Home Blog

ನುಗ್ಗೆ ಸೊಪ್ಪು ತಿಂದರೆ ಏನೆಲ್ಲ ಲಾಭ? ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳ ಸಂಪೂರ್ಣ ಮಾಹಿತಿ!

ಇತ್ತೀಚಿನ ದಿನಗಳಲ್ಲಿ “ಸೂಪರ್‌ಫುಡ್”ಗಳ ಬಗ್ಗೆ ಜನರಲ್ಲಿ ಹೆಚ್ಚಿನ ಆಸಕ್ತಿ ಕಂಡುಬರುತ್ತಿದೆ.

ಆದರೆ ನಮ್ಮ ಸುತ್ತಮುತ್ತಲೇ ಸುಲಭವಾಗಿ ದೊರೆಯುವ ನುಗ್ಗೆ ಸೊಪ್ಪು ಪೌಷ್ಟಿಕಾಂಶಗಳ ಭಂಡಾರವಾಗಿದ್ದು, ದೇಹದ ಒಟ್ಟಾರೆ ಆರೋಗ್ಯ ಕಾಪಾಡಲು ನೆರವಾಗುವ ಆಹಾರಗಳಲ್ಲಿ ಒಂದಾಗಿದೆ.

ನುಗ್ಗೆ ಸೊಪ್ಪಿನಲ್ಲಿ ವಿಟಮಿನ್‌ಗಳು, ಖನಿಜಾಂಶಗಳು, ಆಂಟಿಆಕ್ಸಿಡೆಂಟ್‌ಗಳು, ಫೈಬರ್ ಹಾಗೂ ಸಸ್ಯಾಧಾರಿತ ಪ್ರೋಟೀನ್‌ಗಳು ಸಮೃದ್ಧವಾಗಿವೆ. ಇದು ಯಾವುದೇ ಕಾಯಿಲೆಗೆ ಔಷಧವಲ್ಲ. ಆದರೆ ಸಮತೋಲಿತ ಆಹಾರದ ಭಾಗವಾಗಿ ಸೇವಿಸಿದರೆ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಬಹುದು.

ನುಗ್ಗೆ ಸೊಪ್ಪಿನಲ್ಲಿರುವ ಪ್ರಮುಖ ಪೌಷ್ಟಿಕಾಂಶಗಳು:

  • ವಿಟಮಿನ್ ಎ – ಕಣ್ಣಿನ ಆರೋಗ್ಯಕ್ಕೆ ಸಹಕಾರಿ
  • ವಿಟಮಿನ್ ಸಿ – ರೋಗನಿರೋಧಕ ಶಕ್ತಿ ಹೆಚ್ಚಿಸಲು ನೆರವು
  • ವಿಟಮಿನ್ ಇ – ಶಕ್ತಿಶಾಲಿ ಆಂಟಿಆಕ್ಸಿಡೆಂಟ್
  • ಕ್ಯಾಲ್ಸಿಯಂ – ಮೂಳೆ ಮತ್ತು ಹಲ್ಲುಗಳ ಆರೋಗ್ಯಕ್ಕೆ ಅಗತ್ಯ
  • ಕಬ್ಬಿಣ (Iron) – ರಕ್ತಹೀನತೆ ತಡೆಗಟ್ಟಲು ನೆರವಾಗಬಹುದು
  • ಪೊಟ್ಯಾಸಿಯಂ – ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿ
  • ಫೈಬರ್ – ಜೀರ್ಣಕ್ರಿಯೆ ಸುಧಾರಿಸಲು ನೆರವಾಗುತ್ತದೆ
  • ಸಸ್ಯಾಧಾರಿತ ಪ್ರೋಟೀನ್ – ಸ್ನಾಯುಗಳ ಆರೋಗ್ಯಕ್ಕೆ ಉಪಕಾರಿ

ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು:

ರೋಗನಿರೋಧಕ ಶಕ್ತಿ ಹೆಚ್ಚಳ:
ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ನೆರವಾಗುತ್ತವೆ.

ರಕ್ತಹೀನತೆ ತಡೆಗಟ್ಟಲು ಸಹಕಾರಿ:
ಕಬ್ಬಿಣದ ಅಂಶ ಇರುವುದರಿಂದ ಸಮತೋಲಿತ ಆಹಾರದೊಂದಿಗೆ ಸೇವಿಸಿದರೆ ಹಿಮೋಗ್ಲೋಬಿನ್ ಮಟ್ಟ ಕಾಪಾಡಿಕೊಳ್ಳಲು ನೆರವಾಗಬಹುದು.

ಮೂಳೆಗಳ ಆರೋಗ್ಯ:
ಕ್ಯಾಲ್ಸಿಯಂ ಮತ್ತು ಇತರ ಖನಿಜಾಂಶಗಳು ಮೂಳೆ ಹಾಗೂ ಹಲ್ಲುಗಳನ್ನು ಬಲಪಡಿಸಲು ಸಹಕಾರಿ.

ಜೀರ್ಣಕ್ರಿಯೆ ಸುಧಾರಣೆ:
ಫೈಬರ್ ಅಧಿಕವಾಗಿರುವುದರಿಂದ ಮಲಬದ್ಧತೆ ಕಡಿಮೆಯಾಗಲು ಹಾಗೂ ಜೀರ್ಣಾಂಗದ ಆರೋಗ್ಯ ಸುಧಾರಿಸಲು ನೆರವಾಗುತ್ತದೆ.

ಹೃದಯದ ಆರೋಗ್ಯ:
ಆಂಟಿಆಕ್ಸಿಡೆಂಟ್‌ಗಳು ದೇಹದಲ್ಲಿನ ಉರಿಯೂತ ಕಡಿಮೆ ಮಾಡಲು ಸಹಾಯ ಮಾಡಬಹುದು. ಆರೋಗ್ಯಕರ ಜೀವನಶೈಲಿಯೊಂದಿಗೆ ಸೇವಿಸಿದರೆ ಹೃದಯದ ಆರೋಗ್ಯಕ್ಕೂ ಪೂರಕ.

ಕಣ್ಣಿನ ಆರೋಗ್ಯ:
ವಿಟಮಿನ್ ಎ ಮತ್ತು ಬೇಟಾ-ಕ್ಯಾರೋಟಿನ್ ದೃಷ್ಟಿ ಹಾಗೂ ಕಣ್ಣಿನ ಆರೋಗ್ಯ ಕಾಪಾಡಲು ಸಹಕಾರಿ.

ಚರ್ಮ ಮತ್ತು ಕೂದಲಿನ ಆರೈಕೆ:
ವಿಟಮಿನ್ ಇ ಹಾಗೂ ಆಂಟಿಆಕ್ಸಿಡೆಂಟ್‌ಗಳು ಚರ್ಮದ ಆರೋಗ್ಯ ಮತ್ತು ಕೂದಲಿನ ಬೆಳವಣಿಗೆಗೆ ನೆರವಾಗಬಹುದು.

ನುಗ್ಗೆ ಸೊಪ್ಪನ್ನು ಹೇಗೆ ಸೇವಿಸಬಹುದು?

  • ಪಲ್ಯ ಮಾಡಿ
  • ಸಾಂಬಾರ್ ಅಥವಾ ಸಾರಿಗೆ ಸೇರಿಸಿ
  • ಸೂಪ್‌ನಲ್ಲಿ ಬಳಸಿ
  • ಚಪಾತಿ ಹಿಟ್ಟಿಗೆ ಮಿಶ್ರಣ ಮಾಡಿ
  • ಸ್ಮೂಥಿಯಲ್ಲಿ ಸೇರಿಸಿ ಸೇವಿಸಬಹುದು

ಯಾರು ಎಚ್ಚರಿಕೆಯಿಂದ ಸೇವಿಸಬೇಕು?

  • ಗರ್ಭಿಣಿಯರು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವ ಮೊದಲು ವೈದ್ಯರ ಸಲಹೆ ಪಡೆಯಬೇಕು.
  • ಮಧುಮೇಹದ ಔಷಧಿ ಸೇವಿಸುವವರು ವೈದ್ಯರ ಸಲಹೆಯೊಂದಿಗೆ ಸೇವಿಸುವುದು ಉತ್ತಮ.
  • ಕಡಿಮೆ ರಕ್ತದೊತ್ತಡ ಇರುವವರು ಅತಿಯಾಗಿ ಸೇವಿಸಬಾರದು.
  • ಥೈರಾಯ್ಡ್ ಅಥವಾ ಇತರ ದೀರ್ಘಕಾಲದ ಕಾಯಿಲೆ ಇರುವವರು ವೈದ್ಯರ ಸಲಹೆ ಪಡೆದು ಸೇವಿಸುವುದು ಸೂಕ್ತ.

ಗಮನಿಸಿ: ನುಗ್ಗೆ ಸೊಪ್ಪು ಪೌಷ್ಟಿಕ ಆಹಾರವಾಗಿದ್ದು, ಯಾವುದೇ ಕಾಯಿಲೆಗೆ ನೇರ ಔಷಧಿಯಲ್ಲ. ಆರೋಗ್ಯ ಸಮಸ್ಯೆಗಳಿದ್ದರೆ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುವುದು ಅಗತ್ಯ.

‘ಕುಟುಂಬದ ಆದಾಯ ₹40 ಸಾವಿರ ಹೇಗೆ?’ KPSC ಮಾಜಿ ಅಧ್ಯಕ್ಷರ ಪುತ್ರಿ ಪ್ರಕರಣದಲ್ಲಿ ಹೈಕೋರ್ಟ್ ತೀಕ್ಷ್ಣ ಪ್ರಶ್ನೆ!

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್ ಅವರ ಪುತ್ರಿ ಸುಮಾ ಸಾಹುಕರ್ ಸಲ್ಲಿಸಿದ್ದ ಆದಾಯ ಘೋಷಣೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಸುಮಾ ಸಾಹುಕರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಕುಟುಂಬದ ವಾರ್ಷಿಕ ಆದಾಯ ₹40 ಸಾವಿರ ಎಂದು ಘೋಷಿಸಿರುವುದು ದಾಖಲೆಗಳಲ್ಲಿ ಇದ್ದಾಗ, ಆ ಸಮಯದಲ್ಲಿ ಅವರ ತಂದೆ ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದರು. ಈ ಪರಿಸ್ಥಿತಿಯಲ್ಲಿ ಅಂತಹ ಆದಾಯ ಘೋಷಣೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದೆ.

3ಬಿ ಮೀಸಲಾತಿ ವರ್ಗದಡಿ ಪರೀಕ್ಷೆಗೆ ಹಾಜರಾಗಲು ಕುಟುಂಬದ ಆದಾಯ ₹40 ಸಾವಿರ ಎಂದು ಘೋಷಿಸಲಾಗಿತ್ತು. ಆದರೆ ಕುಟುಂಬದ ಆದಾಯ ₹25 ಲಕ್ಷವಾಗಿದ್ದರೆ ಅದು ಸ್ಪಷ್ಟ ವಂಚನೆಯಲ್ಲವೇ? ಗೊಂದಲವಿದ್ದಾಗ ಮಾತ್ರ ತನಿಖೆ ಅಗತ್ಯ. ಇಲ್ಲಿ ದಾಖಲೆಗಳು ಸ್ಪಷ್ಟವಾಗಿರುವಾಗ ಇನ್ನೇನು ತನಿಖೆ ಬೇಕು ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಮೀಸಲಾತಿ ಸೌಲಭ್ಯ ಪಡೆಯಲು ಸುಳ್ಳು ಆದಾಯ ಘೋಷಣೆ ಸಲ್ಲಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಮ್, ಘೋಷಣೆಯಲ್ಲಿ ನಮೂದಿಸಿರುವುದು ಸುಮಾ ಸಾಹುಕರ್ ಅವರ ವೈಯಕ್ತಿಕ ಆದಾಯವಾಗಿದ್ದು, ಕುಟುಂಬದ ಆದಾಯವಲ್ಲ ಎಂದು ವಾದ ಮಂಡಿಸಿದರು. ಆದರೆ ಈ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, 3ಬಿ ಮೀಸಲಾತಿಗೆ ಕುಟುಂಬದ ಆದಾಯವೇ ಮಾನದಂಡವಾಗಿದ್ದು, ವೈಯಕ್ತಿಕ ಆದಾಯಕ್ಕೆ ಇಲ್ಲಿ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದೆ.

ನಿಜವಾಗಿಯೂ ₹40 ಸಾವಿರ ವಾರ್ಷಿಕ ಆದಾಯ ಹೊಂದಿದ್ದ ಅರ್ಹ ಅಭ್ಯರ್ಥಿಯೊಬ್ಬರ ಅವಕಾಶವನ್ನು ಕಸಿದುಕೊಳ್ಳಲಾಗಿದೆ ಎಂಬ ಅಭಿಪ್ರಾಯವನ್ನೂ ನ್ಯಾಯಾಲಯ ವ್ಯಕ್ತಪಡಿಸಿದೆ.

ಇದೇ ವೇಳೆ, ಅಂತಿಮ ಆಯ್ಕೆಪಟ್ಟಿ ಪ್ರಕಟವಾಗುವ ಮುನ್ನವೇ ಸುಮಾ ಸಾಹುಕರ್ ತಮ್ಮ ಅಭ್ಯರ್ಥಿತ್ವವನ್ನು ಹಿಂಪಡೆದಿದ್ದರು ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಅಭ್ಯರ್ಥಿತ್ವ ಹಿಂಪಡೆದಿರಬಹುದು. ಆದರೆ ಆರಂಭದಲ್ಲೇ ಅರ್ಜಿ ಸಲ್ಲಿಸಿ ಸ್ಪರ್ಧಿಸಿದ್ದೇಕೆ? ಇದರಿಂದ ಬಡ ಅಭ್ಯರ್ಥಿಯೊಬ್ಬರ ಅವಕಾಶ ಕಸಿದುಕೊಂಡಿಲ್ಲವೇ? ಎಂದು ಪ್ರಶ್ನಿಸಿತು.

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್ ತಮ್ಮ ಪುತ್ರಿಯರಿಗೆ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿದೆ.

ವಿದ್ಯಾರ್ಥಿಗಳ ಪ್ರತಿಭಟನೆ ಪ್ರಕರಣ: ಪೊಲೀಸರ ಬಲವಂತದ ಕ್ರಮಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್! ಅಪ್ರಾಪ್ತರ ಬಿಡುಗಡೆಗೆ ಆದೇಶ

0

ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ವೇಳೆ ನಡೆದ ಪೊಲೀಸ್ ದೌರ್ಜನ್ಯ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ.

ಅಪರಾಧ ಹಿನ್ನೆಲೆ ಇಲ್ಲದ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಠಿಣ ಅಥವಾ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿರುವ ನ್ಯಾಯಾಲಯ, ಬಂಧನಕ್ಕೊಳಗಾಗಿರುವ 18 ವರ್ಷದೊಳಗಿನ ಅಪ್ರಾಪ್ತರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಾಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನ್ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ.

ನ್ಯಾಯಪೀಠ, ಕಾನೂನನ್ನು ಕೈಗೆತ್ತಿಕೊಂಡವರು ಕಾನೂನಿನ ಎದುರು ಉತ್ತರಿಸಬೇಕಾಗುತ್ತದೆ. ಅದೇ ವೇಳೆ, ಘಟನೆಯಲ್ಲಿ ಗಾಯಗೊಂಡಿರುವ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬಗಳ ಆತಂಕಗಳನ್ನೂ ನ್ಯಾಯಯುತ ತನಿಖೆ ಪರಿಹರಿಸಬೇಕು ಎಂದು ಅಭಿಪ್ರಾಯಪಟ್ಟಿದೆ.

ಅಪರಾಧ ಹಿನ್ನೆಲೆ ಇಲ್ಲದ ಸಾಮಾನ್ಯ ಪ್ರತಿಭಟನಾಕಾರರ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು ಎಂದು ಸ್ಪಷ್ಟಪಡಿಸಿದ ಸುಪ್ರೀಂ ಕೋರ್ಟ್, ಪ್ರತಿಭಟನಾಕಾರರ ವೈಯಕ್ತಿಕ ಮಾಹಿತಿ ಹಾಗೂ ಡಿಜಿಟಲ್ ಡೇಟಾವನ್ನು ಪೊಲೀಸರು ಸಾರ್ವಜನಿಕವಾಗಿ ಬಹಿರಂಗಪಡಿಸಬಾರದು ಎಂದು ಸೂಚಿಸಿದೆ.

ಇದೇ ವೇಳೆ, ಪ್ರತಿಭಟನೆ ನಡೆದ ಸ್ಥಳಗಳ ಸಿಸಿಟಿವಿ ದೃಶ್ಯಗಳು, ಡ್ರೋನ್ ಕ್ಯಾಮೆರಾ ವಿಡಿಯೊಗಳು, ಬಾಡಿ ಕ್ಯಾಮೆರಾ ದಾಖಲೆಗಳು ಹಾಗೂ ಪಿಸಿಆರ್ (PCR) ಸಂವಹನ ದಾಖಲಾತಿಗಳನ್ನು ಸುರಕ್ಷಿತವಾಗಿ ಸಂರಕ್ಷಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ, ಮಹಾರಾಷ್ಟ್ರ, ಬಿಹಾರ, ಕೇರಳ, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಜೊತೆಗೆ, ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ಅಥವಾ ಉನ್ನತ ಮಟ್ಟದ ತನಿಖಾ ಸಮಿತಿ ರಚಿಸುವ ಸಾಧ್ಯತೆಯನ್ನೂ ನ್ಯಾಯಪೀಠ ಸೂಚಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರತಿಭಟನೆ ನಿಯಂತ್ರಿಸುವ ನೆಪದಲ್ಲಿ ಪೊಲೀಸರು ಎಲೆಕ್ಟ್ರಿಕ್ ಬ್ಯಾಟನ್, ಪೆಲೆಟ್ ಗನ್‌ಗಳು ಹಾಗೂ ಮೊಳೆಗಳಿದ್ದ ಲಾಠಿಗಳನ್ನು ಬಳಸಿದ್ದಾರೆ. ಸಾಮಾನ್ಯ ಉಡುಪಿನಲ್ಲಿದ್ದ ಕೆಲ ಸಿಬ್ಬಂದಿಯೂ ಪ್ರತಿಭಟನಾಕಾರರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಈ ಕುರಿತು ಪ್ರತಿಕ್ರಿಯಿಸಿದ ನ್ಯಾಯಪೀಠ, ಶಾಂತಿಯುತ ಹಾಗೂ ಕಾನೂನುಬದ್ಧ ಪ್ರತಿಭಟನೆ ನಡೆಸುವುದು ಸಂವಿಧಾನಬದ್ಧ ಹಕ್ಕು ಎಂದು ಸ್ಪಷ್ಟಪಡಿಸಿತು. ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಇಬ್ಬರಿಗೂ ಗಾಯಗಳಾಗಿರುವ ಆರೋಪಗಳಿರುವ ಹಿನ್ನೆಲೆಯಲ್ಲಿ, ಸಂಪೂರ್ಣ ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿತು.

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ನಡುವೆ ಕೆಲ ಕಿಡಿಗೇಡಿಗಳು ಹಾಗೂ ಅಪರಾಧ ಹಿನ್ನೆಲೆಯುಳ್ಳವರು ನುಸುಳಿ ಪೊಲೀಸರ ಮೇಲೂ ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಗಳ ಮೇಲೆ ಅತಿಯಾದ ಬಲಪ್ರಯೋಗ ನಡೆದಿದ್ದರೆ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಪ್ರತಿಭಟನೆಗಳನ್ನು ನಿರ್ವಹಿಸುವ ಕುರಿತು ಜಾರಿಯಲ್ಲಿರುವ ಮಾರ್ಗಸೂಚಿಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ.

 

ಇಂದು ರಾತ್ರಿಯೇ ಸಚಿವ ಸಂಪುಟ ವಿಸ್ತರಣೆ ವಿಚಾರ ಫೈನಲ್ ಆಗಬಹುದು: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಅಂತಿಮ ನಿರ್ಧಾರ ಇಂದು ರಾತ್ರಿ ನಡೆಯಲಿರುವ ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಇಂದು ರಾತ್ರಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ಎಲ್ಲಾ ವಿಚಾರಗಳ ಕುರಿತು ಅಂತಿಮ ತೀರ್ಮಾನವಾಗಲಿದೆ. ಇಂದೇ ರಾತ್ರಿ ಎಲ್ಲವೂ ಫೈನಲ್ ಆಗುವ ಸಾಧ್ಯತೆ ಇದೆ” ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಯಾವ ದಿನ ನಡೆಯಲಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಅದರ ಬಗ್ಗೆ ಮುಖ್ಯಮಂತ್ರಿ ಅವರನ್ನು ಕೇಳಿ. ವಿಸ್ತರಣೆಯ ದಿನಾಂಕದ ಕುರಿತು ಅವರು ಮಾಹಿತಿ ನೀಡುತ್ತಾರೆ” ಎಂದು ಉತ್ತರಿಸಿದರು.

ಇದಕ್ಕೂ ಮುನ್ನ ದೆಹಲಿಯಿಂದ ನೇರವಾಗಿ ಮೈಸೂರಿಗೆ ಆಗಮಿಸಿದ ಸಿದ್ದರಾಮಯ್ಯ, ತಮ್ಮ ಹಿರಿಯ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದ ಬಳಿಕ ಮತ್ತೆ ದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಕುರಿತ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ವಿಜಯ್ ವಿರೋಧ: ಪ್ರಧಾನಿ ಮೋದಿಗೆ ಪತ್ರ ಬರೆದು ಕೇಂದ್ರದ ಮಧ್ಯಪ್ರವೇಶಕ್ಕೆ ಆಗ್ರಹ

0

ಚೆನ್ನೈ: ಕರ್ನಾಟಕದ ಮಹತ್ವಾಕಾಂಕ್ಷಿ ಮೇಕೆದಾಟು ಅಣೆಕಟ್ಟು ಯೋಜನೆಗೆ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವಾಲಯ ನೀಡಿರುವ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ, ಯೋಜನೆಯಿಂದ ಕೆಳಹರಿವಿನ ರಾಜ್ಯವಾದ ತಮಿಳುನಾಡಿನ ನೀರಿನ ಹಕ್ಕುಗಳಿಗೆ ಧಕ್ಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಮುಂಗಾರು ಅಧಿವೇಶನದ ವೇಳೆ ತಮಿಳುನಾಡು ಸಂಸದ ಡಾ. ಅನ್ಬುಮಣಿ ರಾಮದಾಸ್ ಅವರು ಮೇಕೆದಾಟು ಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಕೇಂದ್ರ ಜಲಶಕ್ತಿ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಲಿಖಿತ ಉತ್ತರ ನೀಡಿದ್ದರು.

ಕರ್ನಾಟಕದ ಗಡಿ ವ್ಯಾಪ್ತಿಯಲ್ಲಿ ನೀರಿನ ಬಳಕೆಗೆ ಆ ರಾಜ್ಯಕ್ಕೆ ಸಂಪೂರ್ಣ ಅಧಿಕಾರವಿದೆ. ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ನೆರೆ ರಾಜ್ಯಗಳ ಒಪ್ಪಿಗೆ ಪಡೆಯಬೇಕು ಎಂದು ಎಲ್ಲಿಯೂ ಉಲ್ಲೇಖಿಸಲಾಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದರು. ಅಲ್ಲದೆ, ಕರ್ನಾಟಕವು ಮೇಕೆದಾಟು ಯೋಜನೆಗೆ ತಮಿಳುನಾಡು, ಕೇರಳ ಹಾಗೂ ಪುದುಚೇರಿ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಈ ಹೇಳಿಕೆಯನ್ನು ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿರೋಧಿಸಿದ್ದು, ಪ್ರಧಾನಿ ಮೋದಿ ಅವರು ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಧಾನಿಗೆ ಬರೆದ ಪತ್ರದಲ್ಲಿ, “ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕೆಳಹರಿವಿನ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ” ಎಂಬ ಕೇಂದ್ರ ಜಲಶಕ್ತಿ ಸಚಿವಾಲಯದ ಅಭಿಪ್ರಾಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಮೇಲ್ಭಾಗದ ರಾಜ್ಯವೊಂದು ಹೊಸ ಯೋಜನೆ ಕೈಗೆತ್ತಿಕೊಳ್ಳುವ ಮುನ್ನ ಕೆಳಹರಿವಿನ ರಾಜ್ಯಗಳ ಹಿತಾಸಕ್ತಿಗಳನ್ನು ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆಲಮಟ್ಟಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸಿರುವ ವಿಜಯ್, ಕೆಳಹರಿವಿನ ರಾಜ್ಯಗಳ ಹಕ್ಕುಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ಏಕಪಕ್ಷೀಯವಾಗಿ ಯೋಜನೆಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮೇಕೆದಾಟು ಯೋಜನೆಯನ್ನು ಕೇವಲ ಕುಡಿಯುವ ನೀರಿನ ಅಥವಾ ಇಂಜಿನಿಯರಿಂಗ್ ಯೋಜನೆಯಾಗಿ ನೋಡಬಾರದು. ಇದು ಕಾವೇರಿ ನದಿ ನೀರಿನ ಹಂಚಿಕೆ ಹಾಗೂ ಲಕ್ಷಾಂತರ ರೈತರ ಜೀವನೋಪಾಯಕ್ಕೆ ಸಂಬಂಧಿಸಿದ ಸೂಕ್ಷ್ಮ ವಿಚಾರವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

2019ರಲ್ಲಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ (DPR)ಯನ್ನು ನಿಯಮಗಳಿಗೆ ಅನುಗುಣವಾಗಿಲ್ಲ ಎಂಬ ಕಾರಣಕ್ಕೆ ಕೇಂದ್ರ ಜಲ ಆಯೋಗವು ವಾಪಸ್ ಕಳುಹಿಸಿದ್ದನ್ನು ವಿಜಯ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕಾವೇರಿ ನೀರು ವಿವಾದ ನ್ಯಾಯಾಧಿಕರಣದ ಆದೇಶ ಹಾಗೂ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ತಮಿಳುನಾಡಿನ ಹಕ್ಕುಗಳನ್ನು ರಕ್ಷಿಸಬೇಕು. ಕರ್ನಾಟಕ ಸಲ್ಲಿಸಿರುವ ಮೇಕೆದಾಟು ಯೋಜನೆಯ ಡಿಪಿಆರ್‌ಗೆ ಯಾವುದೇ ಕಾರಣಕ್ಕೂ ಅನುಮತಿ ನೀಡದಂತೆ ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಕೇಂದ್ರ ಜಲ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಅವರು ಪ್ರಧಾನಿ ಮೋದಿಯವರನ್ನು ಆಗ್ರಹಿಸಿದ್ದಾರೆ.

ಇದೇ ವೇಳೆ, 2018ರ ಫೆಬ್ರವರಿ 16ರಂದು ಸುಪ್ರೀಂ ಕೋರ್ಟ್ ನೀಡಿದ ಕಾವೇರಿ ನೀರು ವಿವಾದ ತೀರ್ಪಿನಲ್ಲಿ, ಮೇಲ್ಭಾಗದ ರಾಜ್ಯವಾದ ಕರ್ನಾಟಕವು ಕಾವೇರಿ ನದಿಗೆ ಸಂಬಂಧಿಸಿದ ಯೋಜನೆಗಳಿಗೆ ಕೆಳಹರಿವಿನ ರಾಜ್ಯಗಳ ಅನುಮತಿ ಪಡೆಯುವುದು ಕಡ್ಡಾಯ ಎಂದು ಸ್ಪಷ್ಟವಾಗಿ ಹೇಳಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

2007ರ ಕಾವೇರಿ ನೀರು ವಿವಾದ ನ್ಯಾಯಾಧಿಕರಣದ (CWDT) ತೀರ್ಪಿನ 18ನೇ ವಿಧಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ನ್ಯಾಯಾಧಿಕರಣದ ಆದೇಶಕ್ಕೆ ಒಳಪಟ್ಟು ಆಯಾ ರಾಜ್ಯಗಳು ತಮ್ಮ ಗಡಿ ವ್ಯಾಪ್ತಿಯಲ್ಲಿ ನೀರಿನ ಬಳಕೆ ಹಾಗೂ ಸೌಲಭ್ಯಗಳನ್ನು ನಿರ್ವಹಿಸುವ ಹಕ್ಕು ಹೊಂದಿವೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅವಧಿ ವಿಸ್ತರಣೆ ಕೋರಿದ್ದ ಅರ್ಜಿ ಇತ್ಯರ್ಥಗೊಳಿಸಿದ ಹೈಕೋರ್ಟ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಅವಧಿ ವಿಸ್ತರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಪಡಿಸಿದೆ. ಈ ಹಂತದಲ್ಲಿ ನ್ಯಾಯಾಲಯದ ಮಧ್ಯಪ್ರವೇಶ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟ ಪೀಠ, ಅರ್ಜಿಯನ್ನು ಮುಕ್ತಾಯಗೊಳಿಸಿದೆ.

ಸಾಹಿತಿ ದೇವನೂರು ಮಹದೇವ, ಇತಿಹಾಸ ತಜ್ಞ ರಾಮಚಂದ್ರ ಗುಹಾ, ನಿವೃತ್ತ ಮೇಜರ್ ಜನರಲ್ ಎಸ್.ಜಿ. ವಂಬಟ್ಕೆರೆ ಹಾಗೂ ಲೇಖಕಿ ಸಬೀಹಾ ಭೂಮಿಗೌಡ ಅವರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿದಾರರ ಪರ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ ವಾದ ಮಂಡಿಸಿ, ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಸಮರ್ಪಕ ಮಾಹಿತಿ ಮತ್ತು ತರಬೇತಿ ಕೊರತೆಯಿದೆ. ಅಲ್ಲದೆ ಮತದಾರರ ನೆರವು ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಸುಮಾರು 70 ಲಕ್ಷ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದರು.

ಚುನಾವಣಾ ಆಯೋಗದ ಪರ ವಕೀಲ ಶರತ್ ದೊಡ್ವಾಡ್, ಅಗತ್ಯವಿದ್ದರೆ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯ ಅವಧಿಯನ್ನು ವಿಸ್ತರಿಸಲಾಗುವುದು ಎಂದು ಹೈಕೋರ್ಟ್‌ಗೆ ತಿಳಿಸಿದರು.

ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕವೂ ಪಟ್ಟಿಯಿಂದ ಹೊರಗುಳಿದ ಮತದಾರರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ಅವರು ಹೇಳಿದರು.

ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದಿಸಿ, ಮತದಾರರ ಹಕ್ಕುಗಳನ್ನು ರಕ್ಷಿಸುವಂತೆ ಸರ್ಕಾರ ಈಗಾಗಲೇ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗವು ಈ ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯ ಹೊಂದಿದೆ. ಇದೇ ವಿಚಾರಗಳು ಸುಪ್ರೀಂಕೋರ್ಟ್‌ನಲ್ಲಿಯೂ ಪರಿಶೀಲನೆಯಲ್ಲಿರುವ ಹಿನ್ನೆಲೆಯಲ್ಲಿ ಈ ಹಂತದಲ್ಲಿ ಹೈಕೋರ್ಟ್ ಮಧ್ಯಪ್ರವೇಶ ಅಗತ್ಯವಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು.

ಮನೆ-ಮನೆ ಸಮೀಕ್ಷೆ ಪ್ರಕ್ರಿಯೆಯಲ್ಲಿ ಜೂನ್ 29ರಿಂದ ಒಟ್ಟು 59,050 ಬಿಎಲ್‌ಒಗಳು ನಮೂನೆಗಳನ್ನು ವಿತರಿಸಿದ್ದಾರೆ. ಆದರೆ ಭರ್ತಿ ಮಾಡಿದ ನಮೂನೆಗಳನ್ನು ಆ್ಯಪ್‌ಗೆ ಅಪ್‌ಲೋಡ್ ಮಾಡುವ ಡಿಜಿಟಲೀಕರಣ ಕಾರ್ಯ ಇನ್ನೂ ಶೇ.69.51ರಷ್ಟು ಮಾತ್ರ ಪೂರ್ಣಗೊಂಡಿದೆ.

2002ರ SIR ದಾಖಲೆಗಳ ಆಧಾರದ ಮೇಲೆ ‘ಸೆಲ್ಫ್ ಮ್ಯಾಪಿಂಗ್’ ಮತ್ತು ‘ಪ್ರೊಜೆನಿ ಮ್ಯಾಪಿಂಗ್’ ಮಾಹಿತಿ ಪತ್ತೆಹಚ್ಚುವಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗಿರುವುದರಿಂದ ಪ್ರಕ್ರಿಯೆ ವಿಳಂಬವಾಗಿದೆ ಎಂದು ತಿಳಿದುಬಂದಿದೆ.

ಇದುವರೆಗೆ ಸಲ್ಲಿಕೆಯಾಗಿರುವ 3.85 ಕೋಟಿ ನಮೂನೆಗಳಲ್ಲಿ, ಸುಮಾರು 1.56 ಕೋಟಿ ಮತದಾರರು ಸೆಲ್ಫ್ ಮ್ಯಾಪಿಂಗ್ ಹಾಗೂ 1.93 ಕೋಟಿ ಮಂದಿ ಪ್ರೊಜೆನಿ ಮ್ಯಾಪಿಂಗ್ ಪೂರ್ಣಗೊಳಿಸಿದ್ದಾರೆ.

ಯಾವುದೇ ಮ್ಯಾಪಿಂಗ್ ಮಾಹಿತಿ ಇಲ್ಲದೆ ಸಲ್ಲಿಸಿರುವ ಸುಮಾರು 17.19 ಲಕ್ಷ ನಮೂನೆದಾರರಿಗೆ (ಶೇ.3.1) ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ನೋಟಿಸ್ ನೀಡಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ: ಸಚಿವ ಯತೀಂದ್ರ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುವ ಬಗ್ಗೆ ನೀಡಿರುವ ಹೇಳಿಕೆಯನ್ನು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ತಮ್ಮ ತಂದೆ ಈ ಹಿಂದೆ ಕೂಡ ಇದೇ ಮಾತನ್ನು ಹೇಳಿದ್ದರು. ಚುನಾವಣಾ ರಾಜಕೀಯದಿಂದ ದೂರ ಉಳಿದರೂ ಸಕ್ರಿಯ ರಾಜಕಾರಣದಲ್ಲಿ ಮುಂದುವರಿದು, ದುರ್ಬಲರು ಮತ್ತು ಶೋಷಿತರ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ ಎಂದು ತಿಳಿಸಿದರು.

ಚುನಾವಣೆಗೆ ಸ್ಪರ್ಧಿಸದೇ ಇದ್ದರೂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಲಿದ್ದಾರೆ. ಮುಂದಿನ ಚುನಾವಣೆಯಲ್ಲಿಯೂ ಪಕ್ಷದ ಪರವಾಗಿ ಪ್ರಚಾರ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಕರೆದಿದೆ. ಅಲ್ಲಿ ಚರ್ಚೆ ನಡೆದ ಬಳಿಕ ಸಂಪುಟ ವಿಸ್ತರಣೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಇಂದು ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಗೆ ಬರುವ ಬೆಳಗಾವಿ ಮಹಾನಗರ ಪಾಲಿಕೆ ಹಾಗೂ ಬೆಳಗಾವಿ ನಗರಾಭಿವೃದ್ಧಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

ಬೆಳಗಾವಿ ಮಹಾನಗರ ಪಾಲಿಕೆಗೆ ಮುಖ್ಯಮಂತ್ರಿ ವಿಶೇಷ ಅನುದಾನ ನೀಡುತ್ತಿರುವುದು ಸ್ಥಗಿತಗೊಂಡಿರುವ ಬಗ್ಗೆ ಮಾಹಿತಿ ಇಲ್ಲ. ಈ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ಚುನಾಯಿತ ಪ್ರತಿನಿಧಿಗಳ ಆಡಳಿತ ಮಂಡಳಿ ಇಲ್ಲದ ಕಡೆಗಳಲ್ಲಿ ಅನುದಾನ ಬಿಡುಗಡೆಗೆ ಸಮಸ್ಯೆಯಾಗುತ್ತದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳ ಮೂಲಕ ಹಣಕಾಸು ನೆರವು ದೊರೆಯುತ್ತದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಪಶು ವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಕ್ರಮ ಆರೋಪ: ಎರಡು ಪ್ರಕರಣಗಳನ್ನು ಸಿಐಡಿಗೆ ವರ್ಗಾಯಿಸಿ ಡಿಜಿಪಿ ಆದೇಶ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ.

ಪಶು ವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಪಶುವೈದ್ಯ ಮಂಜುನಾಥ್ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಂಡಿರುವ ಶಿವಶಂಕರಪ್ಪ ಎಸ್. ಸಾಹುಕಾರ್ ಸೇರಿದಂತೆ ಇತರರ ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿದ್ದವು.

ಅಭ್ಯರ್ಥಿಗಳ ಆರೋಪವೇನು?

ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆಯ 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಕೆಪಿಎಸ್‌ಸಿ ಇದೇ ವರ್ಷದ ಜನವರಿ 8 ಮತ್ತು 9ರಂದು ಪರೀಕ್ಷೆ ನಡೆಸಿದ್ದು, ಜುಲೈ 17ರಂದು ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿತ್ತು.

ಆಯ್ಕೆ ಪಟ್ಟಿಯಲ್ಲಿ ಕೆಪಿಎಸ್‌ಸಿ ಅಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿಯ ಸಂಬಂಧಿಕರು ಉನ್ನತ ಶ್ರೇಣಿಯಲ್ಲಿ ಆಯ್ಕೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

ಕೇಂದ್ರ ಲೋಕಸೇವಾ ಆಯೋಗದ (UPSC) ಐಎಫ್‌ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕೆಲವು ಅಭ್ಯರ್ಥಿಗಳಿಗೇ ಈ ಪರೀಕ್ಷೆಯಲ್ಲಿ 350 ಅಂಕಗಳಿಗಿಂತ ಕಡಿಮೆ ಅಂಕಗಳು ಬಂದಿದ್ದರೆ, ಶೈಕ್ಷಣಿಕವಾಗಿ ಸಾಧಾರಣ ಸಾಧನೆ ಮಾಡಿದ್ದ ಕೆಲ ಅಭ್ಯರ್ಥಿಗಳು 400ಕ್ಕೂ ಹೆಚ್ಚು ಅಂಕ ಗಳಿಸಿರುವುದು ಅಕ್ರಮದ ಅನುಮಾನ ಹುಟ್ಟಿಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ಶಿವಶಂಕರಪ್ಪ ಸಾಹುಕಾರ್ ಅವರ ಸಂಬಂಧಿಕ ಅಭ್ಯರ್ಥಿಯೊಬ್ಬರು ಕಡಿಮೆ ಸಿಜಿಪಿಎಯೊಂದಿಗೆ ಪದವಿ ಪಡೆದಿದ್ದರೂ, ಕೆಪಿಎಸ್‌ಸಿ ಪರೀಕ್ಷೆಯಲ್ಲಿ 450ಕ್ಕೂ ಹೆಚ್ಚು ಅಂಕ ಗಳಿಸಿ ಉನ್ನತ ಸ್ಥಾನ ಪಡೆದಿರುವುದನ್ನೂ ಪ್ರಶ್ನಿಸಲಾಗಿದೆ.

ಪರೀಕ್ಷೆಗೆ ಆಯ್ಕೆಯಾದ ಕೆಲ ಅಭ್ಯರ್ಥಿಗಳ ಮೊಬೈಲ್‌ಗಳು ಪರೀಕ್ಷೆಯ ಹಿಂದಿನ ದಿನ ಹಾಗೂ ಪರೀಕ್ಷೆಯ ದಿನ ಸ್ವಿಚ್ ಆಫ್ ಆಗಿದ್ದವು ಎಂದು ದೂರಿನಲ್ಲಿ ಹೇಳಲಾಗಿದೆ.

ಮಧ್ಯವರ್ತಿಗಳು ಅಭ್ಯರ್ಥಿಗಳನ್ನು ವಾಹನಗಳಲ್ಲಿ ಹೊರರಾಜ್ಯ ಅಥವಾ ಇತರೆ ಸ್ಥಳಗಳ ಹೋಟೆಲ್ ಹಾಗೂ ರೆಸಾರ್ಟ್‌ಗಳಿಗೆ ಕರೆದೊಯ್ದು, ಅಲ್ಲಿ ಉತ್ತರಗಳಿರುವ ಪ್ರಶ್ನೆಪತ್ರಿಕೆ ನೀಡಿ ತರಬೇತಿ ನೀಡಿ ಬಳಿಕ ಪರೀಕ್ಷಾ ಕೇಂದ್ರಕ್ಕೆ ಕರೆತಂದಿರುವ ಸಾಧ್ಯತೆ ಇದೆ ಎಂದು ಆರೋಪಿಸಲಾಗಿದೆ.

ಹೀಗಾಗಿ ಅಭ್ಯರ್ಥಿಗಳು ಪರೀಕ್ಷೆಗೆ ಮುನ್ನ ಯಾವ ಸ್ಥಳದಲ್ಲಿದ್ದರು ಎಂಬುದರ ಕುರಿತು ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ.

ಕೆಲ ಅಭ್ಯರ್ಥಿಗಳು ಒಎಂಆರ್ ಉತ್ತರ ಪತ್ರಿಕೆಯಲ್ಲಿ ಕೆಲವೇ ಪ್ರಶ್ನೆಗಳಿಗೆ ಉತ್ತರಿಸಿ ಉಳಿದ ಪ್ರಶ್ನೆಗಳನ್ನು ಖಾಲಿ ಬಿಟ್ಟಿದ್ದರೂ, ಹೆಚ್ಚಿನ ಅಂಕ ಪಡೆದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿ ಕೇಳಲಾಗಿದ್ದು, ಅವು ಲಭ್ಯವಾದ ಬಳಿಕ ತನಿಖೆಗೆ ಸಲ್ಲಿಸಲಾಗುವುದು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಒಎಂಆರ್ ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿರುವ ಶಂಕೆ ವ್ಯಕ್ತಪಡಿಸಿರುವ ದೂರುದಾರರು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್‌ಎಸ್‌ಎಲ್) ವೈಜ್ಞಾನಿಕ ಪರೀಕ್ಷೆಗೆ ಒಳಪಡಿಸಿ ಅಕ್ರಮದ ಸತ್ಯಾಸತ್ಯತೆ ಪರಿಶೀಲಿಸುವಂತೆ ಆಗ್ರಹಿಸಿದ್ದಾರೆ.

ದೂರಿನ ಪ್ರಕಾರ, ಮಧ್ಯವರ್ತಿಗಳು ಕೆಲ ಅಭ್ಯರ್ಥಿಗಳಿಗೆ ಕರೆ ಮಾಡಿ, ಅವರ ಒಎಂಆರ್ ಅಂಕಗಳ ಮಾಹಿತಿಯನ್ನು ತಿಳಿಸಿ, ಆಯ್ಕೆ ಪಟ್ಟಿಗೆ ಸೇರಿಸಲು ಸುಮಾರು ₹80 ಲಕ್ಷ ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಮೊದಲು ₹40 ಲಕ್ಷ ಮುಂಗಡವಾಗಿ ನೀಡಿ, ಉದ್ಯೋಗ ಖಚಿತವಾದ ಬಳಿಕ ಉಳಿದ ಹಣ ಪಾವತಿಸುವಂತೆ ಸೂಚಿಸಿದ್ದರೆಂದು ಆರೋಪಿಸಲಾಗಿದೆ. ಈ ಸಂಬಂಧ ವಿಡಿಯೊ ಮತ್ತು ಆಡಿಯೊ ದಾಖಲೆಗಳೂ ಲಭ್ಯವಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಭ್ಯರ್ಥಿಗಳ ವೈಯಕ್ತಿಕ ಮಾಹಿತಿ ಹಾಗೂ ಒಎಂಆರ್ ಅಂಕಗಳ ವಿವರಗಳು ಮಧ್ಯವರ್ತಿಗಳ ಕೈಗೆ ಹೇಗೆ ತಲುಪಿದವು ಎಂಬುದರ ಹಿಂದೆ ಕೆಪಿಎಸ್‌ಸಿಯ ಹಿಂದಿನ ಅಧ್ಯಕ್ಷರು, ಸದಸ್ಯರು ಮತ್ತು ಕೆಲ ಅಧಿಕಾರಿಗಳ ಪಾತ್ರ ಇರುವ ಸಾಧ್ಯತೆಯಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ದೂರುದಾರರು ಒತ್ತಾಯಿಸಿದ್ದಾರೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ರಾಜ್ಯ ಸರ್ಕಾರ ಇದೀಗ ಎರಡೂ ಪ್ರಕರಣಗಳನ್ನು ಸಿಐಡಿಗೆ ವರ್ಗಾವಣೆ ಮಾಡಿದ್ದು, ಅಕ್ರಮದ ಹಿಂದಿರುವವರ ಪಾತ್ರದ ಬಗ್ಗೆ ಸಿಐಡಿ ಸಮಗ್ರ ತನಿಖೆ ನಡೆಸಲಿದೆ.

ಯಶ್ ‘ಟಾಕ್ಸಿಕ್’ಗೆ ಎಂಟ್ರಿ ಕೊಟ್ಟ ಎಲಿಜಬೆತ್: ಹುಮಾ ಖುರೇಷಿ ಹೊಸ ಲುಕ್ ವೈರಲ್

ಕನ್ನಡದ ಬಹುನಿರೀಕ್ಷಿತ ಪ್ಯಾನ್ ವರ್ಲ್ಡ್ ಸಿನಿಮಾ ‘ಟಾಕ್ಸಿಕ್’ ಇದೀಗ ಮತ್ತೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಯಶ್ ಅಭಿನಯದ ಈ ಚಿತ್ರದಲ್ಲಿ ನಟಿಸುತ್ತಿರುವ ಹುಮಾ ಖುರೇಷಿ ಅವರ ಹೊಸ ಪಾತ್ರದ ಪೋಸ್ಟರ್ ಬಿಡುಗಡೆಯಾಗಿದ್ದು, ಅಭಿಮಾನಿಗಳ ಗಮನ ಸೆಳೆದಿದೆ.

‘ಟಾಕ್ಸಿಕ್’ ಸಿನಿಮಾದಲ್ಲಿ ಹುಮಾ ಖುರೇಷಿ ‘ಎಲಿಜಬೆತ್’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜುಲೈ 28ರಂದು ಹುಮಾ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿದ್ದು, ಅವರ ವಿಭಿನ್ನ ಲುಕ್‌ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಹೊಸ ಪೋಸ್ಟರ್‌ನಲ್ಲಿ ಹುಮಾ ಖುರೇಷಿ ಆಕರ್ಷಕ ಗೌನ್ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಬಿಡುಗಡೆಯಾಗಿದ್ದ ಅವರ ಫಸ್ಟ್ ಲುಕ್‌ನಲ್ಲಿ ಕಪ್ಪು ವಿಂಟೇಜ್ ಕಾರಿನೊಂದಿಗೆ ರಾಯಲ್ ಸ್ಟೈಲ್‌ನಲ್ಲಿ ಕಾಣಿಸಿಕೊಂಡಿದ್ದರು. ಈ ಎರಡೂ ಲುಕ್‌ಗಳು ಅವರ ಪಾತ್ರದ ಬಗ್ಗೆ ನಿರೀಕ್ಷೆ ಹೆಚ್ಚಿಸಿವೆ.

1950-60ರ ದಶಕದ ಕಥಾಹಂದರ ಹೊಂದಿರುವ ‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಗಣವೇ ಇದೆ.

ಚಿತ್ರದ ಬಗ್ಗೆ ಮಾತನಾಡಿದ್ದ ಹುಮಾ ಖುರೇಷಿ, ಸಿನಿಮಾದ ಪ್ರತಿಯೊಂದು ಪ್ರಮುಖ ಪಾತ್ರಕ್ಕೂ ಸಮಾನ ಪ್ರಾಮುಖ್ಯತೆ ನೀಡಲಾಗಿದೆ ಎಂದು ಹೇಳಿದ್ದರು. ತಮ್ಮ ಪಾತ್ರದ ಬಗ್ಗೆ ಕೂಡ ಅವರು ಹೆಚ್ಚಿನ ನಿರೀಕ್ಷೆ ಹೊಂದಿದ್ದು, ಸಿನಿಮಾ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದಾರೆ.

‘ಗ್ಯಾಂಗ್ಸ್ ಆಫ್ ವಸೇಪುರ್’ ಮೂಲಕ ಬಾಲಿವುಡ್‌ಗೆ ಕಾಲಿಟ್ಟ ಹುಮಾ ಖುರೇಷಿ, ತಮ್ಮ ವಿಭಿನ್ನ ಅಭಿನಯದ ಮೂಲಕ ಗುರುತಿಸಿಕೊಂಡಿದ್ದಾರೆ. ಹಲವು ಹಿಂದಿ ಸಿನಿಮಾಗಳ ಜೊತೆಗೆ ಮಲಯಾಳಂ ಮತ್ತು ತಮಿಳು ಚಿತ್ರಗಳಲ್ಲೂ ನಟಿಸಿರುವ ಅವರು, ಇದೀಗ ‘ಟಾಕ್ಸಿಕ್’ ಮೂಲಕ ಕನ್ನಡ ಚಿತ್ರರಂಗದ ಜಾಗತಿಕ ಮಟ್ಟದ ಸಿನಿಮಾದ ಭಾಗವಾಗಿದ್ದಾರೆ.

ಪೈರಸಿ ಮಾಫಿಯಾಗೆ ಶಾಕ್ ಕೊಟ್ಟ ಕೇಂದ್ರ: ಸಿನಿಮಾಗಳ ಅಕ್ರಮ ಲೀಕ್ ತಡೆಯಲು ಕಠಿಣ ಕಾನೂನು ಕ್ರಮ, ಸಾವಿರಾರು ಲಿಂಕ್‌ಗಳು ಬ್ಲಾಕ್

ಚಿತ್ರರಂಗದ ಬಹುದೊಡ್ಡ ಸಮಸ್ಯೆಯಾಗಿರುವ ಸಿನಿಮಾ ಪೈರಸಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕನ್ನಡ, ಹಿಂದಿ ಸೇರಿದಂತೆ ವಿವಿಧ ಭಾಷೆಗಳ ಸಿನಿಮಾಗಳು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಆನ್‌ಲೈನ್‌ನಲ್ಲಿ ಲೀಕ್ ಆಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪೈರಸಿ ವಿರುದ್ಧದ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಪೈರಸಿ ತಡೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದ್ದು, ಈಗಾಗಲೇ ಸಾವಿರಾರು ಅಕ್ರಮ ವೆಬ್‌ಸೈಟ್‌ಗಳು ಮತ್ತು ಸಾಮಾಜಿಕ ಜಾಲತಾಣ ಚಾನೆಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈವರೆಗೆ 7,393 ಪೈರಸಿ ಲಿಂಕ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದ್ದು, 1,263 ವೆಬ್‌ಸೈಟ್‌ಗಳು ಮತ್ತು 4,996 ಟೆಲಿಗ್ರಾಂ ಚಾನೆಲ್‌ಗಳಿಗೆ ಬೀಗ ಹಾಕಲಾಗಿದೆ. ಪೈರಸಿ ವಿರುದ್ಧ ದೂರು ಸಲ್ಲಿಕೆ ಮತ್ತು ಕ್ರಮ ಕೈಗೊಳ್ಳುವ ಪ್ರಕ್ರಿಯೆಯನ್ನು ಸರಳಗೊಳಿಸಲು ಕೇಂದ್ರ ಸರ್ಕಾರ ಹೊಸ ಆ್ಯಂಟಿ ಪೈರಸಿ ಪೋರ್ಟಲ್ ರೂಪಿಸುತ್ತಿದೆ.

ಈ ವ್ಯವಸ್ಥೆಯಿಂದ ನಿರ್ಮಾಪಕರು, ಸಿನಿಮಾ ಸಂಸ್ಥೆಗಳು ಹಾಗೂ ಹಕ್ಕುದಾರರು ಪೈರಸಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ. ಕಾನೂನು ಜಾರಿ ಸಂಸ್ಥೆಗಳ ಸಹಕಾರದೊಂದಿಗೆ ಪೈರಸಿ ಜಾಲವನ್ನು ನಿಯಂತ್ರಿಸುವ ಪ್ರಯತ್ನ ನಡೆಯುತ್ತಿದೆ.

ಇತ್ತೀಚಿನ ದಿನಗಳಲ್ಲಿ ಪೊಲೀಸರು ಕೂಡ ಪೈರಸಿ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ‘ಐಬೊಮ್ಮ’ ಪೈರಸಿ ಜಾಲಕ್ಕೆ ಸಂಬಂಧಿಸಿದ ಬಂಧನ ಪ್ರಕರಣವು ಸರ್ಕಾರದ ಕಾರ್ಯಾಚರಣೆಯ ತೀವ್ರತೆಯನ್ನು ತೋರಿಸಿದೆ.

ವಿದೇಶಿ ಪ್ರದರ್ಶನಗಳಿಂದ ಸಿನಿಮಾ ಪ್ರಿಂಟ್‌ಗಳು ಸೋರಿಕೆಯಾಗುತ್ತಿವೆ ಎಂಬ ಆರೋಪಗಳು ಕೇಳಿಬಂದಿದ್ದು, ಇದರಿಂದ ನಿರ್ಮಾಪಕರಿಗೆ ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದೆ. ಚಿತ್ರಮಂದಿರಗಳತ್ತ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಪೈರಸಿ ನಿಯಂತ್ರಣದ ಈ ಕ್ರಮಗಳು ಚಿತ್ರರಂಗಕ್ಕೆ ದೊಡ್ಡ ಬೆಂಬಲ ನೀಡುವ ನಿರೀಕ್ಷೆ ಮೂಡಿಸಿದೆ.