ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದೆ.
ಈ ಹಿಂದೆ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಜೂನ್ ತಿಂಗಳೊಳಗೆ ಜಿಬಿಎ ಪಂಚ ಪಾಲಿಕೆಗಳಿಗೆ ಚುನಾವಣೆ ನಡೆಸಬೇಕು ಎಂದು ಆದೇಶಿಸಿತ್ತು. ಆದರೆ ರಾಜ್ಯದಲ್ಲಿ ಜನಗಣತಿ ಹಾಗೂ ಎಸ್ಐಆರ್ ಕಾರ್ಯಗಳು ನಡೆಯುತ್ತಿರುವುದರಿಂದ ಸರ್ಕಾರಿ ನೌಕರರು ಈಗಾಗಲೇ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆ ನಡೆಸುವುದು ಕಷ್ಟಕರವಾಗಿದೆ ಎಂದು ರಾಜ್ಯ ಸರ್ಕಾರ ವಾದಿಸಿದೆ.
ಅದೇ ಕಾರಣದಿಂದ ಚುನಾವಣೆ ಮುಂದೂಡಿಕೆ ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಜೊತೆಗೆ ರಾಜ್ಯ ಚುನಾವಣಾ ಆಯೋಗವೂ ಚುನಾವಣೆಗೆ ಹೆಚ್ಚುವರಿ ಮೂರು ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದೆ.
ಈ ಕುರಿತು ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ಮಹತ್ವದ ತೀರ್ಪಿನ ನಿರೀಕ್ಷೆ ಇದೆ.
ಈ ವಿಚಾರ ರಾಜ್ಯ ರಾಜಕೀಯ ಹಾಗೂ ಸ್ಥಳೀಯ ಆಡಳಿತ ವ್ಯವಸ್ಥೆಯಲ್ಲಿ ಗಮನ ಸೆಳೆದಿದೆ.

