ಹುಬ್ಬಳ್ಳಿ: ಮಳೆ ಕೊರತೆಯಿಂದ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಲು ತೊಂದರೆ ಎದುರಿಸುತ್ತಿದ್ದ ಉತ್ತರ ಕರ್ನಾಟಕದ ರೈತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ.
ಧಾರವಾಡ, ಗದಗ, ಹಾವೇರಿ ಹಾಗೂ ಬಾಗಲಕೋಟೆ ಜಿಲ್ಲೆಗಳ ರೈತರಿಗೆ ಬೆಳೆ ವಿಮೆ ನೋಂದಣಿ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಬೆಳೆ ವಿಮೆ ನೋಂದಣಿಗೆ ಜುಲೈ 15 ಕೊನೆಯ ದಿನವಾಗಿತ್ತು. ಆದರೆ ಮಳೆ ಅಭಾವದ ಹಿನ್ನೆಲೆಯಲ್ಲಿ ರೈತರು ವಿವಿಧ ಬೆಳೆಗಳನ್ನು ಬಿತ್ತನೆ ಮಾಡಿದ್ದು, ಬೆಳೆ ವಿಮೆ ಪಾವತಿಸುವಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿತ್ತು.
ಈ ಸಮಸ್ಯೆಯನ್ನು ಗಮನಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಅವರೊಂದಿಗೆ ಚರ್ಚಿಸಿ, ನೋಂದಣಿ ಅವಧಿ ವಿಸ್ತರಿಸುವಂತೆ ಮನವಿ ಮಾಡಿದ್ದರು.
ಧಾರವಾಡ ಲೋಕಸಭಾ ಕ್ಷೇತ್ರದ ರೈತರು ಹಾಗೂ ಶಾಸಕರಾದ ಸಿ.ಸಿ. ಪಾಟೀಲ್, ಎಂ.ಆರ್. ಪಾಟೀಲ್ ಸೇರಿದಂತೆ ಹಲವರು ಈ ಸಮಸ್ಯೆಯನ್ನು ಜೋಶಿ ಅವರ ಗಮನಕ್ಕೆ ತಂದಿದ್ದರು. ಬಳಿಕ ರಾಜ್ಯ ಕೃಷಿ ಇಲಾಖೆ ಜುಲೈ 15ರಂದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.
ಪ್ರಸ್ತಾವನೆ ಸಲ್ಲಿಸಿದ ಕೇವಲ 24 ಗಂಟೆಗಳಲ್ಲೇ ಕೇಂದ್ರ ಸರ್ಕಾರ ಸ್ಪಂದಿಸಿ, ರೈತರ ಹಿತದೃಷ್ಟಿಯಿಂದ ಬೆಳೆ ವಿಮೆ ನೋಂದಣಿ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಮಳೆ ಕೊರತೆ ಹಾಗೂ ತಾಂತ್ರಿಕ ಕಾರಣಗಳಿಂದ ಬೆಳೆ ವಿಮೆ ಮಾಡಿಸಿಕೊಳ್ಳಲಾಗದ ಅರ್ಹ ರೈತರು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ.

