Home Blog

ಸಾವಿರ ಹೆಡೆಗಳ ಸರ್ಪ ಹೇಳಿಕೆಗೆ ಈಗಲೂ ಬದ್ಧ: ಸಚಿವ ಯತೀಂದ್ರ

0

ಬೆಂಗಳೂರು: ಆರ್‌ಎಸ್‌ಎಸ್ ಅನ್ನು “ಸಾವಿರ ಹೆಡೆಗಳ ಸರ್ಪ” ಎಂದು ಹೋಲಿಸಿ ನೀಡಿದ್ದ ಹೇಳಿಕೆಗೆ ತಾವು ಈಗಲೂ ಬದ್ಧರಾಗಿರುವುದಾಗಿ ಸಚಿವ ಡಾ.ಯತೀಂದ್ರ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಆರ್‌ಎಸ್‌ಎಸ್ ನೂರಾರು ಅಂಗ ಸಂಸ್ಥೆಗಳನ್ನು ಹೊಂದಿದ್ದು, ತಮಗೆ ಯಾವುದೇ ಸಂಬಂಧ ಇಲ್ಲ ಎಂದು ಹೇಳುತ್ತಲೇ ಆ ಸಂಘಟನೆ ಪರವಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಆರೋಪಿಸಿದರು.

ಸಮಾಜದಲ್ಲಿ ನಿರಂತರವಾಗಿ ಕೋಮುವಾದದ ವಿಷ ಬಿತ್ತುತ್ತಿರುವ ಕಾರಣದಿಂದಲೇ ಈ ರೀತಿಯ ಉಪಮೆ ನೀಡಿರುವುದಾಗಿ ಅವರು ತಿಳಿಸಿದರು. ಯಾವುದೇ ವಿಷಯ ಎತ್ತಿಕೊಂಡರೂ ಅದನ್ನು ಧರ್ಮ ಮತ್ತು ಜಾತಿಯ ಚೌಕಟ್ಟಿಗೆ ತಿರುಗಿಸುವುದೇ ಆರ್‌ಎಸ್‌ಎಸ್‌ನ ಕೆಲಸ, ಜನರ ನೈಜ ಸಮಸ್ಯೆಗಳನ್ನು ಎತ್ತುವುದಿಲ್ಲ ಎಂದು ದೂರಿದರು.

ಕೋಮುವಾದ ಮಾಡುವ ಯಾರನ್ನೇ ಆದರೂ ತಾವು ಟೀಕಿಸುವುದಾಗಿ ಹೇಳಿದ ಸಚಿವರು, ಆರ್‌ಎಸ್‌ಎಸ್‌ನ ಭಯ ತಮಗಿಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿ ಅಧಿಕಾರದಲ್ಲಿದ್ದಾಗ ತಾವು ಅವರ ಪರವಾಗಿ ಮಾತನಾಡಬೇಕೆ ಎಂದು ಪ್ರಶ್ನಿಸಿದ ಅವರು, ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರೂ ಈ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಕಾಂಗ್ರೆಸ್‌ನ ಸಿದ್ಧಾಂತಕ್ಕೆ ಬದ್ಧರಾಗಿರುವ ತಾವು ಕೋಮುವಾದದ ವಿರುದ್ಧ ಇರುವ ಜಾತ್ಯತೀತ ಸಿದ್ಧಾಂತವನ್ನು ಬಲವಾಗಿ ಸಮರ್ಥಿಸುವುದಾಗಿ ತಿಳಿಸಿದ ಯತೀಂದ್ರ, ಆರ್‌ಎಸ್‌ಎಸ್ ಹಿಂದುತ್ವ ವಿಚಾರ ಬಿಟ್ಟು ಬೇರೆ ವಿಷಯ ಮಾತನಾಡಿದರೆ ಆರೋಪ ಮಾಡುವುದು ತಪ್ಪಾಗುತ್ತಿತ್ತು ಎಂದರು. ರಾಜಕಾರಣಕ್ಕೆ ಬಂದಾಗಿನಿಂದಲೂ ಇದೇ ವಿಚಾರ ಮಾತನಾಡುತ್ತಿರುವುದಾಗಿ ಹೇಳಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿದ ಘಟನೆಯಿಂದಾಗಿಯೇ ತಾವು ಪ್ರತಿಕ್ರಿಯೆ ನೀಡಬೇಕಾಯಿತು ಎಂದು ಪ್ರಶ್ನಿಸಿದರು.

ನೇಮಕಾತಿ ಅಕ್ರಮ ಪ್ರಕರಣ: ಮಾಜಿ KPSC ಅಧ್ಯಕ್ಷ ಶಿವಶಂಕರಪ್ಪ ಇಡಿ ವಶಕ್ಕೆ!

0

ಬೆಂಗಳೂರು: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಾಜಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಹೊಯ್ಸಳ ಡ್ರೀಮ್ಸ್ ಅಪಾರ್ಟ್‌ಮೆಂಟ್‌ನಲ್ಲಿರುವ ಅವರ ನಿವಾಸದಲ್ಲೇ ಇಡಿ ಅಧಿಕಾರಿಗಳು ಶಿವಶಂಕರಪ್ಪ ಅವರನ್ನು ವಶಕ್ಕೆ ಪಡೆದಿದ್ದು, ಅವರ ಮೊಬೈಲ್ ಫೋನ್ ಅನ್ನೂ ವಶಪಡಿಸಿಕೊಂಡು ಪರಿಶೀಲನೆ ನಡೆಸಲಾಗುತ್ತಿದೆ.

ಬೆಳಗ್ಗೆ 6 ಗಂಟೆ ಸುಮಾರಿಗೆ ಇಡಿ ಅಧಿಕಾರಿಗಳು ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಶಿವಶಂಕರಪ್ಪ ಅವರ ಪತ್ನಿ ದೇವಸ್ಥಾನಕ್ಕೆ ತೆರಳಿದ್ದರು ಎನ್ನಲಾಗಿದ್ದು, ಇದರಿಂದಾಗಿ ಅಧಿಕಾರಿಗಳ ತಂಡ ಅವರನ್ನು ಹುಡುಕಿಕೊಂಡು ದೇವಸ್ಥಾನದ ಬಳಿಗೆ ತೆರಳಿತ್ತು. ಆದರೆ ಅಷ್ಟರಲ್ಲಾಗಲೇ ಶಿವಶಂಕರಪ್ಪ ಪತ್ನಿ ಮನೆಗೆ ವಾಪಸ್ ಬಂದಿದ್ದರು ಎಂದು ತಿಳಿದುಬಂದಿದೆ.

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

0

ಬೆಂಗಳೂರು:ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕುಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಹನೂರು ಶೂಟೌಟ್ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂಬ ತಮಿಳುನಾಡು ಮಾಜಿ ಸಿಎಂ ಪನ್ನೀರ್ಸೆಲ್ವಂ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, “ತಮಿಳುನಾಡಿನ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಲ್ಲಿ ನಾನು ಯಾವುದೇ ರೀತಿಯಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲಎಂದು ಸ್ಪಷ್ಟಪಡಿಸಿದರು.

ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ಸಮಸ್ಯೆ ಇರುತ್ತದೆ. ಅದನ್ನು ಅವರೂ ತಿಳಿದುಕೊಳ್ಳಬೇಕು. ನಮ್ಮ ರಾಜ್ಯವನ್ನು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದು ನಮಗೆ ತಿಳಿದಿದೆ. ಅವರು ತಮ್ಮ ಕೆಲಸವನ್ನು ಮಾಡಲಿ, ನಾವು ನಮ್ಮ ಕೆಲಸವನ್ನು ಮಾಡುತ್ತೇವೆ. ಅವರ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ನಾನು ಬಯಸುವುದಿಲ್ಲ. ನಮ್ಮ ರಾಜ್ಯಕ್ಕಿರುವ ಪವಿತ್ರತೆಯನ್ನು ನಾವು ಕಾಪಾಡಿಕೊಳ್ಳಬೇಕು, ರಕ್ಷಿಸಬೇಕುಎಂದು ಸಿಎಂ ಹೇಳಿದರು.

ಪ್ರಕರಣದ ತನಿಖೆ ಆಗಬೇಕು ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಹೇಳಿಕೆ ನೀಡಿರುವ ಬಗ್ಗೆ ಪ್ರಶ್ನಿಸಿದಾಗ, “ನಾನು ಇದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಇದು ಸಾಮಾನ್ಯ ಚರ್ಚೆ. ಅವರು ತಮ್ಮ ಕೆಲಸವನ್ನು ಮಾಡಬೇಕು, ನಾವು ನಮ್ಮ ಕೆಲಸವನ್ನು ಮಾಡಬೇಕುಎಂದು ಶಿವಕುಮಾರ್ ತಿಳಿಸಿದರು.

ಗಣಿ ಮಸೂದೆ ಹಿಂಪಡೆಯಿರಿ: ಪ್ರಧಾನಿ ಮೋದಿ, ಸಚಿವ ಕಿಶನ್ ರೆಡ್ಡಿಗೆ ಡಿಸಿಎಂ ಪರಮೇಶ್ವರ್ ಪತ್ರ

0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ.ಕಿಶನ್ ರೆಡ್ಡಿ ಅವರಿಗೆ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಪತ್ರ ಬರೆದಿದ್ದಾರೆ. 2026ರ ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಖನಿಜ ಹಕ್ಕುಗಳು ಹಾಗೂ ಖನಿಜ ಸಮೃದ್ಧ ಭೂಮಿಗಳ ಮೇಲೆ ತೆರಿಗೆ ವಿಧಿಸುವ ರಾಜ್ಯಗಳ ಸಾಂವಿಧಾನಿಕ ಅಧಿಕಾರವನ್ನು ನಿರ್ಬಂಧಿಸುವ ಮಸೂದೆಯ ನಿಬಂಧನೆಗಳ ಬಗ್ಗೆ ಪರಮೇಶ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಪಟ್ಟಿಯ 49 ಮತ್ತು 50ನೇ ನಮೂದುಗಳ ಅಡಿಯಲ್ಲಿ ರಾಜ್ಯಗಳ ಶಾಸಕಾಂಗ ಮತ್ತು ಹಣಕಾಸು ಅಧಿಕಾರಗಳನ್ನು ದೃಢಪಡಿಸಿದ್ದ ಸುಪ್ರೀಂ ಕೋರ್ಟ್‌ನ 2024ರ ಮಹತ್ವದ ತೀರ್ಪನ್ನು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೇಂದ್ರದ ಈ ಏಕಪಕ್ಷೀಯ ನಿಲುವು ಭಾರತದ ಒಕ್ಕೂಟ ವ್ಯವಸ್ಥೆಗೆ ಗಂಭೀರ ಕಳವಳಕಾರಿ ವಿಷಯವಾಗಿದೆ ಎಂದು ಅಭಿಪ್ರಾಯಪಟ್ಟಿರುವ ಡಿಸಿಎಂ, ಎಲ್ಲಾ ರಾಜ್ಯ ಸರ್ಕಾರಗಳೊಂದಿಗೆ ಅರ್ಥಪೂರ್ಣ ಸಮಾಲೋಚನೆ ನಡೆಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಖನಿಜ ಹಿತಾಸಕ್ತಿ ಹಾಗೂ ರಾಜ್ಯಗಳ ಹಣಕಾಸು ಸ್ವಾಯತ್ತತೆ ಎರಡನ್ನೂ ರಕ್ಷಿಸುವ ಒಕ್ಕೂಟ ಸಹಕಾರದ ತತ್ವವನ್ನು ಎತ್ತಿಹಿಡಿಯಬೇಕು ಮತ್ತು ಒಮ್ಮತ ಆಧಾರಿತ ಚೌಕಟ್ಟನ್ನು ರೂಪಿಸಬೇಕು ಎಂದು ಪರಮೇಶ್ವರ್ ತಮ್ಮ ಪತ್ರದಲ್ಲಿ ಒತ್ತಿ ಹೇಳಿದ್ದಾರೆ.

BJP ಯುವ ಮೋರ್ಚಾದ ಅಧ್ಯಕ್ಷ ಸ್ಥಾನದಿಂದ ತೇಜಸ್ವಿ ಸೂರ್ಯ ಔಟ್: ಹುದ್ದೆ ಬದಲಾವಣೆ ಬಗ್ಗೆ ಸಂಸದ ಹೇಳಿದ್ದೇನು..?

0

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನೆಯಲ್ಲಿ ಮಹತ್ವದ ಬದಲಾವಣೆ ನಡೆದಿದ್ದು, ಪಕ್ಷದ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಇದರ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಬಿಜೆವೈಎಂ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿದ್ದಾರೆ.

ಈ ಕುರಿತು ತೇಜಸ್ವಿ ಸೂರ್ಯ ಅವರು ತಮ್ಮ ‘ಎಕ್ಸ್‌’ ಖಾತೆಯಲ್ಲಿ ಭಾವನಾತ್ಮಕವಾಗಿ ಬರೆದುಕೊಂಡಿದ್ದು, ಬಿಜೆವೈಎಂನೊಂದಿಗಿನ ತಮ್ಮ 14 ವರ್ಷಗಳ ಪಯಣವನ್ನು ನೆನಪಿಸಿಕೊಂಡಿದ್ದಾರೆ. ತಮ್ಮ ನಂತರ ಯುವ ಘಟಕದ ನಾಯಕತ್ವ ವಹಿಸಿಕೊಂಡಿರುವ ಹೇಮಾಂಗ್‌ ಜೋಶಿ ಅವರನ್ನು ಅಭಿನಂದಿಸಿದ್ದಾರೆ.

ನಗರ ಘಟಕದಲ್ಲಿ ತಳಮಟ್ಟದ ಕಾರ್ಯಕರ್ತನಾಗಿ ತಮ್ಮ ಬಿಜೆವೈಎಂ ಪಯಣ ಆರಂಭಿಸಿದ್ದನ್ನು ಸ್ಮರಿಸಿರುವ ತೇಜಸ್ವಿ ಸೂರ್ಯ, ಈ ಪ್ರಯಾಣವು ಒಂದು ದಿನ ರಾಷ್ಟ್ರೀಯ ಅಧ್ಯಕ್ಷ ಸ್ಥಾನದವರೆಗೆ ಕರೆದೊಯ್ಯುತ್ತದೆ ಎಂದು ತಾವು ಎಂದಿಗೂ ಊಹಿಸಿರಲಿಲ್ಲ ಎಂದು ಹೇಳಿದ್ದಾರೆ.

ತಮ್ಮ ರಾಜಕೀಯ ಪಯಣದಲ್ಲಿ ಮಾರ್ಗದರ್ಶನ ನೀಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್‌. ಸಂತೋಷ್‌ ಅವರಿಗೆ ತೇಜಸ್ವಿ ಸೂರ್ಯ ಕೃತಜ್ಞತೆ ಸಲ್ಲಿಸಿದ್ದಾರೆ.

ಅದೇ ರೀತಿ ಬಿಜೆಪಿ ನಾಯಕರಾದ ತರುಣ್‌ ಚುಗ್‌ ಹಾಗೂ ಸುನಿಲ್‌ ಬನ್ಸಲ್‌ ಅವರು ನೀಡಿದ ಮಾರ್ಗದರ್ಶನಕ್ಕೂ ಧನ್ಯವಾದ ಅರ್ಪಿಸಿದ್ದಾರೆ.

ತಮ್ಮೊಂದಿಗೆ ನಿಂತು, ಮಾರ್ಗದರ್ಶನ ನೀಡಿ, ತಪ್ಪುಗಳನ್ನು ತಿದ್ದಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಧನ್ಯವಾದ ಸಲ್ಲಿಸಿರುವ ತೇಜಸ್ವಿ ಸೂರ್ಯ, ‘ಸ್ಥಾನಗಳು ಬದಲಾಗುತ್ತವೆ, ಶೀರ್ಷಿಕೆಗಳು ಬದಲಾಗುತ್ತವೆ. ಆದರೆ ಒಮ್ಮೆ ಬಿಜೆವೈಎಂ, ಯಾವಾಗಲೂ ಬಿಜೆವೈಎಂ’ ಎಂಬ ಸಂದೇಶವನ್ನು ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಬಿಜೆಪಿಯ ಸಾಂಸ್ಥಿಕ ಬದಲಾವಣೆಗಳ ಭಾಗವಾಗಿ ಬಿಜೆವೈಎಂಗೆ ಹೊಸ ನಾಯಕತ್ವ ತಂಡ ಅಸ್ತಿತ್ವಕ್ಕೆ ಬರುತ್ತಿರುವ ಸಂದರ್ಭದಲ್ಲಿ ತೇಜಸ್ವಿ ಸೂರ್ಯ ಈ ಹೇಳಿಕೆ ನೀಡಿದ್ದಾರೆ. ನೂತನವಾಗಿ ಆಯ್ಕೆಯಾಗಿರುವ ಎಲ್ಲ ಪದಾಧಿಕಾರಿಗಳಿಗೂ ಅವರು ಶುಭಾಶಯ ಕೋರಿದ್ದಾರೆ.

KPSC ನೇಮಕಾತಿ ಅಕ್ರಮ ಪ್ರಕರಣಕ್ಕೆ ED ಮೆಗಾ ಆಪರೇಷನ್: ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ

0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮಂಗಳವಾರ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಕರ್ನಾಟಕ ಮತ್ತು ಗುಜರಾತ್‌ನ ಒಟ್ಟು 21 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು, ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಅಮಾನತುಗೊಂಡಿರುವ KPSC ಸದಸ್ಯ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸ, KPSC ಕಚೇರಿ, ಸದಸ್ಯೆ ಶಾಂತಾ ಹೊಸಮನಿ ಅವರ ನಿವಾಸ ಹಾಗೂ ‘M/s ಎಡುಟೆಸ್ಟ್ ಸೊಲ್ಯೂಷನ್ಸ್’ ಸಂಸ್ಥೆಗೆ ಸೇರಿದ ಸ್ಥಳಗಳ ಮೇಲೂ ED ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದರ ಜೊತೆಗೆ ಪ್ರಕರಣದಲ್ಲಿ ಆರೋಪ ಕೇಳಿಬಂದಿರುವ ಮಧ್ಯವರ್ತಿಗಳು ಹಾಗೂ ನೇಮಕಾತಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳ ನಿವಾಸಗಳಲ್ಲೂ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ದಾಳಿ ವೇಳೆ ಪ್ರಮುಖ ದಾಖಲೆಗಳು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಭಾರಿ ಅಕ್ರಮ ಆರೋಪ

KPSC ಮೂಲಕ ನಡೆದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಪ್ರತಿಯೊಬ್ಬ ಅಭ್ಯರ್ಥಿಯಿಂದ ಸುಮಾರು ₹70ರಿಂದ ₹80 ಲಕ್ಷದವರೆಗೆ ಲಂಚ ಪಡೆಯಲಾಗಿದೆ ಎಂಬ ಆರೋಪವೂ ಪ್ರಕರಣದಲ್ಲಿದೆ.

ಇದರ ಜೊತೆಗೆ ಉತ್ತರ ಪತ್ರಿಕೆಗಳನ್ನು ತಿದ್ದುಪಡಿ ಮಾಡಲಾಗಿದೆ ಹಾಗೂ KPSC ಅಧಿಕಾರಿಗಳ ಸಂಬಂಧಿಕರಿಗೆ ಅಕ್ರಮವಾಗಿ ಹುದ್ದೆಗಳನ್ನು ಕೊಡಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ಈ ಆರೋಪಗಳಿಗೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿದ್ದವು. ಪ್ರಕರಣದ ತನಿಖೆ ಮುಂದುವರಿದ ಬೆನ್ನಲ್ಲೇ ಇದೀಗ ED ಅಧಿಕಾರಿಗಳು ಹಣಕಾಸು ವ್ಯವಹಾರಗಳು ಹಾಗೂ ಅಕ್ರಮ ನೇಮಕಾತಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಶಿವಶಂಕರಪ್ಪ ಸಾಹುಕಾರ್ ಅಮಾನತು

ತಮ್ಮ ಪುತ್ರಿಯರ ಅಕ್ರಮ ನೇಮಕಾತಿಗೆ ನೆರವಾದ ಆರೋಪದ ಹಿನ್ನೆಲೆಯಲ್ಲಿ KPSC ಸದಸ್ಯ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜುಲೈ 13ರಂದು ರಾಜ್ಯಪಾಲರು ಅಮಾನತುಗೊಳಿಸಿದ್ದರು.

ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ನಿವಾಸ ಸೇರಿದಂತೆ ಹಲವು ಸ್ಥಳಗಳ ಮೇಲೆ ED ದಾಳಿ ನಡೆಸಿರುವುದು ಪ್ರಕರಣದ ತನಿಖೆಗೆ ಮತ್ತಷ್ಟು ಮಹತ್ವ ನೀಡಿದೆ. ದಾಳಿ ಹಾಗೂ ದಾಖಲೆಗಳ ಪರಿಶೀಲನೆ ಪೂರ್ಣಗೊಂಡ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದೆ.

ಗವಾಸ್ಕರ್, ಸೆಹ್ವಾಗ್ʼಗೂ ಸ್ಥಾನವಿಲ್ಲ! ಭಾರತದ ಸಾರ್ವಕಾಲಿಕ ಟಾಪ್-3 ಟೆಸ್ಟ್ ಬ್ಯಾಟರ್ʼಗಳನ್ನು ಆಯ್ಕೆ ಮಾಡಿದ ಅಶ್ವಿನ್

0

ನವದೆಹಲಿ: ಸುನಿಲ್ ಗವಾಸ್ಕರ್‌ನಿಂದ ವಿರೇಂದ್ರ ಸೆಹ್ವಾಗ್‌ವರೆಗೆ ಹಲವು ದಿಗ್ಗಜ ಬ್ಯಾಟರ್‌ಗಳು ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತಕ್ಕೆ ಅಮೋಘ ಕೊಡುಗೆ ನೀಡಿದ್ದಾರೆ. ಹೀಗಾಗಿ ಭಾರತದ ಸಾರ್ವಕಾಲಿಕ ಶ್ರೇಷ್ಠ ಮೂವರು ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡುವುದು ಸುಲಭದ ಕೆಲಸವಲ್ಲ. ಆದರೆ ಟೀಂ ಇಂಡಿಯಾದ ಮಾಜಿ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಈ ಸವಾಲನ್ನು ಸ್ವೀಕರಿಸಿದ್ದು, ಅವರ ಆಯ್ಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಅಶ್ವಿನ್ ಮೊದಲು ಭಾರತದ ಐವರು ಶ್ರೇಷ್ಠ ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡಿದ್ದಾರೆ. ಬಳಿಕ ಆ ಪಟ್ಟಿಯನ್ನು ಮೂವರಿಗೆ ಇಳಿಸಿದ್ದಾರೆ. ಆದರೆ ಅಚ್ಚರಿಯ ಸಂಗತಿಯೆಂದರೆ, ಅವರ ಅಂತಿಮ ಟಾಪ್-3 ಪಟ್ಟಿಯಲ್ಲಿ ಭಾರತದ ಮಾಜಿ ದಿಗ್ಗಜ ಬ್ಯಾಟರ್ ಸುನಿಲ್ ಗವಾಸ್ಕರ್‌ಗೆ ಸ್ಥಾನ ಸಿಕ್ಕಿಲ್ಲ.

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಶ್ರೇಷ್ಠ ಬ್ಯಾಟರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಡುವ ಗವಾಸ್ಕರ್ ಅವರನ್ನು ಕೈಬಿಟ್ಟಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ತಮ್ಮ ಆಯ್ಕೆಯನ್ನು ಎಲ್ಲರೂ ಒಪ್ಪಿಕೊಳ್ಳುವುದು ಕಷ್ಟವಾಗಬಹುದು ಎಂಬುದನ್ನು ಅಶ್ವಿನ್ ಕೂಡ ಒಪ್ಪಿಕೊಂಡಿದ್ದಾರೆ.

ಸುನಿಲ್ ಗವಾಸ್ಕರ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 10 ಸಾವಿರ ರನ್ ಪೂರೈಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ 125 ಟೆಸ್ಟ್ ಪಂದ್ಯಗಳನ್ನಾಡಿರುವ ಗವಾಸ್ಕರ್, 51.12ರ ಸರಾಸರಿಯಲ್ಲಿ 10,122 ರನ್ ಗಳಿಸಿದ್ದಾರೆ. ಇದರಲ್ಲಿ 34 ಶತಕ ಹಾಗೂ 45 ಅರ್ಧಶತಕಗಳು ಸೇರಿವೆ. ಬಲಿಷ್ಠ ವೆಸ್ಟ್ ಇಂಡೀಸ್ ಬೌಲಿಂಗ್ ದಾಳಿಯ ವಿರುದ್ಧವೇ 13 ಶತಕಗಳನ್ನು ಸಿಡಿಸಿರುವುದು ಅವರ ಬ್ಯಾಟಿಂಗ್ ಸಾಮರ್ಥ್ಯಕ್ಕೆ ಪ್ರಮುಖ ಸಾಕ್ಷಿಯಾಗಿದೆ. ಅವರ ಗರಿಷ್ಠ ಸ್ಕೋರ್ 236 ರನ್.

ಇನ್ನು ಸ್ಪೋಟಕ ಆರಂಭಿಕ ಬ್ಯಾಟರ್ ವಿರೇಂದ್ರ ಸೆಹ್ವಾಗ್ ಕೂಡ ಅಶ್ವಿನ್ ಅವರ ಟಾಪ್-3 ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಟೆಸ್ಟ್ ಕ್ರಿಕೆಟ್‌ನಲ್ಲಿ ಎರಡು ತ್ರಿಶತಕಗಳನ್ನು ಬಾರಿಸಿದ ಭಾರತದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆ ಸೆಹ್ವಾಗ್ ಅವರದ್ದಾಗಿದೆ. ಎದುರಾಳಿ ತಂಡದ ಬೌಲರ್‌ಗಳನ್ನು ಆರಂಭದಿಂದಲೇ ಒತ್ತಡಕ್ಕೆ ಸಿಲುಕಿಸುತ್ತಿದ್ದ ಸೆಹ್ವಾಗ್ ಅವರ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿ ಕ್ರಿಕೆಟ್ ಅಭಿಮಾನಿಗಳಲ್ಲಿ ಇಂದಿಗೂ ಜನಪ್ರಿಯವಾಗಿದೆ.

ಅಶ್ವಿನ್ ಅವರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. ಟೆಸ್ಟ್ ಕ್ರಿಕೆಟ್‌ನಲ್ಲಿ 200ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿರುವ ಸಚಿನ್, 53.78ರ ಸರಾಸರಿಯಲ್ಲಿ 15,921 ರನ್ ಗಳಿಸಿದ್ದಾರೆ. ಅವರ ಖಾತೆಯಲ್ಲಿ 51 ಶತಕ ಹಾಗೂ 68 ಅರ್ಧಶತಕಗಳಿವೆ.

ಎರಡನೇ ಸ್ಥಾನವನ್ನು ರಾಹುಲ್ ದ್ರಾವಿಡ್ ಅವರಿಗೆ ನೀಡಲಾಗಿದೆ. ‘ದಿ ವಾಲ್’ ಎಂದೇ ಖ್ಯಾತರಾಗಿರುವ ದ್ರಾವಿಡ್ 164 ಟೆಸ್ಟ್ ಪಂದ್ಯಗಳಿಂದ 52.31ರ ಸರಾಸರಿಯಲ್ಲಿ 13,288 ರನ್ ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಎಸೆತಗಳನ್ನು ಎದುರಿಸಿದ ದಾಖಲೆ ದ್ರಾವಿಡ್ ಅವರ ಹೆಸರಿನಲ್ಲಿದ್ದು, ಒಟ್ಟು 31,258 ಎಸೆತಗಳನ್ನು ಎದುರಿಸಿದ್ದಾರೆ. ಅಲ್ಲದೆ, ಕ್ರೀಸ್‌ನಲ್ಲಿ 44,152 ನಿಮಿಷಗಳ ಕಾಲ ಕಳೆದ ದಾಖಲೆ ಕೂಡ ಅವರದ್ದಾಗಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ದ್ರಾವಿಡ್ 36 ಶತಕಗಳನ್ನು ಬಾರಿಸಿದ್ದಾರೆ.

ಅಶ್ವಿನ್ ಅವರ ಟಾಪ್-3 ಪಟ್ಟಿಯ ಮೂರನೇ ಸ್ಥಾನದಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದಾರೆ. ಒಟ್ಟು 123 ಟೆಸ್ಟ್ ಪಂದ್ಯಗಳಲ್ಲಿ 46.85ರ ಸರಾಸರಿಯಲ್ಲಿ 9,230 ರನ್ ಗಳಿಸಿರುವ ಕೊಹ್ಲಿ, ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ನಾಯಕನಾಗಿ ಭಾರತ ತಂಡವನ್ನು ಅತಿ ಹೆಚ್ಚು ಟೆಸ್ಟ್ ಪಂದ್ಯಗಳಲ್ಲಿ ಗೆಲ್ಲಿಸಿದ ನಾಯಕ ಎಂಬ ಹೆಗ್ಗಳಿಕೆಯೂ ಕೊಹ್ಲಿ ಅವರದ್ದಾಗಿದೆ.

ಹೀಗಾಗಿ ಅಶ್ವಿನ್ ಅವರ ಟಾಪ್-3 ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಹಾಗೂ ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದರೆ, ಸುನಿಲ್ ಗವಾಸ್ಕರ್ ಮತ್ತು ವಿರೇಂದ್ರ ಸೆಹ್ವಾಗ್ ಅವರಂತಹ ದಿಗ್ಗಜರಿಗೆ ಸ್ಥಾನ ಸಿಗದಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಚರ್ಚೆಗೆ ಕಾರಣವಾಗಿದೆ.

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

0

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಮನೆಯ ಕೋಣೆಯಲ್ಲಿ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಅವರ ನಾಲ್ಕು ಹಾಗೂ ಎರಡು ವರ್ಷದ ಹೆಣ್ಣುಮಕ್ಕಳು ಹಾಸಿಗೆಯ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತ ಮಹಿಳೆಯನ್ನು ನಿದಾ ಖಾತೂನ್ (37) ಎಂದು ಗುರುತಿಸಲಾಗಿದೆ. ಅವರ ನಾಲ್ಕು ವರ್ಷದ ಪುತ್ರಿ ಸರಿಯಾ ಖಾತೂನ್ ಹಾಗೂ ಎರಡು ವರ್ಷದ ಪುತ್ರಿ ಸಿದ್ರಾ ಖಾತೂನ್ ಮೃತಪಟ್ಟಿದ್ದಾರೆ.

ಬಾಗಿಲು ತೆರೆಯದಿದ್ದಾಗ ಬೆಳಕಿಗೆ:

ಸೋಮವಾರ ಈ ಘಟನೆ ಬೆಳಕಿಗೆ ಬಂದಿದೆ. ಮನೆಯ ಕೋಣೆಯ ಬಾಗಿಲು ಬಹಳ ಸಮಯದಿಂದ ಒಳಗಿನಿಂದ ಮುಚ್ಚಿದ್ದನ್ನು ಕುಟುಂಬಸ್ಥರು ಗಮನಿಸಿದ್ದಾರೆ. ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಕಿಟಕಿಯ ಮೂಲಕ ನೋಡಿದಾಗ, ಹಾಸಿಗೆಯ ಮೇಲೆ ಇಬ್ಬರು ಮಕ್ಕಳು ಮೃತಪಟ್ಟಿರುವುದು ಹಾಗೂ ನಿದಾ ಖಾತೂನ್ ನೇಣು ಬಿಗಿದ ಸ್ಥಿತಿಯಲ್ಲಿ ಇರುವುದು ಕಂಡುಬಂದಿದೆ.

ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಮೂವರು ಮೃತಪಟ್ಟಿರುವ ರೀತಿ ಅನುಮಾನಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಕೊಲೆ ಹಾಗೂ ಆತ್ಮಹತ್ಯೆ ಎರಡೂ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ನಿದಾ ಖಾತೂನ್ ಆತ್ಮಹತ್ಯೆ ಮಾಡಿಕೊಂಡರೇ ಅಥವಾ ಅವರನ್ನು ಮೊದಲು ಹತ್ಯೆ ಮಾಡಿ ಬಳಿಕ ನೇಣು ಹಾಕಲಾಗಿದೆಯೇ ಎಂಬ ಬಗ್ಗೆಯೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಅವರ ದೇಹದ ಕೆಲವು ಭಾಗಗಳು ಹಾಸಿಗೆಯನ್ನು ಸ್ಪರ್ಶಿಸುತ್ತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಸಾವಿನ ಸಂದರ್ಭದ ಕುರಿತು ಹಲವು ಅನುಮಾನಗಳು ಮೂಡಿವೆ.

ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಸಾಧ್ಯತೆಯ ಬಗ್ಗೆಯೂ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಸಾವಿಗೆ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ.

ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಮಕ್ಕಳ ಸಾವಿನ ನಿಖರ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿದಾ ಖಾತೂನ್ ಅವರ ಪತಿ ಮೊಹಮ್ಮದ್ ಶಾಹಿದ್ ಕಳೆದ ಒಂದು ವರ್ಷದಿಂದ ಸೌದಿ ಅರೇಬಿಯಾದಲ್ಲಿ ವಾಸಿಸುತ್ತಿದ್ದು, ಅಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.

ನಿದಾ ಅವರು ತಮ್ಮ ಇಬ್ಬರು ಮಕ್ಕಳೊಂದಿಗೆ ಅತ್ತೆ-ಮಾವನ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಮೂವರ ಮೃತದೇಹಗಳನ್ನು ವಶಕ್ಕೆ ಪಡೆದು, ವಿಧಿವಿಜ್ಞಾನ ತಜ್ಞರ ಮೂಲಕ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಸದ್ಯ ಕುಟುಂಬಸ್ಥರು ಹಾಗೂ ಸಂಬಂಧಿಕರಿಂದ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ಮೂವರ ಸಾವಿನ ಹಿಂದಿರುವ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

ಕರ್ನಾಟಕ SIR ಮತದಾರರ ಪಟ್ಟಿ: 1.08 ಕೋಟಿ ಹೆಸರುಗಳಿಗೆ ಕುತ್ತು? ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ

0

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮನೆ-ಮನೆ ಭೇಟಿ ಕಾರ್ಯ ಸೋಮವಾರ ಮುಕ್ತಾಯಗೊಂಡಿದೆ.

ಜೂನ್ 30ರಿಂದ ಆರಂಭವಾಗಿದ್ದ ಈ ಪ್ರಕ್ರಿಯೆಯಲ್ಲಿ ರಾಜ್ಯಾದ್ಯಂತ ಕೋಟ್ಯಂತರ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಅವುಗಳ ಡಿಜಿಟಲೀಕರಣ ಕಾರ್ಯವೂ ಬಹುತೇಕ ಪೂರ್ಣಗೊಂಡಿದೆ.

SIR ಪ್ರಕ್ರಿಯೆಯಡಿ ರಾಜ್ಯದಲ್ಲಿ ಒಟ್ಟು 5,54,32,314 ಗಣತಿ ನಮೂನೆಗಳನ್ನು ವಿತರಿಸಲಾಗಿದೆ. ಈ ಪೈಕಿ 4,46,00,369 ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಈ ವೇಳೆ ಒಟ್ಟು 1,08,31,945 ASDDO ಮತದಾರರು ಪತ್ತೆಯಾಗಿದ್ದಾರೆ.

ASDDO ಮತದಾರರು ಎಂದರೆ ಯಾರು?

ASDDO ಎಂದರೆ Absent, Shifted, Dead, Duplicate and Others ಎಂಬ ವರ್ಗಗಳನ್ನು ಒಳಗೊಂಡಿದೆ.

ಅಂದರೆ,

  • ಗೈರುಹಾಜರಾಗಿರುವವರು
  • ಶಾಶ್ವತವಾಗಿ ಸ್ಥಳಾಂತರಗೊಂಡವರು
  • ಮೃತಪಟ್ಟವರು
  • ನಕಲಿ ಅಥವಾ ಡುಪ್ಲಿಕೇಟ್ ಹೆಸರುಗಳು
  • ಇತರೆ ಕಾರಣಗಳಿಂದ ಪರಿಶೀಲನೆ ಅಗತ್ಯವಿರುವ ಮತದಾರರು

ಈ ವರ್ಗಕ್ಕೆ ಸೇರುತ್ತಾರೆ.

7 ಲಕ್ಷಕ್ಕೂ ಹೆಚ್ಚು ಡುಪ್ಲಿಕೇಟ್ ಮತದಾರರು ಪತ್ತೆ!

SIR ಪ್ರಕ್ರಿಯೆಯಲ್ಲಿ ಲಭ್ಯವಾದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ 15,28,985 ಮತದಾರರು ನಾಪತ್ತೆಯಾಗಿರುವುದು ಪತ್ತೆಯಾಗಿದೆ. 65,61,607 ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿರುವುದು ಕಂಡುಬಂದಿದೆ.

ಇನ್ನು 16,38,839 ಮತದಾರರು ಮೃತಪಟ್ಟಿರುವುದು, 7,07,792 ಡುಪ್ಲಿಕೇಟ್ ಮತದಾರರು ಹಾಗೂ 3,94,722 ಇತರೆ ವರ್ಗದ ಮತದಾರರು ಪತ್ತೆಯಾಗಿದ್ದಾರೆ.

ಈ ಅಂಕಿ-ಅಂಶಗಳ ಆಧಾರದಲ್ಲಿ ಸುಮಾರು 1.08 ಕೋಟಿ ಮತದಾರರ ಹೆಸರುಗಳು ಮೊದಲ ಕರಡು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ. ಆದರೆ ಇದು ಅಂತಿಮ ನಿರ್ಧಾರವಲ್ಲ. ಪರಿಶೀಲನೆ ಹಾಗೂ ಆಕ್ಷೇಪಣೆಗಳ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ಯಾರ ಹೆಸರು ಪಟ್ಟಿಯಲ್ಲಿ ಉಳಿಯಲಿದೆ, ಯಾರ ಹೆಸರು ಕೈಬಿಡಲಾಗುತ್ತದೆ ಎಂಬುದು ಸ್ಪಷ್ಟವಾಗಲಿದೆ.

ಆಗಸ್ಟ್ 24ಕ್ಕೆ ಮೊದಲ ಕರಡು ಪಟ್ಟಿ:

SIR ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 24ರಂದು ಪ್ರಕಟಿಸಲು ನಿಗದಿಪಡಿಸಲಾಗಿದೆ.

ಕರಡು ಪಟ್ಟಿಯಲ್ಲಿ ತಮ್ಮ ಹೆಸರು ಕಾಣಿಸದಿದ್ದರೆ ಅಥವಾ ಮತದಾರರ ವಿವರಗಳಲ್ಲಿ ಯಾವುದೇ ತಪ್ಪು ಕಂಡುಬಂದರೆ, ಸಂಬಂಧಪಟ್ಟ ಮತದಾರರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ.

ಸೆಪ್ಟೆಂಬರ್ 23ರವರೆಗೆ ಆಕ್ಷೇಪಣೆ ಸಲ್ಲಿಸಬಹುದು:

ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಮತದಾರರು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಹಾಗೂ ಅಗತ್ಯ ದಾಖಲೆಗಳನ್ನು ನೀಡಲು ಅವಕಾಶವಿದೆ.

ಈ ಅವಧಿಯಲ್ಲಿ ಸಲ್ಲಿಕೆಯಾಗುವ ಆಕ್ಷೇಪಣೆಗಳು ಮತ್ತು ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

ಪರಿಶೀಲನೆ, ಆಕ್ಷೇಪಣೆ ಹಾಗೂ ತಿದ್ದುಪಡಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ.

ಹೀಗಾಗಿ ಆಗಸ್ಟ್ 24ರಂದು ಪ್ರಕಟವಾಗುವ ಕರಡು ಪಟ್ಟಿಯಲ್ಲಿ ಹೆಸರು ಕಾಣಿಸದಿದ್ದರೆ ಮತದಾರರು ಆತಂಕಪಡುವ ಅಗತ್ಯವಿಲ್ಲ. ನಿಗದಿತ ಅವಧಿಯಲ್ಲಿ ತಮ್ಮ ಹಕ್ಕನ್ನು ಪ್ರತಿಪಾದಿಸಿ ಅಗತ್ಯ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದು.

SIR ಪ್ರಕ್ರಿಯೆಯ ಪ್ರಮುಖ ಉದ್ದೇಶ ಮತದಾರರ ಪಟ್ಟಿಯನ್ನು ಪರಿಶುದ್ಧಗೊಳಿಸುವುದು ಹಾಗೂ ಅರ್ಹ ಮತದಾರರ ಹೆಸರುಗಳು ಮಾತ್ರ ಪಟ್ಟಿಯಲ್ಲಿ ಖಚಿತವಾಗುವಂತೆ ಮಾಡುವುದು. ನಾಪತ್ತೆ, ಸ್ಥಳಾಂತರ, ಮರಣ ಹಾಗೂ ಡುಪ್ಲಿಕೇಟ್ ಹೆಸರುಗಳಂತಹ ದಾಖಲೆಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.

ಹನೂರು ಭಾಗದ ಜನರೇ ಗಮನಿಸಿ: ಇಂದು 8 ಗಂಟೆ ಪವರ್‌ ಕಟ್!

0

ಹನೂರು: ಹನೂರು ಉಪವಿಭಾಗದ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಚೆಸ್ಕಾಂ ವತಿಯಿಂದ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ವಿದ್ಯುತ್ ಕಡಿತ ಘೋಷಿಸಲಾಗಿದೆ.

ಈ ಪ್ರದೇಶಗಳಲ್ಲಿ ಪವರ್‌ ಕಟ್:

ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬಂಡಳ್ಳಿ, ಅಜ್ಜೀಪುರ, ರಾಮಾಪುರ, ಕೌದಳ್ಳಿ ಮತ್ತು ಮಾಟಳ್ಳಿ ಸೇರಿದಂತೆ ಸಂಬಂಧಿತ ಫೀಡರ್‌ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಇದರಿಂದ ಈ ಪ್ರದೇಶಗಳ ಮನೆಗಳು, ಅಂಗಡಿಗಳು, ಕಚೇರಿಗಳು ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ಸುಮಾರು 8 ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್‌ ಅವಲಂಬಿತ ದೈನಂದಿನ ಹಾಗೂ ವ್ಯಾಪಾರ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ಮುಂಚಿತವಾಗಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

ನಿರ್ವಹಣಾ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ವಿದ್ಯುತ್ ಕಂಬಗಳು, ಹರಿದು ಬಿದ್ದಿರುವ ವಿದ್ಯುತ್ ತಂತಿಗಳು ಹಾಗೂ ಇತರ ವಿದ್ಯುತ್ ಉಪಕರಣಗಳ ಸಮೀಪ ತೆರಳದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ನಿಗದಿತ ಸಮಯಕ್ಕಿಂತ ಮೊದಲೇ ಕಾಮಗಾರಿ ಪೂರ್ಣಗೊಂಡಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ ವಿದ್ಯುತ್ ಸರಬರಾಜು ಪುನರಾರಂಭಿಸುವ ಸಾಧ್ಯತೆಯಿದೆ.

ವಿದ್ಯುತ್ ವ್ಯತ್ಯಯಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಥವಾ ತುರ್ತು ಸಹಾಯಕ್ಕಾಗಿ ಹನೂರು ಉಪವಿಭಾಗದ 08224-295882 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಂಗಸ್ವಾಮಿ ತಿಳಿಸಿದ್ದಾರೆ.

ಸಾರ್ವಜನಿಕರು ಸಹಕರಿಸುವಂತೆ ಚೆಸ್ಕಾಂ ಮನವಿ ಮಾಡಿದೆ.