Home Blog

50 ಲಕ್ಷ ರೂ. ವರದಕ್ಷಿಣೆ ಬೇಡಿಕೆ, ಕೊಲೆ ಯತ್ನ ಆರೋಪ: ಸಸ್ಪೆಂಡ್ PSI ವಿರುದ್ಧ ಪತ್ನಿಯ ಗಂಭೀರ ದೂರು

0

ಬೆಂಗಳೂರು: ಉದ್ಯಮಿಯೊಬ್ಬರಿಂದ ₹50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಬಲೆಗೆ ಬಿದ್ದು ಅಮಾನತುಗೊಂಡಿದ್ದ ಪಿಎಸ್‌ಐ ಬೈರಪ್ಪ ವಿರುದ್ಧ ಇದೀಗ ಪತ್ನಿ ಮತ್ತು ಮಾವನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಲು ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಪತ್ನಿ ನಗರ ಪೊಲೀಸ್ ಆಯುಕ್ತರು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿ) ದೂರು ನೀಡಲು ಮುಂದಾಗಿದ್ದಾರೆ.

ವಕೀಲೆಯಾಗಿರುವ ಪತ್ನಿ ನೀಡಿರುವ ಆರೋಪದ ಪ್ರಕಾರ, ಐದು ವರ್ಷಗಳ ಹಿಂದೆ ಬೈರಪ್ಪ ಅವರನ್ನು ವಿವಾಹವಾಗಿದ್ದು, ಆರಂಭದ ಮೂರು ವರ್ಷ ದಾಂಪತ್ಯ ಜೀವನ ಸುಗಮವಾಗಿತ್ತು. ದಂಪತಿಗೆ ಮೂರು ವರ್ಷದ ಹೆಣ್ಣು ಮಗು ಇದೆ. ಆದರೆ ಬಳಿಕ ಪಿಎಸ್‌ಐ ವರ್ತನೆಯಲ್ಲಿ ಬದಲಾವಣೆ ಕಂಡುಬಂದಿದ್ದು, ಮನೆಗೆ ಯುವತಿಯರನ್ನು ಕರೆತರುವುದು ಸೇರಿದಂತೆ ಹಲವು ವಿಚಾರಗಳು ಕುಟುಂಬದಲ್ಲಿ ಕಲಹಕ್ಕೆ ಕಾರಣವಾಗಿದ್ದವು ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಪ್ರಶ್ನಿಸಿದ ಬಳಿಕ, ಮದ್ಯಪಾನ ಮಾಡಿ ಮನೆಗೆ ಬಂದು ಪತ್ನಿಗೆ ನಿತ್ಯ ಕಿರುಕುಳ ನೀಡುತ್ತಿದ್ದ. ತಂದೆಯ ಮನೆಯಿಂದ ₹50 ಲಕ್ಷ ಹಣ ತಂದುಕೊಡಬೇಕು, ಇಲ್ಲವಾದರೆ ಜೊತೆಯಲ್ಲಿ ಬದುಕುವುದಿಲ್ಲ ಎಂದು ವರದಕ್ಷಿಣೆಗಾಗಿ ಒತ್ತಡ ಹೇರುತ್ತಿದ್ದ ಹಾಗೂ ಹಲ್ಲೆ ನಡೆಸುತ್ತಿದ್ದ ಎಂದು ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದೇ ವೇಳೆ, ಮೂರು ವರ್ಷದ ಮಗಳು ತನ್ನ ಮಗುವೇ ಅಲ್ಲ ಎಂಬ ಅನುಮಾನ ವ್ಯಕ್ತಪಡಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ. ಜಗಳವಾದಾಗ ಪತ್ನಿ ಹಾಗೂ ಮಗುವನ್ನು ಬಿಟ್ಟು ಮನೆಯಿಂದ ಹೊರಟು ಹೋಗುತ್ತಿದ್ದ ಎಂದು ಅವರು ಆರೋಪಿಸಿದ್ದಾರೆ.

ಜುಲೈ 12ರಂದು ನಡೆದ ಗಲಾಟೆಯ ವೇಳೆ ಪರಿಸ್ಥಿತಿ ತಿಳಿಗೊಳಿಸಲು ಬಂದಿದ್ದ ಮಾವನ ಮೇಲೆಯೇ ಮಚ್ಚು ಹಿಡಿದು ಹಲ್ಲೆ ನಡೆಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೂ, ಪೊಲೀಸರು ಎಫ್‌ಐಆರ್ ದಾಖಲಿಸದೆ ಕೇವಲ ಎನ್‌ಸಿಆರ್ ದಾಖಲಿಸಿ ಕಳುಹಿಸಿದ್ದಾರೆ ಎಂದು ಪತ್ನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಲ್ಲದೆ, ಮನೆಯ ಮುಂದೆ ರೌಡಿಗಳನ್ನು ನಿಲ್ಲಿಸಿ ಬೆದರಿಕೆ ಹಾಕುವುದು, ಯುವತಿಯರೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಸಂದೇಶ ವಿನಿಮಯ ಮಾಡಿಕೊಳ್ಳುವುದು, ಮದುವೆಯಾಗುವುದಾಗಿ ನಂಬಿಸಿ ಸಂಪರ್ಕ ಬೆಳೆಸುವುದು ಹಾಗೂ ಒಪ್ಪದಿದ್ದರೆ ಬೆದರಿಕೆ ಹಾಕುವುದು ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಪತ್ನಿ ಮಾಡಿದ್ದಾರೆ. ಕೆಲವು ಯುವತಿಯರೇ ತಮ್ಮ ಚಾಟ್‌ಗಳ ಪ್ರತಿಗಳನ್ನು ಕಳುಹಿಸಿದ್ದು, ಅದರಿಂದ ಈ ವಿಚಾರಗಳು ಬೆಳಕಿಗೆ ಬಂದಿವೆ ಎಂದು ಅವರು ತಿಳಿಸಿದ್ದಾರೆ.

ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್‌ಐ ಮೋಹನ್ ಮುರುಳಿ ಅವರು ಬೈರಪ್ಪ ಅವರ ಬ್ಯಾಚ್‌ಮೇಟ್ ಆಗಿರುವುದರಿಂದ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ ಎಂಬ ಆರೋಪವನ್ನೂ ಪತ್ನಿ ಮಾಡಿದ್ದಾರೆ.

ಸದ್ಯ ಪತ್ನಿ ತನ್ನ ಮೂರು ವರ್ಷದ ಮಗುವಿನೊಂದಿಗೆ ತಂದೆಯ ಮನೆಯಲ್ಲಿ ಆಶ್ರಯ ಪಡೆದಿದ್ದು, ನಗರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ಅಧಿಕೃತ ದೂರು ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

‘ಅಭಿಮಾನಿಗಳ ಪ್ರೀತಿಯ ಗಾಯ’ಕ್ಕೆ ಕೊನೆಗೂ ಸರ್ಜರಿ: ಪವನ್ ಕಲ್ಯಾಣ್ ಚೇತರಿಕೆ, ಪತ್ನಿಯ ಭಾವನಾತ್ಮಕ ಪೋಸ್ಟ್ ವೈರಲ್

ಮುಂಬೈ: ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಅವರ ಬಲ ಭುಜಕ್ಕೆ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಎರಡೂ ಭುಜಗಳಲ್ಲಿ ತೀವ್ರ ರೋಟೇಟರ್ ಕಫ್ ಗಾಯಗಳಿದ್ದರೂ, ಚೇತರಿಕೆ ಸುಲಭವಾಗುವ ಉದ್ದೇಶದಿಂದ ಮೊದಲ ಹಂತದಲ್ಲಿ ಬಲ ಭುಜಕ್ಕೆ ಮಾತ್ರ ಸುಮಾರು ಮೂರೂವರೆ ಗಂಟೆಗಳ ಸರ್ಜರಿ ನಡೆಸಲಾಗಿದೆ.

ಶಸ್ತ್ರಚಿಕಿತ್ಸೆಗೆ ಮುನ್ನ ನಡೆದ ವೈದ್ಯಕೀಯ ಪರೀಕ್ಷೆಯಲ್ಲಿ ಬಲ ಭುಜದಲ್ಲಿ ಮೊದಲೇ ಗೊತ್ತಿರದ ಅವಲ್ಶನ್ ಫ್ರಾಕ್ಚರ್ ಪತ್ತೆಯಾಗಿದ್ದು, ಇದರಿಂದ ಸರ್ಜರಿ ನಿರೀಕ್ಷೆಗಿಂತ ಹೆಚ್ಚು ಸಮಯ ತೆಗೆದುಕೊಂಡಿದೆ. ಆದಾಗ್ಯೂ ಚಿಕಿತ್ಸೆ ಯಶಸ್ವಿಯಾಗಿದ್ದು, ಪವನ್ ಕಲ್ಯಾಣ್ ವೈದ್ಯರ ನಿಗಾದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಸಿದರು. ಈ ಭೇಟಿಯ ಚಿತ್ರಗಳನ್ನು ಪತ್ನಿ ಅನ್ನಾ ಲೆಜ್ನೇವಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಭಾವನಾತ್ಮಕ ಪೋಸ್ಟ್‌ನಲ್ಲಿ ಅನ್ನಾ, “ಪವನ್ ಕಲ್ಯಾಣ್ ತಮ್ಮ ನೋವನ್ನು ಎಂದಿಗೂ ಹೊರಹಾಕುವುದಿಲ್ಲ. ಜೀವನದ ಜವಾಬ್ದಾರಿಗಳೇ ಅವರಿಗೆ ಮೊದಲ ಆದ್ಯತೆ. ಈಗ ಅವರನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದು ನನ್ನ ಕರ್ತವ್ಯ. ಅವರು ಪ್ರತಿದಿನ ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಜನಸೇನಾ ಪಕ್ಷದ ಪ್ರಕಾರ, ವೈದ್ಯರು ಮೊದಲೇ ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ್ದರೂ ಸಾರ್ವಜನಿಕ ಹಾಗೂ ಅಧಿಕೃತ ಕರ್ತವ್ಯಗಳ ಕಾರಣದಿಂದ ಅದನ್ನು ಮುಂದೂಡಲಾಗಿತ್ತು. ಈಗ ಬಲ ಭುಜದ ಶಸ್ತ್ರಚಿಕಿತ್ಸೆ ಪೂರ್ಣಗೊಂಡಿದ್ದು, ಎಡ ಭುಜದ ಸರ್ಜರಿಯನ್ನು ಸುಮಾರು ಎರಡು ತಿಂಗಳ ಬಳಿಕ ನಡೆಸಲು ವೈದ್ಯರು ತೀರ್ಮಾನಿಸಿದ್ದಾರೆ. ಕಳೆದ ವರ್ಷ ಇದೇ ಗಾಯದ ಬಗ್ಗೆ ಪ್ರತಿಕ್ರಿಯಿಸಿದ್ದ ಪವನ್ ಕಲ್ಯಾಣ್, “ಇದು ಅಭಿಮಾನಿಗಳು ಪ್ರೀತಿಯಿಂದ ಕೊಟ್ಟ ಗಾಯ” ಎಂದು ಹಾಸ್ಯವಾಗಿ ಹೇಳಿದ್ದ ಮಾತು ಇದೀಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ.

ಹೈಕೋರ್ಟ್ ಆದೇಶದಂತೆ ಜೈಲಿನಲ್ಲೇ ಪ್ರಮಾಣವಚನ ಸ್ವೀಕರಿಸಿದ ಬಿಜೆಪಿ ಕೌನ್ಸಿಲರ್: ದಕ್ಷಿಣ ಭಾರತದಲ್ಲೇ ಇದೇ ಮೊದಲು

0

ಕೇರಳ: ಕೇರಳದಲ್ಲಿ ಅಪರೂಪದ ಬೆಳವಣಿಗೆಯೊಂದರಲ್ಲಿ, ಬಂಧನದಲ್ಲಿರುವ ಬಿಜೆಪಿ ಕೌನ್ಸಿಲರ್ ಆರ್. ಸುಗತನ್ ಅವರು ವಿಯೂರ್ ಕೇಂದ್ರ ಕಾರಾಗೃಹದಲ್ಲೇ ಕೌನ್ಸಿಲರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಜೈಲಿನಲ್ಲೇ ಜನಪ್ರತಿನಿಧಿಯೊಬ್ಬರು ಪ್ರಮಾಣ ವಚನ ಸ್ವೀಕರಿಸಿರುವ ಮೊದಲ ಘಟನೆ ಇದಾಗಿದೆ.

ತಿರುವನಂತಪುರಂ ಮಹಾನಗರ ಪಾಲಿಕೆಯ ವಯೋಟ್ಟುಕೋಣಂ ವಾರ್ಡ್‌ನಿಂದ ಆಯ್ಕೆಯಾಗಿರುವ ಆರ್. ಸುಗತನ್ ಅವರಿಗೆ ಜೈಲಿನ ಗ್ರಂಥಾಲಯದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಮೇಯರ್ ವಿ.ವಿ. ರಾಜೇಶ್ ಪ್ರತಿಜ್ಞಾವಿಧಿ ಬೋಧಿಸಿದರು. ಈ ವೇಳೆ ಸುಗತನ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸುಗತನ್ ಅವರು ಸದ್ಯ ಕೇರಳ ಸಮಾಜ ವಿರೋಧಿ ಚಟುವಟಿಕೆಗಳ ತಡೆ ಕಾಯ್ದೆ (KAAPA) ಅಡಿಯಲ್ಲಿ ಬಂಧಿತರಾಗಿ ವಿಯೂರ್ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವರಿಗೆ ಸಾಧ್ಯವಾಗಿರಲಿಲ್ಲ. ತಾತ್ಕಾಲಿಕ ಬಿಡುಗಡೆಗೆ ರಾಜ್ಯ ಸರ್ಕಾರ ಅನುಮತಿ ನೀಡದ ಕಾರಣ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ತಾತ್ಕಾಲಿಕ ಬಿಡುಗಡೆ ನೀಡುವುದು ಸಾಧ್ಯವಿಲ್ಲ ಎಂಬ ಸರ್ಕಾರದ ವಾದವನ್ನು ಪರಿಗಣಿಸಿ, ಜೈಲಿನೊಳಗೇ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಕಲ್ಪಿಸುವಂತೆ ಆದೇಶಿಸಿತ್ತು.

ಅದರಂತೆ ಮಂಗಳವಾರ ಬೆಳಗ್ಗೆ 11 ಗಂಟೆಗೆ ಜೈಲಿನ ಗ್ರಂಥಾಲಯದಲ್ಲಿ ಪ್ರತಿಜ್ಞಾವಿಧಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಜೈಲು ಅಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿತ್ತು. ಅಲ್ಲದೆ, ಕಾರ್ಯಕ್ರಮದ ವರದಿ ಮಾಡಲು ಪತ್ರಕರ್ತರಿಗೂ ಜೈಲು ಪ್ರವೇಶಕ್ಕೆ ಅವಕಾಶ ನೀಡುವಂತೆ ನಿರ್ದೇಶನ ನೀಡಲಾಗಿತ್ತು.

ಈ ಹಿಂದೆ ಸುಗತನ್ ಸೇರಿದಂತೆ ಬಿಜೆಪಿಯ 20 ಕೌನ್ಸಿಲರ್‌ಗಳು ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ, ಕಾನೂನುಬದ್ಧ ವಿಧಾನಗಳನ್ನು ಸಂಪೂರ್ಣವಾಗಿ ಪಾಲಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರತಿಜ್ಞಾವಿಧಿಯನ್ನು ಮರುನಡೆಸುವಂತೆ ನ್ಯಾಯಾಲಯ ಆದೇಶಿಸಿತ್ತು.

ಅದರಂತೆ ಜುಲೈ 14ರಂದು ತಿರುವನಂತಪುರಂ ಕಾರ್ಪೊರೇಷನ್ ಕಚೇರಿಯಲ್ಲಿ ಮರು ಪ್ರಮಾಣ ವಚನ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಅದಕ್ಕೂ ಮುನ್ನ ಸಮಾಜ ವಿರೋಧಿ ಚಟುವಟಿಕೆಗಳ ಆರೋಪದಡಿ ಸುಗತನ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ತಾತ್ಕಾಲಿಕ ಬಿಡುಗಡೆಯನ್ನೂ ಸರ್ಕಾರ ನಿರಾಕರಿಸಿದ್ದರಿಂದ, ಹೈಕೋರ್ಟ್ ಆದೇಶದಂತೆ ಅವರು ಜೈಲಿನಲ್ಲೇ ಪ್ರಮಾಣ ವಚನ ಸ್ವೀಕರಿಸಿದರು.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾರಂತಹ ಆಟಗಾರರು ಕ್ರಿಕೆಟ್ʼಗೆ ಅಗತ್ಯ: 40 ಓವರ್ʼಗಳ ಏಕದಿನ ಕ್ರಿಕೆಟ್ʼಗೆ ಗಿಲ್ ವಿರೋಧ

0

ಬರ್ಮಿಂಗ್‌ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿ ಮಂಗಳವಾರದಿಂದ ಆರಂಭವಾಗಲಿದ್ದು, ಸರಣಿಯ ಮೊದಲ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಭವಿಷ್ಯದ ತಂಡದ ಯೋಜನೆ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ನಿವೃತ್ತಿಯ ಕುರಿತಾದ ಊಹಾಪೋಹಗಳಿಗೆ ತೆರೆ ಎಳೆದಿರುವ ಗಿಲ್, 2027ರ ಐಸಿಸಿ ಏಕದಿನ ವಿಶ್ವಕಪ್ ಯೋಜನೆಯಲ್ಲಿ ಈ ಇಬ್ಬರು ದಿಗ್ಗಜರು ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಿಲ್, ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿ ಅವರೊಂದಿಗೆ 2027ರ ವಿಶ್ವಕಪ್‌ಗೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಸಿರುವುದಾಗಿ ತಿಳಿಸಿದರು. ದಕ್ಷಿಣ ಆಫ್ರಿಕಾದ ಪರಿಸ್ಥಿತಿಗೆ ತಕ್ಕಂತೆ ತಂಡವನ್ನು ಹೇಗೆ ರೂಪಿಸಬೇಕು, ಭವಿಷ್ಯದಲ್ಲಿ ತಂಡಕ್ಕೆ ನೆರವಾಗಬಲ್ಲ ಯುವ ವೇಗಿಗಳು, ಸ್ಪಿನ್ನರ್‌ಗಳು ಹಾಗೂ ಆಲ್‌ರೌಂಡರ್‌ಗಳ ಕುರಿತು ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದೇವೆ ಎಂದು ಹೇಳಿದರು.

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಅನುಭವವೇ ತಂಡದ ದೊಡ್ಡ ಶಕ್ತಿಯಾಗಿದೆ ಎಂದು ಗಿಲ್ ಅಭಿಪ್ರಾಯಪಟ್ಟರು. ಕಳೆದ ಒಂದು ದಶಕಕ್ಕೂ ಹೆಚ್ಚು ಕಾಲ ಭಾರತೀಯ ಬ್ಯಾಟಿಂಗ್ ವಿಭಾಗದ ಬೆನ್ನೆಲುಬಾಗಿ ನಿಂತಿರುವ ಈ ಇಬ್ಬರು ಹಲವು ಮಹತ್ವದ ಪಂದ್ಯಗಳಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಅವರ ಅನುಭವ ಮತ್ತು ಮಾರ್ಗದರ್ಶನ ಯುವ ಆಟಗಾರರ ಬೆಳವಣಿಗೆಗೆ ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು.

ಏಕದಿನ ಕ್ರಿಕೆಟ್ ಅನ್ನು 50 ಓವರ್‌ಗಳಿಂದ 40 ಓವರ್‌ಗಳಿಗೆ ಇಳಿಸುವ ಕುರಿತು ನಡೆಯುತ್ತಿರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಗಿಲ್, ಆ ಪ್ರಸ್ತಾವನೆಗೆ ತಾವು ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಏಕದಿನ ಕ್ರಿಕೆಟ್‌ಗೆ ಮತ್ತಷ್ಟು ಜನಪ್ರಿಯತೆ ತರುವ ಉದ್ದೇಶದಿಂದ ಮೂರು ಅಥವಾ ನಾಲ್ಕು ದೇಶಗಳು ಭಾಗವಹಿಸುವ ತ್ರಿಕೋನ ಅಥವಾ ಬಹು ರಾಷ್ಟ್ರಗಳ ಸರಣಿಗಳನ್ನು ಹೆಚ್ಚಾಗಿ ಆಯೋಜಿಸಿದರೆ ಈ ಮಾದರಿಯ ಮೇಲಿನ ಆಸಕ್ತಿ ಮತ್ತಷ್ಟು ಹೆಚ್ಚಲಿದೆ ಎಂದು ಸಲಹೆ ನೀಡಿದರು.

ಇತ್ತೀಚೆಗೆ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಭಾರತ ಅನುಭವಿಸಿದ ಟಿ20 ಸರಣಿ ಸೋಲಿನ ಕುರಿತು ಮಾತನಾಡಿದ ಗಿಲ್, ಟಿ20 ಮತ್ತು ಏಕದಿನ ಕ್ರಿಕೆಟ್ ಸಂಪೂರ್ಣ ವಿಭಿನ್ನ ಮಾದರಿಗಳಾಗಿದ್ದು, ಆ ಫಲಿತಾಂಶಗಳು ಏಕದಿನ ತಂಡದ ಆತ್ಮವಿಶ್ವಾಸದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು. ಜಸ್‌ಪ್ರೀತ್ ಬುಮ್ರಾ ತಂಡಕ್ಕೆ ಮರಳಿರುವುದು ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಬಲ ನೀಡಿದ್ದು, ಹೊಸ ಸರಣಿಯನ್ನು ಸಕಾರಾತ್ಮಕ ಮನೋಭಾವದೊಂದಿಗೆ ಆರಂಭಿಸಲು ಭಾರತ ಸಜ್ಜಾಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಲಾಲೂ ಪ್ರಸಾದ್ ಯಾದವ್ʼಗೆ ಬಿಗ್ ರಿಲೀಫ್: ಜಾಮೀನು ರದ್ದು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

0

ನವದೆಹಲಿ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಮೇವು ಹಗರಣ ಪ್ರಕರಣದಲ್ಲಿ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ ಪೀಠ ಈ ಮಹತ್ವದ ಆದೇಶ ನೀಡಿದೆ. ಮೇವು ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಶಿಕ್ಷೆಯನ್ನು ಅಮಾನತುಗೊಳಿಸಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಜಾಮೀನು ನೀಡಿದ ಬಳಿಕ ಹಲವು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಈಗಿರುವ ವ್ಯವಸ್ಥೆಯಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು.

ಇದೇ ವೇಳೆ, 2018ರಿಂದ ಜಾರ್ಖಂಡ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಲಾಲೂ ಪ್ರಸಾದ್ ಯಾದವ್ ಅವರ ಕ್ರಿಮಿನಲ್ ಮೇಲ್ಮನವಿಗಳನ್ನು ಮುಂದಿನ ಆರು ತಿಂಗಳೊಳಗೆ ಇತ್ಯರ್ಥಪಡಿಸುವಂತೆ ಹೈಕೋರ್ಟ್‌ಗೆ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು, ಲಾಲೂ ಪ್ರಸಾದ್ ಅವರ ಜೈಲು ಅವಧಿಯ ಲೆಕ್ಕಾಚಾರದಲ್ಲಿ ಹೈಕೋರ್ಟ್ ತಪ್ಪು ಮಾಡಿದೆ ಎಂದು ವಾದಿಸಿದರು. ವಿವಿಧ ಪ್ರಕರಣಗಳ ಶಿಕ್ಷೆಗಳು ಒಂದರ ನಂತರ ಮತ್ತೊಂದು ಜಾರಿಯಾಗಬೇಕಾಗಿದ್ದು, ಆ ಪ್ರಕಾರ ಒಟ್ಟು ಶಿಕ್ಷೆಯ ಅವಧಿ 14 ವರ್ಷಗಳಾಗುತ್ತದೆ. ಹೀಗಾಗಿ ಅರ್ಧ ಶಿಕ್ಷೆ ಪೂರ್ಣಗೊಂಡಿದೆ ಎಂಬ ಆಧಾರದ ಮೇಲೆ ಜಾಮೀನು ನೀಡಿರುವುದು ಕಾನೂನುಬದ್ಧವಲ್ಲ ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದರು.

ಇದಕ್ಕೆ ಪ್ರತಿವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಶಿಕ್ಷೆಗಳು ಒಂದರ ನಂತರ ಮತ್ತೊಂದು ಜಾರಿಯಾಗುವ ನಿಯಮವು ಅಂತಿಮ ತೀರ್ಪಿನ ಹಂತದಲ್ಲಿ ಮಾತ್ರ ಅನ್ವಯಿಸುತ್ತದೆ. ಮಧ್ಯಂತರವಾಗಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವ ಸಂದರ್ಭದಲ್ಲಿ ಆ ನಿಯಮ ಅನ್ವಯಿಸುವುದಿಲ್ಲ ಎಂದು ವಾದಿಸಿದರು.

ಅಲ್ಲದೆ, 77 ವರ್ಷದ ಲಾಲೂ ಪ್ರಸಾದ್ ಯಾದವ್ ಅವರ ವಯಸ್ಸು ಹಾಗೂ 2022ರಲ್ಲಿ ಅವರು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಆರೋಗ್ಯ ಪರಿಸ್ಥಿತಿಯನ್ನೂ ಕಪಿಲ್ ಸಿಬಲ್ ನ್ಯಾಯಾಲಯದ ಗಮನಕ್ಕೆ ತಂದರು.

ಏನಿದು ಮೇವು ಹಗರಣ?

1992ರಿಂದ 1995ರ ಅವಧಿಯಲ್ಲಿ ಅವಿಭಜಿತ ಬಿಹಾರದಲ್ಲಿ ಮೇವು, ಔಷಧ ಹಾಗೂ ಕೃಷಿ ಉಪಕರಣಗಳ ಖರೀದಿ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸರ್ಕಾರಿ ಖಜಾನೆಯಿಂದ ಸುಮಾರು ₹950 ಕೋಟಿ ಅಕ್ರಮವಾಗಿ ಹಣ ಪಡೆದುಕೊಂಡಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣವೇ ಮೇವು ಹಗರಣ.

ಈ ಪ್ರಕರಣದಲ್ಲಿ ಒಟ್ಟು 55 ಪ್ರಕರಣಗಳು ದಾಖಲಾಗಿದ್ದು, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರು ಚೈಬಾಸಾ, ದಿಯೋಘರ್, ಡುಮ್ಕಾ ಹಾಗೂ ಡೊರಾಂಡಾ ಖಜಾನೆ ವಂಚನೆಗೆ ಸಂಬಂಧಿಸಿದ ಐದು ಪ್ರಕರಣಗಳಲ್ಲಿ ದೋಷಿ ಎಂದು ತೀರ್ಪು ನೀಡಲಾಗಿದೆ.

ಸುಪ್ರೀಂ ಕೋರ್ಟ್‌ನ ಈ ತೀರ್ಪಿನೊಂದಿಗೆ ಲಾಲೂ ಪ್ರಸಾದ್ ಯಾದವ್ ಅವರಿಗೆ ಸದ್ಯ ಜಾಮೀನು ಮುಂದುವರಿದಿದ್ದು, ಅವರ ಮೇಲ್ಮನವಿಗಳ ಅಂತಿಮ ವಿಚಾರಣೆ ಜಾರ್ಖಂಡ್ ಹೈಕೋರ್ಟ್‌ನಲ್ಲಿ ಮುಂದುವರಿಯಲಿದೆ.

ಬಿಡದಿ ಟೌನ್ ಶಿಪ್ ಹೋರಾಟಗಾರರ ಮೇಲಿನ FIR ರದ್ದುಪಡಿಸಿ: ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ತಕ್ಷಣ ರದ್ದುಪಡಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ರೈತರ ವಿರುದ್ಧ ಪ್ರಕರಣ ದಾಖಲಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರುವ ನಿಖಿಲ್ ಕುಮಾರಸ್ವಾಮಿ, “ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ಅಮಾಯಕ ರೈತರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕಾಂಗ್ರೆಸ್ ಸರ್ಕಾರದ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ” ಎಂದು ಹೇಳಿದ್ದಾರೆ.

ಯಾವುದೇ ಪೂರ್ವ ಮಾಹಿತಿ ನೀಡದೆ ರೈತರ ಭೂಮಿಗೆ ಅಧಿಕಾರಿಗಳು ಪ್ರವೇಶಿಸಿ ಜಂಟಿ ಮಾಪನ (ಜೆಎಂಸಿ) ನಡೆಸಲು ಮುಂದಾಗಿದ್ದರು. ಇದನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದ ರೈತರ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಎಫ್‌ಐಆರ್ ಅನ್ನು ಅಸ್ತ್ರವಾಗಿ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

“ಕಾಂಗ್ರೆಸ್ ಸರ್ಕಾರದ ಈ ದಬ್ಬಾಳಿಕೆಗೆ ರೈತರು ಹೆದರುವ ಅಗತ್ಯವಿಲ್ಲ. ನಿಮ್ಮ ನ್ಯಾಯಯುತ ಹೋರಾಟಕ್ಕೆ ಅಗತ್ಯವಿರುವ ಸಂಪೂರ್ಣ ಕಾನೂನು ನೆರವು ಮತ್ತು ಬೆಂಬಲ ನೀಡಲು ನಾವು ಸದಾ ನಿಮ್ಮೊಂದಿಗಿದ್ದೇವೆ” ಎಂದು ನಿಖಿಲ್ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಇನ್ನು 48 ಗಂಟೆಗಳೊಳಗೆ ರೈತರ ವಿರುದ್ಧ ದಾಖಲಿಸಿರುವ “ಸುಳ್ಳು ಎಫ್‌ಐಆರ್” ಅನ್ನು ರದ್ದುಪಡಿಸಿ, ವಶಕ್ಕೆ ಪಡೆದಿರುವ ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರ ಈ ಬೇಡಿಕೆಗೆ ಸ್ಪಂದಿಸದಿದ್ದರೆ ರೈತರ ಪರವಾಗಿ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯ; ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (Artificial Intelligence–AI) ವಿಶ್ವವಿದ್ಯಾಲಯವನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿ ಈ ವಿಶ್ವವಿದ್ಯಾಲಯ ಸ್ಥಾಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆದ ಗೂಗಲ್ ಐ/ಒ ಕನೆಕ್ಟ್ ಇಂಡಿಯಾ 2026 ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಆಡಳಿತ ಮತ್ತು ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳುವತ್ತ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಎಐ ಕ್ಷೇತ್ರದಲ್ಲಿ ಪ್ರತಿಭೆಗಳನ್ನು ಬೆಳೆಸುವುದು, ಸುಧಾರಿತ ಸಂಶೋಧನೆಗೆ ಉತ್ತೇಜನ ನೀಡುವುದು ಹಾಗೂ ಶಿಕ್ಷಣ ಸಂಸ್ಥೆಗಳು, ಉದ್ಯಮ ವಲಯ ಮತ್ತು ಸರ್ಕಾರದ ನಡುವೆ ಸಮನ್ವಯ ಸಾಧಿಸುವ ಉದ್ದೇಶದಿಂದ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು.

ಎಐ ತಂತ್ರಜ್ಞಾನವನ್ನು ಶಿಕ್ಷಣ, ಆರೋಗ್ಯ, ಕೃಷಿ, ಸರ್ಕಾರಿ ಸೇವೆಗಳು ಹಾಗೂ ಸಣ್ಣ ಕೈಗಾರಿಕೆಗಳಲ್ಲಿ ವ್ಯಾಪಕವಾಗಿ ಬಳಸುವ ಮೂಲಕ ಜನಜೀವನದಲ್ಲಿ ಮಹತ್ವದ ಬದಲಾವಣೆ ತರಲು ಸರ್ಕಾರ ಯೋಜನೆ ರೂಪಿಸಿದೆ. ಎಐ ಆಧಾರಿತ ಬೋಧನಾ ವಿಧಾನಗಳಿಂದ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವುದು, ರೋಗಗಳ ಮುಂಚಿತ ಪತ್ತೆ ಹಾಗೂ ಉತ್ತಮ ವೈದ್ಯಕೀಯ ಸೇವೆಗಳನ್ನು ಒದಗಿಸುವುದು, ರೈತರಿಗೆ ಎಐ ಆಧಾರಿತ ಸಲಹಾ ಸೇವೆಗಳನ್ನು ನೀಡುವುದು ಮತ್ತು ಸರ್ಕಾರಿ ಸೇವೆಗಳನ್ನು ಇನ್ನಷ್ಟು ವೇಗವಾಗಿ ಹಾಗೂ ಪಾರದರ್ಶಕವಾಗಿ ಜನರಿಗೆ ತಲುಪಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಎಐ ಆಧಾರಿತ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕತೆ ಹೆಚ್ಚಿಸಿಕೊಳ್ಳಲು ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

“ಭಾರತದ ನಾವೀನ್ಯತೆಯ ರಾಜಧಾನಿ ಮತ್ತು ವಿಶ್ವದ ಪ್ರಮುಖ ತಂತ್ರಜ್ಞಾನ ಕೇಂದ್ರಗಳಲ್ಲಿ ಒಂದಾದ ಬೆಂಗಳೂರಿನಲ್ಲಿ ಗೂಗಲ್ ಐ/ಒ ಕನೆಕ್ಟ್ ಇಂಡಿಯಾ 2026 ಆಯೋಜನೆಯಾಗಿರುವುದು ಹೆಮ್ಮೆಯ ಸಂಗತಿ. ತಂತ್ರಜ್ಞಾನವು ಇಲ್ಲಿ ಕೇವಲ ಉದ್ಯಮವಲ್ಲ, ಜನರ ದೈನಂದಿನ ಬದುಕಿನ ಭಾಗವಾಗಿದೆ” ಎಂದು ಅವರು ಹೇಳಿದರು.

ಪ್ರತಿ ಪೀಳಿಗೆಗೂ ಮಾನವ ನಾಗರಿಕತೆಯ ದಿಕ್ಕನ್ನೇ ಬದಲಿಸುವ ತಂತ್ರಜ್ಞಾನವೊಂದು ದೊರೆಯುತ್ತದೆ. ಸ್ಟೀಮ್ ಎಂಜಿನ್ ಕೈಗಾರಿಕಾ ಕ್ರಾಂತಿಗೆ ಕಾರಣವಾಯಿತು, ವಿದ್ಯುತ್ ನಗರಗಳನ್ನು ರೂಪಿಸಿತು, ಇಂಟರ್‌ನೆಟ್ ಜಗತ್ತನ್ನು ಸಂಪರ್ಕಿಸಿತು, ಮೊಬೈಲ್ ತಂತ್ರಜ್ಞಾನ ಎಲ್ಲವನ್ನೂ ಕೈಗೆಟುಕುವಂತೆ ಮಾಡಿತು. ಈಗ ಕೃತಕ ಬುದ್ಧಿಮತ್ತೆ ಮಾನವ ಸಾಮರ್ಥ್ಯವನ್ನು ಹೊಸ ಹಂತಕ್ಕೆ ಕೊಂಡೊಯ್ಯುವ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು.

ಶಾಪಿಂಗ್ ವೇಳೆ ಗ್ರಿಲ್‌ನಿಂದ ಬಿದ್ದ 4 ವರ್ಷದ ಬಾಲಕಿ: ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಪೋಷಕರೊಂದಿಗೆ ಬಟ್ಟೆ ಖರೀದಿಸಲು ಬಂದಿದ್ದ ನಾಲ್ಕು ವರ್ಷದ ಬಾಲಕಿ ಆಟವಾಡುವ ವೇಳೆ ಅಂಗಡಿಯ ಗ್ರಿಲ್‌ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್‌ನಲ್ಲಿ ನಡೆದಿದೆ. ಬಾಲಕಿಗೆ ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಗೊಲ್ಲರದೊಡ್ಡಿ ಗ್ರಾಮದ ನಾರಾಯಣಸ್ವಾಮಿ ಹಾಗೂ ಮಧು ದಂಪತಿಯ ಪುತ್ರಿ ಗಗನ ಸಿಂಧು ಈ ದುರ್ಘಟನೆಗೆ ಒಳಗಾಗಿದ್ದಾಳೆ. ಪೋಷಕರು ಖರೀದಿಯಲ್ಲಿ ನಿರತರಾಗಿದ್ದ ವೇಳೆ ಬಾಲಕಿ ಗ್ರಿಲ್ ಏರಿ ಆಟವಾಡುತ್ತಿದ್ದಳು.

ತಾಯಿ ಹಲವು ಬಾರಿ ಮಗುವನ್ನು ಗ್ರಿಲ್‌ನಿಂದ ದೂರ ಕರೆದುಕೊಂಡು ಬಂದಿದ್ದರೂ, ಬಾಲಕಿ ಮತ್ತೆ ಅಲ್ಲಿಗೆ ತೆರಳಿ ಆಟವಾಡಲು ಮುಂದಾಗಿದ್ದಳು. ಇದೇ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾಳೆ.

ತಕ್ಷಣವೇ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಅಂಗಡಿ ಮಾಲೀಕರ ಪ್ರಕಾರ, ಬಾಲಕಿ ಹಲವು ಬಾರಿ ಗ್ರಿಲ್ ಬಳಿ ಹೋಗುತ್ತಿದ್ದಳು. ತಾಯಿ ಕೂಡ ಪದೇಪದೆ ತಡೆದಿದ್ದರೂ ಕೊನೆಗೆ ಈ ಅವಘಡ ಸಂಭವಿಸಿದೆ. ಘಟನೆ ಬಳಿಕ ಕುಟುಂಬಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಸುಳ್ಳು ಆದಾಯ ಪ್ರಮಾಣಪತ್ರ ಆರೋಪ: KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪುತ್ರಿಗೆ ನೋಟಿಸ್

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ, ಅವರ ಪುತ್ರಿ ಸುಮಾ ಸಾಹುಕಾರ್ ಅವರಿಗೆ ವಿಧಾನಸೌಧ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.

ಕೆಪಿಎಸ್‌ಸಿ ಸಹಾಯಕ ಕಾರ್ಯದರ್ಶಿ ನೀಡಿದ ದೂರಿನ ಆಧಾರದ ಮೇಲೆ, ಸರ್ಕಾರಿ ಉದ್ಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ತಂದೆಯ ಪ್ರಭಾವ ಬಳಸಿ ಸುಳ್ಳು ಆದಾಯ ಹಾಗೂ ಜಾತಿ ಪ್ರಮಾಣಪತ್ರ ಸಲ್ಲಿಸಿರುವ ಆರೋಪದಡಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದ ತನಿಖೆಯ ಭಾಗವಾಗಿ ಸುಮಾ ಸಾಹುಕಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿಗೆ ಸುಮಾ ಸಾಹುಕಾರ್ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದಿದ್ದರು. ಹಿಂದುಳಿದ ವರ್ಗಗಳ ಮೀಸಲಾತಿ ಹಾಗೂ ಶುಲ್ಕ ವಿನಾಯಿತಿ ಪಡೆಯುವ ಉದ್ದೇಶದಿಂದ, ತಮ್ಮ ಕುಟುಂಬದ ವಾರ್ಷಿಕ ಆದಾಯವನ್ನು ₹40,000 ಎಂದು ನಮೂದಿಸಿರುವ ಆದಾಯ ಪ್ರಮಾಣಪತ್ರವನ್ನು ಸಲ್ಲಿಸಿದ್ದರು ಎಂಬ ಆರೋಪ ಕೇಳಿಬಂದಿದೆ.

ನೇಮಕಾತಿ ಪ್ರಕ್ರಿಯೆಯ ದಾಖಲೆಗಳ ಪರಿಶೀಲನೆ ವೇಳೆ ಸಲ್ಲಿಸಲಾದ ಆದಾಯ ಪ್ರಮಾಣಪತ್ರ ಹಾಗೂ 3ಬಿ ಮೀಸಲಾತಿ ಪ್ರಮಾಣಪತ್ರದಲ್ಲಿ ವಾರ್ಷಿಕ ಆದಾಯ ₹40 ಸಾವಿರ ಎಂದು ಉಲ್ಲೇಖಿಸಿರುವುದು ಬೆಳಕಿಗೆ ಬಂದಿದೆ. ಆದರೆ, ಈ ಮಾಹಿತಿ ವಾಸ್ತವಕ್ಕೆ ವಿರುದ್ಧವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ವಿಧಾನಸೌಧ ಪೊಲೀಸರು, ದಾಖಲೆಗಳ ಪರಿಶೀಲನೆ ಹಾಗೂ ವಿಚಾರಣೆಗಾಗಿ ಸುಮಾ ಸಾಹುಕಾರ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನಿಗದಿತ ದಿನಾಂಕಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

2014ರ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಎಂಟು ವಾರಗಳಲ್ಲಿ ವಿಚಾರಣೆ ಪೂರ್ಣಗೊಳಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: 2014ರಲ್ಲಿ ಬೆಂಗಳೂರಿನ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯೊಂದರಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆ ಇನ್ನೂ ಪೂರ್ಣಗೊಳ್ಳದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಕರಣದ ವಿಚಾರಣೆಯನ್ನು ಮುಂದಿನ ಎಂಟು ವಾರಗಳೊಳಗೆ ಪೂರ್ಣಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಗಡುವು ವಿಧಿಸಿದೆ.

ಸಂತ್ರಸ್ತ ಬಾಲಕಿಯ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದ್ದು, ತ್ವರಿತ ವಿಚಾರಣೆಯ ಹಕ್ಕು ಸಂವಿಧಾನದ 21ನೇ ವಿಧಿಯ ಅವಿಭಾಜ್ಯ ಅಂಗವಾಗಿದೆ ಎಂದು ಸ್ಪಷ್ಟಪಡಿಸಿದೆ.

ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲೇಖಿಸಿದ ನ್ಯಾಯಪೀಠ, ಪೋಕ್ಸೊ ಪ್ರಕರಣಗಳು ಆದಷ್ಟು ಬೇಗ ಅಂತಿಮ ಹಂತ ತಲುಪಬೇಕು ಎಂದು ಕಾನೂನಿನ ಆಶಯವಾಗಿದೆ. ಇಂತಹ ಪ್ರಕರಣಗಳಲ್ಲಿ ಪದೇಪದೆ ವಿಚಾರಣೆಯನ್ನು ಮುಂದೂಡುವ ಪ್ರವೃತ್ತಿ ಖಂಡನೀಯವಾಗಿದ್ದು, ಉಭಯ ಪಕ್ಷಗಳು ವಿಚಾರಣಾ ಪ್ರಕ್ರಿಯೆ ಶೀಘ್ರ ಪೂರ್ಣಗೊಳ್ಳಲು ಸಹಕರಿಸಬೇಕು ಎಂದು ಸೂಚಿಸಿದೆ.

ಪ್ರಕರಣವನ್ನು ಹಲವು ವರ್ಷಗಳ ಕಾಲ ವಿವಿಧ ನೆಪಗಳಲ್ಲಿ ಮುಂದೂಡಿರುವ ಕ್ರಮವನ್ನು ನ್ಯಾಯಪೀಠ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಇಂತಹ ಸೂಕ್ಷ್ಮ ಪ್ರಕರಣಗಳಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರು ಹಾಗೂ ಸೆಷನ್ಸ್ ನ್ಯಾಯಾಲಯ ಹೆಚ್ಚು ಜಾಗರೂಕತೆಯಿಂದ ನಡೆದುಕೊಳ್ಳಬೇಕಿತ್ತು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಇದೇ ವೇಳೆ, ಭಾರತೀಯ ದಂಡ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಕಲಂ 164ರ ಅಡಿಯಲ್ಲಿ ಬಾಲಕಿ ಮ್ಯಾಜಿಸ್ಟ್ರೇಟ್ ಎದುರು ದಾಖಲಿಸಿದ್ದ ಹೇಳಿಕೆಯ ಪ್ರತಿಯಲ್ಲಿ ಬಾಲಕಿ ಹಾಗೂ ಮ್ಯಾಜಿಸ್ಟ್ರೇಟ್ ಅವರ ಸಹಿ ಇಲ್ಲ ಎಂಬ ಕಾರಣ ನೀಡಿ, ಸಂಬಂಧಿತ ಮ್ಯಾಜಿಸ್ಟ್ರೇಟ್‌ಗೆ ಸಮನ್ಸ್ ಜಾರಿಗೊಳಿಸಬೇಕು ಎಂಬ ಅರ್ಜಿದಾರರ ಮನವಿಯನ್ನು ನ್ಯಾಯಪೀಠ ತಿರಸ್ಕರಿಸಿದೆ.

ಪ್ರಕರಣದ ಹಿನ್ನೆಲೆ: 2014ರ ಜುಲೈ 14ರಂದು ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಜಿಮ್ನಾಸ್ಟಿಕ್ಸ್ ತರಗತಿ ಮುಗಿದ ಬಳಿಕ ಆರು ವರ್ಷದ ಬಾಲಕಿಯ ಮೇಲೆ ಇಬ್ಬರು ತರಬೇತುದಾರರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಪ್ರಕರಣ ಸಂಬಂಧ ಪೊಲೀಸರು ಇಬ್ಬರು ಜಿಮ್ನಾಸ್ಟಿಕ್ಸ್ ತರಬೇತುದಾರರನ್ನು ಬಂಧಿಸಿ, ಭಾರತೀಯ ದಂಡ ಸಂಹಿತೆಯ ಕಲಂ 376, 202 ಹಾಗೂ ಪೋಕ್ಸೊ ಕಾಯ್ದೆಯ ಕಲಂ 4, 6 ಮತ್ತು 21ರ ಅಡಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣ ದೇಶಾದ್ಯಂತ ಭಾರೀ ಸಂಚಲನಕ್ಕೆ ಕಾರಣವಾಗಿದ್ದು, ಶಾಲಾ ಆವರಣಗಳಲ್ಲಿ ಮಕ್ಕಳ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಡ್ಡಾಯ ಸಿಸಿಟಿವಿ ಅಳವಡಿಕೆ ಸೇರಿದಂತೆ ಹಲವು ಕಠಿಣ ಮಾರ್ಗಸೂಚಿಗಳನ್ನು ಸರ್ಕಾರ ಜಾರಿಗೆ ತರಲು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ.