ಬೆಂಗಳೂರು: ಉದ್ಯಮಿ ವೈಶಾಖ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್.ನಗರ ಪೊಲೀಸರು ನಟಿ ಕೃಷಿ ತಾಪಂಡ ಅವರ ಹೇಳಿಕೆ ದಾಖಲಿಸಿಕೊಂಡಿದ್ದು, ಅವರ ಮೊಬೈಲ್ ಫೋನ್ ಪರಿಶೀಲನೆ ನಡೆಸಿದ್ದಾರೆ. ತನಿಖೆಯಲ್ಲಿ ಯಾವುದೇ ಅನುಮಾನಾಸ್ಪದ ಸಂದೇಶಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಮೊಬೈಲ್ ಅನ್ನು ವಾಪಸ್ ನೀಡಿದ್ದಾರೆ.
ಕೃಷಿ ತಾಪಂಡ, ತಾವು ಮೂರು ದಿನ ಕ್ಷೇಮವನದಲ್ಲಿದ್ದು, ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಫ್ಲ್ಯಾಟ್ಗೆ ಹಿಂದಿರುಗಿದ್ದಾಗಿ ತಿಳಿಸಿದ್ದಾರೆ. ತಮ್ಮ ಬಳಿಯಿದ್ದ ಕೀಯಿಂದ ಬಾಗಿಲು ತೆರೆದಾಗ ವೈಶಾಖ್ ಫ್ಯಾನ್ಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿತ್ತು. ಬಳಿಕ ಸೀರೆಯನ್ನು ಕತ್ತರಿಸಿ ಮೃತದೇಹವನ್ನು ಕೆಳಗಿಳಿಸಿ, ಪೊಲೀಸರಿಗೆ ಹಾಗೂ ಕುಟುಂಬದವರಿಗೆ ಮಾಹಿತಿ ನೀಡಿದ್ದಾಗಿ ಹೇಳಿದ್ದಾರೆ.
ಪೊಲೀಸರು ಅವರ ಮೊಬೈಲ್ನಲ್ಲಿದ್ದ ಕಾಲ್ ಲಿಸ್ಟ್, ವಾಟ್ಸ್ಆಪ್ ಚಾಟ್ ಮತ್ತು ಮೆಸೇಜ್ಗಳನ್ನು ಪರಿಶೀಲಿಸಿದ್ದು, ಯಾವುದೇ ಅನುಮಾನಾಸ್ಪದ ಅಂಶ ಪತ್ತೆಯಾಗಿಲ್ಲ.
ಪ್ರಕರಣ ಸಂಬಂಧ ವೈಶಾಖ್ ಪತ್ನಿ ಮೇಘನಾ ನೀಡಿದ ದೂರಿನಲ್ಲಿ, ಎಲಿಗೆಂಟ್ ಟೆರಸ್ ಅಪಾರ್ಟ್ಮೆಂಟ್ನ 403ನೇ ಫ್ಲ್ಯಾಟ್ನಲ್ಲಿ ವೈಶಾಖ್ ಮೃತದೇಹ ಪತ್ತೆಯಾಗಿತ್ತು. ಫ್ಯಾನ್ಗೆ ಸೀರೆಯಿಂದ ನೇಣು ಬಿಗಿದ ಸ್ಥಿತಿಯಲ್ಲಿ ಶವ ಕಂಡುಬಂದಿದ್ದು, ಕುತ್ತಿಗೆ ಭಾಗದಲ್ಲಿ ಗುರುತುಗಳಿದ್ದವು ಎಂದು ಉಲ್ಲೇಖಿಸಿದ್ದಾರೆ.
ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆತ್ಮಹತ್ಯೆ ಕುರಿತು ಯಾರ ಮೇಲೂ ಅನುಮಾನ ವ್ಯಕ್ತಪಡಿಸದ ಮೇಘನಾ, ಸಾವಿಗೆ ನಿಖರ ಕಾರಣ ಪತ್ತೆಹಚ್ಚುವಂತೆ ಮನವಿ ಮಾಡಿದ್ದಾರೆ. ಈ ದೂರಿನ ಆಧಾರದಲ್ಲಿ ಆರ್.ಆರ್.ನಗರ ಪೊಲೀಸರು ಅನುಮಾನಾಸ್ಪದ ಸಾವು (UDR) ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.