ಮೈಸೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ತನ್ವೀರ್ ಸೇಠ್, ತಮ್ಮ ಆಸೆ ನಿರಾಸೆಯಾಗಿದೆ ಎಂದು ಹೇಳಿದ್ದಾರೆ.
“ರಾಹುಲ್ ಗಾಂಧಿ ಬಗ್ಗೆ ಪದ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಕೆ.ಎನ್. ರಾಜಣ್ಣ ಅವರನ್ನು ತಕ್ಷಣ ವಜಾ ಮಾಡಲಾಗಿತ್ತು. ಆದರೆ, ಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ ನೀಡಲಾಗಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಮೈಸೂರು ಭಾಗಕ್ಕೆ ಸಿಗಬೇಕಾದ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಹೇಳಿದ ಅವರು, ಪ್ರಸ್ತುತ ಸಚಿವ ಸಂಪುಟದ ಪಟ್ಟಿ ಆಶಾದಾಯಕವಾಗಿಲ್ಲ ಎಂದರು. ಸಚಿವ ಸ್ಥಾನ ಪಡೆದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ ಅವರು, ಆದರೆ ತಮ್ಮ ಭಾಗಕ್ಕೆ ಅನ್ಯಾಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
“ನನಗೆ ಸಿಗಬೇಕಾದ ಗೌರವ ಸಿಗಲಿಲ್ಲ. ನನ್ನ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ಬದ್ಧನಾಗಿರುತ್ತೇನೆ” ಎಂದು ತನ್ವೀರ್ ಸೇಠ್ ಹೇಳಿದರು.
ಸಚಿವ ಸಂಪುಟ ರಚನೆ ಯಾವ ಮಾನದಂಡದ ಆಧಾರದ ಮೇಲೆ ನಡೆದಿದೆ ಎಂಬುದು ತಿಳಿದಿಲ್ಲ ಎಂದು ಪ್ರಶ್ನಿಸಿದ ಅವರು, ದಾವಣಗೆರೆ ಉಪಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದವರಿಗೂ ಅವಕಾಶ ಸಿಕ್ಕಿಲ್ಲ ಎಂದು ಹೇಳಿದರು.
ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ, ಆದರೆ ಪಕ್ಷಕ್ಕೆ ನಿಷ್ಠೆಯಿಂದ ದುಡಿದವರಿಗೆ ಅವಕಾಶ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ತನ್ವೀರ್ ಸೇಠ್, ಇದರ ಹಿಂದೆ ಹಲವು ಬೆಳವಣಿಗೆಗಳು ನಡೆದಿವೆ ಎಂದು ಆರೋಪಿಸಿದರು. “ಪಕ್ಷದಿಂದ ಕೈತಪ್ಪಿಲ್ಲ, ನಮ್ಮ ನಾಯಕರಿಂದ ನನಗೆ ಕೈತಪ್ಪಿದೆ. ಹೈಕಮಾಂಡ್ ವಿರುದ್ಧ ಯಾವುದೇ ರೀತಿಯ ಆರೋಪ ಮಾಡಲು ನನಗೆ ಏನೂ ಇಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

