Home Blog

ಬೌರಿಂಗ್ ಆಸ್ಪತ್ರೆ ದುರಂತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ! ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಸ್ಥಿತಿಗತಿ ಪರಿಶೀಲನೆಗೆ ಆದೇಶ

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ನಡೆದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತ ದುರಂತದಲ್ಲಿ ಏಳು ಮಂದಿ ಸಾವನ್ನಪ್ಪಿದ ಘಟನೆ ಬಳಿಕ ರಾಜ್ಯ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡ ಸುರಕ್ಷತೆಯನ್ನು ಸಂಪೂರ್ಣವಾಗಿ ಪರಿಶೀಲಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳು ಹಾಗೂ ಕಾಂಪೌಂಡ್‌ಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಘಟನೆ ಬಳಿಕ ನಗರದಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಶಿಥಿಲಾವಸ್ಥೆಯಲ್ಲಿದ್ದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಜನರು ಸಾವನ್ನಪ್ಪಿದ್ದರು. ಈ ದುರ್ಘಟನೆಯ ನಂತರ ಸರ್ಕಾರ ತಕ್ಷಣ ಕ್ರಮ ಕೈಗೊಂಡಿದೆ.

ಸಚಿವರ ಸೂಚನೆಯಂತೆ ಡಿಹೆಚ್‌ಒ, ಟಿಹೆಚ್‌ಒ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಯಾವುದೇ ಕಟ್ಟಡ ಅಥವಾ ಕಾಂಪೌಂಡ್ ಅಪಾಯಕಾರಿ ಸ್ಥಿತಿಯಲ್ಲಿ ಕಂಡುಬಂದರೆ ತಕ್ಷಣ ದುರಸ್ತಿ ಅಥವಾ ತೆರವು ಕಾರ್ಯ ಕೈಗೊಳ್ಳುವಂತೆ ಸೂಚಿಸಲಾಗಿದೆ. ಈ ಬಗ್ಗೆ 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ.

ಅಲ್ಲದೆ ಆಸ್ಪತ್ರೆ ಆವರಣದ ಫುಟ್‌ಪಾತ್‌ಗಳಲ್ಲಿ ನಡೆಯುವ ಬೀದಿ ವ್ಯಾಪಾರಕ್ಕೂ ಕಡಿವಾಣ ಹಾಕಲು ನಿರ್ದೇಶನ ನೀಡಲಾಗಿದೆ. ಮಳೆಗಾಲ ಆರಂಭಕ್ಕೂ ಮುನ್ನವೇ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಸರ್ಕಾರ ಸೂಚಿಸಿದೆ.

ರಾಜ್ಯದ ಅನೇಕ ಸರ್ಕಾರಿ ಆಸ್ಪತ್ರೆಗಳು 20 ರಿಂದ 30 ವರ್ಷಗಳಷ್ಟು ಹಳೆಯದಾಗಿರುವ ಹಿನ್ನೆಲೆಯಲ್ಲಿ ಸುರಕ್ಷತಾ ಪರಿಶೀಲನೆ ಅತ್ಯಂತ ಅಗತ್ಯವಾಗಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ. ಮುಂಬರುವ ಮಳೆಗಾಲದಲ್ಲಿ ಇಂತಹ ಅನಾಹುತಗಳು ಮರುಕಳಿಸದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.

IPL 2026: ಇಂದು ಲಕ್ನೋ–ಆರ್‌ಸಿಬಿ ಹೈವೋಲ್ಟೇಜ್ ಮ್ಯಾಚ್; ಉಭಯ ತಂಡಗಳ ಮುಖಾಮುಖಿ ದಾಖಲೆ ಹೇಗಿದೆ?

ಇಂಡಿಯನ್ ಪ್ರೀಮಿಯರ್ ಲೀಗ್ 2026ರ 50ನೇ ಪಂದ್ಯದಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.

ಈ ಪಂದ್ಯವು ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇದಕ್ಕೂ ಮುನ್ನ ಏಪ್ರಿಲ್ 15ರಂದು ನಡೆದ ಪಂದ್ಯದಲ್ಲಿ ಆರ್‌ಸಿಬಿ ರಜತ್ ಪಾಟಿದಾರ್ ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ಲಕ್ನೋ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿತ್ತು. ಇದೀಗ ಮತ್ತೊಮ್ಮೆ ಎರಡು ತಂಡಗಳು ಮುಖಾಮುಖಿಯಾಗುತ್ತಿರುವುದರಿಂದ ಪಂದ್ಯಕ್ಕೆ ಹೆಚ್ಚಿನ ಕುತೂಹಲ ಸೃಷ್ಟಿಯಾಗಿದೆ.

ಲಕ್ನೋ ಸೂಪರ್ ಜೈಂಟ್ಸ್ ಈ ಸೀಸನ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ಆಡಿದ 9 ಪಂದ್ಯಗಳಲ್ಲಿ 7ರಲ್ಲಿ ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಸತತ ಸೋಲುಗಳಿಂದ ತಂಡದ ಪ್ಲೇಆಫ್ ಕನಸು ಬಹುತೇಕ ಅಂತ್ಯಗೊಂಡಂತಾಗಿದೆ.

ಇದಕ್ಕೆ ವಿರುದ್ಧವಾಗಿ ಆರ್‌ಸಿಬಿ ಉತ್ತಮ ಫಾರ್ಮ್‌ನಲ್ಲಿ ಇದ್ದು, 9 ಪಂದ್ಯಗಳಲ್ಲಿ 6 ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಪ್ಲೇಆಫ್ ಸ್ಥಾನವನ್ನು ಇನ್ನಷ್ಟು ಭದ್ರಪಡಿಸಿಕೊಳ್ಳುವ ಗುರಿಯೊಂದಿಗೆ ಆರ್‌ಸಿಬಿ ಮೈದಾನಕ್ಕಿಳಿಯಲಿದೆ.

ಹೆಡ್-ಟು-ಹೆಡ್ ದಾಖಲೆಗಳಲ್ಲೂ ಆರ್‌ಸಿಬಿಗೆ ಮೇಲುಗೈ ಇದ್ದು, ಆಡಿದ 7 ಪಂದ್ಯಗಳಲ್ಲಿ 5ರಲ್ಲಿ ಜಯ ಸಾಧಿಸಿದೆ.

ಎರಡೂ ತಂಡಗಳಿಗೂ ಪ್ರಮುಖ ಆಟಗಾರರ ಬಲವಿದ್ದು, ಇಂದು ನಡೆಯಲಿರುವ ಪಂದ್ಯ ಹೈವೋಲ್ಟೇಜ್ ಕಾದಾಟವಾಗುವ ನಿರೀಕ್ಷೆ ಇದೆ.

ಬೆಂಗಳೂರಿನ ವಾಹನ ಮಾಲೀಕರೇ ಎಚ್ಚರ: ರಸ್ತೆ ಪಕ್ಕ ಪಾರ್ಕ್ ಮಾಡಿದ ಕಾರುಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಪಕ್ಕ ಪಾರ್ಕ್ ಮಾಡಿದ್ದ ಕಾರಿನಿಂದ ಬೆಲೆಬಾಳುವ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳ್ಳರು ಕದ್ದೊಯ್ದ ಘಟನೆ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಾಹಿತಿಯ ಪ್ರಕಾರ, ಕಾರಿನ ಮಾಲೀಕರು ರಾತ್ರಿ ವೇಳೆ ಟಿವಿ ಹಾಗೂ ಇತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಾರಿನಲ್ಲೇ ಇಟ್ಟು ರಸ್ತೆ ಪಕ್ಕದಲ್ಲಿ ಪಾರ್ಕ್ ಮಾಡಿ ಮನೆಗೆ ತೆರಳಿದ್ದರು. ಆದರೆ ಬೆಳಿಗ್ಗೆ ಸುಮಾರು 7 ಗಂಟೆಗೆ ಬಂದು ನೋಡಿದಾಗ ಕಾರಿನ ಗಾಜು ಒಡೆದಿದ್ದು, ಒಳಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಪತ್ತೆಯಾಗಿರುವುದು ಕಂಡುಬಂದಿದೆ.

ಘಟನೆಯ ಸಿಸಿಟಿವಿ ದೃಶ್ಯಗಳಲ್ಲಿ ಮತ್ತೊಂದು ಕಾರಿನಲ್ಲಿ ಬಂದ ಕಿಡಿಗೇಡಿಗಳು ಈ ಕೃತ್ಯವನ್ನು ಎಸಗಿರುವುದು ಸ್ಪಷ್ಟವಾಗಿ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಅಶೋಕನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿ ಆಧಾರದ ಮೇಲೆ ಆರೋಪಿಗಳಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಪತ್ನಿಗೆ ಚಾಕು ಇರಿಯಲು ಯತ್ನಿಸಿದ ಪತಿಗೆ ಸಾರ್ವಜನಿಕರಿಂದ ಧರ್ಮದೇಟು!

ಬೆಂಗಳೂರು: ಮಾದನಾಯಕನಹಳ್ಳಿ ಸಮೀಪದ ದಾಸನಪುರದಲ್ಲಿ ಪತ್ನಿಗೆ ಚಾಕು ಇರಿಯಲು ಯತ್ನಿಸಿದ ಪತಿಯನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗ ಥಳಿಸಿದ ಘಟನೆ ನಡೆದಿದೆ.

ಸಂಜಯ್ ಎಂಬಾತ ತನ್ನ ಎರಡನೇ ಪತ್ನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ಏಕಾಏಕಿ ಚಾಕುವಿನಿಂದ ಇರಿಯಲು ಮುಂದಾದನೆಂದು ಆರೋಪಿಸಲಾಗಿದೆ. ಈ ವೇಳೆ ಸ್ಥಳೀಯರು ತಕ್ಷಣ ಮಧ್ಯಪ್ರವೇಶಿಸಿ ಮಹಿಳೆಯನ್ನು ರಕ್ಷಿಸಿದ್ದಾರೆ.

ಘಟನೆಯ ನಂತರ ಆಕ್ರೋಶಗೊಂಡ ಸಾರ್ವಜನಿಕರು ಆರೋಪಿತನಿಗೆ ಧರ್ಮದೇಟು ನೀಡಿದ್ದು, ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮಾಹಿತಿಯ ಪ್ರಕಾರ, ಸಂಜಯ್ ಕುಡಿತದ ಚಟದಿಂದಾಗಿ ಮೊದಲೇ ಕುಟುಂಬದಿಂದ ದೂರವಾಗಿದ್ದನೆಂದು ತಿಳಿದುಬಂದಿದೆ. ಘಟನೆ ನಡೆದ ಸಂದರ್ಭದಲ್ಲಿ ಪತ್ನಿ ನಡೆದುಕೊಂಡು ಹೋಗುತ್ತಿದ್ದಾಗ ಈ ದಾಳಿ ನಡೆದಿದೆ.

ಆರೋಪಿತನನ್ನು ನಂತರ ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದು, ಮಾದನಾಯಕನಹಳ್ಳಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಕುರಿತು ಮುಂದಿನ ತನಿಖೆ ನಡೆಯುತ್ತಿದೆ.

ರಾಜ್ಯದಲ್ಲಿ ಮಳೆ ಎಚ್ಚರಿಕೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಆಲಿಕಲ್ಲು ಮಳೆಯ ಸಾಧ್ಯತೆ!

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆ ಹಾಗೂ ಕೆಲವೆಡೆ ಆಲಿಕಲ್ಲು ಮಳೆಯ ಸಾಧ್ಯತೆ ಇರುವುದರಿಂದ ಎಚ್ಚರಿಕೆ ನೀಡಲಾಗಿದೆ.

ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಕನ್ನಡದಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆ ವ್ಯಕ್ತವಾಗಿದೆ.

ಮೇ 7 ಮತ್ತು 8 ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಚಟುವಟಿಕೆ ಮುಂದುವರಿಯಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೈರುತ್ಯ ರೈಲ್ವೆ ಮುಂಬಡ್ತಿ ಪರೀಕ್ಷೆ ವಿವಾದ: ಕನ್ನಡ ಭಾಷೆ ನಿರಾಕರಣೆ ವಿರುದ್ಧ ಕರವೇ ಆಕ್ರೋಶ

ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆ ನಡೆಸುತ್ತಿರುವ ವಿವಿಧ ಹುದ್ದೆಗಳ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ನಿರ್ಧಾರಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ರೈಲ್ವೆ ಮಂಡಳಿ ಈ ಬಾರಿ ಪರೀಕ್ಷೆಯನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಸಲು ಮುಂದಾಗಿದ್ದು, ಕನ್ನಡ ಭಾಷೆಗೆ ಅವಕಾಶ ನಿರಾಕರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಪರೀಕ್ಷೆಗಳು ಆಫೀಸ್ ಸೂಪರಿಂಟೆಂಡೆಂಟ್ (39 ಹುದ್ದೆ), ಸೀನಿಯರ್ ಕ್ಲರ್ಕ್ (25 ಹುದ್ದೆ) ಮತ್ತು ಇಂಟರ್ಮೀಡಿಯೆಟ್ ಅಪ್ರೆಂಟಿಸ್ ಮೆಕ್ಯಾನಿಕ್ಸ್ (9 ಹುದ್ದೆ) ಸೇರಿದಂತೆ ಒಟ್ಟು 73 ಹುದ್ದೆಗಳಿಗೆ ನಡೆಯುತ್ತಿದೆ.

ಈ ನಿರ್ಧಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, “ತ್ರಿಭಾಷಾ ಸೂತ್ರದಡಿ ಕನ್ನಡಕ್ಕೂ ಅವಕಾಶ ನೀಡಬೇಕು. ತಕ್ಷಣ ಸುತ್ತೋಲೆ ಸರಿಪಡಿಸಿ ಕನ್ನಡದಲ್ಲಿ ಪರೀಕ್ಷೆ ನಡೆಸುವಂತೆ ಆದೇಶಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ವಿಷಯವನ್ನು ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರ ಗಮನಕ್ಕೆ ತರಲಾಗಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ಕೂಡ ಇದೇ ವಿಷಯದ ಕುರಿತು ನಡೆದ ಪ್ರತಿಭಟನೆ ವೇಳೆ ಪರೀಕ್ಷೆ ಮುಂದೂಡಲಾಗಿತ್ತು. ಆದರೆ ಇದೀಗ ಮತ್ತೆ ಅದೇ ವಿವಾದ ಪುನರಾವರ್ತನೆಯಾಗಿರುವುದರಿಂದ ಕನ್ನಡಪರ ಸಂಘಟನೆಗಳು ಉಗ್ರ ಹೋರಾಟದ ಎಚ್ಚರಿಕೆ ನೀಡಿವೆ.

ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ರೈಲ್ವೆ ಇಲಾಖೆ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದರ ಮೇಲೆ ರಾಜ್ಯದ ಗಮನ ಕೇಂದ್ರೀಕೃತವಾಗಿದೆ.

ನೆಲಮಂಗಲದಲ್ಲಿ ಭೀಕರ ಸರಣಿ ಅಪಘಾತ: 10ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ!

ನೆಲಮಂಗಲ: ತಾಲೂಕಿನ ಡಾಬಸ್‌ಪೇಟೆ ಅಂಚೆಮನೆ ಗೇಟ್ ಬಳಿ ಇರುವ ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಸರಣಿ ಅಪಘಾತ ಸಂಭವಿಸಿದೆ.

ಬೈಕ್, ಎರಡು ಕಾರು, ಲಾರಿ, ಬಸ್ ಹಾಗೂ ಪಿಕಪ್ ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಪಿಕಪ್ ವಾಹನ ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ವಾಹನಗಳು ಭಾರೀ ಹಾನಿಗೊಳಗಾಗಿವೆ.

ಈ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ಪರಿಣಾಮ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

 

ಹವಾಮಾನ ಬದಲಾವಣೆ ಮಕ್ಕಳ ಆರೋಗ್ಯಕ್ಕೆ ಎಫೆಕ್ಟ್: ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು?

ಇತ್ತೀಚಿನ ದಿನಗಳಲ್ಲಿ ಹವಾಮಾನದಲ್ಲಿ ಆಗುತ್ತಿರುವ ನಿರಂತರ ಬದಲಾವಣೆಗಳು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ.

ಹೆಚ್ಚು ಬಿಸಿಲು, ಸಂಜೆಯ ತಣ್ಣನೆಯ ಗಾಳಿ ಹಾಗೂ ತಾಪಮಾನದಲ್ಲಿ ಏರುಪೇರುಗಳು ಮಕ್ಕಳಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿವೆ. ಹಿರಿಯರಿಗಿಂತ ಮಕ್ಕಳ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ, ಇಂತಹ ಪರಿಸ್ಥಿತಿಗೆ ಅವರು ಬೇಗ ತುತ್ತಾಗುವ ಸಾಧ್ಯತೆ ಇದೆ.

ಹವಾಮಾನ ಬದಲಾವಣೆಯ ಸಮಯದಲ್ಲಿ ಮಕ್ಕಳಲ್ಲಿ ಪದೇಪದೇ ಜ್ವರ, ಕೆಮ್ಮು ಕಾಣಿಸಿಕೊಂಡರೆ ಅದನ್ನು ನಿರ್ಲಕ್ಷ್ಯ ಮಾಡಬಾರದು. ಜೊತೆಗೆ ದೌರ್ಬಲ್ಯ, ಊಟದಲ್ಲಿ ಆಸಕ್ತಿ ಕಡಿಮೆ, ಹೆಚ್ಚು ನಿದ್ರೆ, ಚಿಡಿಚಿಡಿ ಸ್ವಭಾವ ಇತ್ಯಾದಿ ಲಕ್ಷಣಗಳು ಕಾಣಿಸಬಹುದು. ಕೆಲವು ಸಂದರ್ಭಗಳಲ್ಲಿ ಅಲರ್ಜಿ, ಉಸಿರಾಟದ ತೊಂದರೆ ಹಾಗೂ ಚರ್ಮದ ಮೇಲೆ ರಾಶ್‌ಗಳೂ ಕಾಣಿಸಬಹುದು. ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ.

ಮಕ್ಕಳ ಆರೋಗ್ಯ ಕಾಪಾಡಲು ಪೌಷ್ಟಿಕ ಆಹಾರ ಬಹಳ ಮುಖ್ಯ. ಹಣ್ಣು, ತರಕಾರಿ ಹಾಗೂ ವಿಟಮಿನ್‌ಗಳುಳ್ಳ ಆಹಾರವನ್ನು ದಿನನಿತ್ಯ ನೀಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಮಕ್ಕಳಿಗೆ ಸಾಕಷ್ಟು ನೀರು ಕುಡಿಸುವುದು ಹಾಗೂ ಹವಾಮಾನಕ್ಕೆ ತಕ್ಕ ಉಡುಪುಗಳನ್ನು ಧರಿಸುವುದು ಮುಖ್ಯ.

ಇದರ ಜೊತೆಗೆ ಸ್ವಚ್ಛತೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಕೈ ತೊಳೆಯುವ ಅಭ್ಯಾಸ ಬೆಳೆಸುವುದು, ಹೊರಗಡೆ ಆಟವಾಡಿ ಬಂದ ನಂತರ ಕೈ-ಕಾಲುಗಳನ್ನು ಸ್ವಚ್ಛಗೊಳಿಸುವುದು ಅನಿವಾರ್ಯ. ಮಕ್ಕಳಿಗೆ ಸಾಕಷ್ಟು ವಿಶ್ರಾಂತಿ ಮತ್ತು ನಿದ್ರೆ ಸಿಗುವಂತೆ ನೋಡಿಕೊಳ್ಳಬೇಕು.

ತುಂಬಾ ಬಿಸಿ ಅಥವಾ ತಣ್ಣನೆಯ ಆಹಾರಗಳನ್ನು ತಪ್ಪಿಸುವುದು ಉತ್ತಮ. ಹೊರಗಡೆ ಆಟವಾಡುವಾಗ ಧೂಳು, ತೀವ್ರ ಬಿಸಿಲು ಅಥವಾ ತಣ್ಣನೆಯ ಗಾಳಿಯಿಂದ ರಕ್ಷಣೆ ನೀಡಬೇಕು.

ಒಟ್ಟಾರೆ, ಈ ಸಮಯದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿದರೆ ಹಲವು ಸಮಸ್ಯೆಗಳನ್ನು ತಪ್ಪಿಸಿಕೊಳ್ಳಬಹುದು.

ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ದುರಂತ: ವಿಧವೆಯ ಮೇಲೆ ಹೊರಗುತ್ತಿಗೆ ನೌಕರನಿಂದ ಅತ್ಯಾಚಾರ?

ಬಾಗಲಕೋಟೆ: ನಗರದ ಜಿಲ್ಲಾಸ್ಪತ್ರೆಯಲ್ಲಿ ಮನಕಲಕುವ ಹಾಗೂ ಆಕ್ರೋಶ ಹುಟ್ಟಿಸುವ ಘಟನೆ ಬೆಳಕಿಗೆ ಬಂದಿದೆ.

ಆಸ್ಪತ್ರೆಯ ಬಾತ್‌ರೂಮ್‌ನಲ್ಲಿ ವಿಧವೆಯ ಮೇಲೆ ಹೊರಗುತ್ತಿಗೆ ನೌಕರನೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.

ಆರೋಪಿಯನ್ನು ಫರೀದ್ ಸಾಬ್ ಡಾಂಗಿ ಎಂದು ಗುರುತಿಸಲಾಗಿದೆ. ಆಸ್ಪತ್ರೆಯಲ್ಲಿ ಡಿ-ದರ್ಜೆ ನೌಕರನಾಗಿ ಕೆಲಸ ಮಾಡುತ್ತಿದ್ದ ಆತ, ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರ ಸಹೋದರಿಯ ಮೇಲೆ ಈ ಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ.

34 ವರ್ಷದ ಸಂತ್ರಸ್ತೆ ತನ್ನ ಅನಾರೋಗ್ಯ ಪೀಡಿತ ಸಹೋದರನ ಆರೈಕೆಗಾಗಿ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲೇ ತಂಗಿದ್ದಳು. ಈ ಅವಧಿಯಲ್ಲಿ ಆರೋಪಿಯು ಆಕೆಯೊಂದಿಗೆ ಪರಿಚಯ ಮಾಡಿಕೊಂಡಿದ್ದನು. ಮೇ 4ರ ಮಧ್ಯರಾತ್ರಿ 12ರಿಂದ 2 ಗಂಟೆಯ ನಡುವೆ ಆಕೆಗೆ ಬೆದರಿಕೆ ಹಾಕಿ, ಸಿಬ್ಬಂದಿ ಬಳಕೆ ಬಾತ್‌ರೂಮ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆ ಬಳಿಕ ಸಂತ್ರಸ್ತೆಯನ್ನು ಒಳಗೆ ಬಂದಿಸಿ ಆರೋಪಿಯು ಸ್ಥಳದಿಂದ ತೆರಳಿದ್ದಾನೆ ಎನ್ನಲಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಸಂಬಂಧ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಿತ ಕಾನೂನು ವಿಧಿಗಳಡಿ ತನಿಖೆ ನಡೆಯುತ್ತಿದೆ.

ಘಟನೆಯ ಬಳಿಕ ಜಿಲ್ಲಾಸ್ಪತ್ರೆಯ ಸರ್ಜನ್ ಮಹೇಶ್ ಕೋಣಿ ಅವರು ಆರೋಪಿಯನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಿದ್ದಾರೆ.

ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸಂತ್ರಸ್ತೆಯ ಕುಟುಂಬಸ್ಥರು, “ಜಿಲ್ಲಾಸ್ಪತ್ರೆ ಬಡವರ ದೇವಾಲಯದಂತಿರಬೇಕು, ಆದರೆ ಇಲ್ಲಿ ಮಹಿಳೆಯರಿಗೂ ಸುರಕ್ಷತೆ ಇಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಅವರು ಆಗ್ರಹಿಸಿದ್ದಾರೆ.

 

ಕೋಲಾರದಲ್ಲಿ ದುರಂತ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವು!

ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೊಡೇನಹಳ್ಳಿಯಲ್ಲಿ ಮನಕಲಕುವ ಘಟನೆ ನಡೆದಿದೆ.

ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ.

ಮೃತರನ್ನು ವರದರಾಜು–ಶ್ಯಾಮಲ ದಂಪತಿಯ ಪುತ್ರ ಕಾರ್ತಿಕ್ (8) ಹಾಗೂ ಬಾಬು–ರೂಪ ದಂಪತಿಯ ಪುತ್ರಿ ತನುಶ್ರೀ (15) ಎಂದು ಗುರುತಿಸಲಾಗಿದೆ. ಅಜ್ಜಿ ಹಾಗೂ ತಾಯಿಯೊಂದಿಗೆ ತೋಟಕ್ಕೆ ತೆರಳಿದ್ದ ವೇಳೆ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದಿದ್ದಾರೆ.

ಮೊದಲು ಕಾರ್ತಿಕ್ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾನೆ. ಇದನ್ನು ಕಂಡ ತನುಶ್ರೀ ಆತನನ್ನು ರಕ್ಷಿಸಲು ಹೊಂಡಕ್ಕೆ ಇಳಿದಿದ್ದಾಳೆ. ಆದರೆ ನೀರಿನ ಆಳ ತಿಳಿಯದೆ ಇಬ್ಬರೂ ಮುಳುಗಿ ಮೃತಪಟ್ಟಿದ್ದಾರೆ.

ತನುಶ್ರೀ ಇತ್ತೀಚೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.86 ಅಂಕ ಗಳಿಸಿದ್ದ ವಿದ್ಯಾರ್ಥಿನಿಯಾಗಿದ್ದು, ಬಂಗಾರಪೇಟೆಯ ಡಿ.ಪಿ.ಹಳ್ಳಿಯ ವಸತಿ ಶಾಲೆಯಲ್ಲಿ ಓದುತ್ತಿದ್ದಳು. ಕಾರ್ತಿಕ್ ತಾಲೂಕಿನ ನಲ್ಲಗುಟ್ಟಹಳ್ಳಿಯ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿಯಾಗಿದ್ದ.

ಘಟನೆ ತಿಳಿದ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳನ್ನು ಕಳೆದುಕೊಂಡು ಪೋಷಕರು ಶೋಕಸಾಗರದಲ್ಲಿ ಮುಳುಗಿದ್ದು, ಗ್ರಾಮದಲ್ಲಿ ಮೌನ ವಾತಾವರಣ ನಿರ್ಮಾಣವಾಗಿದೆ.

ಘಟನೆ ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

 

error: Content is protected !!