ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಬೃಹತ್ ‘ವಿಧಾನಸೌಧ ಚಲೋ’ ಪ್ರತಿಭಟನೆಯ ಹಿನ್ನೆಲೆಯಲ್ಲಿ ಶುಕ್ರವಾರ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕ ರಸ್ತೆಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.
ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಗ್ರಾಮಗಳ ರೈತರು ಕಳೆದ 80 ದಿನಗಳಿಂದ ಭೂಸ್ವಾಧೀನ ವಿರೋಧಿಸಿ ಹೋರಾಟ ನಡೆಸುತ್ತಿದ್ದು, ಇದೀಗ ರಾಜ್ಯ ಸರ್ಕಾರದ ಗಮನ ಸೆಳೆಯಲು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಕೋಡಿಹಳ್ಳಿ ಚಂದ್ರಶೇಖರ್ ಬಣ ನೇತೃತ್ವದಲ್ಲಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ 5,000ಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆಯಿದೆ.
ಜಂಗಮಕೋಟೆ ಭಾಗದ ಸುಮಾರು 2,800 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಅಭಿವೃದ್ಧಿಗಾಗಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಕೈಬಿಡುವಂತೆ ಆಗ್ರಹಿಸಿ ರೈತರು ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ಮತ್ತು ಕೆಐಎಡಿಬಿ ಅಧಿಕಾರಿಗಳು ರೈತರ ಬೇಡಿಕೆಗಳಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ ಎಂದು ಸಂಘಟನೆ ಮುಖಂಡರು ತಿಳಿಸಿದ್ದಾರೆ.
ಪ್ರತಿಭಟನಾ ಬೈಕ್ ರ್ಯಾಲಿಯು ಚಿಕ್ಕಬಳ್ಳಾಪುರದಿಂದ ಆರಂಭವಾಗಿ ದೇವನಹಳ್ಳಿ, ಯಲಹಂಕ, ಹೆಬ್ಬಾಳ ಫ್ಲೈಓವರ್ ಹಾಗೂ ಮೇಖ್ರಿ ಸರ್ಕಲ್ ಮಾರ್ಗವಾಗಿ ವಿಧಾನಸೌಧಕ್ಕೆ ತಲುಪಲಿದೆ. ಸಾವಿರಾರು ದ್ವಿಚಕ್ರ ವಾಹನಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲಿರುವುದರಿಂದ ವಿಮಾನ ನಿಲ್ದಾಣ ಸಂಪರ್ಕ ರಸ್ತೆಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ವಿಮಾನ ಪ್ರಯಾಣಿಕರು ನಿಗದಿತ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿಯೇ ವಿಮಾನ ನಿಲ್ದಾಣಕ್ಕೆ ತೆರಳುವಂತೆ ಸೂಚಿಸಲಾಗಿದೆ. ಸಾಧ್ಯವಾದರೆ ಬೆಂಗಳೂರು ಉಪನಗರ ರೈಲು ಸೇವೆ ಅಥವಾ ಇತರೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಲಹೆ ನೀಡಲಾಗಿದೆ.
ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ಪ್ರಮುಖ ಜಂಕ್ಷನ್ಗಳು ಹಾಗೂ ಸಂಚಾರ ದಟ್ಟಣೆ ಉಂಟಾಗುವ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ವಿಮಾನ ಪ್ರಯಾಣಿಕರು ಹಾಗೂ ಸಾರ್ವಜನಿಕರು ಶುಕ್ರವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ದೇವನಹಳ್ಳಿ–ಯಲಹಂಕ–ಹೆಬ್ಬಾಳ ಮಾರ್ಗದಲ್ಲಿ ಸಂಚರಿಸುವಾಗ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

