Home Blog

ಜಿ.ಎಸ್.ಪಿಗೆ ಸಚಿವ ಸ್ಥಾನಕ್ಕಾಗಿ ಮಠಾಧೀಶರ ಒತ್ತಡ

0

ವಿಜಯಸಾಕ್ಷಿ ಸುದ್ದಿ, ರೋಣ: ರೋಣ ಕ್ಷೇತ್ರದ ಶಾಸಕ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಪಾಟೀಲರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು. ಅವರಿಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಮತ್ತಷ್ಟು ವಿಳಂಬ ಮಾಡಿದರೆ ಸರ್ಕಾರವೇ ರಾಜಕೀಯ ಸಂಕಷ್ಟ ಎದುರಿಸಬೇಕಾಗಬಹುದು ಎಂದು ಕುದರಿಮೋತಿ ಶ್ರೀಮಠದ ವಿಜಯಮಹಾಂತ ಸ್ವಾಮೀಜಿ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಪಟ್ಟಣದ ಯಾತ್ರಾನಿವಾಸದಲ್ಲಿ ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಡೆದ ಧರ್ಮಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಎಸ್. ಪಾಟೀಲರು ನಾಲ್ಕು ಬಾರಿ ಶಾಸಕರಾಗಿ ಕ್ಷೇತ್ರ ಮತ್ತು ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ. ಇಂತಹ ಅನುಭವಿ ಹಾಗೂ ಜನಪರ ನಾಯಕರಿಗೆ ಸಚಿವ ಸ್ಥಾನ ನೀಡುವುದು ಕಾಂಗ್ರೆಸ್ ಹೈಕಮಾಂಡ್‌ನ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ರೋಣ ಮತಕ್ಷೇತ್ರಕ್ಕೆ ಸಚಿವ ಸ್ಥಾನ ದೊರೆಯಬೇಕು ಎಂಬುದು ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದೆ. ಅಭಿವೃದ್ಧಿಯ ದೃಷ್ಟಿಯಿಂದಲೂ ಕ್ಷೇತ್ರಕ್ಕೆ ಸಚಿವ ಸ್ಥಾನ ಅಗತ್ಯವಾಗಿದೆ. ಈ ಭಾಗದ ಜನರ ಆಶಯವನ್ನು ಕಾಂಗ್ರೆಸ್ ವರಿಷ್ಠರು ಗಂಭೀರವಾಗಿ ಪರಿಗಣಿಸಬೇಕು ಎಂದು ಶ್ರೀಗಳು ಆಗ್ರಹಿಸಿದರು.

ಜಿ.ಎಸ್. ಪಾಟೀಲರು ಎಲ್ಲ ಜಾತಿ, ಧರ್ಮ ಮತ್ತು ಸಮುದಾಯಗಳನ್ನು ಸಮಾನವಾಗಿ ಕಾಣುವ ನಾಯಕರು. ಪಕ್ಷದ ಸಂಘಟನೆಗೆ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ಹೀಗಿರುವಾಗ ಸಚಿವ ಸ್ಥಾನ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಡಾ. ಹೆಚ್.ಕೆ. ಪಾಟೀಲರು ಹಲವು ಬಾರಿ ಸಚಿವರಾಗಿ ಹಾಗೂ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಈ ಬಾರಿ ರೋಣ ಕ್ಷೇತ್ರಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅವರು ದೊಡ್ಡಮನಸ್ಸು ತೋರಬೇಕು. ಇದರಿಂದ ಅವರ ಗೌರವ ಮತ್ತಷ್ಟು ಹೆಚ್ಚಾಗುತ್ತದೆ ಎಂದು ವಿಜಯಮಹಾಂತ ಶ್ರೀಗಳು ಹೇಳಿದರು.

ಮಠಾಧೀಶರ ಧ್ವನಿ ಒಂದೇ

ನರೇಗಲ್ಲ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಜಿ.ಎಸ್. ಪಾಟೀಲರು ಸರ್ವಧರ್ಮ ಸಮಭಾವದ ನಾಯಕರು. ಇಂತಹ ನಾಯಕತ್ವಕ್ಕೆ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕೂ ಬಲ ಬರುತ್ತದೆ ಎಂದರು.

ಅಭಿನವ ಕೊಟ್ಟೂರೇಶ್ವರ ಸ್ವಾಮೀಜಿ ಮಾತನಾಡಿ, “ಜಿ.ಎಸ್. ಪಾಟೀಲರು ಕೇವಲ ವ್ಯಕ್ತಿಯಲ್ಲ, ಒಂದು ಶಕ್ತಿ. ಅವರ ಸಾಮರ್ಥ್ಯವನ್ನು ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ಬಳಸಿಕೊಳ್ಳಬೇಕು” ಎಂದು ಹೇಳಿದರು.

ಕೊತಬಾಳ ಅಂಕಲಿ ಮಠದ ಗಂಗಾಧರ ಶ್ರೀಗಳು, ಜಿಗೇರಿ ಮಠದ ಗುರುಸಿದ್ದ ಶಿವಾಚಾರ್ಯರು ಹಾಗೂ ಇತರ ಮಠಾಧೀಶರು ಸಹ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವೇ.ಮೂ. ರೇವಣಸಿದ್ದೇಶ್ವರ ಶ್ರೀಗಳು, ಜಂಗಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿ.ಬಿ. ಸೋಮನಕಟ್ಟಿಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

“ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡುವುದು ರೋಣ ಕ್ಷೇತ್ರಕ್ಕೆ ಸಾಮಾಜಿಕ ನ್ಯಾಯ ಒದಗಿಸಿದಂತಾಗುತ್ತದೆ. ಈ ವಿಚಾರದಲ್ಲಿ ವಿಳಂಬವಾದರೆ ಸರ್ಕಾರ ರಾಜಕೀಯವಾಗಿ ಬೆಲೆ ತೆರಬೇಕಾಗಬಹುದು.”

ವಿಜಯಮಹಾಂತ ಸ್ವಾಮೀಜಿ, ಕುದರಿಮೋತಿ ಶ್ರೀಮಠ

ನೀರು-ನೈರ್ಮಲ್ಯ ಸಮಸ್ಯೆಗೆ ಕಿಡಿಕಾರಿದ ಜನರು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ವಾರ್ಡ್ ನಂ. 3ರಲ್ಲಿ ಉಂಟಾಗಿರುವ ಕುಡಿಯುವ ನೀರಿನ ಕೊರತೆ, ಕಾಲುವೆ ಸ್ವಚ್ಛತೆ, ಬೀದಿದೀಪಗಳ ನಿರ್ವಹಣೆ, ಸಾರ್ವಜನಿಕ ಶೌಚಾಲಯ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ಸಾರ್ವಜನಿಕರು ಹಾಗೂ ಸಮಗ್ರ ರೈತಪರ ಹೋರಾಟ ಸಮಿತಿ ಸದಸ್ಯರು ಬುಧವಾರ ಪುರಸಭೆ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಗೆ ಕುಂದಗೋಳ ಅಭಿನವ ಬಸವಣ್ಣ ಶ್ರೀಗಳು ಹಾಗೂ ದುಮ್ಮವಾಡ ಸರ್ಪಭೂಷಣ ಶ್ರೀಗಳು ಬೆಂಬಲ ಸೂಚಿಸಿದರು.

ಕೆಂಚಲಾಪುರ ಓಣಿಯಿಂದ ಎತ್ತು, ಆಕಳು, ಕೊಡಪಾನ, ಚರಗಿ ಹಾಗೂ ಪೊರಕೆಗಳೊಂದಿಗೆ ವಾದ್ಯಮೇಳದ ಮೂಲಕ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಮುಖ್ಯ ಬಜಾರ್ ರಸ್ತೆಯ ಮೂಲಕ ಪುರಸಭೆ ಕಚೇರಿಗೆ ಆಗಮಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಮಗ್ರ ರೈತಪರ ಹೋರಾಟ ವೇದಿಕೆಯ ತಾಲೂಕು ಅಧ್ಯಕ್ಷ ಮಂಜುನಾಥ ಮಾಗಡಿ, ಪಟ್ಟಣಕ್ಕೆ ತಿಂಗಳಿಗೊಮ್ಮೆ ಮಾತ್ರ ನೀರು ಸರಬರಾಜಾಗುತ್ತಿದೆ. ನದಿ ನೀರಿನ ಪೈಪ್‌ಲೈನ್ ದುರಸ್ತಿ ಹಾಗೂ ವಿದ್ಯುತ್ ವ್ಯತ್ಯಯದ ನೆಪ ಹೇಳಲಾಗುತ್ತಿದೆ. ನೂರಾರು ಕೊಳವೆಬಾವಿಗಳ ನಿರ್ವಹಣೆ ಹಾಗೂ ಪಂಪ್‌ಸೆಟ್‌ಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹಳ್ಳದಕೇರಿ ಪ್ರದೇಶದಲ್ಲಿ ಬಹುತೇಕ ರೈತ ಕುಟುಂಬಗಳು ವಾಸವಾಗಿದ್ದು, ಕುಡಿಯುವ ನೀರು ಹಾಗೂ ಸ್ವಚ್ಛತೆಯ ಕೊರತೆಯಿಂದ ಸಂಕಷ್ಟ ಎದುರಿಸುತ್ತಿವೆ. ಅನೇಕ ಬಾರಿ ಮನವಿ ಸಲ್ಲಿಸಿದರೂ ಸ್ಪಂದನೆ ಸಿಗದ ಕಾರಣ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಹೇಳಿದರು.

ಜೋನ್ ಹಳ್ಳದಿಂದ ಲಂಡಿ ಹಳ್ಳದವರೆಗೆ ಗಿಡಗಂಟಿಗಳು ಬೆಳೆದು ಕೆಸರು ತುಂಬಿಕೊಂಡಿದ್ದು, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ತೊಂದರೆಯಾಗುತ್ತಿದೆ. ಬೀದಿದೀಪ, ಸಾರ್ವಜನಿಕ ನಳ, ಶೌಚಾಲಯ ಹಾಗೂ ಹಳ್ಳಕ್ಕೆ ಕಲ್ವರ್ಟ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಾಗರಾಜ ಚಿಂಚಲಿ ಮಾತನಾಡಿ, ಪಟ್ಟಣದಲ್ಲಿ ನೀರು, ರಸ್ತೆ, ಆಶ್ರಯ ನಿವೇಶನ ಹಾಗೂ ಸ್ವಚ್ಛತೆಯ ಸಮಸ್ಯೆಗಳು ವರ್ಷಗಳಿಂದ ಮುಂದುವರಿದಿವೆ. ಜನಪ್ರತಿನಿಧಿಗಳು ಸಾಮಾಜಿಕ ಜಾಲತಾಣಗಳ ಪ್ರಚಾರಕ್ಕಿಂತ ಜನರ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಹೇಳಿದರು.

ಸಂಜೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ ಮನವಿ ಸ್ವೀಕರಿಸಿ ಮಾತನಾಡಿ, ನಾಲ್ಕೈದು ದಿನಗಳಲ್ಲಿ ಹೊಸ ಬೋರ್‌ವೆಲ್ ಕೊರೆಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ನಳ, ಶೌಚಾಲಯ ಹಾಗೂ ಇತರ ಮೂಲಭೂತ ಸೌಲಭ್ಯಗಳ ಕಲ್ಪನೆಗೂ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಟಾಕಪ್ಪ ಸಾತಪುತೆ, ಮಲ್ಲಪ್ಪ ಅಂಕಲಿ, ದುಂಡಪ್ಪ ಕೋಟಗಿ, ಹೊನ್ನಪ್ಪ ವಡ್ಡರ, ಶಿವಣ್ಣ ಕಟಗಿ, ಪ್ರಕಾಶ ಗುತ್ತಲ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಸಿಪಿಐ ಬಿ.ವಿ. ನ್ಯಾಮಗೌಡ್ರ, ಪಿಎಸ್‌ಐ ನಾಗರಾಜ ಗಡಾದ ಹಾಗೂ ಟಿ.ಕೆ. ರಾಠೋಡ ಭದ್ರತಾ ವ್ಯವಸ್ಥೆ ನಿರ್ವಹಿಸಿದರು.

“ಹೋರಾಟ ಮಾಡುತ್ತೇವೆ ಎಂದು ತಿಳಿದ ಕೂಡಲೇ ಅಧಿಕಾರಿಗಳು ಸ್ವಚ್ಛತೆ, ನೀರು ಹಾಗೂ ಬೆಳಕಿನ ವ್ಯವಸ್ಥೆಗೆ ಮುಂದಾಗಿದ್ದಾರೆ. ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಬೇಕು.”

ಮಂಜುನಾಥ ಮಾಗಡಿ, ತಾಲೂಕು ಅಧ್ಯಕ್ಷ, ಸಮಗ್ರ ರೈತಪರ ಹೋರಾಟ ವೇದಿಕೆ

ಗ್ರಾಮ ಪಂಚಾಯಿತಿ ಸಿಬ್ಬಂದಿ ಮೇಲೆ ಹಲ್ಲೆ: ಆರೋಪಿಗಳ ತಕ್ಷಣ ಬಂಧನಕ್ಕೆ ನೌಕರರ ಸಂಘ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ಚಿಕ್ಕಹಂದಿಗೋಳ ಗ್ರಾಮ ಪಂಚಾಯಿತಿಯ ಪಿಡಿಒ ಶಶಿಧರ ಕಪ್ಪರದ ಹಾಗೂ ವಾಟರ್‌ಮನ್ ಅರ್ಜುನ್ ಓಲೇಕಾರ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.

ಈ ಕುರಿತು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಅವರಿಗೆ ಮನವಿ ಸಲ್ಲಿಸಿದ ಸಂಘದ ಮುಖಂಡರು, ಜೂನ್ 16ರಂದು ಸರ್ಕಾರಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ದುಂದೂರ ಗ್ರಾಮದ ಗಂಗಯ್ಯ ಗಣಾಚಾರಿ ಹಾಗೂ ಇತರರು ಹಲ್ಲೆ ನಡೆಸಿರುವುದು ಖಂಡನೀಯ ಮತ್ತು ಆತಂಕಕಾರಿ ಬೆಳವಣಿಗೆ ಎಂದು ಹೇಳಿದರು.

ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಕಾನೂನುಬಾಹಿರ ಕೃತ್ಯವಾಗಿದ್ದು, ಇದು ಸರ್ಕಾರಿ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುವ ಗಂಭೀರ ಅಪರಾಧವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿ ಸಾರ್ವಜನಿಕರೊಂದಿಗೆ ನೇರ ಸಂಪರ್ಕದಲ್ಲಿದ್ದು ಸೇವೆ ಸಲ್ಲಿಸುತ್ತಾರೆ. ಇಂತಹ ಘಟನೆಗಳು ಸಿಬ್ಬಂದಿಯಲ್ಲಿ ಭಯದ ವಾತಾವರಣ ಸೃಷ್ಟಿಸುವುದರ ಜೊತೆಗೆ ಸಾರ್ವಜನಿಕ ಸೇವೆಗಳ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ಹೇಳಿದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಿ ತಕ್ಷಣ ಬಂಧಿಸಬೇಕು. ಜೊತೆಗೆ ಸರ್ಕಾರಿ ನೌಕರರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೂಕ್ತ ರಕ್ಷಣೆ ಒದಗಿಸಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಡಾ. ರವಿ ಎಲ್. ಗುಂಜೀಕರ, ಡಿ.ಎಸ್. ತಳವಾರ, ಎಂ.ಎಂ. ನಿಟ್ಟಾಲಿ, ಎಂ.ವೈ. ಮಲಕಶೆಟ್ಟಿ, ರಾಜು ಕಂಟಿಗೊಣ್ಣವರ, ಸಿದ್ದಪ್ಪ ಲಿಂಗದಾಳ, ಎಸ್.ಎಸ್. ಪಾರ್ವತಿಮಠ, ಶಿವಪ್ಪ ಹದ್ಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಸರ್ಕಾರಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಗಂಭೀರ ಅಪರಾಧ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು.”

– ಡಾ. ಬಸವರಾಜ ಬಳ್ಳಾರಿ, ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ, ಸರ್ಕಾರಿ ನೌಕರರ ಸಂಘ

ಬಡತನ, ಉದ್ಯೋಗ ಬದಿಗೆ ಸರಿದು ಎಸ್‌ಐಆರ್ ಚರ್ಚೆ ಪ್ರಾಬಲ್ಯ: ಯೂಸುಫ್ ಕಣವಿ

0

ವಿಜಯಸಾಕ್ಷಿ ಸುದ್ದಿ, ಗದಗ: ದೇಶದಲ್ಲಿ ಬಡತನ, ನಿರುದ್ಯೋಗ, ರಾಷ್ಟ್ರೀಯ ಭದ್ರತೆ ಸೇರಿದಂತೆ ಜನಜೀವನಕ್ಕೆ ಸಂಬಂಧಿಸಿದ ಗಂಭೀರ ವಿಷಯಗಳ ಕುರಿತು ಚರ್ಚೆಯಾಗಬೇಕಾದ ಸಂದರ್ಭದಲ್ಲಿ ಎಸ್‌ಐಆರ್ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ವಿಷಯವೇ ರಾಷ್ಟ್ರಮಟ್ಟದ ಚರ್ಚೆಯಾಗಿ ಪರಿಣಮಿಸಿರುವುದು ವಿಷಾದನೀಯ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಯೂಸುಫ್ ಕಣವಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಶ್ರೀಮಂತರು ಮತ್ತು ಪ್ರಭಾವಿ ವರ್ಗದವರಿಗೆ ಮಾತ್ರ ಮತದಾನದ ಹಕ್ಕು ಇತ್ತು. ಸ್ವಾತಂತ್ರ್ಯಾನಂತರ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಸಾರ್ವತ್ರಿಕವಾಗಿದ್ದು, ಇಂದು ಕೋಟ್ಯಂತರ ಜನರು ಮತದಾರರಾಗಿದ್ದಾರೆ ಎಂದು ತಿಳಿಸಿದರು.

ದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿರುವ ನುಸುಳುಕೋರರನ್ನು ಗುರುತಿಸಿ ಕ್ರಮ ಕೈಗೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ, ಈ ವಿಷಯದಲ್ಲಿ ಸ್ಪಷ್ಟ ಮಾಹಿತಿ ನೀಡದೆ ಸಾಮಾನ್ಯ ಮತದಾರರ ಪಟ್ಟಿಯನ್ನೇ ಪ್ರಶ್ನಿಸುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿದರು.

ಎಸ್‌ಐಆರ್ ಪ್ರಕ್ರಿಯೆ ಮೂಲಕ ದೇಶದ ವಿವಿಧ ರಾಜ್ಯಗಳಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ವರದಿಗಳು ಬರುತ್ತಿವೆ. ಈ ಪ್ರಕ್ರಿಯೆಯಲ್ಲಿ ಎಷ್ಟು ಮಂದಿ ಅಕ್ರಮ ನುಸುಳುಕೋರರು ಹಾಗೂ ಎಷ್ಟು ಮಂದಿ ಸಾಮಾನ್ಯ ನಾಗರಿಕರು ಎಂಬುದನ್ನು ಚುನಾವಣಾ ಆಯೋಗ ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ಪ್ರಕ್ರಿಯೆಯಲ್ಲಿ ಬಡವರು, ದಲಿತರು ಮತ್ತು ವಂಚಿತ ಸಮುದಾಯದ ಜನರಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು. ಮತದಾನದ ಹಕ್ಕು ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿದ್ದು, ಅದರ ರಕ್ಷಣೆಗೆ ಎಲ್ಲರೂ ಜಾಗೃತರಾಗಬೇಕು ಎಂದು ಹೇಳಿದರು.

ಯುವ ಮುಖಂಡ ಸರೋವರ ಬೆಂಕಿಕೇರಿ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಸ್ವಾಗತಾರ್ಹವಾದರೂ, ಇತ್ತೀಚೆಗೆ ಜಾರಿಗೆ ತರಲಾಗುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಸಾರ್ವಜನಿಕರಲ್ಲಿ ಗೊಂದಲ ಮತ್ತು ಆತಂಕ ಮೂಡಿಸುತ್ತಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಲಾಲ್ ಗೋಕಾವಿ, ಜುನೈದ್ ಉಮಚಗಿ, ಆರಾಧನಾ ಬಣಕಾರ, ಆರೀಫ್ ಉಲ್ಲಾ, ಮುತ್ತು ಬಿಳೆಯಲಿ, ಅನ್ವರ್ ಬಾಗೇವಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ದೇಶದಲ್ಲಿ ಬಡತನ, ಭದ್ರತೆ ಹಾಗೂ ಉದ್ಯೋಗದಂತಹ ಗಂಭೀರ ವಿಷಯಗಳು ಚರ್ಚೆಯಾಗಬೇಕಾದ ಸಂದರ್ಭದಲ್ಲಿ ಎಸ್‌ಐಆರ್ ವಿಚಾರವೇ ಪ್ರಮುಖ ಚರ್ಚೆಯಾಗಿರುವುದು ಆತಂಕಕಾರಿ ಬೆಳವಣಿಗೆ.”

– ಯೂಸುಫ್ ಕಣವಿ, ರಾಜ್ಯ ಕಾರ್ಯದರ್ಶಿ, ಜಮಾಅತೆ ಇಸ್ಲಾಮಿ ಹಿಂದ್

ಹಕ್ಕೊತ್ತಾಯಗಳು

  • ‘ಲಾಜಿಕಲ್ ಡಿಸ್ಕ್ರೆಪೆನ್ಸಿ’ ಸಾಫ್ಟ್‌ವೇರ್ ಅನ್ನು ಕರ್ನಾಟಕದಲ್ಲಿ ಬಳಸಬಾರದು.
  • ಮತದಾರರ ಪಟ್ಟಿಯ ಕರಡು ಪ್ರತಿಯನ್ನು ಸಾರ್ವಜನಿಕ ಪರಿಶೀಲನೆಗೆ ಲಭ್ಯಗೊಳಿಸಬೇಕು.
  • ಗ್ರಾಮಸಭೆ ಹಾಗೂ ವಾರ್ಡ್ ಸಭೆಗಳ ಮೂಲಕ ಸಾರ್ವಜನಿಕ ಪರಿಶೀಲನೆ ಮತ್ತು ತಿದ್ದುಪಡಿಗೆ ಅವಕಾಶ ಕಲ್ಪಿಸಬೇಕು.
  • ಅಪೀಲು ಸಲ್ಲಿಸಲು ಕನಿಷ್ಠ ಆರು ತಿಂಗಳ ಕಾಲಾವಕಾಶ ನೀಡಬೇಕು.

ಯೋಗದಿಂದ ರೋಗಮುಕ್ತಿ ಸಾಧ್ಯ: ಅಕ್ಕಿ ತೋಟೇಶ್

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಆಧುನಿಕ ಜೀವನಶೈಲಿ ಮತ್ತು ಬದಲಾಗುತ್ತಿರುವ ಪರಿಸ್ಥಿತಿಗಳ ನಡುವೆ ಮನುಷ್ಯನ ಬದುಕು ಒತ್ತಡಮಯವಾಗಿದ್ದು, ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಕ್ಕಿ ತೋಟೇಶ್ ಹೇಳಿದರು.

ತಾಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ ಶ್ರೀದೇವಿ ಪ್ರಸಾದ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ 10 ದಿನಗಳ ಯೋಗ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯೋಗವು ಭಾರತದ ಪುರಾತನ ಪರಂಪರೆಯ ಅಮೂಲ್ಯ ಕೊಡುಗೆಯಾಗಿದ್ದು, ಇಂದು ವಿಶ್ವದಾದ್ಯಂತ ಸ್ವೀಕಾರಾರ್ಹತೆ ಪಡೆದುಕೊಂಡಿದೆ. ನಿಯಮಿತ ಯೋಗಾಭ್ಯಾಸದಿಂದ ಆರೋಗ್ಯವಂತ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಪಿಎಸ್‌ಐ ಚಂದ್ರಶೇಖರ್ ಮಾತನಾಡಿ, ಯೋಗವು ಯಾವುದೇ ನಿರ್ದಿಷ್ಟ ವಯೋಮಿತಿಗೆ ಸೀಮಿತವಾಗಿಲ್ಲ. ಒತ್ತಡ ಮತ್ತು ಆತಂಕಗಳಿಂದ ಕೂಡಿದ ಇಂದಿನ ಬದುಕಿನಲ್ಲಿ ಪ್ರತಿಯೊಬ್ಬರೂ ಯೋಗಾಭ್ಯಾಸವನ್ನು ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪಿಡಿಒ ಚಂದ್ರಶೇಖರ್, ಕಾಲೇಜು ಪ್ರಾಂಶುಪಾಲ ಬಸವರಾಜ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೊಟ್ರೇಶ್, ಬಿಡಿಸಿಸಿ ಬ್ಯಾಂಕ್ ಸದಸ್ಯ ವೈ. ಸುರೇಶ, ಎಣ್ಣೆಕಾಳು ಸೊಸೈಟಿ ಅಧ್ಯಕ್ಷ ಸುಣಗಾರ ಪರಶುರಾಮ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಡಿ.ಎಂ. ಆನಂದ್, ಮುಖ್ಯ ಶಿಕ್ಷಕಿ ರಾಜೇಶ್ವರಿ, ಎಸ್‌ಡಿಎಂಸಿ ಅಧ್ಯಕ್ಷ ನೀಲಗಿರಿ, ಗ್ಯಾರಂಟಿ ಸಮಿತಿ ಸದಸ್ಯ ಜಿ. ಗಿರೀಶ, ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ವಿ. ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

“ಒತ್ತಡ ಮತ್ತು ರೋಗಗಳಿಂದ ಮುಕ್ತ ಜೀವನ ನಡೆಸಲು ಯೋಗ ಅತ್ಯಗತ್ಯ. ಪ್ರತಿಯೊಬ್ಬರೂ ಯೋಗವನ್ನು ದಿನನಿತ್ಯದ ಬದುಕಿನ ಭಾಗವಾಗಿಸಿಕೊಳ್ಳಬೇಕು.”

– ಅಕ್ಕಿ ತೋಟೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ

ಸರ್ವತೋಮುಖ ಆರೋಗ್ಯಕ್ಕೆ ಯೋಗವೇ ಸಂಜೀವಿನಿ: ಡಾ. ಉಮೇಶ ಪುರದ

0

ವಿಜಯಸಾಕ್ಷಿ ಸುದ್ದಿ, ಗದಗ: ದೈಹಿಕ, ಮಾನಸಿಕ, ಆಧ್ಯಾತ್ಮಿಕ, ಸಾಮಾಜಿಕ ಹಾಗೂ ನೈತಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಸಾಧನೆ ಅತ್ಯುತ್ತಮ ಮಾರ್ಗವಾಗಿದೆ ಎಂದು ನಿವೃತ್ತ ಪ್ರಾಚಾರ್ಯ, ಖ್ಯಾತ ವೈದ್ಯ ಹಾಗೂ ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಡಾ. ಉಮೇಶ ಪುರದ ಹೇಳಿದರು.

12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಎಸ್.ವೈ.ಬಿ.ಎಂ.ಎಸ್. ಯೋಗಪಾಠಶಾಲೆಯ ಬಸವ ಯೋಗ ಮಹಾವಿದ್ಯಾಲಯ, ಲಿಂಗಾಯತ ಪ್ರಗತಿಶೀಲ ಸಂಘ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಯೋಗ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಿದ್ದ ಯೋಗ ಅರಿವು-ಆಚಾರ ಶಿಬಿರದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಂದಿನ ದಿನಗಳಲ್ಲಿ ಕೇವಲ ದೈಹಿಕ ಆರೋಗ್ಯವಷ್ಟೇ ಅಲ್ಲ, ಮಾನಸಿಕ ಮತ್ತು ನೈತಿಕ ಆರೋಗ್ಯವೂ ಅತ್ಯಂತ ಅಗತ್ಯವಾಗಿದೆ. ಪತಂಜಲಿ ಪ್ರತಿಪಾದಿಸಿದ ಅಷ್ಟಾಂಗ ಯೋಗ ಹಾಗೂ ಬಸವಣ್ಣನವರ ಶಿವಯೋಗ ಸಾಧನೆಗಳು ಪರಿಪೂರ್ಣ ಆರೋಗ್ಯದತ್ತ ಕೊಂಡೊಯ್ಯುತ್ತವೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಸಮಾಜಸೇವಕಿ ಹಾಗೂ ವಕೀಲೆ ಶ್ರೀದೇವಿ ಶೆಟ್ಟರ ಮಾತನಾಡಿ, ಕುಟುಂಬ ಮತ್ತು ಸಮಾಜದ ಆರೋಗ್ಯಕರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಯೋಗಾಭ್ಯಾಸವನ್ನು ಜೀವನದ ಭಾಗವಾಗಿಸಿಕೊಂಡರೆ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಪತಂಜಲಿ ಯೋಗ ಸಮಿತಿಯ ಜಿಲ್ಲಾ ಕೋಶಾಧ್ಯಕ್ಷ ಕೆ.ಎಸ್. ಗುಗ್ಗರಿ ಮಾತನಾಡಿ, ಯೋಗ ಎಂದರೆ ಕೂಡಿಸುವ ಶಕ್ತಿ. ಕುಟುಂಬ, ಸಮಾಜ ಹಾಗೂ ರಾಷ್ಟ್ರದ ಮಟ್ಟದಲ್ಲಿ ಸಾಮರಸ್ಯ ಬೆಳೆಸುವಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎ. ಬಳಿಗೇರ ಮಾತನಾಡಿ, ಶಿವಶರಣರು ಅನುಸರಿಸಿದ ಕಾಯಕ ಯೋಗ ಇಂದಿನ ಸಮಾಜಕ್ಕೂ ಪ್ರಸ್ತುತವಾಗಿದ್ದು, ಯೋಗದೊಂದಿಗೆ ಮೌಲ್ಯಾಧಾರಿತ ಜೀವನ ನಡೆಸಿದರೆ ನೆಮ್ಮದಿ ಸಾಧ್ಯ ಎಂದು ಹೇಳಿದರು.

ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ಅಧ್ಯಕ್ಷೆ ಜಯಶ್ರೀ ಉಗಲಾಟದ ಮಾತನಾಡಿ, ಮೌನ ಮತ್ತು ಆತ್ಮಾವಲೋಕನದ ಮೂಲಕ ಮನಸ್ಸಿನ ಶಾಂತಿ ಸಾಧಿಸಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ಸದಸ್ಯರು, ತೋಂಟದಾರ್ಯ ಪ್ರಸಾದ ನಿಲಯದ ವಿದ್ಯಾರ್ಥಿಗಳು ಹಾಗೂ ಯೋಗಾಸಕ್ತರು ಭಾಗವಹಿಸಿದ್ದರು.

ನಿವೃತ್ತ ಮುಖ್ಯೋಪಾಧ್ಯಾಯ ಶಿವನಗೌಡ ಗೌಡರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುನಂದಾ ಜ್ಞಾನೋಪಂತ ಧ್ಯಾನಕ್ಕೆ ಪೂರಕವಾದ ಸಂಗೀತ ಸೇವೆ ನೀಡಿದರು. ಶಿವಲೀಲಾ ಅಕ್ಕಿ ವಂದಿಸಿದರು. ಬಸವ ಯೋಗ ಮಹಾವಿದ್ಯಾಲಯದ ಪ್ರಾಚಾರ್ಯ ಕೆ.ಎಸ್. ಪಲ್ಲೇದ ಕಾರ್ಯಕ್ರಮ ನಿರೂಪಿಸಿದರು.

“ಯೋಗವು ಕೇವಲ ವ್ಯಾಯಾಮವಲ್ಲ; ದೇಹ, ಮನಸ್ಸು ಮತ್ತು ಆತ್ಮವನ್ನು ಸಮತೋಲನದಲ್ಲಿ ಇಡುವ ಜೀವನ ಪದ್ಧತಿಯಾಗಿದೆ.”

— ಡಾ. ಉಮೇಶ ಪುರದ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷರು

ಜನನ-ಮರಣ ನೋಂದಣಿಯಲ್ಲಿ ವಿಳಂಬ ಸಹಿಸುವುದಿಲ್ಲ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

0

ವಿಜಯಸಾಕ್ಷಿ ಸುದ್ದಿ, ಗದಗ: ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ, ದೋಷರಹಿತವಾಗಿ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ನೋಂದಣಿಗೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಜನನ-ಮರಣ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೋಂದಣಿ ಕಾರ್ಯದಲ್ಲಿ ನಿರ್ಲಕ್ಷ್ಯ ಸಹಿಸಲಾಗದು. ನಿರೀಕ್ಷಿತ ಪ್ರಗತಿ ಕಾಣದಿದ್ದರೆ ಸಂಬಂಧಿಸಿದ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳ ಜನನ-ಮರಣ ನೋಂದಣಿ ವೈದ್ಯಾಧಿಕಾರಿಗಳು ಕಡ್ಡಾಯವಾಗಿ ಡಿಜಿಟಲ್ ಕೀ (Digital Key) ಹೊಂದಿರಬೇಕು. ಈ ವಿಷಯದಲ್ಲಿ ಯಾವುದೇ ವಿನಾಯಿತಿ ಅಥವಾ ಕಾರಣಗಳನ್ನು ಒಪ್ಪಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಜನನ ಮತ್ತು ಮರಣ ನೋಂದಣಿಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಲ್ಲ, ನಾಗರಿಕರಿಗೆ ಅಗತ್ಯವಾಗುವ ವಿವಿಧ ದಾಖಲೆಗಳು, ಸರ್ಕಾರಿ ಸೌಲಭ್ಯಗಳು, ಕಾನೂನು ಪ್ರಕ್ರಿಯೆಗಳು ಹಾಗೂ ಗುರುತಿನ ದಾಖಲೆಗಳ ಮೂಲ ಆಧಾರವಾಗಿದೆ. ಆದ್ದರಿಂದ ನೋಂದಣಿ ಕಾರ್ಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ವಿಳಂಬ ನಡೆಯಬಾರದು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜನನ ನೋಂದಣಿಯಲ್ಲಿ ಗದಗ, ಮುಂಡರಗಿ ಮುಂಚೂಣಿ

ಜನವರಿಯಿಂದ ಮೇ 2026ರ ಅಂತ್ಯದವರೆಗೆ ಜಿಲ್ಲೆಯಲ್ಲಿ ಒಟ್ಟು 6,994 ಜನನ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 5,090 ಪ್ರಕರಣಗಳು (72.78%) ನಿಗದಿತ ಅವಧಿಯೊಳಗೆ ನೋಂದಣಿಯಾಗಿವೆ.

ತಾಲೂಕುವಾರು ಪರಿಶೀಲನೆಯಲ್ಲಿ ಮುಂಡರಗಿ ತಾಲೂಕು 76.56 ಶೇಕಡಾ ಹಾಗೂ ಗದಗ ತಾಲೂಕು 76.43 ಶೇಕಡಾ ಸಾಧನೆಯೊಂದಿಗೆ ಮುಂಚೂಣಿಯಲ್ಲಿವೆ. ಲಕ್ಷ್ಮೇಶ್ವರ 75.79 ಶೇಕಡಾ, ಶಿರಹಟ್ಟಿ 73.68 ಶೇಕಡಾ ಹಾಗೂ ನರಗುಂದ 73.56 ಶೇಕಡಾ ಪ್ರಗತಿ ಸಾಧಿಸಿವೆ. ರೋಣ ತಾಲೂಕು 47.11 ಶೇಕಡಾ ಸಾಧನೆಯೊಂದಿಗೆ ಹಿಂದುಳಿದಿದೆ.

ಮರಣ ನೋಂದಣಿಯಲ್ಲಿ ಶಿರಹಟ್ಟಿ ಮೊದಲ ಸ್ಥಾನ

ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ ಒಟ್ಟು 3,872 ಮರಣ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 2,830 ಪ್ರಕರಣಗಳು (73.09%) ಸಮಯೋಚಿತವಾಗಿ ನೋಂದಣಿಯಾಗಿವೆ.

ಮರಣ ನೋಂದಣಿ ಪ್ರಗತಿಯಲ್ಲಿ ಶಿರಹಟ್ಟಿ ತಾಲೂಕು 79.51 ಶೇಕಡಾ ಸಾಧನೆಯೊಂದಿಗೆ ಮೊದಲ ಸ್ಥಾನದಲ್ಲಿದ್ದು, ಮುಂಡರಗಿ 73.77 ಶೇಕಡಾ, ನರಗುಂದ 73.63 ಶೇಕಡಾ, ಗದಗ 71.68 ಶೇಕಡಾ, ರೋಣ 69.91 ಶೇಕಡಾ ಹಾಗೂ ಲಕ್ಷ್ಮೇಶ್ವರ 68.47 ಶೇಕಡಾ ಸಾಧನೆ ದಾಖಲಿಸಿವೆ.

ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಬಿ.ಎಸ್. ಪಾಟೀಲ ಮಾಹಿತಿ ನೀಡಿ, ಜಿಲ್ಲೆಯ ಎರಡು ಆಸ್ಪತ್ರೆಗಳು ಜನನ-ಮರಣ ನೋಂದಣಿ ಕಾರ್ಯದಲ್ಲಿ ಉತ್ತಮ ಸಾಧನೆ ಮಾಡಿದ್ದು, ಇತರೆ ಆಸ್ಪತ್ರೆಗಳೂ ಇದೇ ಮಾದರಿಯನ್ನು ಅನುಸರಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಭೂದಾಖಲೆಗಳ ಉಪನಿರ್ದೇಶಕ ರುದ್ರಣ್ಣಗೌಡ ಜಿ.ಜೆ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಸಮಯೋಚಿತವಾಗಿ ಹಾಗೂ ದೋಷರಹಿತವಾಗಿ ನಡೆಸುವುದು ಅತ್ಯಂತ ಮಹತ್ವದ್ದಾಗಿದೆ. ಯಾವುದೇ ಕಾರಣಕ್ಕೂ ವಿಳಂಬ ನೋಂದಣಿಗೆ ಅವಕಾಶ ನೀಡಬಾರದು. ನೋಂದಣಿ ಕಾರ್ಯದಲ್ಲಿ ನಿರೀಕ್ಷಿತ ಪ್ರಗತಿ ಕಾಣದಿದ್ದರೆ ಸಂಬಂಧಿಸಿದ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ.”

– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

ಬೆಳೆ ಅಂಕಿ-ಅಂಶಗಳಲ್ಲಿ ಗೊಂದಲಕ್ಕೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

ವಿಜಯಸಾಕ್ಷಿ ಸುದ್ದಿ, ಗದಗ: ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಬೆಳೆಗಳಿಗೆ ಸಂಬಂಧಿಸಿದ ಅಂಕಿ-ಅಂಶಗಳು ಮತ್ತು ಬೆಳೆ ವಿಸ್ತೀರ್ಣದ ಮಾಹಿತಿ ನಿಖರವಾಗಿರಬೇಕು. ತಪ್ಪು ಮಾಹಿತಿ ದಾಖಲಾದರೆ ರೈತರಿಗೆ ಬೆಳೆ ವಿಮೆ ಹಾಗೂ ಸರ್ಕಾರಿ ಸೌಲಭ್ಯಗಳ ವಿತರಣೆಯಲ್ಲಿ ತೊಂದರೆ ಉಂಟಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕೃಷಿ ಅಂಕಿ-ಅಂಶಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಂಗಾಮಿನ ಆರಂಭದಿಂದ ಅಂತ್ಯದವರೆಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಅಂಕಿ-ಅಂಶಗಳಲ್ಲಿ ಯಾವುದೇ ವ್ಯತ್ಯಾಸ ಅಥವಾ ಗೊಂದಲ ಇರಬಾರದು. ಕಂದಾಯ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಬೆಳೆ ಸಮೀಕ್ಷೆ ಮತ್ತು ಅಂಕಿ-ಅಂಶಗಳ ಸಂಗ್ರಹಣೆಯನ್ನು ನಿಖರವಾಗಿ ನಡೆಸಬೇಕು ಎಂದು ಸೂಚಿಸಿದರು.

ಖಾಸಗಿ ಜಂಟಿ ಸಮೀಕ್ಷೆದಾರರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಸಲ್ಲಿಸುವ ಬೆಳೆ ಸಮೀಕ್ಷೆ ವರದಿಗಳನ್ನು ಮೇಲ್ವಿಚಾರಕರು ಕಡ್ಡಾಯವಾಗಿ ಕ್ಷೇತ್ರ ಮಟ್ಟದಲ್ಲಿ ಪರಿಶೀಲಿಸಬೇಕು. ಈ ಜವಾಬ್ದಾರಿಯಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬೆಳೆ ವಿಮೆಗೆ ನಿಖರ ಮಾಹಿತಿ ಅಗತ್ಯ

ಕ್ರಾಪ್ ಕಟಿಂಗ್ ಪ್ರಯೋಗಗಳು ಹಾಗೂ ಬೆಳೆ ಸಮೀಕ್ಷೆಗಳಲ್ಲಿ ತಪ್ಪು ಮಾಹಿತಿ ದಾಖಲಾಗಿದರೆ ರೈತರಿಗೆ ಬೆಳೆ ವಿಮೆ ಪಡೆಯುವ ಸಂದರ್ಭದಲ್ಲಿ ತೊಂದರೆ ಉಂಟಾಗುತ್ತದೆ. ವಿಮಾ ಕಂಪನಿಗಳು ಆಕ್ಷೇಪಣೆ ಎತ್ತಲು ಅವಕಾಶ ನೀಡದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ಜೋಳದಂತಹ ಸಾಂಪ್ರದಾಯಿಕ ಬೆಳೆಗಳ ವಿಸ್ತೀರ್ಣ ಕಡಿಮೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದ ಅವರು, ರೈತರಿಗೆ ಆರ್ಥಿಕ ಲಾಭದಾಯಕ ಬೆಳೆಗಳ ಕುರಿತು ಮಾಹಿತಿ ನೀಡುವ ಜೊತೆಗೆ ಬೆಳೆ ವೈವಿಧ್ಯತೆ ಮತ್ತು ಮಿಶ್ರ ಬೆಳೆ ಪದ್ಧತಿ ಅಳವಡಿಸಿಕೊಳ್ಳಲು ಪ್ರೋತ್ಸಾಹಿಸಬೇಕು ಎಂದರು.

ಪಾಳು ಭೂಮಿ ಕೃಷಿಗೆ ಬಳಕೆ ಮಾಡುವಂತೆ ಸೂಚನೆ

ಜಿಲ್ಲೆಯಲ್ಲಿ ರೇಷ್ಮೆ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಉತ್ತಮ ಅವಕಾಶಗಳಿದ್ದು, ಪಾಳು ಭೂಮಿಯನ್ನು ಗುರುತಿಸಿ ಕೃಷಿಯೋಗ್ಯ ಭೂಮಿಯನ್ನಾಗಿ ಪರಿವರ್ತಿಸಲು ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೃಷಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಿತ್ತನೆ ಕಾರ್ಯ ಪೂರ್ಣಗೊಂಡ ತಕ್ಷಣವೇ ಪೋರ್ಟಲ್‌ನಲ್ಲಿ ನಿಖರ ಮಾಹಿತಿಯನ್ನು ದಾಖಲಿಸಬೇಕು. ಯಾವುದೇ ಹಂತದಲ್ಲಿ ನಿರ್ಲಕ್ಷ್ಯ ತೋರಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

5.85 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ

ಸಭೆಯಲ್ಲಿ ಜಿಲ್ಲಾ ಸಾಂಖ್ಯಿಕ ಸಂಗ್ರಹಣಾಧಿಕಾರಿ ಬಿ.ಎಸ್. ಪಾಟೀಲ ಜಿಲ್ಲೆಯ ಕೃಷಿ ಅಂಕಿ-ಅಂಶಗಳ ವರದಿ ಮಂಡಿಸಿದರು.

2025-26ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 5,85,777 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಅದರಲ್ಲಿ 1,18,191 ಹೆಕ್ಟೇರ್ ಪ್ರದೇಶ ನೀರಾವರಿ ವ್ಯಾಪ್ತಿಗೆ ಒಳಪಟ್ಟಿದೆ ಎಂದು ಮಾಹಿತಿ ನೀಡಿದರು.

ಮುಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳ 1,54,216 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲ್ಪಟ್ಟ ಪ್ರಮುಖ ಬೆಳೆಯಾಗಿದ್ದರೆ, ಹೆಸರು 1,06,145 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ.

ಹಿಂಗಾರು ಹಂಗಾಮಿನಲ್ಲಿ ಕಡಲೆ 1,57,903 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುವ ಮೂಲಕ ಪ್ರಮುಖ ಬೆಳೆಯಾಗಿ ಹೊರಹೊಮ್ಮಿದೆ. ಜೋಳ, ಗೋಧಿ ಹಾಗೂ ಸೂರ್ಯಕಾಂತಿಯೂ ಗಣನೀಯ ಪ್ರಮಾಣದಲ್ಲಿ ಬೆಳೆಯಲಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಭೂದಾಖಲೆಗಳ ಉಪನಿರ್ದೇಶಕ ರುದ್ರಣ್ಣಗೌಡ ಜಿ.ಜೆ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಬೆಳೆ ಸಮೀಕ್ಷೆ ಹಾಗೂ ಕೃಷಿ ಅಂಕಿ-ಅಂಶಗಳಲ್ಲಿ ತಪ್ಪು ಮಾಹಿತಿ ದಾಖಲಾಗಿದರೆ ರೈತರಿಗೆ ಬೆಳೆ ವಿಮೆ ಮತ್ತು ಸರ್ಕಾರಿ ಸೌಲಭ್ಯಗಳ ವಿತರಣೆಯಲ್ಲಿ ತೊಂದರೆ ಉಂಟಾಗುತ್ತದೆ. ಹೀಗಾಗಿ ಅಂಕಿ-ಅಂಶಗಳ ನಿಖರತೆಗೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.”

ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಟ್ಟು ಪೋಷಿಸಿ: ಸಿ.ಎಸ್. ಶಿವನಗೌಡ್ರ

0

ವಿಜಯಸಾಕ್ಷಿ ಸುದ್ದಿ, ಗದಗ: ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗಬಾರದು. ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಿನಲ್ಲಿ ಕನಿಷ್ಠ ಒಂದು ಗಿಡ ನೆಟ್ಟು ಪೋಷಿಸುವ ಮೂಲಕ ಪರಿಸರ ರಕ್ಷಣೆಗೆ ಕೈಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಿ.ಡಿ.ಒ. ಜೈನ್ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪರಿಸರ ದಿನಾಚರಣೆ ಎಂದರೆ ಭೂಮಿತಾಯಿಯ ಆರಾಧನೆ ಮಾಡಿದಂತೆ. ವಾಯು ಮಾಲಿನ್ಯ ತಡೆಗಟ್ಟಲು ಹಾಗೂ ಪರಿಸರ ಸಮತೋಲನ ಕಾಪಾಡಲು ಗಿಡ-ಮರಗಳ ಬೆಳವಣಿಗೆ ಅತ್ಯಗತ್ಯವಾಗಿದೆ. ಮರಗಳನ್ನು ಬೆಳೆಸುವುದು ಮತ್ತು ಉಳಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಇಂದಿನ ಜೀವನಶೈಲಿಯಲ್ಲಿ ಪರಿಸರದ ಮೇಲಿನ ಒತ್ತಡ ಹೆಚ್ಚುತ್ತಿದ್ದು, ಪ್ರಕೃತಿಯ ಸಮತೋಲನ ಹದಗೆಡುತ್ತಿದೆ. ಮನುಷ್ಯನ ಅತಿಯಾದ ಸ್ವಾರ್ಥ ಮತ್ತು ಪ್ರಕೃತಿ ಸಂಪನ್ಮೂಲಗಳ ದುರ್ಬಳಕೆಯಿಂದ ಉಷ್ಣಾಂಶ ಹೆಚ್ಚಳ, ಮಳೆಯ ಕೊರತೆ ಹಾಗೂ ಪರಿಸರ ವೈಪರೀತ್ಯಗಳು ಉಂಟಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕಿ ಗೀತಾ ಕುಲಕರ್ಣಿ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಮರಗಳನ್ನು ಕಡಿಯುವುದರಿಂದ ನಮ್ಮ ವಿನಾಶಕ್ಕೆ ನಾವೇ ಕಾರಣರಾಗುತ್ತಿದ್ದು, ರೈತರು ತಮ್ಮ ಜಮೀನುಗಳ ಬದುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮರಗಳನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.

ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪವನ್ನು ಪ್ರತಿಯೊಬ್ಬರೂ ಕೈಗೊಳ್ಳಬೇಕು. ಪರಿಸರ ಉಳಿವಿಗೆ ಸಣ್ಣ ಪ್ರಯತ್ನಗಳೂ ದೊಡ್ಡ ಬದಲಾವಣೆಗೆ ಕಾರಣವಾಗುತ್ತವೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಲೋಹಿತ್ ಕುಮಾರ್ ಪಿ.ಜೆ. ಪ್ರಾಸ್ತಾವಿಕವಾಗಿ ಮಾತನಾಡಿ, ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಕಾನೂನುಗಳು ಹಾಗೂ ಸಾರ್ವಜನಿಕರ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು.

300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಸ್ಪರ್ಧೆಗಳಲ್ಲಿ ಭಾಗಿ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನಗರ ಹಾಗೂ ಸುತ್ತಮುತ್ತಲಿನ ಶಾಲೆಗಳ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಿ ಸನ್ಮಾನಿಸಲಾಯಿತು.

“ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಟ್ಟು ಪೋಷಿಸಿದರೆ ಪರಿಸರ ಸಂರಕ್ಷಣೆಗೆ ಅದು ಅತ್ಯುತ್ತಮ ಕೊಡುಗೆಯಾಗುತ್ತದೆ. ಗಿಡಗಳನ್ನು ಬೆಳೆಸುವುದು ಮಾತ್ರವಲ್ಲ, ಅವುಗಳನ್ನು ಉಳಿಸುವ ಜವಾಬ್ದಾರಿಯೂ ನಮ್ಮದಾಗಿದೆ.”

ಸಿ.ಎಸ್. ಶಿವನಗೌಡ್ರ

ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ

ಸ್ಲಂ ಜನರ ಭರವಸೆ ಈಡೇರಿಕೆಗೆ ಜೂನ್ 20ರಂದು ರಾಜ್ಯ ಮಟ್ಟದ ಸಮಾವೇಶ

0

ವಿಜಯಸಾಕ್ಷಿ ಸುದ್ದಿ, ಗದಗ: ಚುನಾವಣಾ ಪ್ರಣಾಳಿಕೆಯಲ್ಲಿ ಸ್ಲಂ ನಿವಾಸಿಗಳು ಹಾಗೂ ಬಡಜನರಿಗೆ ನೀಡಿರುವ ಭರವಸೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿ ಸ್ಲಂ ಜನಾಂದೋಲನ-ಕರ್ನಾಟಕ ವತಿಯಿಂದ ಜೂನ್ 20ರಂದು ಗದಗ ನಗರದಲ್ಲಿ ರಾಜ್ಯ ಪ್ರತಿನಿಧಿಗಳ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದರೂ ಸ್ಲಂ ನಿವಾಸಿಗಳಿಗೆ ನೀಡಿದ್ದ ಹಲವು ಭರವಸೆಗಳು ಇನ್ನೂ ಈಡೇರಿಲ್ಲ ಎಂದು ಆರೋಪಿಸಿದರು.

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ, ಉಚಿತ ಮನೆಗಳ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಸರ್ಕಾರ ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸಿಲ್ಲ. ಬಡಜನರ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಸರ್ಕಾರ ತನ್ನ ವಾಗ್ದಾನಗಳನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.

ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಆರ್. ಮಾನ್ವಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ಫಲಾನುಭವಿಗಳನ್ನು ಯೋಜನೆಯಿಂದ ಹೊರಗಿಡುವ ಪ್ರಯತ್ನ ನಡೆಯುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿದರು.

ಜೂನ್ 20ರಂದು ನಗರದ ಲಾಯನ್ಸ್ ಭವನದಲ್ಲಿ ನಡೆಯಲಿರುವ ರಾಜ್ಯ ಪ್ರತಿನಿಧಿಗಳ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ 9.30ಕ್ಕೆ ನಗರಸಭೆ ಆವರಣದಿಂದ ರ‍್ಯಾಲಿ ಆರಂಭವಾಗಲಿದ್ದು, ಸಾಮಾಜಿಕ ಹೋರಾಟಗಾರ ಹಾಗೂ ಚಲನಚಿತ್ರ ನಟ ಅಹಿಂಸಾ ಚೇತನ ಚಾಲನೆ ನೀಡಲಿದ್ದಾರೆ.

ಗುರು ಬಸವೇಶ್ವರ ಮಠದ ಡಾ. ಪ್ರಭು ಮಹಾಂತ ಮಹಾಸ್ವಾಮೀಜಿ ಸಮ್ಮೇಳನ ಉದ್ಘಾಟಿಸಲಿದ್ದು, ಸಾವಿತ್ರಿಬಾಯಿ ಫುಲೆ ಮಹಿಳಾ ಸಮಿತಿಯ ರಾಜ್ಯ ಸಂಚಾಲಕಿ ಚಂದ್ರಮ್ಮ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಸಾಮಾಜಿಕ ಹೋರಾಟಗಾರರು, ಪ್ರಗತಿಪರ ಚಿಂತಕರು ಹಾಗೂ ರಾಜ್ಯದ ಜಿಲ್ಲಾ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವೆಂಕಮ್ಮ, ವೆಂಗಮ್ಮ, ಪರವೀನಬಾನು ಹವಾಲ್ದಾರ, ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಶರಣಪ್ಪ ಸೂಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಚುನಾವಣಾ ಪ್ರಣಾಳಿಕೆಯಲ್ಲಿ ಸ್ಲಂ ನಿವಾಸಿಗಳಿಗೆ ನೀಡಿದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು. ಬಡಜನರ ಹಕ್ಕುಗಳ ರಕ್ಷಣೆಗಾಗಿ ರಾಜ್ಯ ಮಟ್ಟದಲ್ಲಿ ಹೋರಾಟ ಮುಂದುವರಿಯಲಿದೆ.”

ಎ. ನರಸಿಂಹಮೂರ್ತಿ, ರಾಜ್ಯ ಸಂಚಾಲಕ, ಸ್ಲಂ ಜನಾಂದೋಲನ-ಕರ್ನಾಟಕ

error: Content is protected !!