Home Blog

ಲಂಚದ ಬಲೆಗೆ ಬಿದ್ದ ಪುರಸಭೆ ವ್ಯವಹಾರ: ಹಣ ಪಡೆಯುತ್ತಿದ್ದ ಮಧ್ಯವರ್ತಿ ಪರಾರಿ!

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಖಾತೆ ಜಮಾಬಂಧಿ ಪತ್ರ ನೀಡಲು ಲಂಚದ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಶಿರಹಟ್ಟಿ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದು, ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಧ್ಯವರ್ತಿಯಾಗಿ ಆರೋಪಿಸಲಾದ ವಿನೋದ ಕಪ್ಪತ್ತನವರ ಪರಾರಿಯಾಗಿದ್ದಾನೆ.

ಮಾಂತೇಶ ಎಂಬುವವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಹಟ್ಟಿ ಪಟ್ಟಣ ಪಂಚಾಯಿತಿಯ ಮಾಜಿ ಮುಖ್ಯಾಧಿಕಾರಿ ಸವಿತಾ ತಾಂಬ್ರೆ ವಿರುದ್ಧವೂ ಗದಗ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರಿಂದ ಖಾತೆ ಜಮಾಬಂಧಿ ಪತ್ರ ನೀಡಲು ₹30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಅದರ ಭಾಗವಾಗಿ ₹5 ಸಾವಿರ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಂಚ ಸ್ವೀಕರಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ.

ದಾಳಿ ವೇಳೆ ಆರೋಪಿ ವಿನೋದ ಕಪ್ಪತ್ತನವರ ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಲೋಕಾಯುಕ್ತ ಡಿಎಸ್‌ಪಿ ಲೋಕೇಶ್ ನೇತೃತ್ವದ ತಂಡ ಗುರುವಾರ ತಡರಾತ್ರಿವರೆಗೆ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿತು.

“ದೂರು ಆಧರಿಸಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದ್ದು, ಪರಾರಿಯಾಗಿರುವ ಆರೋಪಿಯ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ.”

– ಲೋಕಾಯುಕ್ತ ಅಧಿಕಾರಿಗಳು

ಧರ್ಮ ರಕ್ಷಣೆಗೆ ಗುರು ಮಾರ್ಗವೇ ಶ್ರೇಷ್ಠ: ದುಲಾ ಹಳದೀಪುರ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: “ಗುರು-ಶಿಷ್ಯ ಪರಂಪರೆಯೇ ಭಾರತೀಯ ಧರ್ಮ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕತೆಯ ಭದ್ರ ಬುನಾದಿಯಾಗಿದೆ. ‘ಹರ ಮುನಿದರೆ ಗುರು ಕಾಯುವನು’ ಎಂಬಂತೆ ಗುರು ಶಿಷ್ಯನ ಬದುಕಿಗೆ ದಾರಿದೀಪವಾಗಿದ್ದು, ಗುರು ತೋರಿದ ಧರ್ಮಮಾರ್ಗದಲ್ಲಿಯೇ ರಾಷ್ಟ್ರ ಮತ್ತು ಸಂಸ್ಕೃತಿಯ ರಕ್ಷಣೆ ಸಾಧ್ಯ,” ಎಂದು ಹಿಂದೂ ಜನಜಾಗೃತಿ ಸಮಿತಿಯ ವಕ್ತಾರೆ ವಿದುಲಾ ಹಳದೀಪುರ ಹೇಳಿದರು.

ಪಟ್ಟಣದ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದಲ್ಲಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ಗುರುಪೂರ್ಣಿಮೆ ಮಹೋತ್ಸವದಲ್ಲಿ ಅವರು ಮಾತನಾಡಿದರು.

ಗುರುಗಳು ಜ್ಞಾನ ಹಾಗೂ ಆಧ್ಯಾತ್ಮಿಕ ಶಕ್ತಿಯ ಭಂಡಾರವಾಗಿದ್ದು, ಸಾಮಾನ್ಯ ವ್ಯಕ್ತಿಯನ್ನೂ ಆದರ್ಶ ವ್ಯಕ್ತಿತ್ವವಾಗಿ ರೂಪಿಸುವ ಸಾಮರ್ಥ್ಯ ಹೊಂದಿದ್ದಾರೆ. “ಧರ್ಮೋ ರಕ್ಷತಿ ರಕ್ಷಿತಃ” ಎಂಬ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್ಬರೂ ಧರ್ಮ ಹಾಗೂ ರಾಷ್ಟ್ರ ರಕ್ಷಣೆಗೆ ಕಂಕಣಬದ್ಧರಾಗಬೇಕು ಎಂದು ಹೇಳಿದರು.

ದೇಶ ಹಾಗೂ ಧರ್ಮದ ಮೇಲೆ ವಿವಿಧ ಸವಾಲುಗಳು ಎದುರಾಗುತ್ತಿರುವ ಸಂದರ್ಭದಲ್ಲಿ ಹಿಂದೂ ಸಮಾಜವು ಸ್ವಬೋಧ ಮತ್ತು ಶತ್ರುಬೋಧ ಬೆಳೆಸಿಕೊಂಡು ಸಂಘಟಿತರಾಗಬೇಕಿದೆ. ಸಮಾಜ ಸಂಘಟಿತವಾದಾಗ ಮಾತ್ರ ರಾಷ್ಟ್ರ ಮತ್ತು ಧರ್ಮದ ರಕ್ಷಣೆಗೆ ಬಲ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.

ಪ್ರತಿಯೊಬ್ಬರೂ ಈಶ್ವರ ಪೂಜೆ, ಧ್ಯಾನ ಮತ್ತು ಪ್ರಾರ್ಥನೆಯ ಮೂಲಕ ಆಧ್ಯಾತ್ಮಿಕ ಶಕ್ತಿಯನ್ನು ವೃದ್ಧಿಸಿಕೊಳ್ಳಬೇಕು. ಮಕ್ಕಳಲ್ಲಿ ಬಾಲ್ಯದಿಂದಲೇ ನೈತಿಕ ಮೌಲ್ಯಗಳು, ಧರ್ಮಬೋಧನೆ ಹಾಗೂ ಗುರು-ಹಿರಿಯರ ಬಗ್ಗೆ ಗೌರವ ಬೆಳೆಸಬೇಕು ಎಂದು ಕರೆ ನೀಡಿದರು.

ಸಮಾಜಕ್ಕೆ ಒಳಿತಾಗುವ ಗುಣಗಳನ್ನು ಬೆಳೆಸಿಕೊಳ್ಳುವ ಜೊತೆಗೆ ಭಾರತದ ಸಾಂಸ್ಕೃತಿಕ ಪರಂಪರೆ ಉಳಿಸುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು. ಭಾರತ ಮಾತೆ, ಗೋ ರಕ್ಷಣೆ ಹಾಗೂ ಸಂಸ್ಕೃತಿ ಸಂರಕ್ಷಣೆಯಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಮುಂಬರುವ ತುರ್ತು ಪರಿಸ್ಥಿತಿಗಳು ಹಾಗೂ ಪ್ರಕೃತಿ ವಿಕೋಪಗಳನ್ನು ಗಮನದಲ್ಲಿಟ್ಟುಕೊಂಡು ಪ್ರತಿಯೊಬ್ಬರೂ ಪ್ರಥಮ ಚಿಕಿತ್ಸೆ, ಅಗ್ನಿಶಾಮಕ ಹಾಗೂ ಸ್ವರಕ್ಷಣಾ ತರಬೇತಿ ಪಡೆಯಬೇಕು ಎಂದು ಸಲಹೆ ನೀಡಿದರು.

ಯುವ ಮುಖಂಡ ಆದೇಶ ಹುಲಗೂರು ಮಾತನಾಡಿ, ಜಾತಿ-ಪಂಗಡಗಳ ಭೇದ ಮರೆತು ಹಿಂದೂ ಸಮಾಜ ಸಂಘಟಿತವಾದಾಗ ಮಾತ್ರ ಸಮಾಜದ ಮೇಲಿನ ಅನ್ಯಾಯ ಮತ್ತು ದೌರ್ಜನ್ಯಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವ್ಯಾಸಪೂಜೆ, ಗುರುಪೂಜೆ, ಧರ್ಮರಕ್ಷಕರ ಸತ್ಕಾರ, ಸ್ವರಕ್ಷಣಾ ಕೌಶಲ್ಯದ ಪ್ರಾತ್ಯಕ್ಷಿಕೆ, ಕಿರುಚಿತ್ರ ಹಾಗೂ ಗ್ರಂಥ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು.

ಶಂಕರ ಬ್ಯಾಡಗಿ, ದುಂಡಪ್ಪ ಸವಣೂರ, ಈರಣ್ಣ ಪೂಜಾರ, ವಿರೇಶ ಚಿಂಚಲಿ, ಪ್ರಕಾಶ ಬೆಟಗೇರಿ, ಮುರುಗೇಶ ರುದ್ರಶೆಟ್ಟಿ, ಶೋಭಾ ಇಟಗಿ, ಲಕ್ಷ್ಮೀ ತಟ್ಟಿ, ಬೇಬಿ ರುದ್ರಶೆಟ್ಟಿ, ಗೀತಾ ಬಡಿಗೇರ, ಅನುಸೂಯ ಸಜ್ಜನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಗುರು ತೋರಿದ ಧರ್ಮಮಾರ್ಗದಲ್ಲಿಯೇ ನಡೆಯುವ ಮೂಲಕ ರಾಷ್ಟ್ರ ಮತ್ತು ಸಂಸ್ಕೃತಿಯನ್ನು ರಕ್ಷಿಸಬಹುದು. ಸಮಾಜ ಸಂಘಟಿತವಾದಾಗ ಮಾತ್ರ ಧರ್ಮದ ಮೇಲೆ ಬರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯ.”

– ವಿದುಲಾ ಹಳದೀಪುರ, ವಕ್ತಾರೆ, ಹಿಂದೂ ಜನಜಾಗೃತಿ ಸಮಿತಿ

ಮಳೆಗಾಗಿ ವರ್ತಕರ ಪರ್ಜನ್ಯ ಹೋಮ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ರೈತರ ಬದುಕು ಸುಧಾರಿಸಲಿ ಹಾಗೂ ಉತ್ತಮ ಮಳೆಯಾಗಲಿ ಎಂಬ ಆಶಯದೊಂದಿಗೆ ಹಗರಿಬೊಮ್ಮನಹಳ್ಳಿ ಎಪಿಎಂಸಿ ಆವರಣದಲ್ಲಿ ಆಹಾರ ಧಾನ್ಯ ವರ್ತಕರ ಸಂಘದ ವತಿಯಿಂದ ಗುರುವಾರ ಪರ್ಜನ್ಯ ಹೋಮ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಆಹಾರ ಧಾನ್ಯ ವರ್ತಕರ ಸಂಘದ ಅಧ್ಯಕ್ಷ ಅಂಬಾಡಿ ಮಹೇಶ್, “ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿರುವುದರಿಂದ ರೈತರ ಬದುಕು ಚಿಂತಾಜನಕವಾಗಿದೆ. ಭಾರತವು ಸನಾತನ ಸಂಸ್ಕೃತಿಯ ದೇಶವಾಗಿದ್ದು, ಮಳೆ ಕೊರತೆಯಾದಾಗ ವರುಣ ದೇವನಿಗೆ ಪೂಜೆ-ಹೋಮಗಳನ್ನು ನಡೆಸುವ ಪರಂಪರೆ ಇದೆ. ಅದೇ ನಿಟ್ಟಿನಲ್ಲಿ ಜನಕಲ್ಯಾಣ ಹಾಗೂ ರೈತರ ಹಿತದೃಷ್ಟಿಯಿಂದ ಪರ್ಜನ್ಯ ಹೋಮ ಆಯೋಜಿಸಲಾಗಿದೆ,” ಎಂದು ಹೇಳಿದರು.

ಚೇಂಬರ್ ಆಫ್ ಕಾಮರ್ಸ್ ಉಪಾಧ್ಯಕ್ಷ ಪ್ರಕಾಶ್ ಗೌಡ ಮಾತನಾಡಿ, “ಈ ವೇಳೆಗೆ ಬೆಳೆಗಳು ಉತ್ತಮ ಹಂತದಲ್ಲಿರಬೇಕಾಗಿತ್ತು. ಆದರೆ ಮಳೆಯ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದು, ಮುಂದಿನ ದಿನಗಳಲ್ಲಿ ಎಪಿಎಂಸಿಗೆ ಆಹಾರ ಧಾನ್ಯಗಳ ಆಗಮನವೂ ಕುಂಠಿತವಾಗುವ ಆತಂಕ ಎದುರಾಗಿದೆ. ಈ ಪರಿಸ್ಥಿತಿ ಬದಲಾಗಲೆಂಬ ಆಶಯದಿಂದ ಪರ್ಜನ್ಯ ಹೋಮ ಕೈಗೊಳ್ಳಲಾಗಿದೆ,” ಎಂದರು.

ಬೆಳಿಗ್ಗೆ 7 ಗಂಟೆಗೆ ಆರಂಭವಾದ ಪರ್ಜನ್ಯ ಹೋಮ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಿತು. ಬ್ರಾಹ್ಮಣ ಪುರೋಹಿತ ವೆಂಕಟೇಶ್ ಹಾಗೂ ತಂಡ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ವರ್ತಕರಿಂದ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ರೈತರು, ಎಪಿಎಂಸಿ ಸಿಬ್ಬಂದಿ, ಹಮಾಲರು ಹಾಗೂ ವರ್ತಕರು ಪ್ರಸಾದ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಆಹಾರ ಧಾನ್ಯ ವರ್ತಕರ ಸಂಘದ ಉಪಾಧ್ಯಕ್ಷ ಒಂಟಿಗೋಡಿ ಚನ್ನಬಸಪ್ಪ, ಬಂಡಿಹಳ್ಳಿ ಉಪ್ಪಾರ ರಾಮಪ್ಪ, ಅರಳಿಹಳ್ಳಿ ಪೋತಗುಳ್ಳಿ ನಾಗರಾಜ, ದೇವರೆಡ್ಡಿ, ಶಿವಣ್ಣ, ಚಿಂತ್ರಪಳ್ಳಿ ಪ್ರಕಾಶ್, ಖಜಾಂಚಿ ಹನುಮರೆಡ್ಡಿ, ಕಾರ್ಯದರ್ಶಿ ವೆಂಕಟೇಶ್, ಪರಶುರಾಮ್, ಸತೀಶ್, ಪ್ರಸನ್ನ, ಟಿ. ಬಸವರಾಜ್, ಮಾರುತಿ ಶೆಟ್ರು, ಮಲ್ಲಣ್ಣ, ರಾಕೇಶ್ ಮನೋಹರ, ರಾಜಶೇಖರ್, ಶಿವು, ಕಂಠಿ ಶಿವು, ಎಂ.ಸಿ. ನಾಗರಾಜ್, ಎಲ್.ಟಿ.ಪಿ. ಬಸವರಾಜ್, ರಾಘವೇಂದ್ರ ಸೇರಿದಂತೆ ವರ್ತಕರು ಹಾಗೂ ಅವರ ಕುಟುಂಬದವರು ಭಾಗವಹಿಸಿದ್ದರು.

“ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದರಿಂದ ರೈತರ ಬದುಕು ಚಿಂತಾಜನಕವಾಗಿದೆ. ಉತ್ತಮ ಮಳೆಯಾಗಿ ರೈತರ ಸಂಕಷ್ಟ ದೂರವಾಗಲೆಂಬ ಉದ್ದೇಶದಿಂದ ಪರ್ಜನ್ಯ ಹೋಮ ನಡೆಸಿದ್ದೇವೆ.”

– ಅಂಬಾಡಿ ಮಹೇಶ್, ಅಧ್ಯಕ್ಷರು, ತಾಲೂಕು ಆಹಾರ ಧಾನ್ಯ ವರ್ತಕರ ಸಂಘ, ಹಗರಿಬೊಮ್ಮನಹಳ್ಳಿ

ದೌರ್ಜನ್ಯ ಸಹಿಸಬೇಡಿ… ಧೈರ್ಯವಾಗಿ ಧ್ವನಿ ಎತ್ತಿ: ಡಾ. ನಾಗಲಕ್ಷ್ಮಿ ಚೌಧರಿ

0

ವಿಜಯಸಾಕ್ಷಿ ಸುದ್ದಿ, ಗದಗ: “ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದು. ಮಹಿಳೆಯರು ಯಾವುದೇ ರೀತಿಯ ಅನ್ಯಾಯ, ದೌರ್ಜನ್ಯ ಅಥವಾ ಲೈಂಗಿಕ ಕಿರುಕುಳವನ್ನು ಸಹಿಸಿಕೊಳ್ಳದೆ ಧೈರ್ಯವಾಗಿ ಧ್ವನಿ ಎತ್ತಬೇಕು. ಮೌನವಾಗಿರುವುದು ಸಮಸ್ಯೆಗೆ ಪರಿಹಾರವಲ್ಲ,” ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ-2013 (POSH Act) ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣುಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಮಹಿಳೆಯರ ಪ್ರಗತಿಗೆ ಪುರುಷರ ಸಹಕಾರವೂ ಅಗತ್ಯವಾಗಿದೆ. ಕೆಲಸದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ನಡೆದರೆ ಪೋಶ್ ಕಾಯ್ದೆಯಡಿ ರಚಿಸಲಾದ ಆಂತರಿಕ ದೂರು ಸಮಿತಿಗೆ ದೂರು ಸಲ್ಲಿಸಿ ನ್ಯಾಯ ಪಡೆಯಬಹುದು. ಆದರೆ ಕಾಯ್ದೆಯ ಸದ್ಬಳಕೆಯಾಗಬೇಕು, ದುರ್ಬಳಕೆಯಾಗಬಾರದು ಎಂದು ಅವರು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಮಾತನಾಡಿ, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ಪೋಶ್ ಕಾಯ್ದೆ ಅನ್ವಯವಾಗುತ್ತದೆ. ದೂರು ಸಮಿತಿಗೆ ಸಿವಿಲ್ ನ್ಯಾಯಾಲಯದ ಅಧಿಕಾರವಿದ್ದು, ಉದ್ದೇಶಪೂರ್ವಕವಾಗಿ ಸುಳ್ಳು ದೂರು ನೀಡಿದರೆ ದೂರುದಾರರ ವಿರುದ್ಧವೂ ಕ್ರಮ ಕೈಗೊಳ್ಳುವ ಅವಕಾಶವಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಮಹಿಳೆಯರ ಮೇಲಿನ ದೌರ್ಜನ್ಯವನ್ನು ಸಹಿಸಿಕೊಳ್ಳುವುದೂ ತಪ್ಪು. ಅನ್ಯಾಯ ನಡೆದಾಗ ಮೌನವಾಗದೆ, ಅದರ ವಿರುದ್ಧ ಕಾನೂನಾತ್ಮಕವಾಗಿ ಹೋರಾಡುವ ಮನೋಭಾವವನ್ನು ಪ್ರತಿಯೊಬ್ಬ ಮಹಿಳೆಯೂ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿ ಟಿ.ಎಸ್. ಚಂದ್ರಿಕಾ ಅವರು ಪೋಶ್ ಕಾಯ್ದೆಯ ಉದ್ದೇಶ, ದೂರು ಸಲ್ಲಿಸುವ ವಿಧಾನ ಹಾಗೂ ಸಮಿತಿಯ ಅಧಿಕಾರಗಳ ಕುರಿತು ವಿವರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಆರ್., ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

“ಮಹಿಳೆಯರು ಅನ್ಯಾಯ ಮತ್ತು ದೌರ್ಜನ್ಯವನ್ನು ಸಹಿಸಿಕೊಳ್ಳಬಾರದು. ಕೆಲಸದ ಸ್ಥಳದಲ್ಲಿ ಕಿರುಕುಳ ಎದುರಾದರೆ ಧೈರ್ಯವಾಗಿ ದೂರು ನೀಡಿ ನ್ಯಾಯ ಪಡೆಯಬೇಕು.”

– ಡಾ. ನಾಗಲಕ್ಷ್ಮಿ ಚೌಧರಿ, ಅಧ್ಯಕ್ಷೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗ

ಶಿರಹಟ್ಟಿ: ಎಸ್‌ಐಆರ್‌ನಲ್ಲಿ ಶೇ.100 ಸಾಧನೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026 ಕಾರ್ಯದಲ್ಲಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರ ಶೇ.100 ಪ್ರಗತಿ ಸಾಧಿಸುವ ಮೂಲಕ ಗದಗ ಜಿಲ್ಲೆಯಲ್ಲೇ ಮೊದಲ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಮುಂಡರಗಿ ತಾಲೂಕುಗಳನ್ನು ಒಳಗೊಂಡಿರುವ ಕ್ಷೇತ್ರದಲ್ಲಿ ಒಟ್ಟು 252 ಮತಗಟ್ಟೆ ವ್ಯಾಪ್ತಿಯಲ್ಲಿ 2,30,268 ಎನ್ಯೂಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿತ್ತು. ಜುಲೈ 30ರ ವೇಳೆಗೆ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡು ಶೇ.100 ಪ್ರಗತಿ ದಾಖಲಾಗಿದೆ.

ಕ್ಷೇತ್ರದಲ್ಲಿ 7,236 ಮೃತ ಮತದಾರರು, 17,787 ಸ್ಥಳಾಂತರಗೊಂಡವರು, 3,427 ದ್ವಿಪಾತ್ರ ಮತದಾರರು, 1,140 ಗೈರು ಮತದಾರರು ಹಾಗೂ ಇತರೆ 56 ಪ್ರಕರಣಗಳು ಸೇರಿ ಒಟ್ಟು 29,646 ದಾಖಲೆಗಳನ್ನು ಪರಿಶೀಲಿಸಿ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.

ಈ ಸಾಧನೆಯ ಹಿಂದೆ ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಬಿಎಲ್‌ಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ನಡೆಸಿದ ಸತತ ಸಭೆಗಳು, ಕ್ಷೇತ್ರ ಭೇಟಿ, ಸಮಸ್ಯೆಗಳ ತ್ವರಿತ ಪರಿಹಾರ ಹಾಗೂ ರಾಜಕೀಯ ಪಕ್ಷಗಳೊಂದಿಗೆ ಸಮನ್ವಯ ಸಭೆಗಳು ಪ್ರಮುಖ ಕಾರಣವಾಗಿವೆ.

ಮರಣ ಹೊಂದಿರುವ, ಸ್ಥಳಾಂತರಗೊಂಡಿರುವ, ದ್ವಿಪಾತ್ರ ಹಾಗೂ ಗೈರು ಮತದಾರರ ಪಟ್ಟಿಯ ಕ್ರಾಸ್‌ ವೆರಿಫಿಕೇಶನ್ ಕಾರ್ಯ ಮುಂದುವರಿದಿದ್ದು, ಅರ್ಹರಿಗೆ ಅಗತ್ಯ ದಾಖಲೆಗಳ ಆಧಾರದಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಬಿಎಲ್‌ಒಗಳು ಹಾಗೂ ರಾಜಕೀಯ ಪಕ್ಷಗಳ ಸಹಕಾರದಿಂದ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಕಾರ್ಯದಲ್ಲಿ ಶೇ.100 ಪ್ರಗತಿ ಸಾಧಿಸಲು ಸಾಧ್ಯವಾಗಿದೆ.”

– ನಂದಾ ಹಣಬರಹಟ್ಟಿ, ಮತದಾರರ ನೋಂದಣಾಧಿಕಾರಿ ಹಾಗೂ ಸಮಾಜ ಕಲ್ಯಾಣ ಉಪನಿರ್ದೇಶಕಿ

“ಬಿಎಲ್‌ಒಗಳು, ವಿಎಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಪಿಡಿಒಗಳು, ಇಒಗಳು, ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ.”

– ತಹಸೀಲ್ದಾರ್, ಶಿರಹಟ್ಟಿ (ಸಹಾಯಕ ಮತದಾರರ ನೋಂದಣಾಧಿಕಾರಿ)

ನರ್ಸಿಂಗ್ ವಿದ್ಯಾರ್ಥಿಗಳ ಆರೋಗ್ಯದೊಂದಿಗೆ ಚೆಲ್ಲಾಟ ಬೇಡ!

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಕೆ.ಎಚ್. ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಡ್ಡಾಯ ಹೆಪಟೈಟಿಸ್ ಲಸಿಕೆ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ತಕ್ಷಣವೇ ಲಸಿಕೆ ನೀಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಆಸ್ಪತ್ರೆಯ ವೈದ್ಯಕೀಯ ಸೇವೆ, ಹೆರಿಗೆ ಮತ್ತು ಬಾಣಂತಿಯರ ವಿಭಾಗ, ನರ್ಸಿಂಗ್ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಹಾಗೂ ಬಿ.ಸಿ.ಎಂ. ಹಾಸ್ಟೆಲ್‌ಗಳ ಸ್ಥಿತಿಗತಿ ಕುರಿತು ಸಮಗ್ರ ಪರಿಶೀಲನೆ ನಡೆಸಿದ ಅವರು, ವೈದ್ಯಾಧಿಕಾರಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಕಳೆದ ಮೂರು ವರ್ಷಗಳಲ್ಲಿ ತಾಯಂದಿರ ಸಾವಿನ ಪ್ರಮಾಣ ಅತ್ಯಂತ ಕಡಿಮೆಯಾಗಿರುವುದು ಹಾಗೂ ಗಂಭೀರ ಸ್ಥಿತಿಯಲ್ಲಿರುವ ಬಾಣಂತಿಯರ ಆರೈಕೆಗಾಗಿ ವಿಶೇಷ ವೈದ್ಯಕೀಯ ತಂಡ ರಚಿಸಿರುವುದನ್ನು ಶ್ಲಾಘಿಸಿದ ಅವರು, ಈ ಮಾದರಿಯನ್ನು ರಾಜ್ಯದ ಎಲ್ಲಾ ಬೋಧಕ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಜಾರಿಗೊಳಿಸುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಬಿ.ಸಿ.ಎಂ. ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕ ಆಹಾರ ಹಾಗೂ ನೀರಿನ ಸಮಸ್ಯೆ ಇರುವ ಕುರಿತು ದೂರುಗಳು ಬಂದಿದ್ದು, ಇತ್ತೀಚಿನ ಆಹಾರ ವಿಷಬಾಧೆ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಗಂಡು ಮಕ್ಕಳ ಜನನ ಪ್ರಮಾಣ ಹೆಚ್ಚುತ್ತಿರುವುದು ಹಾಗೂ ಹೆಣ್ಣು ಮಕ್ಕಳ ಜನನ ಪ್ರಮಾಣ ಕುಸಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಅಕ್ರಮ ಲಿಂಗಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಜಿಲ್ಲಾಡಳಿತದಿಂದ ಸಮಗ್ರ ವರದಿ ಪಡೆಯಲಾಗುವುದು ಎಂದು ಹೇಳಿದರು.

ಡಿ-ಗ್ರೂಪ್ ಹಾಗೂ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ, ಪರಿಷ್ಕೃತ ವೇತನ, ಸಮವಸ್ತ್ರ ಸೇರಿದಂತೆ ಮಹಿಳಾ ಸಿಬ್ಬಂದಿಗೆ ಋತುಚಕ್ರ ರಜೆ ಜಾರಿಗೆ ತರಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಹಟ್ಟಿ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಎಂ.ಎಂ. ತುಂಬರಮಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ್ ಬಿದರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ನರ್ಸಿಂಗ್ ವಿದ್ಯಾರ್ಥಿಗಳ ಆರೋಗ್ಯದ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸುವುದಿಲ್ಲ. ಎಲ್ಲ ವಿದ್ಯಾರ್ಥಿಗಳಿಗೆ ಕೂಡಲೇ ಹೆಪಟೈಟಿಸ್ ಲಸಿಕೆ ನೀಡಬೇಕು.”

– ಡಾ. ನಾಗಲಕ್ಷ್ಮಿ ಚೌಧರಿ, ಅಧ್ಯಕ್ಷೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗ

ಕಾನ್ಸ್‌ಟೇಬಲ್ ಪರೀಕ್ಷೆಗೆ ಕಟ್ಟೆಚ್ಚರ

0

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಆಗಸ್ಟ್‌ 2ರಂದು ನಡೆಯಲಿರುವ ಲಿಖಿತ ಪರೀಕ್ಷೆಯನ್ನು ಯಾವುದೇ ಲೋಪಕ್ಕೆ ಅವಕಾಶವಿಲ್ಲದಂತೆ ಶಿಸ್ತುಬದ್ಧ, ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸುವಂತೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು ಹಾಗೂ ಮೇಲ್ವಿಚಾರಕರು ತಮ್ಮ ಜವಾಬ್ದಾರಿಯನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆ ಅಥವಾ ನಿಯಮ ಉಲ್ಲಂಘನೆಗೆ ಅವಕಾಶ ನೀಡಬಾರದು. ಪರೀಕ್ಷಾ ಪ್ರಾಧಿಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ ಅವರು, ಪ್ರತಿಯೊಂದು ಕೇಂದ್ರದಲ್ಲಿ ಸಿಸಿಟಿವಿ ಕ್ಯಾಮೆರಾ, ಪರೀಕ್ಷಾ ಕೊಠಡಿಯಲ್ಲಿ ಗಡಿಯಾರ, ಶುದ್ಧ ಕುಡಿಯುವ ನೀರು, ಬೆಳಕು, ಗಾಳಿ ಹಾಗೂ ಅಗತ್ಯ ಪೀಠೋಪಕರಣಗಳ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ಪರೀಕ್ಷೆಗಳು ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಯಲು ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರದ ಮೇಲೆ ನಿಗಾ ವಹಿಸಲಾಗುವುದು ಎಂದು ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ ಮಾಹಿತಿ ನೀಡಿ, ಜಿಲ್ಲೆಯಲ್ಲಿ 10 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, 3,575 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಪೂರ್ಣಗೊಂಡಿದೆ ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಅತ್ಯಂತ ಪಾರದರ್ಶಕ ಹಾಗೂ ಶಿಸ್ತುಬದ್ಧವಾಗಿ ನಡೆಯಬೇಕು. ಯಾವುದೇ ಲೋಪ, ನಿರ್ಲಕ್ಷ್ಯ ಅಥವಾ ನಿಯಮ ಉಲ್ಲಂಘನೆಗೆ ಅವಕಾಶ ನೀಡದೆ ಎಲ್ಲ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು.”

– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

ಪರೀಕ್ಷಾ ಅಕ್ರಮ ತಡೆ ಕಾಯ್ದೆ ಯುವಶಕ್ತಿಯ ಗೆಲುವು

0

ವಿಜಯಸಾಕ್ಷಿ ಸುದ್ದಿ, ಗದಗ: ಸ್ಪರ್ಧಾತ್ಮಕ ಪರೀಕ್ಷೆಗಳ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪರೀಕ್ಷಾ ಅಕ್ರಮ ತಡೆ ಕಾಯ್ದೆ ಯುವಶಕ್ತಿಯ ಗೆಲುವಾಗಿದ್ದು, ಈ ಕುರಿತು ಲೋಕಸಭೆಯಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಂಡಿಸಿದ ವಾದಗಳು ಕಾಂಗ್ರೆಸ್‌ನ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿವೆ ಎಂದು ಬಿಜೆಪಿ ಮುಖಂಡ ಸಂತೋಷ ಅಕ್ಕಿ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾಮಾನ್ಯ ಕುಟುಂಬದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಸಮಾನ ಅವಕಾಶದ ವೇದಿಕೆಯಾಗಿದ್ದು, ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾಡುವ ಗಂಭೀರ ದ್ರೋಹವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಅಭಿಪ್ರಾಯವನ್ನು ಉಲ್ಲೇಖಿಸಿದರು.

ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಆತಂಕವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ನೀಡಿದ ಹೇಳಿಕೆಗಳಲ್ಲಿ ವಾಸ್ತವಾಂಶಗಳ ಕೊರತೆ ಇತ್ತು ಎಂದು ಟೀಕಿಸಿದರು.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ 2010ರಲ್ಲೇ ಇಂತಹ ಮಸೂದೆ ತರಲು ಮುಂದಾಗಿದ್ದರೂ ಅದನ್ನು ಜಾರಿಗೊಳಿಸದ ಕಾರಣ ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ ಎಂದು ತೇಜಸ್ವಿ ಸೂರ್ಯ ಸಂಸತ್ತಿನಲ್ಲಿ ವಿವರಿಸಿರುವುದಾಗಿ ಸಂತೋಷ ಅಕ್ಕಿ ತಿಳಿಸಿದ್ದಾರೆ.

ಹೊಸ ಕಾಯ್ದೆಯಡಿ ಪರೀಕ್ಷಾ ಅಕ್ರಮ ಎಸಗುವವರಿಗೆ 5ರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 50 ಲಕ್ಷ ರೂಪಾಯಿವರೆಗೆ ದಂಡ, ಸಂಘಟಿತ ಅಕ್ರಮ ಜಾಲಗಳಿಗೆ 7ರಿಂದ 10 ವರ್ಷಗಳ ಜೈಲು ಶಿಕ್ಷೆ ಮತ್ತು 10 ಕೋಟಿ ರೂಪಾಯಿವರೆಗೆ ದಂಡ ಸೇರಿದಂತೆ ಕಠಿಣ ಶಿಕ್ಷೆಗಳ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ, ಅಕ್ರಮದಲ್ಲಿ ಭಾಗಿಯಾದ ಸಂಸ್ಥೆಗಳ ವಿರುದ್ಧವೂ ಕಠಿಣ ಕ್ರಮ, ಆಸ್ತಿ ಮುಟ್ಟುಗೋಲು, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಹಾಗೂ ನಿಗದಿತ ಅವಧಿಯಲ್ಲಿ ಪ್ರಕರಣಗಳ ವಿಚಾರಣೆ ನಡೆಸುವಂತಹ ಕಟ್ಟುನಿಟ್ಟಿನ ವ್ಯವಸ್ಥೆ ಈ ಕಾಯ್ದೆಯಲ್ಲಿದೆ ಎಂದು ಹೇಳಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆದ ಪರೀಕ್ಷಾ ಅಕ್ರಮ ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ ನಡೆದಿರುವ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಯುವಜನತೆಗೆ ರಾಜಕೀಯ ಘೋಷಣೆಗಳಿಗಿಂತ ಪಾರದರ್ಶಕ ಪರೀಕ್ಷಾ ವ್ಯವಸ್ಥೆ, ತ್ವರಿತ ತನಿಖೆ ಮತ್ತು ತಾಂತ್ರಿಕ ಸುಧಾರಣೆಗಳ ಅಗತ್ಯವಿದ್ದು, ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ ಎಂದು ಸಂತೋಷ ಅಕ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರೀ ವಾಹನಕ್ಕೆ ಬ್ರೇಕ್: ರಸ್ತೆ ಉಳಿಸಲು ರೈತರ ಪಟ್ಟು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ (ಪಿಎಂಜಿಎಸ್‌ವೈ) ಅಡಿಯಲ್ಲಿ ನಿರ್ಮಿಸಿರುವ ಗೊಜನೂರ–ಗುಂಜಳ ರಸ್ತೆಯಲ್ಲಿ ಸೈರಂತಿಕ ಪವನ ವಿದ್ಯುತ್ ಕಂಪನಿಯ ಭಾರೀ ವಾಹನಗಳ ಸಂಚಾರದಿಂದ ರಸ್ತೆ ಹಾಗೂ ಸೇತುವೆಗಳು ಹಾಳಾಗುತ್ತಿವೆ ಎಂದು ಆರೋಪಿಸಿ ರೈತರು ಗುರುವಾರ ಭಾರೀ ವಾಹನ ತಡೆದು ಪ್ರತಿಭಟನೆ ನಡೆಸಿದರು.

2020ರಲ್ಲಿ ಅಂದಿನ ಶಾಸಕ ರಾಮಣ್ಣ ಲಮಾಣಿ ಅವರ ಪ್ರಯತ್ನದಿಂದ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ 5.6 ಕಿ.ಮೀ. ಉದ್ದದ ಈ ರಸ್ತೆ ಗೊಜನೂರ, ಮಾಡಳ್ಳಿ, ಯತ್ನಳ್ಳಿ ಹಾಗೂ ಗುಂಜಳ ಭಾಗದ ನೂರಾರು ಹೆಕ್ಟೇರ್ ಕೃಷಿಭೂಮಿಗೆ ಪ್ರಮುಖ ಸಂಪರ್ಕ ಕಲ್ಪಿಸುತ್ತಿದೆ.

ಕಳೆದ ಆರು ತಿಂಗಳಿನಿಂದ 60ರಿಂದ 70 ಟನ್ ತೂಕದ ಸಾಮಗ್ರಿಗಳನ್ನು ಸಾಗಿಸುವ ಭಾರೀ ವಾಹನಗಳು ಸಂಚರಿಸುತ್ತಿದ್ದು, ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗುತ್ತಿದೆ. ಪವನ ವಿದ್ಯುತ್ ಯೋಜನೆ ಕಾಮಗಾರಿಗಾಗಿ ಸೈರಂತಿಕ ಕಂಪನಿ ಯಾವುದೇ ಅನುಮತಿ ಪಡೆಯದೇ ಈ ರಸ್ತೆ ಬಳಸುತ್ತಿದೆ. ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಗುರುವಾರ ಬೆಳಗ್ಗಿನಿಂದಲೇ ಕಂಪನಿಯ ಭಾರೀ ವಾಹನವನ್ನು ತಡೆದ ರೈತರು, ಇನ್ನು ಮುಂದೆ ಈ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದರು.

ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ಧನಂಜಯ ಎಂ. ರೈತರ ಅಹವಾಲು ಆಲಿಸಿ, ಕಂಪನಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ರಸ್ತೆ ಬಳಕೆಗೆ ಅಗತ್ಯ ಅನುಮತಿ ಪಡೆದಿರುವ ಬಗ್ಗೆ ಪ್ರಶ್ನಿಸಿದ ಅವರು, ರೈತರ ಸಂಪರ್ಕ ರಸ್ತೆಗೆ ಹಾನಿಯಾದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಸೋಮವಾರ ಕಂಪನಿಯ ಹಿರಿಯ ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಸಭೆ ನಡೆಸಲಿದ್ದು, ಅಲ್ಲಿಯವರೆಗೆ ಹೊಸ ಭಾರೀ ವಾಹನಗಳನ್ನು ತರದಂತೆ ಕಂಪನಿ ಅಧಿಕಾರಿಗಳು ಭರವಸೆ ನೀಡಿದರು. ಆದರೆ ತಡೆಹಿಡಿದಿರುವ ವಾಹನವನ್ನು ಸಭೆ ನಡೆಯುವವರೆಗೆ ಬಿಡುವುದಿಲ್ಲ ಎಂದು ರೈತರು ಸ್ಪಷ್ಟಪಡಿಸಿದರು.

ಬಳಿಕ ರೈತರು ತಹಸೀಲ್ದಾರರಿಗೆ ಮನವಿ ಸಲ್ಲಿಸಿ, ಹಾನಿಗೊಳಗಾದ ರಸ್ತೆ ಹಾಗೂ ಸೇತುವೆಗಳನ್ನು ಕಂಪನಿಯ ವೆಚ್ಚದಲ್ಲಿಯೇ ದುರಸ್ತಿಪಡಿಸಬೇಕು ಹಾಗೂ ಭಾರೀ ವಾಹನಗಳ ಸಂಚಾರಕ್ಕೆ ಶಾಶ್ವತ ನಿಯಂತ್ರಣ ವಿಧಿಸಬೇಕು ಎಂದು ಒತ್ತಾಯಿಸಿದರು.

ಗ್ರೇಡ್-2 ತಹಸೀಲ್ದಾರ್ ಮಂಜುನಾಥ ಅಮಾಸಿ, ಕಂದಾಯ ಅಧಿಕಾರಿ ಎಂ.ಎ. ನಧಾಪ್, ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಶಿವರಾಜಗೌಡ ಪಾಟೀಲ, ಮಾಂತಗೌಡ ಪಾಟೀಲ, ಸಿದ್ದಲಿಂಗೇಶ ಸೊರಟೂರ, ಆರ್.ಡಿ. ಪ್ರಭಯ್ಯನಮಠ, ಹೇಮಣ್ಣ ಕರೆಣ್ಣವರ, ಪ್ರವೀಣ ಮಾಡಳ್ಳಿ, ಚಂದ್ರಗೌಡ ದೊಡ್ಡಗೌಡ್ರ, ಚನ್ನವೀರಯ್ಯ ಹಿರೇಮಠ, ಮಾಂತೇಶ ಸೊರಟೂರ, ಫಕ್ಕಿರೇಶ ಕಲ್ಲೂರ, ಹನುಮಂತಪ್ಪ ಯಳವತ್ತಿ, ಬಸಪ್ಪ ಕಪ್ಪತ್ತನವರ, ಚನ್ನಪ್ಪ ಷಣ್ಮುಕಿ ಸೇರಿದಂತೆ ಅನೇಕ ರೈತರು ಭಾಗವಹಿಸಿದ್ದರು.

“ರೈತರ ಸಂಪರ್ಕ ರಸ್ತೆಗೆ ಯಾವುದೇ ಹಾನಿಯಾಗಲು ಅವಕಾಶ ನೀಡುವುದಿಲ್ಲ. ಅಗತ್ಯ ಅನುಮತಿ ಇಲ್ಲದೆ ರಸ್ತೆ ಬಳಕೆ ಮಾಡಿದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.”

– ಧನಂಜಯ ಎಂ., ತಹಸೀಲ್ದಾರ್

ಸತ್ಯದ ಪರ ನಿಲ್ಲುವ ಪತ್ರಿಕೆಗಳೇ ಸಮಾಜದ ನಿಜವಾದ ಆಸ್ತಿ: ಸುಜಾತಾ ದೊಡ್ಡಮನಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸತ್ಯ, ಸಾಮಾಜಿಕ ನ್ಯಾಯ ಹಾಗೂ ಜನಪರ ಮೌಲ್ಯಗಳನ್ನು ಎತ್ತಿಹಿಡಿದು ಸಮಾಜಕ್ಕೆ ಸತ್ಯದ ಅರಿವು ಮೂಡಿಸುವ ಪತ್ರಿಕೆಗಳೇ ಸಮಾಜದ ನಿಜವಾದ ಆಸ್ತಿಯಾಗಿದ್ದು, ಪತ್ರಿಕೋದ್ಯಮ ತನ್ನ ಧರ್ಮವನ್ನು ಎಂದಿಗೂ ಮರೆಯಬಾರದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಜಾತಾ ದೊಡ್ಡಮನಿ ಹೇಳಿದರು.

ಶಿರಹಟ್ಟಿಯ ಡಿ. ದೇವರಾಜ ಅರಸು ಸಭಾಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಿಕೋದ್ಯಮ ಜನರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು. ಪತ್ರಕರ್ತರು ಯಾವುದೇ ಒತ್ತಡ, ಆಮಿಷಗಳಿಗೆ ಮಣಿಯದೆ ಸತ್ಯವನ್ನು ನಿರ್ಭೀತಿಯಿಂದ ಸಮಾಜದ ಮುಂದೆ ತರುವ ಜವಾಬ್ದಾರಿ ಹೊಂದಿದ್ದಾರೆ. ಅಂತಹ ಪತ್ರಿಕೆಗಳಿಗೆ ಮಾತ್ರ ಜನರ ವಿಶ್ವಾಸ ಮತ್ತು ಗೌರವ ದೊರೆಯುತ್ತದೆ ಎಂದು ಹೇಳಿದರು.

ಶಿರಹಟ್ಟಿಯಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಪತ್ರಕರ್ತರು ಸಂಕಲ್ಪ ಮಾಡಿದರೆ ನಿವೇಶನ ಖರೀದಿ ಹಾಗೂ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

‘ಉತ್ತರಪ್ರಭ ಪತ್ರಿಕೆ’ ಸಂಪಾದಕ ಹಾಗೂ ನ್ಯಾಯವಾದಿ ರವಿಕಾಂತ ಅಂಗಡಿ ಮಾತನಾಡಿ, ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಮುದ್ರಣ ಮಾಧ್ಯಮ ಸವಾಲು ಎದುರಿಸುತ್ತಿದ್ದರೂ ಸಮಾಜ ಮತ್ತು ಸರ್ಕಾರಕ್ಕೆ ಸತ್ಯದ ಅರಿವು ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಇಂದಿಗೂ ಮಹತ್ವದ್ದಾಗಿದೆ.

ಪ್ರತಿಯೊಬ್ಬರೂ ಪತ್ರಿಕೆಗಳನ್ನು ಖರೀದಿಸಿ ಓದುವ ಮೂಲಕ ಪತ್ರಿಕೋದ್ಯಮವನ್ನು ಉಳಿಸಬೇಕು ಎಂದು ಕರೆ ನೀಡಿದರು.

ಪತ್ರಕರ್ತರಿಗೆ ಸ್ವಂತ ನೆಲೆ ಅಗತ್ಯವಾಗಿದ್ದು, ಸ್ಥಳೀಯ ಪಟ್ಟಣ ಪಂಚಾಯಿತಿ ನಿವೇಶನ ಒದಗಿಸಿದರೆ ಪತ್ರಿಕಾ ಭವನ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಎಚ್.ಡಿ. ಮಾಗಡಿ, ಡಾ. ವೆಂಕಟೇಶ ರಾಠೋಡ, ಎಸ್.ಬಿ. ಮಹಾಜನಶೆಟ್ಟರ, ವಿ.ವಿ. ಕಪ್ಪತ್ತನವರ, ಡಿ.ಕೆ. ಹೊನ್ನಪ್ಪನವರ, ಡಾ. ಪ್ರಕಾಶ ಹೊಸಮನಿ, ಶರಣಬಸವ ಪಾಟೀಲ ಸೇರಿದಂತೆ ಹಲವರು ಮಾತನಾಡಿ, ಪತ್ರಿಕೋದ್ಯಮದ ಸಾಮಾಜಿಕ ಹೊಣೆಗಾರಿಕೆ, ಪತ್ರಿಕಾ ಭವನ ನಿರ್ಮಾಣದ ಅಗತ್ಯತೆ ಹಾಗೂ ಪತ್ರಕರ್ತರ ಸೇವೆಯನ್ನು ಪ್ರಶಂಸಿಸಿದರು.

ಇದೇ ವೇಳೆ ಪತ್ರಿಕಾ ಭವನ ನಿರ್ಮಾಣಕ್ಕೆ ತಲಾ ₹25 ಸಾವಿರ ಆರ್ಥಿಕ ನೆರವು ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು.

ಸ್ಥಳೀಯ ಮಠದ ಪೀಠಾಧ್ಯಕ್ಷ ಶ್ರೀ ಫಕೀರಸಿದ್ದರಾಮ ಸ್ವಾಮೀಜಿ ಮಾತನಾಡಿ, ಸೇವಾ ಮನೋಭಾವದಿಂದ ಸಮಾಜಕ್ಕೆ ಬೆಳಕು ಚೆಲ್ಲುತ್ತಿರುವ ಪತ್ರಕರ್ತರ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಾದೇವಪ್ಪ ಸ್ವಾಮಿ ಮಾತನಾಡಿ, ಪತ್ರಿಕಾ ಭವನ ನಿರ್ಮಾಣಕ್ಕೆ ಸಹಕಾರ ನೀಡಿದ ಗಣ್ಯರಿಗೆ ಅಭಿನಂದನೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ಮಂಜುನಾಥ ಅರೆಪಲ್ಲಿ ಹಾಗೂ ಅರ್ಷದ್ ಅಲಿ ಖಾಜಿ ಅವರಿಗೆ ವಾರ್ಷಿಕ ಅತ್ಯುತ್ತಮ ಪತ್ರಕರ್ತ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜು ಹೆಬ್ಬಳ್ಳಿ, ಕಾರ್ಯದರ್ಶಿ ಚಂದ್ರು ಕುಸ್ಲಾಪೂರ, ಪ್ರ.ಕಾ. ಶರಣು ದೊಡ್ಡೂರ, ಸಿಪಿಐ ಬಿ.ವಿ. ನ್ಯಾಮಗೌಡ, ವಿಶ್ವನಾಥ ಕಪ್ಪತ್ತನವರ, ಡಾ. ಭೀಮಸಿಂಗ್ ರಾಠೋಡ, ವಿ.ಪಿ. ಮಠಪತಿ, ಎನ್.ಆರ್. ಕುಲಕರ್ಣಿ, ವೀರಣ್ಣ ಅಂಗಡಿ, ವೀರಯ್ಯ ಮಠಪತಿ, ತಿಪ್ಪಣ್ಣ ಕೊಂಚಿಗೇರಿ, ಸಿ.ಸಿ. ನೂರಶೆಟ್ಟರ, ತಿಮ್ಮರಡ್ಡಿ ಮರಡ್ಡಿ, ಶಿವನಗೌಡ ಪಾಟೀಲ, ಮೋಹನ ಗುತ್ತೆಮ್ಮನವರ, ಎಂ.ಕೆ. ಲಮಾಣಿ, ಸಂದೀಪ ಕಪ್ಪತ್ತನವರ, ಹೊನ್ನಪ್ಪ ಶಿರಹಟ್ಟಿ, ಡಾ. ಸುನೀಲ ಬುರಬುರೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

“ಸತ್ಯವನ್ನು ನಿರ್ಭೀತಿಯಿಂದ ಸಮಾಜದ ಮುಂದೆ ತರುವ ಪತ್ರಿಕೆಗಳೇ ಪ್ರಜಾಪ್ರಭುತ್ವದ ಶಕ್ತಿಯಾಗಿವೆ. ಪತ್ರಿಕೋದ್ಯಮ ತನ್ನ ಧರ್ಮವನ್ನು ಉಳಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಅದರ ವಿಶ್ವಾಸ ಉಳಿಯುತ್ತದೆ.”

– ಸುಜಾತಾ ದೊಡ್ಡಮನಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ