ದಾವಣಗೆರೆ: ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ಇದೀಗ ನಿರ್ಣಾಯಕ ಹಂತ ತಲುಪಿದೆ. ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದಿರುವ ಶ್ರೀಗಳ ವಿರುದ್ಧ ಪೊಲೀಸರು ಕಠಿಣ ನಿಲುವು ತಳೆದಿದ್ದು, ಜಾಮೀನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಮತ್ತು ಹಲ್ಲೆ ಆರೋಪದಡಿ ಕಳೆದ ವಾರ ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆದರೆ ಪ್ರಕರಣ ದಾಖಲಾಗುವ ಮೊದಲುವೇ ಅವರು ನಿರೀಕ್ಷಣಾ ಜಾಮೀನು ಪಡೆದಿದ್ದರು.
ಈ ಬೆಳವಣಿಗೆಯ ನಡುವೆಯೇ ತನಿಖಾಧಿಕಾರಿ ಸುರೇಶ್ ಸಗರಿ ಇದೀಗ ಜಾಮೀನು ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಗಳನ್ನು ಒಳಗೊಂಡ ವರದಿಯನ್ನು ಹರಿಹರ ಪೊಲೀಸರು ಸೀಲ್ಡ್ ಕವರ್ನಲ್ಲಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.
ಪೊಲೀಸರ ಅರ್ಜಿಯ ವಿಚಾರಣೆಯನ್ನು ಮೇ 29ರಂದು ದಾವಣಗೆರೆಯ ವಿಶೇಷ ಪೋಕ್ಸೊ ನ್ಯಾಯಾಲಯ ನಡೆಸಲಿದ್ದು, ನ್ಯಾಯಾಲಯದ ತೀರ್ಪಿನ ಮೇಲೆ ಮುಂದಿನ ಕಾನೂನು ಪ್ರಕ್ರಿಯೆ ಅವಲಂಬಿತವಾಗಿದೆ. ಜಾಮೀನು ರದ್ದಾದರೆ ವಚನಾನಂದ ಶ್ರೀಗಳ ಬಂಧನ ಸಾಧ್ಯತೆ ಹೆಚ್ಚಲಿದೆ.
ಪ್ರಕರಣದ ಪ್ರಕಾರ, 16 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದೆ. ಸಂತ್ರಸ್ತ ಬಾಲಕನ ತಾಯಿ ಮೊದಲಿಗೆ ಲಕ್ಷ್ಮೇಶ್ವರ ಠಾಣೆಯಲ್ಲಿ ದೂರು ನೀಡಿದ್ದು, ನಂತರ ಪ್ರಕರಣವನ್ನು ಹರಿಹರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿತ್ತು.
ಹರಿಹರ ಪಂಚಮಸಾಲಿ ಪೀಠದಿಂದ ಸ್ವಾಮೀಜಿಯನ್ನು ಪದಚ್ಯುತಗೊಳಿಸಿದ ಕೆಲವೇ ದಿನಗಳಲ್ಲಿ ಈ ಪ್ರಕರಣ ದಾಖಲಾಗಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.

