Home Blog

ಕರುನಾಡಿಗೆ ಮತ್ತೆ ಶಾಕ್! 15 ದಿನ 6000 ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶ

0

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ರಾಜ್ಯದ ಅಧಿಕಾರಿಗಳು ಪ್ರಬಲವಾಗಿ ವಾದ ಮಂಡಿಸಿದರೂ, ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮಹತ್ವದ ಸೂಚನೆ ನೀಡಿದೆ.

ಈ ಮೂಲಕ ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂಬ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು CWMA ಎತ್ತಿಹಿಡಿದಿದೆ.

CWMA ಅಧ್ಯಕ್ಷ ಎಸ್.ಕೆ. ಹಲ್ದಾರ್ ಅವರ ನೇತೃತ್ವದಲ್ಲಿ ಇಂದು ಪ್ರಾಧಿಕಾರದ ಕಚೇರಿಯಲ್ಲಿ ಸಭೆ ನಡೆದಿದ್ದು, ಸಭೆಯ ಬಳಿಕ ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ. ಸಭೆಯಲ್ಲಿ ತಮಿಳುನಾಡಿನ ಅಧಿಕಾರಿಗಳು ವರ್ಚ್ಯುವಲ್ ಮೂಲಕ ಭಾಗವಹಿಸಿದ್ದರು. ಕರ್ನಾಟಕದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಕೂಡ ವರ್ಚ್ಯುವಲ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸು ಮಾಡಿತ್ತು. ಇದೀಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವೂ ಅದೇ ಪ್ರಮಾಣದ ನೀರು ಹರಿಸಲು ಸೂಚನೆ ನೀಡಿರುವುದು ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿಚಾರವನ್ನು ಮತ್ತೆ ಚರ್ಚೆಗೆ ತಂದಿದೆ.

ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಬಿಡಲು CWRC ಆದೇಶ; ‘ಇದು ನಮಗೆ ನೋವಿನ ಸಂಗತಿ’ ಎಂದ ಸಚಿವ ಚೆಲುವರಾಯಸ್ವಾಮಿ

0

ಬೆಂಗಳೂರು: ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿದ್ದು, ಇದು ಕರ್ನಾಟಕಕ್ಕೆ ನೋವಿನ ಸಂಗತಿಯಾಗಿದೆ ಎಂದು ಜಲಸಂಪನ್ಮೂಲ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಸ್ಥಿತಿ ಕಠಿಣವಾಗಿದ್ದು, ವಾಸ್ತವ ಸ್ಥಿತಿಯೂ ಕಷ್ಟಕರವಾಗಿದೆ. CWRC ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ತೆರಳಿ ರಾಜ್ಯದ ಪರಿಸ್ಥಿತಿಯನ್ನು ವಿವರಿಸಿ ವಾದ ಮಂಡಿಸಿದ್ದಾರೆ ಎಂದು ತಿಳಿಸಿದರು.

ಇದಾದ ಬಳಿಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದ್ದು, ಅಲ್ಲಿ ಆದೇಶದಲ್ಲಿ ಬಹಳಷ್ಟು ವ್ಯತ್ಯಾಸವನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕೆಲವು ವಿರಳ ಪ್ರಕರಣಗಳಲ್ಲಿ ಮಾತ್ರ ಕಡಿಮೆ ಪ್ರಮಾಣದ ನೀರು ಬಿಡುವಂತೆ ಆದೇಶಿಸಿರುವ ಉದಾಹರಣೆಗಳಿವೆ ಎಂದು ಸಚಿವರು ಹೇಳಿದರು.

ನಿರ್ವಹಣಾ ಸಮಿತಿಯ ಆದೇಶವನ್ನು ಪರಿಶೀಲಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಬಳಿಕ ಅಡ್ವೊಕೇಟ್ ಜನರಲ್ ಹಾಗೂ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಚೆಲುವರಾಯಸ್ವಾಮಿ ತಿಳಿಸಿದರು.

ಕಳೆದ ಒಂದು ವಾರದಿಂದಲೇ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ 6 ಸಾವಿರ ಕ್ಯೂಸೆಕ್ ನೀರು ಬಿಡುವುದು ಕಷ್ಟಕರವಾಗಿದೆ. ರಾಜ್ಯದಲ್ಲಿ ಕುಡಿಯುವ ನೀರಿಗೂ ಕೊರತೆ ಎದುರಾಗುವ ಪರಿಸ್ಥಿತಿ ಇದೆ. ಹೀಗಾಗಿ ಈ ಆದೇಶವನ್ನು ಒಪ್ಪುವಂತಹ ಪರಿಸ್ಥಿತಿ ಇಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಮುಂದಿನ ಹೆಜ್ಜೆ ಏನು ಇಡಬೇಕು ಎಂಬುದನ್ನು ನಾಳೆ ತೀರ್ಮಾನಿಸಲಾಗುವುದು. ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ದೆಹಲಿಯಲ್ಲಿ ಕುಳಿತು ಆಡಳಿತ ನಡೆಸುವವರಿಗೆ ರಾಜ್ಯದ ವಾಸ್ತವ ಸಮಸ್ಯೆ ಅರ್ಥವಾಗುವುದಿಲ್ಲ ಎಂದು ಚೆಲುವರಾಯಸ್ವಾಮಿ ಹೇಳಿದರು.

ಲಕ್ಷ್ಮೀದೇವಿ ಆರೋಗ್ಯವಾಗಿದ್ದಾರೆ: 92ರ ಹಿರಿಯ ನಟಿ ಬಗ್ಗೆ ಹರಡಿದ ಫೇಕ್ ನ್ಯೂಸ್‌ಗೆ ಕುಟುಂಬ ತಿರುಗೇಟು

ಬೆಂಗಳೂರು: ಹಿರಿಯ ನಟಿ ಲಕ್ಷ್ಮೀದೇವಿ ಅವರ ನಿಧನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಸುದ್ದಿ ಸುಳ್ಳು ಎಂದು ಕುಟುಂಬ ಸ್ಪಷ್ಟಪಡಿಸಿದೆ. 92 ವರ್ಷದ ಲಕ್ಷ್ಮೀದೇವಿ ಅವರು ಆರೋಗ್ಯವಾಗಿದ್ದು, ನಿಧನರಾಗಿಲ್ಲ ಎಂದು ಮೊಮ್ಮಗಳು ದೀಪಿಕಾ ಶರಣ್ ತಿಳಿಸಿದ್ದಾರೆ. ಸುಳ್ಳು ಸುದ್ದಿಯನ್ನು ಯಾರೂ ಹರಡಬಾರದು ಎಂದು ಅವರು ಮನವಿ ಮಾಡಿದ್ದು, ಲಕ್ಷ್ಮೀದೇವಿ ಅವರೂ ವಿಡಿಯೋ ಮೂಲಕ ತಮ್ಮ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಹಿರಿಯ ಕಲಾವಿದರ ನಿಧನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಡುವುದು ಇದೇ ಮೊದಲೇನಲ್ಲ. ಈ ಹಿಂದೆ ನಟ ದೊಡ್ಡಣ್ಣ ಅವರ ಬಗ್ಗೆಯೂ ಇದೇ ರೀತಿಯ ವದಂತಿ ಹರಡಿತ್ತು. ಆಗ ದೊಡ್ಡಣ್ಣ ಅವರೇ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿ ತಾವು ಆರೋಗ್ಯವಾಗಿರುವುದಾಗಿ ತಿಳಿಸಿ ಫೇಕ್ ನ್ಯೂಸ್‌ಗೆ ತೆರೆ ಎಳೆದಿದ್ದರು. ಇದೀಗ ಲಕ್ಷ್ಮೀದೇವಿ ಅವರ ವಿಚಾರದಲ್ಲೂ ಅಂತಹದ್ದೇ ವದಂತಿ ಹರಡಿದೆ.

ಕನ್ನಡ ಚಿತ್ರರಂಗದ ಕಪ್ಪು-ಬಿಳುಪು ಕಾಲದಿಂದಲೂ ಅಭಿನಯಿಸುತ್ತಿರುವ ಲಕ್ಷ್ಮೀದೇವಿ ಅವರು ಸುಮಾರು 1000ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ವಿವಿಧ ಬಗೆಯ ಪೋಷಕ ಪಾತ್ರಗಳನ್ನು ನಿರ್ವಹಿಸುವ ಮೂಲಕ ಹಲವು ದಶಕಗಳಿಂದ ಕನ್ನಡ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿದ್ದಾರೆ.

‘ಶ್ರೀನಿವಾಸ ಕಲ್ಯಾಣ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ಅವರು ‘ಭಕ್ತ ಕನಕದಾಸ’, ‘ಬಂಗಾರದ ಮನುಷ್ಯ’, ‘ವೀರ ಕೇಸರಿ’ ಸೇರಿದಂತೆ ಹಲವು ಪ್ರಮುಖ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರರಂಗದ ದಿಗ್ಗಜರೊಂದಿಗೆ ನಟಿಸಿದ ಅವರು ವೈವಿಧ್ಯಮಯ ಪಾತ್ರಗಳ ಮೂಲಕ ತಮ್ಮದೇ ಆದ ಸ್ಥಾನವನ್ನು ಗಳಿಸಿಕೊಂಡಿದ್ದಾರೆ.

‘ಕಳ್ಳರ ಕಳ್ಳ’ ಚಿತ್ರದಲ್ಲಿನ ಅಭಿನಯಕ್ಕಾಗಿ ರಾಜ್ಯ ಪ್ರಶಸ್ತಿಗೆ ಭಾಜನರಾಗಿರುವ ಲಕ್ಷ್ಮೀದೇವಿ ಅವರು ತಾಯಿ, ಪೋಷಕ ನಟಿ ಸೇರಿದಂತೆ ಹಲವು ಪಾತ್ರಗಳಲ್ಲಿ ಗಮನ ಸೆಳೆದಿದ್ದಾರೆ. ದೀರ್ಘಕಾಲದ ತಮ್ಮ ನಟನಾ ಪಯಣದ ಮೂಲಕ ಕನ್ನಡ ಚಿತ್ರರಂಗಕ್ಕೆ ನೀಡಿರುವ ಅವರ ಕೊಡುಗೆ ಗಮನಾರ್ಹವಾಗಿದೆ.

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಗ್ಯಾರಂಟಿ ಆದ್ಮೇಲೆ ಪಾದಯಾತ್ರೆ ಫಿಕ್ಸ್: ಯತ್ನಾಳ್ ವ್ಯಂಗ್ಯ

0

ವಿಜಯಪುರ: ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಖಚಿತವಾದ ಬಳಿಕವೇ ಪಾದಯಾತ್ರೆ ಫಿಕ್ಸ್ ಆಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್. ಅಶೋಕ್, ಸುನೀಲ್ ಕುಮಾರ್ ಸೇರಿದಂತೆ ಹಲವರು ಸದನದ ಬಾವಿಗೆ ಇಳಿದು ಹೋರಾಟ ನಡೆಸಿದ್ದರು. ಆದರೆ ಆಗ ವಿಜಯೇಂದ್ರ ಐದು ನಿಮಿಷವೂ ಸದನದ ಬಾವಿಯಲ್ಲಿ ನಿಲ್ಲಲಿಲ್ಲ ಎಂದು ಟೀಕಿಸಿದರು.

ಬರೀ ಪುಕ್ಸಟ್ಟೆ ಒಂದು ಪಾದಯಾತ್ರೆ ಮಾಡಿದರೆ ಕ್ರೆಡಿಟ್ ಬರುತ್ತದೆಯೇ ಎಂದು ಪ್ರಶ್ನಿಸಿದ ಯತ್ನಾಳ್, ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ತೆಗೆಯುವುದು ಖಚಿತ ಎಂಬ ಭಯ ವಿಜಯೇಂದ್ರ ಅವರಿಗೆ ಬಂದಿದೆ. ಹೀಗಾಗಿ ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ಹಾಗೂ ಹೀರೋ ಆಗಲು ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಪಾದಯಾತ್ರೆ ಯಾರಿಗೆ ಮೈನಸ್ ಆಗುತ್ತದೆ, ಯಾರಿಗೆ ಪ್ಲಸ್ ಆಗುತ್ತದೆ ಎಂಬುದು ಗೊತ್ತಿಲ್ಲ. ಆದರೆ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಳ್ಳುವ ಭಯದಿಂದಲೇ ಈ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಯತ್ನಾಳ್ ಆರೋಪಿಸಿದರು. ಹೋರಾಟ ಮತ್ತು ಪಾದಯಾತ್ರೆ ಮಾಡುವುದಾದರೆ ಕೆಪಿಎಸ್‌ಸಿ ಹಗರಣದ ವಿರುದ್ಧ ಹೋರಾಟ ನಡೆಸಲಿ ಎಂದು ಯತ್ನಾಳ್ ಸಲಹೆ ನೀಡಿದರು.

ವಾಜಪೇಯಿ ಕಂಡ ಸರಕು ಸಾಗಣೆ ಕಾರಿಡಾರ್ ಕನಸು ನನಸು ಮಾಡಿದ್ದೇವೆ: ಯುಪಿಎ ಸರ್ಕಾರದ ವಿರುದ್ಧ ಮೋದಿ ವಾಗ್ದಾಳಿ

0

ವಡೋದರಾ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಕಂಡಿದ್ದ ಸರಕು ಸಾಗಣೆ ಕಾರಿಡಾರ್ ನಿರ್ಮಾಣದ ಕನಸನ್ನು ತಮ್ಮ ಸರ್ಕಾರ ಪೂರ್ಣಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್‌ನ ವಡೋದರಾದಲ್ಲಿ ನಡೆದ ‘ನಮೋ ಫಾರ್ ವಿಕಸಿತ್ ಭಾರತ್’ ಕಾರ್ಯಕ್ರಮದಲ್ಲಿ ₹35,000 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ 2,800 ಕಿ.ಮೀ ಉದ್ದದ ಸರಕು ಸಾಗಣೆ ಕಾರಿಡಾರ್ (Freight Corridor) ಅನ್ನು ಲೋಕಾರ್ಪಣೆ ಮಾಡಲಾಗಿದ್ದು, ಇದನ್ನು 21ನೇ ಶತಮಾನದ ಐತಿಹಾಸಿಕ ಸಾಧನೆ ಎಂದು ಪ್ರಧಾನಿ ಮೋದಿ ಬಣ್ಣಿಸಿದರು.

ಫ್ರೈಟ್ ಕಾರಿಡಾರ್ ಯೋಜನೆಯನ್ನು ಉಲ್ಲೇಖಿಸಿದ ಮೋದಿ, ಬಿಜೆಪಿ ಸರ್ಕಾರ ಹಾಗೂ ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಕಾರ್ಯವೈಖರಿಯನ್ನು ಹೋಲಿಸಿದರು. ಅಟಲ್ ಬಿಹಾರಿ ವಾಜಪೇಯಿ ಅವರ ಅವಧಿಯಲ್ಲೇ ಈ ಯೋಜನೆಗೆ ರೂಪುರೇಷೆ ಸಿದ್ಧವಾಗಿತ್ತು. ಆದರೆ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಯೋಜನೆಗೆ ನಿರೀಕ್ಷಿತ ಪ್ರಗತಿ ಸಿಗಲಿಲ್ಲ. 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕಾಮಗಾರಿಗಳಿಗೆ ವೇಗ ಸಿಕ್ಕಿತು ಎಂದು ಪ್ರಧಾನಿ ಹೇಳಿದರು.

ಫ್ರೈಟ್ ಕಾರಿಡಾರ್‌ನ ಉಪಯುಕ್ತತೆಯನ್ನು ಪ್ರಶ್ನಿಸುವವರ ವಿರುದ್ಧವೂ ಮೋದಿ ವ್ಯಂಗ್ಯವಾಡಿದರು. ‘ಹಾಗಾದರೆ ಟ್ರಕ್ ಡ್ರೈವರ್‌ಗಳು ಏನು ಮಾಡಬೇಕು? ಟ್ರಕ್‌ಗಳ ಗತಿ ಏನು? ಟ್ರಕ್‌ಗಳು ಎಲ್ಲಿಗೆ ಹೋಗುತ್ತವೆ? ಟ್ರಕ್ ಖರೀದಿಸಿದವರ ಪಾಡೇನು?’ ಎಂದು ಪ್ರಶ್ನಿಸುವ ಮೂಲಕ ಟೀಕಾಕಾರರನ್ನು ಲೇವಡಿ ಮಾಡಿದರು.

ಸ್ವಾತಂತ್ರ್ಯದ ಬಳಿಕವೂ ರೈಲ್ವೆ ಸಂಪರ್ಕದಿಂದ ವಂಚಿತವಾಗಿದ್ದ ಹಲವು ಪ್ರದೇಶಗಳಿಗೆ ಈ ಕಾರಿಡಾರ್ ಸಂಪರ್ಕ ಕಲ್ಪಿಸುತ್ತಿದ್ದು, ಇದು ‘ಆತ್ಮನಿರ್ಭರ ಭಾರತ’ದ ಭಾಗವಾಗಿದೆ ಎಂದು ಮೋದಿ ಹೇಳಿದರು.

2014ರ ನಂತರ ಭಾರತ 50,000 ಆಧುನಿಕ ರೈಲ್ವೆ ಬೋಗಿಗಳನ್ನು ನಿರ್ಮಿಸಿದೆ ಎಂದು ಪ್ರಧಾನಿ ತಿಳಿಸಿದರು. ಆದರೆ ಹಿಂದಿನ ಸರ್ಕಾರಕ್ಕೆ 10 ವರ್ಷಗಳ ಅವಧಿಯಲ್ಲಿ 50,000 ಶೌಚಾಲಯಗಳನ್ನೂ ನಿರ್ಮಿಸಲು ಸಾಧ್ಯವಾಗಿರಲಿಲ್ಲ ಎಂದು ಹಿಂದಿನ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಭಾರತ ಇದೀಗ ‘ಚಿಪ್ಸ್‌ನಿಂದ ಶಿಪ್‌ವರೆಗೆ’ ವಿವಿಧ ಉತ್ಪನ್ನಗಳನ್ನು ದೇಶೀಯವಾಗಿಯೇ ತಯಾರಿಸುವ ಹೊಸ ಉತ್ಪಾದನಾ ಯುಗವನ್ನು ಪ್ರವೇಶಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪರಪ್ಪನ ಅಗ್ರಹಾರ ಬಳಿಕ ಮಂಗಳೂರು ಜೈಲಿನಲ್ಲೂ ಮೊಬೈಲ್ ಕರ್ಮಕಾಂಡ: 10 ಫೋನ್ ವಶ

0

ಮಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬ್ಯಾರಕ್‌ಗಳಲ್ಲಿ ಮೊಬೈಲ್‌ಗಳು ಪತ್ತೆಯಾದ ಪ್ರಕರಣದ ಬೆನ್ನಲ್ಲೇ ಮಂಗಳೂರು ಜಿಲ್ಲಾ ಕಾರಾಗೃಹದಲ್ಲೂ ಜೈಲಿನೊಳಗಿನ ಅಕ್ರಮ ಮೊಬೈಲ್ ಬಳಕೆ ಬಯಲಾಗಿದೆ. ಬರ್ಕೆ ಠಾಣೆ ಪೊಲೀಸರು ನಡೆಸಿದ ದಾಳಿಯಲ್ಲಿ ಎ-ಬ್ಲಾಕ್‌ನಲ್ಲಿದ್ದ 9 ಕೈದಿಗಳ ಬಳಿ ಒಟ್ಟು 10 ಮೊಬೈಲ್ ಫೋನ್‌ಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ.

ಜೈಲಿನೊಳಗೆ ಕೈದಿಗಳು ಮೊಬೈಲ್ ಬಳಸುತ್ತಿರುವ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು ಎನ್ನಲಾಗಿದೆ. ರಿಫತ್ ಅಲಿ, ಇಬ್ರಾಹಿಂ ಖಲೀಲ್, ಅಸ್ಫಕ್ ಅಲಿಯಾಸ್ ಜುಟ್ಟು ಅಸ್ಫಕ್, ಅರ್ಷದ್, ದಾವೂದ್ ಫರ್ವೇಜ್, ನಝರತ್ ಅಲಿ, ಶಿಫಾನ್, ಅಬ್ದುಲ್ ಸಾದೀಕ್ ಮತ್ತು ಅರ್ಫಜ್ ಅವರ ಬಳಿ ಮೊಬೈಲ್‌ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಇವರ ಪೈಕಿ ನಾಲ್ವರು ತೊಕ್ಕೊಟ್ಟು ಸಮೀಪ ನಡೆದ ಅರೀಫ್ ಕೊಲೆ ಪ್ರಕರಣದ ಆರೋಪಿಗಳು ಎನ್ನಲಾಗಿದ್ದು, ಜೈಲಿನೊಳಗೆ ಮೊಬೈಲ್‌ಗಳ ಬಳಕೆ ಹಾಗೂ ಅವುಗಳ ಪೂರೈಕೆಯ ಹಿಂದೆ ಯಾರಿದ್ದಾರೆ ಎಂಬುದನ್ನು ಬರ್ಕೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ವಿವಿಧ ಜೈಲುಗಳಲ್ಲಿ ಕೈದಿಗಳು ಹೊರಗಿನ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿರುವುದು ಹಾಗೂ ಜೈಲಿನೊಳಗೆ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಭದ್ರತೆ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ ಆಗಸ್ಟ್ 11ರಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೂ ಸಿಸಿಬಿ ದಾಳಿ ನಡೆಸಿತ್ತು.

ಪರಪ್ಪನ ಅಗ್ರಹಾರ ದಾಳಿ ವೇಳೆ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲಿದ್ದ ಮೊಬೈಲ್ ಸೇರಿದಂತೆ 10ಕ್ಕೂ ಹೆಚ್ಚು ಮೊಬೈಲ್‌ಗಳು ಪತ್ತೆಯಾಗಿದ್ದವು. ಇದೀಗ ಮಂಗಳೂರು ಜಿಲ್ಲಾ ಕಾರಾಗೃಹದಲ್ಲೂ ಒಂದೇ ಬ್ಲಾಕ್‌ನಲ್ಲಿ 9 ಕೈದಿಗಳ ಬಳಿ 10 ಮೊಬೈಲ್‌ಗಳು ಸಿಕ್ಕಿರುವುದು ಜೈಲುಗಳಲ್ಲಿನ ಮೊಬೈಲ್ ಬಳಕೆ ಮತ್ತು ಭದ್ರತಾ ವ್ಯವಸ್ಥೆಯ ಕುರಿತು ಚರ್ಚೆಗೆ ಕಾರಣವಾಗಿದೆ.

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

0

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಫೋನ್ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬಾಡಿ ವಾರೆಂಟ್ ಆಧಾರದ ಮೇಲೆ ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆಯಲು ಪೊಲೀಸರು ನ್ಯಾಯಾಲಯದಲ್ಲಿ ಮನವಿ ಮಾಡಿದರು.

ಈ ಪ್ರಕರಣದಲ್ಲಿ ಪ್ರತಾಪ್ ಎ1 ಆರೋಪಿಯಾಗಿದ್ದು, ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ. ಪ್ರಕರಣದ ತನಿಖೆಗೆ ಅಗತ್ಯವಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಪೊಲೀಸರು ಕೋರ್ಟ್‌ಗೆ ಮನವಿ ಮಾಡಿದ್ದರು.

ಪೊಲೀಸರ ಮನವಿಯನ್ನು ಪರಿಗಣಿಸಿದ 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಸಂದೀಪ್ ಪಾಟೀಲ್ ಅವರು ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.

ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇಂದಿನಿಂದಲೇ ಪೊಲೀಸರು ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಿದ್ದಾರೆ.

ಮಾತು ಕೇಳದ ಅಧಿಕಾರಿಗಳನ್ನು ಫೈರ್ ಮಾಡ್ತೇನೆ: ಮತ್ತೆ ವಿವಾದ ಸೃಷ್ಟಿಸಿದ ಸಚಿವ ರಾಯರೆಡ್ಡಿ ಹೇಳಿಕೆ

0

ಕೊಪ್ಪಳ: ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ಮತ್ತೊಂದು ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ನಡೆದ ಪದವಿಪೂರ್ವ ಕಾಲೇಜು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಅಧಿಕಾರಿಗಳು ತಮ್ಮ ಮಾತು ಕೇಳಬೇಕು ಎಂದು ಖಡಕ್ ಸೂಚನೆ ನೀಡಿದ್ದು, ಮಾತು ಕೇಳದ ಅಧಿಕಾರಿಗಳನ್ನು ಫೈರ್ ಮಾಡುವುದಾಗಿ ಎಚ್ಚರಿಸಿದ್ದಾರೆ.

ವೇದಿಕೆಯಲ್ಲೇ ಯಲಬುರ್ಗಾ ತಹಶೀಲ್ದಾರ್ ಪ್ರಕಾಶ್ ನಾಶಿ ಅವರ ಹೆಸರನ್ನು ಪ್ರಸ್ತಾಪಿಸಿದ ರಾಯರೆಡ್ಡಿ, ಸಚಿವ ಸ್ಥಾನದ ಕಾರ್ಯಭಾರದಲ್ಲಿ ತಾವು ಸಂಪೂರ್ಣ ಬ್ಯುಸಿಯಾಗಿರುವುದರಿಂದ ತಹಶೀಲ್ದಾರ್ ತಮ್ಮ ಪಿಆರ್‌ಒ ಆಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. ತಮ್ಮ ಪಿಎಗೆ ಡಿಜಿಟಲ್ ಸಿಗ್ನೇಚರ್ ಬಳಸಿ ಪತ್ರಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಿರುವುದಾಗಿಯೂ ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿ ಕುರಿತು ಮಾತನಾಡಿದ ಸಚಿವರು, ಇಲಾಖೆಯ ಅಡಿಯಲ್ಲಿ ಸುಮಾರು 1.52 ಕೋಟಿ ವಿದ್ಯಾರ್ಥಿಗಳು ಹಾಗೂ 96 ವಿಶ್ವವಿದ್ಯಾಲಯಗಳು ಬರುತ್ತವೆ ಎಂದು ಹೇಳಿದರು. ಇದರ ನಡುವೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ. ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವರ ಹೇಳಿಕೆಗಳನ್ನು ಅವರ ಬೆಂಬಲಿಗರು ಸಮರ್ಥಿಸಿಕೊಂಡಿದ್ದಾರೆ. ಜನಪ್ರತಿನಿಧಿಯಾಗಿ ಅಭಿವೃದ್ಧಿ ಕಾರ್ಯಗಳನ್ನು ವೇಗವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ ಎಂದು ಬೆಂಬಲಿಗರು ಹೇಳಿದ್ದಾರೆ.

ಇತ್ತೀಚೆಗಷ್ಟೇ ಮುಸ್ಲಿಂ ಧರ್ಮದ ಕುರಿತು ಬಸವರಾಜ ರಾಯರೆಡ್ಡಿ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಆ ವಿವಾದದ ಬೆನ್ನಲ್ಲೇ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಸಚಿವರು ವೇದಿಕೆಯಲ್ಲಿ ನೀಡಿರುವ ಹೇಳಿಕೆ ಇದೀಗ ಮತ್ತೊಂದು ಚರ್ಚೆಗೆ ಕಾರಣವಾಗಿದೆ.

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ವಿರುದ್ಧ ಭೂ ವಂಚನೆ ಆರೋಪ: 27 ಎಕರೆ ಜಮೀನು ಕಬಳಿಕೆ

ಕಲಬುರಗಿ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ವಿರುದ್ಧ ಭೂ ವಂಚನೆ ಆರೋಪ ಕೇಳಿಬಂದಿದ್ದು, ಅಳಿಯನೊಂದಿಗೆ ಸೇರಿ ನಕಲಿ ದಾಖಲೆ ಸೃಷ್ಟಿಸಿ 27 ಎಕರೆ ಜಮೀನು ಕಬಳಿಸಿದ್ದಾರೆ ಎಂದು ಭೂಮಾಲಕಿ ಬಸಮ್ಮ ಕುಟುಂಬ ಆರೋಪಿಸಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಅಣಬಿ ಗ್ರಾಮದಲ್ಲಿರುವ ಸರ್ವೆ ನಂಬರ್ 242 ಮತ್ತು 245ರ ಜಮೀನಿಗೆ ಸಂಬಂಧಿಸಿದಂತೆ ಶಹಾಪುರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಬಸಮ್ಮ ಅವರ ಪುತ್ರ ಎಂಬಂತೆ ಸುಳ್ಳು ದಾಖಲೆ ಸೃಷ್ಟಿಸಿ ಜಮೀನಿನ ಮಾಲೀಕತ್ವವನ್ನು ಬದಲಾಯಿಸಲಾಗಿದೆ ಎಂದು ಕುಟುಂಬ ಆರೋಪಿಸಿದೆ. ಅಳಿಯ ಶಂಕರಗೌಡ ಅವರ ಹೆಸರಿಗೆ ಮೊದಲಿಗೆ ಜಮೀನು ನೋಂದಣಿ ಮಾಡಿಸಿ, ಬಳಿಕ ಶಿವಶಂಕರಪ್ಪ ಅವರ ಹೆಸರಿಗೆ ವರ್ಗಾಯಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಭೂಮಿ ವಂಚನೆಯ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಭೂ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಶಿವಶಂಕರಪ್ಪ ಅವರ ಪ್ರತಿಕ್ರಿಯೆ ಪಡೆಯಲು ಟಿವಿ9 ಯತ್ನಿಸಿದರೂ ಸಂಪರ್ಕ ಸಾಧ್ಯವಾಗಿಲ್ಲ. ಹೀಗಾಗಿ ಅವರಿಂದ ಈವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಇದರ ಬೆನ್ನಲ್ಲೇ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣವೂ ಶಿವಶಂಕರಪ್ಪ ಅವರಿಗೆ ಮತ್ತಷ್ಟು ಸಂಕಷ್ಟ ತಂದಿದೆ. ಪ್ರಕರಣದಲ್ಲಿ ಬಂಧನ ಭೀತಿ ಎದುರಾಗಿದ್ದು, ಜಾಮೀನು ಅರ್ಜಿ ವಜಾಗೊಂಡ ಬಳಿಕ ಸಿಐಡಿ ಅಧಿಕಾರಿಗಳು ಮೂರನೇ ನೋಟಿಸ್ ಜಾರಿ ಮಾಡಿದ್ದರು. ಆದರೆ ಶಿವಶಂಕರಪ್ಪ ಸಿಐಡಿ ವಿಚಾರಣೆಗೆ ಹಾಜರಾಗಿರಲಿಲ್ಲ.

ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬಳಿಕ ಸಿಐಡಿ ಅಧಿಕಾರಿಗಳು ಶಿವಶಂಕರಪ್ಪ ಅವರ ಮನೆ ಮೇಲೆ ದಾಳಿ ನಡೆಸಿದ್ದರು. ಆದರೆ ಈ ವೇಳೆ ಅವರು ಮನೆಯಲ್ಲಿ ಇರಲಿಲ್ಲ ಎಂಬುದು ಅಧಿಕಾರಿಗಳಿಗೆ ತಿಳಿದುಬಂದಿತ್ತು.

ಜಾಮೀನು ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರು ಕೆಪಿಎಸ್‌ಸಿ ನೇಮಕಾತಿ ಅಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ನೀಟ್ ಪರೀಕ್ಷೆಯ ಅಕ್ರಮದಿಂದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳನ್ನು ಉಲ್ಲೇಖಿಸಿ, ಇಂತಹ ಅಕ್ರಮಗಳಿಂದ ಪರಿಶ್ರಮಪಟ್ಟು ಓದಿದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಏನಾಗಬೇಕು ಎಂದು ಪ್ರಶ್ನಿಸಿದ್ದರು.

ಕೆಪಿಎಸ್‌ಸಿ ಮೇಲಿನ ಜನರ ವಿಶ್ವಾಸ ನಾಶವಾಗುತ್ತಿದೆ ಮತ್ತು ಇದು ವ್ಯವಸ್ಥಿತ ಫ್ರಾಡ್ ಎಂದು ಹೇಳಿದ್ದ ನ್ಯಾಯಮೂರ್ತಿಗಳು, ಶಿವಶಂಕರಪ್ಪ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದರು.

ದೆಹಲಿ ಕಟ್ಟಡ ಕುಸಿತ ಪ್ರಕರಣ; ಅಡಿಪಾಯದ ಮಿತಿ ಗೊತ್ತಿದ್ದರೂ 4 ಹೆಚ್ಚುವರಿ ಮಹಡಿ ನಿರ್ಮಾಣ, FIRನಲ್ಲಿ ಗಂಭೀರ ಆರೋಪ

0

ನವದೆಹಲಿ: ದೆಹಲಿಯಲ್ಲಿ ಕಟ್ಟಡ ಕುಸಿದು ಹಲವರ ಸಾವಿಗೆ ಕಾರಣವಾದ ಪ್ರಕರಣದ ತನಿಖೆಯಲ್ಲಿ ಕಟ್ಟಡದ ಮಾಲೀಕರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಅಸ್ತಿತ್ವದಲ್ಲಿದ್ದ ಅಡಿಪಾಯದ ಮಿತಿ ಹಾಗೂ ಅದು ಹೆಚ್ಚುವರಿ ಭಾರವನ್ನು ತಡೆದುಕೊಳ್ಳಲು ಸಾಧ್ಯವಿಲ್ಲ ಎಂಬುದು ತಿಳಿದಿದ್ದರೂ, ಬಾಡಿಗೆ ಆದಾಯದ ಉದ್ದೇಶದಿಂದ ಹೆಚ್ಚುವರಿ ಮಹಡಿಗಳನ್ನು ನಿರ್ಮಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಕಟ್ಟಡದ ಮಾಲೀಕ ಹರಿ ರಾಮ್ ಬನ್ಸಾಲ್ ಅಲಿಯಾಸ್ ಗುಪ್ತಾ ಹಾಗೂ ಅವರ ಸಹೋದರರಿಗೆ ಕಟ್ಟಡದ ಅಡಿಪಾಯದ ಮಿತಿಗಳ ಬಗ್ಗೆ ಮೊದಲೇ ತಿಳಿದಿತ್ತು ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ. ಆದರೂ ನಾಲ್ಕು ಹೆಚ್ಚುವರಿ ಮಹಡಿಗಳನ್ನು ನಿರ್ಮಿಸಲಾಗಿದ್ದು, ಇದರಿಂದ ಕಟ್ಟಡದ ರಚನಾತ್ಮಕ ಸ್ಥಿರತೆಗೆ ಧಕ್ಕೆಯಾಗಿ ಕುಸಿತಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ಉಲ್ಲೇಖಿಸಲಾಗಿದೆ.

ಕಟ್ಟಡ ನಿರ್ಮಾಣ ಅಥವಾ ದುರಸ್ತಿಯಲ್ಲಿ ನಿರ್ಲಕ್ಷ್ಯ ವಹಿಸುವುದು ಹಾಗೂ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯ ಉಂಟುಮಾಡುವ ಕೃತ್ಯಗಳಿಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105, 290 ಮತ್ತು 125(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಡಿಪಾಯವು ಹೆಚ್ಚುವರಿ ಭಾರವನ್ನು ತಡೆದುಕೊಳ್ಳಲು ಸಾಧ್ಯವಿಲ್ಲ ಎಂಬುದು ತಿಳಿದಿದ್ದರೂ ನಾಲ್ಕು ಹೆಚ್ಚುವರಿ ಮಹಡಿಗಳನ್ನು ನಿರ್ಮಿಸಲು ಹೇಗೆ ಅವಕಾಶ ನೀಡಲಾಯಿತು ಎಂಬ ಪ್ರಶ್ನೆ ಇದೀಗ ಪೊಲೀಸರ ತನಿಖೆಯ ಪ್ರಮುಖ ಅಂಶವಾಗಿದೆ.

ಈ ಹೆಚ್ಚುವರಿ ನಿರ್ಮಾಣಕ್ಕೆ ಯಾರು ಅನುಮತಿ ನೀಡಿದರು? ಹೆಚ್ಚುವರಿ ಮಹಡಿಗಳನ್ನು ನಿರ್ಮಿಸುವ ಮೊದಲು ಅಧಿಕೃತ ಅನುಮೋದನೆ ಪಡೆಯಲಾಗಿತ್ತೇ? ಕಟ್ಟಡದ ರಚನಾತ್ಮಕ ಸುರಕ್ಷತೆಯನ್ನು ಪರಿಶೀಲಿಸಲಾಗಿತ್ತೇ? ಎಂಬುದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ.

ಎಫ್‌ಐಆರ್‌ನಲ್ಲಿ ದಾಖಲಾಗಿರುವ ಆರೋಪಗಳು ಸದ್ಯ ನಡೆಯುತ್ತಿರುವ ತನಿಖೆಯ ಭಾಗವಾಗಿದ್ದು, ಆರೋಪಗಳು ತನಿಖೆ ಹಾಗೂ ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಸಾಬೀತಾಗಬೇಕಿದೆ.