Home Blog

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

0

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ ಪೊಲೀಸರು ಕೈಗೊಂಡಿರುವ ‘ಮಿಷನ್ RISE’ ಹಾಗೂ ‘ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಯಶಸ್ಸು ಸಿಕ್ಕಿದೆ. ಸಿಸಿಬಿ ಸೇರಿದಂತೆ ಒಟ್ಟು 16 ಪೊಲೀಸ್ ಘಟಕಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 55.8 ಕೋಟಿ ರೂಪಾಯಿ ಮೌಲ್ಯದ 200 ಕೆಜಿಗೂ ಅಧಿಕ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಈ ಕಾರ್ಯಾಚರಣೆಯಲ್ಲಿ 8 ಮಂದಿ ವಿದೇಶಿಯರು ಹಾಗೂ 21 ಮಂದಿ ಅನ್ಯರಾಜ್ಯದವರು ಸೇರಿದಂತೆ ಒಟ್ಟು 39 ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದ ಹತ್ತು ದಿನಗಳಿಂದ ಪೊಲೀಸರು ಸತತವಾಗಿ ಕಾರ್ಯಾಚರಣೆ ನಡೆಸಿ ನಗರದ ವಿವಿಧ ಭಾಗಗಳಲ್ಲಿ ಸಕ್ರಿಯವಾಗಿದ್ದ ಮಾದಕ ವಸ್ತು ದಂಧೆಕೋರರ ಜಾಲವನ್ನು ಭೇದಿಸಿದ್ದಾರೆ.

ಅಮೃತಹಳ್ಳಿ, ಗಿರಿನಗರ, ಕೆಐಎ ವಿಮಾನ ನಿಲ್ದಾಣ, ಯಶವಂತಪುರ, ಯಲಹಂಕ, ಹೆಬ್ಬಾಳ, ನಂದಿನಿ ಲೇಔಟ್, ಕಾಡುಗೋಡಿ, ಮಲ್ಲೇಶ್ವರಂ, ಗೋವಿಂದಪುರ, ಬಾಗಲೂರು, ಮಹದೇವಪುರ, ಮಹಾಲಕ್ಷ್ಮೀ ಲೇಔಟ್, ಬೇಗೂರು ಹಾಗೂ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ವಿವಿಧ ರೀತಿಯ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿಯಾದ ಮಾದಕ ವಸ್ತುಗಳ ವಿವರ ಹೀಗಿದೆ:

  • MDMA: 21 ಕೆಜಿ 641 ಗ್ರಾಂ
  • ಗಾಂಜಾ: 184 ಕೆಜಿ 625 ಗ್ರಾಂ
  • ಹೈಡ್ರೋ ಗಾಂಜಾ: 4 ಕೆಜಿ 493 ಗ್ರಾಂ
  • ಅಫೀಮು: 1 ಕೆಜಿ 65 ಗ್ರಾಂ
  • ಕೊಕೇನ್: 738 ಗ್ರಾಂ
  • ಮಾರ್ಫಿನ್: 25 ಗ್ರಾಂ

ಇವುಗಳ ಒಟ್ಟು ಮೌಲ್ಯ ಸುಮಾರು 55.8 ಕೋಟಿ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ. ಇದರ ಜೊತೆಗೆ ಆರೋಪಿಗಳಿಂದ 17 ಲಕ್ಷ ರೂಪಾಯಿ ನಗದು, 22 ಮೊಬೈಲ್ ಫೋನ್‌ಗಳು ಹಾಗೂ 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ದೆಹಲಿಯಲ್ಲೇ MDMA ತಯಾರಿಸಿ ಬೆಂಗಳೂರಿಗೆ ಪೂರೈಕೆ

ಈ ಸಂಪೂರ್ಣ ಕಾರ್ಯಾಚರಣೆಯಲ್ಲಿ ಅಮೃತಹಳ್ಳಿ ಪೊಲೀಸರು ಭಾರಿ ಪ್ರಮಾಣದ ಮಾದಕ ವಸ್ತು ಜಾಲವೊಂದನ್ನು ಭೇದಿಸಿದ್ದಾರೆ. ಬರೋಬ್ಬರಿ 28.8 ಕೋಟಿ ರೂಪಾಯಿ ಮೌಲ್ಯದ MDMA ವಶಪಡಿಸಿಕೊಂಡಿರುವ ಪೊಲೀಸರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಆಮ್ನಿ ಸಿಂಗ್ ಹಾಗೂ ನೈಜೀರಿಯಾ ಮೂಲದ ಓಬಮ್ ಎಂಬ ಇಬ್ಬರನ್ನು ದೆಹಲಿಯಲ್ಲೇ ಬಂಧಿಸಿದ್ದಾರೆ.

ತನಿಖೆಯ ವೇಳೆ ಆರೋಪಿಗಳು ದೆಹಲಿಯಲ್ಲೇ MDMA ತಯಾರಿಸಿ, ಬಳಿಕ ಬೆಂಗಳೂರಿನ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕುವ ಉದ್ದೇಶದಿಂದ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ‘ಮಿಷನ್ RISE’ ಹಾಗೂ ‘ಬೇಡ ಬ್ರೋ’ ಅಭಿಯಾನದಡಿ ಮಾದಕ ವಸ್ತುಗಳ ಮಾರಾಟ ಮತ್ತು ಪೂರೈಕೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಎಲೆಕ್ಟ್ರಾನಿಕ್ ಸಿಟಿ, ವೈಟ್ ಫೀಲ್ಡ್ʼನಲ್ಲಿ 105 ಅಕ್ರಮ ಬಾಂಗ್ಲಾದೇಶಿ ವಲಸಿಗರು ಪತ್ತೆ

0

ಬೆಂಗಳೂರು: ಅಕ್ರಮ ವಲಸಿಗರ ಪತ್ತೆ ಹಾಗೂ ಪರಿಶೀಲನೆಗಾಗಿ ಬೆಂಗಳೂರು ನಗರ ಪೊಲೀಸರು ಕೈಗೊಂಡಿರುವ ‘ಆಪರೇಷನ್ ಮುಕ್ತ’ ಕಾರ್ಯಾಚರಣೆಯಡಿ 105 ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನ ಮೂರು ವಿಭಾಗಗಳಲ್ಲಿ ಅಕ್ರಮ ವಲಸಿಗರ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ ಒಟ್ಟು 2,944 ಮಂದಿಯ ದಾಖಲೆಗಳನ್ನು ಪರಿಶೀಲಿಸಲಾಗಿದೆ. ಈ ಪೈಕಿ 105 ಮಂದಿ ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿ ವಲಸಿಗರು ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ವಿಭಾಗದಲ್ಲಿ ಒಟ್ಟು 1,909 ಮಂದಿಯ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ. ಈ ವೇಳೆ 43 ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಪತ್ತೆಯಾಗಿದ್ದಾರೆ.

ಇನ್ನು ವೈಟ್‌ಫೀಲ್ಡ್ ವಿಭಾಗದಲ್ಲಿ 1,035 ಮಂದಿಯನ್ನು ಪರಿಶೀಲನೆಗೆ ಒಳಪಡಿಸಲಾಗಿದ್ದು, 62 ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ತೆಯಾದ ಒಟ್ಟು 105 ಮಂದಿಯ ಮಾಹಿತಿಯನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (FRRO)ಗೆ ನೀಡಲಾಗಿದೆ. ಮುಂದಿನ ಕಾನೂನು ಪ್ರಕ್ರಿಯೆಗಾಗಿ ಅವರನ್ನು ವಲಸಿಗರ ಕೇಂದ್ರಗಳಿಗೆ ಕಳುಹಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

ಅಕ್ರಮ ವಲಸಿಗರ ಪತ್ತೆ ಹಾಗೂ ದಾಖಲೆಗಳ ಪರಿಶೀಲನೆ ಮುಂದುವರಿಯಲಿದ್ದು, ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

JPSC-JSSC ಪರೀಕ್ಷಾರ್ಥಿಗಳ ವಿಧಾನಸಭೆ ಮುತ್ತಿಗೆ: ರಾಂಚಿಯಲ್ಲಿ ಉದ್ವಿಗ್ನ ಪರಿಸ್ಥಿತಿ, ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್–ಜಲಫಿರಂಗಿ

0

ರಾಂಚಿ: ಜಾರ್ಖಂಡ್‌ನ ರಾಂಚಿಯಲ್ಲಿ JPSC ಮತ್ತು JSSC ಪರೀಕ್ಷಾರ್ಥಿಗಳು ನಡೆಸಿದ ವಿಧಾನಸಭೆ ಮುತ್ತಿಗೆ ಚಳವಳಿ ಇಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ವಿಧಾನಸಭೆಯತ್ತ ಮುನ್ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿ, ಜಲಫಿರಂಗಿ ಪ್ರಯೋಗಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳಿಂದ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಗೆ ಸಿಲುಕಿದೆ ಎಂದು ಆರೋಪಿಸಿರುವ ಪರೀಕ್ಷಾರ್ಥಿಗಳು, ನೇಮಕಾತಿ ಪ್ರಕ್ರಿಯೆಯಲ್ಲಿ ತಕ್ಷಣವೇ ಪಾರದರ್ಶಕ ಸುಧಾರಣೆಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ, ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸಾವಿರಾರು ಅಭ್ಯರ್ಥಿಗಳು ವಿಧಾನಸಭೆ ಮುತ್ತಿಗೆಗೆ ಕರೆ ನೀಡಿದ್ದರು.

ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಮುಂದೆ ಸಾಗಲು ಯತ್ನಿಸಿದಾಗ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರತ್ತ ಚಪ್ಪಲಿ ಹಾಗೂ ಖಾಲಿ ನೀರಿನ ಬಾಟಲಿಗಳನ್ನು ಎಸೆದಿದ್ದಾರೆ.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಜಲಫಿರಂಗಿ ಬಳಸಿ ಪ್ರತಿಭಟನಾಕಾರರತ್ತ ನೀರು ಹಾಯಿಸಿದ್ದಾರೆ. ಆದರೆ, ಕೆಲ ವಿದ್ಯಾರ್ಥಿಗಳು ಸ್ಥಳದಿಂದ ತೆರಳದೆ ಜಲಫಿರಂಗಿಗೆ ಎದುರಾಗಿ ನಿಂತು ಪ್ರತಿಭಟನೆ ಮುಂದುವರಿಸಿದ್ದಾರೆ. ಕೆಲವರು ನೀರಿನ ಸಿಂಚನದ ನಡುವೆಯೇ ಕುಣಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿದ್ಯಾರ್ಥಿ ನಾಯಕ ದೇವೇಂದ್ರ ಮಹತೋ ಪ್ರತಿಭಟನಾಕಾರರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಪೊಲೀಸರು ತಡೆದರೆ ಅವರೊಂದಿಗೆ ಜಗಳವಾಡಬೇಡಿ. ಶಿಸ್ತುಬದ್ಧವಾಗಿ ಬೇರೆ ಮಾರ್ಗಗಳ ಮೂಲಕ ವಿಧಾನಸಭೆ ತಲುಪಲು ಪ್ರಯತ್ನಿಸಿ ಎಂದು ಅವರು ಕರೆ ನೀಡಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ವಿದ್ಯಾರ್ಥಿಗಳು ಬೆಳಗ್ಗೆಯೇ ರೈಲು, ಬಸ್ ಹಾಗೂ ಖಾಸಗಿ ವಾಹನಗಳ ಮೂಲಕ ರಾಂಚಿಗೆ ಆಗಮಿಸಿದ್ದರು. ಪ್ರತಿಭಟನಾಕಾರರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ತಡೆಯಲು ಆಡಳಿತವು ನಗರದ ಪ್ರಮುಖ ರಸ್ತೆಗಳು ಹಾಗೂ ಜಂಕ್ಷನ್‌ಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ರಾಂಚಿಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿತ್ತು.

ಇದೇ ವೇಳೆ, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ರಾಂಚಿಗೆ ಆಗಮಿಸುವುದನ್ನು ತಡೆಯಲು ಜಿಲ್ಲೆಯ ಗಡಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪೊಲೀಸರು ತೀವ್ರ ವಾಹನ ತಪಾಸಣೆ ನಡೆಸಿದ್ದರು.

JPSC ಮತ್ತು JSSC ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಗಳ ಹಿನ್ನೆಲೆಯಲ್ಲಿ ನಡೆದಿರುವ ಈ ಪ್ರತಿಭಟನೆ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಂಚಿಯಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ.

ಗಣೇಶ ಚತುರ್ಥಿಗೆ ಪರಿಸರ ಸ್ನೇಹಿ ಆಚರಣೆಗೆ GBA ಕರೆ: POP ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ

0

ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆಗೆ ಜಿಬಿಎ ಅರಣ್ಯ, ಪರಿಸರ ಮತ್ತು ಜೀವಿಪರಿಸ್ಥಿತಿ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಪರಿಸರ ಸ್ನೇಹಿ ರೀತಿಯಲ್ಲಿ ಗಣೇಶೋತ್ಸವ ಆಚರಿಸುವಂತೆ ಸಾರ್ವಜನಿಕರು ಹಾಗೂ ಗಣೇಶೋತ್ಸವ ಮಂಡಳಿಗಳಿಗೆ ಇಲಾಖೆ ಕರೆ ನೀಡಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಮೂರ್ತಿಗಳ ತಯಾರಿಕೆ ಮತ್ತು ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಿದೆ.

ಜಿಬಿಎ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳು, ಭಾರ ಲೋಹಗಳನ್ನು ಒಳಗೊಂಡಿರುವ ರಾಸಾಯನಿಕ ಬಣ್ಣ ಬಳಸಿ ತಯಾರಿಸಿದ ಮೂರ್ತಿಗಳು ಹಾಗೂ ಜೈವಿಕವಾಗಿ ವಿಘಟನೆಯಾಗದ ಕೃತಕ ವಸ್ತುಗಳಿಂದ ನಿರ್ಮಿಸಿದ ಮೂರ್ತಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿರ್ಬಂಧಿಸಲಾಗಿದೆ. ಅಲ್ಲದೆ, ಇಂತಹ ಮೂರ್ತಿಗಳನ್ನು ನಗರದ ಕೆರೆ, ಬಾವಿ ಸೇರಿದಂತೆ ಯಾವುದೇ ಜಲಮೂಲಗಳಲ್ಲಿ ವಿಸರ್ಜಿಸುವುದಕ್ಕೂ ಸಂಪೂರ್ಣ ನಿಷೇಧವಿದೆ ಎಂದು ಇಲಾಖೆ ತಿಳಿಸಿದೆ.

ಜಲಮಾಲಿನ್ಯ ತಡೆಗೆ ಕ್ರಮ

ಪ್ರತಿ ವರ್ಷ ಗಣೇಶ ಚತುರ್ಥಿ ಸಂದರ್ಭದಲ್ಲಿ ರಾಸಾಯನಿಕ ಬಣ್ಣ ಹಾಗೂ ಪಿಒಪಿಯಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ಜಲಮಾಲಿನ್ಯ ಹೆಚ್ಚಾಗುತ್ತಿದೆ ಎಂದು ಇಲಾಖೆ ಆತಂಕ ವ್ಯಕ್ತಪಡಿಸಿದೆ.

ರಾಸಾಯನಿಕ ಬಣ್ಣಗಳಿಂದ ಕೂಡಿದ ಮೂರ್ತಿಗಳನ್ನು ನೀರಿನಲ್ಲಿ ವಿಸರ್ಜಿಸುವುದರಿಂದ ಜಲಮೂಲಗಳ ನೀರು ಹಾಗೂ ಸುತ್ತಮುತ್ತಲಿನ ಮಣ್ಣು ಕಲುಷಿತಗೊಳ್ಳುತ್ತದೆ. ಇದರಿಂದ ಪರಿಸರ ವ್ಯವಸ್ಥೆ ಮಾತ್ರವಲ್ಲದೆ ಜಲಚರಗಳ ಮೇಲೂ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಹಬ್ಬದ ಸಂದರ್ಭದಲ್ಲಿ ಯಾವುದೇ ಮುನ್ನೆಚ್ಚರಿಕೆ ವಹಿಸದೆ ರಾಸಾಯನಿಕ ಬಣ್ಣದ ಮೂರ್ತಿಗಳನ್ನು ನೀರಿಗೆ ವಿಸರ್ಜಿಸುವುದರಿಂದ ನೀರು ಮತ್ತು ಭೂಮಿ ಎರಡೂ ಕಲುಷಿತಗೊಳ್ಳುತ್ತಿವೆ. ಇದರಿಂದ ಜಲಚರಗಳು ಹಾಗೂ ಒಟ್ಟಾರೆ ಪರಿಸರ ವ್ಯವಸ್ಥೆಗೆ ಹಾನಿಯಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈಸರ್ಗಿಕ ಮಣ್ಣಿನ ಗಣಪತಿ ಬಳಕೆಗೆ ಸೂಚನೆ

ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಅರಿತು ಸಾರ್ವಜನಿಕರು ಹಾಗೂ ಗಣೇಶೋತ್ಸವ ಮಂಡಳಿಗಳು ನೈಸರ್ಗಿಕ ಜೇಡಿಮಣ್ಣು ಮತ್ತು ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಬಳಸಬೇಕು ಎಂದು ಜಿಬಿಎ ಅಧಿಕಾರಿಗಳು ಸೂಚಿಸಿದ್ದಾರೆ.

ಪರಿಸರಕ್ಕೆ ಹಾನಿಕಾರಕವಾದ ಪಿಒಪಿ ಹಾಗೂ ರಾಸಾಯನಿಕ ಬಣ್ಣದ ಮೂರ್ತಿಗಳ ಬಳಕೆಯಿಂದ ದೂರವಿದ್ದು, ಪರಿಸರ ಸ್ನೇಹಿ ರೀತಿಯಲ್ಲಿ ಹಬ್ಬ ಆಚರಿಸುವಂತೆ ಇಲಾಖೆ ಮನವಿ ಮಾಡಿದೆ.

ನಿಯಮಗಳನ್ನು ಉಲ್ಲಂಘಿಸಿ ಪಿಒಪಿ ಅಥವಾ ನಿಷೇಧಿತ ವಸ್ತುಗಳಿಂದ ತಯಾರಿಸಿದ ಗಣೇಶ ಮೂರ್ತಿಗಳ ಉತ್ಪಾದನೆ, ಮಾರಾಟ ಅಥವಾ ವಿಸರ್ಜನೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಬಿಡದಿ ಟೌನ್ ಶಿಪ್ʼಗೆ ಕುಮಾರಸ್ವಾಮಿಯವರೇ ಪಿತಾಮಹ; ಈಗ ಅವರೇ ವಿರೋಧಿಸುತ್ತಿದ್ದಾರೆ: ಸಚಿವ ಎಂ.ಬಿ. ಪಾಟೀಲ್

0

ವಿಜಯಪುರ: ಬಿಡದಿ ಟೌನ್‌ಶಿಪ್‌ ಯೋಜನೆ ವಿಚಾರವಾಗಿ ಜೆಡಿಎಸ್ ಹಾಗೂ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯನ್ನು ಸಚಿವ ಎಂ.ಬಿ. ಪಾಟೀಲ್ ಟೀಕಿಸಿದ್ದಾರೆ. ಈ ಪಾದಯಾತ್ರೆ ರಾಜಕೀಯ ಉದ್ದೇಶದಿಂದ ನಡೆಯುತ್ತಿದ್ದು, ಇದೆಲ್ಲವೂ ನಾಟಕ ಎಂದು ಅವರು ಆರೋಪಿಸಿದ್ದಾರೆ.

ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಿಡದಿ ಟೌನ್‌ಶಿಪ್‌ ಯೋಜನೆಗೆ ಜನ್ಮ ನೀಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೇ ಈ ಯೋಜನೆಯ ಪಿತಾಮಹ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಬಿಡದಿ ಟೌನ್‌ಶಿಪ್‌ ಎಚ್.ಡಿ. ಕುಮಾರಸ್ವಾಮಿ ಅವರ ಕನಸಿನ ಕೂಸು. ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಈ ಯೋಜನೆಗೆ ಚಾಲನೆ ನೀಡಿದ್ದರು. ಹೀಗಾಗಿ ಯೋಜನೆಯ ಪಿತಾಮಹ ಅವರೇ ಆಗಿದ್ದಾರೆ. ಆದರೆ, ಇದೀಗ ಅವರೇ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಸಚಿವರು ಟೀಕಿಸಿದ್ದಾರೆ.

ಜೆಡಿಎಸ್ ಹಾಗೂ ಬಿಜೆಪಿ ಬಿಡದಿ ಟೌನ್‌ಶಿಪ್‌ ವಿಚಾರವಾಗಿ ನಡೆಸುತ್ತಿರುವ ಪಾದಯಾತ್ರೆ ರಾಜಕೀಯಕ್ಕಾಗಿ ನಡೆಯುತ್ತಿದೆ. ಜನರ ಹಿತದೃಷ್ಟಿಗಿಂತ ರಾಜಕೀಯ ಉದ್ದೇಶವೇ ಇದರಲ್ಲಿ ಹೆಚ್ಚಾಗಿದೆ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಇದೇ ವೇಳೆ, ಸಚಿವ ನಾಗೇಂದ್ರ ಅವರು ನ್ಯಾಯಾಲಯದ ನಿಯಮ ಉಲ್ಲಂಘಿಸಿರುವ ಆರೋಪದ ಕುರಿತು ಪ್ರತಿಕ್ರಿಯಿಸಿದ ಎಂ.ಬಿ. ಪಾಟೀಲ್, ಈ ವಿಚಾರದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಮಾಹಿತಿ ಇಲ್ಲದೆ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ಹೀಗಾಗಿ ಸಂಬಂಧಿತ ಮಾಹಿತಿ ಪಡೆದುಕೊಂಡ ಬಳಿಕ ಈ ಕುರಿತು ಪ್ರತಿಕ್ರಿಯಿಸುವುದಾಗಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನನ್ನನ್ನೇ ಹೊಣೆ ಮಾಡ್ತೀರಾ?; ‘ತೀರ್ಮಾನ ಹೈಕಮಾಂಡ್‌ದ್ದು, ನನ್ನದಲ್ಲ’: ಎಂ.ಬಿ. ಪಾಟೀಲ್‌ ಗರಂ

0

ವಿಜಯಪುರ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕಾಗಿ ನಡೆದ ಲಾಬಿ, ಅಸಮಾಧಾನ ಹಾಗೂ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ವಿಜಯಪುರ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಸಚಿವ ಎಂ.ಬಿ. ಪಾಟೀಲ್‌ ಕಾರಣ ಎಂಬ ಆರೋಪದ ಬೆನ್ನಲ್ಲೇ ಪಾಟೀಲ್‌ ನೇರವಾಗಿ ಸ್ಪಷ್ಟನೆ ನೀಡಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ಯಾರಿಗೆ ನೀಡಬೇಕು ಎಂಬ ಅಂತಿಮ ತೀರ್ಮಾನ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಹೈಕಮಾಂಡ್‌ಗೆ ಸೇರಿದ್ದು ಎಂದು ಹೇಳಿದ್ದಾರೆ.

ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಬೇಕೆಂದು ತಾನೇ ಪಕ್ಷದ ವರಿಷ್ಠರ ಮುಂದೆ ಬೇಡಿಕೆ ಇಟ್ಟಿದ್ದಾಗಿ ತಿಳಿಸಿರುವ ಪಾಟೀಲ್‌, ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸುರ್ಜೆವಾಲಾ ಹಾಗೂ ರಾಹುಲ್‌ ಗಾಂಧಿ ಅವರು ಈ ಕುರಿತು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಶಾಸಕ ಸಿ.ಎಸ್‌. ನಾಡಗೌಡ ಮತ್ತು ಯಶವಂತರಾಯಗೌಡ ಪಾಟೀಲ್‌ ಅವರಿಗೆ ಸಚಿವ ಸ್ಥಾನ ತಪ್ಪಲು ತಾನೇ ಕಾರಣ ಎಂಬ ಆರೋಪಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಅವರು, ‘ಮತ್ತೊಂದು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದೇ ನಾನು. ಆದರೆ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಸಚಿವ ಸ್ಥಾನ ತಪ್ಪಿಸಿದ್ದು ನಾನು ಎನ್ನುವುದು ಸರಿಯಲ್ಲ’ ಎಂದು ಹೇಳಿದ್ದಾರೆ.

ಸಚಿವ ಸ್ಥಾನ ಯಾಕೆ ಸಿಗಲಿಲ್ಲ ಎಂಬುದಕ್ಕೆ ತಮ್ಮನ್ನು ಹೊಣೆ ಮಾಡುವುದು ಸರಿಯಲ್ಲ ಎಂದಿರುವ ಅವರು, ಈ ಬಗ್ಗೆ ಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷರು, ಸುರ್ಜೆವಾಲಾ ಹಾಗೂ ರಾಹುಲ್‌ ಗಾಂಧಿ ಅವರನ್ನು ಪ್ರಶ್ನಿಸಬೇಕು ಎಂದು ಹೇಳಿದ್ದಾರೆ.

ಇನ್ನು ತಮ್ಮ ವಿರುದ್ಧ ಇಬ್ಬರು ಶಾಸಕರು ಮಾಡಿರುವ ಆರೋಪಗಳಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ ಎಂಬ ವಿಚಾರಕ್ಕೂ ಪಾಟೀಲ್‌ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

‘ಬಸವಣ್ಣನವರಿಗೆ ಬಿಟ್ಟಿಲ್ಲ ಇನ್ನೂ ಎಂ.ಬಿ. ಪಾಟೀಲ್‌ ಯಾವ ಲೆಕ್ಕ?’ ಎಂದು ಪ್ರಶ್ನಿಸುವ ಮೂಲಕ ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡಿರುವ ಸಚಿವರು, ಸಚಿವ ಸ್ಥಾನ ಹಂಚಿಕೆ ವಿಚಾರದಲ್ಲಿ ತಮ್ಮ ಪಾತ್ರವಿಲ್ಲ ಎಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಿದ್ದಾರೆ.

ಸಿಲಿಕಾನ್ ಸಿಟಿ ಅಲ್ಲ, ಟ್ರಾಫಿಕ್ ಸಿಟಿ: ಭಾರತದಲ್ಲೇ ನಂ.1 ಬೆಂಗಳೂರು

0

ನವದೆಹಲಿ/ಬೆಂಗಳೂರು: ಟ್ರಾಫಿಕ್ ಜಾಮ್‌ಗೆ ಕುಖ್ಯಾತಿ ಪಡೆದಿರುವ ಸಿಲಿಕಾನ್ ಸಿಟಿ ಬೆಂಗಳೂರು ಇದೀಗ ದೇಶದಲ್ಲೇ ಅತಿ ಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ನಗರ ಎಂಬ ಪಟ್ಟಕ್ಕೆ ಸೇರಿದೆ. ಟಾಮ್‌ಟಾಮ್ ಸಂಸ್ಥೆಯ 2025ರ ಟ್ರಾಫಿಕ್ ಇಂಡೆಕ್ಸ್ ವರದಿಯಲ್ಲಿ ಬೆಂಗಳೂರು ಭಾರತದಲ್ಲಿ ಮೊದಲ ಸ್ಥಾನ ಪಡೆದಿದ್ದು, ಕೇವಲ 10 ಕಿಲೋಮೀಟರ್ ಸಂಚಾರಕ್ಕೆ ಸರಾಸರಿ 36 ನಿಮಿಷ 9 ಸೆಕೆಂಡ್ ಬೇಕಾಗುತ್ತಿರುವುದು ಆತಂಕಕಾರಿ ಅಂಶವಾಗಿದೆ.

ವಿಶ್ವದ ಪ್ರಮುಖ ನಗರಗಳ ಸಂಚಾರ ಪರಿಸ್ಥಿತಿಯನ್ನು ಅಧ್ಯಯನ ನಡೆಸುವ ನ್ಯಾವಿಗೇಷನ್ ಟೆಕ್ನಾಲಜಿ ಕಂಪನಿ ಟಾಮ್‌ಟಾಮ್ ತನ್ನ ವಾರ್ಷಿಕ ಟ್ರಾಫಿಕ್ ಇಂಡೆಕ್ಸ್‌ನಲ್ಲಿ ಬೆಂಗಳೂರಿನ ವಾಹನ ದಟ್ಟಣೆಯ ಚಿತ್ರಣವನ್ನು ಬಹಿರಂಗಪಡಿಸಿದೆ. ಈಗಾಗಲೇ ಸಂಚಾರ ದಟ್ಟಣೆಯಿಂದ ವಿಶ್ವಮಟ್ಟದಲ್ಲೂ ಕುಖ್ಯಾತಿ ಪಡೆದಿದ್ದ ಬೆಂಗಳೂರು, 2025ರ ವರದಿಯಲ್ಲಿ ಭಾರತದಲ್ಲೇ ಮೊದಲ ಸ್ಥಾನ ಪಡೆದು ಮತ್ತೆ ಸುದ್ದಿಯಾಗಿದೆ.

ನಗರದಲ್ಲಿ ವಾಹನ ಸವಾರರು ಪೀಕ್ ಅವರ್ ಟ್ರಾಫಿಕ್‌ನಲ್ಲಿ ವರ್ಷಕ್ಕೆ ಬರೋಬ್ಬರಿ 168 ಗಂಟೆಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಅಂದರೆ ಸುಮಾರು 7 ದಿನಗಳ ಕಾಲ ರಸ್ತೆ ಮೇಲೆಯೇ ಸಮಯ ವ್ಯರ್ಥವಾಗುತ್ತಿದೆ ಎಂಬ ಅಂಶ ವರದಿಯಲ್ಲಿ ಬಹಿರಂಗವಾಗಿದೆ.

ರಶ್ ಅವರ್ ವೇಳೆ ಬೆಂಗಳೂರಿನ ವಾಹನಗಳ ಸರಾಸರಿ ವೇಗ ಗಂಟೆಗೆ ಕೇವಲ 13.9 ಕಿಲೋಮೀಟರ್‌ಗೆ ಇಳಿಯುತ್ತಿದೆ. 2024ಕ್ಕೆ ಹೋಲಿಸಿದರೆ 2025ರಲ್ಲಿ ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಆತಂಕವೂ ವ್ಯಕ್ತವಾಗಿದೆ.

ಬೆಂಗಳೂರು ಬಳಿಕ ಕೋಲ್ಕತ್ತಾ ಎರಡನೇ ಸ್ಥಾನದಲ್ಲಿದ್ದರೆ, ಪುಣೆ ಮೂರನೇ ಸ್ಥಾನ ಪಡೆದಿದೆ. ಪುಣೆಯಲ್ಲಿ 10 ಕಿಲೋಮೀಟರ್ ದೂರ ಕ್ರಮಿಸಲು ಸರಾಸರಿ 33 ನಿಮಿಷ 20 ಸೆಕೆಂಡ್ ಬೇಕಾಗುತ್ತಿದೆ.

ನಗರದ ವೇಗವಾಗಿ ಹೆಚ್ಚುತ್ತಿರುವ ವಾಹನಗಳ ಸಂಖ್ಯೆ, ರಸ್ತೆ ಮೂಲಸೌಕರ್ಯಗಳ ಮೇಲಿನ ಒತ್ತಡ ಮತ್ತು ಪೀಕ್ ಅವರ್ ದಟ್ಟಣೆ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನು ದಿನದಿಂದ ದಿನಕ್ಕೆ ಗಂಭೀರಗೊಳಿಸುತ್ತಿದೆ. 2025ರ ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್ ವರದಿ ಇದೀಗ ಬೆಂಗಳೂರಿನ ಸಂಚಾರ ವ್ಯವಸ್ಥೆಗೆ ಮತ್ತೊಮ್ಮೆ ಎಚ್ಚರಿಕೆಯ ಗಂಟೆ ಮೊಳಗಿಸಿದೆ.

ಆನೇಕಲ್ ಸರ್ಕಾರಿ ಗೋದಾಮಿನಲ್ಲಿ 86.65 ಲಕ್ಷ ರೂ. ದಾಸ್ತಾನು ಮಾಯ: ಅಧಿಕಾರಿ ಸೇರಿ ಐವರ ವಿರುದ್ಧ ಎಫ್‌ಐಆರ್

0

ಬೆಂಗಳೂರು: ಆನೇಕಲ್ ತಾಲೂಕಿನ ರಾಮಕೃಷ್ಣಾಪುರದಲ್ಲಿರುವ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಿಂದ ಸುಮಾರು 86.65 ಲಕ್ಷ ರೂ. ಮೌಲ್ಯದ ಅಕ್ಕಿ, ಗೋಧಿ ಹಾಗೂ ರಾಗಿಯನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ದಾಸ್ತಾನು ವ್ಯವಸ್ಥಾಪಕ ಸೇರಿದಂತೆ ಆರೋಪಿತ ಸಿಬ್ಬಂದಿ ತಲೆಮರೆಸಿಕೊಂಡಿದ್ದು, ಐವರ ವಿರುದ್ಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದಾಸ್ತಾನು ವ್ಯವಸ್ಥಾಪಕ ಶಿವಕುಮಾರ್ ಹಾಗೂ ಸಿಬ್ಬಂದಿಗಳಾದ ನಾರಾಯಣಸ್ವಾಮಿ, ತಿಮ್ಮರಾಜು, ರಾಜಕುಮಾರ್ ಮತ್ತು ತೌಸಿಕ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗೋದಾಮಿನಲ್ಲಿ ಸಂಗ್ರಹಿಸಿದ್ದ ನೂರಾರು ಕ್ವಿಂಟಲ್ ಅಕ್ಕಿ, ಗೋಧಿ ಮತ್ತು ರಾಗಿಯನ್ನು ಅನಧಿಕೃತವಾಗಿ ಹೊರಗೆ ಸಾಗಿಸಿ ಮಾರಾಟ ಮಾಡಿರುವ ಆರೋಪ ಇವರ ಮೇಲಿದೆ.

ಗೋದಾಮು ಸತತ ಮೂರು ದಿನಗಳ ಕಾಲ ತೆರೆಯದೇ ಇದ್ದ ಕಾರಣ ಅನುಮಾನಗೊಂಡ ಆಹಾರ ಶಿರಸ್ತೇದಾರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ವೇಳೆ ಗೋದಾಮಿಗೆ ಬೀಗ ಹಾಕಿರುವುದು ಗಮನಕ್ಕೆ ಬಂದಿದ್ದು, ತಕ್ಷಣ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.

ಬಳಿಕ ಅಧಿಕಾರಿಗಳು ಗೋದಾಮಿನ ದಾಸ್ತಾನನ್ನು ಪರಿಶೀಲಿಸಿದಾಗ ಅಕ್ಕಿ, ಗೋಧಿ ಹಾಗೂ ರಾಗಿಯ ಪ್ರಮಾಣದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದೆ. ಗೋದಾಮಿನಲ್ಲಿದ್ದ ದಾಸ್ತಾನನ್ನು ಅಕ್ರಮವಾಗಿ ಹೊರಗೆ ಸಾಗಿಸಿರುವ ಶಂಕೆ ಬಲವಾಗಿದ್ದು, ಒಟ್ಟು 86.65 ಲಕ್ಷ ರೂ. ಮೌಲ್ಯದ ಆಹಾರ ಧಾನ್ಯಗಳನ್ನು ಅಕ್ರಮವಾಗಿ ಮಾರಾಟ ಮಾಡಿರುವ ಆರೋಪ ಕೇಳಿಬಂದಿದೆ.

ಪ್ರಕರಣ ಬಹಿರಂಗವಾಗುತ್ತಿದ್ದಂತೆ ಆರೋಪಿತ ಅಧಿಕಾರಿ ಹಾಗೂ ಸಿಬ್ಬಂದಿ ತಲೆಮರೆಸಿಕೊಂಡಿದ್ದಾರೆ. ಸೂರ್ಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆ ಹಾಗೂ ಅಕ್ರಮ ದಾಸ್ತಾನು ಸಾಗಾಟದ ಸಂಪೂರ್ಣ ಜಾಲದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಕಾವೇರಿ ನೀರು ವಿವಾದ ಮತ್ತೆ ಸುಪ್ರೀಂ ಅಂಗಳಕ್ಕೆ: ಕರ್ನಾಟಕಕ್ಕೆ ತಕ್ಷಣ 4.536 ಟಿಎಂಸಿ ನೀರು ಬಿಡಲು ತಮಿಳುನಾಡು ಆಗ್ರಹ

0

ನವದೆಹಲಿ: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಕ್ಷಣವೇ ನೀರು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸಮ್ಮತಿಸಿದೆ.

ತಮಿಳುನಾಡು ಸರ್ಕಾರದ ಪರವಾಗಿ ಹಿರಿಯ ವಕೀಲ ಸಿ.ಎಸ್. ವೈದ್ಯನಾಥನ್ ಅವರು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಪೀಠದ ಮುಂದೆ ವಿಷಯ ಪ್ರಸ್ತಾಪಿಸಿ ತುರ್ತು ವಿಚಾರಣೆಗೆ ಮನವಿ ಮಾಡಿದರು. ಮನವಿಯನ್ನು ಪರಿಗಣಿಸಿದ ನ್ಯಾಯಪೀಠವು ಗುರುವಾರ ಅರ್ಜಿಯ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಜುಲೈ 30ರಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕದ ಕಬಿನಿ ಹಾಗೂ ಕೃಷ್ಣರಾಜ ಸಾಗರ ಜಲಾಶಯಗಳಿಂದ ದಿನಕ್ಕೆ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ಆದೇಶಿಸಲಾಗಿತ್ತು. ಈ ಆದೇಶವನ್ನು ಜಾರಿಗೊಳಿಸುವಂತೆ ತಮಿಳುನಾಡು ಸರ್ಕಾರ ಆಗಸ್ಟ್ 3ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ದಿನಕ್ಕೆ 3,500 ಕ್ಯೂಸೆಕ್‌ನಂತೆ 15 ದಿನಗಳ ಅವಧಿಯಲ್ಲಿ ಒಟ್ಟು 4.536 ಟಿಎಂಸಿ ನೀರನ್ನು ಆಗಸ್ಟ್ 12ರೊಳಗೆ ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ತಮಿಳುನಾಡು ತನ್ನ ಅರ್ಜಿಯಲ್ಲಿ ಕೋರಿದೆ.

ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ತಮಿಳುನಾಡಿನ ವಿರೋಧ ಪಕ್ಷ ದ್ರಾವಿಡ ಮುನ್ನೇತ್ರ ಕಳಗಂ ಕೂಡ ಪ್ರತ್ಯೇಕ ಅರ್ಜಿ ಸಲ್ಲಿಸಿದೆ. ಹೀಗಾಗಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಅಂಗಳಕ್ಕೆ ತಲುಪಿದ್ದು, ಗುರುವಾರದ ವಿಚಾರಣೆ ಮಹತ್ವ ಪಡೆದುಕೊಂಡಿದೆ.

ಬಲವಂತದ ರಾಜೀನಾಮೆ ಆರೋಪ: ರಾಜ್ಯಪಾಲರಿಗೆ ಹೊರಟ್ಟಿ, ಬಿಜೆಪಿ ದೂರು – ನಾವು ವಿವರಣೆ ನೀಡಿದ್ದೇವೆ ಎಂದ ಡಿಕೆಶಿ

0

ಬೆಂಗಳೂರು/ನವದೆಹಲಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿ ಬಸವರಾಜ ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದು, ಈ ಕುರಿತು ತಾವು ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿದ್ದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಪಕ್ಷದ ವರಿಷ್ಠರು ಹೈಕಮಾಂಡ್ ಆಗಿದ್ದು, ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮುಂದಿನ ಕ್ರಮಗಳ ಕುರಿತು ಚರ್ಚಿಸಿರುವುದಾಗಿ ಹೇಳಿದರು.

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಅವರು, ಬಸವರಾಜ ಹೊರಟ್ಟಿಯವರು ಸಂತೋಷದಿಂದಲೇ ರಾಜೀನಾಮೆ ನೀಡಿದ್ದರು. ಆದರೆ, ಇದೀಗ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ಹೇಳಿದರು.

ಬಿಜೆಪಿ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡು ಸಂವಿಧಾನಾತ್ಮಕ ಬಿಕ್ಕಟ್ಟು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು.

ಈ ವಿಚಾರವಾಗಿ ತಾವು ಮತ್ತು ಸಚಿವ ಯು.ಟಿ. ಖಾದರ್ ರಾಜ್ಯಪಾಲರನ್ನು ಭೇಟಿಯಾಗಿದ್ದೇವೆ. ಹೊರಟ್ಟಿಯವರು ಸ್ವಯಂ ಇಚ್ಛೆಯಿಂದಲೇ ರಾಜೀನಾಮೆ ನೀಡಿದ್ದಾರೆ ಎಂದು ರಾಜ್ಯಪಾಲರಿಗೆ ತಿಳಿಸಿದ್ದೇವೆ ಎಂದು ಸಿಎಂ ಹೇಳಿದರು.

ಒಂದು ವೇಳೆ ಅವರು ರಾಜೀನಾಮೆ ನೀಡದಿದ್ದರೆ, ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಪರಿಸ್ಥಿತಿ ಎದುರಾಗಿತ್ತು. ಆದರೆ, ಅದನ್ನು ತಪ್ಪಿಸಲು ಬಸವರಾಜ ಹೊರಟ್ಟಿಯವರೇ ಗೌರವಯುತವಾಗಿ ರಾಜೀನಾಮೆ ನೀಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಹೊರಟ್ಟಿಯವರು ಸ್ವತಃ ಟೈಪ್ ಮಾಡಿದ್ದ ರಾಜೀನಾಮೆಯನ್ನೇ ಸ್ವೀಕರಿಸಲಾಗಿದೆ. ಈ ಕುರಿತು ಹಿಂದಿನ ಉದಾಹರಣೆಗಳು, ಕಾನೂನು ಅಂಶಗಳು ಹಾಗೂ ಸಂಬಂಧಿತ ವಿಚಾರಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ರಾಜ್ಯಪಾಲರು ಕಾನೂನು ಚೌಕಟ್ಟಿನೊಳಗೆ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಹೊರಟ್ಟಿ ರಾಜ್ಯಪಾಲರಿಗೆ ನೀಡಿರುವ ದೂರಿನಲ್ಲಿ ಏನಿದೆ?

ಬಸವರಾಜ ಹೊರಟ್ಟಿ ಅವರು ರಾಜ್ಯಪಾಲರಿಗೆ ಸಲ್ಲಿಸಿರುವ ದೂರಿನಲ್ಲಿ, 2026ರ ಆಗಸ್ಟ್ 7ರಂದು ಕರ್ನಾಟಕ ವಿಧಾನ ಪರಿಷತ್ತಿನ ಆವರಣದಲ್ಲಿರುವ ತಮ್ಮ ಅಧಿಕೃತ ಕೊಠಡಿಯಲ್ಲಿ ನಡೆದ ಘಟನೆಗಳ ಕುರಿತು ವಿವರಿಸಿದ್ದಾರೆ.

ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರೊಬ್ಬರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಂಬಂಧಿಸಿದಂತೆ ತಾವು ಅಧಿಕೃತ ಕೊಠಡಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಕೆಲವು ಸದಸ್ಯರು ತಮ್ಮ ಕೊಠಡಿಗೆ ಆಗಮಿಸಿದ್ದರು ಎಂದು ಹೊರಟ್ಟಿ ದೂರಿನಲ್ಲಿ ತಿಳಿಸಿದ್ದಾರೆ.

ಆ ಸಂದರ್ಭದಲ್ಲಿ ಅದೇ ದಿನ ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ರಾಜೀನಾಮೆ ನೀಡುವಂತೆ ತಮ್ಮ ಬಳಿ ಪ್ರಸ್ತಾಪ ಮಾಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

ಆದರೆ, ಮುಂಬರುವ ಮುಂಗಾರು ಅಧಿವೇಶನವನ್ನು ಕರೆಯಲು ರಾಜ್ಯಪಾಲರು ಆದೇಶಿಸಿರುವ ಹಿನ್ನೆಲೆಯಲ್ಲಿ, ಆಗಸ್ಟ್ 14ರಂದು ಸದನದಲ್ಲಿ ವಿಧಾನ ಪರಿಷತ್ ಸದಸ್ಯರಿಗೆ ಧನ್ಯವಾದ ಮತ್ತು ಕೃತಜ್ಞತೆ ಸಲ್ಲಿಸಿದ ಬಳಿಕ ರಾಜೀನಾಮೆ ನೀಡುವುದು ತಮ್ಮ ಇಚ್ಛೆಯಾಗಿತ್ತು ಎಂದು ಹೊರಟ್ಟಿ ಹೇಳಿದ್ದಾರೆ.

ಈ ವಿಚಾರವನ್ನು ತಾವು ಈಗಾಗಲೇ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೆ. ಅಲ್ಲದೆ, ಇದೇ ವಿಷಯ ರಾಜ್ಯದ ಹಲವು ಮಾಧ್ಯಮಗಳಲ್ಲೂ ವರದಿಯಾಗಿತ್ತು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆದರೂ, ಮುಖ್ಯಮಂತ್ರಿ ಅದೇ ದಿನ ರಾಜೀನಾಮೆ ನೀಡುವಂತೆ ಸೂಚಿಸಿದರು. ತಮ್ಮ ಅಧಿಕೃತ ಕೊಠಡಿಯಲ್ಲಿ ನಡೆದ ಈ ದಿಢೀರ್ ಬೆಳವಣಿಗೆ ಅಚ್ಚರಿ ಮೂಡಿಸಿತು. ಪರಿಸ್ಥಿತಿಯನ್ನು ತಿಳಿಗೊಳಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳ ಕೋರಿಕೆಯ ಮೇರೆಗೆ ಆ ಕ್ಷಣದಲ್ಲಿ ರಾಜೀನಾಮೆ ನೀಡುವುದು ತಮ್ಮ ಕರ್ತವ್ಯವೆಂದು ಭಾವಿಸಿದ್ದಾಗಿ ಹೊರಟ್ಟಿ ದೂರಿನಲ್ಲಿ ತಿಳಿಸಿದ್ದಾರೆ. ಈ ಬೆಳವಣಿಗೆಯನ್ನು ರಾಜ್ಯಪಾಲರ ಗಮನಕ್ಕೆ ತರುವುದು ತಮ್ಮ ಕರ್ತವ್ಯವೆಂದು ಭಾವಿಸಿ ದೂರು ಸಲ್ಲಿಸಿರುವುದಾಗಿ ಅವರು ಹೇಳಿದ್ದಾರೆ.

ಸಿಎಂ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

ಇತ್ತ, ಬಿಜೆಪಿ ನಿಯೋಗವೂ ರಾಜ್ಯಪಾಲರನ್ನು ಭೇಟಿಯಾಗಿ ದೂರು ಸಲ್ಲಿಸಿದೆ. ಬಸವರಾಜ ಹೊರಟ್ಟಿಯವರಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿರುವ ಬಿಜೆಪಿ, ಈ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಮಾಡಿದೆ.

ಹೊರಟ್ಟಿ ಅವರ ಆರೋಪ, ಮುಖ್ಯಮಂತ್ರಿ ನೀಡಿರುವ ಸ್ಪಷ್ಟನೆ ಹಾಗೂ ಬಿಜೆಪಿ ದೂರು ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸಭಾಪತಿ ರಾಜೀನಾಮೆ ವಿಚಾರ ಇದೀಗ ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.