ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ಪತ್ತೆಗೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಸೂಕ್ತ ದಾಖಲೆಗಳಿಲ್ಲದೆ ವಾಸಿಸುತ್ತಿದ್ದ 15 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.
ಎಲೆಕ್ಟ್ರಾನಿಕ್ಸ್ ಸಿಟಿ ವಿಭಾಗದ ವ್ಯಾಪ್ತಿಯಲ್ಲಿ ಶನಿವಾರ ಮುಂಜಾನೆ ಏಕಕಾಲಕ್ಕೆ ಬೃಹತ್ ಶೋಧ ಕಾರ್ಯಾಚರಣೆ ನಡೆಸಲಾಗಿದೆ.
ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ಎಲೆಕ್ಟ್ರಾನಿಕ್ಸ್ ಸಿಟಿ ವಿಭಾಗದ 29 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿತ್ತು. ಈ ಹಿನ್ನೆಲೆಯಲ್ಲಿ 23 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಒಟ್ಟು 295 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ನಿರ್ಮಾಣ ಹಂತದ ಕಟ್ಟಡಗಳು, ತಾತ್ಕಾಲಿಕ ಶೆಡ್ಗಳು ಹಾಗೂ ಶಂಕಿತ ಅಡಗುದಾಣಗಳ ಮೇಲೆ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಕಾರ್ಯಾಚರಣೆ ವೇಳೆ ಸೂಕ್ತ ದಾಖಲೆಗಳಿಲ್ಲದ ಹಾಗೂ ಶಂಕಿತ ವ್ಯಕ್ತಿಗಳು ಸೇರಿದಂತೆ ಒಟ್ಟು 1,909 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಯಿತು. ಈ ಪೈಕಿ ಅಕ್ರಮವಾಗಿ ನೆಲೆಸಿದ್ದ 15 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ.
ಬೇಗೂರಿನಲ್ಲಿ 8, ಪರಪ್ಪನ ಅಗ್ರಹಾರದಲ್ಲಿ 7 ಬಂಧನ:
ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕು ಪ್ರಮುಖ ಸ್ಥಳಗಳಲ್ಲಿ ನಾಲ್ಕು ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸಿದ್ದು, 339 ಮಂದಿಯನ್ನು ಪರಿಶೀಲಿಸಲಾಗಿದೆ. ಈ ವೇಳೆ ಎಂಟು ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ.
ಇದೇ ವೇಳೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಪೊಲೀಸ್ ತಂಡಗಳು ದಾಳಿ ನಡೆಸಿ 355 ಮಂದಿಯನ್ನು ವಿಚಾರಣೆಗೊಳಪಡಿಸಿವೆ. ಈ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಏಳು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ.
21 ಸ್ಥಳಗಳಲ್ಲಿ ಶೋಧ:
ಎಲೆಕ್ಟ್ರಾನಿಕ್ಸ್ ಸಿಟಿ, ಬಂಡೇಪಾಳ್ಯ, ಹುಳಿಮಾವು ಹಾಗೂ ಹೆಬ್ಬಗೋಡಿ ಪೊಲೀಸ್ ಠಾಣೆಗಳ ವ್ಯಾಪ್ತಿಯ 21 ಸ್ಥಳಗಳಲ್ಲೂ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಆದರೆ ಈ ಪ್ರದೇಶಗಳಲ್ಲಿ ಯಾವುದೇ ಅಕ್ರಮ ವಿದೇಶಿ ಪ್ರಜೆಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ವಿರುದ್ಧ ನಾಗರಿಕ ಹಕ್ಕು ಸಂಘಟನೆಗಳ ದೂರು:
ಇನ್ನು ಪೊಲೀಸ್ ಕಾರ್ಯಾಚರಣೆಯ ವೇಳೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನೂರಾರು ವಲಸೆ ಕಾರ್ಮಿಕರನ್ನು ಕಾನೂನುಬಾಹಿರವಾಗಿ ವಶಕ್ಕೆ ಪಡೆದು ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ ಎಂದು ಆರೋಪಿಸಿ ಕೆಲವು ನಾಗರಿಕ ಹಕ್ಕು ಸಂಘಟನೆಗಳು ದೂರು ನೀಡಿವೆ. ರಾಜ್ಯ ಗೃಹ ಸಚಿವರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಈ ಕುರಿತು ದೂರು ಸಲ್ಲಿಸಲಾಗಿದೆ.
ಈ ಆರೋಪಗಳ ನಡುವೆ ಅಕ್ರಮ ವಿದೇಶಿ ಪ್ರಜೆಗಳ ಪತ್ತೆ ಕಾರ್ಯಾಚರಣೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

