೆ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಳಿಕ ಸಚಿವ ಸ್ಥಾನ ಕೈತಪ್ಪಿದ ಹಲವು ಸಚಿವಾಕಾಂಕ್ಷಿಗಳು ಹಾಗೂ ಹಿರಿಯ ಶಾಸಕರಲ್ಲಿ ಅಸಮಾಧಾನ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಇಬ್ಬರು ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಘೋಷಣೆ ಮಾಡಿದ್ದಾರೆ.

ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಚಿವ ಸ್ಥಾನ ಸಿಗದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಯಶವಂತರಾಯಗೌಡ ಪಾಟೀಲ್, ಸಚಿವರ ಪಟ್ಟಿಯಲ್ಲಿ ತಮ್ಮ ಹೆಸರು ಇದೆ ಎಂದು ಕರೆ ಮಾಡಿ ತಿಳಿಸಲಾಗಿತ್ತು. ಪ್ರಮಾಣವಚನಕ್ಕೆ ಸಿದ್ಧರಾಗುವಂತೆ ಹೇಳಿದ ಬಳಿಕ ಇದೀಗ ಅವಕಾಶ ಕೈತಪ್ಪಿಸಿರುವುದು ತೀವ್ರ ಬೇಸರ ತಂದಿದೆ ಎಂದು ಹೇಳಿದ್ದಾರೆ.

“ನನಗೆ ಈ ರಾಜಕೀಯ ವ್ಯವಸ್ಥೆಯೇ ಬೇಡ ಎನ್ನುವಂತಾಗಿದೆ. ನಿಷ್ಠಾವಂತರು ಮತ್ತು ಪ್ರಾಮಾಣಿಕರಿಗೆ ಇದು ಕಾಲವಲ್ಲ. ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ ರಾಜೀನಾಮೆ ಪತ್ರ ಸಿದ್ಧಪಡಿಸಿದ್ದೇನೆ. ಇಂದೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಯಶವಂತರಾಯಗೌಡ ಪಾಟೀಲ್ ತಿಳಿಸಿದ್ದಾರೆ.

ಇದೇ ವೇಳೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಶಾಸಕ ಸ್ಥಾನ ಹಾಗೂ ನಿಗಮ ಮಂಡಳಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

“ಸಂಪುಟ ವಿಸ್ತರಣೆಯಲ್ಲಿಯೂ ಸಚಿವ ಸ್ಥಾನ ಸಿಗಲಿಲ್ಲ. ಹಿರಿತನ, ಅನುಭವ ಇರುವವರಿಗೆ ಅವಕಾಶ ನೀಡಿಲ್ಲ. ಮೂರು ಬಾರಿ ಶಾಸಕನಾಗಿದ್ದರೂ ಸಚಿವ ಸ್ಥಾನ ನೀಡದೇ ಅನ್ಯಾಯ ಮಾಡಲಾಗಿದೆ. ಇದರಿಂದ ತುಂಬಾ ನೋವಾಗಿದೆ. ಬೆಂಬಲಿಗರು ಕಣ್ಣೀರಿಡುತ್ತಿದ್ದಾರೆ” ಎಂದು ಬೇಳೂರು ಗೋಪಾಲಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೊಸಬರಿಗೆ ಅವಕಾಶ ನೀಡುವುದಾಗಿ ಹೇಳಲಾಗಿತ್ತು. ಆದರೆ ಕೆಲವರನ್ನು ಹೊರತುಪಡಿಸಿದರೆ ಈಗಾಗಲೇ ಸಚಿವರಾಗಿದ್ದವರಿಗೆ ಮತ್ತೆ ಅವಕಾಶ ನೀಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಬೇರೆ ಶಾಸಕರಿಗೆ ಅವಕಾಶವೇ ಸಿಕ್ಕಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಸಹಿಸಲು ಸಾಧ್ಯವಿಲ್ಲ. ಇದರಿಂದ ಪಕ್ಷಕ್ಕೂ ಹೊಡೆತ ಬೀಳಲಿದೆ. ನಾಳೆ ಶಾಸಕ ಸ್ಥಾನ ಹಾಗೂ ನಿಗಮ ಮಂಡಳಿ ಸ್ಥಾನ ಎರಡಕ್ಕೂ ರಾಜೀನಾಮೆ ನೀಡುತ್ತೇನೆ. ಮುಂದಿನ ನಡೆ ಬಗ್ಗೆ ಬೆಂಬಲಿಗರೊಂದಿಗೆ ಚರ್ಚಿಸುತ್ತೇನೆ” ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಗೆ ಟ್ವಿಸ್ಟ್: ಕೊನೇ ಕ್ಷಣದಲ್ಲಿ ಮಂಕಾಳು ವೈದ್ಯ ಔಟ್, ಎಸ್.ಎಸ್. ಮಲ್ಲಿಕಾರ್ಜುನ ಇನ್!

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಕಟಿಸಿದ್ದ ನೂತನ ಸಚಿವರ ಪಟ್ಟಿಯಲ್ಲಿ ಕೊನೆಯ ಕ್ಷಣದಲ್ಲಿ ಮಹತ್ವದ ಬದಲಾವಣೆ ನಡೆದಿದೆ.

ಆರಂಭದಲ್ಲಿ ಪಟ್ಟಿಯಲ್ಲಿ ಹೆಸರು ಕಾಣಿಸಿಕೊಂಡಿದ್ದ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳು ವೈದ್ಯ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ಅವರ ಬದಲಿಗೆ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಅವಕಾಶ ನೀಡಲಾಗಿದೆ.

ಈ ಬೆಳವಣಿಗೆ ಕುರಿತು ಎಐಸಿಸಿ ಸ್ಪಷ್ಟನೆ ನೀಡಿದ್ದು, ಸಚಿವರ ಪಟ್ಟಿಯಲ್ಲಿ ಮಂಕಾಳು ವೈದ್ಯ ಅವರ ಹೆಸರು ಕಾಣಿಸಿಕೊಂಡಿರುವುದು ಟೈಪಿಂಗ್ ಮಿಸ್ಟೇಕ್‌ ಆಗಿದ್ದು, ಅಂತಿಮ ಪಟ್ಟಿಯಲ್ಲಿ ಅವರ ಹೆಸರು ಇರಲಿಲ್ಲ ಎಂದು ತಿಳಿಸಿದೆ.

ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಮಂಕಾಳು ವೈದ್ಯ ಅವರು ಮುಖ್ಯಮಂತ್ರಿ ನಿವಾಸಕ್ಕೆ ಭೇಟಿ ನೀಡಿ, ಕೊನೆಯ ಕ್ಷಣದ ಬದಲಾವಣೆ ಕುರಿತು ಚರ್ಚಿಸಲು ಯತ್ನಿಸಿದ್ದಾರೆ. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಮಂಕಾಳು ವೈದ್ಯ, “ನಾನು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿಲ್ಲ. ಅವರು ಸಿಗಲಿಲ್ಲ. ಮತ್ತೆ ಬರುತ್ತೇನೆ,” ಎಂದು ಹೇಳಿ ಅಲ್ಲಿಂದ ನಿರ್ಗಮಿಸಿದ್ದಾರೆ.

ಇನ್ನೊಂದೆಡೆ, ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಎಸ್.ಎಸ್. ಮಲ್ಲಿಕಾರ್ಜುನ ಅವರು, ಸಚಿವ ಸ್ಥಾನ ಸಿಗದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಅಲ್ಲದೆ, ಸಂಸದೆಯಾಗಿರುವ ತಮ್ಮ ಪತ್ನಿ ಹಾಗೂ ಶಾಸಕರಾಗಿರುವ ಪುತ್ರ ಕೂಡ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶದ ಮೂಲಕ ಪಕ್ಷದ ನಾಯಕರ ಮೇಲೆ ಒತ್ತಡ ಹೇರಿದ್ದರು ಎಂಬ ಮಾಹಿತಿಯೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಈ ಬೆಳವಣಿಗೆಗಳ ಬೆನ್ನಲ್ಲೇ ಕೊನೆಯ ಕ್ಷಣದಲ್ಲಿ ಸಚಿವರ ಪಟ್ಟಿಯಲ್ಲಿ ಬದಲಾವಣೆ ಮಾಡಿ, ಮಂಕಾಳು ವೈದ್ಯ ಅವರ ಬದಲಿಗೆ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.