Home Blog

ಪ್ರೀತಿಯಿಂದ ಆರಂಭವಾಗಿ ‘ಹಿಟ್ಲರ್ ಕಲ್ಯಾಣ’ವರೆಗೂ: ದಿಲೀಪ್ ರಾಜ್-ಶ್ರೀವಿದ್ಯಾ ಜೋಡಿಯ ಯಶೋಗಾಥೆ

ನಟ ದಿಲೀಪ್ ರಾಜ್ ನಿಧನವು ಕನ್ನಡ ಕಿರುತೆರೆಗೆ ದೊಡ್ಡ ನಷ್ಟ ತಂದಿದೆ. ಆದರೆ ಅವರು ಪತ್ನಿ ಶ್ರೀವಿದ್ಯಾ ಜೊತೆ ಸೇರಿ ಕಟ್ಟಿದ ಯಶಸ್ವಿ ಜೀವನ ಮತ್ತು ನಿರ್ಮಾಣ ಸಂಸ್ಥೆಯ ಪಯಣ ಇಂದು ಮತ್ತೆ ಚರ್ಚೆಗೆ ಬಂದಿದೆ.

ದಿಲೀಪ್ ರಾಜ್ ಮತ್ತು ಶ್ರೀವಿದ್ಯಾ ಕೇವಲ ದಂಪತಿಗಳಲ್ಲ, ವೃತ್ತಿಜೀವನದಲ್ಲೂ ಯಶಸ್ವಿ ಪಾಲುದಾರರಾಗಿದ್ದರು. ಕಾಲೇಜು ದಿನಗಳ ಪರಿಚಯ ಪ್ರೀತಿಗೆ ತಿರುಗಿ ನಂತರ ವಿವಾಹವಾಗಿ ಇಬ್ಬರೂ ಜೀವನ ಪಯಣ ಆರಂಭಿಸಿದ್ದರು. ನಟನಾಗಿ ಗುರುತಿಸಿಕೊಂಡಿದ್ದ ದಿಲೀಪ್ ರಾಜ್ ಅವರಿಗೆ ಪ್ರತಿಯೊಂದು ಹಂತದಲ್ಲೂ ಶ್ರೀವಿದ್ಯಾ ಬೆಂಬಲವಾಗಿ ನಿಂತಿದ್ದರು. ನಂತರ ಇಬ್ಬರೂ ಸೇರಿ ‘ಡಿ2ಆರ್ ಮೀಡಿಯಾ ಪ್ರೊಡಕ್ಷನ್ಸ್’ ಸಂಸ್ಥೆ ಆರಂಭಿಸಿ ನಿರ್ಮಾಣ ಕ್ಷೇತ್ರಕ್ಕೂ ಕಾಲಿಟ್ಟರು.

ಶ್ರೀವಿದ್ಯಾ ನಿರ್ಮಾಣದ ಹಣಕಾಸು ಮತ್ತು ಆಡಳಿತ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರೆ, ದಿಲೀಪ್ ರಾಜ್ ಕಥೆ, ಕಲಾವಿದರು ಮತ್ತು ಕ್ರಿಯೇಟಿವ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು. ಈ ಜೋಡಿಯ ಸಂಯುಕ್ತ ಪರಿಶ್ರಮದಿಂದ ‘ಹಿಟ್ಲರ್ ಕಲ್ಯಾಣ’, ‘ಪಾರು’, ‘ಕೃಷ್ಣ ರುಕ್ಕು’ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳು ಮೂಡಿಬಂದವು.

ಜೀ ಕನ್ನಡದ ಸೂಪರ್ ಹಿಟ್ ಧಾರಾವಾಹಿ ‘ಹಿಟ್ಲರ್ ಕಲ್ಯಾಣ’ ಇವರಿಬ್ಬರ ಕನಸಿನ ಪ್ರಾಜೆಕ್ಟ್ ಆಗಿತ್ತು. ದಿಲೀಪ್ ರಾಜ್ ಅದರಲ್ಲಿ ನಾಯಕನಾಗಿ ಅಭಿನಯಿಸಿದ್ದರೆ, ನಿರ್ಮಾಣದ ಹೊಣೆಗಾರಿಕೆಯನ್ನು ಇಬ್ಬರೂ ಸಮರ್ಥವಾಗಿ ನಿಭಾಯಿಸಿದ್ದರು. ಕಿರುತೆರೆಯಲ್ಲಿ ಯಶಸ್ಸಿನ ಜೊತೆಗೆ ನೂರಾರು ತಂತ್ರಜ್ಞರು ಮತ್ತು ಕಲಾವಿದರಿಗೆ ಅವಕಾಶ ನೀಡಿದ ಈ ಜೋಡಿ ಸದಾ ನಗುಮುಖದಿಂದ ಕೆಲಸ ಮಾಡುತ್ತಿತ್ತು. ವೈಯಕ್ತಿಕ ಮತ್ತು ವೃತ್ತಿ ಜೀವನವನ್ನು ಸಮತೋಲನದಿಂದ ಮುನ್ನಡೆಸಿದ ಇವರ ಬಾಂಧವ್ಯ ಅನೇಕರಿಗೆ ಮಾದರಿಯಾಗಿತ್ತು.

ದಿಲೀಪ್ ರಾಜ್ ಇಂದು ನಮ್ಮೊಂದಿಗಿಲ್ಲ. ಆದರೆ ಅವರು ಮತ್ತು ಶ್ರೀವಿದ್ಯಾ ಸೇರಿ ಕಟ್ಟಿದ ಸೃಜನಶೀಲ ಪಯಣ ಹಾಗೂ ಕನ್ನಡ ಕಿರುತೆರೆಗೆ ನೀಡಿದ ಧಾರಾವಾಹಿಗಳು ಸದಾ ನೆನಪಿನಲ್ಲಿರಲಿವೆ.

‘ನಾನು ಕೈಬೀಸಿದರೂ ಯಾರೂ ನೋಡಲಿಲ್ಲ’: ಆಶ್ರಮದ ಅನುಭವ ಹೇಳಿ ಭಾವುಕರಾದ ರಜನಿಕಾಂತ್

ಸೂಪರ್‌ಸ್ಟಾರ್ ರಜನಿಕಾಂತ್ ಭಾಗವಹಿಸಿದ್ದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವಿಶೇಷ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀ ಶ್ರೀ ರವಿಶಂಕರ್ ಆಶ್ರಮದಲ್ಲಿ ನಡೆದ ಒಂದು ಘಟನೆ ತಮ್ಮ ಅಹಂಕಾರವನ್ನು ಹೇಗೆ ಮಣ್ಣುಪಾಲು ಮಾಡಿತು ಎಂಬುದನ್ನು ಹಂಚಿಕೊಂಡರು.

‘ನಾನು ಆಶ್ರಮಕ್ಕೆ ಎರಡು ದಿನ ಮಾತ್ರ ಹೋಗಿದ್ದೆ. ಆದರೆ ಅಲ್ಲಿನ ವಾತಾವರಣ ನೋಡಿ 15 ದಿನ ಉಳಿದುಬಿಟ್ಟೆ. ಸುತ್ತಲೂ ಹಸಿರು, ಕೆರೆ, ಪ್ರಾಣಿಗಳು, ಸಂತೋಷದಿಂದಿರುವ ಜನರನ್ನು ನೋಡಿ ಮನಸ್ಸಿಗೆ ತುಂಬಾ ಶಾಂತಿ ಸಿಕ್ಕಿತ್ತು. ಅಲ್ಲಿನ ಒಂದು ಕುದುರೆಯ ಹೆಸರು “ರಜಿನಿ” ಎಂದು ಕೇಳಿ ನನಗೆ ಆಶ್ಚರ್ಯವಾಯಿತು’ ಎಂದು ಅವರು ಹೇಳಿದರು.

ಮುಂದೆ ಮಾತನಾಡಿದ ರಜನಿಕಾಂತ್, ‘ಆ ಸಮಯದಲ್ಲಿ ನಾನು ವೃತ್ತಿಜೀವನದ ಪೀಕ್‌ನಲ್ಲಿದ್ದೆ. ಗುರೂಜಿ ಆಶ್ರಮದ ಸುತ್ತ ಒಂದು ಸುತ್ತು ಹಾಕೋಣ ಎಂದರು. ಜನರು ನನ್ನನ್ನು ಗುರುತಿಸಿ ಆಟೋಗ್ರಾಫ್ ಕೇಳಬಹುದು ಎಂದು ನಾನು ಭಾವಿಸಿದ್ದೆ. ಆದರೆ ಅಲ್ಲಿ ಯಾರೂ ನನ್ನತ್ತ ನೋಡಲೇ ಇಲ್ಲ’ ಎಂದು ನಗುತ್ತಲೇ ಹೇಳಿದರು.

‘ನಾನು ಕೈಬೀಸುತ್ತಿದ್ದರೂ ಯಾರೂ ಪ್ರತಿಕ್ರಿಯಿಸಲಿಲ್ಲ. ಆಗ ನನಗೆ ದೊಡ್ಡ ಪಾಠ ಸಿಕ್ಕಿತು. ಅಧ್ಯಾತ್ಮದ ಮುಂದೆ ಸಿನಿಮಾ ಸ್ಟಾರ್‌ಡಮ್ ತುಂಬಾ ಚಿಕ್ಕದು ಅನ್ನೋದು ಅರ್ಥವಾಯಿತು’ ಎಂದು ಅವರು ಹೇಳಿದರು.

ಸಿನಿಮಾ ಖ್ಯಾತಿ ಕ್ಷಣಿಕ, ಆದರೆ ಆಧ್ಯಾತ್ಮಿಕ ಶಕ್ತಿ ಶಾಶ್ವತ ಎಂದು ಹೇಳಿದ ರಜನಿಕಾಂತ್, ‘ಆಧ್ಯಾತ್ಮಿಕ ಸ್ಟಾರ್‌ಡಮ್ ಸಾವಿನ ನಂತರವೂ ಉಳಿಯುತ್ತದೆ’ ಎಂದು ಅಭಿಪ್ರಾಯಪಟ್ಟರು.

ಇಂದು ಸಂಜೆ ರಾಮನಗರದ ಫಾರ್ಮ್‌ಹೌಸ್‌ʼನಲ್ಲಿ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ!

ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. 47 ವರ್ಷದ ದಿಲೀಪ್ ರಾಜ್ ಇಂದು ಮುಂಜಾನೆ ಹೃದಯಾಘಾತಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಅಪೋಲೊ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಇಂದು ಸಂಜೆ ರಾಮನಗರ ತಾಲೂಕಿನ ಗುನ್ನೂರು ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದ್ದು, ಈ ಹಿನ್ನೆಲೆ ಗ್ರಾಮಸ್ಥರು ಹಾಗೂ ಸಿಬ್ಬಂದಿ ಅಂತ್ಯಕ್ರಿಯೆಗೆ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದ್ದಾರೆ.

ಸುಮಾರು 10 ವರ್ಷಗಳ ಹಿಂದೆ ದಿಲೀಪ್ ರಾಜ್ ಗುನ್ನೂರು ಗ್ರಾಮದಲ್ಲಿ ಒಂದು ಎಕರೆ ಜಮೀನು ಖರೀದಿಸಿ, ಅಲ್ಲಿ ತೋಟ ಹಾಗೂ ಫಾರ್ಮ್‌ಹೌಸ್ ನಿರ್ಮಿಸಿದ್ದರು. ಅವರು ತಿಂಗಳಿಗೊಮ್ಮೆ ಅಲ್ಲಿಗೆ ಭೇಟಿ ನೀಡುತ್ತಿದ್ದರು ಎಂದು ತಿಳಿದುಬಂದಿದೆ.

‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಮೂಲಕ ದಿಲೀಪ್ ರಾಜ್ ಮತ್ತೆ ಕಿರುತೆರೆಗೆ ಮರಳಿದ್ದರು. ಆ ಧಾರಾವಾಹಿಯಲ್ಲಿನ ಅವರ ಪಾತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಮೆಚ್ಚುಗೆ ವ್ಯಕ್ತವಾಗಿತ್ತು. ಸಿನಿಮಾ ಮತ್ತು ಕಿರುತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ನಟನಷ್ಟೇ ಅಲ್ಲದೆ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು.

2005ರಲ್ಲಿ ಬಿಡುಗಡೆಯಾದ ‘ಬಾಯ್‌ಫ್ರೆಂಡ್’ ಚಿತ್ರದ ಮೂಲಕ ನಾಯಕನಾಗಿ ಸಿನಿರಂಗ ಪ್ರವೇಶಿಸಿದ್ದ ದಿಲೀಪ್ ರಾಜ್, ‘ಮಿಲನ’ ಚಿತ್ರದಲ್ಲಿ ವಿಲನ್ ಪಾತ್ರದ ಮೂಲಕ ಹೆಚ್ಚು ಜನಪ್ರಿಯತೆ ಪಡೆದಿದ್ದರು. ‘ಸುಗ್ರೀವ’, ‘ಗೆಳೆಯ’, ‘ಯೂ ಟರ್ನ್’ ಸೇರಿದಂತೆ ಸುಮಾರು 28ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.

ಇದೇ ವೇಳೆ ‘ಕೃಷ್ಣ ರುಕ್ಕು’ ಧಾರಾವಾಹಿಯನ್ನು ನಿರ್ಮಿಸುತ್ತಿದ್ದ ಅವರು, ‘ಮನೆಯೊಂದು ಮೂರು ಬಾಗಿಲು’, ‘ರಥಸಪ್ತಮಿ’, ‘ಪ್ರೀತಿಗಾಗಿ’ ಸೇರಿದಂತೆ ಹಲವು ಧಾರಾವಾಹಿಗಳಲ್ಲೂ ಅಭಿನಯಿಸಿದ್ದರು. ಕೊನೆಯದಾಗಿ ‘ಲವ್ ಮಾಕ್‌ಟೇಲ್ 3’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ದಿಲೀಪ್ ರಾಜ್ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದು, ಅವರ ಅಗಲಿಕೆಯಿಂದ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.

ನಿಧಾನಗತಿಯ ಬೌಲಿಂಗ್: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ʼಗೆ 12 ಲಕ್ಷ ರೂ. ದಂಡ

ನವದೆಹಲಿ: ಸೋಮವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 55ನೇ ಪಂದ್ಯದಲ್ಲಿ ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 3 ವಿಕೆಟ್‌ಗಳ ರೋಚಕ ಜಯ ದಾಖಲಿಸಿದೆ. ಆದರೆ ತಂಡವನ್ನು ಗೆಲುವಿನ ದಡ ಸೇರಿಸಿದ ಅಕ್ಷರ್ ಪಟೇಲ್‌ಗೆ ಪಂದ್ಯದ ಬಳಿಕ ಭಾರೀ ದಂಡ ವಿಧಿಸಲಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 210 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಸವಾಲಿನ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದ್ದು, ಕೇವಲ 33 ರನ್‌ಗಳಿಗೆ 3 ಪ್ರಮುಖ ವಿಕೆಟ್ ಕಳೆದುಕೊಂಡಿತ್ತು.

ಇದಾದ ಬಳಿಕ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಅಕ್ಷರ್ ಪಟೇಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 30 ಎಸೆತಗಳಲ್ಲಿ 56 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ ಅವರು ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ಅವರ ಅದ್ಭುತ ಪ್ರದರ್ಶನದ ನೆರವಿನಿಂದ ಡೆಲ್ಲಿ ತಂಡ ರೋಚಕವಾಗಿ ಪಂದ್ಯವನ್ನು ತನ್ನದಾಗಿಸಿಕೊಂಡಿತು.

ಆದರೆ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಧಾನಗತಿಯ ಓವರ್ ದರ ಕಾಯ್ದುಕೊಂಡ ಕಾರಣ ನಾಯಕ ಅಕ್ಷರ್ ಪಟೇಲ್‌ಗೆ ₹12 ಲಕ್ಷ ದಂಡ ವಿಧಿಸಲಾಗಿದೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22ರ ಪ್ರಕಾರ, ಕನಿಷ್ಠ ಓವರ್ ದರ ಉಲ್ಲಂಘನೆಗೆ ಈ ದಂಡ ವಿಧಿಸಲಾಗಿದೆ.

ಈ ಕುರಿತು ಐಪಿಎಲ್ ಪ್ರಕಟಣೆ ಹೊರಡಿಸಿದ್ದು, ಪ್ರಸ್ತುತ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೊದಲ ನಿಧಾನಗತಿಯ ಓವರ್ ದರ ಉಲ್ಲಂಘನೆ ಇದಾಗಿರುವುದರಿಂದ ನಾಯಕ ಅಕ್ಷರ್ ಪಟೇಲ್ ಅವರಿಗೆ ₹12 ಲಕ್ಷ ದಂಡ ವಿಧಿಸಲಾಗಿದೆ ಎಂದು ತಿಳಿಸಿದೆ.

ಇಂಧನ ಉಳಿತಾಯಕ್ಕೆ ಪ್ರಧಾನಿ ಮೋದಿ ಮಹತ್ವದ ಹೆಜ್ಜೆ; ಬೆಂಗಾವಲು ವಾಹನಗಳ ಸಂಖ್ಯೆ ಶೇ.50ರಷ್ಟು ಕಡಿತ

ನವದೆಹಲಿ: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ, ಇರಾನ್-ಅಮೆರಿಕ ನಡುವಿನ ಸಂಘರ್ಷ ಹಾಗೂ ಜಾಗತಿಕ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಏರಿಕೆಯ ಹಿನ್ನೆಲೆ ದೇಶದಲ್ಲಿ ಇಂಧನ ಉಳಿತಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಕ್ರಮ ಕೈಗೊಂಡಿದ್ದಾರೆ. ವಿಶೇಷ ಭದ್ರತಾ ಪಡೆ ಬಳಸುವ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಶೇ.50ರಷ್ಟು ಕಡಿತಗೊಳಿಸಲು ಸೂಚನೆ ನೀಡಲಾಗಿದೆ.

ಮಿತವ್ಯಯ ಕ್ರಮಗಳ ಭಾಗವಾಗಿ ಇತ್ತೀಚೆಗೆ ನಡೆದ ಗುಹಾವಾಟಿ ಮತ್ತು ವಡೋದರಾ ಭೇಟಿಗಳ ಸಂದರ್ಭದಲ್ಲೂ ಕಡಿಮೆ ವಾಹನಗಳೊಂದಿಗೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. ಈ ಮೂಲಕ ಸಾರ್ವಜನಿಕರಿಗೆ ಮಾತ್ರವಲ್ಲ, ಸರ್ಕಾರವೂ ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳನ್ನು ಅನುಸರಿಸುತ್ತಿದೆ ಎಂಬ ಸಂದೇಶ ರವಾನಿಸಲಾಗಿದೆ.

ಇದಲ್ಲದೆ, ಪ್ರಧಾನಿ ಭದ್ರತೆಗೆ ಬಳಸುವ ಕೆಲವು ವಿಶೇಷ ಬೆಂಗಾವಲು ವಾಹನಗಳಲ್ಲಿ ಎಲೆಕ್ಟ್ರಿಕ್ ಕಾರುಗಳ ಬಳಕೆಗೆ ಸಹ ಅನುಮತಿ ನೀಡಲಾಗಿದೆ. ಇಂಧನ ಬಳಕೆಯನ್ನು ತಗ್ಗಿಸುವುದರ ಜೊತೆಗೆ ಪರಿಸರ ಸ್ನೇಹಿ ಸಂಚಾರ ವ್ಯವಸ್ಥೆಗೆ ಸರ್ಕಾರ ಒತ್ತು ನೀಡುತ್ತಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪ್ರಧಾನ ಮಂತ್ರಿಗಳ ಕಚೇರಿ, ಪ್ರಧಾನಿ ಮೋದಿ ಭಾಷಣದ ಪ್ರತಿಗಳನ್ನು ಹಂಚಿಕೆ ಮಾಡಿದೆ ಎನ್ನಲಾಗಿದೆ. ಅದರಲ್ಲಿ ಜಾಗತಿಕ ಸಂಕಷ್ಟದ ಸಂದರ್ಭದಲ್ಲಿ ಅನುಸರಿಸಬೇಕಾದ ಮಿತವ್ಯಯ ಕ್ರಮಗಳು ಮತ್ತು ಕಾರ್ಯಯೋಜನೆಗಳ ಕುರಿತು ವಿವರಿಸಲಾಗಿದೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರದ ಕಾರ್ಯಯೋಜನೆಯಡಿ ನಾಗರಿಕರಿಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು, ಅನಗತ್ಯ ಇಂಧನ ಬಳಕೆಯನ್ನು ಕಡಿಮೆ ಮಾಡಲು ಹಾಗೂ ಅಗತ್ಯವಿಲ್ಲದ ಪ್ರಯಾಣಗಳನ್ನು ತಪ್ಪಿಸಲು ಕರೆ ನೀಡಲಾಗಿದೆ. ಸಭೆಗಳು ಮತ್ತು ಅಧಿಕೃತ ಕಾರ್ಯಗಳನ್ನು ಸಾಧ್ಯವಾದಷ್ಟು ಆನ್‌ಲೈನ್ ಮೂಲಕ ನಡೆಸುವಂತೆ ಸೂಚಿಸಲಾಗಿದೆ.

ಪಶ್ಚಿಮ ಏಷ್ಯಾದ ಅಸ್ಥಿರತೆಯಿಂದ ಉಂಟಾಗಿರುವ ಜಾಗತಿಕ ಆರ್ಥಿಕ ಒತ್ತಡಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಡಳಿತದ ಕಾರ್ಯಕ್ಷಮತೆ ಮತ್ತು ಭದ್ರತಾ ಮಾನದಂಡಗಳನ್ನು ಕಾಪಾಡಿಕೊಂಡೇ ಸರ್ಕಾರಗಳು ಹಾಗೂ ಜನಪ್ರತಿನಿಧಿಗಳು ಪ್ರಾಯೋಗಿಕ ಮಿತವ್ಯಯ ಕ್ರಮಗಳನ್ನು ಅನುಸರಿಸಬೇಕು ಎಂಬುದು ಪ್ರಧಾನಿ ಮೋದಿ ಆಶಯವಾಗಿದೆ ಎಂದು ಹೇಳಲಾಗಿದೆ.

ಈ ಕ್ರಮಗಳ ಪರಿಣಾಮ ಈಗಾಗಲೇ ಬಿಜೆಪಿ ಆಡಳಿತದ ಹಲವು ರಾಜ್ಯಗಳಲ್ಲಿ ಕಾಣಿಸಿಕೊಳ್ಳತೊಡಗಿದ್ದು, ಹಲವಾರು ನಾಯಕರು ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಕಡಿತಗೊಳಿಸಲು ಮುಂದಾಗಿದ್ದಾರೆ.

ಮಂಗಳೂರಿನಲ್ಲಿ 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಜಪ್ತಿ: ಕಾಲೇಜು ವಿದ್ಯಾರ್ಥಿನಿ ಅರೆಸ್ಟ್

ಮಂಗಳೂರು: ಕರಾವಳಿ ಭಾಗದಲ್ಲಿ ಮಾದಕ ದ್ರವ್ಯ ಜಾಲ ಎಷ್ಟು ಆಳವಾಗಿ ವ್ಯಾಪಿಸಿದೆ ಎಂಬುದಕ್ಕೆ ಸಾಕ್ಷಿಯಾಗುವಂತೆ ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದುಬಾರಿ ಮಾದಕ ವಸ್ತುವಿನೊಂದಿಗೆ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಿವಾಸಿ ಸುಹಾನ (21) ಎಂದು ಗುರುತಿಸಲಾಗಿದೆ. ಈಕೆ ಕುಂದಾಪುರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋವಿಡ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ ಹಾಗೂ ಇತರ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ, ಸುಹಾನ ಚೆನ್ನೈನಿಂದ ಈ ಮಾದಕ ವಸ್ತುವನ್ನು ಮಂಗಳೂರಿಗೆ ಸಾಗಾಟ ಮಾಡಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ. ಕರಾವಳಿ ಭಾಗದ ಕಾಲೇಜು ವಿದ್ಯಾರ್ಥಿಗಳು ಮತ್ತು ಶ್ರೀಮಂತ ಗ್ರಾಹಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಸಂಪಾದಿಸುವ ಉದ್ದೇಶ ಹೊಂದಿದ್ದಳು ಎನ್ನಲಾಗಿದೆ.

ಇನ್ನೂ ಆತಂಕಕಾರಿ ಸಂಗತಿ ಎಂದರೆ, ಕೇವಲ 21 ವರ್ಷದ ಈ ವಿದ್ಯಾರ್ಥಿನಿ ಈಗಾಗಲೇ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಹಿಂದೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು,

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆಯಲ್ಲೂ ಈಕೆಯ ವಿರುದ್ಧ ಮಾದಕ ದ್ರವ್ಯ ಸಾಗಾಟ ಸಂಬಂಧ ಪ್ರಕರಣ ದಾಖಲಾಗಿರುವುದು ಪತ್ತೆಯಾಗಿದೆ. ಪ್ರಸ್ತುತ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಜಾಲದ ಹಿಂದೆ ಇರುವ ಪ್ರಮುಖ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

Sonia Gandhi Hospitalised: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು!

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಬುಧವಾರ ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಎಐಸಿಸಿ ಮಾಜಿ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಆದರೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಆಸ್ಪತ್ರೆ ಆಡಳಿತದಿಂದ ಇನ್ನೂ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಝಿಕ್ಕೋಡ್‌ನಲ್ಲಿ ನಡೆದ ರ್ಯಾಲಿಯಲ್ಲಿ ವರ್ಚುವಲ್ ಮೂಲಕ ಭಾಗವಹಿಸಿ ಮಾಹಿತಿ ಹಂಚಿಕೊಂಡರು. ತಾವು ಕಾರ್ಯಕ್ರಮಕ್ಕೆ ನೇರವಾಗಿ ಹಾಜರಾಗಬೇಕಾಗಿತ್ತು. ಆದರೆ ತಮ್ಮ ತಾಯಿ ಆಸ್ಪತ್ರೆಗೆ ದಾಖಲಾಗಿರುವ ಕಾರಣ ಅವರ ಜೊತೆಯಲ್ಲೇ ಉಳಿಯಲು ತೀರ್ಮಾನಿಸಿದ್ದಾಗಿ ರಾಹುಲ್ ಗಾಂಧಿ ತಿಳಿಸಿದರು.

“ನಾನು ಕಾರ್ಯಕ್ರಮಕ್ಕೆ ಬರಬೇಕಿತ್ತು. ಆದರೆ ನನ್ನ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಗನಾಗಿ ಅವರ ಬಗ್ಗೆ ಕಾಳಜಿ ವಹಿಸುವುದು ನನ್ನ ಜವಾಬ್ದಾರಿ. ಆದ್ದರಿಂದ ಅವರೊಂದಿಗೆ ಇರಲು ನಿರ್ಧರಿಸಿದ್ದೇನೆ. ಕೇರಳದ ಜನರು ಇದನ್ನು ಅರ್ಥಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ” ಎಂದು ರಾಹುಲ್ ಗಾಂಧಿ ಹೇಳಿದರು.

ಈ ವೇಳೆ ಈ ಹಿಂದೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಕೇರಳದ ನರ್ಸ್ ಒಬ್ಬರು ನೀಡಿದ್ದ ಸಾಂತ್ವನವನ್ನು ರಾಹುಲ್ ಗಾಂಧಿ ನೆನಪಿಸಿಕೊಂಡರು.

ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಗೊಂದಲ ; ಮೃತರ ಖಾತೆಗೆ ಕೋಟ್ಯಂತರ ಹಣ ವರ್ಗಾವಣೆ!

0

ಮಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಜಮೆಯಾಗುತ್ತಿಲ್ಲ ಎಂದು ಸಾರ್ವಜನಿಕರಿಂದ ಆರೋಪಗಳು ಕೇಳಿಬರುತ್ತಿರುವ ನಡುವೆಯೇ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ದೊಡ್ಡ ಎಡವಟ್ಟು ಬೆಳಕಿಗೆ ಬಂದಿದೆ. ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಸುಮಾರು 22 ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿರುವುದು ಜಿಲ್ಲಾ ಮಟ್ಟದ ಸಭೆಯಲ್ಲಿ ಬಹಿರಂಗವಾಗಿದೆ.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪರಿಶೀಲನಾ ಸಮಿತಿ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿದ್ದು, ಅಧ್ಯಕ್ಷ ಭರತ್ ಮುಂಡೋಡಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೃತ ಫಲಾನುಭವಿಗಳ ಖಾತೆಗಳಿಗೆ ಜಮೆಯಾದ ಹಣವನ್ನು ಸರ್ಕಾರಕ್ಕೆ ಮರಳಿ ಪಡೆಯಲು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಬಳಕೆಯಲ್ಲಿಲ್ಲದ ಖಾತೆಗಳಿಗೂ ಹಣ ವರ್ಗಾವಣೆ ಮುಂದುವರಿದಿರುವ ಬಗ್ಗೆ ರಾಜ್ಯ ಕಚೇರಿಯಿಂದ ಮಾಹಿತಿ ಬಂದಿದ್ದು, ಮೃತರ ವಿವರಗಳನ್ನು ಸಂಗ್ರಹಿಸಿ ಬ್ಯಾಂಕ್‌ಗಳ ಮೂಲಕ ಖಾತೆಗಳನ್ನು ಸ್ಥಗಿತಗೊಳಿಸುವ ಪ್ರಕ್ರಿಯೆ ಆರಂಭಿಸಲು ಸೂಚಿಸಲಾಗಿದೆ.

ಸಭೆಯಲ್ಲಿ ಮತ್ತೊಂದು ಆತಂಕಕಾರಿ ಅಂಶವೂ ಬೆಳಕಿಗೆ ಬಂದಿದೆ. ಕೆಲವು ಜೀವಂತ ಫಲಾನುಭವಿಗಳನ್ನು ಇಲಾಖೆಯ ದಾಖಲೆಗಳಲ್ಲಿ ಮೃತಪಟ್ಟವರು ಎಂದು ನಮೂದಿಸಿರುವ ಗಂಭೀರ ದೋಷಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಿ ಮುಂದಿನ ಸಭೆಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ 4,25,759 ರೇಷನ್ ಕಾರ್ಡ್ ಹೊಂದಿದವರಿದ್ದು, ಅವರಲ್ಲಿ 3,82,178 ಮಂದಿ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿತರಾಗಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗಳಲ್ಲಿರುವ ಮರಣ ದಾಖಲೆಗಳನ್ನು ಆಧರಿಸಿ ಸ್ಥಳೀಯ ಆಡಳಿತ ಹಾಗೂ ಬ್ಯಾಂಕ್‌ಗಳ ಸಹಯೋಗದಲ್ಲಿ ಮುಂದಿನ ಹಣ ವರ್ಗಾವಣೆಯನ್ನು ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ.

ವಿಧಾನಸಭೆಯಲ್ಲೂ 144 ಮತಗಳಿಂದ ವಿಶ್ವಾಸಮತ ಗೆದ್ದ ತಮಿಳುನಾಡು ಸಿಎಂ ವಿಜಯ್!

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ನೇತೃತ್ವದ ಸರ್ಕಾರ ಬಹುಮತ ಸಾಬೀತುಪಡಿಸಿದೆ. ಸರ್ಕಾರದ ಪರ 144 ಮಂದಿ ಶಾಸಕರು ಮತ ಚಲಾಯಿಸುವ ಮೂಲಕ ವಿಜಯ್ ಸರ್ಕಾರಕ್ಕೆ ಸ್ಪಷ್ಟ ಬೆಂಬಲ ವ್ಯಕ್ತವಾಗಿದೆ.

ಟಿವಿಕೆ ಜೊತೆಗೆ ಕಾಂಗ್ರೆಸ್, ಸಿಪಿಎಂ, ಸಿಪಿಐ, ಮುಸ್ಲಿಂ ಲೀಗ್, ವಿಸಿಕೆ ಹಾಗೂ ಎಐಎಡಿಎಂಕೆಯಿಂದ ಬಂಡಾಯವೆದ್ದಿರುವ 27 ಶಾಸಕರು ವಿಜಯ್ ಸರ್ಕಾರದ ಪರವಾಗಿ ನಿಂತಿದ್ದಾರೆ. ವಿಶ್ವಾಸಮತ ಪ್ರಕ್ರಿಯೆ ವೇಳೆ ಡಿಎಂಕೆ ಮತ್ತು ಪಿಎಂಕೆ ಶಾಸಕರು ಸಭಾತ್ಯಾಗ ನಡೆಸಿದರು. ಇನ್ನು ಒಬ್ಬ ಬಿಜೆಪಿ ಶಾಸಕ ಮತದಾನದಿಂದ ದೂರ ಉಳಿದಿದ್ದಾರೆ.

ಇನ್ನೊಂದೆಡೆ, ಸದನದಲ್ಲಿ ಹಾಜರಿದ್ದ 22 ಎಐಎಡಿಎಂಕೆ ಶಾಸಕರು ಸರ್ಕಾರದ ವಿರುದ್ಧ ಮತ ಚಲಾಯಿಸಿದರು. ಒಟ್ಟು 234 ಸದಸ್ಯರ ಬಲ ಹೊಂದಿರುವ ತಮಿಳುನಾಡು ವಿಧಾನಸಭೆಯಲ್ಲಿ ಸಾಮಾನ್ಯವಾಗಿ ಬಹುಮತಕ್ಕೆ 118 ಶಾಸಕರ ಬೆಂಬಲ ಅಗತ್ಯವಿದೆ.

ಆದರೆ ವಿಜಯ್ ತಿರುಚಿ ಪಶ್ಚಿಮ ಹಾಗೂ ಪೆರಂಬೂರು ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಹಿನ್ನೆಲೆ ಅದನ್ನು ಒಂದೇ ಸ್ಥಾನವಾಗಿ ಪರಿಗಣಿಸಲಾಗಿದೆ.

ಇದೇ ವೇಳೆ ತಿರುಪತ್ತೂರು ಕ್ಷೇತ್ರದ ಟಿವಿಕೆ ಶಾಸಕ ಶ್ರೀನಿವಾಸ್ ಸೇತುಪತಿ ಅವರಿಗೆ ವಿಶ್ವಾಸಮತ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿದ್ದರಿಂದ ಸದನದ ಬಲ 232ಕ್ಕೆ ಇಳಿದಿತ್ತು.

ಈ ಹಿನ್ನೆಲೆಯಲ್ಲಿ ಬಹುಮತಕ್ಕೆ 116 ಶಾಸಕರ ಬೆಂಬಲ ಸಾಕಾಗಿತ್ತು. ಆದರೆ ವಿಜಯ್ ಸರ್ಕಾರ 144 ಮತಗಳನ್ನು ಪಡೆಯುವ ಮೂಲಕ ಅಗತ್ಯ ಬಹುಮತಕ್ಕಿಂತ ಹೆಚ್ಚಿನ ಬೆಂಬಲದೊಂದಿಗೆ ವಿಶ್ವಾಸಮತ ಗೆದ್ದಿದೆ.

ಸರ್ಕಾರದ ಪರ ಮತ ಹಂಚಿಕೆ ಹೀಗಿದೆ:

  • ಟಿವಿಕೆ 106,
  • ಕಾಂಗ್ರೆಸ್ 5,
  • ಎಡಪಕ್ಷಗಳು 4,
  • ವಿಸಿಕೆ 2,
  • ಮುಸ್ಲಿಂ ಲೀಗ್ 2,
  • ಎಐಎಡಿಎಂಕೆ ಬಂಡಾಯ ಶಾಸಕರು 27

ಈ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಸರ್ಕಾರ ತನ್ನ ಅಧಿಕಾರವನ್ನು ಅಧಿಕೃತವಾಗಿ ಗಟ್ಟಿಗೊಳಿಸಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

ಯುರೋಪಿಯನ್ ಟಿ20 ಲೀಗ್ʼಗೆ ರಾಹುಲ್ ದ್ರಾವಿಡ್ ಎಂಟ್ರಿ; ಡಬ್ಲಿನ್ ಫ್ರಾಂಚೈಸಿ ಖರೀದಿಸಿದ ಮಾಜಿ ನಾಯಕ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಖ್ಯಾತ ಕೋಚ್ ರಾಹುಲ್ ದ್ರಾವಿಡ್ ಇದೀಗ ಯುರೋಪಿಯನ್ ಟಿ20 ಲೀಗ್‌ನಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್ (ETPL) ಉದ್ಘಾಟನಾ ಆವೃತ್ತಿಯ ತಂಡವೊಂದರ ಸಹ ಮಾಲೀಕರಾಗಿ ದ್ರಾವಿಡ್ ಸೇರ್ಪಡೆಯಾಗಿದ್ದು, ಐರ್ಲೆಂಡ್ ಮೂಲದ ‘ಡಬ್ಲಿನ್ ಗಾರ್ಡಿಯನ್ಸ್’ ಫ್ರಾಂಚೈಸಿಯನ್ನು ಖರೀದಿಸಿದ್ದಾರೆ.

ನಟ ಅಭಿಷೇಕ್ ಬಚ್ಚನ್ ಸಹ-ಸ್ಥಾಪಕರಾಗಿರುವ ಈ ಲೀಗ್ ಆಗಸ್ಟ್ 26ರಿಂದ ಆರಂಭವಾಗಲಿದ್ದು, ಡಬ್ಲಿನ್ ಗಾರ್ಡಿಯನ್ಸ್ ತಂಡಕ್ಕೆ ಭಾರತ ತಂಡದ ಮಾಜಿ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ನಾಯಕತ್ವ ವಹಿಸಲಿದ್ದಾರೆ.

ಇದಕ್ಕೂ ಮೊದಲು ರಾಹುಲ್ ದ್ರಾವಿಡ್ ಮತ್ತು ಅಶ್ವಿನ್ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇದೀಗ ಯುರೋಪಿಯನ್ ಟಿ20 ಲೀಗ್‌ನಲ್ಲಿ ಈ ಜೋಡಿ ಮತ್ತೊಮ್ಮೆ ಒಂದಾಗುತ್ತಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಯುರೋಪಿನ ವಿವಿಧ ರಾಷ್ಟ್ರಗಳಲ್ಲಿ ಕ್ರಿಕೆಟ್ ಬೆಳೆಸುವ ಉದ್ದೇಶದಿಂದ ಈ ಟೂರ್ನಿ ಆಯೋಜಿಸಲಾಗುತ್ತಿದೆ. ಐರ್ಲೆಂಡ್ ಸೇರಿದಂತೆ ಯುರೋಪಿನಾದ್ಯಂತ ಉದಯೋನ್ಮುಖ ಪ್ರತಿಭಾವಂತ ಆಟಗಾರರಿಗೆ ವೇದಿಕೆ ಕಲ್ಪಿಸುವುದು ಲೀಗ್‌ನ ಪ್ರಮುಖ ಉದ್ದೇಶವಾಗಿದೆ.

ತಂಡ ಖರೀದಿ ಕುರಿತು ಪ್ರತಿಕ್ರಿಯಿಸಿದ ರಾಹುಲ್ ದ್ರಾವಿಡ್, “ಈ ಲೀಗ್ ಹಿಂದೆ ಇರುವ ದೃಷ್ಟಿಕೋನವೇ ನನ್ನನ್ನು ಹೆಚ್ಚು ಆಕರ್ಷಿಸಿದೆ. ಐರ್ಲೆಂಡ್ ಹಾಗೂ ಯುರೋಪಿನ ಯುವ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ಮೂಲಕ ಕ್ರಿಕೆಟ್ ಬೆಳವಣಿಗೆಗೆ ಇದು ಸಹಕಾರಿಯಾಗಲಿದೆ,” ಎಂದು ಹೇಳಿದರು.

ಡಬ್ಲಿನ್ ತಂಡದಲ್ಲಿ ಸಾಕಷ್ಟು ಪ್ರತಿಭಾವಂತ ಆಟಗಾರರಿದ್ದಾರೆ. ಮುಂದಿನ ಪೀಳಿಗೆಯ ಕ್ರಿಕೆಟಿಗರನ್ನು ಬೆಳೆಸುವುದು ಅತ್ಯಂತ ಮುಖ್ಯ. ಈ ನಿಟ್ಟಿನಲ್ಲಿ ETPL ಮಹತ್ವದ ಪಾತ್ರ ವಹಿಸಲಿದೆ ಎಂಬ ವಿಶ್ವಾಸವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಲೀಗ್‌ನಲ್ಲಿ ಡಬ್ಲಿನ್, ಬೆಲ್‌ಫಾಸ್ಟ್, ಎಡಿನ್‌ಬರ್ಗ್, ಗ್ಲಾಸ್ಗೋ, ರೊಟರ್‌ಡ್ಯಾಮ್ ಮತ್ತು ಆಂಸ್ಟರ್ಡ್ಯಾಮ್ ಸೇರಿ ಒಟ್ಟು ಆರು ತಂಡಗಳು ಭಾಗವಹಿಸಲಿವೆ. ಜೊತೆಗೆ ಕ್ರಿಸ್ ಗೇಲ್, ಸ್ಟೀವ್ ವಾ ಮತ್ತು ಜಾಂಟಿ ರೋಡ್ಸ್‌ ಸೇರಿದಂತೆ ಜಾಗತಿಕ ಕ್ರಿಕೆಟ್ ದಿಗ್ಗಜರು ವಿವಿಧ ತಂಡಗಳ ಮಾಲೀಕರಾಗಿ ಹೂಡಿಕೆ ಮಾಡಿರುವುದು ಲೀಗ್‌ಗೆ ಇನ್ನಷ್ಟು ಮೆರುಗು ತಂದಿದೆ.

error: Content is protected !!