Home Blog

ಭೂಮಿ ಪೂಜೆ ಘೋಷಣೆ ಬೆನ್ನಲ್ಲೇ ‘ವಾರ್ ಮೋಡ್’ಗೆ ವಿಜಯ್: ಮೇಕೆದಾಟು ತಡೆಯಲು ಮೋದಿ ದ್ವಾರ ತಟ್ಟಿದ ತಮಿಳುನಾಡು!

ಚೆನ್ನೈ: ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ಸಂಘರ್ಷ ಮತ್ತೊಮ್ಮೆ ತೀವ್ರಗೊಂಡಿದೆ. ಕರ್ನಾಟಕ ಸರ್ಕಾರ ಶೀಘ್ರವೇ ಭೂಮಿ ಪೂಜೆ ನಡೆಸಲಿದೆ ಎಂಬ ಘೋಷಣೆ ಹೊರಬಿದ್ದ ತಕ್ಷಣ, ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಲರ್ಟ್ ಆಗಿದ್ದು, ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಯೋಜನೆ ತಡೆಯಲು ಒತ್ತಡ ಹೇರಿದ್ದಾರೆ.

ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಾಣವಾಗಲಿರುವ ಮೇಕೆದಾಟು ಜಲಾಶಯ ಯೋಜನೆ ತಮಿಳುನಾಡಿನ ರೈತರ ಹಿತಾಸಕ್ತಿಗೆ ದೊಡ್ಡ ಹೊಡೆತವಾಗಲಿದೆ ಎಂದು ವಿಜಯ್ ಎಚ್ಚರಿಸಿದ್ದಾರೆ. ಕರ್ನಾಟಕ ಸರ್ಕಾರದ ಇತ್ತೀಚಿನ ಹೇಳಿಕೆಗಳು ಮತ್ತು ಯೋಜನೆ ಮುಂದೂಡುವ ಪ್ರಯತ್ನಗಳು ರಾಜ್ಯದ ರೈತರಲ್ಲಿ ಭಾರೀ ಆತಂಕ ಸೃಷ್ಟಿಸಿವೆ ಎಂದು ತಿಳಿಸಿದ್ದಾರೆ.

ತಮಿಳುನಾಡಿನ ಒಪ್ಪಿಗೆ ಪಡೆಯದೆ ಯಾವುದೇ ಕಾಮಗಾರಿಗೆ ಚಾಲನೆ ನೀಡಬಾರದು ಎಂದು ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ವಿಜಯ್ ಆಗ್ರಹಿಸಿದ್ದಾರೆ. ಜೊತೆಗೆ, ಮೇಕೆದಾಟು ಯೋಜನೆಯ ಡಿಪಿಆರ್ ಅನ್ನು ತಕ್ಷಣವೇ ತಿರಸ್ಕರಿಸುವಂತೆ ಕೇಂದ್ರ ಜಲ ಆಯೋಗ ಮತ್ತು ಜಲಶಕ್ತಿ ಸಚಿವಾಲಯಕ್ಕೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

ಡಿಕೆ ಶಿವಕುಮಾರ್ ಭೂಮಿ ಪೂಜೆ ಘೋಷಣೆ ಮಾಡಿದ ಬೆನ್ನಲ್ಲೇ ವಿಜಯ್ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ತೀವ್ರಗೊಳಿಸಿರುವುದು, ಕಾವೇರಿ ವಿವಾದ ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರ ಸ್ವರೂಪ ಪಡೆಯುವ ಸೂಚನೆ ನೀಡುತ್ತಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣ: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಬೇಸಿಗೆ ರಜೆ ಬಳಿಕ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ರದ್ದುಪಡಿಸುವಂತೆ ಕೋರಿ ಮಾಜಿ ಶಾಸಕ ವಿನಯ್ ಕುಲಕರ್ಣಿ ಹಾಗೂ ಚಂದ್ರಶೇಖರ್ ಇಂಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಮತ್ತು ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ವಿಭಾಗೀಯ ಪೀಠ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಈವರೆಗೆ ಸಿಬಿಐ ಪರದಿಂದ ಆಕ್ಷೇಪಣೆ ಸಲ್ಲಿಕೆಯಾಗಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಜೊತೆಗೆ, ಶಿಕ್ಷೆಯಿಂದ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಕಳೆದುಕೊಂಡಿರುವ ಹಿನ್ನೆಲೆ ಮಧ್ಯಂತರ ಚುನಾವಣೆ ಪ್ರಕ್ರಿಯೆಗೆ ತಾತ್ಕಾಲಿಕ ತಡೆ ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಬಿಐ ಪರ ವಕೀಲರು, ಅರ್ಜಿಗೆ ಸಂಬಂಧಿಸಿದ ಆಕ್ಷೇಪಣೆ ಸಿದ್ಧವಾಗಿದ್ದು, ಅದನ್ನು ಶೀಘ್ರದಲ್ಲೇ ಸಲ್ಲಿಸಲಾಗುವುದು ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ವಿಚಾರಣೆಯನ್ನು ಬೇಸಿಗೆ ರಜೆ ಮುಗಿದ ಬಳಿಕ ಮುಂದುವರಿಸಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ಮುಂದೂಡಿತು.

ಪ್ರಕರಣದ ಹಿನ್ನೆಲೆ

2016ರಲ್ಲಿ ನಡೆದಿದ್ದ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸುದೀರ್ಘ ವಿಚಾರಣೆ ನಡೆಸಿ, 2026ರ ಏಪ್ರಿಲ್ 15ರಂದು 17 ಮಂದಿಯನ್ನು ಅಪರಾಧಿಗಳೆಂದು ಘೋಷಿಸಿತ್ತು. ಬಳಿಕ ಏಪ್ರಿಲ್ 17ರಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಈ ತೀರ್ಪನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ.

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿ ಕಾಯ್ದೆಯಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಶಿಕ್ಷೆ ಘೋಷಿತ ದಿನಾಂಕದಿಂದಲೇ ಅನರ್ಹತೆ ಜಾರಿಯಾಗಿದ್ದು, ಶಿಕ್ಷಾ ಅವಧಿ ಪೂರ್ಣಗೊಂಡ ನಂತರವೂ ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇರುವುದಿಲ್ಲ.

ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 8 ಪ್ರಕಾರ, ಯಾವುದೇ ಜನಪ್ರತಿನಿಧಿಗೆ ಎರಡು ವರ್ಷಕ್ಕಿಂತ ಹೆಚ್ಚು ಶಿಕ್ಷೆ ವಿಧಿಸಿದರೆ ಅವರು ಸ್ವಯಂಚಾಲಿತವಾಗಿ ಅನರ್ಹರಾಗುತ್ತಾರೆ. ಆದರೆ, ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆಯಾಜ್ಞೆ ನೀಡಿದಲ್ಲಿ ಅನರ್ಹತೆ ಆದೇಶವೂ ಅಮಾನತುಗೊಳ್ಳುವ ಸಾಧ್ಯತೆ ಇದೆ.

ನಿಷ್ಕ್ರಿಯ ಸರ್ಕಾರದ ಆಡಳಿತ ಯಂತ್ರ ದೆಹಲಿಗೆ ಶಿಫ್ಟ್ ಆಗಿದೆ: ಕಾಂಗ್ರೆಸ್ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಮೊದಲೇ ನಿಷ್ಕ್ರಿಯವಾಗಿದ್ದ ಸರ್ಕಾರದ ಆಡಳಿತ ಯಂತ್ರ ಇದೀಗ ದೆಹಲಿಗೆ ಶಿಫ್ಟ್ ಆಗಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಕುರ್ಚಿ ಕಿತ್ತಾಟದ ನಡುವೆಯೂ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.

ಈ ಸರ್ಕಾರ ಆರಂಭದಿಂದಲೇ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಸ್ಪಂದನೆ ನೀಡಿದ್ದರೆ ಸಾರಿಗೆ ನೌಕರರು, ಅಂಗನವಾಡಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿರಲಿಲ್ಲ. ಜನರ ನೋವು ಕೇಳುವ ಮನಸ್ಸೇ ಈ ಸರ್ಕಾರಕ್ಕೆ ಇಲ್ಲ ಎಂದು ಟೀಕಿಸಿದರು.

ಅಧಿಕಾರಕ್ಕೆ ಬರುವಾಗ ಭ್ರಷ್ಟಾಚಾರರಹಿತ ಆಡಳಿತ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್, ಇದೀಗ ‘60 ಪರ್ಸೆಂಟ್ ಸರ್ಕಾರ’ವಾಗಿ ಮಾರ್ಪಟ್ಟಿದೆ ಎಂದು ಕಿಡಿಕಾರಿದ ಅವರು, ಯಾವ ಇಲಾಖೆಯಲ್ಲಿ ಲಂಚವಿಲ್ಲ ಎನ್ನುವ ಸ್ಥಿತಿ ಇದೆ? ಯಾವ ಸಚಿವರು ನಾನು ಲಂಚ ಪಡೆಯುವುದಿಲ್ಲ ಎಂದು ಹೇಳುವ ಪರಿಸ್ಥಿತಿಯಲ್ಲಿದ್ದಾರೆ? ಎಂದು ಪ್ರಶ್ನಿಸಿದರು.

ರಾಜ್ಯದ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಆದರೆ ಸಂಬಂಧಪಟ್ಟ ಸಚಿವರು ಬೇರೆ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಟೀಕೆ ಮಾಡುವುದಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಆರೋಪಿಸಿದರು.

ಜನರ ಸಮಸ್ಯೆಗಳನ್ನು ಕೇಳಿಕೊಳ್ಳಲು ವಿಧಾನಸೌಧಕ್ಕೆ ಬರುವವರು ಇದೀಗ ದೆಹಲಿಗೆ ಹೋಗಬೇಕಾದ ಪರಿಸ್ಥಿತಿ ಬಂದಿದೆ ಎಂದು ವ್ಯಂಗ್ಯವಾಡಿದ ಅವರು, ನನ್ನ ಸ್ಥಾನ ಉಳಿಯುತ್ತದೆಯೇ? ಯಾವ ಖಾತೆ ಸಿಗುತ್ತದೆಯೇ? ಎಂಬ ಚರ್ಚೆಯಲ್ಲೇ ನಾಯಕರು ತೊಡಗಿದ್ದಾರೆ. ಜನರ ಸಮಸ್ಯೆ ಕೇಳಲು ಇವರಿಗೆ ಸಮಯವೇ ಇಲ್ಲ ಎಂದರು.

ಕರ್ನಾಟಕ ಸರ್ಕಾರ ದೆಹಲಿಯಿಂದ ನಡೆಯುತ್ತಿದೆ: ಕಾಂಗ್ರೆಸ್ ವಿರುದ್ಧ ಅರಗ ಜ್ಞಾನೇಂದ್ರ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದ್ದು, ಕರ್ನಾಟಕದಲ್ಲಿ ಸರ್ಕಾರವೇ ಇಲ್ಲದಂತಾಗಿದೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವಿನ ನಾಯಕತ್ವ ಚರ್ಚೆ ದೆಹಲಿಗೆ ಶಿಫ್ಟ್ ಆಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನಿನ್ನೆಯಿಂದ ಕರ್ನಾಟಕ ಸರ್ಕಾರವೇ ದೆಹಲಿಗೆ ಸ್ಥಳಾಂತರವಾಗಿದೆ. ರಾಜ್ಯ ಸರ್ಕಾರ ದೆಹಲಿಯಿಂದ ಕಾರ್ಯನಿರ್ವಹಿಸುವ ದುಸ್ಥಿತಿ ಬಂದಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾಗುತ್ತಾ ಬಂದಿದೆ. ಆದರೆ ಅಭಿವೃದ್ಧಿ ವಿಚಾರ ಬಿಟ್ಟು ಯಾರು ಮುಖ್ಯಮಂತ್ರಿ ಆಗಬೇಕು, ಯಾವಾಗ ಆಗಬೇಕು ಎಂಬ ಅಧಿಕಾರದ ಕಿತ್ತಾಟದಲ್ಲೇ ನಾಯಕರು ತೊಡಗಿದ್ದಾರೆ ಎಂದು ಆರೋಪಿಸಿದರು.

ಇದೇ ವೇಳೆ ರಾಜ್ಯ ಸರ್ಕಾರ ಜನರ ಮೇಲೆ ತೆರಿಗೆ ಭಾರ ಹಾಕಿ ಸುಲಿಗೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡುವುದಕ್ಕಿಂತ ಅಧಿಕಾರದ ಹೋರಾಟಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡಲಾಗುತ್ತಿದೆ ಎಂದರು.

ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದ ಅರಗ ಜ್ಞಾನೇಂದ್ರ, ಪೊಲೀಸರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ದಾಖಲಿಸಿದ್ದ ಪ್ರಕರಣಗಳನ್ನೇ ಸರ್ಕಾರ ವಾಪಸ್ ಪಡೆಯುತ್ತಿದೆ. ನಾನು ಗೃಹ ಸಚಿವನಾಗಿದ್ದಾಗ ದಾಖಲಿಸಿದ್ದ ಪ್ರಕರಣಗಳನ್ನೂ ಈಗ ಹಿಂಪಡೆಯಲಾಗಿದೆ ಎಂದು ಹೇಳಿದರು.

ಸ್ಪೀಕರ್ ಪತ್ರ ಕೊಟ್ಟಿದ್ದಾರೆ ಎಂಬ ಕಾರಣ ಹೇಳಿ ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ. ಇದು ಅತ್ಯಂತ ದುರಂತಕರ ಬೆಳವಣಿಗೆ ಎಂದು ಟೀಕಿಸಿದರು.

ಮುಸ್ಲಿಮರ ತುಷ್ಟೀಕರಣ ರಾಜಕಾರಣವೇ ಸರ್ಕಾರದ ಪ್ರಮುಖ ಅಜೆಂಡಾ ಆಗಿದೆ ಎಂದು ಆರೋಪಿಸಿದ ಅವರು, ಭಟ್ಕಳದಲ್ಲಿ ನಡೆದ ಘಟನೆಗಳು ಅದರ ಪರಿಣಾಮ. ಮತ್ತೆ ಪೊಲೀಸರ ಮೇಲೆಯೇ ಹಲ್ಲೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗುಡುಗಿದರು.

ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದ ಇನೋವಾ ಕಾರು: 9 ವರ್ಷದ ಬಾಲಕ ಸಾವು

0

ಕೋಲಾರ: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ವರ್ಷದ ಬಾಲಕ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಬಂಗಾರಪೇಟೆ ನಿವಾಸಿ ಮುಜಾಮಿಲ್ ಮೃತ ಬಾಲಕ. ಇನೋವಾ ಕಾರಿನಲ್ಲಿದ್ದ ಸಯ್ಯದ್ ಉಲ್ಲಾ, ಸಯ್ಯದ್ ಅಫ್ರಿದ್, ಯಾಸ್ಮಿನ್ ಹಾಗೂ ಅಸೀಬಾ ಗಾಯಗೊಂಡಿದ್ದು, ಅವರನ್ನು ತಕ್ಷಣ ಕೋಲಾರದ ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಅತಿವೇಗ ಹಾಗೂ ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ನಡೆಸುತ್ತಿದ್ದಾರೆ.

ಒಂದಾದ ಮೇಲೊಂದು ಬಲಿ ಪಡೆಯುತ್ತಿರುವ ಕೃಷಿ ಹೊಂಡಗಳು: ಕೋಲಾರದಲ್ಲಿ ಮತ್ತೆ ಇಬ್ಬರು ಮಕ್ಕಳು ಸಾವು!

0

ಕೋಲಾರ: ಕೋಲಾರ ಜಿಲ್ಲೆಯಲ್ಲಿ ಕೃಷಿ ಹೊಂಡಗಳ ದುರಂತ ಮುಂದುವರಿದಿದ್ದು, ಮಾಲೂರು ತಾಲೂಕಿನ ಕೊತ್ತೂರು ಗ್ರಾಮದಲ್ಲಿ ಇಬ್ಬರು ಸಹೋದರರು ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಕಳೆದ 20 ದಿನಗಳಲ್ಲಿ ಇದೇ ರೀತಿಯ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ದೇವಕಿರಣ್ (12) ಮತ್ತು ವಿನುತ್ (9) ಮೃತ ಬಾಲಕರು. ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಾತನ ಮನೆಗೆ ಬಂದಿದ್ದ ಇಬ್ಬರೂ ಆಟವಾಡುತ್ತಿದ್ದ ವೇಳೆ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಕೃಷಿ ಹೊಂಡಗಳಿಗೆ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಆರ್ ರವಿ ಈಗಾಗಲೇ ಸೂಚನೆ ನೀಡಿದ್ದರೂ, ಜಿಲ್ಲೆಯಲ್ಲಿ ನಿರ್ಲಕ್ಷ್ಯ ಮುಂದುವರಿದಿದೆ ಎಂಬ ಆರೋಪ ಕೇಳಿಬಂದಿದೆ. ತಂತಿ ಬೇಲಿ ಹಾಗೂ ರಕ್ಷಣಾ ವ್ಯವಸ್ಥೆ ಇಲ್ಲದ ಕಾರಣ ನಿರಂತರವಾಗಿ ಅಮಾಯಕರು ಬಲಿಯಾಗುತ್ತಿದ್ದಾರೆ.

ಈ ತಿಂಗಳಲ್ಲೇ ಬಂಗಾರಪೇಟೆ, ಶ್ರೀನಿವಾಸಪುರ ಹಾಗೂ ಮಾಲೂರು ಭಾಗಗಳಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಮಕ್ಕಳು ಮತ್ತು ಯುವಕರು ಸೇರಿ ಹಲವರು ಮೃತಪಟ್ಟಿದ್ದರು. ಈಗ ಮತ್ತೊಮ್ಮೆ ಇಬ್ಬರು ಬಾಲಕರು ಬಲಿಯಾಗಿರುವುದು ಜಿಲ್ಲೆಯಲ್ಲಿ ಆತಂಕ ಹೆಚ್ಚಿಸಿದೆ.

ಸುರಕ್ಷತಾ ನಿಯಮಗಳನ್ನು ಪಾಲಿಸದ ಕೃಷಿ ಹೊಂಡಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಶಾಲೆ ಆರಂಭಕ್ಕೂ ಮುನ್ನ ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ: ದ್ವಿಭಾಷಾ ಬೋಧನೆಗೂ ಗ್ರೀನ್ ಸಿಗ್ನಲ್

ಬೆಂಗಳೂರು: ಬೇಸಿಗೆ ರಜೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 1ರಿಂದ ಕರ್ನಾಟಕದಾದ್ಯಂತ ಶಾಲೆಗಳು ಪುನರಾರಂಭವಾಗಲಿವೆ. ಈಗಾಗಲೇ ವಿದ್ಯಾರ್ಥಿಗಳು ಹೊಸ ಶೈಕ್ಷಣಿಕ ವರ್ಷದ ಸಿದ್ಧತೆಯಲ್ಲಿ ತೊಡಗಿದ್ದು, ಶಾಲೆ ಆರಂಭಕ್ಕೂ ಮುನ್ನ ಶಿಕ್ಷಣ ಇಲಾಖೆ ಮಹತ್ವದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅನ್ವಯವಾಗುವಂತೆ ಹೊರಡಿಸಿರುವ ಈ ಮಾರ್ಗಸೂಚಿಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಡಿಜಿಟಲ್ ಹಾಜರಾತಿ ಕಡ್ಡಾಯಗೊಳಿಸಲಾಗಿದೆ. ಜೊತೆಗೆ, ದ್ವಿಭಾಷಾ ಬೋಧನಾ ಪದ್ಧತಿಯನ್ನು ಜಾರಿಗೆ ತರಲು ಸೂಚಿಸಲಾಗಿದೆ.

ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಶಾಲಾ ಕಟ್ಟಡಗಳ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಶಾಲಾ ಕಟ್ಟಡ, ಶೌಚಾಲಯ ಅಥವಾ ಅಡುಗೆ ಕೋಣೆಗಳು ಶಿಥಿಲಾವಸ್ಥೆಯಲ್ಲಿದ್ದರೆ ತಕ್ಷಣವೇ ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ದುರಸ್ತಿ ಅಥವಾ ತೆರವು ಕಾರ್ಯ ಕೈಗೊಳ್ಳಬೇಕು ಎಂದು ಇಲಾಖೆ ಸೂಚಿಸಿದೆ.

ಮಾರ್ಗಸೂಚಿಯ ಪ್ರಮುಖ ಅಂಶಗಳು:

  • ಶಾಲಾ ಕಟ್ಟಡಗಳು, ಶೌಚಾಲಯಗಳು ಮತ್ತು ಅಡುಗೆ ಕೋಣೆಗಳ ಸುರಕ್ಷತಾ ಪರಿಶೀಲನೆ ಕಡ್ಡಾಯ.
  • 6ರಿಂದ 14 ವರ್ಷದ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಕ್ರಮ.
  • ಉರ್ದು-ಇಂಗ್ಲಿಷ್ ದ್ವಿಭಾಷಾ ಮಾಧ್ಯಮವನ್ನು ಈ ವರ್ಷದಿಂದಲೇ ಆರಂಭಿಸಲು ಅವಕಾಶ.
  • ಇಲಾಖೆಯ ಪೂರ್ವಾನುಮತಿ ಪಡೆದ ಶಾಲೆಗಳಲ್ಲಿ ದ್ವಿಭಾಷಾ ಬೋಧನಾ ಪದ್ಧತಿ ಜಾರಿ.
  • ಮೇ 28ರೊಳಗೆ ಶಾಲೆಗಳ ಸ್ವಚ್ಛತೆ, ಕುಡಿಯುವ ನೀರು ಹಾಗೂ ಸುರಕ್ಷತಾ ತಪಾಸಣೆ ಪೂರ್ಣಗೊಳಿಸಬೇಕು.
  • ಮೇ 29ರಂದು ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಕಡ್ಡಾಯವಾಗಿ ಶಾಲೆಗೆ ಹಾಜರಾಗಿ ಪೂರ್ವ ಸಿದ್ಧತೆ ಕೈಗೊಳ್ಳಬೇಕು.
  • ಜೂನ್ 1ರಂದು ಶಾಲಾ ಪ್ರಾರಂಭೋತ್ಸವ ಹಾಗೂ ವಿದ್ಯಾರ್ಥಿ ದಾಖಲಾತಿ ಪ್ರಕ್ರಿಯೆ ಆರಂಭ.
  • ಜೂನ್ 30ರಂದು ದಾಖಲಾತಿ ಆಂದೋಲನ ಮುಕ್ತಾಯ.
  • ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.

ಹೊಸ ಶೈಕ್ಷಣಿಕ ವರ್ಷವನ್ನು ಸುಗಮವಾಗಿ ಆರಂಭಿಸಲು ಶಿಕ್ಷಣ ಇಲಾಖೆ ಈ ಕ್ರಮಗಳನ್ನು ಜಾರಿಗೆ ತರುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಶಿಕ್ಷಣದ ಗುಣಮಟ್ಟಕ್ಕೆ ಆದ್ಯತೆ ನೀಡಲಾಗಿದೆ.

ಸಿಎಂ ಆದ್ಮೇಲೆ ಮೊದಲ ದೊಡ್ಡ ಗಿಫ್ಟ್ ಕೊಟ್ಟ ವಿಜಯ್: ಚಿತ್ರರಂಗಕ್ಕೆ ದಿನಕ್ಕೆ 5 ಶೋ ಅನುಮತಿ!

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ತಮಿಳು ಚಿತ್ರರಂಗಕ್ಕೆ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಹೊಸದಾಗಿ ಬಿಡುಗಡೆಯಾಗುವ ಸಿನಿಮಾಗಳಿಗೆ ಮೊದಲ ವಾರ ದಿನಕ್ಕೆ 5 ಪ್ರದರ್ಶನಗಳನ್ನು ನಡೆಸಲು ಸರ್ಕಾರ ಅಧಿಕೃತ ಅನುಮತಿ ನೀಡಿದೆ.

ಚಿತ್ರರಂಗದ ಪ್ರತಿನಿಧಿಗಳು ಮುಖ್ಯಮಂತ್ರಿ ಭೇಟಿಯಾಗಿ ವಿವಿಧ ಬೇಡಿಕೆಗಳನ್ನು ಮಂಡಿಸಿದ್ದ ಬೆನ್ನಲ್ಲೇ ಈ ನಿರ್ಧಾರ ಪ್ರಕಟವಾಗಿದೆ. ಚಿತ್ರೋದ್ಯಮದ ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಸರ್ಕಾರ ‘ತಮಿಳುನಾಡು ಸಿನಿಮಾ ಥಿಯೇಟರ್ಸ್ ರೆಗ್ಯುಲೇಶನ್’ ನಿಯಮಾವಳಿಗೆ ತಿದ್ದುಪಡಿ ತಂದಿದೆ.

ಈ ನಿರ್ಧಾರಕ್ಕೆ ನಟ ವಿಶಾಲ್ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಪೋಸ್ಟ್‌ನಲ್ಲಿ, “ಚಿತ್ರರಂಗದ ಸಂಕಷ್ಟವನ್ನು ಅರ್ಥಮಾಡಿಕೊಂಡು ತೆಗೆದುಕೊಂಡ ಈ ನಿರ್ಧಾರಕ್ಕೆ ಧನ್ಯವಾದಗಳು. ಜನಪರ ಆಡಳಿತದ ಸಂಕೇತ ಇದು” ಎಂದು ತಿಳಿಸಿದ್ದಾರೆ.

ಹೊಸ ತಮಿಳು ಸಿನಿಮಾಗಳಿಗೆ ಬಿಡುಗಡೆಯಾದ ದಿನದಿಂದ ಏಳು ದಿನಗಳವರೆಗೆ ದಿನಕ್ಕೆ ಐದು ಪ್ರದರ್ಶನಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಶನಿವಾರ, ಭಾನುವಾರ, ಹಬ್ಬ ಹಾಗೂ ಸಾರ್ವಜನಿಕ ರಜಾದಿನಗಳಲ್ಲೂ ಇದೇ ನಿಯಮ ಜಾರಿಯಲ್ಲಿರಲಿದೆ.

ಚಿತ್ರರಂಗಕ್ಕೆ ಬಾಕ್ಸ್ ಆಫೀಸ್ ಮಟ್ಟದಲ್ಲಿ ದೊಡ್ಡ ಬೂಸ್ಟ್ ನೀಡುವ ಈ ತೀರ್ಮಾನವನ್ನು ಕಾಲಿವುಡ್ ವಲಯ ಸ್ವಾಗತಿಸಿದೆ.

ಠಾಣೆಗೆ ವಿನಾಕಾರಣ ಕರೆದು ಕಿರುಕುಳ ಕೊಡಬೇಡಿ: ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ

ಬೆಂಗಳೂರು: ತನಿಖೆಯ ಹೆಸರಿನಲ್ಲಿ ಸಾರ್ವಜನಿಕರನ್ನು ವಿನಾಕಾರಣ ಪೊಲೀಸ್ ಠಾಣೆಗೆ ಕರೆಸಿ ಕಿರುಕುಳ ನೀಡಬಾರದು ಎಂದು ಹೈಕೋರ್ಟ್ ಪೊಲೀಸರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ದಾಖಲಾಗಿರುವ ಅಪರಾಧದ ವ್ಯಾಪ್ತಿಯನ್ನು ಮೀರಿ ವಿಚಾರಣೆ ನಡೆಸಿದರೆ ಸಂಬಂಧಪಟ್ಟ ತನಿಖಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಅಲ್ಲದೆ, ತನಿಖೆಗೆ ಹಾಜರಾಗುವಂತೆ ನೀಡುವ ಸಮನ್ಸ್ ಅಥವಾ ನೋಟಿಸ್‌ನಲ್ಲಿ ಯಾವ ಕಾನೂನಿನ ಯಾವ ಕಲಂ ಅಡಿಯಲ್ಲಿ ಕರೆಯಲಾಗಿದೆ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಬೇಕು. ಜೊತೆಗೆ, ನೋಟಿಸ್ ನೀಡಿದ ಅಧಿಕಾರಿಯ ಹೆಸರು, ಹುದ್ದೆ ಹಾಗೂ ಸಹಿ ಕಡ್ಡಾಯವಾಗಿರಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.

ಬೆಂಗಳೂರಿನ ವರುಣ್ ಜುವೆಲ್ಲರ್ಸ್ ಸಂಸ್ಥಾಪಕರಾದ ನರೇಶ್ ಕುಮಾರ್ ಸಿಯಾಲ್ ಹಾಗೂ ಪ್ರಕಾಶ್ ಚಾಂದ್ ಸಿಯಾಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರ ಏಕಸದಸ್ಯ ಪೀಠ ಈ ಮಹತ್ವದ ಸೂಚನೆ ನೀಡಿದೆ.

ಅತ್ತಿಬೆಲೆ ಠಾಣೆ ಪೊಲೀಸರು ತನಿಖೆಗೆ ಹಾಜರಾಗುವಂತೆ ನೀಡಿದ್ದ ನೋಟಿಸ್‌ನಲ್ಲಿ ಯಾವುದೇ ಕಾನೂನು ಸೆಕ್ಷನ್ ಉಲ್ಲೇಖಿಸದೇ, ತನಿಖಾಧಿಕಾರಿಯ ಹೆಸರು ಮತ್ತು ಹುದ್ದೆ ನಮೂದಿಸದೇ ಸಮನ್ಸ್ ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, “ಯಾವ ಅಧಿಕಾರದ ಅಡಿಯಲ್ಲಿ ನೋಟಿಸ್ ನೀಡಲಾಗಿದೆ? ಅಧಿಕಾರಿಯ ಹೆಸರು ಮತ್ತು ಹುದ್ದೆ ಯಾಕೆ ನಮೂದಿಸಿಲ್ಲ?” ಎಂದು ಪ್ರಶ್ನಿಸಿದೆ.

ಇದರ ಜೊತೆಗೆ, ಎರಡು ವಾರಗಳೊಳಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಪ್ರಮಾಣಪತ್ರ ಸಲ್ಲಿಸಬೇಕು ಎಂದು ಸೂಚಿಸಿ, ವಿಚಾರಣೆಯನ್ನು ನಾಲ್ಕನೇ ವಾರಕ್ಕೆ ಮುಂದೂಡಿದೆ.

ನ್ಯಾಯಪೀಠವು, “ನಿಯಮಾವಳಿಗಳ ಸ್ಪಷ್ಟ ಉಲ್ಲೇಖವಿಲ್ಲದೆ ಯಾರನ್ನೂ ಠಾಣೆಗೆ ಕರೆಯಬಾರದು. ಕರೆಯಿಸಿದರೂ ಕಿರುಕುಳ ನೀಡದೇ ನಿಗದಿತ ಅವಧಿಯೊಳಗೆ ವಿಚಾರಣೆ ಮುಗಿಸಬೇಕು” ಎಂದು ತಿಳಿಸಿದೆ.

ಇದೇ ವೇಳೆ, ಇ-ಆಫೀಸ್ ವ್ಯವಸ್ಥೆ ಬಳಸಿ ಡಿಜಿಟಲ್ ಸಹಿ ಹೊಂದಿರುವ ನೋಟಿಸ್ ನೀಡಬೇಕಿತ್ತು. ಅದನ್ನು ಯಾಕೆ ಪಾಲಿಸಲಾಗಿಲ್ಲ ಎಂದು ಕೂಡ ನ್ಯಾಯಾಲಯ ಪ್ರಶ್ನಿಸಿದೆ.

ಪ್ರಕರಣದ ಹಿನ್ನೆಲೆ:

ಮಾರ್ಚ್ ತಿಂಗಳಲ್ಲಿ ಅತ್ತಿಬೆಲೆಯಲ್ಲಿ ನಡೆದ ದಾರುಣ ಘಟನೆಯಲ್ಲಿ, ಚೀಟಿ ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ಮೋಹನ್ ಎಂಬಾತ ತಾಯಿ ಹಾಗೂ ಅಕ್ಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಈ ಪ್ರಕರಣಕ್ಕೂ ಮುನ್ನ ಬಿಡುಗಡೆ ಮಾಡಿದ ವಿಡಿಯೊದಲ್ಲಿ ಸಾಲದ ಒತ್ತಡ ಮತ್ತು ಕಿರುಕುಳದ ಬಗ್ಗೆ ಉಲ್ಲೇಖಿಸಿದ್ದ.

ಈ ಪ್ರಕರಣದ ತನಿಖೆ ಸಂಬಂಧ ವರುಣ್ ಜುವೆಲ್ಲರ್ಸ್ ಸಂಸ್ಥಾಪಕರಿಗೆ ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದರು. ಆದರೆ ತಮ್ಮ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲದಿದ್ದರೂ ಠಾಣೆಗೆ ಕರೆಸಿ ವ್ಯಾಪಾರ, ಲಾಭ ಸೇರಿದಂತೆ ಸಂಬಂಧವಿಲ್ಲದ ವಿಚಾರಗಳ ಬಗ್ಗೆ ಇಡೀ ದಿನ ವಿಚಾರಣೆ ನಡೆಸಿ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಮೇಕೆದಾಟು; ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂಗೆ ಧನ್ಯವಾದ – ಡಿ.ಕೆ. ಶಿವಕುಮಾರ್

ನವದೆಹಲಿ: ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ವಜಾಗೊಳಿಸಿದೆ. ಇದು ಕರ್ನಾಟಕ ಪಾಲಿಗೆ ಶುಭಸುದ್ದಿ. ಕರ್ನಾಟಕ ರಾಜ್ಯದ ಜನರ ಪರವಾಗಿ ನಾವು ಸುಪ್ರೀಂ ಕೋರ್ಟಿಗೆ ಧನ್ಯವಾದ ಅರ್ಪಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಸುಪ್ರೀಂ ಕೋರ್ಟ್ ಈ ಹಿಂದಿನ ಆದೇಶದಲ್ಲೇ ನಮಗೆ ಸ್ಪಷ್ಟ ಸೂಚನೆ ನೀಡಿದ್ದು ತಮಿಳುನಾಡಿನ ಪಾಲಿನ 177 ಟಿಎಂಸಿ ನೀರನ್ನು ಹರಿಸಬೇಕು ಎಂದು ಷರತ್ತು ವಿಧಿಸಿದೆ.

ಈಗ ಈ ಯೋಜನೆ ಕುರಿತು ತೀರ್ಮಾನ ಮಾಡಬೇಕಿರುವುದು ಕೇಂದ್ರ ಸರ್ಕಾರ. ನಾವು ಪರಿಷ್ಕೃತ ಡಿಪಿಆರ್ ಸಲ್ಲಿಕೆ ಪ್ರಕ್ರಿಯೆಯಲ್ಲಿದ್ದೇವೆ” ಎಂದು ತಿಳಿಸಿದರು.

error: Content is protected !!