Home Blog

ಬಿಳಿ ಕೋಟ್‌ಗೆ ಸಮಾಜದ ಗೌರವ

ವಿಜಯಸಾಕ್ಷಿ ಸುದ್ದಿ, ಗದಗ: ಕೋವಿಡ್‌ನಂತಹ ಸಂಕಷ್ಟದ ಸಂದರ್ಭಗಳಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಜನರ ಆರೋಗ್ಯ ರಕ್ಷಣೆಗೆ ಶ್ರಮಿಸಿದ ವೈದ್ಯರ ಸೇವೆ ಸಮಾಜಕ್ಕೆ ಅಮೂಲ್ಯ ಕೊಡುಗೆಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಹೇಳಿದರು.

ನಗರದ ಕೆಎಚ್‌ಪಿಐಎಂಎಸ್ ಉಪನ್ಯಾಸ ಸಭಾಂಗಣದಲ್ಲಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಗದಗ ಶಾಖೆ ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವೈದ್ಯಕೀಯ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಮಾನವೀಯ ಸೇವೆಯ ಪ್ರತೀಕವಾಗಿದೆ. ಸಮಾಜದ ಆರೋಗ್ಯ ಮತ್ತು ಸುರಕ್ಷತೆಯಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಂದು ಸಂಕಷ್ಟದ ಘಟ್ಟದಲ್ಲೂ ವೈದ್ಯ ಸಮುದಾಯ ನಿಸ್ವಾರ್ಥ ಸೇವೆ ಸಲ್ಲಿಸಿದೆ. ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಐಎಂಎ ಗದಗ ಶಾಖೆ ಕೈಗೊಂಡಿರುವ ಸಾಮಾಜಿಕ ಹಾಗೂ ವೈದ್ಯಕೀಯ ಸೇವಾ ಕಾರ್ಯಗಳು ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಐಎಂಎ ಗದಗ ಶಾಖೆಯ ಅಧ್ಯಕ್ಷ ಡಾ. ಶ್ರೀಧರ ವಿ. ಕುರಡಗಿ ಮಾತನಾಡಿ, ವೈದ್ಯಕೀಯ ವೃತ್ತಿಯಲ್ಲಿ ನೈತಿಕ ಮೌಲ್ಯಗಳನ್ನು ಕಾಪಾಡುವ ಜತೆಗೆ ಅನಧಿಕೃತ ವೈದ್ಯಕೀಯ (ಕ್ವಾಕ್ ಪ್ರಾಕ್ಟೀಸ್) ವಿರುದ್ಧ ವೈದ್ಯರು ಸಂಘಟಿತವಾಗಿ ಹೋರಾಡಬೇಕಾದ ಅಗತ್ಯವಿದೆ ಎಂದು ಹೇಳಿದರು.

ಕೆಎಚ್‌ಪಿಐಎಂಎಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ರಾಷ್ಟ್ರೀಯ ವೈದ್ಯರ ದಿನಾಚರಣೆಯ ಮಹತ್ವವನ್ನು ವಿವರಿಸಿ, ಡಾ. ಬಿ.ಸಿ. ರಾಯ್ ಅವರ ಆದರ್ಶ ಸೇವೆ ಪ್ರತಿಯೊಬ್ಬ ವೈದ್ಯರಿಗೂ ಸ್ಫೂರ್ತಿಯಾಗಬೇಕು ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಪ್ರಕಾಶ್ ಎಸ್. ನೀಲಗುಂದ, ಖಾಸಗಿ ಆಸ್ಪತ್ರೆಗಳು ಕೆಪಿಎಂಇ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಈ ಸಂದರ್ಭದಲ್ಲಿ ಐಎಂಎ ಗದಗ ಶತಮಾನೋತ್ಸವ ಸಮಿತಿ ಅಧ್ಯಕ್ಷ ಡಾ. ಎಸ್.ಆರ್. ನಾಗನೂರ, ಕಾರ್ಯದರ್ಶಿ ಡಾ. ರಾಹುಲ್ ಶಿರೋಳ, ಖಜಾಂಚಿ ಡಾ. ಜಯರಾಜ ಪಾಟೀಲ, ಐಎಂಎ ಲೇಡೀಸ್ ವಿಂಗ್ ಅಧ್ಯಕ್ಷೆ ಡಾ. ಸುನಿತಾ ಎಸ್. ಕುರಡಗಿ, ಖಜಾಂಚಿ ಡಾ. ಜ್ಯೋತಿ ಪಾಟೀಲ ಸೇರಿದಂತೆ ಜಿಲ್ಲೆಯ ವೈದ್ಯರು ಹಾಗೂ ವೈದ್ಯಕೀಯ ವೃತ್ತಿಪರರು ಉಪಸ್ಥಿತರಿದ್ದರು.

“ವೈದ್ಯಕೀಯ ವೃತ್ತಿ ಕೇವಲ ಉದ್ಯೋಗವಲ್ಲ; ಅದು ಮಾನವೀಯ ಸೇವೆಯ ಪ್ರತೀಕ. ಕೋವಿಡ್‌ನಂತಹ ಸಂಕಷ್ಟದ ಕಾಲದಲ್ಲಿ ವೈದ್ಯರು ಸಲ್ಲಿಸಿದ ನಿಸ್ವಾರ್ಥ ಸೇವೆ ಸಮಾಜ ಎಂದಿಗೂ ಮರೆಯುವುದಿಲ್ಲ.”

ರೋಹನ್ ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ವಚನ ಉಳಿಸಿದ ಮಹಾತ್ಮನಿಗೆ ಶಿವಾನುಭವದ ನಮನ

ವಿಜಯಸಾಕ್ಷಿ ಸುದ್ದಿ, ಗದಗ: ಕಾಲಗರ್ಭದಲ್ಲಿ ಮರೆಯಾಗುತ್ತಿದ್ದ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂಶೋಧಿಸಿ, ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಅಮೂಲ್ಯ ಪರಂಪರೆಯನ್ನು ಉಳಿಸಿಕೊಟ್ಟ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿಯವರ ಸೇವೆ ಅನನ್ಯ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.

ನಗರದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘ ಆಯೋಜಿಸಿದ್ದ 2804ನೇ ಶಿವಾನುಭವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಕನ್ನಡ ನಾಡು-ನುಡಿಯನ್ನು ಶ್ರೀಮಂತಗೊಳಿಸುವಲ್ಲಿ ವಚನ ಸಾಹಿತ್ಯದ ಪಾತ್ರ ಅಪಾರವಾಗಿದೆ. ಶರಣರ ತತ್ವಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿದ್ದು, ಮಾನವೀಯ ಮೌಲ್ಯಗಳ ನೆಲೆಗಟ್ಟಾಗಿ ಉಳಿದಿವೆ ಎಂದು ಹೇಳಿದರು.

ಮುಖ್ಯ ಉಪನ್ಯಾಸ ನೀಡಿದ ವಿಜಯಪುರದ ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಎಂ.ಎಸ್. ಮದಭಾವಿ, ಹಳಕಟ್ಟಿಯವರು ತಮ್ಮ ವೈಯಕ್ತಿಕ ಸುಖವನ್ನು ತ್ಯಜಿಸಿ ಸಮಾಜಕ್ಕಾಗಿ ಬದುಕಿದ ಮಹನೀಯರು. ವಚನ ಸಾಹಿತ್ಯ ಉಳಿವಿಗಾಗಿ ತಮ್ಮ ಆಸ್ತಿಯನ್ನೇ ಮಾರಿಕೊಂಡು ಜೀವನವನ್ನೇ ಸಮರ್ಪಿಸಿದ ಅವರ ತ್ಯಾಗ ಇತಿಹಾಸದಲ್ಲಿ ಅಜರಾಮರವಾಗಿದೆ ಎಂದು ಹೇಳಿದರು.

ಶಿವಾನುಭವದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ಮಾಜಿ ಅಧ್ಯಕ್ಷ ಡಾ. ಜಿ.ಬಿ. ಪಾಟೀಲ ದಂಪತಿಯನ್ನು ಸನ್ಮಾನಿಸಲಾಯಿತು. ಬಳ್ಳಾರಿಯ ಡಾ. ತಿಪ್ಪೇರುದ್ರ ಸಂಡೂರ ಅವರ ‘ಭುವಿಯ ಬೆಳಕು ಬಸವಣ್ಣ’ ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು. ಉತ್ತರಾಖಂಡದ ಉತ್ತರಕಾಶಿಯ ಟೆರ್ರಾಕೋಟ್ ಶಿಖರವನ್ನು ಆರೋಹಣ ಮಾಡಿದ ಗದಗ ಜಿಲ್ಲೆಯ ಸೃಷ್ಟಿ ಉಮೇಶ ಮೇಟಿ, ಅಶ್ವಿನಿ ತಿರ್ಲಾಪೂರ ಹಾಗೂ ಜಯಲಕ್ಷ್ಮಿ ಸಿ. ಹೊಳೆಯಾಚೆ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಡಾ. ಉಮೇಶ ಪುರದ, ಶಿವಾನುಭವ ಸಮಿತಿ ಅಧ್ಯಕ್ಷ ರಮೇಶ ಕಲ್ಲನಗೌಡರ, ಪ್ರಭು ಗಂಜಿಹಾಳ, ಸಿದ್ಧರಾಮ ಪಟ್ಟೇದ, ಪ್ರತಿಭಾ ಬಡ್ನಿ, ವೀರಣ್ಣ ಗೋಟಡಕಿ ಸೇರಿದಂತೆ ಸಂಘದ ಪದಾಧಿಕಾರಿಗಳು, ಭಕ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

“ಕನ್ನಡ ನಾಡು-ನುಡಿಗೆ ವಚನ ಸಾಹಿತ್ಯವೇ ಜೀವಾಳ. ಸೌಹಾರ್ದಯುತ, ಸುಂದರ ಸಮಾಜ ನಿರ್ಮಾಣವಾಗಬೇಕಾದರೆ ವಚನಗಳನ್ನು ಕೇವಲ ಓದುವುದಲ್ಲ, ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು.”

ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

ಮತದಾರರ ಹಕ್ಕು ಕಾಪಾಡಲು ಗ್ರಾಮದಲ್ಲಿ ಎಸ್‌ಐಆರ್ ಜಾಗೃತಿ

ವಿಜಯಸಾಕ್ಷಿ ಸುದ್ದಿ, ರೋಣ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹಿನ್ನೆಲೆಯಲ್ಲಿ ಯಾವುದೇ ಅರ್ಹ ಮತದಾರ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಎಲ್ಲರೂ ಜಾಗೃತಿ ವಹಿಸಬೇಕು ಎಂದು ಗ್ರಾಮದ ಹಿರಿಯ ಶೇಖರಗೌಡ ಪಾಟೀಲ ಹೇಳಿದರು.

ಮಾರನಬಸರಿ ಗ್ರಾಮದಲ್ಲಿ ನಡೆದ ಎಸ್‌ಐಆರ್ ಜಾಗೃತಿ ಜಾಥಾದಲ್ಲಿ ಮಾತನಾಡಿದ ಅವರು, ಈ ಬಾರಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಪರಿಷ್ಕರಣೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಿರುವುದರಿಂದ ಗ್ರಾಮೀಣ ಭಾಗದ ರೈತರು, ಕೂಲಿ ಕಾರ್ಮಿಕರಿಗೆ ಸೂಕ್ತ ಮಾಹಿತಿ ತಲುಪಿಸುವುದು ಅಗತ್ಯವಾಗಿದೆ. ವಿದ್ಯಾವಂತ ಯುವಕರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಈ ಕಾರ್ಯದಲ್ಲಿ ಕೈಜೋಡಿಸಬೇಕು ಎಂದರು.

ಚುನಾವಣಾ ಆಯೋಗದ ನಿರ್ದೇಶನದಂತೆ ಬಿಎಲ್‌ಒಗಳು ಮನೆ ಮನೆಗೆ ತೆರಳಿ ಅರ್ಜಿ ನಮೂನೆಗಳನ್ನು ವಿತರಿಸುತ್ತಿದ್ದು, ಅವುಗಳನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವಂತೆ ತಿಳಿಸಿದರು.

ಮುಖಂಡ ಅಂದಪ್ಪ ಮರಡಿ ಮಾತನಾಡಿ, ಗ್ರಾಮದಲ್ಲಿರುವ ಪ್ರತಿಯೊಬ್ಬ ಅರ್ಹ ಮತದಾರನಿಗೂ ಎಸ್‌ಐಆರ್ ಕುರಿತು ಮಾಹಿತಿ ತಲುಪಿಸುವ ಕೆಲಸವನ್ನು ಯುವಕರು ಮಾಡಬೇಕು. ಹೊರ ಊರುಗಳಲ್ಲಿ ದುಡಿಯುತ್ತಿರುವ ಕುಟುಂಬಗಳಿಗೂ ಮಾಹಿತಿ ನೀಡಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಖಾದಿರಸಾಬ ಕಳಕಾಪೂರ ಮಾತನಾಡಿ, ಗ್ರಾಮದಲ್ಲಿ ರೈತರು ಹಾಗೂ ಕೂಲಿ ಕಾರ್ಮಿಕರೇ ಹೆಚ್ಚಿರುವುದರಿಂದ ಎಸ್‌ಐಆರ್ ಕುರಿತು ಹೆಚ್ಚಿನ ಜಾಗೃತಿ ಅಗತ್ಯವಾಗಿದೆ. ಎಲ್ಲ ರಾಜಕೀಯ ಪಕ್ಷಗಳ ಕಾರ್ಯಕರ್ತರು ಪಕ್ಷಾತೀತವಾಗಿ ಮತದಾರರ ಹಕ್ಕು ರಕ್ಷಣೆಗೆ ಕೈಜೋಡಿಸಬೇಕು ಎಂದು ಹೇಳಿದರು.

ಬಳಿಕ ಬಿಎಲ್‌ಒಗಳು ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಅರ್ಜಿ ನಮೂನೆಗಳನ್ನು ವಿತರಿಸಿದರು.

ಬೂತ್‌ನಿಂದಲೇ ಬಿಜೆಪಿಗೆ ಬಲ ತುಂಬಿ: ಪಕ್ಷ ಸಂಘಟನೆಗೆ ಮುತ್ತಣ್ಣ ಕಡಗದ ಕರೆ

ವಿಜಯಸಾಕ್ಷಿ ಸುದ್ದಿ, ರೋಣ: ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಬೂತ್ ಮಟ್ಟದಿಂದಲೇ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಕೆಲಸಕ್ಕೆ ಈಗಿನಿಂದಲೇ ಮುಂದಾಗಬೇಕು ಎಂದು ಬಿಜೆಪಿ ರೋಣ ಮಂಡಲದ ಮಾಜಿ ಅಧ್ಯಕ್ಷ ಮುತ್ತಣ್ಣ ಕಡಗದ ಹೇಳಿದರು.

ಸವಡಿ ಗ್ರಾಮದ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಸಂಘಟನಾತ್ಮಕ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮಾಜಿ ಶಾಸಕ ಕಳಕಪ್ಪ ಬಂಡಿಯವರ ಕೊಡುಗೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಹೇಳಿದರು.

ಕಳಕಪ್ಪ ಬಂಡಿಯವರು ಕ್ಷೇತ್ರದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದು, ರಸ್ತೆ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಅನುದಾನ ತಂದು ಸಾಮಾಜಿಕ ಬದ್ಧತೆಯಿಂದ ಕೆಲಸ ಮಾಡಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಬೇಕು ಎಂದು ಕರೆ ನೀಡಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಯಾವುದೇ ಸಮಯದಲ್ಲಿ ಘೋಷಣೆಯಾಗುವ ಸಾಧ್ಯತೆ ಇರುವುದರಿಂದ ಕಾರ್ಯಕರ್ತರು ಈಗಿನಿಂದಲೇ ಸಂಘಟನೆಗೆ ಒತ್ತು ನೀಡಿ ಗೆಲುವಿನ ಗುರಿಯೊಂದಿಗೆ ಕೆಲಸ ಮಾಡಬೇಕು. ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಜವಾಬ್ದಾರಿಯನ್ನೂ ಕಾರ್ಯಕರ್ತರು ವಹಿಸಬೇಕು ಎಂದರು.

ಸಭೆಯಲ್ಲಿ ಅಶೋಕ ಪವಾಡಶೆಟ್ಟರ, ಶಂಕ್ರಯ್ಯ ಹಿರೇಮಠ, ಸಿ.ಎಸ್. ಗದಗ, ಕೂಡ್ಲೆಪ್ಪ ದಂಡಿನ, ಮಹ್ಮದ್ ತರಪದಾರ, ಸಚಿನ್ ಪಾಟೀಲ, ಪರಪ್ಪ ಹೊನ್ನಾಪುರ, ಸಂಗಮೇಶ ಬೆಳವಡಿ, ಅಂದಪ್ಪ ಕಡಿಯವರ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಿಸಿ ರಸ್ತೆ ಕಾಮಗಾರಿಗೆ ಸಂಗನಗೌಡ ಪಾಟೀಲ ಚಾಲನೆ

ವಿಜಯಸಾಕ್ಷಿ ಸುದ್ದಿ, ರೋಣ: ರೋಣ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮದ ಅಭಿವೃದ್ಧಿಗೆ ಶಾಸಕ ಜಿ.ಎಸ್. ಪಾಟೀಲ ಬದ್ಧರಾಗಿದ್ದು, ಸಿಸಿ ರಸ್ತೆ, ಚರಂಡಿ, ಶಾಲಾ ಕೊಠಡಿ ಹಾಗೂ ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿಗಳು ವೇಗವಾಗಿ ನಡೆಯುತ್ತಿವೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಂಗನಗೌಡ ಪಾಟೀಲ ಹೇಳಿದರು.

ಸವಡಿ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದ ₹20 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಗ್ರಾಮದ ಹಿರಿಯರೊಂದಿಗೆ ಚರ್ಚಿಸಿ ಅಗತ್ಯಕ್ಕೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ಸರ್ಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದು, ಶಾಸಕ ಜಿ.ಎಸ್. ಪಾಟೀಲ ಕ್ಷೇತ್ರಕ್ಕೆ ಹೆಚ್ಚಿನ ಯೋಜನೆಗಳನ್ನು ತರುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ಸವಡಿ ಗ್ರಾಮಕ್ಕೂ ಕಳೆದ ಮೂರು ವರ್ಷಗಳಲ್ಲಿ ಕೋಟ್ಯಂತರ ರೂಪಾಯಿ ಅನುದಾನ ದೊರೆತಿದ್ದು, ಹಲವು ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿವೆ. ಮಾರನಬಸರಿ ಗ್ರಾಮದಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಯೂ ಪೂರ್ಣಗೊಂಡಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಲ್ಲನಗೌಡ ಪರಡ್ಡಿ, ಕುಬೇರಗೌಡ ಪರಡ್ಡಿ, ಸೋಮು ನಾಗರಾಜ, ಸುರೇಶ ನಡುವಿನಮನಿ, ಮುತ್ತಣ್ಣ ಹಲಗಿ, ಹುಚ್ಚಿರಪ್ಪ ಮಾದರ, ಶಂಭು ಮೆಣಸಗಿ, ಅನಿಲ ಮಂಗಳೂರ, ಉಮೇಶ ಗೇದಗೆರಿ, ಶಿವು ಕಂಬಳಿ, ರವಿ ಶಿವಪೂಜೆ, ಮಲ್ಲಪ್ಪ ನಿಡಗುಂದಿ, ಸುರೇಶ ಹಲಗಿ, ಮಾಂತೇಶ ಹಕ್ಕಿ, ಶರಣಪ್ಪ ದೊಡ್ಡಮನಿ ಸೇರಿದಂತೆ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಮಾದಕ ವ್ಯಸನ ತ್ಯಜಿಸಿದರೆ ಮಾತ್ರ ಉತ್ತಮ ಬದುಕು ಸಾಧ್ಯ: ಸಿಎಂ ಡಿ.ಕೆ. ಶಿವಕುಮಾರ್

ವಿಜಯಸಾಕ್ಷಿ ಸುದ್ದಿ, ಗದಗ: ಮಾದಕ ದ್ರವ್ಯಗಳಿಂದ ದೂರ ಉಳಿಯುವುದೇ ಆರೋಗ್ಯಕರ ವ್ಯಕ್ತಿತ್ವ, ಸುಭದ್ರ ಕುಟುಂಬ ಹಾಗೂ ಸದೃಢ ಸಮಾಜ ನಿರ್ಮಾಣಕ್ಕೆ ಮೊದಲ ಹೆಜ್ಜೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟರು.

ಅವರು, ನಗರದ ಸನ್ಮಾರ್ಗ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆನ್‌ಲೈನ್ ಮೂಲಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.

ಮಾದಕ ದ್ರವ್ಯ ಸೇವನೆಯನ್ನು ತ್ಯಜಿಸಿದಾಗ ಮಾತ್ರ ವ್ಯಕ್ತಿ ತನ್ನ ಕುಟುಂಬದ ಜೊತೆಗೆ ಸಮಾಜಕ್ಕೂ ಉತ್ತಮ ಬದುಕು ಕಟ್ಟಿಕೊಡಲು ಸಾಧ್ಯವಾಗುತ್ತದೆ. ಡ್ರಗ್ಸ್ ಹಾವಳಿಯನ್ನು ತಡೆಗಟ್ಟಲು ಸರ್ಕಾರ, ಗೃಹ ಇಲಾಖೆ ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದ್ದರೂ, ವಿದ್ಯಾರ್ಥಿಗಳು ಹಾಗೂ ಯುವಜನರ ಸಕ್ರಿಯ ಸಹಕಾರ ಅತ್ಯಗತ್ಯ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಗದಗ ಪೊಲೀಸ್ ಇಲಾಖೆಯ ಆರ್‌ಎಸ್‌ಐ ಸಿ.ಎಸ್. ಕೆರೂರ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿ ಮತ್ತು ಯುವಜನರಲ್ಲಿ ಮಾದಕ ದ್ರವ್ಯ ಸೇವನೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಜರುಗಿಸಲಾಗುವುದು. ಕ್ಷಣಿಕ ಸುಖಕ್ಕಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು ಎಂದು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು.

ಇನ್ನೋರ್ವ ಆರ್‌ಎಸ್‌ಐ ಚಾಂದ್ ಭಾಷಾ ಮಾತನಾಡಿ, ಸನ್ಮಾರ್ಗ ಕಾಲೇಜಿನ ವಿದ್ಯಾರ್ಥಿಗಳು ಸನ್ಮಾರ್ಗದಲ್ಲೇ ನಡೆದು ಸಮಾಜಕ್ಕೆ ಮಾದರಿಯಾಗಬೇಕು. ಯುವಜನರು ಡ್ರಗ್ಸ್‌ನಿಂದ ದೂರ ಉಳಿದರೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಪ್ರೊ. ರಾಜೇಶ್ ಕುಲಕರ್ಣಿ, ಪ್ರಾಚಾರ್ಯ ಪ್ರೊ. ಪುನೀತ್ ದೇಶಪಾಂಡೆ, ಆಡಳಿತಾಧಿಕಾರಿ ಎಂ.ಸಿ. ಹಿರೇಮಠ, ನಿರ್ದೇಶಕರಾದ ಪ್ರೊ. ರೋಹಿತ್ ಒಡೆಯರ್, ಪ್ರೊ. ಸೈಯದ್ ಮತೀನ್ ಮುಲ್ಲಾ, ಪ್ರೊ. ರಾಹುಲ್ ಒಡೆಯರ್, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಚಾರ್ಟರ್ಡ್ ಅಕೌಂಟೆಂಟ್ಸ್ ದಿನಕ್ಕೆ ಮಾನವೀಯ ಸ್ಪರ್ಶ

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆನ್ಸಿ ದಿನಾಚರಣೆಯನ್ನು ವಿಜಯನಗರ ಚಾರ್ಟರ್ಡ್ ಅಕೌಂಟೆಂಟ್ಸ್ ಜಿಲ್ಲಾ ಘಟಕವು ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಿತು.

ಪಟ್ಟಣದ ಸಾಧ್ಯಾ ಟ್ರಸ್ಟ್ ಫಾರ್ ಸೋಷಿಯಲ್ ಡೆವಲಪ್‌ಮೆಂಟ್ (ರಿ) ನಡೆಸುತ್ತಿರುವ ಬುದ್ಧಿಮಾಂದ್ಯ ಮಕ್ಕಳ ವಿಶೇಷ ಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಚಾರ್ಟರ್ಡ್ ಅಕೌಂಟೆಂಟ್ ಸೀನಂ ಭಟ್, ದೇಶದ ಆರ್ಥಿಕ ವ್ಯವಸ್ಥೆಯನ್ನು ಸದೃಢಗೊಳಿಸುವಲ್ಲಿ ಚಾರ್ಟರ್ಡ್ ಅಕೌಂಟೆಂಟ್‌ಗಳ ಪಾತ್ರ ಮಹತ್ವದ್ದಾಗಿದೆ. ಹಣಕಾಸಿನ ಶಿಸ್ತು, ಪಾರದರ್ಶಕತೆ ಹಾಗೂ ನಿಖರ ಲೆಕ್ಕಪತ್ರ ನಿರ್ವಹಣೆಯ ಮೂಲಕ ಉತ್ತಮ ಆಡಳಿತ ವ್ಯವಸ್ಥೆ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ವಿಶೇಷ ಚೇತನ ಮಕ್ಕಳ ಶಿಕ್ಷಣ, ಆರೈಕೆ, ತರಬೇತಿ ಹಾಗೂ ಸಬಲೀಕರಣಕ್ಕಾಗಿ ಸಾಧ್ಯಾ ಟ್ರಸ್ಟ್ ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿಗೆ ಶ್ರಮಿಸುವ ಇಂತಹ ಸಂಸ್ಥೆಗಳಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಹಣಕಾಸಿನ ಜವಾಬ್ದಾರಿ ಮತ್ತು ಪಾರದರ್ಶಕ ಆಡಳಿತ ಯಾವುದೇ ಸಂಸ್ಥೆಯ ಬೆಳವಣಿಗೆಗೆ ಭದ್ರ ಬುನಾದಿಯಾಗಿದ್ದು, ವಿದ್ಯಾರ್ಥಿಗಳಲ್ಲಿ ಉಳಿತಾಯದ ಮನೋಭಾವ ಹಾಗೂ ಹಣಕಾಸಿನ ಅರಿವನ್ನು ಬಾಲ್ಯದಿಂದಲೇ ಬೆಳೆಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

ದಿನಾಚರಣೆಯ ಅಂಗವಾಗಿ ವಿಶೇಷ ಶಾಲೆಗೆ ಎರಡು ನೀರಿನ ಟ್ಯಾಂಕ್‌ಗಳು, ಅಡುಗೆ ಸಾಮಗ್ರಿಗಳು ಹಾಗೂ ಎರಡು ಚಹಾ ಬಾಕ್ಸ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು. ಬಳಿಕ ಚಾರ್ಟರ್ಡ್ ಅಕೌಂಟೆಂಟ್ಸ್ ವಿದ್ಯಾರ್ಥಿಗಳೊಂದಿಗೆ ಬೆರೆತು ಅವರ ಯೋಗಕ್ಷೇಮ ವಿಚಾರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಚಾರ್ಟರ್ಡ್ ಅಕೌಂಟೆಂಟ್ ರವೀಂದ್ರನಾಥ ಗುಪ್ತ, ಸಿಎ ವೀಣಾ, ಸಿಎ ಸರ್ಪಭೂಷಣ, ಜಿ. ಅನಿತಾ, ಶೀಲಾ ರೆಡ್ಡಿ, ಸೋನಿ ಮಹೇಂದ್ರ, ಶ್ರೀಕಾಂತ್, ಜಿ. ವಿನಾಯಕ್, ಗವಿಸಿದ್ದಪ್ಪ, ಮಂಜುನಾಥ್, ಗುಂಡಿ ನಾಗರಾಜ್, ಬೋರಯ್ಯ, ರಾಜೇಶ್, ಶ್ರೀನಿವಾಸ್, ಅನಿಲ್ ಕುಮಾರ್, ಶಾಲೆಯ ಮುಖ್ಯಸ್ಥೆ ಆರತಿ, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

33 ದಿನಗಳ ಶಿವಯೋಗ ಸಮಾಧಿ ಅಂತ್ಯ; ಜುಲೈ 5ರಂದು ರಾಚೋಟೀಶ್ವರ ಶ್ರೀಗಳ ದರ್ಶನ

ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ಅಂತೂರ–ಬೆಂತೂರ ಗ್ರಾಮದ ಬೂದೀಶ್ವರ ಸಂಸ್ಥಾನಮಠದಲ್ಲಿ ರಾಚೋಟೀಶ್ವರ ಶಿವಾಚಾರ್ಯರ 60ನೇ ಮೌನಾನುಷ್ಠಾನ ಹಾಗೂ 16ನೇ ಶಿವಯೋಗ ಸಮಾಧಿಯ ಮುಕ್ತಾಯ ಮಹಾಮಂಗಳೋತ್ಸವ ಜುಲೈ 5ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಪ್ರವಚನಕಾರ ಮಡಿವಾಳಯ್ಯ ಶಾಸ್ತ್ರಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರ, ನೀರು, ಗಾಳಿ ಹಾಗೂ ಬೆಳಕಿಲ್ಲದ ಸ್ಥಳದಲ್ಲಿ 33 ದಿನಗಳ ಕಾಲ ತಪಸ್ಸು ಆಚರಿಸಿರುವ ರಾಚೋಟೀಶ್ವರ ಶ್ರೀಗಳು ಜುಲೈ 5ರಂದು ಬೆಳಿಗ್ಗೆ 9.30ಕ್ಕೆ ಸಮಾಧಿ ಸ್ಥಳದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡಲಿದ್ದಾರೆ ಎಂದು ಹೇಳಿದರು.

ಜೂನ್ 2ರಿಂದ ಆರಂಭಗೊಂಡಿರುವ ಭೀಮಕವಿ ವಿರಚಿತ ಬಸವೇಶ್ವರ ಪುರಾಣ ಪ್ರವಚನ ಜುಲೈ 4ರಂದು ಮಹಾಮಂಗಲದೊಂದಿಗೆ ಮುಕ್ತಾಯಗೊಳ್ಳಲಿದೆ. ಜುಲೈ 1ರಿಂದ 4ರವರೆಗೆ ವಿಶೇಷ ಪೂಜೆ, 775 ಶಿವಲಿಂಗಗಳ ಪ್ರತಿಷ್ಠಾಪನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು, ಜುಲೈ 5ರಂದು ಬೂದೀಶ್ವರರ ವಿಗ್ರಹ ಪ್ರತಿಷ್ಠಾಪನೆ ನೆರವೇರಲಿದೆ ಎಂದರು.

ಜುಲೈ 1ರಂದು ಷಟಸ್ಥಲ ಧ್ವಜಾರೋಹಣ ಹಾಗೂ 775 ಶಿವಲಿಂಗ ಪ್ರತಿಷ್ಠಾಪನೆ, ಜುಲೈ 2 ಮತ್ತು 3ರಂದು ಧರ್ಮಸಭೆಗಳು, ಜುಲೈ 4ರಂದು ಬಸವಪುರಾಣ ಮಹಾಮಂಗಲೋತ್ಸವ ನಡೆಯಲಿದೆ. ವಿವಿಧ ದಿನಗಳಲ್ಲಿ ದೇವರಹಿಪ್ಪರಗಿ ಜಡೇಮಠದ ಜಡೇಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಿರಹಟ್ಟಿ ಫಕೀರ ಸಿದ್ಧರಾಮ ಸ್ವಾಮೀಜಿ, ಕೊಣ್ಣೂರ ಸಿದ್ಧಲಿಂಗ ಶಿವಾಚಾರ್ಯರು, ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಜುಲೈ 5ರಂದು ನಡೆಯುವ ಶಿವಯೋಗ ಸಮಾಧಿ ಮಹಾಮಂಗಳೋತ್ಸವ ಹಾಗೂ ಬೂದೀಶ್ವರರ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಮುಂಡರಗಿ ಅನ್ನದಾನೇಶ್ವರ ಮಠದ ಜಗದ್ಗುರು ಡಾ. ನಾಡೋಜ ಅನ್ನದಾನೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ರಾಚೋಟೀಶ್ವರ ಶಿವಾಚಾರ್ಯರು ನೇತೃತ್ವ ವಹಿಸಲಿದ್ದಾರೆ. ಶಾಸಕ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ದೇವರಹಿಪ್ಪರಗಿ ಜಡೇಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ಲೋಕಕಲ್ಯಾಣ, ಯೋಧರು ಹಾಗೂ ರೈತರ ಶ್ರೇಯೋಭಿವೃದ್ಧಿಗಾಗಿ ರಾಚೋಟೀಶ್ವರ ಶ್ರೀಗಳು ಶಿವಯೋಗ ಸಮಾಧಿ ಕೈಗೊಂಡಿದ್ದಾರೆ. ಮುಕ್ತಾಯ ಸಮಾರಂಭಕ್ಕೆ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರದಿಂದಲೂ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಮಹಾಲಿಂಗಪುರದ ಗುರುಲಿಂಗ ದೇವರು ಮಾತನಾಡಿ, ಜುಲೈ 6ರಂದು ಬೆಳಿಗ್ಗೆ 5 ಗಂಟೆಗೆ “ದುಶ್ಚಟಗಳ ಭಿಕ್ಷೆ–ಸದ್ಗುಣಗಳ ದೀಕ್ಷೆ” ಎಂಬ ಸಂಕಲ್ಪದೊಂದಿಗೆ ಬೂದೀಶ್ವರ ಮಠದಿಂದ ಉಳವಿ ಚನ್ನಬಸವೇಶ್ವರ ದೇವಸ್ಥಾನದವರೆಗೆ ಧರ್ಮಜಾಗೃತಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್.ಕೆ. ಆಲೂರು, ಮಂಜುನಾಥ ಮಜ್ಜಿಗುಡ್ಡ, ಬೂದಪ್ಪ ಜಿಣಿಗಿ ಹಾಗೂ ಮಂಜುನಾಥ ಬಾವಿಕಟ್ಟಿ ಉಪಸ್ಥಿತರಿದ್ದರು.

‘ಆರೋಗ್ಯವೇ ಭಾಗ್ಯ’ ಸಾರಿದ ಕೆಎಲ್‌ಇ ವಿದ್ಯಾರ್ಥಿಗಳ ನಾಟಕ

ವಿಜಯಸಾಕ್ಷಿ ಸುದ್ದಿ, ಗದಗ: ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಸ್ಥಳೀಯ ಕೆಎಲ್‌ಇ ಶಾಲೆಯಲ್ಲಿ ವಿದ್ಯಾರ್ಥಿಗಳೇ ಕೇಂದ್ರಬಿಂದುವಾಗಿ ಅರ್ಥಪೂರ್ಣವಾಗಿ ಆಚರಿಸಿದರು. ಭಾಷಣ, ನಾಟಕ, ನೃತ್ಯ ಹಾಗೂ ಜಾಗೃತಿ ಗೀತೆಗಳ ಮೂಲಕ ಆರೋಗ್ಯದ ಮಹತ್ವವನ್ನು ಸಾರಿದ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ನಗರದ ಹಿರಿಯ ವೈದ್ಯ ಡಾ. ರಾಜಶೇಖರ ಪವಾಡಶೆಟ್ಟರ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿರುವುದು ಕಳವಳಕಾರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಅಪಘಾತ ಸಂಭವಿಸಿದಾಗ ಗಾಯಾಳುಗಳಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆಯಬೇಕು ಎಂದು ಸಲಹೆ ನೀಡಿದರು.

ವೈದ್ಯರು ತಮ್ಮ ಜ್ಞಾನ, ಕೌಶಲ್ಯ ಮತ್ತು ಮಾನವೀಯತೆಯ ಮೂಲಕ ಸಮಾಜದ ಅಮೂಲ್ಯ ಸೇವೆ ಸಲ್ಲಿಸುತ್ತಿದ್ದಾರೆ. ಸಾಂಕ್ರಾಮಿಕ ರೋಗಗಳು ಹಾಗೂ ತುರ್ತು ಪರಿಸ್ಥಿತಿಗಳಲ್ಲಿ ಅವರ ಸೇವೆ ಅತ್ಯಂತ ಶ್ಲಾಘನೀಯವಾಗಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಾಂಶುಪಾಲೆ ಕಲ್ಪನಾ ಚಚಡಿ ಮಾತನಾಡಿ, ಪ್ರಕೃತಿಯು ನೀಡಿರುವ ಗಾಳಿ, ನೀರು, ಬೆಳಕು ಹಾಗೂ ಆಹಾರವೇ ಆರೋಗ್ಯದ ಮೂಲ. ಅವುಗಳನ್ನು ಸಂರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಕೊರೊನಾ ಮಹಾಮಾರಿಯ ಸಂದರ್ಭದಲ್ಲಿ ವೈದ್ಯರು ಸಲ್ಲಿಸಿದ ಸೇವೆ ಸದಾ ಸ್ಮರಣೀಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ 3 ಮತ್ತು 4ನೇ ತರಗತಿ ವಿದ್ಯಾರ್ಥಿಗಳು “ಆರೋಗ್ಯವೇ ಭಾಗ್ಯ” ಎಂಬ ಜಾಗೃತಿ ನಾಟಕ ಪ್ರದರ್ಶಿಸಿ ಆರೋಗ್ಯಕರ ಜೀವನಶೈಲಿಯ ಸಂದೇಶ ನೀಡಿದರು. 7 ಮತ್ತು 8ನೇ ತರಗತಿ ವಿದ್ಯಾರ್ಥಿಗಳು ದೈನಂದಿನ ಬದುಕಿನಲ್ಲಿ ಆರೋಗ್ಯದ ಕಾಳಜಿ ಕುರಿತು ಅಣಕು ಪ್ರದರ್ಶನ ನಡೆಸಿ ಮೆಚ್ಚುಗೆ ಗಳಿಸಿದರು.

ವೇದಿಕೆಯಲ್ಲಿ ಹಿರಿಯ ಶಿಕ್ಷಕ ವಿರೇಂದ್ರ ಗಂಗಲ್ ಉಪಸ್ಥಿತರಿದ್ದರು. ವಿಜ್ಞಾನ ವಿಭಾಗದ ಮುಖ್ಯಸ್ಥೆ ಸುರೇಖಾ ಕದಂ, ಶಿಕ್ಷಕರಾದ ಮಹಾಂತೇಶ ಕಟಗಿ ಹಾಗೂ ಶಿಕ್ಷಕಿಯರಾದ ಸೀತಾ ನಾಮಧಾರಿ, ವಿಜಯಾ ಕಬ್ಬಕ್ಕಿ, ಸೋನಲ್ ಶಹಾ, ಸೋನಿಯಾ ಉಣಚಗೇರಿ, ನಮ್ರತಾ, ಸಮ್ರಿನ್ ತಾಜ್, ಬೃಂದಾ ಕೆ. ಮತ್ತು ಪ್ರೇಮಾಂಜಲಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ವಂದನಾರ್ಪಣೆ ಹಾಗೂ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

ಕರ್ತವ್ಯನಿಷ್ಠ ಚಾಲಕನಿಗೆ ಗೌರವ: ಬಸವರಾಜ ಅಂಗಡಿ ಅವರಿಗೆ ಕೆಎಸ್‌ಆರ್‌ಟಿಸಿ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಕೆಎಸ್‌ಆರ್‌ಟಿಸಿಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ನಿಷ್ಠೆಯಿಂದ ಸೇವೆ ಸಲ್ಲಿಸಿ ನಿವೃತ್ತರಾದ ಬಸ್ ಚಾಲಕ ಬಸವರಾಜ ಅಂಗಡಿ ಅವರಿಗೆ ಗಜೇಂದ್ರಗಡ ಬಸ್ ಘಟಕದಲ್ಲಿ ಆತ್ಮೀಯ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.

31 ವರ್ಷಗಳ ಕಾಲ ಸಂಸ್ಥೆಯ ವಿವಿಧ ಘಟಕಗಳಲ್ಲಿ ಚಾಲಕರಾಗಿ ಸೇವೆ ಸಲ್ಲಿಸಿದ ಬಸವರಾಜ ಅಂಗಡಿ, ಶಿಸ್ತು, ಸಮಯಪಾಲನೆ ಮತ್ತು ಸುರಕ್ಷಿತ ಚಾಲನೆಯ ಮೂಲಕ ಸಹೋದ್ಯೋಗಿಗಳು ಹಾಗೂ ಪ್ರಯಾಣಿಕರ ವಿಶ್ವಾಸ ಗಳಿಸಿದ್ದರು. 2005ರಲ್ಲಿ ಉತ್ತಮ ಚಾಲಕ ಪ್ರಶಸ್ತಿ ಪಡೆದಿದ್ದ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಘಟಕದ ಚಾಲಕರು, ನಿರ್ವಾಹಕರು ಹಾಗೂ ಸಿಬ್ಬಂದಿ ಅಭಿನಂದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, ಬಸವರಾಜ ಅಂಗಡಿ ಅವರು ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಮತ್ತು ವಿನಯಶೀಲತೆಯಿಂದ ಸಂಸ್ಥೆಯ ಗೌರವ ಹೆಚ್ಚಿಸಿದ ಸಿಬ್ಬಂದಿಯಾಗಿದ್ದು, ಅವರ ಸೇವೆ ಯುವ ಚಾಲಕರಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಟಿ.ವಿ. ಮೈತ್ರಿ, ಗಜೇಂದ್ರಗಡ ಘಟಕ ವ್ಯವಸ್ಥಾಪಕ ಕೆ.ಎಸ್. ಜಿಗಳೂರ, ಸಿಬ್ಬಂದಿಗಳಾದ ಎಸ್.ಜಿ. ಜೇಡ್ರಾಮಕುಂಟಿ, ಡಿ.ವೈ. ನಾಲಬಂದ, ಮುಖಂಡರಾದ ಉಮೇಶ ಮೇಣಸಗಿ, ದೊಡ್ಡಬಸವರಾಜ ಅಂಗಡಿ ಸೇರಿದಂತೆ ಹಲವರು ಉಪಸ್ಥಿತರಿದ್ದು, ನಿವೃತ್ತ ಜೀವನ ಸುಖ, ಆರೋಗ್ಯ ಮತ್ತು ನೆಮ್ಮದಿಯಿಂದ ಕೂಡಿರಲಿ ಎಂದು ಶುಭ ಹಾರೈಸಿದರು.