ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ತುಮಕೂರಿನಲ್ಲಿ ನಾಳೆ ಸಾಧನಾ ಸಮಾವೇಶ ಆಯೋಜಿಸಲಾಗಿದೆ ಎಂದು ಗೃಹಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಇದೇ ಸಮಾವೇಶದಲ್ಲಿ ಸರ್ಕಾರದ ವತಿಯಿಂದ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದುಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೇ 19ರಂದು ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸರ್ಕಾರ ಅಧಿಕಾರಕ್ಕೆ ಬಂದಾಗ ನೀಡಿದ್ದ ಹಲವು ಭರವಸೆಗಳನ್ನು ಈ ಮೂರು ವರ್ಷಗಳಲ್ಲಿ ಹೇಗೆ ಈಡೇರಿಸಲಾಗಿದೆ ಎಂಬುದನ್ನು ಸಮಾವೇಶದಲ್ಲಿ ಜನತೆಗೆ ವಿವರಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.
ಸಮಾವೇಶವನ್ನು ತಮ್ಮ ಶಕ್ತಿ ಪ್ರದರ್ಶನವೆಂದು ಕೆಲವರು ವ್ಯಾಖ್ಯಾನಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಯಾರೊಬ್ಬರ ವೈಯಕ್ತಿಕ ಶಕ್ತಿ ಪ್ರದರ್ಶನವೂ ಅಲ್ಲ ಎಂದು ಸ್ಪಷ್ಟಪಡಿಸಿದರು. ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಸಾಧನೆಗಳನ್ನು ಜನರ ಮುಂದೆ ಮಂಡಿಸುವ ಉದ್ದೇಶ ಮಾತ್ರ ಇದಾಗಿದೆ ಎಂದರು.
ಇದು ಸರ್ಕಾರದ ಕಾರ್ಯಕ್ರಮವಾಗಿದ್ದು, ಪಕ್ಷದ ಕಾರ್ಯಕ್ರಮವಲ್ಲ. ಆದ್ದರಿಂದ ಹೈಕಮಾಂಡ್ ನಾಯಕರನ್ನು ಆಹ್ವಾನಿಸಲಾಗಿಲ್ಲ ಎಂದು ಅವರು ಹೇಳಿದರು.
ಸಮಾವೇಶದ ಬಳಿಕ ಸರ್ಕಾರದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತ ಸಮಾವೇಶವನ್ನು ಪಕ್ಷದ ಆಂತರಿಕ ವಿಚಾರಗಳೊಂದಿಗೆ ಬೆರೆಸಬಾರದು ಎಂದು ಹೇಳಿದರು.

