Home Blog

ನ್ಯಾಯಾಲಯದ ಅನುಮತಿ ಇಲ್ಲದೆ ಕಲಾಪದ ಆಡಿಯೋ-ವಿಡಿಯೋ ಪ್ರಸಾರಕ್ಕೆ ಸುಪ್ರೀಂ ನಿಷೇಧ!

0

ನವದೆಹಲಿ: ನ್ಯಾಯಾಲಯಗಳ ಕಲಾಪಗಳ ಆಡಿಯೋ ಮತ್ತು ವಿಡಿಯೋಗಳನ್ನು ಸಂಬಂಧಿತ ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ಸಾಮಾಜಿಕ ಜಾಲತಾಣಗಳು ಅಥವಾ ಇತರ ಡಿಜಿಟಲ್ ವೇದಿಕೆಗಳಲ್ಲಿ ಹಂಚಿಕೊಳ್ಳುವುದು, ಪ್ರಸಾರ ಮಾಡುವುದು ಹಾಗೂ ಮರುಪ್ರಸಾರ ಮಾಡುವುದನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.

ನ್ಯಾಯಾಲಯದ ಕಲಾಪಗಳ ನೇರಪ್ರಸಾರ ಮತ್ತು ವಿಡಿಯೋಗಳ ಅನಿಯಂತ್ರಿತ ಬಳಕೆಯನ್ನು ನಿಯಂತ್ರಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ.

ಆದೇಶದಲ್ಲಿ, ಸಂಬಂಧಿತ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅಥವಾ ಸುಪ್ರೀಂ ಕೋರ್ಟ್‌ನ ಪ್ರಧಾನ ಕಾರ್ಯದರ್ಶಿಯ ಪೂರ್ವಾನುಮತಿ ಇಲ್ಲದೆ ನ್ಯಾಯಾಂಗ ಕಲಾಪಗಳ ಆಡಿಯೋ ಅಥವಾ ವಿಡಿಯೋ ದಾಖಲಾತಿಗಳನ್ನು ಸಾಮಾಜಿಕ ಜಾಲತಾಣಗಳು ಹಾಗೂ ಇತರ ಡಿಜಿಟಲ್ ವೇದಿಕೆಗಳಲ್ಲಿ ಪೋಸ್ಟ್ ಮಾಡುವುದು, ಮರುಪೋಸ್ಟ್ ಮಾಡುವುದು, ಅಪ್ಲೋಡ್ ಮಾಡುವುದು, ಪ್ರಸಾರ ಮಾಡುವುದು ಅಥವಾ ಯಾವುದೇ ರೀತಿಯಲ್ಲಿ ಮಾರ್ಪಡಿಸಿ ಹಂಚಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದೆ.

ನ್ಯಾಯಾಲಯದ ಕಲಾಪಗಳ ವಿಡಿಯೋಗಳನ್ನು ಅನಿಯಂತ್ರಿತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವ ಪ್ರವೃತ್ತಿಯನ್ನು ಸುಪ್ರೀಂ ಕೋರ್ಟ್ “ಚೀಲದಿಂದ ಹೊರಬಂದ ರಾಕ್ಷಸ” ಎಂದು ಬಣ್ಣಿಸಿದ್ದು, ಇಂತಹ ಕ್ರಮಗಳು ನ್ಯಾಯಾಂಗದ ಘನತೆಗೆ ಧಕ್ಕೆ ತರುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದೆ.

ಆದಾಗ್ಯೂ, ಈ ಮಧ್ಯಂತರ ಆದೇಶವು ನ್ಯಾಯಾಲಯದ ಕಲಾಪಗಳ ಕುರಿತು ಮಾಧ್ಯಮಗಳು ಸುದ್ದಿ ವರದಿ ಮಾಡುವ ಹಕ್ಕಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಇದನ್ನು ಸಾಮಾನ್ಯ ಅಥವಾ ತಮಾಷೆಯ ಆದೇಶವೆಂದು ಪರಿಗಣಿಸಬಾರದು ಎಂದೂ ನ್ಯಾಯಪೀಠ ತಿಳಿಸಿದೆ.

ಅರ್ಜಿದಾರರ ಪರವಾಗಿ, ನ್ಯಾಯಾಲಯದ ಕಲಾಪಗಳ ಆಯ್ದ ಹಾಗೂ ಸಂದರ್ಭದಿಂದ ಹೊರತಾದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದರಿಂದ ನ್ಯಾಯಾಂಗದ ಘನತೆ ಕುಗ್ಗುತ್ತಿದ್ದು, ನ್ಯಾಯ ವಿತರಣಾ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೂ ಧಕ್ಕೆ ಉಂಟಾಗುತ್ತಿದೆ ಎಂದು ವಾದಿಸಲಾಯಿತು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ನಿರ್ಬಂಧ ವಿಧಿಸಿದೆ.

ವಿದ್ಯಾರ್ಥಿಗಳ ಮೇಲಿನ ಪ್ರಕರಣ ಹಿಂಪಡೆದು ಪರಿಹಾರಕ್ಕೆ ಕೇಂದ್ರ ಒಪ್ಪಿಗೆ: ಪ್ರಧಾನ್ ರಾಜೀನಾಮೆ ಬೇಡಿಕೆಗೆ ಸಮಯ ಕೇಳಲಾಗಿದೆ ಎಂದ CJP

0

ನವದೆಹಲಿ: ನೀಟ್ ಪರೀಕ್ಷಾ ಅಕ್ರಮ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ತಮ್ಮ ಮೂರು ಪ್ರಮುಖ ಬೇಡಿಕೆಗಳ ಪೈಕಿ ಎರಡು ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ತಿಳಿಸಿದೆ.

ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು ಸಿಜೆಪಿಯ ಮುಖ್ಯ ವಕ್ತಾರ ಸೌರವ್ ದಾಸ್ ಹಾಗೂ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಅವರೊಂದಿಗೆ ಎರಡನೇ ಸುತ್ತಿನ ಸಭೆ ನಡೆಸಿದರು.

ಸಭೆಯಲ್ಲಿ ಸಿಜೆಪಿ ಮೂರು ಪ್ರಮುಖ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟಿತ್ತು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು, ಪ್ರತಿಭಟನೆಯಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಆತ್ಮಹತ್ಯೆ ಮಾಡಿಕೊಂಡಿರುವ ನೀಟ್ ಆಕಾಂಕ್ಷಿಗಳ ಕುಟುಂಬಗಳಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿತ್ತು.

ಸಭೆಯ ಬಳಿಕ ಮಾತನಾಡಿದ ಸಿಜೆಪಿ ಮುಖಂಡರು, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹೊರತುಪಡಿಸಿ ಉಳಿದ ಎರಡು ಬೇಡಿಕೆಗಳ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಹೇಳಿದರು. ಈ ಕುರಿತು ಮುಂದಿನ ಸುತ್ತಿನ ಸಭೆ ನಡೆಯಲಿದೆ ಎಂದು ತಿಳಿಸಿದರು.

ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಮಾತನಾಡಿ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕುರಿತು ನಿರ್ಧಾರ ಕೈಗೊಳ್ಳಲು ಸರ್ಕಾರ ನಾಳೆ ಮಧ್ಯಾಹ್ನದವರೆಗೆ ಸಮಯ ಕೇಳಿದೆ. ಶೀಘ್ರದಲ್ಲೇ ಅವರನ್ನು ಸಂಪುಟದಿಂದ ತೆಗೆದುಹಾಕಲಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಅಲ್ಲದೆ, ನೀಟ್ ಪರೀಕ್ಷೆಯಲ್ಲಿ ಅಕ್ರಮಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವುದು ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳು ಮತ್ತು ಕಾನೂನು ಪ್ರಕರಣಗಳನ್ನು ಹಿಂಪಡೆಯುವ ಬೇಡಿಕೆಗಳಿಗೆ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದರು.

ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲ ಪಿತ್ರಾರ್ಜಿತವಲ್ಲ: ಮಕ್ಕಳ ಜನ್ಮಸಿದ್ಧ ಹಕ್ಕಿನ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ತಾತನಿಂದ ತಂದೆಗೆ ಬಂದ ಎಲ್ಲ ಆಸ್ತಿಗಳಿಗೂ ಮಕ್ಕಳು ಜನ್ಮಸಿದ್ಧ ಹಕ್ಕು ಹೊಂದಿರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆಸ್ತಿಯ ಮೂಲ, ಅದು ಹೇಗೆ ಸಂಪಾದನೆಯಾಯಿತು ಹಾಗೂ ಅದರ ಕಾನೂನು ಸ್ವರೂಪದ ಆಧಾರದ ಮೇಲೆಯೇ ಅದು ಪಿತ್ರಾರ್ಜಿತ ಆಸ್ತಿಯೇ ಅಥವಾ ಸ್ವಯಾರ್ಜಿತ ಆಸ್ತಿಯೇ ಎಂಬುದನ್ನು ನಿರ್ಧರಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಹೈಕೋರ್ಟ್ ಅಭಿಪ್ರಾಯದ ಪ್ರಕಾರ, ಹಿಂದೂ ಅವಿಭಕ್ತ ಕುಟುಂಬದ ಕೌಟುಂಬಿಕ ಆಸ್ತಿಯಾಗಿ ತಲೆಮಾರುಗಳಿಂದ ಮುಂದುವರಿದಿರುವ ಹಾಗೂ ಜಂಟಿ ಸ್ವರೂಪವನ್ನು ಉಳಿಸಿಕೊಂಡಿರುವ ಆಸ್ತಿಯನ್ನೇ ಸಾಮಾನ್ಯವಾಗಿ ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸಲಾಗುತ್ತದೆ. ಇಂತಹ ಆಸ್ತಿಯಲ್ಲಿ ಮಕ್ಕಳಿಗೆ ಹುಟ್ಟಿನಿಂದಲೇ ಹಕ್ಕು ಇರುತ್ತದೆ.

ಆದರೆ, ತಾತ ತಮ್ಮ ಸ್ವಂತ ಆದಾಯ, ದುಡಿಮೆ ಅಥವಾ ಖರೀದಿಯ ಮೂಲಕ ಸಂಪಾದಿಸಿದ ಸ್ವಯಾರ್ಜಿತ ಆಸ್ತಿಯನ್ನು ನಂತರ ತಂದೆ ಪಡೆದಿದ್ದರೂ, ಅದು ಸ್ವಯಂಚಾಲಿತವಾಗಿ ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ವ್ಯಕ್ತಿಯೊಬ್ಬರು ತಮ್ಮ ಆದಾಯ, ಖರೀದಿ, ಉಡುಗೊರೆ, ಉಯಿಲು ಅಥವಾ ವೈಯಕ್ತಿಕ ಪ್ರಯತ್ನದ ಮೂಲಕ ಗಳಿಸಿದ ಆಸ್ತಿಯನ್ನು ಸ್ವಯಾರ್ಜಿತ ಆಸ್ತಿ ಎಂದು ಕರೆಯಲಾಗುತ್ತದೆ. ಇಂತಹ ಆಸ್ತಿಯ ಮೇಲೆ ಸಂಪೂರ್ಣ ಹಕ್ಕು ಆ ಮಾಲೀಕರಿಗೇ ಇರುತ್ತದೆ. ಅದನ್ನು ಯಾರಿಗೆ ವರ್ಗಾಯಿಸಬೇಕು ಅಥವಾ ಉಯಿಲು ಮಾಡಬೇಕು ಎಂಬುದನ್ನು ನಿರ್ಧರಿಸುವ ಅಧಿಕಾರವೂ ಅವರಿಗೆ ಇರುತ್ತದೆ.

ಸ್ವಯಾರ್ಜಿತ ಆಸ್ತಿಯನ್ನು ಮಾಲೀಕರು ಸ್ವಯಂಪ್ರೇರಣೆಯಿಂದ ಹಿಂದೂ ಅವಿಭಕ್ತ ಕುಟುಂಬದ ಆಸ್ತಿಯಾಗಿ ಸೇರಿಸಿದರೆ ಅಥವಾ ಅದು ಕುಟುಂಬದ ಸಾಮೂಹಿಕ ಆಸ್ತಿಯ ಸ್ವರೂಪ ಪಡೆದುಕೊಂಡರೆ ಮಾತ್ರ ಅದರ ಕಾನೂನು ಸ್ವರೂಪ ಬದಲಾಗಬಹುದು. ಕೇವಲ ತಲೆಮಾರಿನಿಂದ ತಲೆಮಾರಿಗೆ ವರ್ಗಾವಣೆಯಾದ ಕಾರಣಕ್ಕೆ ಮಾತ್ರ ಅದು ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ತಂದೆಯ ಸ್ವಯಾರ್ಜಿತ ಆಸ್ತಿಯಲ್ಲಿ ಮಕ್ಕಳ ಹಕ್ಕು ಏನು?

ತಂದೆ ಜೀವಂತವಾಗಿರುವವರೆಗೆ ಅವರ ಸ್ವಯಾರ್ಜಿತ ಆಸ್ತಿಯಲ್ಲಿ ಮಕ್ಕಳಿಗೆ ಜನ್ಮಸಿದ್ಧ ಹಕ್ಕು ಇರುವುದಿಲ್ಲ. ಆದರೆ ತಂದೆ ಉಯಿಲು ಮಾಡದೆ ಮೃತಪಟ್ಟರೆ, ಕಾನೂನುಬದ್ಧ ಉತ್ತರಾಧಿಕಾರಿಗಳಾಗಿ ಮಕ್ಕಳು ಆಸ್ತಿಯಲ್ಲಿ ಪಾಲು ಪಡೆಯಬಹುದು. ತಂದೆ ಉಯಿಲಿನ ಮೂಲಕ ಮಕ್ಕಳಿಗೆ ಪಾಲು ನೀಡಿದ್ದರೂ ಅವರಿಗೆ ಹಕ್ಕು ಸಿಗುತ್ತದೆ.

ಇನ್ನು 2005ರ ಹಿಂದೂ ಉತ್ತರಾಧಿಕಾರ (ತಿದ್ದುಪಡಿ) ಕಾಯ್ದೆಯ ಪ್ರಕಾರ, ಪಿತ್ರಾರ್ಜಿತ ಆಸ್ತಿಯಲ್ಲಿ ಪುತ್ರಿಯರಿಗೂ ಪುತ್ರರಷ್ಟೇ ಸಮಾನ ಹಕ್ಕು ಇದೆ. ಆದರೆ ಈ ಕಾಯ್ದೆಯ ಪ್ರಕಾರವೂ ಸ್ವಯಾರ್ಜಿತ ಆಸ್ತಿ ಸ್ವತಃ ಪಿತ್ರಾರ್ಜಿತ ಆಸ್ತಿಯಾಗಿ ಪರಿವರ್ತನೆಯಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ ಏನು?

ಅಮೆರಿಕದಲ್ಲಿ ನೆಲೆಸಿರುವ ಕರ್ನಾಟಕದ ಮಹಿಳೆ ಉಷಾ ಎನ್. ಸ್ವಾಮಿ ಅವರು ತಮ್ಮ ತಾತನ ಆಸ್ತಿಯಲ್ಲಿ ಸಮಾನ ಪಾಲು ನೀಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದರು.

ತಾತನ ನಿಧನದ ಬಳಿಕ ಆಸ್ತಿ ತಂದೆಗೆ ಬಂದಿರುವುದರಿಂದ ಅದು ಪಿತ್ರಾರ್ಜಿತ ಆಸ್ತಿಯಾಗಿದೆ ಮತ್ತು ತಮ್ಮಿಗೂ ಜನ್ಮಸಿದ್ಧ ಹಕ್ಕು ಇದೆ ಎಂದು ಅವರು ವಾದಿಸಿದ್ದರು.

ಆದರೆ, ಆ ಆಸ್ತಿ ಮೂಲತಃ ತಾತನ ಸ್ವಯಾರ್ಜಿತ ಆಸ್ತಿಯಾಗಿದ್ದು, ನಂತರ ತಂದೆಗೆ ಅವರ ಪ್ರತ್ಯೇಕ ಆಸ್ತಿಯಾಗಿ ಬಂದಿರುವುದರಿಂದ ಅದು ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

ಈ ಹಿನ್ನೆಲೆಯಲ್ಲಿ ಮಹಿಳೆ ಸಲ್ಲಿಸಿದ್ದ ಪಾಲು ಕೋರಿ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಆಸ್ತಿಯ ಸ್ವರೂಪವನ್ನು ನಿರ್ಧರಿಸುವಲ್ಲಿ ಅದರ ಮೂಲ ಮತ್ತು ಕಾನೂನು ಹಿನ್ನೆಲೆಯೇ ಮುಖ್ಯ ಎಂಬುದನ್ನು ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ವಿಶ್ವಕಪ್ ಫೈನಲ್ ಸೋಲಿನ ಬೆನ್ನಲ್ಲೇ ಅರ್ಜೆಂಟೀನಾಗೆ ಮತ್ತೊಂದು ಶಾಕ್: ದಿಗ್ಗಜ ಡಿಫೆಂಡರ್ ನಿಕೋಲಸ್ ಒಟಮೆಂಡಿ ನಿವೃತ್ತಿ ಘೋಷಣೆ

0

ಬ್ಯೂನಸ್ ಐರಿಸ್: 2026ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಸೋಲು ಕಂಡ ನೋವಿನಲ್ಲಿರುವ ಅರ್ಜೆಂಟೀನಾ ಫುಟ್ಬಾಲ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ತಂಡದ ಅನುಭವಿ ಡಿಫೆಂಡರ್ ಹಾಗೂ ದಿಗ್ಗಜ ಆಟಗಾರ ನಿಕೋಲಸ್ ಒಟಮೆಂಡಿ ಅಂತಾರಾಷ್ಟ್ರೀಯ ಫುಟ್ಬಾಲ್‌ಗೆ ನಿವೃತ್ತಿ ಘೋಷಿಸಿದ್ದಾರೆ.

38 ವರ್ಷದ ಒಟಮೆಂಡಿ, ಸ್ಪೇನ್ ವಿರುದ್ಧ ನಡೆದ ಫಿಫಾ ವಿಶ್ವಕಪ್ ಫೈನಲ್‌ವೇ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು ಎಂದು ಸಾಮಾಜಿಕ ಜಾಲತಾಣದ ಮೂಲಕ ಅಧಿಕೃತವಾಗಿ ತಿಳಿಸಿದ್ದಾರೆ. ಇದರೊಂದಿಗೆ ಸುಮಾರು 17 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ಅವರು ತೆರೆ ಎಳೆದಿದ್ದಾರೆ.

ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿರುವ ಒಟಮೆಂಡಿ, “ನನ್ನ ವೃತ್ತಿಜೀವನದ ಅತ್ಯಂತ ಕಠಿಣ ಪದಗಳನ್ನು ಬರೆಯುವ ಸಮಯ ಬಂದಿದೆ. ವಿಶ್ವಕಪ್ ಫೈನಲ್ ನನ್ನ ಕೊನೆಯ ಪಂದ್ಯವಾಗಿತ್ತು. ಫಲಿತಾಂಶ ನಮ್ಮ ನಿರೀಕ್ಷೆಯಂತೆ ಬರದಿದ್ದರೂ, ಕೊನೆಯ ಕ್ಷಣದವರೆಗೂ ಹೋರಾಡಿದ ಈ ತಂಡದ ಭಾಗವಾಗಿರುವ ಹೆಮ್ಮೆ ನನಗಿದೆ. ವಿಶ್ವ ಚಾಂಪಿಯನ್ ಆಗುವ ಕನಸನ್ನು ನನಸಾಗಿಸಲು ಅವಕಾಶ ನೀಡಿದ ಅರ್ಜೆಂಟೀನಾಗೆ ಹೃತ್ಪೂರ್ವಕ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಒಟಮೆಂಡಿ ಅರ್ಜೆಂಟೀನಾ ಪರ ಸುಮಾರು 17 ವರ್ಷಗಳ ಕಾಲ ಪ್ರಮುಖ ಡಿಫೆಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ. 2022ರ ಫಿಫಾ ವಿಶ್ವಕಪ್ ಹಾಗೂ ಎರಡು ಕೋಪಾ ಅಮೆರಿಕಾ ಪ್ರಶಸ್ತಿಗಳನ್ನು ಗೆದ್ದ ತಂಡದ ಪ್ರಮುಖ ಸದಸ್ಯರಾಗಿದ್ದರು.

ಅವರು ಅರ್ಜೆಂಟೀನಾ ಪರ ಒಟ್ಟು 139 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 2026ರ ಆವೃತ್ತಿ ಸೇರಿದಂತೆ ನಾಲ್ಕು ಫಿಫಾ ವಿಶ್ವಕಪ್‌ಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ. ಸ್ಥಿರ ಪ್ರದರ್ಶನ, ನಾಯಕತ್ವದ ಗುಣ ಹಾಗೂ ಮಹತ್ವದ ಪಂದ್ಯಗಳಲ್ಲಿ ನೀಡಿದ ಕೊಡುಗೆಯಿಂದ ಅವರು ಅರ್ಜೆಂಟೀನಾದ ಶ್ರೇಷ್ಠ ಡಿಫೆಂಡರ್‌ಗಳಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದಾರೆ.

ಅಮೆರಿಕದಲ್ಲಿ ನಡೆದ 2026ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಅರ್ಜೆಂಟೀನಾ, ಸ್ಪೇನ್ ವಿರುದ್ಧ 1-0 ಗೋಲುಗಳ ಅಂತರದಲ್ಲಿ ಸೋಲು ಅನುಭವಿಸಿತು. ಹೆಚ್ಚುವರಿ ಸಮಯದವರೆಗೆ ಸಾಗಿದ ರೋಚಕ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ವಿಫಲವಾಯಿತು. ಇದರೊಂದಿಗೆ ಒಟಮೆಂಡಿ ಮತ್ತೊಮ್ಮೆ ವಿಶ್ವಕಪ್ ಟ್ರೋಫಿ ಎತ್ತುವ ಕನಸೂ ಭಗ್ನಗೊಂಡಿತು.

ತಮ್ಮ ಕ್ಲಬ್ ವೃತ್ತಿಜೀವನದಲ್ಲಿ ಒಟಮೆಂಡಿ ಪೋರ್ಟೊ, ವೇಲೆನ್ಸಿಯಾ, ಮ್ಯಾಂಚೆಸ್ಟರ್ ಸಿಟಿ ಹಾಗೂ ಬೆನ್ಫಿಕಾ ಸೇರಿದಂತೆ ಯುರೋಪಿನ ಪ್ರಮುಖ ಕ್ಲಬ್‌ಗಳನ್ನು ಪ್ರತಿನಿಧಿಸಿದ್ದಾರೆ. ಇತ್ತೀಚೆಗೆ ಯುರೋಪಿಯನ್ ಫುಟ್ಬಾಲ್‌ಗೆ ವಿದಾಯ ಹೇಳಿ ತಮ್ಮ ತವರಿನ ಕ್ಲಬ್ ರಿವರ್ ಪ್ಲೇಟ್‌ಗೆ ಸೇರ್ಪಡೆಯಾಗಿದ್ದರು.

ಲಿಯೋನೆಲ್ ಮೆಸ್ಸಿ ನಾಯಕತ್ವದ ಅರ್ಜೆಂಟೀನಾ ತಂಡ 2026ರ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಗೆದ್ದು ನಾಕೌಟ್ ಹಂತ ಪ್ರವೇಶಿಸಿದ್ದ ತಂಡ, ಕ್ವಾರ್ಟರ್‌ಫೈನಲ್‌ನಲ್ಲಿ ಈಜಿಪ್ಟ್ ವಿರುದ್ಧ ಹಿನ್ನಡೆಯಿಂದ ಚೇತರಿಸಿಕೊಂಡು ಗೆಲುವು ದಾಖಲಿಸಿತ್ತು.

ಬಳಿಕ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತ್ತು. ಆದರೆ ಪ್ರಶಸ್ತಿ ಸುತ್ತಿನಲ್ಲಿ ಸ್ಪೇನ್ ವಿರುದ್ಧ ಸೋಲುವ ಮೂಲಕ ವಿಶ್ವಕಪ್ ಅಭಿಯಾನ ಅಂತ್ಯಗೊಂಡಿತು.

ನಿಕೋಲಸ್ ಒಟಮೆಂಡಿ ಅವರ ನಿವೃತ್ತಿಯೊಂದಿಗೆ ಅರ್ಜೆಂಟೀನಾ ಫುಟ್ಬಾಲ್ ತನ್ನ ಅತ್ಯಂತ ಅನುಭವಿ ಮತ್ತು ಯಶಸ್ವಿ ಡಿಫೆಂಡರ್‌ಗಳಲ್ಲಿ ಒಬ್ಬರನ್ನು ಕಳೆದುಕೊಂಡಿದೆ.

ಪ್ರಧಾನಿ ಮೋದಿ ತಡವಾಗಿ ಎಚ್ಚೆತ್ತರೂ ಶಿಕ್ಷಣ ಸುಧಾರಣೆಗೆ ಮುಂದಾಗಿರುವುದು ಆಶಾದಾಯಕ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನೀಟ್ ಪರೀಕ್ಷೆ ಅಕ್ರಮ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಕುರಿತು ಚರ್ಚೆ ಆರಂಭಿಸಿರುವುದು ಆಶಾದಾಯಕ ಬೆಳವಣಿಗೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ಟೆಕ್ ಸಮ್ಮಿಟ್‌ನ ಸಿಇಒಗಳ ಉಪಹಾರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ತಿಂಗಳಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆಯ ಬಗ್ಗೆ ಚರ್ಚೆಗೆ ಮುಂದಾಗಿರುವುದು ಸ್ವಾಗತಾರ್ಹ. ಈಗ ಇಡೀ ದೇಶವೇ ಎಚ್ಚೆತ್ತುಕೊಂಡಿದೆ. ವಿದ್ಯಾರ್ಥಿಗಳು ಮತ್ತು ಯುವಜನರ ಭವಿಷ್ಯವನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ಹೇಳಿದರು.

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಶಿಕ್ಷಣ ಕ್ಷೇತ್ರದ ಕುರಿತು ಚರ್ಚೆ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಾವೆಲ್ಲರೂ ದೇಶದ ವಿದ್ಯಾರ್ಥಿ ಮತ್ತು ಯುವಜನರ ಭವಿಷ್ಯಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಶಿಕ್ಷಣ ವ್ಯವಸ್ಥೆಯಲ್ಲಿ ವಿಶ್ವಾಸ ಮೂಡಿಸುವ ಕ್ರಮಗಳು ಅತ್ಯಗತ್ಯ” ಎಂದು ಅಭಿಪ್ರಾಯಪಟ್ಟರು.

ಎಲ್ಲರೊಂದಿಗೆ ಮಾತುಕತೆಗೆ ಸಿದ್ಧ

ತಮಿಳುನಾಡು ಮುಖ್ಯಮಂತ್ರಿ ಬರೆದಿರುವ ಪತ್ರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, “ಈ ವಿಚಾರವನ್ನು ಈಗ ಬಹಿರಂಗಪಡಿಸಲು ಬಯಸುವುದಿಲ್ಲ. ಈ ವಾರ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ಪ್ರಮುಖ ಕೆಲಸಗಳಲ್ಲಿ ನಿರತರಾಗಿದ್ದೇವೆ. ಕೆಲವು ವಿಷಯಗಳಲ್ಲಿ ಎಲ್ಲರೊಂದಿಗೆ ಮಾತನಾಡಲು, ಅಭಿಪ್ರಾಯ ಹಂಚಿಕೊಳ್ಳಲು ಮತ್ತು ಒಟ್ಟಾಗಿ ಕೆಲಸ ಮಾಡಲು ನಾವು ಸಿದ್ಧರಾಗಿದ್ದೇವೆ” ಎಂದು ತಿಳಿಸಿದರು.

NEET ಪ್ರತಿಭಟನೆ ಹಿಂಸಾಚಾರ ಪ್ರಕರಣಕ್ಕೆ ಬಿಗಿ ಕ್ರಮ: 117 ಶಂಕಿತರ ಫೋಟೋ ಬಿಡುಗಡೆ, ಸಾರ್ವಜನಿಕರ ನೆರವು ಕೋರಿದ ಪಾಟ್ನಾ ಪೊಲೀಸರು

0

ಪಾಟ್ನಾ: NEET ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ನಡೆದ ವಿದ್ಯಾರ್ಥಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣದಲ್ಲಿ ಪಾಟ್ನಾ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕಲ್ಲು ತೂರಾಟದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 117 ಶಂಕಿತರ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ.

ಜುಲೈ 22ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ NEET ಪರೀಕ್ಷಾ ಅಕ್ರಮ ಖಂಡಿಸಿ ವಿದ್ಯಾರ್ಥಿಗಳು ನಡೆಸಿದ ಬೃಹತ್ ಪ್ರತಿಭಟನೆ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಇದೀಗ ಹಿಂಸಾಚಾರಕ್ಕೆ ಕಾರಣರಾದವರ ಪತ್ತೆಗೆ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ.

ಬಿಹಾರ ಪೊಲೀಸರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ 117 ಶಂಕಿತರ ಚಿತ್ರಗಳನ್ನು ಹಂಚಿಕೊಂಡಿದ್ದು, ಇವರ ಗುರುತು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

NEET ಪರೀಕ್ಷಾ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಗಾಂಧಿ ಮೈದಾನದಿಂದ ಬಿಹಾರ ವಿಧಾನಸಭೆಯತ್ತ ಬೃಹತ್ ಮೆರವಣಿಗೆ ನಡೆಸಿದ್ದರು.

ಈ ವೇಳೆ ಪ್ರತಿಭಟನಾಕಾರರ ಒಂದು ಗುಂಪು ಹಿಂಸಾಚಾರಕ್ಕೆ ಇಳಿದಿದ್ದು, ಭದ್ರತಾ ಸಿಬ್ಬಂದಿ ಹಾಗೂ ಮಾಧ್ಯಮ ಪ್ರತಿನಿಧಿಗಳ ಮೇಲೆ ಕಲ್ಲು ತೂರಾಟ ನಡೆಸಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮೊದಲು ವಾಟರ್ ಕ್ಯಾನನ್ ಬಳಸಿ ಗುಂಪನ್ನು ಚದುರಿಸಲು ಪ್ರಯತ್ನಿಸಿದರು. ಆದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಾಠಿಚಾರ್ಜ್ ನಡೆಸಲಾಯಿತು.

ಪ್ರತಿಭಟನಾಕಾರರ ಗುಂಪೊಂದು ಸ್ಥಳೀಯ ಬಿಜೆಪಿ ಕಚೇರಿ ಬಳಿ ತೆರಳಿ ಕಲ್ಲು ತೂರಾಟ ನಡೆಸಿದ ಘಟನೆ ಕೂಡ ವರದಿಯಾಗಿದೆ. ಬಳಿಕ ಪೊಲೀಸರು ಮತ್ತು ಸ್ಥಳೀಯರ ನೆರವಿನಿಂದ ಪರಿಸ್ಥಿತಿಯನ್ನು ನಿಯಂತ್ರಿಸಲಾಯಿತು.

ಸಿಸಿಟಿವಿ ದೃಶ್ಯಗಳು ಹಾಗೂ ವಿವಿಧ ವಿಡಿಯೋಗಳನ್ನು ಪರಿಶೀಲಿಸಿದ ಬಳಿಕ 117 ಶಂಕಿತರನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಶಂಕಿತರ ಗುರುತು ಪತ್ತೆಯಾದ ಬಳಿಕ ಕಾನೂನುಬಾಹಿರ ಕೃತ್ಯ, ಸಾರ್ವಜನಿಕ ಆಸ್ತಿ ಹಾನಿ ಹಾಗೂ ಗಲಭೆ ಆರೋಪಗಳಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಬಿಹಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಈ ಪ್ರಕರಣ ಇದೀಗ ಬಿಹಾರದ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ಮುಂದುವರಿದಿವೆ.

ಕಾಮಿಕ್ ಕಾನ್ ವೇದಿಕೆಯಲ್ಲಿ ರಾಕಿ ಭಾಯ್ ಅಬ್ಬರ: ಯಶ್ ನೋಡಲು ಮುಗಿಬಿದ್ದ ಅಭಿಮಾನಿಗಳು

ಕ್ಯಾಲಿಫೋರ್ನಿಯಾ: ಕನ್ನಡದ ರಾಕಿಂಗ್ ಸ್ಟಾರ್ ಯಶ್ ಅವರ ಜಾಗತಿಕ ಜನಪ್ರಿಯತೆ ಮತ್ತೊಮ್ಮೆ ಸಾಬೀತಾಗಿದೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆಯುತ್ತಿರುವ ವಿಶ್ವದ ಪ್ರತಿಷ್ಠಿತ ಸ್ಯಾನ್ ಡಿಯಾಗೋ ಕಾಮಿಕ್ ಕಾನ್ ಕಾರ್ಯಕ್ರಮದಲ್ಲಿ ಯಶ್ ಭಾಗವಹಿಸಿದ್ದು, ಅಭಿಮಾನಿಗಳಿಂದ ಭರ್ಜರಿ ಸ್ವಾಗತ ಪಡೆದುಕೊಂಡಿದ್ದಾರೆ.

‘ರಾಮಾಯಣ’ ಚಿತ್ರದ ಪ್ರಚಾರದ ಭಾಗವಾಗಿ ಈ ಅಂತರರಾಷ್ಟ್ರೀಯ ವೇದಿಕೆಗೆ ಆಗಮಿಸಿದ ಯಶ್ ಅವರನ್ನು ನೋಡಲು ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಯಶ್ ವೇದಿಕೆಗೆ ಬರುತ್ತಿದ್ದಂತೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.

ಅಭಿಮಾನಿಗಳು ತಮ್ಮ ಮೊಬೈಲ್‌ಗಳಲ್ಲಿ ಯಶ್ ಅವರ ಫೋಟೋ ಮತ್ತು ವಿಡಿಯೋಗಳನ್ನು ಸೆರೆಹಿಡಿಯಲು ಮುಗಿಬಿದ್ದಿದ್ದು, ಅವರೊಂದಿಗೆ ಸೆಲ್ಫಿ ಪಡೆಯಲು ದೊಡ್ಡ ಸಾಲು ಕಂಡುಬಂತು. ‘ರಾಮಾಯಣ’ ಪ್ರಚಾರದ ನಡುವೆ ಯಶ್ ಅವರ ಮುಂಬರುವ ‘ಟಾಕ್ಸಿಕ್’ ಸಿನಿಮಾ ಕೂಡ ಅಭಿಮಾನಿಗಳ ಗಮನ ಸೆಳೆದಿದೆ.

ಚಿತ್ರದ ಜನಪ್ರಿಯ ಒನ್-ಲೈನರ್ ‘ಡ್ಯಾಡಿಸ್ ಹೋಂ’ ಕಾಮಿಕ್ ಕಾನ್ ವೇದಿಕೆಯ ಬಳಿಕ ಮತ್ತೆ ಟ್ರೆಂಡ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಭರ್ಜರಿ ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

‘ಕೆಜಿಎಫ್’ ಮೂಲಕ ವಿಶ್ವಾದ್ಯಂತ ಗುರುತಿಸಿಕೊಂಡಿರುವ ಯಶ್, ಇದೀಗ ‘ರಾಮಾಯಣ’ ಮತ್ತು ‘ಟಾಕ್ಸಿಕ್’ ಮೂಲಕ ಮತ್ತೊಂದು ಹಂತದ ಜಾಗತಿಕ ಪ್ರೇಕ್ಷಕರನ್ನು ತಲುಪಲು ಸಜ್ಜಾಗಿದ್ದಾರೆ.

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ನಟಿಸುವುದರ ಜೊತೆಗೆ ನಿರ್ಮಾಪಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರ ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ. ಸ್ಯಾನ್ ಡಿಯಾಗೋ ಕಾಮಿಕ್ ಕಾನ್ ವೇದಿಕೆಯಲ್ಲಿ ಯಶ್ ಅವರ ಹಾಜರಾತಿ ಕನ್ನಡ ಚಿತ್ರರಂಗದ ಜಾಗತಿಕ ಬೆಳವಣಿಗೆಗೆ ಮತ್ತೊಂದು ದೊಡ್ಡ ಸಾಕ್ಷಿಯಾಗಿದೆ.

‘ನಮ್ಮ ಭಿನ್ನಾಭಿಪ್ರಾಯಕ್ಕಿಂತ ಸಿನಿಮಾ ಮುಖ್ಯ’: ಡಬ್ಬಿಂಗ್ ವಿವಾದದ ನಡುವೆಯೂ ‘ಕರಾವಳಿ’ಗೆ ಶುಭ ಹಾರೈಸಿದ ಪ್ರಜ್ವಲ್

ಬೆಂಗಳೂರು: ‘ಕರಾವಳಿ’ ಚಿತ್ರದ ಡಬ್ಬಿಂಗ್ ವಿವಾದದ ಬಗ್ಗೆ ನಟ ಪ್ರಜ್ವಲ್ ದೇವರಾಜ್ ತಮ್ಮ ನಿಲುವು ಬಹಿರಂಗಪಡಿಸಿದ್ದು, ವೈಯಕ್ತಿಕ ಭಿನ್ನಾಭಿಪ್ರಾಯಗಳಿಗಿಂತ ಸಿನಿಮಾ ಮತ್ತು ಚಿತ್ರತಂಡದ ಶ್ರಮ ಮುಖ್ಯ ಎಂದು ಹೇಳಿದ್ದಾರೆ.

ಜುಲೈ 24ರಂದು ತೆರೆಗೆ ಬಂದಿರುವ ‘ಕರಾವಳಿ’ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್, ರಾಜ್ ಬಿ ಶೆಟ್ಟಿ, ಮಿತ್ರ ಹಾಗೂ ರಮೇಶ್ ಅರವಿಂದ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಗುರುದತ್ ಗಾಣಿಗ ನಿರ್ದೇಶನದ ಈ ಸಿನಿಮಾ ಬಿಡುಗಡೆಗೂ ಮುನ್ನ ಹಲವು ಕಾರಣಗಳಿಂದ ಸುದ್ದಿಯಲ್ಲಿತ್ತು.

ವಿಶೇಷವಾಗಿ ಪ್ರಜ್ವಲ್ ದೇವರಾಜ್ ಅವರ ಪಾತ್ರಕ್ಕೆ ಅವರೇ ಧ್ವನಿ ನೀಡದೇ, ಬೇರೊಬ್ಬರಿಂದ ಡಬ್ಬಿಂಗ್ ಮಾಡಿಸಿರುವ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಪ್ರಜ್ವಲ್, ನಟನ ಧ್ವನಿ ಕೂಡ ಅವರ ಕಲಾತ್ಮಕ ಹಕ್ಕಿನ ಭಾಗವಾಗಿದೆ ಎಂದು ಹೇಳಿದ್ದಾರೆ.

“ನನ್ನ ಅನುಮತಿ ಇಲ್ಲದೆ ನನ್ನ ಪಾತ್ರಕ್ಕೆ ಬೇರೆ ಧ್ವನಿ ಬಳಸಿರುವುದು ಬೇಸರದ ಸಂಗತಿ. ಆದರೆ ಅದಕ್ಕಾಗಿ ಸಿನಿಮಾವನ್ನೇ ನಿಲ್ಲಿಸುವ ನಿರ್ಧಾರ ನಾನು ತೆಗೆದುಕೊಳ್ಳಲಿಲ್ಲ” ಎಂದು ಅವರು ತಿಳಿಸಿದ್ದಾರೆ.

ಸಿನಿಮಾ ಬಿಡುಗಡೆ ತಡೆಯಲು ನ್ಯಾಯಾಲಯದ ಮೊರೆ ಹೋಗುವ ಅವಕಾಶ ಇತ್ತು ಎಂದು ಹೇಳಿದ ಪ್ರಜ್ವಲ್, ಆ ಮಾರ್ಗವನ್ನು ಆಯ್ಕೆ ಮಾಡಲಿಲ್ಲ ಎಂದಿದ್ದಾರೆ.

“ಈ ಸಿನಿಮಾದ ಹಿಂದೆ ಹಲವು ಜನರ ಪರಿಶ್ರಮ ಇದೆ. ಕಲಾವಿದರು, ತಂತ್ರಜ್ಞರು ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ನನ್ನ ವೈಯಕ್ತಿಕ ಸಮಸ್ಯೆಗಾಗಿ ಎಲ್ಲರ ಶ್ರಮಕ್ಕೆ ಧಕ್ಕೆ ತರುವುದು ನನಗೆ ಇಷ್ಟವಿರಲಿಲ್ಲ” ಎಂದು ಹೇಳಿದ್ದಾರೆ.

‘ಕರಾವಳಿ’ ಬಗ್ಗೆ ತಮಗೆ ಆರಂಭದಿಂದಲೂ ದೊಡ್ಡ ಕನಸು ಮತ್ತು ನಿರೀಕ್ಷೆ ಇತ್ತು. ಕನ್ನಡ ಚಿತ್ರರಂಗಕ್ಕೆ ವಿಭಿನ್ನವಾದ ಸಿನಿಮಾ ನೀಡಬೇಕು ಎಂಬ ಉದ್ದೇಶದಿಂದ ಎಲ್ಲರೂ ಕೆಲಸ ಮಾಡಿದ್ದೇವೆ ಎಂದು ಪ್ರಜ್ವಲ್ ತಿಳಿಸಿದ್ದಾರೆ.

ಸಿನಿಮಾ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿರುವುದು ಸಂತಸ ತಂದಿದೆ. ಆದರೆ, ಸಂಪೂರ್ಣವಾಗಿ ಸಿನಿಮಾದ ಭಾಗವಾಗಲು ಸಾಧ್ಯವಾಗದಿರುವುದು ನೋವು ತಂದಿದೆ ಎಂದು ಅವರು ಹೇಳಿದ್ದಾರೆ.

“ಮನುಷ್ಯರ ನಡುವಿನ ಭಿನ್ನಾಭಿಪ್ರಾಯಗಳು ಕ್ಷಣಿಕ. ಆದರೆ ಒಂದು ಸಿನಿಮಾ ಮತ್ತು ಅದರ ಯಶಸ್ಸು ಎಲ್ಲರಿಗಿಂತ ದೊಡ್ಡದು” ಎಂದು ಪ್ರಜ್ವಲ್ ದೇವರಾಜ್ ತಮ್ಮ ಮಾತು ಮುಗಿಸಿದ್ದಾರೆ. ‘ಕರಾವಳಿ’ ಡಬ್ಬಿಂಗ್ ವಿವಾದವು ಬಿಡುಗಡೆಗೂ ಮುನ್ನ ಭಾರೀ ಚರ್ಚೆಗೆ ಕಾರಣವಾಗಿದ್ದರೂ, ಇದೀಗ ಚಿತ್ರತಂಡದ ಗಮನ ಸಿನಿಮಾ ಯಶಸ್ಸಿನತ್ತ ನೆಟ್ಟಿದೆ.

ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಕ್ರಮಗಳು ಸಮಾಧಾನ ತಂದಿವೆ; ಆರೋಪಿಗಳ ವಿರುದ್ಧ ಕಠಿಣ ಕ್ರಮ ಅಗತ್ಯ – ಸುನೀಲ್ ಕುಮಾರ್

ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಭರವಸೆ ಸಮಾಧಾನ ತಂದಿದೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ನೀಟ್ ಅಕ್ರಮದ ವಿರುದ್ಧ ವಿದ್ಯಾರ್ಥಿಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರು ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ನೀಟ್ ಹಗರಣದ ತನಿಖೆಗೆ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಂಡಿದ್ದು, ಮರು ಪರೀಕ್ಷೆಯನ್ನೂ ನಡೆಸಿ ಯಶಸ್ವಿಯಾಗಿ ಫಲಿತಾಂಶ ಪ್ರಕಟಿಸಲಾಗಿದೆ. ಇದೀಗ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಪ್ರಧಾನಿ ಘೋಷಿಸಿರುವುದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದೆ ಎಂದು ತಿಳಿಸಿದರು.

ಪ್ರಧಾನಿ ಮೋದಿ ಅವರ ಹೇಳಿಕೆ ವಿದ್ಯಾರ್ಥಿಗಳಿಗೆ ಸಮಾಧಾನ ತಂದಿದೆ. ವಿದ್ಯಾರ್ಥಿಗಳು ತಮ್ಮ ಹಕ್ಕಿಗಾಗಿ ಹೋರಾಟ ನಡೆಸುವುದು ಸರಿಯಾದ ಕ್ರಮ, ಆದರೆ ಅದರ ರಾಜಕೀಯ ಲಾಭ ಪಡೆಯಲು ವಿರೋಧ ಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಸುನೀಲ್ ಕುಮಾರ್ ಆರೋಪಿಸಿದರು.

ಈಗಾಗಲೇ ಕೇಂದ್ರ ಸರ್ಕಾರ ಪರೀಕ್ಷಾ ವ್ಯವಸ್ಥೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಯಾವುದೇ ಪರೀಕ್ಷೆಗಳಲ್ಲೂ ಪ್ರಶ್ನೆಪತ್ರಿಕೆ ಸೋರಿಕೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷಗಳು: ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ!

0

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಐದನೇ ದಿನವೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರವಾಗಿ ಲೋಕಸಭೆಯಲ್ಲಿ ಗದ್ದಲ ಮುಂದುವರಿದಿದ್ದು, ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಯವರೆಗೆ ಮುಂದೂಡಲಾಗಿದೆ.

ನೀಟ್ ಪರೀಕ್ಷಾ ಅಕ್ರಮ ಪ್ರಕರಣದ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳ ಸದಸ್ಯರು ಸದನ ಆರಂಭವಾಗುತ್ತಿದ್ದಂತೆಯೇ ಪ್ರತಿಭಟನೆ ನಡೆಸಿದರು.

ನೀಟ್ ಪ್ರಕರಣದ ಕುರಿತು ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದರೂ, ಚರ್ಚೆಗೂ ಮುನ್ನವೇ ಶಿಕ್ಷಣ ಸಚಿವರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದವು. ಈ ವೇಳೆ ಸದನದಲ್ಲಿ ಭಾರಿ ಗದ್ದಲ ಉಂಟಾಯಿತು.

ಮಧ್ಯಾಹ್ನ 12 ಗಂಟೆಗೆ ಲೋಕಸಭೆ ಪುನಾರಂಭಗೊಂಡ ಕೆಲವೇ ಕ್ಷಣಗಳಲ್ಲಿ ವಿರೋಧ ಪಕ್ಷದ ಸದಸ್ಯರು “Education Minister Resign”, “ಇಸ್ತೀಫಾ, ಇಸ್ತೀಫಾ” ಎಂದು ಘೋಷಣೆ ಕೂಗಿದರು. ಕೆಲ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸ್ಪೀಕರ್ ಕಲಾಪವನ್ನು ಮುಂದೂಡಿದರು.

ಇದಕ್ಕೂ ಮುನ್ನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾತನಾಡಿ, ನೀಟ್ ವಿಚಾರದಲ್ಲಿ ಚರ್ಚೆಗೆ ವಿರೋಧ ಪಕ್ಷಗಳು ಸಹಕರಿಸಬೇಕು ಎಂದು ಮನವಿ ಮಾಡಿದರು. ಚರ್ಚೆಯಿಂದ ದೂರ ಉಳಿಯಲು ಕಾರಣಗಳನ್ನು ಹುಡುಕುವುದು ದೇಶಕ್ಕೆ ತಪ್ಪು ಸಂದೇಶ ನೀಡುತ್ತದೆ ಎಂದು ಹೇಳಿದರು.

ಸದನದ ಅಧ್ಯಕ್ಷತೆ ವಹಿಸಿದ್ದ ಜಗದಂಬಿಕಾ ಪಾಲ್ ಅವರು, ಪ್ರತಿಭಟನೆ ಕೈಬಿಟ್ಟು ಕಲಾಪ ಸುಗಮವಾಗಿ ನಡೆಯಲು ಅವಕಾಶ ನೀಡುವಂತೆ ಸದಸ್ಯರಲ್ಲಿ ಮನವಿ ಮಾಡಿದರು. ಸರ್ಕಾರ ಚರ್ಚೆಗೆ ಸಿದ್ಧವಿದೆ ಎಂದು ತಿಳಿಸಿದ ಅವರು, ತಮ್ಮ ಅಭಿಪ್ರಾಯಗಳನ್ನು ಸ್ಪೀಕರ್ ಓಂ ಬಿರ್ಲಾ ಅವರ ಗಮನಕ್ಕೆ ತರುವಂತೆ ಸಲಹೆ ನೀಡಿದರು.

ಆದರೆ, ವಿರೋಧ ಪಕ್ಷದ ಸದಸ್ಯರು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಘೋಷಣೆ ಮುಂದುವರಿಸಿದ ಹಿನ್ನೆಲೆಯಲ್ಲಿ ಲೋಕಸಭೆ ಕಲಾಪವನ್ನು ಸೋಮವಾರದವರೆಗೆ ಮುಂದೂಡಲಾಗಿದೆ.