Home Blog

ಆಗಸ್ಟ್ 6ರಿಂದ ಮುಂಗಾರು ಅಧಿವೇಶನ; ಸಿಎಂ ಡಿಕೆ ಶಿವಕುಮಾರ್ ಘೋಷಣೆ

ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ಆಗಸ್ಟ್ 6ರಿಂದ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕೃಷ್ಣಾದಲ್ಲಿ ಮಾತನಾಡಿದ ಅವರು, ದೆಹಲಿಗೆ ಒಂದು ದಿನದ ಭೇಟಿ ನೀಡಿದ ಬಳಿಕ ಕಾಂಗ್ರೆಸ್ ನಾಯಕರು ಚರ್ಚಿಸಿ ಮೂರ್ನಾಲ್ಕು ದಿನಗಳಲ್ಲಿ ಅಧಿವೇಶನದ ದಿನಾಂಕವನ್ನು ಅಂತಿಮಗೊಳಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ತಿರುಪತಿ ದೇವಸ್ಥಾನದ ಮೊದಲ ಆರತಿ ವಿಚಾರವಾಗಿ ಮಾತನಾಡಿದ ಸಿಎಂ, ತಿರುಪತಿಯಲ್ಲಿ ಮಹಾರಾಜರ ಕಾಲದಿಂದಲೂ ಮೊದಲ ಆರತಿ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದೆ ಎಂದು ಹೇಳಿದರು.

ಪ್ರಸ್ತುತ ಪ್ರತಿದಿನ ಓರ್ವ ಅಧಿಕಾರಿಗೆ ಮೊದಲ ಆರತಿ ಪಡೆಯುವ ಅವಕಾಶವಿದ್ದು, ಅದರ ಬದಲಾಗಿ ಕರ್ನಾಟಕದಿಂದ ತಿರುಪತಿ ದರ್ಶನಕ್ಕೆ ತೆರಳುವ ಜನಪ್ರತಿನಿಧಿಗಳು, ನ್ಯಾಯಾಧೀಶರು, ಅಧಿಕಾರಿಗಳು, ಸಂಸದರು, ಮೇಯರ್‌ಗಳು ಹಾಗೂ ತಹಶೀಲ್ದಾರ್‌ಗಳಿಗೆ ಅವಕಾಶ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಅವಕಾಶ ಯಾವುದೇ ನಿರ್ದಿಷ್ಟ ಪಕ್ಷಕ್ಕೆ ಸೀಮಿತವಾಗಿರುವುದಿಲ್ಲ. ಯಾವುದೇ ಪಕ್ಷದ ಜನಪ್ರತಿನಿಧಿಗಳಾದರೂ ಮಾರ್ಗಸೂಚಿಗಳ ಪ್ರಕಾರ ಅವಕಾಶ ಪಡೆಯಬಹುದು ಎಂದು ಸ್ಪಷ್ಟಪಡಿಸಿದರು.

ತಿರುಪತಿ ಆಡಳಿತ ಮಂಡಳಿಯ ನಿಯಮಗಳಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ಮೊದಲ ಆರತಿ ಅವಕಾಶದ ವಿಚಾರದಲ್ಲಿ ಮಾತ್ರ ಕರ್ನಾಟಕದ ಪರವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ನಾಗರಿಕರ ದತ್ತಾಂಶ ಸುರಕ್ಷತೆಗೆ ರಾಜ್ಯ ಸರ್ಕಾರದ ಒತ್ತು

0

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಕರ್ನಾಟಕ ಸರ್ಕಾರದ ಡಿಜಿಟಲ್ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುರಕ್ಷಿತಗೊಳಿಸುವ ಉದ್ದೇಶದಿಂದ ‘ರಾಜ್ಯದ ದತ್ತಾಂಶಕ್ಕಾಗಿ ಸೈಬರ್ ಭದ್ರತಾ ಚೌಕಟ್ಟನ್ನು ಬಲಪಡಿಸುವುದು’ ವಿಷಯದ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರ ಬೆಂಗಳೂರಿನಲ್ಲಿ ನಡೆಯಿತು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ ಕೇಂದ್ರ (CeG), ಕರ್ನಾಟಕ ಸೈಬರ್ ಭದ್ರತಾ ಉತ್ಕೃಷ್ಟತಾ ಕೇಂದ್ರ (CySecK) ಹಾಗೂ ರಾಷ್ಟ್ರೀಯ ಇ-ಆಡಳಿತ ವಿಭಾಗದ ಸಹಯೋಗದಲ್ಲಿ ದಿ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ 30ಕ್ಕೂ ಹೆಚ್ಚು ಇಲಾಖೆಗಳು, ನಿಗಮಗಳು, ಮಂಡಳಿಗಳು ಹಾಗೂ ಸರ್ಕಾರಿ ಸಂಸ್ಥೆಗಳ 80ಕ್ಕೂ ಅಧಿಕ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಕಾರ್ಯಾಗಾರವನ್ನು ಡಿಪಿಎಆರ್ (ಇ-ಆಡಳಿತ) ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ (IAS), ಕರ್ನಾಟಕ ಇನ್ನೋವೇಶನ್ ಆಂಡ್ ಟೆಕ್ನಾಲಜಿ ಸೊಸೈಟಿ (KITS) ವ್ಯವಸ್ಥಾಪಕ ನಿರ್ದೇಶಕ ಡಾ. ಅವಿನಾಶ್ ಮೆನನ್ ರಾಜೇಂದ್ರನ್ (IAS) ಸೇರಿದಂತೆ ಹಿರಿಯ ಅಧಿಕಾರಿಗಳು ಉದ್ಘಾಟಿಸಿದರು.

ಕಾರ್ಯಾಗಾರದಲ್ಲಿ ‘ಭವಿಷ್ಯಕ್ಕಾಗಿ ಸೈಬರ್ ಸನ್ನದ್ಧ ಕರ್ನಾಟಕ’ ಹಾಗೂ ‘ಇ-ಆಡಳಿತಕ್ಕಾಗಿ ಸೈಬರ್ ಸ್ಥಿತಿಸ್ಥಾಪಕತ್ವ’ ವಿಷಯಗಳ ಕುರಿತು ತಜ್ಞರು ಉಪನ್ಯಾಸ ನೀಡಿದರು. ನಾಗರಿಕರ ದತ್ತಾಂಶ ರಕ್ಷಣೆ, ಸರ್ಕಾರದ ಡಿಜಿಟಲ್ ಮೂಲಸೌಕರ್ಯ ಭದ್ರತೆ ಹಾಗೂ ಸೈಬರ್ ಸ್ಥಿತಿಸ್ಥಾಪಕತ್ವ ಬಲಪಡಿಸುವ ಅಗತ್ಯವನ್ನು ಒತ್ತಿ ಹೇಳಲಾಯಿತು.

ರಾಜ್ಯ ದತ್ತಾಂಶ ಕೇಂದ್ರದ ಸೈಬರ್ ಭದ್ರತೆ, ಕೆಎಸ್‌ವಾನ್ (KSWAN) ಭದ್ರತೆ, ಸೆಕ್ಯುರಿಟಿ ಆಪರೇಷನ್ಸ್ ಸೆಂಟರ್ (SOC), ರಾಜ್ಯ CSIRT, Zero Trust ತತ್ವ, ದತ್ತಾಂಶ ವರ್ಗೀಕರಣ, ಡಿಪಿಡಿಪಿ (DPDP) ಸನ್ನದ್ಧತೆ ಹಾಗೂ ಸೈಬರ್ ಭದ್ರತಾ ಸಾಮರ್ಥ್ಯ ವೃದ್ಧಿ ಸೇರಿದಂತೆ ಆರು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಿತು.

ಕಾರ್ಯಾಗಾರದ ಅಂತ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಸೈಬರ್ ಭದ್ರತೆಯನ್ನು ಇನ್ನಷ್ಟು ಬಲಪಡಿಸಲು ‘ಜಂಟಿ ಕ್ರಿಯಾ ಯೋಜನೆ’ (Joint Action Plan) ಸಿದ್ಧಪಡಿಸಲಾಯಿತು. ಸುರಕ್ಷಿತ, ಸ್ಥಿತಿಸ್ಥಾಪಕ ಮತ್ತು ಭವಿಷ್ಯಕ್ಕೆ ಸನ್ನದ್ಧವಾದ ಡಿಜಿಟಲ್ ಆಡಳಿತ ವ್ಯವಸ್ಥೆ ನಿರ್ಮಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.

ಗುತ್ತಿಗೆದಾರರ ಹಿಡಿತದಿಂದ ಉದ್ಯಾನವನಕ್ಕೆ ಮುಕ್ತಿ ನೀಡಿ!

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 11ರ ವಿವೇಕಾನಂದ ನಗರದ ಶ್ರೀ ಶಾರದಾ ಮಾತೆ ಹಾಗೂ ಶ್ರೀ ರಾಮಕೃಷ್ಣ ಪರಮಹಂಸ ಉದ್ಯಾನವನ ಹಲವು ವರ್ಷಗಳಿಂದ ಗುತ್ತಿಗೆದಾರರ ಸಾಮಗ್ರಿಗಳ ಸಂಗ್ರಹ ಕೇಂದ್ರವಾಗಿ ಮಾರ್ಪಟ್ಟಿದ್ದು, ಸಾರ್ವಜನಿಕರ ಬಳಕೆಗೆ ಉದ್ಯಾನವನ್ನು ಮುಕ್ತಗೊಳಿಸಿ ಅಭಿವೃದ್ಧಿಪಡಿಸುವಂತೆ ಶ್ರೀ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಸಮಿತಿ (ರಿ) ವತಿಯಿಂದ ಜಿಲ್ಲಾಧಿಕಾರಿ, ನಗರಸಭೆಯ ಆಡಳಿತಾಧಿಕಾರಿ ಹಾಗೂ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಗಿದೆ.

ಸಮಿತಿಯ ಪದಾಧಿಕಾರಿಗಳು ಮಾತನಾಡಿ, ಸುಮಾರು ಎರಡು ವರ್ಷಗಳ ಹಿಂದೆ ₹10 ಲಕ್ಷ ವೆಚ್ಚದಲ್ಲಿ ಉದ್ಯಾನದಲ್ಲಿ ವಾಕಿಂಗ್ ಪಾಥ್ ನಿರ್ಮಿಸಲಾಗಿದ್ದರೂ, 24×7 ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದ ಗುತ್ತಿಗೆದಾರರು ಕಾಮಗಾರಿ ಸಾಮಗ್ರಿಗಳನ್ನು ಉದ್ಯಾನದಲ್ಲೇ ಸಂಗ್ರಹಿಸಿರುವ ಕಾರಣ ಸಾರ್ವಜನಿಕರಿಗೆ ಅದರ ಉಪಯೋಗವೇ ಇಲ್ಲದಂತಾಗಿದೆ ಎಂದು ದೂರಿದರು.

ಇದರ ಜೊತೆಗೆ ಉದ್ಯಾನದಲ್ಲಿ ಗಿಡಗಂಟಿಗಳು ಬೆಳೆದು ನಿರ್ವಹಣೆ ಇಲ್ಲದೆ ವಾಕಿಂಗ್ ಪಾಥ್ ಹಾಳಾಗುತ್ತಿದ್ದು, ಹಲವು ಬಾರಿ ಮೌಖಿಕ ಹಾಗೂ ಲಿಖಿತ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ನಾಗರಿಕರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.

ಉದ್ಯಾನ ಅಭಿವೃದ್ಧಿಗೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ₹60 ಲಕ್ಷ ಅನುದಾನವೂ ಮೀಸಲಾಗಿದ್ದು, ಮೊದಲು ಉದ್ಯಾನದಲ್ಲಿರುವ ಗುತ್ತಿಗೆದಾರರ ಸಾಮಗ್ರಿಗಳನ್ನು ತೆರವುಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು. ನಂತರ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ವಾರ್ಡ್ ಸಂಖ್ಯೆ 11ರ ನಾಗರಿಕರ ಪರವಾಗಿ ಸಮಿತಿಯ ಅಧ್ಯಕ್ಷ ಎ.ಟಿ. ನರೇಗಲ್ಲ ಸೇರಿದಂತೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಹಣವಿಲ್ಲದೆ ಹೈರಾಣಾದ ಗ್ರಾಮ ಪಂಚಾಯಿತಿಗಳು

0

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಮುಂಡರಗಿ ತಾಲೂಕಿನ ಗ್ರಾಮ ಪಂಚಾಯಿತಿಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, 15ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆಯಾಗದ ಕಾರಣ ಕುಡಿಯುವ ನೀರು, ಬೀದಿದೀಪ, ರಸ್ತೆ ದುರಸ್ತಿ, ಸ್ವಚ್ಛತೆ ಸೇರಿದಂತೆ ಮೂಲಭೂತ ಸೇವೆಗಳ ನಿರ್ವಹಣೆಯೇ ದುಸ್ತರವಾಗಿದೆ.

2025-26 ಹಾಗೂ 2026-27ನೇ ಸಾಲಿನ ಅನುದಾನ ಇನ್ನೂ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಪಂಚಾಯಿತಿಗಳು ತೆರಿಗೆ ಸಂಗ್ರಹದ ಹಣದಲ್ಲೇ ಆಡಳಿತ ನಡೆಸುತ್ತಿವೆ. ಒಂದು ವರ್ಷದಿಂದ ಖರೀದಿಸಿದ ಸಾಮಗ್ರಿಗಳ ಬಿಲ್ ಪಾವತಿಸಲು ಸಾಧ್ಯವಾಗದೆ, ಗುತ್ತಿಗೆದಾರರು ಮತ್ತು ಪೂರೈಕೆದಾರರಿಂದ ಅಧಿಕಾರಿಗಳ ಮೇಲೆ ಒತ್ತಡ ಹೆಚ್ಚಾಗಿದೆ.

ಇದರ ಜೊತೆಗೆ ಇ-ಸ್ವತ್ತು ತಂತ್ರಾಂಶದ ನಿರಂತರ ತಾಂತ್ರಿಕ ದೋಷ, ಸಿಬ್ಬಂದಿ ಕೊರತೆ ಹಾಗೂ ಹೆಚ್ಚುತ್ತಿರುವ ಸಾರ್ವಜನಿಕ ಒತ್ತಡದಿಂದ ಪಂಚಾಯಿತಿ ಆಡಳಿತ ಮತ್ತಷ್ಟು ಸಂಕಷ್ಟಕ್ಕೀಡಾಗಿದೆ.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘವು ತಕ್ಷಣ ಅನುದಾನ ಬಿಡುಗಡೆ, ಖಾಲಿ ಹುದ್ದೆಗಳ ಭರ್ತಿ, ತಾಂತ್ರಿಕ ಸಮಸ್ಯೆಗಳ ನಿವಾರಣೆ ಹಾಗೂ ಸಾರ್ವಜನಿಕ ಸೇವೆ ಸುಗಮಗೊಳಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

“15ನೇ ಹಣಕಾಸು ಆಯೋಗದ ಅನುದಾನ ಬಂದಿಲ್ಲ. ತೆರಿಗೆ ಸಂಗ್ರಹದ ಹಣದಲ್ಲೇ ಕುಡಿಯುವ ನೀರು, ರಸ್ತೆ, ಚರಂಡಿ ಹಾಗೂ ಸಿಬ್ಬಂದಿ ವೇತನ ನಿರ್ವಹಿಸುತ್ತಿದ್ದೇವೆ. ಅನುದಾನ ಬಿಡುಗಡೆಯಾಗದಿದ್ದರೆ ಗ್ರಾಮಗಳ ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಲಿದೆ.”

– ಹೆಸರು ಬಹಿರಂಗಪಡಿಸಲು ಇಚ್ಛಿಸದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಮುಂಡರಗಿ ತಾಲೂಕು

ಶಿಥಿಲ ಸೇದು ಬಾವಿಗೆ ಹೊಸ ಜೀವ: ಗಂಗಾಮಾತೆ ಪೂಜೆಯೊಂದಿಗೆ ಸಂಭ್ರಮಿಸಿದ ಜನತೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಜನಸಹಭಾಗಿತ್ವದಿಂದ ಅಸಾಧ್ಯವೂ ಸಾಧ್ಯ ಎಂಬುದನ್ನು ಲಕ್ಷ್ಮೇಶ್ವರ ಪಟ್ಟಣದ 3ನೇ ವಾರ್ಡಿನ ಬೇವಿನಮರದ ಓಣಿಯ ನಿವಾಸಿಗಳು ಸಾಬೀತುಪಡಿಸಿದ್ದಾರೆ. ಹಲವು ವರ್ಷಗಳಿಂದ ಶಿಥಿಲಗೊಂಡಿದ್ದ ಸಾಂಪ್ರದಾಯಿಕ ಸೇದು ಬಾವಿಯನ್ನು ಸ್ಥಳೀಯರು ಶ್ರಮದಾನ ಹಾಗೂ ಸ್ವಂತ ವೆಚ್ಚದಲ್ಲಿ ಜೀರ್ಣೋದ್ಧಾರಗೊಳಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಬಾವಿಯನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಕುಸಿದಿದ್ದ ಗೋಡೆ ದುರಸ್ತಿ, ಸುರಕ್ಷತಾ ಕಟ್ಟೆ ನಿರ್ಮಾಣ ಹಾಗೂ ಕಬ್ಬಿಣದ ಗೇಟ್ ಅಳವಡಿಸುವ ಮೂಲಕ ಮತ್ತೆ ಸಾರ್ವಜನಿಕ ಬಳಕೆಗೆ ಸಜ್ಜುಗೊಳಿಸಲಾಗಿದೆ.

ಜೀರ್ಣೋದ್ಧಾರ ಪೂರ್ಣಗೊಂಡ ಬಳಿಕ ಓಣಿಯ ಮಹಿಳೆಯರು ಗಂಗಾಮಾತೆಗೆ ಉಡಿ ತುಂಬಿ ವಿಶೇಷ ಪೂಜೆ ಸಲ್ಲಿಸಿ ಬಾವಿಯ ಪುನರುಜ್ಜೀವನವನ್ನು ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಗಣಪತಿ ಬೇವಿನಮರದ, ಹೊನ್ನಪ್ಪ ವಡ್ಡರ, ಶಂಕರ ಬ್ಯಾಡಗಿ, ನಾಗರಾಜ ಕೊಂಗಿ, ಮಂಜುನಾಥ ಬೇವಿನಮರದ, ಗಣೇಶ ನೂಲ್ವಿ, ಮುರಘೇಂದ್ರಸ್ವಾಮಿ ಹಿರೇಮಠ, ಶಿವಣ್ಣ ಪಾಣಿಗಟ್ಟಿ ಸೇರಿದಂತೆ ಸ್ಥಳೀಯ ನಾಗರಿಕರು ಹಾಗೂ ಮಹಿಳೆಯರು ಭಾಗವಹಿಸಿದ್ದರು.

“ಸಾಂಪ್ರದಾಯಿಕ ಜಲಮೂಲಗಳ ಸಂರಕ್ಷಣೆ ಇಂದಿನ ಅಗತ್ಯ. ಜನಪ್ರತಿನಿಧಿಗಳು ಮಾಡಬೇಕಾದ ಕೆಲಸವನ್ನು ನಾಗರಿಕರೇ ಒಗ್ಗಟ್ಟಿನಿಂದ ಮಾಡಿ ಮಾದರಿಯಾಗಿದ್ದಾರೆ.”

– ಮಂಜುನಾಥ ಮಾಗಡಿ, ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ

ಹಸಿರು ಗದಗಕ್ಕೆ ರೋಟರಿಯ ಮಹಾಸಂಕಲ್ಪ!

0

ವಿಜಯಸಾಕ್ಷಿ ಸುದ್ದಿ, ಗದಗ: ಪರಿಸರ ಸಂರಕ್ಷಣೆ ಸರ್ಕಾರದ ಹೊಣೆ ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕನ ಸಾಮಾಜಿಕ ಜವಾಬ್ದಾರಿಯೂ ಆಗಿದೆ ಎಂಬ ಸಂದೇಶದೊಂದಿಗೆ ರೋಟರಿ ಜಿಲ್ಲಾ 3170 ವತಿಯಿಂದ ಗದಗ ಜಿಲ್ಲೆಯಾದ್ಯಂತ ಬೃಹತ್ ವೃಕ್ಷಾರೋಪಣ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು.

ಜುಲೈ 12ರಿಂದ 19ರವರೆಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯಲಿರುವ ಈ ಹಸಿರು ಅಭಿಯಾನಕ್ಕೆ ಗದಗ-ಬೆಟಗೇರಿ ರೋಟರಿ ಕ್ಲಬ್‌ನ ಐಕೇರ್ ಸೆಂಟರ್ ಆವರಣದಲ್ಲಿ ಸಸಿ ನೆಟ್ಟು, ನೀರೆರೆಯುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.

ಗದಗ-ಬೆಟಗೇರಿ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪ್ರದೀಪ ಉಗಲಾಟ ಮಾತನಾಡಿ, ಹವಾಮಾನ ವೈಪರೀತ್ಯ, ಅರಣ್ಯ ನಾಶ ಹಾಗೂ ಪರಿಸರ ಅಸಮತೋಲನದಂತಹ ಸವಾಲುಗಳನ್ನು ಎದುರಿಸಲು ವೃಕ್ಷಾರೋಪಣವೇ ಪರಿಣಾಮಕಾರಿ ಮಾರ್ಗವಾಗಿದೆ ಎಂದರು.

ರೋಟರಿ ಕೇವಲ ಸಸಿ ನೆಡುವ ಕಾರ್ಯಕ್ರಮಕ್ಕೆ ಸೀಮಿತವಾಗದೇ, ನೆಟ್ಟ ಗಿಡಗಳ ಸಂರಕ್ಷಣೆಗೆ ವಿಶೇಷ ಯೋಜನೆ ರೂಪಿಸಿದೆ. ನಿಯಮಿತ ನೀರುಣಿಕೆ, ಬೇಲಿ ಅಳವಡಿಕೆ ಹಾಗೂ ನಿರಂತರ ಮೇಲ್ವಿಚಾರಣೆಯ ಮೂಲಕ ಗಿಡಗಳನ್ನು ಮರಗಳಾಗಿ ಬೆಳೆಸಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಾದ್ಯಂತ ನಡೆಯಲಿರುವ ಅಭಿಯಾನದಲ್ಲಿ ರೋಟರಾಕ್ಟ್, ಇಂಟರಾಕ್ಟ್ ಸದಸ್ಯರು, ವಿದ್ಯಾರ್ಥಿಗಳು, ಶಿಕ್ಷಕರು, ಸ್ವಯಂಸೇವಾ ಸಂಸ್ಥೆಗಳು ಹಾಗೂ ಪರಿಸರ ಪ್ರೇಮಿಗಳು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಡಾ. ಧನೇಶ ದೇಸಾಯಿ, ಡಾ. ರಾಜಶೇಖರ ಬಳ್ಳಾರಿ, ಸುರೇಶ ಕುಂಬಾರ ಹಾಗೂ ಮಂಜುಳಾ ಅಕ್ಕಿ ಮಾತನಾಡಿ, ಪರಿಸರ ಉಳಿಸುವ ಕೆಲಸದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಅರಣ್ಯಾಧಿಕಾರಿ ಎನ್. ಜಯರಾಮ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರೋಟರಿ ಕೈಗೊಂಡಿರುವ ವೃಕ್ಷಾರೋಪಣ ಅಭಿಯಾನಕ್ಕೆ ಸಮಾಜದ ಎಲ್ಲ ವರ್ಗದವರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಸಂತೋಷ ಅಕ್ಕಿ ಅತಿಥಿಗಳನ್ನು ಪರಿಚಯಿಸಿದರು. ಬಾಲಕೃಷ್ಣ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ಕ್ಲಬ್ ಕಾರ್ಯದರ್ಶಿ ಅಕ್ಷಯ್ ಶೆಟ್ಟಿ ವಂದಿಸಿದರು. ರೋಟರಿ ಕ್ಲಬ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

“ಗಿಡ ನೆಡುವುದಷ್ಟೇ ಸಾಕಾಗುವುದಿಲ್ಲ. ಅದು ಮರವಾಗಿ ಬೆಳೆಯುವವರೆಗೆ ಅದರ ಸಂರಕ್ಷಣೆ ಮತ್ತು ಪೋಷಣೆಯ ಜವಾಬ್ದಾರಿಯನ್ನೂ ನಾವು ವಹಿಸಿಕೊಳ್ಳಬೇಕು.”

– ಡಾ. ಪ್ರದೀಪ ಉಗಲಾಟ

ಹಸಿರು ಅಭಿಯಾನದ ಪ್ರಮುಖ ಅಂಶಗಳು

  • ಜುಲೈ 12ರಿಂದ 19ರವರೆಗೆ ಜಿಲ್ಲೆಯಾದ್ಯಂತ ವೃಕ್ಷಾರೋಪಣ
  • ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿ ನೆಟ್ಟು ಪೋಷಿಸಲು ಕರೆ
  • ಗದಗ ಜಿಲ್ಲಾ ಕ್ರೀಡಾಂಗಣ ಎದುರಿನ ಇಂದಿರಾ ರೋಟರಿ ಕ್ಲಬ್‌ನಲ್ಲಿ ‘ಒಬ್ಬರಿಗೊಂದು ಸಸಿ’ ಉಚಿತ ವಿತರಣೆ
  • ನೆಟ್ಟ ಗಿಡಗಳ ಸಂರಕ್ಷಣೆಗೆ ರೋಟರಿಯಿಂದ ನಿರಂತರ ಮೇಲ್ವಿಚಾರಣೆ

ಆದಿ ಶಂಕರಾಚಾರ್ಯರ ಕುರಿತು ವಿವಾದಾತ್ಮಕ ಹೇಳಿಕೆ? ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಹರಿಕಥೆ ಕಾರ್ಯಕ್ರಮವೊಂದರ ವೇಳೆ ಶ್ರೀ ಆದಿ ಶಂಕರಾಚಾರ್ಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಆಚಾರ್ಯ ಮಧ್ವರ ಕುರಿತ ಕಥೆ ಹೇಳುವ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವತಿಯರು ಶಂಕರಾಚಾರ್ಯರನ್ನು ಏಕವಚನದಲ್ಲಿ ಉಲ್ಲೇಖಿಸಿದ್ದಾರೆ ಹಾಗೂ ಕೆಲವು ವಿಚಾರಗಳನ್ನು ಆಧಾರರಹಿತವಾಗಿ ಪ್ರಸ್ತಾಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶಂಕರಾಚಾರ್ಯರ ಅನುಯಾಯಿಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಬೆಳಗಾವಿಯಿಂದ ಬಂದಿದ್ದ ತಂಡವೊಂದು ಈ ಧಾರ್ಮಿಕ ಕಾರ್ಯಕ್ರಮ ನಡೆಸಿತ್ತು ಎಂದು ಹೇಳಲಾಗುತ್ತಿದೆ.

ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ಕೆಲವರು, ಶಂಕರಾಚಾರ್ಯರ ಬಗ್ಗೆ ಮಾತನಾಡುವ ಮುನ್ನ ಅವರ ಜೀವನ ಮತ್ತು ತತ್ವಗಳನ್ನು ತಿಳಿದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಹೇಳಿಕೆ ನೀಡಿದವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ಕೆಲವರು ಕಾನೂನು ಕ್ರಮದ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.

ಘಟನೆ ಕುರಿತು ಸಂಬಂಧಪಟ್ಟವರಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಬರಬೇಕಿದೆ.

Heart Attack Warning Signs: ಈ ಸಣ್ಣ ಲಕ್ಷಣಗಳು ದೊಡ್ಡ ಅಪಾಯದ ಸೂಚನೆಯಾಗಬಹುದು!

0

ಬದಲಾಗುತ್ತಿರುವ ಜೀವನಶೈಲಿ, ಹೆಚ್ಚುತ್ತಿರುವ ಒತ್ತಡ ಹಾಗೂ ಆಹಾರ ಪದ್ಧತಿಯಲ್ಲಿನ ಬದಲಾವಣೆಗಳಿಂದ ಇತ್ತೀಚಿನ ದಿನಗಳಲ್ಲಿ ಹೃದ್ರೋಗದ ಅಪಾಯ ಹೆಚ್ಚುತ್ತಿದೆ.

ಆದರೆ ಹೃದಯಾಘಾತದ ಆರಂಭಿಕ ಲಕ್ಷಣಗಳನ್ನು ಹಲವರು ಗ್ಯಾಸ್ಟ್ರಿಕ್ ಸಮಸ್ಯೆ ಎಂದು ನಿರ್ಲಕ್ಷಿಸುತ್ತಿರುವುದು ಅಪಾಯಕಾರಿ ಎಂದು ವೈದ್ಯರು ಎಚ್ಚರಿಸಿದ್ದಾರೆ.

ಹೃದಯಾಘಾತ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯ ನಡುವೆ ವ್ಯತ್ಯಾಸವಿದ್ದು, ಲಕ್ಷಣಗಳನ್ನು ಸರಿಯಾಗಿ ಗುರುತಿಸುವುದು ಅಗತ್ಯವಾಗಿದೆ. ಗ್ಯಾಸ್ಟ್ರಿಕ್ ಸಮಸ್ಯೆ ಸಾಮಾನ್ಯವಾಗಿ ಆಹಾರ ಸೇವನೆಗೆ ಸಂಬಂಧಿಸಿದ್ದಾಗಿರುತ್ತದೆ. ಊಟದ ಬಳಿಕ ಅಥವಾ ದೀರ್ಘಕಾಲ ಆಹಾರ ಸೇವಿಸದಿದ್ದಾಗ ಹೊಟ್ಟೆ ಉಬ್ಬರ, ಅಸ್ವಸ್ಥತೆ ಕಾಣಿಸಿಕೊಳ್ಳಬಹುದು.

ಆದರೆ ಹೃದಯಾಘಾತದ ಸಂದರ್ಭದಲ್ಲಿ ಎದೆ ನೋವು ಅಥವಾ ಅಸ್ವಸ್ಥತೆಯ ಜೊತೆಗೆ ತೀವ್ರ ಆಯಾಸ, ಅತಿಯಾದ ಬೆವರು, ಹೃದಯ ಬಡಿತ ಹೆಚ್ಚಳ, ವಾಂತಿ, ಕೈಗಳಲ್ಲಿ ನೋವು ಅಥವಾ ಸೆಳೆತದಂತಹ ಲಕ್ಷಣಗಳು ಕಾಣಿಸಿಕೊಳ್ಳಬಹುದು.

ಇನ್ನು ನಿದ್ರೆಯಲ್ಲಿ ಹಠಾತ್ತನೆ ಎಚ್ಚರಗೊಳ್ಳುವುದು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುವುದನ್ನು ನಿರ್ಲಕ್ಷಿಸಬಾರದು. ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾಗುವ ಸಮಸ್ಯೆ ಅಥವಾ ನಿದ್ರೆಯ ಸಮಯದ ಉಸಿರಾಟದ ತೊಂದರೆಯಂತಹ ಆರೋಗ್ಯ ಸಮಸ್ಯೆಗಳ ಸೂಚನೆಯಾಗಿರಬಹುದು.

ಶೌಚಾಲಯದಲ್ಲಿ ಮಲವಿಸರ್ಜನೆ ಮಾಡುವಾಗ ಅತಿಯಾಗಿ ಒತ್ತಡ ಹಾಕುವುದರಿಂದ ಹೃದಯದ ಮೇಲೆ ಒತ್ತಡ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ಮಲಬದ್ಧತೆ ಸಮಸ್ಯೆ ಇರುವವರು ಎಚ್ಚರಿಕೆ ವಹಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಮಲಬದ್ಧತೆ ತಡೆಯಲು ಹೆಚ್ಚಿನ ನಾರಿನಾಂಶ ಇರುವ ಆಹಾರ ಸೇವನೆ, ಸಾಕಷ್ಟು ನೀರು ಕುಡಿಯುವುದು ಹಾಗೂ ಅಗತ್ಯವಿದ್ದಲ್ಲಿ ವೈದ್ಯರ ಸಲಹೆ ಪಡೆಯುವುದು ಉತ್ತಮವಾಗಿದೆ.

ಹೃದಯಾಘಾತದ ಯಾವುದೇ ಲಕ್ಷಣಗಳು ಕಂಡುಬಂದರೆ ತಡಮಾಡದೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ವೈದ್ಯರು ತಿಳಿಸಿದ್ದಾರೆ.

ದಶಕಗಳ ಬಳಿಕ ಕಾಲೇಜು ಚುನಾವಣೆ ನಿರೀಕ್ಷೆ; ಶೈಕ್ಷಣಿಕ ವರ್ಷ ಆರಂಭವಾದರೂ ಎಲೆಕ್ಷನ್ ಇಲ್ಲ!

ಬೆಂಗಳೂರು: ರಾಜ್ಯದಲ್ಲಿ ದಶಕಗಳಿಂದ ಸ್ಥಗಿತಗೊಂಡಿರುವ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಮರು ಆರಂಭಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

2026-27ನೇ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿ ಚುನಾವಣೆ ನಡೆಸಲು ಸರ್ಕಾರ ಮುಂದಾಗಿತ್ತು ಎನ್ನಲಾಗಿದ್ದರೂ, ಶೈಕ್ಷಣಿಕ ವರ್ಷ ಆರಂಭವಾದ ಬಳಿಕವೂ ಈ ಕುರಿತು ಯಾವುದೇ ಸ್ಪಷ್ಟ ನಿರ್ಧಾರ ಪ್ರಕಟವಾಗಿಲ್ಲ.

ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸುವ ಸಂಬಂಧ ಸರ್ಕಾರ ಈಗಾಗಲೇ ಸಮಿತಿ ರಚಿಸಿ ವರದಿ ಪಡೆದಿದೆ. ಚುನಾವಣೆ ನಡೆಸಬೇಕೇ ಅಥವಾ ಬೇಡವೇ ಎಂಬ ಕುರಿತು ಶಿಕ್ಷಣ ತಜ್ಞರು, ಸಾರ್ವಜನಿಕರು ಹಾಗೂ ಪೋಷಕರ ಅಭಿಪ್ರಾಯವನ್ನೂ ಸಂಗ್ರಹಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ವಿದ್ಯಾರ್ಥಿ ಸಂಘದ ಚುನಾವಣೆ ಮರು ಆರಂಭವಾಗಲಿದೆ ಎಂಬ ನಿರೀಕ್ಷೆ ವಿದ್ಯಾರ್ಥಿ ವಲಯದಲ್ಲಿತ್ತು. ಆದರೆ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳು ಆರಂಭವಾಗಿದ್ದರೂ ಚುನಾವಣೆ ಪ್ರಕ್ರಿಯೆಗೆ ಚಾಲನೆ ದೊರೆತಿಲ್ಲ. ಇದರಿಂದ ವಿದ್ಯಾರ್ಥಿ ಸಂಘಟನೆಗಳು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿವೆ.

ವಿದ್ಯಾರ್ಥಿ ಸಂಘದ ಚುನಾವಣೆ ಮೂಲಕ ಕಾಲೇಜು ಹಂತದಲ್ಲಿಯೇ ನಾಯಕತ್ವ ಗುಣ ಬೆಳೆಸಲು ಹಾಗೂ ಭವಿಷ್ಯದ ನಾಯಕರನ್ನು ರೂಪಿಸಲು ಸಾಧ್ಯವಾಗುತ್ತದೆ. ಅಲ್ಲದೆ, ಕಾಲೇಜುಗಳಲ್ಲಿನ ಸಮಸ್ಯೆಗಳನ್ನು ಪ್ರಶ್ನಿಸಲು ವಿದ್ಯಾರ್ಥಿಗಳಿಗೆ ಸೂಕ್ತ ವೇದಿಕೆ ಸಿಗಲಿದೆ ಎಂದು ಪದವಿ ವಿದ್ಯಾರ್ಥಿ ನಿತೀನ್ ಅಭಿಪ್ರಾಯಪಟ್ಟಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯಲ್ಲಿನ ಆಡಳಿತಾತ್ಮಕ ಬೆಳವಣಿಗೆಗಳ ನಡುವೆಯೇ ಕಾಲೇಜು ಚುನಾವಣೆ ಯೋಜನೆ ವಿಳಂಬವಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಸರ್ಕಾರ ಆದಷ್ಟು ಬೇಗ ವಿದ್ಯಾರ್ಥಿ ಸಂಘದ ಚುನಾವಣೆ ಕುರಿತು ಸ್ಪಷ್ಟ ನಿರ್ಧಾರ ಕೈಗೊಂಡು, ಚುನಾವಣೆಗೆ ಚಾಲನೆ ನೀಡಬೇಕು ಎಂದು ವಿದ್ಯಾರ್ಥಿ ನಾಯಕರು ಒತ್ತಾಯಿಸಿದ್ದಾರೆ.

ಒಟ್ಟಿನಲ್ಲಿ, ದಶಕಗಳ ಬಳಿಕ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ಮರು ಆರಂಭಿಸುವಂತೆ ಬೇಡಿಕೆ ತೀವ್ರಗೊಂಡಿದ್ದು, ಸರ್ಕಾರ ಈ ಕುರಿತು ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ಮಹಿಳಾ ಸಂಘದ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ; ಸಾವಿರಾರು ಮಹಿಳೆಯರಿಗೆ ಹಣ ವಾಪಸ್ ಸಿಗದೆ ಸಂಕಷ್ಟ!

ಬಾಗಲಕೋಟೆ: ಮಹಿಳಾ ಸಂಘದ ಹೆಸರಿನಲ್ಲಿ ಸಾವಿರಾರು ಮಹಿಳೆಯರಿಂದ ಹಣ ಸಂಗ್ರಹಿಸಿ ಕೋಟ್ಯಂತರ ರೂಪಾಯಿ ವಂಚಿಸಿರುವ ಆರೋಪ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಕೇಳಿಬಂದಿದೆ.

ದುರ್ಗಾದೇವಿ ಮಹಿಳಾ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ವಿದ್ಯಾ ಹಳ್ಳೂರು ಹಾಗೂ ಕಾರ್ಯದರ್ಶಿ ರಚನಾ ಬಂಟನೂರು ವಿರುದ್ಧ ಹಣ ಕಳೆದುಕೊಂಡ ಮಹಿಳೆಯರು ಆರೋಪ ಮಾಡಿದ್ದಾರೆ.

ದುರ್ಗಾದೇವಿ ಮಹಿಳಾ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಡಿ ಬೀಳಗಿ ತಾಲೂಕಿನಾದ್ಯಂತ 170ಕ್ಕೂ ಹೆಚ್ಚು ಮಹಿಳಾ ಸಂಘಗಳನ್ನು ಆರಂಭಿಸಲಾಗಿತ್ತು. ವಿವಿಧ ಗ್ರಾಮಗಳ ಸಾವಿರಾರು ಮಹಿಳೆಯರಿಂದ ಪ್ರತಿ ವಾರ 100, 500 ಹಾಗೂ 1,000 ರೂ.ನಂತೆ ಹಣ ಸಂಗ್ರಹಿಸಲಾಗುತ್ತಿತ್ತು ಎನ್ನಲಾಗಿದೆ.

ಮೂರು ವರ್ಷಗಳ ಬಳಿಕ ಹೆಚ್ಚಿನ ಬಡ್ಡಿಯೊಂದಿಗೆ ಹಣ ಹಿಂತಿರುಗಿಸುವುದಾಗಿ ಮಹಿಳೆಯರನ್ನು ನಂಬಿಸಲಾಗಿತ್ತು. ಆದರೆ, ಅವಧಿ ಮುಗಿದರೂ ಹಣ ವಾಪಸ್ ನೀಡಿಲ್ಲ. ಒಂದೊಂದು ಸಂಘಕ್ಕೆ 15ರಿಂದ 20 ಲಕ್ಷ ರೂ.ವರೆಗೆ ವಂಚಿಸಲಾಗಿದೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಹಣ ವಾಪಸ್ ಕೇಳಿದ ಮಹಿಳೆಯರಿಗೆ ಖಾತೆಯಲ್ಲಿ ಹಣವಿಲ್ಲದೆ ಬೌನ್ಸ್ ಆಗಿರುವ ಚೆಕ್‌ಗಳನ್ನು ನೀಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಅಲ್ಲದೆ, ಪೊಲೀಸರೊಂದಿಗೆ ಸಂಬಂಧವಿದೆ ಎಂದು ಹೇಳಿ ಬೆದರಿಕೆ ಹಾಕಲಾಗಿದೆ ಎಂದು ನೊಂದ ಮಹಿಳೆಯರು ದೂರಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ಮಹಿಳೆಯರು ಬೀಳಗಿಯಲ್ಲಿರುವ ಸಂಸ್ಥೆಯ ಕಚೇರಿಗೆ ಮುತ್ತಿಗೆ ಹಾಕಿ ಅಧ್ಯಕ್ಷೆ ಹಾಗೂ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಕಾರ್ಯದರ್ಶಿ ರಚನಾ ಅವರನ್ನು ಕೆಲ ಮಹಿಳೆಯರು ಹಿಡಿದು ಎಳೆದಾಡಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ವಿದ್ಯಾ ಹಳ್ಳೂರು ಹಾಗೂ ರಚನಾ ಬಂಟನೂರು ಅವರನ್ನು ಠಾಣೆಗೆ ಕರೆದೊಯ್ದಿದ್ದಾರೆ.

ಮಹಿಳೆಯರಿಂದ ಸಂಗ್ರಹಿಸಿದ್ದ ಹಣವನ್ನು ಬೇರೆಡೆ ಹೂಡಿಕೆ ಮಾಡಿರುವುದರಿಂದ ಹಣ ಹಿಂತಿರುಗಿಸಲು ವಿಳಂಬವಾಗಿದೆ. ಆದಷ್ಟು ಬೇಗ ಹಣ ವಾಪಸ್ ನೀಡುವುದಾಗಿ ಇಬ್ಬರು ಹೇಳಿರುವುದಾಗಿ ತಿಳಿದುಬಂದಿದೆ.

ಕೂಲಿ ಕೆಲಸ ಮಾಡಿ ಕಷ್ಟಪಟ್ಟು ಉಳಿಸಿದ ಹಣವನ್ನು ಸಂಘಕ್ಕೆ ಕಟ್ಟಿದ್ದ ಸಾವಿರಾರು ಮಹಿಳೆಯರು ಹಣ ವಾಪಸ್ ಸಿಗದೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬೀಳಗಿ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.