Home Blog

ರಾಜ್ಯದಲ್ಲಿ ಬಿಸಿಲಿನ ಕಾಟ ಹೆಚ್ಚಳ: ಇನ್ನೂ ಒಂದು ವಾರ 40–42°C ತಾಪಮಾನ ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಒಂದು ವಾರ ತಾಪಮಾನ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಬಿಸಿಲಿನ ತೀವ್ರತೆ ಹೆಚ್ಚಾಗಿ ಜನರು ಬಳಲುತ್ತಿದ್ದಾರೆ.

ಬೆಂಗಳೂರುನಲ್ಲಿ ಗರಿಷ್ಠ ತಾಪಮಾನ 36°C ಹಾಗೂ ಕನಿಷ್ಠ 22°C ದಾಖಲಾಗಿದೆ. ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಉಷ್ಣಾಂಶ 41°C ತಲುಪಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಹಲವೆಡೆ 40–42°C ನಡುವೆ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಮುಂದುವರಿಯುತ್ತಿದ್ದು, ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲೂರು ಎಂದೇ ಪ್ರಸಿದ್ಧವಾಗಿರುವ ರಾಯಚೂರಿನಲ್ಲಿ ಈ ಬಾರಿ ಗರಿಷ್ಠ ತಾಪಮಾನ ದಾಖಲಾಗುತ್ತಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ ವರದಿ ಪ್ರಕಾರ, ಏಪ್ರಿಲ್ 18ರಂದು ದೇವಸೂಗೂರು ಗ್ರಾಮದಲ್ಲಿ 44.2°C ಹಾಗೂ ಕಲಮಲಾ ಗ್ರಾಮದಲ್ಲಿ 44°C ತಾಪಮಾನ ದಾಖಲಾಗಿದೆ. ಜಿಲ್ಲೆಯ ಅನೇಕ ಭಾಗಗಳಲ್ಲಿ 42–44.2°C ನಡುವೆ ಉಷ್ಣಾಂಶ ಕಂಡುಬಂದಿದೆ.

ಪುತ್ತೂರು BJP ಮುಖಂಡನ ಪುತ್ರನ ಪ್ರಕರಣ: ಸಂತ್ರಸ್ತೆಗೆ ₹75 ಸಾವಿರ ಮಾಸಿಕ ಪರಿಹಾರಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: 21 ವರ್ಷದ ವಿದ್ಯಾರ್ಥಿನಿಗೆ ಮದುವೆಯ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ, ಆಕೆಯನ್ನು ತಾಯಿಯಾಗುವಂತೆ ಮಾಡಿರುವ ಗಂಭೀರ ಆರೋಪ ಪ್ರಕರಣದಲ್ಲಿ ಹೈಕೋರ್ಟ್ ಆರೋಪಿಗೆ ತೀವ್ರ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ.ರಾವ್ ವಿರುದ್ಧ ನ್ಯಾಯಾಲಯ ಕಠಿಣ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಂತ್ರಸ್ತೆ ಮತ್ತು ಆಕೆಯ ಮಗುವಿನ ಪೋಷಣೆಗೆ ಪ್ರತಿಮಾಸ ₹75,000 ಪಾವತಿಸಬೇಕು ಎಂದು ನ್ಯಾಯಪೀಠ ಕಟ್ಟುನಿಟ್ಟಾಗಿ ನಿರ್ದೇಶನ ನೀಡಿದೆ. ಜೊತೆಗೆ, ಪ್ರಕರಣದ ಮುಂದಿನ ವಿಚಾರಣೆಗೆ ಮಧ್ಯಂತರ ತಡೆ ನೀಡಲಾಗಿದ್ದು, ಸಂತ್ರಸ್ತೆ ಹಾಗೂ ಆಕೆಯ ಕುಟುಂಬಸ್ಥರು ಈ ವಿಚಾರದಲ್ಲಿ ಮಾಧ್ಯಮಗಳ ಮುಂದೆ ಹೋಗಬಾರದೆಂದು ನಿರ್ಬಂಧ ವಿಧಿಸಲಾಗಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಕೃಷ್ಣ ಜೆ.ರಾವ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ. ಆರೋಪಿ ಸ್ವತಃ ಅಥವಾ ತನ್ನ ಪೋಷಕರ ಮೂಲಕ ಸಂತ್ರಸ್ತೆ ಮತ್ತು ಮಗುವಿನ ಅಗತ್ಯಗಳನ್ನು ಪೂರೈಸಲು ಮುಂದಿನ ಒಂದು ವಾರದೊಳಗೆ ಹಣ ಪಾವತಿಸಬೇಕು ಹಾಗೂ ನಂತರ ಪ್ರತಿಮಾಸವೂ ಇದೇ ಮೊತ್ತವನ್ನು ನೀಡಬೇಕು ಎಂದು ಸೂಚಿಸಲಾಗಿದೆ.

ಇದಕ್ಕೂ ಮುನ್ನ ನಡೆದ ವಿಚಾರಣೆಯಲ್ಲಿ ಸಂತ್ರಸ್ತೆಯ ಪರ ವಕೀಲರು, ಇಬ್ಬರೂ ವಿದ್ಯಾರ್ಥಿಗಳಾಗಿದ್ದಾಗ ಪ್ರೀತಿಸುತ್ತಿದ್ದು, ಮದುವೆಯ ಭರವಸೆ ನೀಡಿ ಹಲವು ಬಾರಿ ದೈಹಿಕ ಸಂಬಂಧ ಬೆಳೆಸಲಾಗಿದೆ ಎಂದು ವಾದಿಸಿದರು. ಇದರ ಪರಿಣಾಮವಾಗಿ ಸಂತ್ರಸ್ತೆ ಮಗುವಿಗೆ ಜನ್ಮ ನೀಡಿದ್ದು, ಮಗುವಿಗೆ ಶೀಘ್ರದಲ್ಲೇ ಒಂದು ವರ್ಷ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಆದರೆ, ಆರೋಪಿ ಅಥವಾ ಅವರ ಕುಟುಂಬದಿಂದ ಯಾವುದೇ ಸಹಾಯ ದೊರೆತಿಲ್ಲ ಎಂದು ವಾದಿಸಲಾಯಿತು.

ಸಂತ್ರಸ್ತೆಯ ಕುಟುಂಬ ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ತಾಯಿ ಮನೆ ಕೆಲಸ ಮಾಡುತ್ತಿದ್ದು, ತಂದೆ ದಿನಗೂಲಿ ಕಾರ್ಮಿಕರಾಗಿದ್ದಾರೆ ಎಂಬುದೂ ನ್ಯಾಯಾಲಯದ ಗಮನಕ್ಕೆ ತರಲಾಗಿದೆ. ಇನ್ನೊಂದೆಡೆ, ಸರ್ಕಾರದ ಪರ ವಕೀಲರು, ಆರೋಪಿ ಕುಟುಂಬವು ₹50 ಲಕ್ಷ ನೀಡುವ ಹಾಗೂ ಮದುವೆಯ ಬಳಿಕ ವಿಚ್ಛೇದನ ನೀಡುವ ಷರತ್ತು ಮುಂದಿಟ್ಟಿದೆ ಎಂದು ತಿಳಿಸಿದರು. ಆದರೆ, ಈ ಆರೋಪಗಳನ್ನು ಅರ್ಜಿದಾರರ ಪರ ವಕೀಲರು ತಳ್ಳಿಹಾಕಿದ್ದಾರೆ.

ಈ ನಡುವೆ, ಪ್ರಕರಣದ ಬಗ್ಗೆ ಮಾಧ್ಯಮ ವರದಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ನಿಯಂತ್ರಿಸುವಂತೆ ಮನವಿ ಮಾಡಲಾಗಿದ್ದು, ಪೀಠ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಜೂನ್ 5ಕ್ಕೆ ಮುಂದೂಡಿದೆ.

West Bengal Election: ಮೊದಲ ಹಂತದಲ್ಲೇ 110ಕ್ಕೂ ಹೆಚ್ಚು ಸ್ಥಾನ ಗೆಲುವು – ಅಮಿತ್ ಶಾ ವಿಶ್ವಾಸ

0

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದಲ್ಲಿ ನಡೆದ ಮತದಾನದ ಬಳಿಕ, 152 ಸ್ಥಾನಗಳಲ್ಲಿ 110ಕ್ಕೂ ಹೆಚ್ಚು ಸ್ಥಾನಗಳನ್ನು ಭಾರತೀಯ ಜನತಾ ಪಕ್ಷ ಗೆಲ್ಲಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ಸುಮಾರು 92.7% ರಿಂದ 92.88% ರಷ್ಟು ದಾಖಲೆ ಮತದಾನವಾಗಿರುವುದು ರಾಜ್ಯದಲ್ಲಿ ಪರಿವರ್ತನೆಯ ಸ್ಪಷ್ಟ ಸೂಚನೆ ಎಂದು ಹೇಳಿದರು. ಇದು ಬಿಜೆಪಿಗೆ ಪೂರಕವಾದ ಜನಮತವೆಂದು ಅವರು ಅಭಿಪ್ರಾಯಪಟ್ಟರು.

ಈ ಬಾರಿ ಪ್ರಚಂಡ ಬಹುಮತದೊಂದಿಗೆ ಬಿಜೆಪಿ ಗೆಲುವು ಸಾಧಿಸಲಿದೆ. “ಭಯ ಹೊರ ಹೋಗಿ, ಭರವಸೆ ಬರಲಿದೆ” ಎಂದು ಹೇಳಿದ ಅವರು, ಬಂಗಾಳ ಜನತೆ ಅಭಿವೃದ್ಧಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು. ಮೊದಲ ಹಂತದ ಮುನ್ನಡೆಯನ್ನೇ ಆಧಾರವಾಗಿಸಿಕೊಂಡು, ಎರಡನೇ ಹಂತದ ವೇಳೆಗೆ ಬಿಜೆಪಿ ಸ್ಪಷ್ಟ ಬಹುಮತದತ್ತ ಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೊದಲ ಹಂತದ ಮತದಾನ ಶಾಂತಿಯುತವಾಗಿ ನಡೆದಿದ್ದು, ಬಂಗಾಳದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಚುನಾವಣೆ ನಡೆದಿದೆ ಎಂದು ಹೇಳಿದರು. ಇದಕ್ಕೆ ಭಾರತ ಚುನಾವಣಾ ಆಯೋಗ ಹಾಗೂ ಭದ್ರತಾ ಪಡೆಗಳಿಗೆ ಧನ್ಯವಾದ ಸಲ್ಲಿಸಿದರು.

ಇನ್ನೂ, “ದೀದಿ ಹೋಗಲಿದ್ದಾರೆ, ಬಿಜೆಪಿ ಬರಲಿದೆ” ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಬದಲಾವಣೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು, ರಾಜ್ಯದ ಗಡಿಭದ್ರತೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದರು.

ತುಮಕೂರಿನಲ್ಲಿ 35 ನವಿಲುಗಳ ಸಾವು: ಬಿಸಿಲಿನ ಪರಿಣಾಮವೋ ಅಥವಾ ಹಕ್ಕಿ ಜ್ವರವೋ?

ತುಮಕೂರು: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ಬರೋಬ್ಬರಿ 35 ನವಿಲುಗಳು ಸಾವನ್ನಪ್ಪಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಬಿಸಿಲಿನ ತಾಪಮಾನ ಏರಿಕೆಯಿಂದ ಈ ಸಾವುಗಳು ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಜೊತೆಗೆ ಹಕ್ಕಿ ಜ್ವರದ ಸಾಧ್ಯತೆಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ನಗರ ಹೊರವಲಯದ ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಸುತ್ತಮುತ್ತ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ಸಾವುಗಳು ಸಂಭವಿಸಿವೆ. ಘಟನೆ ತಿಳಿದು ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ.

ಮೃತ ನವಿಲುಗಳ ಶವಪರೀಕ್ಷೆ ನಡೆಸಿ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿಗಳು ಮುಂದಿನ 48 ಗಂಟೆಗಳಲ್ಲಿ ಲಭ್ಯವಾಗುವ ನಿರೀಕ್ಷೆಯಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ನವಿಲುಗಳ ಶ್ವಾಸಕೋಶದ ಮೇಲೆ ತೀವ್ರ ಪರಿಣಾಮ ಕಂಡುಬಂದಿದ್ದು, ಅತಿಯಾದ ಬಿಸಿಲು ಮತ್ತು ನಿರ್ಜಲೀಕರಣವೇ ಸಾವಿಗೆ ಪ್ರಮುಖ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದಾಗ್ಯೂ, ಹಕ್ಕಿ ಜ್ವರ ಸೋಂಕಿನ ಸಾಧ್ಯತೆಯನ್ನೂ ತಳ್ಳಿಹಾಕಲಾಗುವುದಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ? ಸಿಎಂ ಆಪ್ತರೊಂದಿಗೆ ಗುಪ್ತ ಸಭೆ, ಸಿದ್ದರಾಮಯ್ಯಗೆ ಒತ್ತಡ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಹೊಸ ಬೆಳವಣಿಗೆಗಳು ಕಾಣಿಸುತ್ತಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೇ ಟಾರ್ಗೆಟ್ ಆಗುತ್ತಿರುವ ಆರೋಪಗಳು ಕೇಳಿಬರುತ್ತಿವೆ. ಈ ನಡುವೆ ಸಿಎಂ ಹಾಗೂ ಅವರ ಆಪ್ತ ಸಚಿವರು ಬೆಂಗಳೂರಿನ ಕನ್ನಿಂಗ್‌ಹ್ಯಾಮ್ ರಸ್ತೆಯ ಖಾಸಗಿ ಕಟ್ಟಡದಲ್ಲಿ ನಡೆಸಿದ ಗುಪ್ತ ಸಭೆ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ.

ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರಾದ ಭೈರತಿ ಸುರೇಶ್, ಡಾ.ಜಿ.ಪರಮೇಶ್ವರ್, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಮತ್ತು ದಿನೇಶ್ ಗುಂಡೂರಾವ್ ಭಾಗವಹಿಸಿದ್ದರು. ಸಿಎಂ ಆಪ್ತರ ವಿರುದ್ಧ ನಡೆಯುತ್ತಿರುವ ಬೆಳವಣಿಗೆಗಳ ನಡುವೆಯೂ ಸಿದ್ದರಾಮಯ್ಯ ಮೌನವಾಗಿರುವ ವಿಚಾರದ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿರುವುದು ತಿಳಿದುಬಂದಿದೆ.

ಈ ಪರಿಸ್ಥಿತಿ ಮುಂದುವರಿದರೆ ಪಕ್ಷದ ಹಿರಿಯ ನಾಯಕರ ಅಸ್ತಿತ್ವಕ್ಕೂ ಧಕ್ಕೆಯಾಗಬಹುದು ಎಂಬ ಆತಂಕ ಸಭೆಯಲ್ಲಿ ವ್ಯಕ್ತವಾಗಿದೆ. ಪಕ್ಷದೊಳಗೆ ಕೆಲವರು ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದು ಸರಿಯಲ್ಲ ಎಂಬ ಅಭಿಪ್ರಾಯವೂ ಕೇಳಿಬಂದಿದೆ.

ಇಂತಹ ಕ್ರಮಗಳು ಮುಂದಿನ 2028ರ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಮೇಲೆ ಪರಿಣಾಮ ಬೀರಿ, ಕೆಲವು ಸಮುದಾಯಗಳು ದೂರ ಸರಿಯುವ ಸಾಧ್ಯತೆಯೂ ಇದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಹಿರಿಯ ನಾಯಕರ ಅನುಭವವನ್ನು ಕಡೆಗಣಿಸುವ ರೀತಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪಕ್ಷಕ್ಕೆ ಹಾನಿ ಉಂಟುಮಾಡುತ್ತಿವೆ ಎಂದು ಸೂಚಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಮೌನದಿಂದ ಕಾಂಗ್ರೆಸ್‌ಗೆ ನಷ್ಟವಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಅವರು ತಕ್ಷಣ ಮಧ್ಯಪ್ರವೇಶ ಮಾಡಬೇಕೆಂದು ಸಭೆಯಲ್ಲಿ ಒತ್ತಡ ಹೇರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮತ್ತೊಂದು ಘೋರ ದುರಂತ: ಜೋಕಾಲಿ ಆಡುವಾಗ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವು!

0

ಶಿವಮೊಗ್ಗ: ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿ 9 ವರ್ಷದ ಬಾಲಕಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೃತ ಬಾಲಕಿಯನ್ನು ಶಿವಮೊಗ್ಗ ನಗರದ ವಿದ್ಯಾನಗರ ನಿವಾಸಿ ಪ್ರಣಮ್ಯ ಎಂದು ಗುರುತಿಸಲಾಗಿದೆ. ಈ ಘಟನೆ ಕುಟುಂಬದಲ್ಲಿ ಆಘಾತ ಮೂಡಿಸಿದ್ದು, ಪೋಷಕರ ಆಕ್ರಂದನ ಮನಕಲಕುವಂತಿದೆ.

ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಪ್ರಣಮ್ಯ ಒಂದು ವಾರದ ಹಿಂದೆ ಚಿಕ್ಕಮ್ಮನ ಮನೆ ಲಕ್ಕಿನಕೊಪ್ಪಕ್ಕೆ ಬಂದಿದ್ದಳು. ಏಪ್ರಿಲ್ 20ರಂದು ಚಿಕ್ಕಮ್ಮನ ಮಕ್ಕಳು ಕಿರಿಕಿರಿ ಮಾಡುತ್ತಿದ್ದ ಹಿನ್ನೆಲೆ, ಪ್ರಣಮ್ಯ ಒಬ್ಬಳೇ ಕೋಣೆಗೆ ತೆರಳಿ ಬಾಗಿಲು ಹಾಕಿಕೊಂಡು ಪಂಚೆ ಬಳಸಿ ಜೋಕಾಲಿ ಮಾಡಿಕೊಂಡು ಆಟವಾಡುತ್ತಿದ್ದಳು.

ಈ ವೇಳೆ ಪಂಚೆಯ ಕುಣಿಕೆ ಕುತ್ತಿಗೆಗೆ ಬಿಗಿದ ಪರಿಣಾಮ ಉಸಿರಾಟಕ್ಕೆ ತೊಂದರೆ ಉಂಟಾಗಿ ಬಾಲಕಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕುಟುಂಬಸ್ಥರು ಬಾಗಿಲು ತೆರೆಯುವಷ್ಟರಲ್ಲಿ ಪ್ರಣಮ್ಯ ಪ್ರಾಣ ಕಳೆದುಕೊಂಡಿದ್ದಳು.

ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ. ಮಕ್ಕಳ ಸುರಕ್ಷತೆ ಕುರಿತು ಹೆಚ್ಚಿನ ಜಾಗೃತಿ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಗದ್ದಲದ ನಡುವೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

0

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಹೂಗ್ಲಿ ನದಿಯಲ್ಲಿ ದೋಣಿ ವಿಹಾರ ನಡೆಸಿ ಗಮನ ಸೆಳೆದಿದ್ದಾರೆ.

ಏಪ್ರಿಲ್ 29ರಂದು ನಡೆಯಲಿರುವ ಎರಡನೇ ಹಂತದ ಮತದಾನಕ್ಕೆ ಸಿದ್ಧತೆ ನಡೆಯುತ್ತಿರುವ ಹಿನ್ನೆಲೆ, ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ದೋಣಿ ವಿಹಾರದ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಕೋಲ್ಕತ್ತಾದ ಗಂಗಾ ನದಿಯ ಉಪನದಿಯಾದ ಹೂಗ್ಲಿ ನದಿಯಲ್ಲಿ ಕೈಯಲ್ಲಿ ಕ್ಯಾಮೆರಾ ಹಿಡಿದು ದೋಣಿ ಸವಾರಿ ಆನಂದಿಸುತ್ತಿರುವ ದೃಶ್ಯಗಳು ಕಂಡುಬಂದಿವೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಮೋದಿ, ಪ್ರತಿಯೊಬ್ಬ ಬಂಗಾಳಿಗನಿಗೂ ಗಂಗಾ ನದಿ ವಿಶೇಷ ಮತ್ತು ಪವಿತ್ರ ಸ್ಥಾನ ಹೊಂದಿದೆ ಎಂದು ಹೇಳಿದ್ದಾರೆ. ಗಂಗಾ ಕೇವಲ ನದಿ ಮಾತ್ರವಲ್ಲ, ಅದು ಇಲ್ಲಿನ ಸಂಸ್ಕೃತಿ, ಇತಿಹಾಸ ಮತ್ತು ಜೀವನಶೈಲಿಯ ಪ್ರತಿಬಿಂಬವಾಗಿದ್ದು, ಬಂಗಾಳದ ಆತ್ಮದಂತೆ ಹರಿಯುತ್ತದೆ ಎಂದು ಅವರು ವಿವರಿಸಿದ್ದಾರೆ.

ಹೂಗ್ಲಿ ನದಿಯ ದಡದಲ್ಲಿ ಕೆಲ ಸಮಯ ಕಳೆದಿದ್ದು, ಗಂಗಾ ಮಾತೆಗೆ ಕೃತಜ್ಞತೆ ಸಲ್ಲಿಸಿದ್ದಾಗಿ ಮೋದಿ ತಿಳಿಸಿದ್ದಾರೆ. ಇದೇ ವೇಳೆ ವಿದ್ಯಾಸಾಗರ್ ಸೇತು ಹಾಗೂ ಹೌರಾ ಸೇತುವೆಯನ್ನು ಕಣ್ತುಂಬಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ. ಪಶ್ಚಿಮ ಬಂಗಾಳದ ಅಭಿವೃದ್ಧಿ ಮತ್ತು ಬಂಗಾಳಿಗರ ಸಮೃದ್ಧಿಗಾಗಿ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿರುವುದಾಗಿ ಮೋದಿ ಹೇಳಿದ್ದಾರೆ.

ಇಸ್ರೇಲ್-ಲೆಬನಾನ್ ಕದನ ವಿರಾಮ ವಿಸ್ತರಣೆ: 21 ದಿನಗಳಿಗೆ ಒಪ್ಪಂದ, ಟ್ರಂಪ್ ಘೋಷಣೆ

0

ವಾಷಿಂಗ್ಟನ್: ಇಸ್ರೇಲ್ ಮತ್ತು ಲೆಬನಾನ್ ನಡುವಿನ ಕದನ ವಿರಾಮವನ್ನು ಇನ್ನೂ ಮೂರು ವಾರಗಳವರೆಗೆ (21 ದಿನಗಳು) ವಿಸ್ತರಿಸಲು ಎರಡೂ ದೇಶಗಳು ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಶ್ವೇತಭವನದಲ್ಲಿ ಏಪ್ರಿಲ್ 23ರಂದು ನಡೆದ ಎರಡನೇ ಹಂತದ ಉನ್ನತ ಮಟ್ಟದ ಮಾತುಕತೆಗಳ ಬಳಿಕ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಟ್ರಂಪ್ ಅವರ ಮಧ್ಯಸ್ಥಿಕೆಯಲ್ಲಿ ಏಪ್ರಿಲ್ 16ರಂದು ಮೊದಲ ಬಾರಿಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿತ್ತು.

ಎರಡೂ ದೇಶಗಳ ಪ್ರತಿನಿಧಿಗಳೊಂದಿಗೆ ನಡೆದ ಮಾತುಕತೆಗಳು ಯಶಸ್ವಿಯಾಗಿವೆ ಎಂದು ಟ್ರಂಪ್ ತಮ್ಮ ‘ಟ್ರೂತ್ ಸೋಷಿಯಲ್’ ಖಾತೆಯಲ್ಲಿ ತಿಳಿಸಿದ್ದಾರೆ. ಹಿಜ್ಬುಲ್ಲಾ ಉಗ್ರಗಾಮಿ ಸಂಘಟನೆಯ ವಿರುದ್ಧ ಲೆಬನಾನ್ ತನ್ನನ್ನು ರಕ್ಷಿಸಿಕೊಳ್ಳಲು ಅಮೆರಿಕ ಸಂಪೂರ್ಣ ಬೆಂಬಲ ನೀಡಲಿದೆ ಎಂಬ ಭರವಸೆಯನ್ನೂ ನೀಡಿದ್ದಾರೆ.

ಈ ಒಪ್ಪಂದವನ್ನು ಟ್ರಂಪ್ ಐತಿಹಾಸಿಕ ಕ್ಷಣವೆಂದು ಬಣ್ಣಿಸಿದ್ದು, ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಇದು ಮಹತ್ವದ ಹೆಜ್ಜೆಯಾಗಲಿದೆ ಎಂದು ಹೇಳಿದ್ದಾರೆ.

ಚಿನ್ನಸ್ವಾಮಿಯಲ್ಲಿ ಇಂದು ಬಿಗ್ ಫೈಟ್: ಆರ್‌ಸಿಬಿ-ಗುಜರಾತ್ ಟೈಟಾನ್ಸ್ ಮುಖಾಮುಖಿ, ಪೊಲೀಸ್ ಬಂದೋಬಸ್ತ್

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಪ್ರೇಮಿಗಳಿಗೆ ಇಂದು ಹಬ್ಬದ ಸಂಭ್ರಮ ಮನೆ ಮಾಡಿದೆ.

ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಸೀಸನ್‌ನಲ್ಲಿ ಆರ್‌ಸಿಬಿ ತವರು ನೆಲದಲ್ಲಿ ಆಡಲಿರುವ ಕೊನೆಯ ಲೀಗ್ ಪಂದ್ಯ ಇದಾಗಿರುವುದರಿಂದ ಅಭಿಮಾನಿಗಳಲ್ಲಿ ಭಾರೀ ಉತ್ಸಾಹ ಕಂಡುಬರುತ್ತಿದೆ.

ಪಂದ್ಯದ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಭದ್ರತೆ ಒದಗಿಸಲಾಗಿದ್ದು, ಸುಮಾರು 2,300 ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಡಿಸಿಪಿ, ಎಸಿಪಿ ಹಾಗೂ ಇನ್ಸ್‌ಪೆಕ್ಟರ್ ಹುದ್ದೆಯ ಅಧಿಕಾರಿಗಳ ನೇತೃತ್ವದಲ್ಲಿ ಜನಜಂಗುಳಿ ನಿಯಂತ್ರಣಕ್ಕೆ ವಿಶೇಷ ಭದ್ರತಾ ಯೋಜನೆ ರೂಪಿಸಲಾಗಿದೆ.

ಇದೇ ವೇಳೆ ಸ್ಟೇಡಿಯಂ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದ್ದು, ಹಲವೆಡೆ ವಾಹನ ನಿಲುಗಡೆ ನಿಷೇಧಿಸಲಾಗಿದೆ. ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಿರುವ ಪೊಲೀಸರು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕಳೆದ ಪಂದ್ಯಗಳ ವೇಳೆ ಟಿಕೆಟ್‌ಗಳ ಕಾಳಸಂತೆ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆ, ಸೆಂಟ್ರಲ್ ಕ್ರೈಂ ಬ್ರಾಂಚ್ ಪೊಲೀಸರು ಈ ಬಾರಿ ಮಫ್ತಿಯಲ್ಲಿ ಕಾರ್ಯಾಚರಣೆ ನಡೆಸಲಿದ್ದಾರೆ. ಟಿಕೆಟ್ ಅಕ್ರಮ ಮಾರಾಟಗಾರರ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲಾಗಿದೆ.

ಪಂದ್ಯ ವೀಕ್ಷಣೆಗೆ ಸಾವಿರಾರು ಅಭಿಮಾನಿಗಳು ಆಗಮಿಸುವುದರಿಂದ ಜನದಟ್ಟಣೆಯಲ್ಲಿ ಮೊಬೈಲ್ ಕಳ್ಳತನದಂತಹ ಘಟನೆಗಳು ಸಂಭವಿಸದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಸಾರ್ವಜನಿಕರು ತಮ್ಮ ಅಮೂಲ್ಯ ವಸ್ತುಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಸೂಚಿಸಲಾಗಿದೆ.

ಬೆಂಗ್ಳೂರಲ್ಲಿ ಮೇ 5ರವರೆಗೆ, ರಾಜ್ಯದಲ್ಲಿ ಏ.29ರವರೆಗೆ ಮಳೆ ಮುನ್ಸೂಚನೆ!

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ 5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಸಿಲಿನ ತೀವ್ರತೆಗೆ ಬೇಸತ್ತಿರುವ ಜನರಿಗೆ ಇದರಿಂದ ಸ್ವಲ್ಪ ಮಟ್ಟಿನ ತಂಪು ಸಿಗುವ ನಿರೀಕ್ಷೆ ಮೂಡಿದೆ.

ಕರಾವಳಿ, ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಏಪ್ರಿಲ್ 29ರವರೆಗೆ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಈ ನಡುವೆ ಬೆಂಗಳೂರಿನಲ್ಲೂ ಬಿಸಿಲಿನ ಬೇಗೆಯಿಂದ ಸ್ವಲ್ಪ ರಿಲೀಫ್ ಸಿಗುವ ಸಾಧ್ಯತೆ ಇದೆ.

ಏಪ್ರಿಲ್ 28ರಿಂದ ಮೇ 5ರವರೆಗೆ ರಾಜಧಾನಿಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಹೆಚ್ಚಿದ ಉಷ್ಣಾಂಶದಿಂದ ಬಸವಳಿದಿರುವ ಜನರು, ಮಳೆಯ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ.

ಮಳೆಯ ಸಿಂಚನದಿಂದ ತಾಪಮಾನ ಇಳಿಕೆಯಾಗುವ ಮೂಲಕ ವಾತಾವರಣ ತಂಪಾಗುವ ಸಾಧ್ಯತೆ ಇರುವುದರಿಂದ ಜನರಿಗೆ ಸ್ವಲ್ಪ ನೆಮ್ಮದಿ ಸಿಗುವ ಸಾಧ್ಯತೆ ಇದೆ.

error: Content is protected !!