ಬೆಂಗಳೂರು: ರಾಜಧಾನಿಯ ಅತ್ಯಂತ ಜನನಿಬಿಡ ಹಾಗೂ ಸೂಕ್ಷ್ಮ ಪ್ರದೇಶವಾಗಿರುವ ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಮತ್ತೆ ಆರಂಭವಾಗಿದೆ. ಇತ್ತೀಚೆಗೆ ಜಿಬಿಎ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ನಡೆದ ಹಲ್ಲೆ ಬಳಿಕ ಸ್ಥಗಿತಗೊಂಡಿದ್ದ ಕಾರ್ಯಾಚರಣೆ ಇದೀಗ ಪೊಲೀಸರ ಭದ್ರತೆಯೊಂದಿಗೆ ಪುನಾರಂಭಗೊಂಡಿದೆ.
ಜಿಬಿಎ ಅಧಿಕಾರಿಗಳ ತಂಡ ಶಿವಾಜಿನಗರದ ರಸೆಲ್ ಮಾರ್ಕೆಟ್ ರಸ್ತೆ, ಶಿವಾಜಿನಗರ ಚರ್ಚ್ ರಸ್ತೆ ಹಾಗೂ ಬೌರಿಂಗ್ ಆಸ್ಪತ್ರೆ ರಸ್ತೆಗಳಲ್ಲಿ ತೆರವು ಕಾರ್ಯ ನಡೆಸುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪುಲಿಕೇಶಿನಗರ ಎಸಿಪಿ, ಕಮರ್ಷಿಯಲ್ ಸ್ಟ್ರೀಟ್ ಹಾಗೂ ಶಿವಾಜಿನಗರ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.
ಜುಲೈ 21ರಂದು ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ ಪುಂಡರ ಗುಂಪೊಂದು ಜಿಬಿಎ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿತ್ತು. ಈ ಘಟನೆಯ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ವಾರಗಳ ಕಾಲ ತೆರವು ಕಾರ್ಯ ಸ್ಥಗಿತಗೊಳಿಸಲಾಗಿತ್ತು.
ಶಿವಾಜಿನಗರ ಬಸ್ ನಿಲ್ದಾಣದ ಬಳಿ ಬೆಳಗ್ಗೆ ಆರಂಭವಾಗಿದ್ದ ತೆರವು ಕಾರ್ಯಾಚರಣೆ ವೇಳೆ ಮಧ್ಯಾಹ್ನ ಸುಮಾರು 12:30ರ ವೇಳೆಗೆ ಇನ್ನೋವಾ ಕಾರಿನಲ್ಲಿ ಬಂದ ಬಸವರಾಜ್ ಪಡುಕೋಟೆ ಹಾಗೂ ಆತನ ಬೆಂಬಲಿಗರು ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದರು ಎಂದು ಆರೋಪಿಸಲಾಗಿದೆ.
ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ಮಾಧವ್ ರಾವ್ ಅವರ ಮೇಲೆ ಹಲ್ಲೆ ನಡೆಸಲಾಗಿದ್ದು, ತಳ್ಳಿದ ರಭಸಕ್ಕೆ ಅವರು ಕೆಳಗೆ ಬಿದ್ದಿದ್ದರು. ಬಳಿಕ ಹೆಲ್ಮೆಟ್ ಹಾಗೂ ಪ್ಲಾಸ್ಟಿಕ್ ಚೇರ್ಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
ಇದೇ ವೇಳೆ ಮಹಿಳಾ ಅಧಿಕಾರಿಯೊಬ್ಬರ ಮೇಲೆ ಪೆಪ್ಪರ್ ಸ್ಪ್ರೇ ಬಳಸಿ ಭಯದ ವಾತಾವರಣ ಸೃಷ್ಟಿಸಲಾಗಿತ್ತು ಎಂದು ಆರೋಪಿಸಲಾಗಿತ್ತು.
ಘಟನೆ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ತನಿಖೆ ನಡೆಸಿ, ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ ಸೇರಿ 12 ಮಂದಿಯನ್ನು ಬಂಧಿಸಿದ್ದರು. ಈ ಪೈಕಿ ಐವರು ಪ್ರಮುಖ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಹಲ್ಲೆ ಪ್ರಕರಣದ ಬಳಿಕ ಇದೀಗ ಮತ್ತೆ ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ.

