ಬೆಳಗಾವಿ: ಕನ್ನಡ ಕಡ್ಡಾಯ ಆದೇಶವನ್ನು ವಿರೋಧಿಸುವ ನೆಪದಲ್ಲಿ ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಮತ್ತೆ ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲೊಡ್ಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾಯಿಸಿದ ಎಂಇಎಸ್ ಬೆಂಬಲಿಗರು, ರಾಜ್ಯ ಸರ್ಕಾರದ ಆದೇಶದ ಪ್ರತಿಯನ್ನು ಹರಿದು ಹಾಕಿ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಬಹಿರಂಗ ಉದ್ಧಟತನ ಪ್ರದರ್ಶಿಸಿದರು.
ಪ್ರತಿಭಟನೆಯ ವೇಳೆ ಮರಾಠಿ ಭಾಷೆಯಲ್ಲಿ ಆಡಳಿತಾತ್ಮಕ ಸೇವೆಗಳನ್ನು ನೀಡುವಂತೆ ಒತ್ತಾಯಿಸಿದ ಕಾರ್ಯಕರ್ತರು, ಕರ್ನಾಟಕದ ಗಡಿ ಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂಬ ಹಳೆಯ ವಿವಾದಾತ್ಮಕ ಬೇಡಿಕೆಯನ್ನು ಪುನರಾವರ್ತಿಸಿದರು. ಪೊಲೀಸರ ಸಮ್ಮುಖದಲ್ಲೇ ನಡೆದ ಈ ಘಟನೆ ಬೆಳಗಾವಿಯಲ್ಲಿ ಮತ್ತೊಮ್ಮೆ ಭಾಷಾ ವಿವಾದಕ್ಕೆ ಇಂಧನ ನೀಡಿದೆ.
ಇದಕ್ಕೆ ಪ್ರತಿಯಾಗಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು. ನಗರದ ಎಸ್ಪಿ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ತಡೆದರು.
ಎಂಇಎಸ್ ಕಾರ್ಯಕರ್ತರು ಸರ್ಕಾರದ ಆದೇಶವನ್ನು ಹರಿದು ಹಾಕಿರುವುದು ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಕರವೇ ಆರೋಪಿಸಿದ್ದು, ಸಂಬಂಧಪಟ್ಟವರ ವಿರುದ್ಧ ದೇಶದ್ರೋಹ ಸೇರಿದಂತೆ ಕಠಿಣ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿದೆ. ಜೊತೆಗೆ ಎಂಇಎಸ್ ಹಾಗೂ ಶಿವಸೇನೆ ಸಂಘಟನೆಗಳನ್ನು ನಿಷೇಧಿಸುವಂತೆ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

