Home Blog

ಬಿಟುಮಿನ್ ಇಲ್ಲ ಅಂತ ರಸ್ತೆ ಕೆಲಸ ಸ್ಟಾಪ್… ಕಾರವಾರದಲ್ಲಿ ಮಾತ್ರ ಒಳ್ಳೆ ರಸ್ತೆಯನ್ನೇ ಕಿತ್ತು ಹಾಳು ಮಾಡಿದ ಅವಾಂತರ!

ಕಾರವಾರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಾಂಬರು ಕೊರತೆಯಿಂದ ರಸ್ತೆ ಕಾಮಗಾರಿಗಳು ನಿಂತು ಹೋಗಿದ್ದರೆ, ಕಾರವಾರದಲ್ಲಿ ಮಾತ್ರ ಗುತ್ತಿಗೆದಾರರ ಎಡವಟ್ಟಿಗೆ ಭದ್ರವಾಗಿದ್ದ ಕಾಂಕ್ರೀಟ್ ರಸ್ತೆಯನ್ನೇ ಹಾಳು ಮಾಡಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.

ಕಾರವಾರ ಬಸ್ ನಿಲ್ದಾಣದಿಂದ ಕೈಗಾ ಅಣುಸ್ಥಾವರಕ್ಕೆ ಹೋಗುವ ಸುಸಜ್ಜಿತ ಕಾಂಕ್ರೀಟ್ ರಸ್ತೆಯ ಮೇಲೆ ಏಕಾಏಕಿ ಡಾಂಬರು ಹಾಕಲು ಆರಂಭಿಸಲಾಗಿತ್ತು. ರಸ್ತೆ ಈಗಾಗಲೇ ಉತ್ತಮ ಸ್ಥಿತಿಯಲ್ಲಿದ್ದರೂ ಅನಗತ್ಯ ಕಾಮಗಾರಿ ನಡೆಸುತ್ತಿರುವುದನ್ನು ಕಂಡ ಸಾರ್ವಜನಿಕರು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸ್ಥಳೀಯರ ಆಕ್ರೋಶ ಹೆಚ್ಚುತ್ತಿದ್ದಂತೆಯೇ ಗುತ್ತಿಗೆದಾರರು ಕಾಮಗಾರಿ ಸ್ಥಗಿತಗೊಳಿಸಿ ಅಲ್ಲಿಂದ ತೆರಳಿದ್ದಾರೆ. ಆದರೆ ಬಳಿಕ ಹಾಕಿದ್ದ ಡಾಂಬರನ್ನು ಜೆಸಿಬಿ ಮೂಲಕ ಕಿತ್ತು ಹಾಕುವ ವೇಳೆ ಕಾಂಕ್ರೀಟ್ ರಸ್ತೆಯ ಮೇಲ್ಭಾಗವೇ ಹಾನಿಗೊಳಗಾಗಿದೆ. ಇದರಿಂದ ಸಾರ್ವಜನಿಕರು ಇನ್ನಷ್ಟು ಕಿಡಿಕಾರಿದ್ದಾರೆ.

ಕೆಶಿಪ್ ಯೋಜನೆಯಡಿ ಮಂಜೂರಾದ ಕಾಮಗಾರಿಯಿದು ಎನ್ನಲಾಗುತ್ತಿದೆ. ಆದರೆ ಸ್ಥಳದ ವಾಸ್ತವ ಸ್ಥಿತಿ ತಿಳಿಯದೇ ಗುತ್ತಿಗೆದಾರರು ಕೆಲಸ ಆರಂಭಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸ್ಥಳೀಯ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೂ ಈ ಅವಾಂತರಕ್ಕೆ ಕಾರಣ ಎನ್ನಲಾಗುತ್ತಿದೆ.

ಒಟ್ಟಾರೆ ರಾಜ್ಯದ ಅನೇಕ ಕಡೆ ರಸ್ತೆ ಅಭಿವೃದ್ಧಿಗೆ ಹಣವಿಲ್ಲ ಎಂದು ಜನರು ಪರದಾಡುತ್ತಿದ್ದರೆ, ಕಾರವಾರದಲ್ಲಿ ಮಾತ್ರ ಚೆನ್ನಾಗಿದ್ದ ರಸ್ತೆಗೆ ಡಾಂಬರು ಹಾಕಿ ಮತ್ತೆ ಕಿತ್ತು ಹಾಳು ಮಾಡುತ್ತಿರುವುದು ಸಾರ್ವಜನಿಕ ಹಣದ ದುರ್ಬಳಕೆ ಅಲ್ಲವೇ ಎಂಬ ಪ್ರಶ್ನೆ ಕೇಳಿಬರುತ್ತಿದೆ.

ಸರ್ಕಾರಿ ಜಾಬ್ ಗ್ಯಾರಂಟಿ ಅಂತ ಲಕ್ಷ ಲಕ್ಷ ದೋಚಿದ ಖದೀಮ: ಹಣ ಕೇಳಿದ್ರೆ ಎಸ್ಕೇಪ್ ಆದ ಕಿಲಾಡಿ

ಕಲಬುರಗಿ: “ಸರ್ಕಾರಿ ನರ್ಸಿಂಗ್ ಕೆಲಸ ಫಿಕ್ಸ್” ಎಂಬ ಮಾತಿಗೆ ಮೋಸ ಹೋಗಿ ಹತ್ತಾರು ಯುವಕರು ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಬೆಚ್ಚಿಬೀಳಿಸುವ ಘಟನೆ ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ. ಇಎಸ್ಐ ಆಸ್ಪತ್ರೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಭಾರೀ ವಂಚನೆ ನಡೆಸಿದ ಆರೋಪ ಹೈದರಾಬಾದ್ ಮೂಲದ ಪ್ರದೀಪ್ ಎಂಬಾತನ ವಿರುದ್ಧ ಕೇಳಿಬಂದಿದೆ.

ಸರ್ಕಾರಿ ಉದ್ಯೋಗದ ಆಸೆ ಹೊತ್ತ ಯುವಜನರನ್ನೇ ಟಾರ್ಗೆಟ್ ಮಾಡಿಕೊಂಡಿದ್ದ ಪ್ರದೀಪ್, “ಒಳಗಡೆ ಸೆಟ್ಟಿಂಗ್ ಇದೆ, ಕೆಲಸ ಪಕ್ಕಾ” ಎಂದು ಹೇಳಿ ಲಕ್ಷ ಲಕ್ಷ ರೂಪಾಯಿ ಹಣ ವಸೂಲಿ ಮಾಡಿದ್ದಾನೆ. ಕೆಲವರಿಗೆ ಈಗಾಗಲೇ ಕೆಲಸ ಕೊಡಿಸಿದ್ದೇನೆ ಎಂದು ನಂಬಿಸಿ, ಅಭ್ಯರ್ಥಿಗಳ ವಿಶ್ವಾಸ ಗೆದ್ದಿದ್ದಾನೆ.

ಒಂದೊಂದು ಉದ್ಯೋಗಕ್ಕೆ 2 ಲಕ್ಷದಿಂದ 4 ಲಕ್ಷ ರೂಪಾಯಿ ತನಕ ಹಣ ಪಡೆದಿದ್ದರೂ, ತಿಂಗಳುಗಳು ಕಳೆದರೂ ಕೆಲಸ ಸಿಗಲಿಲ್ಲ. ಹಣ ವಾಪಸ್ ಕೇಳಿದವರಿಗೆ ಮಾತ್ರ “ಪ್ರಕ್ರಿಯೆ ನಡೆಯುತ್ತಿದೆ” ಎಂದು ಹೇಳಿ ತಳ್ಳಾಡಿಸುತ್ತಿದ್ದ ಎನ್ನಲಾಗಿದೆ.

ಇಂದು ಮತ್ತೆ ಕೆಲ ಅಭ್ಯರ್ಥಿಗಳಿಗೆ ಪರೀಕ್ಷೆ ಇದೆ ಎಂದು ಕರೆಸಿಕೊಂಡಿದ್ದ ವೇಳೆ, ಈಗಾಗಲೇ ಮೋಸಕ್ಕೊಳಗಾದವರು ಸ್ಥಳಕ್ಕೆ ಬಂದು ಪ್ರದೀಪ್‌ನನ್ನು ಪ್ರಶ್ನಿಸಿದ್ದಾರೆ. ಟಿವಿ9 ಕ್ಯಾಮೆರಾ ಎದುರು ಸಿಕ್ಕಿಬಿದ್ದ ಆತ, ಉತ್ತರ ಕೊಡುತ್ತೇನೆ ಎಂದು ಹೇಳಿ ಕ್ಷಣಾರ್ಧದಲ್ಲೇ ಅಲ್ಲಿಂದ ಕಾಲ್ಕಿತ್ತಿದ್ದಾನೆ.

ಈ ಪ್ರಕರಣದಲ್ಲಿ ಇಎಸ್ಐ ಆಸ್ಪತ್ರೆಯ ಕೆಲ ಸಿಬ್ಬಂದಿಯ ಪಾತ್ರದ ಮೇಲೂ ಅನುಮಾನ ಗಟ್ಟಿಯಾಗಿದ್ದು, ಆಸ್ಪತ್ರೆ ಆವರಣದಲ್ಲೇ ಹಣದ ಡೀಲ್ ನಡೆದಿರುವ ಆರೋಪ ಕೇಳಿಬಂದಿದೆ. ಇಷ್ಟೆಲ್ಲಾ ಬೆಳವಣಿಗೆಯಾದರೂ ಇನ್ನೂ ಅಧಿಕೃತ ದೂರು ದಾಖಲಾಗದಿರುವುದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ.

ಒಟ್ಟಾರೆ ಸರ್ಕಾರಿ ಕೆಲಸದ ಕನಸು ಕಂಡ ಯುವಕರು ಹಣ ಕಳೆದುಕೊಂಡು ಬೀದಿಗೆ ಬಂದರೆ, ವಂಚಕರು ಮಾತ್ರ ಲಕ್ಷ ಲಕ್ಷ ಹಣ ಪಡೆದು ಮಾಯವಾಗುತ್ತಿರುವುದು ಆತಂಕ ಮೂಡಿಸಿದೆ.

ಮೀಟರ್ ಬಡ್ಡಿ ಜಾಲದ ವಿರುದ್ಧ ಎಸ್ಪಿ ದೀಪನ್ ವಾರ್! ಜಮೀರ್ ಮೊಬೈಲ್ ತನಿಖೆಯಿಂದ ಪೊಲೀಸರಿಗೆ ಟೆನ್ಷನ್

ಕಾರವಾರ: ಮುಂಡಗೋಡಿನಲ್ಲಿ ಮೀಟರ್ ಬಡ್ಡಿ ದಂಧೆ ಮತ್ತೆ ತಲೆಎತ್ತಿರುವ ಬೆನ್ನಲ್ಲೇ ಉತ್ತರ ಕನ್ನಡ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಮೀಟರ್ ಬಡ್ಡಿ ದಂಧೆಯ ಪ್ರಮುಖ ಮುಖಂಡ ಜಮೀರ್ ಅಹ್ಮದ್ ದರ್ಗಾವಾಲೆ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದರೆ, ಇದೀಗ ಅದರ ಹಿಂದಿನ ಜಾಲವನ್ನು ಬಯಲಿಗೆಳೆಯಲು ಪೊಲೀಸರು ದೊಡ್ಡ ಮಟ್ಟದ ತನಿಖೆ ಆರಂಭಿಸಿದ್ದಾರೆ.

ಜಮೀರ್ ಕೊಲೆ ಪ್ರಕರಣದಲ್ಲಿ ಈಗಾಗಲೇ 7 ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ನಡೆಸುತ್ತಿರುವ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ತಂಡ, ಕೊಲೆ ಮತ್ತು ಮೀಟರ್ ಬಡ್ಡಿ ವ್ಯವಹಾರಗಳ ನಡುವಿನ ನಂಟಿನ ಬಗ್ಗೆ ಮಾಹಿತಿ ಕಲೆಹಾಕುತ್ತಿದೆ.

ಇದೀಗ ಎಸ್ಪಿ ದೀಪನ್ ನೇರವಾಗಿ ಮೈದಾನಕ್ಕಿಳಿದು ಮುಂಡಗೋಡು, ಹಳಿಯಾಳ ಹಾಗೂ ದಾಂಡೇಲಿ ಭಾಗಗಳಲ್ಲಿ ಸಕ್ರಿಯವಾಗಿರುವ ದಂಧೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಸಜ್ಜಾಗಿದ್ದಾರೆ. ಕೆಲವರನ್ನು ಗಡಿಪಾರು ಮಾಡಲು ಸಿದ್ಧತೆ ನಡೆದಿದ್ದು, ವಾರದೊಳಗೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಇನ್ನೊಂದೆಡೆ, ಜಮೀರ್ ಜೊತೆ ಕೆಲ ಸ್ಥಳೀಯ ಪೊಲೀಸರ ಸಂಪರ್ಕವಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಜಮೀರ್ ಮೊಬೈಲ್ ಕಾಲ್ ಡೀಟೇಲ್ಸ್ ಮತ್ತು ವಾಟ್ಸಪ್ ಚಾಟ್‌ಗಳ ಪರಿಶೀಲನೆಗೆ ಎಸ್ಪಿ ದೀಪನ್ ಸೂಚನೆ ನೀಡಿದ್ದಾರೆ.

ಈ ಬೆಳವಣಿಗೆಗಳಿಂದ ಜಮೀರ್ ಜೊತೆ ಸಂಪರ್ಕದಲ್ಲಿದ್ದರೆನ್ನಲಾದ ಕೆಲ ಪೊಲೀಸರಲ್ಲಿ ಭಾರೀ ಆತಂಕ ಶುರುವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೀಟರ್ ಬಡ್ಡಿ ದಂಧೆ ವಿರುದ್ಧ ಇದೀಗ ಪೊಲೀಸ್ ಇಲಾಖೆ ಸಂಪೂರ್ಣ ಸಮರ ಘೋಷಿಸಿದಂತಾಗಿದೆ.

‘ಪುಷ್ಪ 2’ ದುರಂತದ ಬಾಲಕನಿಗೆ ಅಲ್ಲು ಕುಟುಂಬದ ಬೆಂಬಲ! ಶಿಕ್ಷಣದಿಂದ ಭವಿಷ್ಯವರೆಗೂ ಸಂಪೂರ್ಣ ಜವಾಬ್ದಾರಿ

‘ಪುಷ್ಪ 2’ ಪ್ರೀಮಿಯರ್ ವೇಳೆ ನಡೆದ ದುರಂತದಲ್ಲಿ ಗಾಯಗೊಂಡಿದ್ದ ಬಾಲಕ ಶ್ರೀತೇಜ್ ಕುಟುಂಬಕ್ಕೆ ಅಲ್ಲು ಕುಟುಂಬ ಮತ್ತೆ ಬೆನ್ನೆಲುಬಾಗಿ ನಿಂತಿದೆ. ನಟ ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಹಾಗೂ ತಂದೆ ಅಲ್ಲು ಅರವಿಂದ್ ಬಾಲಕನ ಮನೆಗೆ ಭೇಟಿ ನೀಡಿ ಕುಟುಂಬದ ಸ್ಥಿತಿಗತಿ ವಿಚಾರಿಸಿದ್ದಾರೆ.

ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತದಲ್ಲಿ ಶ್ರೀತೇಜ್ ತೀವ್ರವಾಗಿ ಗಾಯಗೊಂಡಿದ್ದನು. ಈ ದುರ್ಘಟನೆಯಲ್ಲಿ ಆತನ ತಾಯಿ ಮೃತಪಟ್ಟಿದ್ದರು. ಮೆದುಳಿಗೆ ಪೆಟ್ಟು ಬಿದ್ದಿದ್ದ ಕಾರಣ ಹಲವು ತಿಂಗಳುಗಳ ಕಾಲ ಶ್ರೀತೇಜ್ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆದಿದ್ದನು. ಇದೀಗ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಮುಂದುವರಿದಿದೆ.

ಬಾಲಕನ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಅಲ್ಲು ಅರವಿಂದ್, ಕುಟುಂಬಕ್ಕೆ ಎಲ್ಲಾ ರೀತಿಯ ಸಹಾಯ ಮುಂದುವರಿಸುವುದಾಗಿ ಭರವಸೆ ನೀಡಿದ್ದಾರೆ. ಶ್ರೀತೇಜ್ ತಂಗಿಯ ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚವನ್ನು ತಾವು ಭರಿಸುವುದಾಗಿ ಘೋಷಿಸಿರುವುದು ಗಮನ ಸೆಳೆದಿದೆ.

ಘಟನೆ ಬಳಿಕದಿಂದಲೇ ಅಲ್ಲು ಅರ್ಜುನ್ ಕುಟುಂಬ ಮತ್ತು ಮೈತ್ರಿ ಮೂವಿ ಮೇಕರ್ಸ್ ಬಾಲಕನ ವೈದ್ಯಕೀಯ ವೆಚ್ಚವನ್ನು ನೋಡಿಕೊಳ್ಳುತ್ತಿವೆ. ಇದೇ ವೇಳೆ ಶ್ರೀತೇಜ್ ಭವಿಷ್ಯಕ್ಕಾಗಿ 2 ಕೋಟಿ ರೂಪಾಯಿ ಫಿಕ್ಸ್‌ಡ್ ಡೆಪಾಸಿಟ್ ಇಡಲಾಗಿದ್ದು, ಅದರ ಬಡ್ಡಿಯಿಂದ ತಿಂಗಳಿಗೆ ಸುಮಾರು 1.5 ಲಕ್ಷ ರೂಪಾಯಿ ಆದಾಯ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ.

ಈ ಭೇಟಿಯ ಮೂಲಕ ದುರಂತದ ನೋವಿನ ನಡುವೆ ಸಂತ್ರಸ್ತ ಕುಟುಂಬಕ್ಕೆ ಅಲ್ಲು ಕುಟುಂಬ ಮಾನವೀಯ ಸ್ಪರ್ಶ ನೀಡಿದೆ.

‘ಡ್ರ್ಯಾಗನ್’ಗೆ ಮತ್ತೊಂದು ದೊಡ್ಡ ಬಲ! ಜೂ ಎನ್‌ಟಿಆರ್ ಜೊತೆ ಮತ್ತೆ ಸ್ಕ್ರೀನ್ ಶೇರ್ ಮಾಡಲಿರುವ ಪ್ರಕಾಶ್ ರಾಜ್

ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಜೂ ಎನ್‌ಟಿಆರ್ ಅವರ ಬಹುನಿರೀಕ್ಷಿತ ಸಿನಿಮಾ ‘ಡ್ರ್ಯಾಗನ್’ ದಿನದಿಂದ ದಿನಕ್ಕೆ ಭಾರೀ ಕುತೂಹಲ ಹುಟ್ಟಿಸುತ್ತಿದೆ. ಅಧಿಕೃತ ಹೆಸರು ಇನ್ನೂ ಘೋಷಣೆ ಆಗದಿದ್ದರೂ, ಚಿತ್ರದ ಪ್ರತಿಯೊಂದು ಅಪ್ಡೇಟ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ. ಇದೀಗ ಚಿತ್ರತಂಡಕ್ಕೆ ಹಿರಿಯ ನಟ ಪ್ರಕಾಶ್ ರಾಜ್ ಸೇರ್ಪಡೆಯಾಗಿರುವ ಸುದ್ದಿ ಸಿನಿಪ್ರಿಯರಲ್ಲಿ ಹೈಪ್ ಹೆಚ್ಚಿಸಿದೆ.

ಪ್ರಶಾಂತ್ ನೀಲ್ ಸಿನಿಮಾಗಳ ವಿಶೇಷತೆ ಎಂದರೆ ವಿಭಿನ್ನ ಭಾಷೆಗಳ ಕಲಾವಿದರ ಸಮಾಗಮ. ‘ಕೆಜಿಎಫ್’, ‘ಸಲಾರ್’ ಬಳಿಕ ಈಗ ಈ ಸಿನಿಮಾದಲ್ಲೂ ಕನ್ನಡದ ಪ್ರತಿಭೆಗಳಿಗೆ ವಿಶೇಷ ಅವಕಾಶ ಸಿಕ್ಕಿದೆ. ರುಕ್ಮಿಣಿ ವಸಂತ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ಪ್ರಕಾಶ್ ರಾಜ್ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ.

ಬಹುಭಾಷಾ ನಟನಾಗಿ ದಶಕಗಳಿಂದ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ಪ್ರಕಾಶ್ ರಾಜ್, ಯಾವುದೇ ಪಾತ್ರವನ್ನೂ ತಮ್ಮ ಅಭಿನಯದಿಂದ ಜೀವಂತಗೊಳಿಸುವ ಸಾಮರ್ಥ್ಯ ಹೊಂದಿದ್ದಾರೆ. ‘ಕೆಜಿಎಫ್ 2’ ಬಳಿಕ ಮತ್ತೆ ಪ್ರಶಾಂತ್ ನೀಲ್ ಜೊತೆ ಕೈಜೋಡಿಸಿರುವುದು ಚಿತ್ರದ ಮೇಲೆ ಮತ್ತಷ್ಟು ನಿರೀಕ್ಷೆ ಹುಟ್ಟಿಸಿದೆ.

ಜೂ ಎನ್‌ಟಿಆರ್ ಮತ್ತು ಪ್ರಕಾಶ್ ರಾಜ್ ಕಾಂಬಿನೇಷನ್ ಈಗಾಗಲೇ ಹಲವು ಹಿಟ್ ಸಿನಿಮಾಗಳಲ್ಲಿ ವರ್ಕೌಟ್ ಆಗಿದೆ. ‘ಟೆಂಪರ್’ ಸಿನಿಮಾದಲ್ಲಿನ ಇವರಿಬ್ಬರ ತೀವ್ರ ಸನ್ನಿವೇಶಗಳು ಇಂದಿಗೂ ಅಭಿಮಾನಿಗಳ ಫೇವರಿಟ್. ಇದೀಗ ‘ಡ್ರ್ಯಾಗನ್’ನಲ್ಲಿ ಈ ಜೋಡಿ ಮತ್ತೆ ಮುಖಾಮುಖಿಯಾಗಲಿದ್ದು, ಸಿನಿಮಾ ಭಾರೀ ಮಟ್ಟದಲ್ಲಿ ಸದ್ದು ಮಾಡುವ ಲಕ್ಷಣ ಕಾಣುತ್ತಿದೆ.

‘ಸರ್ಕೆ ಚುನರಿ’ ವಿವಾದಕ್ಕೆ ಕೊನೆ! NCW ಮುಂದೆ ನೋರಾ ಕ್ಷಮೆ, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ಘೋಷಣೆ

‘ಕೆಡಿ’ ಸಿನಿಮಾದ ‘ಸರ್ಸೆ ಸೆರಗು’ ಹಾಡಿನಿಂದ ಉಂಟಾಗಿದ್ದ ಭಾರೀ ವಿವಾದಕ್ಕೆ ಸಂಬಂಧಿಸಿ ನಟಿ ನೋರಾ ಫತೇಹಿ ಕೊನೆಗೂ ಮೌನ ಮುರಿದಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಹಾಜರಾದ ಅವರು ಲಿಖಿತ ಕ್ಷಮೆ ಸಲ್ಲಿಸಿದ್ದು, ಸಮಾಜಮುಖಿ ಹೆಜ್ಜೆಯೊಂದನ್ನೂ ಘೋಷಿಸಿದ್ದಾರೆ.

ಹಿಂದಿಯಲ್ಲಿ ‘ಸರ್ಕೆ ಚುನರಿ’ ಹೆಸರಿನಲ್ಲಿ ಬಿಡುಗಡೆಯಾಗಿದ್ದ ಈ ಹಾಡು ಮಹಿಳೆಯರನ್ನು ಅಶ್ಲೀಲವಾಗಿ ಚಿತ್ರಿಸಿದೆ ಎಂಬ ಆರೋಪದಡಿ ದೇಶಾದ್ಯಂತ ಟೀಕೆಗೆ ಗುರಿಯಾಗಿತ್ತು. ಹಾಡಿನ ದೃಶ್ಯಗಳು ಮತ್ತು ಸಾಹಿತ್ಯದ ವಿರುದ್ಧ ಸಾರ್ವಜನಿಕ ಆಕ್ರೋಶ ಹೆಚ್ಚಾದ ಬಳಿಕ ರಾಷ್ಟ್ರೀಯ ಮಹಿಳಾ ಆಯೋಗ ಪ್ರಕರಣ ದಾಖಲಿಸಿಕೊಂಡಿತ್ತು.

ಗುರುವಾರ ವಿಚಾರಣೆಗೆ ಹಾಜರಾದ ನೋರಾ ಫತೇಹಿ, ‘ಯಾರ ಭಾವನೆಗೂ ಧಕ್ಕೆ ತರುವ ಉದ್ದೇಶ ಇರಲಿಲ್ಲ. ಆದರೆ ಕಲಾವಿದೆಯಾಗಿ ನನ್ನ ಜವಾಬ್ದಾರಿಯನ್ನು ಅರಿತು ಕ್ಷಮೆ ಕೇಳುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಅಲ್ಲದೆ, ವಿವಾದಕ್ಕೆ ಪ್ರಾಯಶ್ಚಿತ್ತವಾಗಿ ಕೆಲವು ಅನಾಥ ಹೆಣ್ಣು ಮಕ್ಕಳ ಶಿಕ್ಷಣ ವೆಚ್ಚವನ್ನು ಭರಿಸುವುದಾಗಿ ಘೋಷಿಸಿದ್ದಾರೆ. ಸಮಾಜಕ್ಕೆ ಮರಳಿ ಕೊಡುವ ಮನೋಭಾವದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಈಗಾಗಲೇ ನಟ ಸಂಜಯ್ ದತ್ ಕೂಡ ಕ್ಷಮೆಯಾಚಿಸಿ 50 ಬುಡಕಟ್ಟು ಹೆಣ್ಣು ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತಿದ್ದರು.

ವಿವಾದ ತಾರಕ್ಕೇರಿದ ಬಳಿಕ ‘ಸರ್ಕೆ ಚುನರಿ’ ಹಾಡನ್ನು ಯೂಟ್ಯೂಬ್‌ನಿಂದ ತೆಗೆದುಹಾಕಲಾಗಿತ್ತು. ಇದೀಗ ಬಿಡುಗಡೆಯಾಗಿರುವ ‘ಕೆಡಿ’ ಸಿನಿಮಾದಲ್ಲೂ ಆ ಹಾಡಿಗೆ ಜಾಗ ನೀಡಲಾಗಿಲ್ಲ.

ಕಾಂಗ್ರೆಸ್‌ ಸ್ಥಿತಿ ಭಿಕ್ಷುಕರ ರೀತಿ ಆಗಿದೆ: ಛಲವಾದಿ ನಾರಾಯಣ ಸ್ವಾಮಿ ವ್ಯಂಗ್ಯ

ಬೆಂಗಳೂರು: ತಮಿಳುನಾಡಿನಲ್ಲಿ ಡಿಎಂಕೆ ಜೊತೆ ಇದ್ದ ಕಾಂಗ್ರೆಸ್‌, ನಟ ವಿಜಯ್‌ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸ್ಥಾನ ಪಡೆದ ಕೂಡಲೇ ರಾತ್ರೋರಾತ್ರಿ ಆ ಪಕ್ಷದ ಮುಂದೆ ಹೋಗಿ ಸಚಿವ ಸ್ಥಾನಕ್ಕೆ ಭಿಕ್ಷೆ ಬೇಡುತ್ತಿದೆ. ಡಿಎಂಕೆ ಸಖ್ಯ ಬಿಟ್ಟು ಕಾಂಗ್ರೆಸ್‌ ಸ್ಥಿತಿ ಭಿಕ್ಷುಕರ ರೀತಿ ಆಗಿದೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ವ್ಯಂಗ್ಯವಾಡಿದ್ದಾರೆ.

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌ಗೆ ಇಂತಹ ಹೀನಾಯ ಸ್ಥಿತಿ ಬಂದಿದೆ. ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮುಸ್ಲಿಮರು ಸಾಕಷ್ಟು ಬೆಂಬಲ ನೀಡಿದ್ದಾರೆ. ಕಾಂಗ್ರೆಸ್‌ಗೆ ಮುಸ್ಲಿಮರು ಇಲ್ಲದಿದ್ದರೆ ತಿಪ್ಪೆಗುಂಡಿಗೆ ಹಾಕುವ ಕಸಕ್ಕೆ ಸಮ ಎಂದರು.

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವವಾದ ಜಯ ಸಿಕ್ಕಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ಆಶೀರ್ವಾದ ಮಾಡಿದ್ದಾರೆ. ಆ ರಾಜ್ಯದಲ್ಲಿ ಟಿಎಂಸಿ ಆಡಳಿತದಲ್ಲಿ ಜನರು ನರಕಯಾತನೆ ಅನುಭವಿಸುತ್ತಿದ್ದರು. ಆ ನರಕದಿಂದ ಮೋದಿ ಅವರು ಜನರನ್ನು ಹೊರತಂದಿದ್ದಾರೆ. ಈ ಬಾರಿಯೂ ಬಿಜೆಪಿ ಗೆಲ್ಲದೇ ಇದ್ದಿದ್ದರೆ ಅಲ್ಲಿನ ಜನರ ಸ್ಥಿತಿ ಏನಾಗುತ್ತಿತ್ತು ಎಂದು ಊಹಿಸಿ ಎಂದರು.

ಪಶ್ಚಿಮ ಬಂಗಾಳದಲ್ಲಿ ಗೆದ್ದ ಶಾಸಕರು ಯಾವುದಾದರೂ ರಸ್ತೆಗೆ ಈಗ ಬಂದರೆ ಹೆಣ್ಣು ಮಕ್ಕಳು ಕೈ ಮುಗಿದು ನಮ್ಮನ್ನು ರಕ್ಷಿಸಿ ಎಂದು ಮನವಿ ಮಾಡುತ್ತಿದ್ದಾರೆ. ಮಮತಾ ಅವರ ಆಡಳಿತದಲ್ಲಿ ನಾವು ನರಕ ಅನುಭವಿಸಿದ್ದೇವೆ ಇನ್ನು ಮುಂದೆ ಇಂತಹ ಸ್ಥಿತಿ ಬರದಿರಲಿ ಎಂದು ಹೇಳುತ್ತಿದ್ದಾರೆ. ಅಂದರೆ ಅಲ್ಲಿ ಯಾವ ಸ್ಥಿತಿ ಇತ್ತು ಎಂದು ಯೋಚಿಸಿ ಎಂದು ಹೇಳಿದರು.

ಅಸ್ಸಾಂ ಮತ್ತು ಪುದುಚೇರಿಯಲ್ಲಿ ನಮ್ಮ ಪಕ್ಷಕ್ಕೆ ಜನ ಬೆಂಬಲ ನೀಡಿದ್ದಾರೆ. ತಮಿಳುನಾಡು ಮತ್ತು ಕೇರಳದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರ ಬೆಂಬಲದಿಂದ ಮತಬ್ಯಾಂಕ್‌ ಹೆಚ್ಚಿಸಿಕೊಂಡಿದ್ದೇವೆ. ಇನ್ನೂ ಅಲ್ಲಿ ಮುಂದಿನ ಚುನಾವಣೆಯಲ್ಲಿ ಎಲ್ಲಾ ಪಕ್ಷಗಳಂತೆ ಬಿಜೆಪಿ ಶಕ್ತಿ ಹೆಚ್ಚಲಿದೆ. ಸ್ವತಂತ್ರ ಸರ್ಕಾರ ಮಾಡುವ ಶಕ್ತಿಯನ್ನು ಜನರು ಕೊಡ್ತಾರೆ. ಕೇರಳದಲ್ಲಿ ಕಾಂಗ್ರೆಸ್‌ ಯುಡಿಎಫ್‌ ಏಳು ಪಕ್ಷಗಳ ಜೊತೆಗೂಡಿದೆ. ತುಂಡು ತುಂಡು ಪಕ್ಷ ಸೇರಿ ಖಿಚಡಿ ಪಕ್ಷ ಆಗಿದೆ ಎಂದು ಗೇಲಿ ಮಾಡಿದರು.

ಮಂಡ್ಯವೇ ನನ್ನ ರಾಜಕೀಯ ಜನ್ಮಭೂಮಿ; 2019ರ ಸೋಲು ನನಗೆ ಪಾಠ ಕಲಿಸಿತು – ನಿಖಿಲ್ ಕುಮಾರಸ್ವಾಮಿ

ಮಂಡ್ಯ: ನನ್ನ ರಾಜಕೀಯ ಪ್ರವೇಶ ಮಂಡ್ಯ ಜಿಲ್ಲೆಯಿಂದಲೇ ಆರಂಭವಾಗಿದೆ. ನಾವು ಮಂಡ್ಯದಲ್ಲಿ ಹುಟ್ಟದಿದ್ದರೂ ಈ ಜಿಲ್ಲೆಯ ಋಣ ನಮ್ಮ ಮೇಲಿದೆ. ಯಾವ ಊರಿಗೆ ಹೋದರೂ ಜನರು ತೋರಿಸುವ ಪ್ರೀತಿ ಮತ್ತು ವಿಶ್ವಾಸವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರದಲ್ಲಿ ನಡೆದ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮ ಹಾಗೂ ಪಕ್ಷದ 25ನೇ ವರ್ಷದ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, 2019ರ ಲೋಕಸಭಾ ಚುನಾವಣೆಯ ಸೋಲು ತಮ್ಮ ರಾಜಕೀಯ ಜೀವನಕ್ಕೆ ಮಹತ್ವದ ಪಾಠ ಕಲಿಸಿತು ಎಂದು ಹೇಳಿದರು.

ಅಂದಿನ ನಿಖಿಲ್ ಮತ್ತು ಇಂದಿನ ನಿಖಿಲ್ ನಡುವೆ ಸಾಕಷ್ಟು ಬದಲಾವಣೆಗಳಾಗಿವೆ. ಆ ಸೋಲು ರಾಜಕೀಯವಾಗಿ ಮತ್ತಷ್ಟು ಪಕ್ವತೆ ಮತ್ತು ಅನುಭವ ನೀಡಿದೆ. ಜನರ ಆಶಯಗಳನ್ನು ಅರ್ಥಮಾಡಿಕೊಳ್ಳಲು ಅದು ನನಗೆ ನೆರವಾಗಿದೆ ಎಂದು ತಿಳಿಸಿದರು.

ಜೆಡಿಎಸ್ ಪಕ್ಷದ ಕುರಿತು ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೋರಾಟದ ಫಲವೇ ಜನತಾದಳ ಪಕ್ಷ. 25 ವರ್ಷಗಳ ರಜತ ಮಹೋತ್ಸವ ಆಚರಿಸುತ್ತಿರುವ ಜೆಡಿಎಸ್ ಕನ್ನಡ ನಾಡು, ನುಡಿ, ನೆಲ, ಜಲ ಮತ್ತು ಭಾಷೆಯ ಪರ ಸದಾ ಹೋರಾಟ ನಡೆಸಿದ ಪಕ್ಷವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಹುಟ್ಟಿ ಅಸ್ತಂಗತವಾಗಿವೆ. ಆದರೆ ಜನರ ಆಶೀರ್ವಾದ ಮತ್ತು ಕಾರ್ಯಕರ್ತರ ಶ್ರಮದಿಂದ ಜೆಡಿಎಸ್ ಗಟ್ಟಿಯಾಗಿ ಉಳಿದು ರಾಜ್ಯ ರಾಜಕಾರಣದಲ್ಲಿ ಸುಭದ್ರ ಸ್ಥಾನವನ್ನು ಕಾಯ್ದುಕೊಂಡಿದೆ ಎಂದು ನಿಖಿಲ್ ಕುಮಾರಸ್ವಾಮಿ ಪ್ರತಿಪಾದಿಸಿದರು.

ತುಮಕೂರಿನಲ್ಲಿ ನಿಲ್ಲದ ನವಿಲುಗಳ ಸರಣಿ ಸಾವು! H5N1 ಸೋಂಕಿನ ಶಂಕೆ ನಡುವೆ ಮತ್ತೆ ಎರಡು ಕಳೇಬರ ಪತ್ತೆ

0

ತುಮಕೂರು: ಜಿಲ್ಲೆಯಲ್ಲಿ ನವಿಲುಗಳ ಸಾವಿನ ಪ್ರಕರಣಗಳು ಮುಂದುವರಿಯುತ್ತಲೇ ಇವೆ. ಗೂಳರಿವೆ ಬಳಿಯ ಸುಣ್ಣಕಲ್ಲು ಕಟ್ಟೆ ಪ್ರದೇಶದಲ್ಲಿ ಇಂದು ಮತ್ತೆ ಎರಡು ನವಿಲುಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಜಿಲ್ಲೆಯಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಈ ಹಿಂದೆ ಜಿಲ್ಲೆಯ ವಿವಿಧ ಭಾಗಗಳಲ್ಲಿ 44 ನವಿಲುಗಳು ಸಾವನ್ನಪ್ಪಿದ್ದ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿತ್ತು. ಬೊಮ್ಮನಹಳ್ಳಿ, ಕೋಳಿಹಳ್ಳಿ, ಭೈರಸಂದ್ರ ಹಾಗೂ ಹುಲ್ಲೆನಹಳ್ಳಿ ಗ್ರಾಮಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಸರಣಿ ಸಾವುಗಳು ಸಂಭವಿಸಿದ್ದವು. ಆರಂಭದಲ್ಲಿ ಬಿಸಿಲಿನ ತೀವ್ರತೆ ಕಾರಣ ಎನ್ನಲಾಗಿದ್ದರೂ, ಬಳಿಕ ನಡೆದ ಪರೀಕ್ಷೆಯಲ್ಲಿ ನವಿಲುಗಳಿಗೆ ಹೆಚ್5ಎನ್1 ಹಕ್ಕಿಜ್ವರ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ಇದೀಗ ಮತ್ತೆ ಎರಡು ನವಿಲುಗಳ ಕಳೇಬರ ಪತ್ತೆಯಾಗಿರುವುದರಿಂದ ಸೋಂಕು ಹರಡುವ ಭೀತಿ ಹೆಚ್ಚಾಗಿದೆ. ಸಾವಿನ ನಿಖರ ಕಾರಣ ತಿಳಿಯಲು ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಅರಣ್ಯ ಇಲಾಖೆ ಮತ್ತು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ತುಮಕೂರಿನಲ್ಲಿ ಮತ್ತೆ ನವಿಲುಗಳ ಸರಣಿ ಸಾವು; ಹಕ್ಕಿಜ್ವರ ಆತಂಕದ ನಡುವೆ ಎರಡು ನವಿಲುಗಳ ಕಳೇಬರ ಪತ್ತೆ

ತುಮಕೂರು: ಜಿಲ್ಲೆಯಲ್ಲಿ ನವಿಲುಗಳ ಸರಣಿ ಸಾವು ಆತಂಕ ಮೂಡಿಸಿದ್ದು, ತುಮಕೂರು ಹೊರವಲಯದ ಗೂಳರಿವೆ ಸಮೀಪದ ಸುಣ್ಣಕಲ್ಲು ಕಟ್ಟೆ ಪ್ರದೇಶದಲ್ಲಿ ಇಂದು ಮತ್ತೆ ಎರಡು ನವಿಲುಗಳ ಕಳೇಬರ ಪತ್ತೆಯಾಗಿದೆ.

ಕಳೆದ 15 ದಿನಗಳ ಹಿಂದಷ್ಟೇ ಜಿಲ್ಲೆಯ ವಿವಿಧ ಭಾಗಗಳಲ್ಲಿ ಒಟ್ಟು 44 ನವಿಲುಗಳು ಸಾವನ್ನಪ್ಪಿದ್ದ ಘಟನೆ ಆತಂಕಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ ನವಿಲುಗಳು ಮೃತಪಟ್ಟಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಕಳೆದ ತಿಂಗಳು ಏಪ್ರಿಲ್ 16ರಿಂದ 21ರ ಅವಧಿಯಲ್ಲಿ ಬೊಮ್ಮನಹಳ್ಳಿ, ಕೋಳಿಹಳ್ಳಿ, ಭೈರಸಂದ್ರ ಹಾಗೂ ಹುಲ್ಲೆನಹಳ್ಳಿ ಗ್ರಾಮಗಳಲ್ಲಿ ಸುಮಾರು 32 ನವಿಲುಗಳು ಮೃತಪಟ್ಟಿದ್ದವು. ಆರಂಭದಲ್ಲಿ ತೀವ್ರ ಬಿಸಿಗಾಳಿ ಮತ್ತು ಹೀಟ್ ಸ್ಟ್ರೋಕ್‌ನಿಂದ ನವಿಲುಗಳು ಸಾವನ್ನಪ್ಪಿರಬಹುದು ಎಂಬ ಅನುಮಾನ ವ್ಯಕ್ತವಾಗಿತ್ತು.

ಆದರೆ ಬಳಿಕ ಮೃತಪಟ್ಟ ನವಿಲುಗಳ ಅಂಗಾಂಶಗಳನ್ನು ಪರೀಕ್ಷೆಗೆ ಕಳುಹಿಸಿದಾಗ, ಅವುಗಳಿಗೆ ಹೆಚ್5ಎನ್1 ಸೋಂಕು, ಅಂದರೆ ಹಕ್ಕಿಜ್ವರ ತಗುಲಿರುವುದು ದೃಢಪಟ್ಟಿತ್ತು. ಇದರಿಂದ ಜಿಲ್ಲೆಯಲ್ಲಿ ಹಕ್ಕಿಜ್ವರದ ಭೀತಿ ಹೆಚ್ಚಾಗಿದೆ.

ಇದೀಗ ಸುಣ್ಣಕಲ್ಲು ಕಟ್ಟೆ ಪ್ರದೇಶದಲ್ಲಿ ಪತ್ತೆಯಾದ ಎರಡು ನವಿಲುಗಳ ಸಾವಿನ ನಿಖರ ಕಾರಣ ಪತ್ತೆಹಚ್ಚಲು ಅವುಗಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಹಾಗೂ ಪಶು ಸಂಗೋಪನಾ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!