Home Blog

ಪರಪ್ಪನ ಅಗ್ರಹಾರದಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್ ವಿರುದ್ಧ ದೂರು ದಾಖಲು!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎ1 ಆರೋಪಿ ಪವಿತ್ರಾಗೌಡ ಅವರಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹೊಸ ವಿವಾದ ಉದ್ಭವಿಸಿದೆ.

ಈ ಸಂಬಂಧ ಬೆಂಗಳೂರಿನ ಸಂಧ್ಯಾ ನಾಗರಾಜ್ ವಿರುದ್ಧ ದೂರು ದಾಖಲಿಸಲಾಗಿದೆ.

ಇತ್ತೀಚೆಗೆ ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಸಂಧ್ಯಾ ನಾಗರಾಜ್ ಅವರು, ಜೈಲಿನೊಳಗೆ ಪವಿತ್ರಾಗೌಡ ಅವರಿಗೆ ಅಧಿಕಾರಿಗಳ ಸಹಕಾರ ದೊರೆಯುತ್ತಿದ್ದು, ಪ್ರತಿದಿನ ವಿಶೇಷ ಊಟ ಸೇರಿದಂತೆ ಸೌಲಭ್ಯಗಳು ನೀಡಲಾಗುತ್ತಿವೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಇತ್ತ ಈ ಆರೋಪಗಳನ್ನು ತೀವ್ರವಾಗಿ ನಿರಾಕರಿಸಿರುವ ಪವಿತ್ರಾಗೌಡ ಅವರು, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ಜೈಲಿನೊಳಗಿನಿಂದಲೇ ದೂರು ಸಲ್ಲಿಸಿದ್ದಾರೆ. ಜೊತೆಗೆ ರಶ್ಮಿ ಎಂಬ ಮತ್ತೊಬ್ಬ ಆರೋಪಿಯೂ ಪ್ರತ್ಯೇಕ ದೂರು ನೀಡಿರುವುದಾಗಿ ತಿಳಿದುಬಂದಿದೆ.

ಸದ್ಯ ಜೈಲಿನಲ್ಲಿರುವ ಪವಿತ್ರಾಗೌಡ ತಮ್ಮ ಆತ್ಮಚರಿತ್ರೆ ಬರೆಯಲು ಆರಂಭಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ ದಾರುಣ ಘಟನೆ! ಕಾಂಪೌಂಡ್ ಗೋಡೆ ಕುಸಿದು 5 ವರ್ಷದ ಬಾಲಕ ಸಾವು

ಬೆಂಗಳೂರು: ರಾಜಧಾನಿಯ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆಯಲ್ಲಿ ಕಾಂಪೌಂಡ್ ಗೋಡೆ ಮತ್ತು ಕಬ್ಬಿಣದ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ 5 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೃತಪಟ್ಟ ಮಗುವನ್ನು ಯಾದಗಿರಿ ಮೂಲದ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ. ಕ್ಯಾಬ್ ಚಾಲಕರಾಗಿರುವ ದಾವಲ್ ಸಾಬ್ ಕೆಲಸದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಾಸವಿದ್ದು, ಅವರ ಪತ್ನಿ ಹಾಗೂ ಅಫೀನ್ ಕೇವಲ ಕೆಲ ದಿನಗಳ ಹಿಂದಷ್ಟೇ ಬಂಡಿಕೊಡಿಗೇಹಳ್ಳಿಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಬುಧವಾರ ಸಂಜೆ ಸುಮಾರು 6.30ರ ವೇಳೆಗೆ ಅಫೀನ್ ತನ್ನ ನೆರೆಮನೆಯ ಮಕ್ಕಳೊಂದಿಗೆ ಮನೆಯ ಕಾಂಪೌಂಡ್ ಗೇಟ್ ಬಳಿ ಆಟವಾಡುತ್ತಿದ್ದ ವೇಳೆ, ಮಕ್ಕಳು ಗೇಟ್ ಅನ್ನು ಹಿಡಿದು ಜೀಕಾಡಿದ ಪರಿಣಾಮ ಗೋಡೆ ಗೇಟ್ ಸಮೇತ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಘಟನೆಯಿಂದ ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಸ್ಥಳೀಯರು ತಕ್ಷಣ ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದರೂ, ತೀವ್ರ ಗಾಯಗೊಂಡ ಅಫೀನ್ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ.

ಗಂಭೀರವಾಗಿ ಗಾಯಗೊಂಡಿರುವ ಮತ್ತೊಂದು ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಬಾಗಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಂಪೌಂಡ್ ಗೋಡೆಯ ಅವೈಜ್ಞಾನಿಕ ನಿರ್ಮಾಣದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

.

ಪೋಕ್ಸೋ ಕೇಸ್ ಕ್ಲೈಮ್ಯಾಕ್ಸ್ ಹಂತಕ್ಕೆ – ವಚನಾನಂದ ಸ್ವಾಮೀಜಿ ಭವಿಷ್ಯ ಇಂದು ನಿರ್ಧಾರ!

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೋ ಪ್ರಕರಣ ಇದೀಗ ನಿರ್ಣಾಯಕ ಹಂತಕ್ಕೆ ತಲುಪಿದ್ದು, ಜಾಮೀನು ರದ್ದುಪಡಿಸುವ ಕುರಿತು ನ್ಯಾಯಾಲಯ ಇಂದು ಮಹತ್ವದ ಆದೇಶ ಪ್ರಕಟಿಸುವ ಸಾಧ್ಯತೆ ಇದೆ.

ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಈಗಾಗಲೇ 410 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದು, 63 ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದೆ.

ಸ್ವಾಮೀಜಿಗೆ ನೀಡಲಾಗಿರುವ ನಿರೀಕ್ಷಣಾ ಜಾಮೀನು ರದ್ದುಪಡಿಸುವಂತೆ ಸರ್ಕಾರಿ ಅಭಿಯೋಜಕರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದು, ಅವರು ಸಮಾಜದಲ್ಲಿ ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಹೊರಗಿದ್ದರೆ ಸಾಕ್ಷ್ಯಗಳಿಗೆ ಬೆದರಿಕೆ ಹಾಗೂ ಪ್ರಕರಣ ದಿಕ್ಕು ತಪ್ಪಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಸಂತ್ರಸ್ತರ ಪರವಾಗಿ ಬೆದರಿಕೆ ಕರೆಗಳ ಆಡಿಯೋ ಸೇರಿದಂತೆ ಪೆನ್‌ಡ್ರೈವ್ ದಾಖಲೆಗಳನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಇತ್ತ ಸ್ವಾಮೀಜಿ ಪರ ವಕೀಲರು ಇದು ಮಠದ ಆಂತರಿಕ ಜಟಾಪಟಿಯಿಂದ ಹುಟ್ಟಿದ ಷಡ್ಯಂತ್ರ ಎಂದು ವಾದ ಮಂಡಿಸಿದ್ದಾರೆ. ವಾದ–ಪ್ರತಿವಾದಗಳನ್ನು ಆಲಿಸಿರುವ ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದು, ಇಂದು ಮಧ್ಯಾಹ್ನ ಹೊರಬರುವ ತೀರ್ಪು ಪ್ರಕರಣದ ಭವಿಷ್ಯವನ್ನು ನಿರ್ಧರಿಸಲಿದೆ.

ಕರಾವಳಿ ಸೇರಿ ರಾಜ್ಯದ ಹಲವೆಡೆ ಮಳೆಯಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು: ಮುಂಬರುವ ದಿನಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವೆಡೆ ಬಿರುಗಾಳಿ ಸಹ ಬೀಸುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಕೆಲವೆಡೆ 40 ರಿಂದ 50 ಕಿ.ಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಇದೇ ವೇಳೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವು ಕಡೆ ಗಾಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಜಿ.ಎಸ್.ಪಿಗೆ ಸಚಿವ ಸ್ಥಾನಕ್ಕಾಗಿ ಮಠಾಧೀಶರ ಒತ್ತಡ

0

ವಿಜಯಸಾಕ್ಷಿ ಸುದ್ದಿ, ರೋಣ: ರೋಣ ಕ್ಷೇತ್ರದ ಶಾಸಕ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಪಾಟೀಲರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು. ಅವರಿಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಮತ್ತಷ್ಟು ವಿಳಂಬ ಮಾಡಿದರೆ ಸರ್ಕಾರವೇ ರಾಜಕೀಯ ಸಂಕಷ್ಟ ಎದುರಿಸಬೇಕಾಗಬಹುದು ಎಂದು ಕುದರಿಮೋತಿ ಶ್ರೀಮಠದ ವಿಜಯಮಹಾಂತ ಸ್ವಾಮೀಜಿ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಪಟ್ಟಣದ ಯಾತ್ರಾನಿವಾಸದಲ್ಲಿ ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಡೆದ ಧರ್ಮಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಎಸ್. ಪಾಟೀಲರು ನಾಲ್ಕು ಬಾರಿ ಶಾಸಕರಾಗಿ ಕ್ಷೇತ್ರ ಮತ್ತು ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ. ಇಂತಹ ಅನುಭವಿ ಹಾಗೂ ಜನಪರ ನಾಯಕರಿಗೆ ಸಚಿವ ಸ್ಥಾನ ನೀಡುವುದು ಕಾಂಗ್ರೆಸ್ ಹೈಕಮಾಂಡ್‌ನ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ರೋಣ ಮತಕ್ಷೇತ್ರಕ್ಕೆ ಸಚಿವ ಸ್ಥಾನ ದೊರೆಯಬೇಕು ಎಂಬುದು ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದೆ. ಅಭಿವೃದ್ಧಿಯ ದೃಷ್ಟಿಯಿಂದಲೂ ಕ್ಷೇತ್ರಕ್ಕೆ ಸಚಿವ ಸ್ಥಾನ ಅಗತ್ಯವಾಗಿದೆ. ಈ ಭಾಗದ ಜನರ ಆಶಯವನ್ನು ಕಾಂಗ್ರೆಸ್ ವರಿಷ್ಠರು ಗಂಭೀರವಾಗಿ ಪರಿಗಣಿಸಬೇಕು ಎಂದು ಶ್ರೀಗಳು ಆಗ್ರಹಿಸಿದರು.

ಜಿ.ಎಸ್. ಪಾಟೀಲರು ಎಲ್ಲ ಜಾತಿ, ಧರ್ಮ ಮತ್ತು ಸಮುದಾಯಗಳನ್ನು ಸಮಾನವಾಗಿ ಕಾಣುವ ನಾಯಕರು. ಪಕ್ಷದ ಸಂಘಟನೆಗೆ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ಹೀಗಿರುವಾಗ ಸಚಿವ ಸ್ಥಾನ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಡಾ. ಹೆಚ್.ಕೆ. ಪಾಟೀಲರು ಹಲವು ಬಾರಿ ಸಚಿವರಾಗಿ ಹಾಗೂ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಈ ಬಾರಿ ರೋಣ ಕ್ಷೇತ್ರಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅವರು ದೊಡ್ಡಮನಸ್ಸು ತೋರಬೇಕು. ಇದರಿಂದ ಅವರ ಗೌರವ ಮತ್ತಷ್ಟು ಹೆಚ್ಚಾಗುತ್ತದೆ ಎಂದು ವಿಜಯಮಹಾಂತ ಶ್ರೀಗಳು ಹೇಳಿದರು.

ಮಠಾಧೀಶರ ಧ್ವನಿ ಒಂದೇ

ನರೇಗಲ್ಲ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಜಿ.ಎಸ್. ಪಾಟೀಲರು ಸರ್ವಧರ್ಮ ಸಮಭಾವದ ನಾಯಕರು. ಇಂತಹ ನಾಯಕತ್ವಕ್ಕೆ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕೂ ಬಲ ಬರುತ್ತದೆ ಎಂದರು.

ಅಭಿನವ ಕೊಟ್ಟೂರೇಶ್ವರ ಸ್ವಾಮೀಜಿ ಮಾತನಾಡಿ, “ಜಿ.ಎಸ್. ಪಾಟೀಲರು ಕೇವಲ ವ್ಯಕ್ತಿಯಲ್ಲ, ಒಂದು ಶಕ್ತಿ. ಅವರ ಸಾಮರ್ಥ್ಯವನ್ನು ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ಬಳಸಿಕೊಳ್ಳಬೇಕು” ಎಂದು ಹೇಳಿದರು.

ಕೊತಬಾಳ ಅಂಕಲಿ ಮಠದ ಗಂಗಾಧರ ಶ್ರೀಗಳು, ಜಿಗೇರಿ ಮಠದ ಗುರುಸಿದ್ದ ಶಿವಾಚಾರ್ಯರು ಹಾಗೂ ಇತರ ಮಠಾಧೀಶರು ಸಹ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವೇ.ಮೂ. ರೇವಣಸಿದ್ದೇಶ್ವರ ಶ್ರೀಗಳು, ಜಂಗಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿ.ಬಿ. ಸೋಮನಕಟ್ಟಿಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

“ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡುವುದು ರೋಣ ಕ್ಷೇತ್ರಕ್ಕೆ ಸಾಮಾಜಿಕ ನ್ಯಾಯ ಒದಗಿಸಿದಂತಾಗುತ್ತದೆ. ಈ ವಿಚಾರದಲ್ಲಿ ವಿಳಂಬವಾದರೆ ಸರ್ಕಾರ ರಾಜಕೀಯವಾಗಿ ಬೆಲೆ ತೆರಬೇಕಾಗಬಹುದು.”

ವಿಜಯಮಹಾಂತ ಸ್ವಾಮೀಜಿ, ಕುದರಿಮೋತಿ ಶ್ರೀಮಠ

ನೀರು-ನೈರ್ಮಲ್ಯ ಸಮಸ್ಯೆಗೆ ಕಿಡಿಕಾರಿದ ಜನರು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ವಾರ್ಡ್ ನಂ. 3ರಲ್ಲಿ ಉಂಟಾಗಿರುವ ಕುಡಿಯುವ ನೀರಿನ ಕೊರತೆ, ಕಾಲುವೆ ಸ್ವಚ್ಛತೆ, ಬೀದಿದೀಪಗಳ ನಿರ್ವಹಣೆ, ಸಾರ್ವಜನಿಕ ಶೌಚಾಲಯ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ಸಾರ್ವಜನಿಕರು ಹಾಗೂ ಸಮಗ್ರ ರೈತಪರ ಹೋರಾಟ ಸಮಿತಿ ಸದಸ್ಯರು ಬುಧವಾರ ಪುರಸಭೆ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಗೆ ಕುಂದಗೋಳ ಅಭಿನವ ಬಸವಣ್ಣ ಶ್ರೀಗಳು ಹಾಗೂ ದುಮ್ಮವಾಡ ಸರ್ಪಭೂಷಣ ಶ್ರೀಗಳು ಬೆಂಬಲ ಸೂಚಿಸಿದರು.

ಕೆಂಚಲಾಪುರ ಓಣಿಯಿಂದ ಎತ್ತು, ಆಕಳು, ಕೊಡಪಾನ, ಚರಗಿ ಹಾಗೂ ಪೊರಕೆಗಳೊಂದಿಗೆ ವಾದ್ಯಮೇಳದ ಮೂಲಕ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಮುಖ್ಯ ಬಜಾರ್ ರಸ್ತೆಯ ಮೂಲಕ ಪುರಸಭೆ ಕಚೇರಿಗೆ ಆಗಮಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಮಗ್ರ ರೈತಪರ ಹೋರಾಟ ವೇದಿಕೆಯ ತಾಲೂಕು ಅಧ್ಯಕ್ಷ ಮಂಜುನಾಥ ಮಾಗಡಿ, ಪಟ್ಟಣಕ್ಕೆ ತಿಂಗಳಿಗೊಮ್ಮೆ ಮಾತ್ರ ನೀರು ಸರಬರಾಜಾಗುತ್ತಿದೆ. ನದಿ ನೀರಿನ ಪೈಪ್‌ಲೈನ್ ದುರಸ್ತಿ ಹಾಗೂ ವಿದ್ಯುತ್ ವ್ಯತ್ಯಯದ ನೆಪ ಹೇಳಲಾಗುತ್ತಿದೆ. ನೂರಾರು ಕೊಳವೆಬಾವಿಗಳ ನಿರ್ವಹಣೆ ಹಾಗೂ ಪಂಪ್‌ಸೆಟ್‌ಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹಳ್ಳದಕೇರಿ ಪ್ರದೇಶದಲ್ಲಿ ಬಹುತೇಕ ರೈತ ಕುಟುಂಬಗಳು ವಾಸವಾಗಿದ್ದು, ಕುಡಿಯುವ ನೀರು ಹಾಗೂ ಸ್ವಚ್ಛತೆಯ ಕೊರತೆಯಿಂದ ಸಂಕಷ್ಟ ಎದುರಿಸುತ್ತಿವೆ. ಅನೇಕ ಬಾರಿ ಮನವಿ ಸಲ್ಲಿಸಿದರೂ ಸ್ಪಂದನೆ ಸಿಗದ ಕಾರಣ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಹೇಳಿದರು.

ಜೋನ್ ಹಳ್ಳದಿಂದ ಲಂಡಿ ಹಳ್ಳದವರೆಗೆ ಗಿಡಗಂಟಿಗಳು ಬೆಳೆದು ಕೆಸರು ತುಂಬಿಕೊಂಡಿದ್ದು, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ತೊಂದರೆಯಾಗುತ್ತಿದೆ. ಬೀದಿದೀಪ, ಸಾರ್ವಜನಿಕ ನಳ, ಶೌಚಾಲಯ ಹಾಗೂ ಹಳ್ಳಕ್ಕೆ ಕಲ್ವರ್ಟ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಾಗರಾಜ ಚಿಂಚಲಿ ಮಾತನಾಡಿ, ಪಟ್ಟಣದಲ್ಲಿ ನೀರು, ರಸ್ತೆ, ಆಶ್ರಯ ನಿವೇಶನ ಹಾಗೂ ಸ್ವಚ್ಛತೆಯ ಸಮಸ್ಯೆಗಳು ವರ್ಷಗಳಿಂದ ಮುಂದುವರಿದಿವೆ. ಜನಪ್ರತಿನಿಧಿಗಳು ಸಾಮಾಜಿಕ ಜಾಲತಾಣಗಳ ಪ್ರಚಾರಕ್ಕಿಂತ ಜನರ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಹೇಳಿದರು.

ಸಂಜೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ ಮನವಿ ಸ್ವೀಕರಿಸಿ ಮಾತನಾಡಿ, ನಾಲ್ಕೈದು ದಿನಗಳಲ್ಲಿ ಹೊಸ ಬೋರ್‌ವೆಲ್ ಕೊರೆಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ನಳ, ಶೌಚಾಲಯ ಹಾಗೂ ಇತರ ಮೂಲಭೂತ ಸೌಲಭ್ಯಗಳ ಕಲ್ಪನೆಗೂ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಟಾಕಪ್ಪ ಸಾತಪುತೆ, ಮಲ್ಲಪ್ಪ ಅಂಕಲಿ, ದುಂಡಪ್ಪ ಕೋಟಗಿ, ಹೊನ್ನಪ್ಪ ವಡ್ಡರ, ಶಿವಣ್ಣ ಕಟಗಿ, ಪ್ರಕಾಶ ಗುತ್ತಲ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಸಿಪಿಐ ಬಿ.ವಿ. ನ್ಯಾಮಗೌಡ್ರ, ಪಿಎಸ್‌ಐ ನಾಗರಾಜ ಗಡಾದ ಹಾಗೂ ಟಿ.ಕೆ. ರಾಠೋಡ ಭದ್ರತಾ ವ್ಯವಸ್ಥೆ ನಿರ್ವಹಿಸಿದರು.

“ಹೋರಾಟ ಮಾಡುತ್ತೇವೆ ಎಂದು ತಿಳಿದ ಕೂಡಲೇ ಅಧಿಕಾರಿಗಳು ಸ್ವಚ್ಛತೆ, ನೀರು ಹಾಗೂ ಬೆಳಕಿನ ವ್ಯವಸ್ಥೆಗೆ ಮುಂದಾಗಿದ್ದಾರೆ. ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಬೇಕು.”

ಮಂಜುನಾಥ ಮಾಗಡಿ, ತಾಲೂಕು ಅಧ್ಯಕ್ಷ, ಸಮಗ್ರ ರೈತಪರ ಹೋರಾಟ ವೇದಿಕೆ

ಗ್ರಾಮ ಪಂಚಾಯಿತಿ ಸಿಬ್ಬಂದಿ ಮೇಲೆ ಹಲ್ಲೆ: ಆರೋಪಿಗಳ ತಕ್ಷಣ ಬಂಧನಕ್ಕೆ ನೌಕರರ ಸಂಘ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ಚಿಕ್ಕಹಂದಿಗೋಳ ಗ್ರಾಮ ಪಂಚಾಯಿತಿಯ ಪಿಡಿಒ ಶಶಿಧರ ಕಪ್ಪರದ ಹಾಗೂ ವಾಟರ್‌ಮನ್ ಅರ್ಜುನ್ ಓಲೇಕಾರ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.

ಈ ಕುರಿತು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಅವರಿಗೆ ಮನವಿ ಸಲ್ಲಿಸಿದ ಸಂಘದ ಮುಖಂಡರು, ಜೂನ್ 16ರಂದು ಸರ್ಕಾರಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ದುಂದೂರ ಗ್ರಾಮದ ಗಂಗಯ್ಯ ಗಣಾಚಾರಿ ಹಾಗೂ ಇತರರು ಹಲ್ಲೆ ನಡೆಸಿರುವುದು ಖಂಡನೀಯ ಮತ್ತು ಆತಂಕಕಾರಿ ಬೆಳವಣಿಗೆ ಎಂದು ಹೇಳಿದರು.

ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಕಾನೂನುಬಾಹಿರ ಕೃತ್ಯವಾಗಿದ್ದು, ಇದು ಸರ್ಕಾರಿ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುವ ಗಂಭೀರ ಅಪರಾಧವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿ ಸಾರ್ವಜನಿಕರೊಂದಿಗೆ ನೇರ ಸಂಪರ್ಕದಲ್ಲಿದ್ದು ಸೇವೆ ಸಲ್ಲಿಸುತ್ತಾರೆ. ಇಂತಹ ಘಟನೆಗಳು ಸಿಬ್ಬಂದಿಯಲ್ಲಿ ಭಯದ ವಾತಾವರಣ ಸೃಷ್ಟಿಸುವುದರ ಜೊತೆಗೆ ಸಾರ್ವಜನಿಕ ಸೇವೆಗಳ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ಹೇಳಿದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಿ ತಕ್ಷಣ ಬಂಧಿಸಬೇಕು. ಜೊತೆಗೆ ಸರ್ಕಾರಿ ನೌಕರರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೂಕ್ತ ರಕ್ಷಣೆ ಒದಗಿಸಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಡಾ. ರವಿ ಎಲ್. ಗುಂಜೀಕರ, ಡಿ.ಎಸ್. ತಳವಾರ, ಎಂ.ಎಂ. ನಿಟ್ಟಾಲಿ, ಎಂ.ವೈ. ಮಲಕಶೆಟ್ಟಿ, ರಾಜು ಕಂಟಿಗೊಣ್ಣವರ, ಸಿದ್ದಪ್ಪ ಲಿಂಗದಾಳ, ಎಸ್.ಎಸ್. ಪಾರ್ವತಿಮಠ, ಶಿವಪ್ಪ ಹದ್ಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಸರ್ಕಾರಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಗಂಭೀರ ಅಪರಾಧ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು.”

– ಡಾ. ಬಸವರಾಜ ಬಳ್ಳಾರಿ, ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ, ಸರ್ಕಾರಿ ನೌಕರರ ಸಂಘ

ಬಡತನ, ಉದ್ಯೋಗ ಬದಿಗೆ ಸರಿದು ಎಸ್‌ಐಆರ್ ಚರ್ಚೆ ಪ್ರಾಬಲ್ಯ: ಯೂಸುಫ್ ಕಣವಿ

0

ವಿಜಯಸಾಕ್ಷಿ ಸುದ್ದಿ, ಗದಗ: ದೇಶದಲ್ಲಿ ಬಡತನ, ನಿರುದ್ಯೋಗ, ರಾಷ್ಟ್ರೀಯ ಭದ್ರತೆ ಸೇರಿದಂತೆ ಜನಜೀವನಕ್ಕೆ ಸಂಬಂಧಿಸಿದ ಗಂಭೀರ ವಿಷಯಗಳ ಕುರಿತು ಚರ್ಚೆಯಾಗಬೇಕಾದ ಸಂದರ್ಭದಲ್ಲಿ ಎಸ್‌ಐಆರ್ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ವಿಷಯವೇ ರಾಷ್ಟ್ರಮಟ್ಟದ ಚರ್ಚೆಯಾಗಿ ಪರಿಣಮಿಸಿರುವುದು ವಿಷಾದನೀಯ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಯೂಸುಫ್ ಕಣವಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಶ್ರೀಮಂತರು ಮತ್ತು ಪ್ರಭಾವಿ ವರ್ಗದವರಿಗೆ ಮಾತ್ರ ಮತದಾನದ ಹಕ್ಕು ಇತ್ತು. ಸ್ವಾತಂತ್ರ್ಯಾನಂತರ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಸಾರ್ವತ್ರಿಕವಾಗಿದ್ದು, ಇಂದು ಕೋಟ್ಯಂತರ ಜನರು ಮತದಾರರಾಗಿದ್ದಾರೆ ಎಂದು ತಿಳಿಸಿದರು.

ದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿರುವ ನುಸುಳುಕೋರರನ್ನು ಗುರುತಿಸಿ ಕ್ರಮ ಕೈಗೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ, ಈ ವಿಷಯದಲ್ಲಿ ಸ್ಪಷ್ಟ ಮಾಹಿತಿ ನೀಡದೆ ಸಾಮಾನ್ಯ ಮತದಾರರ ಪಟ್ಟಿಯನ್ನೇ ಪ್ರಶ್ನಿಸುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿದರು.

ಎಸ್‌ಐಆರ್ ಪ್ರಕ್ರಿಯೆ ಮೂಲಕ ದೇಶದ ವಿವಿಧ ರಾಜ್ಯಗಳಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ವರದಿಗಳು ಬರುತ್ತಿವೆ. ಈ ಪ್ರಕ್ರಿಯೆಯಲ್ಲಿ ಎಷ್ಟು ಮಂದಿ ಅಕ್ರಮ ನುಸುಳುಕೋರರು ಹಾಗೂ ಎಷ್ಟು ಮಂದಿ ಸಾಮಾನ್ಯ ನಾಗರಿಕರು ಎಂಬುದನ್ನು ಚುನಾವಣಾ ಆಯೋಗ ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ಪ್ರಕ್ರಿಯೆಯಲ್ಲಿ ಬಡವರು, ದಲಿತರು ಮತ್ತು ವಂಚಿತ ಸಮುದಾಯದ ಜನರಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು. ಮತದಾನದ ಹಕ್ಕು ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿದ್ದು, ಅದರ ರಕ್ಷಣೆಗೆ ಎಲ್ಲರೂ ಜಾಗೃತರಾಗಬೇಕು ಎಂದು ಹೇಳಿದರು.

ಯುವ ಮುಖಂಡ ಸರೋವರ ಬೆಂಕಿಕೇರಿ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಸ್ವಾಗತಾರ್ಹವಾದರೂ, ಇತ್ತೀಚೆಗೆ ಜಾರಿಗೆ ತರಲಾಗುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಸಾರ್ವಜನಿಕರಲ್ಲಿ ಗೊಂದಲ ಮತ್ತು ಆತಂಕ ಮೂಡಿಸುತ್ತಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಲಾಲ್ ಗೋಕಾವಿ, ಜುನೈದ್ ಉಮಚಗಿ, ಆರಾಧನಾ ಬಣಕಾರ, ಆರೀಫ್ ಉಲ್ಲಾ, ಮುತ್ತು ಬಿಳೆಯಲಿ, ಅನ್ವರ್ ಬಾಗೇವಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ದೇಶದಲ್ಲಿ ಬಡತನ, ಭದ್ರತೆ ಹಾಗೂ ಉದ್ಯೋಗದಂತಹ ಗಂಭೀರ ವಿಷಯಗಳು ಚರ್ಚೆಯಾಗಬೇಕಾದ ಸಂದರ್ಭದಲ್ಲಿ ಎಸ್‌ಐಆರ್ ವಿಚಾರವೇ ಪ್ರಮುಖ ಚರ್ಚೆಯಾಗಿರುವುದು ಆತಂಕಕಾರಿ ಬೆಳವಣಿಗೆ.”

– ಯೂಸುಫ್ ಕಣವಿ, ರಾಜ್ಯ ಕಾರ್ಯದರ್ಶಿ, ಜಮಾಅತೆ ಇಸ್ಲಾಮಿ ಹಿಂದ್

ಹಕ್ಕೊತ್ತಾಯಗಳು

  • ‘ಲಾಜಿಕಲ್ ಡಿಸ್ಕ್ರೆಪೆನ್ಸಿ’ ಸಾಫ್ಟ್‌ವೇರ್ ಅನ್ನು ಕರ್ನಾಟಕದಲ್ಲಿ ಬಳಸಬಾರದು.
  • ಮತದಾರರ ಪಟ್ಟಿಯ ಕರಡು ಪ್ರತಿಯನ್ನು ಸಾರ್ವಜನಿಕ ಪರಿಶೀಲನೆಗೆ ಲಭ್ಯಗೊಳಿಸಬೇಕು.
  • ಗ್ರಾಮಸಭೆ ಹಾಗೂ ವಾರ್ಡ್ ಸಭೆಗಳ ಮೂಲಕ ಸಾರ್ವಜನಿಕ ಪರಿಶೀಲನೆ ಮತ್ತು ತಿದ್ದುಪಡಿಗೆ ಅವಕಾಶ ಕಲ್ಪಿಸಬೇಕು.
  • ಅಪೀಲು ಸಲ್ಲಿಸಲು ಕನಿಷ್ಠ ಆರು ತಿಂಗಳ ಕಾಲಾವಕಾಶ ನೀಡಬೇಕು.

ಯೋಗದಿಂದ ರೋಗಮುಕ್ತಿ ಸಾಧ್ಯ: ಅಕ್ಕಿ ತೋಟೇಶ್

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಆಧುನಿಕ ಜೀವನಶೈಲಿ ಮತ್ತು ಬದಲಾಗುತ್ತಿರುವ ಪರಿಸ್ಥಿತಿಗಳ ನಡುವೆ ಮನುಷ್ಯನ ಬದುಕು ಒತ್ತಡಮಯವಾಗಿದ್ದು, ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಕ್ಕಿ ತೋಟೇಶ್ ಹೇಳಿದರು.

ತಾಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ ಶ್ರೀದೇವಿ ಪ್ರಸಾದ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ 10 ದಿನಗಳ ಯೋಗ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯೋಗವು ಭಾರತದ ಪುರಾತನ ಪರಂಪರೆಯ ಅಮೂಲ್ಯ ಕೊಡುಗೆಯಾಗಿದ್ದು, ಇಂದು ವಿಶ್ವದಾದ್ಯಂತ ಸ್ವೀಕಾರಾರ್ಹತೆ ಪಡೆದುಕೊಂಡಿದೆ. ನಿಯಮಿತ ಯೋಗಾಭ್ಯಾಸದಿಂದ ಆರೋಗ್ಯವಂತ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಪಿಎಸ್‌ಐ ಚಂದ್ರಶೇಖರ್ ಮಾತನಾಡಿ, ಯೋಗವು ಯಾವುದೇ ನಿರ್ದಿಷ್ಟ ವಯೋಮಿತಿಗೆ ಸೀಮಿತವಾಗಿಲ್ಲ. ಒತ್ತಡ ಮತ್ತು ಆತಂಕಗಳಿಂದ ಕೂಡಿದ ಇಂದಿನ ಬದುಕಿನಲ್ಲಿ ಪ್ರತಿಯೊಬ್ಬರೂ ಯೋಗಾಭ್ಯಾಸವನ್ನು ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪಿಡಿಒ ಚಂದ್ರಶೇಖರ್, ಕಾಲೇಜು ಪ್ರಾಂಶುಪಾಲ ಬಸವರಾಜ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೊಟ್ರೇಶ್, ಬಿಡಿಸಿಸಿ ಬ್ಯಾಂಕ್ ಸದಸ್ಯ ವೈ. ಸುರೇಶ, ಎಣ್ಣೆಕಾಳು ಸೊಸೈಟಿ ಅಧ್ಯಕ್ಷ ಸುಣಗಾರ ಪರಶುರಾಮ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಡಿ.ಎಂ. ಆನಂದ್, ಮುಖ್ಯ ಶಿಕ್ಷಕಿ ರಾಜೇಶ್ವರಿ, ಎಸ್‌ಡಿಎಂಸಿ ಅಧ್ಯಕ್ಷ ನೀಲಗಿರಿ, ಗ್ಯಾರಂಟಿ ಸಮಿತಿ ಸದಸ್ಯ ಜಿ. ಗಿರೀಶ, ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ವಿ. ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

“ಒತ್ತಡ ಮತ್ತು ರೋಗಗಳಿಂದ ಮುಕ್ತ ಜೀವನ ನಡೆಸಲು ಯೋಗ ಅತ್ಯಗತ್ಯ. ಪ್ರತಿಯೊಬ್ಬರೂ ಯೋಗವನ್ನು ದಿನನಿತ್ಯದ ಬದುಕಿನ ಭಾಗವಾಗಿಸಿಕೊಳ್ಳಬೇಕು.”

– ಅಕ್ಕಿ ತೋಟೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ

ಸರ್ವತೋಮುಖ ಆರೋಗ್ಯಕ್ಕೆ ಯೋಗವೇ ಸಂಜೀವಿನಿ: ಡಾ. ಉಮೇಶ ಪುರದ

0

ವಿಜಯಸಾಕ್ಷಿ ಸುದ್ದಿ, ಗದಗ: ದೈಹಿಕ, ಮಾನಸಿಕ, ಆಧ್ಯಾತ್ಮಿಕ, ಸಾಮಾಜಿಕ ಹಾಗೂ ನೈತಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಸಾಧನೆ ಅತ್ಯುತ್ತಮ ಮಾರ್ಗವಾಗಿದೆ ಎಂದು ನಿವೃತ್ತ ಪ್ರಾಚಾರ್ಯ, ಖ್ಯಾತ ವೈದ್ಯ ಹಾಗೂ ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಡಾ. ಉಮೇಶ ಪುರದ ಹೇಳಿದರು.

12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಎಸ್.ವೈ.ಬಿ.ಎಂ.ಎಸ್. ಯೋಗಪಾಠಶಾಲೆಯ ಬಸವ ಯೋಗ ಮಹಾವಿದ್ಯಾಲಯ, ಲಿಂಗಾಯತ ಪ್ರಗತಿಶೀಲ ಸಂಘ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಯೋಗ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಿದ್ದ ಯೋಗ ಅರಿವು-ಆಚಾರ ಶಿಬಿರದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಂದಿನ ದಿನಗಳಲ್ಲಿ ಕೇವಲ ದೈಹಿಕ ಆರೋಗ್ಯವಷ್ಟೇ ಅಲ್ಲ, ಮಾನಸಿಕ ಮತ್ತು ನೈತಿಕ ಆರೋಗ್ಯವೂ ಅತ್ಯಂತ ಅಗತ್ಯವಾಗಿದೆ. ಪತಂಜಲಿ ಪ್ರತಿಪಾದಿಸಿದ ಅಷ್ಟಾಂಗ ಯೋಗ ಹಾಗೂ ಬಸವಣ್ಣನವರ ಶಿವಯೋಗ ಸಾಧನೆಗಳು ಪರಿಪೂರ್ಣ ಆರೋಗ್ಯದತ್ತ ಕೊಂಡೊಯ್ಯುತ್ತವೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಸಮಾಜಸೇವಕಿ ಹಾಗೂ ವಕೀಲೆ ಶ್ರೀದೇವಿ ಶೆಟ್ಟರ ಮಾತನಾಡಿ, ಕುಟುಂಬ ಮತ್ತು ಸಮಾಜದ ಆರೋಗ್ಯಕರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಯೋಗಾಭ್ಯಾಸವನ್ನು ಜೀವನದ ಭಾಗವಾಗಿಸಿಕೊಂಡರೆ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಪತಂಜಲಿ ಯೋಗ ಸಮಿತಿಯ ಜಿಲ್ಲಾ ಕೋಶಾಧ್ಯಕ್ಷ ಕೆ.ಎಸ್. ಗುಗ್ಗರಿ ಮಾತನಾಡಿ, ಯೋಗ ಎಂದರೆ ಕೂಡಿಸುವ ಶಕ್ತಿ. ಕುಟುಂಬ, ಸಮಾಜ ಹಾಗೂ ರಾಷ್ಟ್ರದ ಮಟ್ಟದಲ್ಲಿ ಸಾಮರಸ್ಯ ಬೆಳೆಸುವಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎ. ಬಳಿಗೇರ ಮಾತನಾಡಿ, ಶಿವಶರಣರು ಅನುಸರಿಸಿದ ಕಾಯಕ ಯೋಗ ಇಂದಿನ ಸಮಾಜಕ್ಕೂ ಪ್ರಸ್ತುತವಾಗಿದ್ದು, ಯೋಗದೊಂದಿಗೆ ಮೌಲ್ಯಾಧಾರಿತ ಜೀವನ ನಡೆಸಿದರೆ ನೆಮ್ಮದಿ ಸಾಧ್ಯ ಎಂದು ಹೇಳಿದರು.

ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ಅಧ್ಯಕ್ಷೆ ಜಯಶ್ರೀ ಉಗಲಾಟದ ಮಾತನಾಡಿ, ಮೌನ ಮತ್ತು ಆತ್ಮಾವಲೋಕನದ ಮೂಲಕ ಮನಸ್ಸಿನ ಶಾಂತಿ ಸಾಧಿಸಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ಸದಸ್ಯರು, ತೋಂಟದಾರ್ಯ ಪ್ರಸಾದ ನಿಲಯದ ವಿದ್ಯಾರ್ಥಿಗಳು ಹಾಗೂ ಯೋಗಾಸಕ್ತರು ಭಾಗವಹಿಸಿದ್ದರು.

ನಿವೃತ್ತ ಮುಖ್ಯೋಪಾಧ್ಯಾಯ ಶಿವನಗೌಡ ಗೌಡರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುನಂದಾ ಜ್ಞಾನೋಪಂತ ಧ್ಯಾನಕ್ಕೆ ಪೂರಕವಾದ ಸಂಗೀತ ಸೇವೆ ನೀಡಿದರು. ಶಿವಲೀಲಾ ಅಕ್ಕಿ ವಂದಿಸಿದರು. ಬಸವ ಯೋಗ ಮಹಾವಿದ್ಯಾಲಯದ ಪ್ರಾಚಾರ್ಯ ಕೆ.ಎಸ್. ಪಲ್ಲೇದ ಕಾರ್ಯಕ್ರಮ ನಿರೂಪಿಸಿದರು.

“ಯೋಗವು ಕೇವಲ ವ್ಯಾಯಾಮವಲ್ಲ; ದೇಹ, ಮನಸ್ಸು ಮತ್ತು ಆತ್ಮವನ್ನು ಸಮತೋಲನದಲ್ಲಿ ಇಡುವ ಜೀವನ ಪದ್ಧತಿಯಾಗಿದೆ.”

— ಡಾ. ಉಮೇಶ ಪುರದ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷರು

error: Content is protected !!