ವಿಜಯಸಾಕ್ಷಿ ಸುದ್ದಿ, ಗದಗ: ಬೆಟಗೇರಿಯ ಯಡಿಯೂರ ಶ್ರೀ ಸಿದ್ದಲಿಂಗೇಶ್ವರ ನಗರದ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು ಹಾಗೂ ಪ್ರದೇಶವನ್ನು ಸ್ಲಂ ಎಂದು ಘೋಷಿಸಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಶ್ರಮಿಕರ, ಕೂಲಿ ಕಾರ್ಮಿಕರ, ನೇಕಾರರ ಹಾಗೂ ರೈತರ ಹೋರಾಟ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಮಂಜುನಾಥ ಎಚ್. ಮುಳಗುಂದ ಅವರ ಮುಂದಾಳತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ದ್ವಾರಬಾಗಿಲ ಬಳಿ ಧರಣಿ ನಡೆಸಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು.
ಈ ವೇಳೆ ಮಾತನಾಡಿದ ಮಂಜುನಾಥ ಮುಳಗುಂದ, ಗದಗ-ಬೆಟಗೇರಿ ಅವಳಿ ನಗರದ ವಾರ್ಡ್ ನಂ. 6ರ ವ್ಯಾಪ್ತಿಯ ಯಡಿಯೂರ ಸಿದ್ದಲಿಂಗೇಶ್ವರ ನಗರದಲ್ಲಿ ಕಳೆದ 25 ವರ್ಷಗಳಿಂದ 400ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಇದುವರೆಗೂ ಯಾವುದೇ ಮೂಲಭೂತ ಸೌಲಭ್ಯಗಳು ದೊರೆತಿಲ್ಲ ಎಂದು ಆರೋಪಿಸಿದರು.
ಈ ಪ್ರದೇಶದಲ್ಲಿ ಕೂಲಿ ಕಾರ್ಮಿಕರು, ಬಡವರು, ನಿರ್ಗತಿಕರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಆದರೆ ರಸ್ತೆ, ಗಟಾರ, ಕುಡಿಯುವ ನೀರು, ಬೀದಿ ದೀಪ ಸೇರಿದಂತೆ ಅಗತ್ಯ ಸೌಲಭ್ಯಗಳಿಂದ ವಂಚಿತರಾಗಿದ್ದು, ಜನರು ಸಂಕಷ್ಟದ ಬದುಕು ನಡೆಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಿವಾಸಿಗಳಿಗೆ ಹಕ್ಕುಪತ್ರ ಹಾಗೂ ಮನೆಗಳ ಉತಾರಾ (ಫಾರ್ಮ್ ನಂ. 3) ಇಲ್ಲದ ಕಾರಣ ಅನೇಕ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಯಡಿಯೂರ ಸಿದ್ದಲಿಂಗೇಶ್ವರ ನಗರವನ್ನು ಸ್ಲಂ ಪ್ರದೇಶವೆಂದು ಘೋಷಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಶಂಕ್ರಪ್ಪ ಮಾಳಶೆಟ್ಟಿ, ಮುತ್ತು ರೊಟ್ಟಿ, ಬಸೀರ್ ಚಿನ್ನೂರ, ಪ್ರಶಾಂತ್ ಅಣ್ಣಿಗೇರಿ, ಮಲ್ಲಪ್ಪ ಕಾಯಕಟ್ಟಿ, ಮಂಜುನಾಥ ಬ್ಯಾಳಿ, ರಾಜು ಸಿಂಗಾಡೆ, ಅಭಿಷೇಕ್ ನವಲೆ, ಮಂಜುನಾಥ ಬಡಿಗೇರ, ಸಂತೋಷ ದಿವೂಟೆ, ರವಿ ದಿವೂಟೆ, ಮುತ್ತು ಛಲವಾದಿ, ನಾರಾಯಣ ಖಾಟವಾ, ಮಲ್ಲೇಶ ಜಂತ್ಲಿ ಸೇರಿದಂತೆ ಹಲವರು ಭಾಗವಹಿಸಿದ್ದರು.
“25 ವರ್ಷಗಳಿಂದ ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಹಕ್ಕುಪತ್ರವೂ ಇಲ್ಲ, ಮೂಲಭೂತ ಸೌಲಭ್ಯಗಳೂ ಇಲ್ಲ. ಸಿದ್ದಲಿಂಗೇಶ್ವರ ನಗರವನ್ನು ಸ್ಲಂ ಎಂದು ಘೋಷಿಸಿ ಜನರ ಬದುಕಿಗೆ ಭದ್ರತೆ ಕಲ್ಪಿಸಬೇಕು.”
— ಮಂಜುನಾಥ ಎಚ್. ಮುಳಗುಂದ, ಹೋರಾಟ ಸಮಿತಿ ಅಧ್ಯಕ್ಷ


