ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೊನೆ ಕ್ಷಣದಲ್ಲಿ ಸಚಿವರ ಪಟ್ಟಿಯಲ್ಲಿ ನಡೆದ ಬದಲಾವಣೆ ಹಾಗೂ ಪಕ್ಷದೊಳಗಿನ ಗೊಂದಲಗಳ ಕುರಿತು ನೂತನ ಸಚಿವರಾಗಿ ಆಯ್ಕೆಯಾಗಿರುವ ದಾವಣಗೆರೆ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವರ ಪಟ್ಟಿಯಲ್ಲಿ ಕೊನೆಯ ಕ್ಷಣದಲ್ಲಿ ಏಕೆ ಬದಲಾವಣೆ ನಡೆದಿದೆ ಎಂಬ ಮಾಹಿತಿ ತಮ್ಮ ಬಳಿ ಇಲ್ಲ ಎಂದು ಸ್ಪಷ್ಟಪಡಿಸಿದರು.
“ಪಟ್ಟಿಯಲ್ಲಿ ಕೊನೆ ಕ್ಷಣದಲ್ಲಿ ಯಾಕೆ ಬದಲಾವಣೆ ಆಯಿತು ಎಂಬುದು ನನಗೆ ಗೊತ್ತಿಲ್ಲ. ಮುಖ್ಯಮಂತ್ರಿ ಅವರು ಅವಕಾಶ ನೀಡಲಾಗಿದೆ, ಬನ್ನಿ ಎಂದು ಕರೆದ ಹಿನ್ನೆಲೆಯಲ್ಲಿ ನಾನು ಬಂದಿದ್ದೇನೆ. ಮಂಕಾಳು ವೈದ್ಯ ಅವರ ಹೆಸರು ತಪ್ಪಾಗಿ (ಬೈ ಮಿಸ್ಟೇಕ್) ಪಟ್ಟಿಯಲ್ಲಿ ಸೇರಿತ್ತು ಎಂದು ನನಗೆ ತಿಳಿಸಲಾಗಿದೆ” ಎಂದು ಹೇಳಿದರು.
ಸಚಿವ ಸ್ಥಾನ ಸಿಗದಿದ್ದರೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಸಚಿವ ಸ್ಥಾನಕ್ಕಾಗಿ ನಾನು ಯಾವುದೇ ರಾಜೀನಾಮೆ ಬೆದರಿಕೆ ಹಾಕಿಲ್ಲ. ಈ ಬಗ್ಗೆ ನನ್ನೊಂದಿಗೆ ಯಾವುದೇ ಚರ್ಚೆಯೂ ನಡೆದಿಲ್ಲ” ಎಂದು ಸ್ಪಷ್ಟನೆ ನೀಡಿದರು.
ತಮಗೆ ಸಚಿವ ಸ್ಥಾನ ನೀಡಿರುವ ಕುರಿತು ಮಾತನಾಡಿದ ಅವರು, ಜಿಲ್ಲಾವಾರು ಹಾಗೂ ಜಾತಿ ಸಮೀಕರಣವನ್ನು ಪರಿಗಣಿಸಿ ಪಕ್ಷದ ನಾಯಕತ್ವ ಈ ಅವಕಾಶ ನೀಡಿದೆ ಎಂದು ಹೇಳಿದರು.
“ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರು ಸೇರಿದಂತೆ ಎಲ್ಲ ಸಮುದಾಯಗಳಿಗೂ ಸಮಾನ ಪ್ರಾತಿನಿಧ್ಯ ನೀಡುವ ಉದ್ದೇಶದಿಂದಲೇ ಸಚಿವ ಸಂಪುಟ ರಚಿಸಲಾಗಿದೆ” ಎಂದು ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.
ಪಕ್ಷದೊಳಗಿನ ಅಸಮಾಧಾನ ಹಾಗೂ ಸಚಿವರ ಪಟ್ಟಿಯಲ್ಲಿ ನಡೆದ ಬದಲಾವಣೆಗಳ ಕುರಿತು ಸ್ಪಷ್ಟ ಮಾಹಿತಿ ಇಲ್ಲ ಎಂದು ಹೇಳಿದ ಅವರು, “ಈಗ ಹೋಗಿ ಪರಿಸ್ಥಿತಿ ನೋಡಬೇಕಿದೆ. ಯಾವುದೇ ಗೊಂದಲಗಳಿದ್ದರೂ ಪಕ್ಷದ ಹಿರಿಯ ನಾಯಕರು ಹಾಗೂ ಮುಖ್ಯಮಂತ್ರಿ ಎಲ್ಲವನ್ನೂ ಸರಿಪಡಿಸಲಿದ್ದಾರೆ. ಸಿಎಂ ಅವರನ್ನು ಭೇಟಿ ಮಾಡಿ ಮುಂದಿನ ಹೆಜ್ಜೆ ಇಡುತ್ತೇನೆ” ಎಂದು ತಿಳಿಸಿದರು.

