Home Blog

ಜಾನುವಾರುಗಳ ಆರೋಗ್ಯದ ಬಗ್ಗೆ ರೈತರು ಜಾಗೃತರಾಗಲಿ: ಹಿರೇಗೌಡ್ರ

0

ವಿಜಯಸಾಕ್ಷಿ ಸುದ್ದಿ, ಗದಗ: ಜಾನುವಾರುಗಳ ಆರೋಗ್ಯ ಕಾಪಾಡಿದರೆ ಮಾತ್ರ ಹಾಲು ಉತ್ಪಾದನೆ ಹೆಚ್ಚಾಗಿ ರೈತರ ಆದಾಯವೂ ವೃದ್ಧಿಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ನಿರ್ದೇಶಕ ಎಚ್.ಜಿ. ಹಿರೇಗೌಡ್ರ ಹೇಳಿದರು.

ನರಗುಂದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಗದಗ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಧಾರವಾಡ ಹಾಲು ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಕಾಲು-ಬಾಯಿ ರೋಗ, ಕಪ್ಪು ಕಾಲು, ಗಂಟಲುಬಾಚೆ, ಬ್ರೂಸೆಲ್ಲೋಸಿಸ್ ಸೇರಿದಂತೆ ವಿವಿಧ ರೋಗಗಳಿಂದ ಜಾನುವಾರುಗಳನ್ನು ರಕ್ಷಿಸಲು ನಿಯಮಿತ ಲಸಿಕೆ, ಪಶುವೈದ್ಯರ ಸಲಹೆ, ಸ್ವಚ್ಛ ಗೋಶಾಲೆ ಹಾಗೂ ಸಮತೋಲನ ಆಹಾರ ಅತ್ಯಗತ್ಯ ಎಂದು ತಿಳಿಸಿದರು.

ಧಾರವಾಡ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ.ಟಿ. ಕಳಸದ ಮಾತನಾಡಿ, ಹಾಲು ಉತ್ಪಾದಕರ ಸಹಕಾರ ಸಂಘಗಳು ರೈತರಿಗೆ ನ್ಯಾಯಯುತ ಬೆಲೆ, ಪಶುವೈದ್ಯಕೀಯ ಸೇವೆ, ಕೃತಕ ಗರ್ಭಧಾರಣೆ, ಮೇವು ಅಭಿವೃದ್ಧಿ, ಪಶು ಆಹಾರ ಹಾಗೂ ತರಬೇತಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿವೆ ಎಂದರು.

ಕಾರ್ಯಕ್ರಮದಲ್ಲಿ ನರಗುಂದ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಕರು ಹಾಗೂ ಹಾಲು ಪರೀಕ್ಷಕರಿಗೆ ಜಾನುವಾರುಗಳ ಆರೋಗ್ಯ, ಹಸಿರು ಮೇವು, ಶುದ್ಧ ಹಾಲು ಉತ್ಪಾದನೆ ಹಾಗೂ ಹೈನುಗಾರಿಕೆ ಕುರಿತು ತಜ್ಞರಿಂದ ತರಬೇತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ ಎಸ್. ಕರಿಯಪ್ಪನವರ, ಧಾರವಾಡ ಹಾಲು ಒಕ್ಕೂಟದ ಅಧಿಕಾರಿಗಳು, ಸಹಕಾರ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಡಿಸಿ ಕಚೇರಿ ಚಲೋಗೆ ತಿಮ್ಮಾಪೂರ ರೈತರ ಬೆಂಬಲ

0

ವಿಜಯಸಾಕ್ಷಿ ಸುದ್ದಿ, ಗದಗ: ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಆಗಸ್ಟ್ 5ರಂದು ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯಲಿರುವ ‘ಡಿಸಿ ಕಚೇರಿ ಚಲೋ’ ಬೃಹತ್ ಪ್ರತಿಭಟನೆಗೆ ತಿಮ್ಮಾಪೂರ ಗ್ರಾಮದ ರೈತರು ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತಿಮ್ಮಾಪೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಿ.ಆರ್. ನಾರಾಯಣರೆಡ್ಡಿ ಬಣ) ಗ್ರಾಮ ಘಟಕ ಕೋಟುಮಚಿಗಿ ವತಿಯಿಂದ ರೈತ ಸಭೆ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ, 2025-26ನೇ ಸಾಲಿನ ಎಲ್ಲ ಬೆಳೆಗಳ ವಿಮೆಯನ್ನು ತಕ್ಷಣ ಮಂಜೂರು ಮಾಡಬೇಕು, ಗದಗ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು, ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಹಾಗೂ ಕಪ್ಪತ್ತಗುಡ್ಡ ಅರಣ್ಯವನ್ನು ಸಂರಕ್ಷಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆಗಳಾಗಿವೆ. ಸರ್ಕಾರ ಕೂಡಲೇ ಇವುಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಕಬ್ಬು ಬೆಳೆಗಾರರು ತಮ್ಮ ಬೇಡಿಕೆಗಳಿಗಾಗಿ ಎಂಟು ದಿನಗಳ ಕಾಲ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಯಶಸ್ಸು ಸಾಧಿಸಿದ್ದಾರೆ. ಅದೇ ರೀತಿಯಲ್ಲಿ ರೈತರು ಒಗ್ಗಟ್ಟಿನಿಂದ ಹೋರಾಟ ನಡೆಸಿದರೆ ನ್ಯಾಯ ದೊರೆಯಲಿದೆ. ರಾಷ್ಟ್ರೀಕೃತ ಬ್ಯಾಂಕ್ ಸಾಲ ಹಾಗೂ ಬೆಳೆ ವಿಮೆ ಕುರಿತು ಎರಡು-ಮೂರು ದಿನಗಳಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳದಿದ್ದರೆ ಆಗಸ್ಟ್ 5ರ ಹೋರಾಟ ಉಗ್ರ ಸ್ವರೂಪ ಪಡೆಯಲಿದೆ ಎಂದು ಎಚ್ಚರಿಸಿದರು.

ರೈತ ಮುಖಂಡ ಶರಣಪ್ಪ ಮ್ಯಾಗೇರಿ ಮಾತನಾಡಿ, ಆಗಸ್ಟ್ 5ರಂದು ನಡೆಯುವ ಪ್ರತಿಭಟನೆಗೆ ತಿಮ್ಮಾಪೂರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಗದಗಕ್ಕೆ ತೆರಳಿ ಭಾಗವಹಿಸುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಕೋಟುಮಚಿಗಿ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಘೋಷಿಸಿತು. ಬಳಿಕ “ರೈತರ ಶಕ್ತಿ ಬಹಳ ಇದೆ” ಎಂಬ ಘೋಷಣೆಗಳೊಂದಿಗೆ ಪ್ರತಿಭಟನೆಯನ್ನು ಯಶಸ್ವಿಗೊಳಿಸುವ ಸಂಕಲ್ಪ ಕೈಗೊಳ್ಳಲಾಯಿತು.

ಸಭೆಯಲ್ಲಿ ಹುಚ್ಚಿರಪ್ಪ ಬಡೆಗೇರ, ಪಾಲಾಕ್ಷಯ್ಯ ಬಳಗೇರಮಠ, ಮಲ್ಲಪ್ಪ ರಮಾಣೆ, ಸಂತೋಷ ಮುತ್ತಾಳ, ಮುನಿಯಪ್ಪ ಶಿಂಗಟಾಲಕೇರಿ, ಮುತ್ತಪ್ಪ ಜಗ್ಗಲ, ಹುಚ್ಚಿರಪ್ಪ ಜೋಗಿನ, ಶಿವರಾಜ ಒಂಟೇಲಿ, ಮಾದೇಗೌಡ ಸಂಕನಗೌಡ್ರ, ಪರಪ್ಪ ಕಡಗದ, ಬೀರಪ್ಪ ಕಂಬಳಿ, ರೇಣಕಪ್ಪ ಕಿನ್ನಾಳ, ಬಾಬು ದಿವಟಿ, ಜಗದೀಶ್ ಮಲ್ಲನವರ ಸೇರಿದಂತೆ ನೂರಾರು ರೈತರು, ಕೂಲಿ ಕಾರ್ಮಿಕರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

ಶಿಕ್ಷಣದಿಂದಲೇ ಸಮಾಜದ ಭವಿಷ್ಯ ಬದಲಿಸಿ: ಶಾಸಕ ಕೆ. ನೇಮಿರಾಜ ನಾಯ್ಕ್

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಸಮುದಾಯದ ಅಭಿವೃದ್ಧಿಗೆ ಶಿಕ್ಷಣವೇ ಮೂಲಮಂತ್ರವಾಗಿದ್ದು, ಹಡಪದ ಸಮಾಜದ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಅವರನ್ನು ಉನ್ನತ ಶಿಕ್ಷಣದೊಂದಿಗೆ ಉತ್ತಮ ಉದ್ಯೋಗಸ್ಥರನ್ನಾಗಿ ರೂಪಿಸಬೇಕು ಎಂದು ಶಾಸಕ ಕೆ. ನೇಮಿರಾಜ ನಾಯ್ಕ್ ಕರೆ ನೀಡಿದರು.

ಪಟ್ಟಣದ ಹರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಶ್ರೀ ಹಡಪದ ಅಪ್ಪಣ್ಣ ಅವರ 892ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಹಡಪದ ಅಪ್ಪಣ್ಣ ಅವರು 12ನೇ ಶತಮಾನದ ವಚನ ಚಳುವಳಿ ಹಾಗೂ ಸಾಮಾಜಿಕ ಕ್ರಾಂತಿಯ ಪ್ರಮುಖ ಹರಿಕಾರರಲ್ಲಿ ಒಬ್ಬರಾಗಿದ್ದು, ಬಸವಣ್ಣನವರ ಆಪ್ತ ಸಹಚರ ಹಾಗೂ ಅನುಭವ ಮಂಟಪದ ಪ್ರಮುಖ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರ ಜೀವನ ಮತ್ತು ಆದರ್ಶಗಳು ಇಂದಿನ ಸಮಾಜಕ್ಕೂ ಮಾರ್ಗದರ್ಶಿಯಾಗಿವೆ ಎಂದು ಹೇಳಿದರು.

ಹಡಪದ ಸಮಾಜವು ಇನ್ನೂ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದ್ದು, ಸರ್ಕಾರ ಇಂತಹ ಸಮುದಾಯಗಳಿಗೆ ಹೆಚ್ಚಿನ ಅನುದಾನ ಹಾಗೂ ಸೌಲಭ್ಯ ಕಲ್ಪಿಸಬೇಕಿದೆ. ಸಮಾಜದ ಮನವಿಗೆ ಸ್ಪಂದಿಸಿ ಸಮುದಾಯ ಭವನ ನಿರ್ಮಾಣಕ್ಕೆ ಈ ವರ್ಷ ₹25 ಲಕ್ಷ ಹಾಗೂ ಮುಂದಿನ ವರ್ಷ ಮತ್ತೊಂದು ₹25 ಲಕ್ಷ ಅನುದಾನ ನೀಡುವುದಾಗಿ ಘೋಷಿಸಿದ ಅವರು, ಸರ್ಕಾರದಿಂದ ಇನ್ನಷ್ಟು ನೆರವು ದೊರಕಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಆಶೀರ್ವಚನ ನೀಡಿದ ಅನ್ನದಾನಿ ಭಾರತಿ ಹಡಪದ ಅಪ್ಪಣ್ಣ ಮಹಾಸ್ವಾಮಿಗಳು, ಮುಂಡ್ರಿಗಿ, ಹಡಪದ ಅಪ್ಪಣ್ಣ ಅವರು ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ ಸುಮಾರು 240ಕ್ಕೂ ಹೆಚ್ಚು ವಚನಗಳನ್ನು ರಚಿಸಿರುವ ಮಹಾನ್ ಶಿವಶರಣರು ಎಂದು ಸ್ಮರಿಸಿದರು. ಸಮಾಜದ ಮಕ್ಕಳು ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಬಾರದು. ಪೋಷಕರು ಎಷ್ಟೇ ಕಷ್ಟ ಬಂದರೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಬೇಕು. ಸರ್ಕಾರವೂ ಹಡಪದ ಸಮಾಜವನ್ನು ಗುರುತಿಸಿ ಮೀಸಲಾತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮಾಜದ ಗಣ್ಯರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಹೆಚ್. ಮಂಜುನಾಥ, ಜಿಲ್ಲಾಧ್ಯಕ್ಷ ಡಾ. ಮಲ್ಲಪ್ಪ ಬ್ಯಾಲಾಳು, ಪಂಚಮಸಾಲಿ ಸಮಾಜದ ಅಧ್ಯಕ್ಷ ಮಂಜುನಾಥ ಗೌಡ್ರು, ರೆಡ್ಡಿ ಸಮಾಜದ ಅಧ್ಯಕ್ಷ ಬಸವರಾಜ ರೆಡ್ಡಿ, ಕುಮಾರಿ ಕಾವೇರಿ, ಶಿವ ಸಿಂಪಿಗರ ಸಮಾಜದ ಅಧ್ಯಕ್ಷ ಉಮಾಪತಿ ಹನಸಿ, ನರೇಗಲ್ಲು ಬಸವರಾಜ ಸೇರಿದಂತೆ ಸಮಾಜದ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಬಸವಲೋಕ ತಂಡ ಪ್ರಾರ್ಥನೆ ಸಲ್ಲಿಸಿತು. ಹಾಲೇಶ್ ಹುಚ್ಚನಗೌಡ ಸ್ವಾಗತಿಸಿ ನಿರೂಪಿಸಿದರು.

“ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ಸಮುದಾಯದ ಭವಿಷ್ಯ ಉಜ್ವಲವಾಗುತ್ತದೆ, ಪ್ರತಿಯೊಬ್ಬ ಪೋಷಕರು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು.”

– ಕೆ. ನೇಮಿರಾಜ ನಾಯ್ಕ್, ಶಾಸಕ

ರೈತರ ವಿಶ್ವಾಸಕ್ಕೆ ಮತ್ತೆ ಮೋದಿ ಮುದ್ರೆ: ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಡಿ.ವೈ. ಹುನಗುಂದ

0

ವಿಜಯಸಾಕ್ಷಿ ಸುದ್ದಿ, ಗದಗ: 2026–27ರಿಂದ 2030–31ರವರೆಗೆ ಮುಂದಿನ ಐದು ವರ್ಷಗಳ ಕಾಲ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆ ಮುಂದುವರಿಸಲು ಕೇಂದ್ರ ಸರ್ಕಾರ ₹3.15 ಲಕ್ಷ ಕೋಟಿಗೂ ಅಧಿಕ ಅನುದಾನ ಮೀಸಲಿಟ್ಟಿರುವುದು ರೈತಪರ ಆಡಳಿತಕ್ಕೆ ಮತ್ತೊಂದು ಸಾಕ್ಷಿಯಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಡಿ.ವೈ. ಹುನಗುಂದ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, 2019ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯು ಇಂದು ವಿಶ್ವದ ಅತಿದೊಡ್ಡ ನೇರ ನಗದು ವರ್ಗಾವಣೆ (ಡಿಬಿಟಿ) ಯೋಜನೆಗಳಲ್ಲಿ ಒಂದಾಗಿ ಬೆಳೆದಿದೆ. ಆಧಾರ್ ದೃಢೀಕರಣ, ಫೇಸ್ ಆಥೆಂಟಿಕೇಶನ್ ಹಾಗೂ ಡಿಜಿಟಲ್ ತಂತ್ರಜ್ಞಾನದ ಮೂಲಕ ಯಾವುದೇ ಮಧ್ಯವರ್ತಿಗಳಿಲ್ಲದೆ ನೆರವು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ತಲುಪುತ್ತಿರುವುದು ಯೋಜನೆಯ ದೊಡ್ಡ ಯಶಸ್ಸಾಗಿದೆ ಎಂದರು.

ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಕೃಷಿ ಬಜೆಟ್ ಅನ್ನು ₹21,933 ಕೋಟಿಯಿಂದ ₹1,27,290 ಕೋಟಿಗೂ ಅಧಿಕ ಮೊತ್ತಕ್ಕೆ ಏರಿಕೆ ಮಾಡಿರುವುದು ರೈತರ ಅಭಿವೃದ್ಧಿಗೆ ನೀಡುತ್ತಿರುವ ಆದ್ಯತೆಯನ್ನು ತೋರಿಸುತ್ತದೆ. ರೈತರಿಗೆ ಪ್ರಾದೇಶಿಕ ಭಾಷೆಯಲ್ಲಿ ಕೃಷಿ ಮಾಹಿತಿ ತಲುಪಿಸಲು ‘ಭಾರತ್ ವಿಸ್ತಾರ’ ಹಾಗೂ ‘ಭಾಷಿಣಿ’ ಎಐ ತಂತ್ರಜ್ಞಾನ ಜಾರಿಗೊಳಿಸುತ್ತಿರುವುದೂ ರೈತ ಸಬಲೀಕರಣದ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.

ಯೋಜನೆಯಡಿ ಅರ್ಹ ರೈತ ಕುಟುಂಬಗಳಿಗೆ ವರ್ಷಕ್ಕೆ ₹6,000 ಅನ್ನು ಮೂರು ಕಂತುಗಳಲ್ಲಿ ನೇರವಾಗಿ ಜಮೆ ಮಾಡಲಾಗುತ್ತಿದೆ. ಇದುವರೆಗೆ 23 ಕಂತುಗಳ ಮೂಲಕ ₹4.47 ಲಕ್ಷ ಕೋಟಿಗೂ ಅಧಿಕ ಮೊತ್ತ ರೈತರ ಖಾತೆಗೆ ವರ್ಗಾವಣೆಯಾಗಿದ್ದು, ಇತ್ತೀಚಿನ ಕಂತಿನಲ್ಲಿ 9.49 ಕೋಟಿಗೂ ಅಧಿಕ ರೈತರಿಗೆ ₹18,984 ಕೋಟಿಗೂ ಹೆಚ್ಚು ಹಣ ಜಮೆಯಾಗಿದೆ ಎಂದು ಮಾಹಿತಿ ನೀಡಿದರು.

ನೀತಿ ಆಯೋಗದ ವರದಿ ಪ್ರಕಾರ, ಶೇ.92ಕ್ಕೂ ಹೆಚ್ಚು ರೈತರು ಈ ನೆರವನ್ನು ಕೃಷಿ ಹೂಡಿಕೆಗೆ ಬಳಸಿದ್ದು, ಶೇ.85ರಷ್ಟು ರೈತರ ಆದಾಯ ಹೆಚ್ಚಳವಾಗಿದೆ. ಜೊತೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಹಾಗೂ ಪಿಎಂ ಕಿಸಾನ್ ಮಾನ್-ಧನ್ ಯೋಜನೆಯಂತಹ ಕಾರ್ಯಕ್ರಮಗಳ ಮೂಲಕ ರೈತರಿಗೆ ಇನ್ನಷ್ಟು ಭದ್ರತೆ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಈ ರೈತಪರ ನಿರ್ಧಾರವನ್ನು ಜಿಲ್ಲೆಯ ಸಮಸ್ತ ರೈತ ಸಮುದಾಯದ ಪರವಾಗಿ ಸ್ವಾಗತಿಸಿ ಅಭಿನಂದಿಸುತ್ತೇನೆ ಎಂದು ಡಿ.ವೈ. ಹುನಗುಂದ ತಿಳಿಸಿದ್ದಾರೆ.

“ಮುಂದಿನ ಐದು ವರ್ಷಗಳಿಗೂ ಪಿಎಂ ಕಿಸಾನ್ ಯೋಜನೆ ಮುಂದುವರಿಸಿರುವುದು ರೈತರ ಕಲ್ಯಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅಚಲ ಬದ್ಧತೆಯ ಪ್ರತೀಕ.”

– ಡಿ.ವೈ. ಹುನಗುಂದ, ಜಿಲ್ಲಾಧ್ಯಕ್ಷರು, ಬಿಜೆಪಿ ರೈತ ಮೋರ್ಚಾ

ಗುರುಮಾತೆಗೆ ಶಿಷ್ಯರ ಗೌರವದ ನಮನ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸುಮಾರು 36 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಆದರ್ಶ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಶ್ರೀ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಬಿ.ಜಿ. ಶಿರಸಿ ಅವರಿಗೆ 1989–90ರಿಂದ 1995–96ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ಬಳಗದಿಂದ ಶಾಲೆಯ ಆವರಣದಲ್ಲಿ ಆತ್ಮೀಯ ಅಭಿನಂದನೆ ಹಾಗೂ ಸನ್ಮಾನ ಸಮಾರಂಭ ನಡೆಯಿತು.

ಸಮಾರಂಭದಲ್ಲಿ ಹಲವು ವರ್ಷಗಳ ಬಳಿಕ ಒಂದೆಡೆ ಸೇರಿದ ಹಳೆಯ ವಿದ್ಯಾರ್ಥಿಗಳು ತಮ್ಮ ಗುರುಮಾತೆಯೊಂದಿಗೆ ಶಾಲಾ ದಿನಗಳ ನೆನಪುಗಳನ್ನು ಮೆಲುಕು ಹಾಕಿ ಭಾವುಕರಾದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮಿತಿಯ ಆಡಳಿತಾಧಿಕಾರಿ ಡಾ. ಜಿ.ಕೆ. ಕಾಳೆ ಮಾತನಾಡಿ, ಶಿಕ್ಷಕರಿಗೆ ನಿವೃತ್ತಿ ಇರಬಹುದು; ಆದರೆ ಅವರು ರೂಪಿಸಿದ ವಿದ್ಯಾರ್ಥಿಗಳ ಸಾಧನೆಗಳಲ್ಲಿ ಅವರ ಸೇವೆ ಸದಾ ಜೀವಂತವಾಗಿರುತ್ತದೆ. ಬಿ.ಜಿ. ಶಿರಸಿ ಅವರು ಶಿಕ್ಷಣದ ಜೊತೆಗೆ ಶಿಸ್ತು, ಸಮಯಪಾಲನೆ, ಮಾನವೀಯ ಮೌಲ್ಯಗಳು ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಿದ ಆದರ್ಶ ಶಿಕ್ಷಕಿಯಾಗಿದ್ದಾರೆ ಎಂದು ಹೇಳಿದರು.

ಮುಖ್ಯ ಅತಿಥಿ ರವೀಂದ್ರನಾಥ ದೊಡ್ಡಮೇಟಿ ಮಾತನಾಡಿ, ವಿದ್ಯಾರ್ಥಿಗಳ ಪ್ರೀತಿ ಮತ್ತು ಗೌರವವೇ ಶಿಕ್ಷಕರ ಜೀವನದ ನಿಜವಾದ ಸಂಪತ್ತು. ಬಿ.ಜಿ. ಶಿರಸಿ ಅವರ ಮಾರ್ಗದರ್ಶನದಿಂದ ಶಿಕ್ಷಣ ಪಡೆದ ಅನೇಕ ವಿದ್ಯಾರ್ಥಿಗಳು ಇಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವುದು ಅವರ ಸೇವೆಯ ದೊಡ್ಡ ಗೌರವವಾಗಿದೆ ಎಂದರು.

ಈ ವೇಳೆ ಹಳೆಯ ವಿದ್ಯಾರ್ಥಿಗಳ ಪರವಾಗಿ ಗುರುಮಾತೆಗೆ ಶಾಲು ಹೊದಿಸಿ, ಪುಷ್ಪಗುಚ್ಛ, ಸ್ಮರಣಿಕೆ, ಮೌಲ್ಯಯುತ ಪುಸ್ತಕ ಹಾಗೂ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿ.ಜಿ. ಶಿರಸಿ, “ಶಿಕ್ಷಕರಿಗೆ ಸಿಗುವ ಅತಿ ದೊಡ್ಡ ಪ್ರಶಸ್ತಿ ವಿದ್ಯಾರ್ಥಿಗಳ ಪ್ರೀತಿ ಮತ್ತು ಗೌರವ. ಹಲವು ವರ್ಷಗಳ ನಂತರವೂ ನನ್ನನ್ನು ನೆನಪಿಸಿಕೊಂಡು ನೀಡಿದ ಈ ಸನ್ಮಾನ ನನ್ನ ಜೀವನದ ಅಮೂಲ್ಯ ಕ್ಷಣ” ಎಂದು ಭಾವುಕರಾದರು.

ಶಿವಕುಮಾರ ಹಿರೇಮಠ ಸ್ವಾಗತಿಸಿದರು. ಸವಿತಾ ಪಾಟೀಲ ನಿರೂಪಿಸಿದರು. ಶ್ಯಾಮಸುಂದರ ಪ್ರಭಾಕರ ಅನಿಸಿಕೆ ಹಂಚಿಕೊಂಡರು. ವೀರಭದ್ರಪ್ಪ ಮೆಣಸಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂದೀಶ ಎಸ್. ಅಚ್ಚಿ ಅಭಿನಂದನಾ ಪತ್ರ ವಾಚಿಸಿದರು. ಪ್ರಶಾಂತ ಹಲಕುರ್ಕಿ ವಂದಿಸಿದರು.

ಶಾಲೆಯ ಶಿಕ್ಷಕರು, ಸಿಬ್ಬಂದಿ, ಹಳೆಯ ವಿದ್ಯಾರ್ಥಿಗಳು, ಪಾಲಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರುಮಾತೆಯ ಶಿಕ್ಷಣ ಸೇವೆಯನ್ನು ಕೊಂಡಾಡಿದರು.

“ಶಿಕ್ಷಕರಿಗೆ ದೊರೆಯುವ ಅತಿ ದೊಡ್ಡ ಪ್ರಶಸ್ತಿ ಎಂದರೆ ವಿದ್ಯಾರ್ಥಿಗಳ ಪ್ರೀತಿ ಮತ್ತು ಗೌರವ.”

– ಬಿ.ಜಿ. ಶಿರಸಿ, ನಿವೃತ್ತ ಮುಖ್ಯ ಶಿಕ್ಷಕಿ

ಗ್ರಾಮೀಣ ವಿದ್ಯುತ್ ಸೇವೆಯ ಸಾರಥಿಗೆ ಗೌರವ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಜಕ್ಕಲಿ ಗ್ರಾಮದ ಗ್ರಾಮ ವಿದ್ಯುತ್ ಪ್ರತಿನಿಧಿಯಾಗಿ 22 ವರ್ಷಗಳ ಕಾಲ ಹೆಸ್ಕಾಂ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮಹೇಶ ಹಿರೇಮಠ ಅವರಿಗೆ ಶನಿವಾರ ನರೇಗಲ್ಲ ಹೆಸ್ಕಾಂ ಕಚೇರಿಯಲ್ಲಿ ಆತ್ಮೀಯ ಸನ್ಮಾನ ಹಾಗೂ ಭಾವಪೂರ್ಣ ಬೀಳ್ಕೊಡುಗೆ ನೀಡಲಾಯಿತು.

ಅಧ್ಯಕ್ಷತೆ ವಹಿಸಿದ್ದ ರೋಣ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ವಿ.ಟಿ. ರಾಜೂರ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೆಸ್ಕಾಂ ಇಲಾಖೆ ಮತ್ತು ಗ್ರಾಹಕರ ನಡುವಿನ ಸಂಪರ್ಕ ಕೊಂಡಿಯಾಗಿ ಮಹೇಶ ಹಿರೇಮಠ ಅವರು ಪ್ರಾಮಾಣಿಕತೆ, ನಿಷ್ಠೆ ಹಾಗೂ ಕರ್ತವ್ಯಪ್ರಜ್ಞೆಯಿಂದ 22 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಲಾಖೆಗೆ ಉತ್ತಮ ಹೆಸರು ತಂದಿದ್ದಾರೆ ಎಂದು ಶ್ಲಾಘಿಸಿದರು.

ರೋಣ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಘವೇಂದ್ರ ಕೋಚಿ ಮಾತನಾಡಿ, ಗ್ರಾಮೀಣ ವಿದ್ಯುತ್ ಸರಬರಾಜು, ಬಾಕಿ ವಸೂಲಿ ಹಾಗೂ ಇಲಾಖೆಯ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿದ ಅವರ ಸೇವೆ ಯುವ ಗ್ರಾಮ ವಿದ್ಯುತ್ ಪ್ರತಿನಿಧಿಗಳಿಗೆ ಮಾದರಿಯಾಗಿದೆ ಎಂದರು.

ಸನ್ಮಾನ ಸ್ವೀಕರಿಸಿದ ಮಹೇಶ ಹಿರೇಮಠ, ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಗ್ರಾಮಸ್ಥರ ಸಹಕಾರದಿಂದಲೇ ತಮ್ಮ ಸೇವೆಯನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಯಿತು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದನ್ನೇ ಕರ್ತವ್ಯವೆಂದು ಭಾವಿಸಿ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸ್.ಎಚ್. ಅಮರಶೆಟ್ಟಿ, ಎಂ.ಎನ್. ಮುಲ್ಲಾ, ಐ.ಎ. ಚೌಭಾರಿ, ವಿ.ಆರ್. ಸರ್ವಿ, ಎಂ.ಜೆ. ಹುಡೇದ, ವೀರೇಶ ಸಜ್ಜನ್, ಮರಿಯಪ್ಪ ಅಳವಂಡಿ, ಶರಣಪ್ಪ ಚವಡಿ, ಮಹೇಶ ಹಡಪದ, ಪ್ರಕಾಶ ವಾಲಿ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಗ್ರಾಮ ವಿದ್ಯುತ್ ಪ್ರತಿನಿಧಿಗಳು ಹಾಗೂ ಹಿರೇಮಠ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

“ಪ್ರಾಮಾಣಿಕತೆ ಮತ್ತು ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸಿ ಮಹೇಶ ಹಿರೇಮಠ ಅವರು ಇಲಾಖೆಗೆ ಉತ್ತಮ ಹೆಸರು ತಂದುಕೊಟ್ಟಿದ್ದಾರೆ.”

– ವಿ.ಟಿ. ರಾಜೂರ, ಕಾರ್ಯನಿರ್ವಾಹಕ ಅಭಿಯಂತರ, ಹೆಸ್ಕಾಂ ರೋಣ ವಿಭಾಗ

ಅಕ್ಷರ ಬಿತ್ತಿದ ಗುರುಗೆ ಅಭಿಮಾನದ ವಿದಾಯ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಮಕ್ಕಳ ಮನಸ್ಸನ್ನು ಅರ್ಥಮಾಡಿಕೊಂಡು ಪಠ್ಯದ ಜೊತೆಗೆ ಜೀವನ ಮೌಲ್ಯಗಳ ಶಿಕ್ಷಣ ನೀಡಿ ವಿದ್ಯಾರ್ಥಿಗಳ ಪ್ರೀತಿ ಗಳಿಸಿದ ಕನ್ನಡ ಶಿಕ್ಷಕ ಎಸ್.ಎಚ್. ಶೆಟ್ಟಿನಾಯಕರ ಅವರು ಈ ಶಾಲೆಯ ಆದರ್ಶ ಶಿಕ್ಷಕರಾಗಿದ್ದರು ಎಂದು ನಿವೃತ್ತ ಮುಖ್ಯೋಪಾಧ್ಯಾಯ ಸಿ.ಸಿ. ಕುರಹಟ್ಟಿ ಹೇಳಿದರು.

ಲಕ್ಕುಂಡಿಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಎಸ್.ಎಚ್. ಶೆಟ್ಟಿನಾಯಕರವರ ವಯೋನಿವೃತ್ತಿ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿ, ಮುಖ್ಯೋಪಾಧ್ಯಾಯರಿಗೆ ಹೆಗಲಾಗಿ, ಗ್ರಾಮಸ್ಥರಿಗೆ ಆತ್ಮೀಯ ಸ್ನೇಹಿತರಾಗಿ, ಶಾಲಾ ಆಡಳಿತಕ್ಕೆ ಸಲಹೆಗಾರರಾಗಿ ಹಾಗೂ ಮಕ್ಕಳಿಗೆ ತಂದೆ-ತಾಯಿಯಂತೆ ಸೇವೆ ಸಲ್ಲಿಸಿದ ಅವರ 14 ವರ್ಷಗಳ ಸೇವೆ ಶಾಲೆಯ ಇತಿಹಾಸದಲ್ಲಿ ಸ್ಮರಣೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಹಿತಿ ಹಾಗೂ ನಿವೃತ್ತ ಉಪನ್ಯಾಸಕ ಎನ್.ಸಿ. ಮುಕ್ಕಣ್ಣವರ ಮಾತನಾಡಿ, ವಿದ್ಯಾರ್ಥಿಗಳ ಹೃದಯ ಗೆದ್ದ ಶಿಕ್ಷಕರಾಗಿ ಶೆಟ್ಟಿನಾಯಕರ ಸೇವೆ ಸಾರ್ಥಕವಾಗಿದೆ. ಶಾಲೆಯ ಅಭಿವೃದ್ಧಿ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕಾಗಿ ಅವರು ಸಲ್ಲಿಸಿದ ಕೊಡುಗೆ ಶ್ಲಾಘನೀಯ ಎಂದರು.

ನಿವೃತ್ತ ಯೋಧ ದತ್ತಾತ್ರೇಯ ಜೋಶಿ ಮಾತನಾಡಿ, ಶಿಕ್ಷಣ ಅತ್ಯಂತ ಪವಿತ್ರ ಕ್ಷೇತ್ರವಾಗಿದ್ದು, ಅದಕ್ಕೆ ಶೆಟ್ಟಿನಾಯಕರವರು ಹೊಸ ಶಕ್ತಿ ತುಂಬಿದ್ದಾರೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಸ್. ಪೂಜಾರ ಮಾತನಾಡಿ, “ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವೋ ಮಹೇಶ್ವರ” ಎಂಬ ಮಾತಿನಂತೆ ಶೆಟ್ಟಿನಾಯಕರವರು ತಮ್ಮ ಶಿಕ್ಷಕ ಸೇವೆಯ ಮೂಲಕ ಗುರುಗಳ ಮಹತ್ವವನ್ನು ಎತ್ತಿಹಿಡಿದಿದ್ದಾರೆ ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್.ಎಚ್. ಶೆಟ್ಟಿನಾಯಕರ, ಗದಗ ತಾಲೂಕಿನ ಕೀರಿಟಗೇರಿಯಲ್ಲಿ ಆರಂಭವಾದ ತಮ್ಮ ಶಿಕ್ಷಕ ಜೀವನ ಲಕ್ಕುಂಡಿಯಲ್ಲಿ ಪೂರ್ಣಗೊಂಡಿದೆ. 39 ವರ್ಷಗಳ ಶಿಕ್ಷಕ ಸೇವೆ ಎಲ್ಲರ ಪ್ರೀತಿ, ವಿಶ್ವಾಸ ಹಾಗೂ ಸಹಕಾರದಿಂದ ಸಾರ್ಥಕವಾಗಿದೆ. ಕೀರಿಟಗೇರಿ ಹಾಗೂ ಲಕ್ಕುಂಡಿ ಗ್ರಾಮಸ್ಥರು ಶಾಲೆಯ ಅಭಿವೃದ್ಧಿಗೆ ನೀಡಿದ ಸಹಕಾರವನ್ನು ಜೀವನಪೂರ್ತಿ ಸ್ಮರಿಸುತ್ತೇನೆ ಎಂದು ಭಾವುಕರಾದರು.

ಕಾರ್ಯಕ್ರಮದಲ್ಲಿ ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಮುಖ್ಯೋಪಾಧ್ಯಾಯಿನಿ ಜ್ಯೋತಿ ಶೆಟ್ಟರ ಅಧ್ಯಕ್ಷತೆ ವಹಿಸಿದ್ದರು. ವೀರಯ್ಯ ಗಂಧದ, ಎಸ್‌ಡಿಎಂಸಿ ಅಧ್ಯಕ್ಷ ರಮಜಾನಸಾಬ ತಹಶೀಲ್ದಾರ, ಅಶೋಕ ಬೂದಿಹಾಳ, ಮಲ್ಲಿಕಾರ್ಜುನ ಹಗರಿ, ಬಸವರಾಜ ಪುರದ, ಅಶೋಕ ಗದಗೀನ, ನಾಗಪ್ಪ ಕುಂಬಾರ, ಮಹಾಂತೇಶ ಕುಂಬಾರ, ಶ್ರೀಧರ ಮಲ್ಲಾಡದ, ಕೆ.ಎಂ. ವಡವಿ, ಟಿ.ಎಂ. ಶಿರಹಟ್ಟಿ, ಮಹೇಶಗೌಡ ಪಾಟೀಲ, ಶಿವಣ್ಣ ಕಟಕಟಿ, ವೀರೇಶ ಹಡಪದ, ಯಲ್ಲಪ್ಪಗೌಡ ಸಂಕನಗೌಡ, ಮಲ್ಲಪ್ಪ ದಂಡಿನ ಸೇರಿದಂತೆ ಶಿಕ್ಷಕರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶೋಭಾ ಪೂಜಾರ ಪ್ರಾರ್ಥಿಸಿದರು. ಕೀರ್ತಿ ಮ್ಯಾಗೇರಿ ಸ್ವಾಗತಿಸಿದರು. ವೈ.ವೈ. ಬೆಟಗೇರಿ ನಿರೂಪಿಸಿದರು. ಎಂ.ಎನ್. ಮುನಶಿ ವಂದಿಸಿದರು.

“ಪಠ್ಯದ ಜೊತೆಗೆ ಜೀವನ ಮೌಲ್ಯಗಳನ್ನು ಬೋಧಿಸಿ ವಿದ್ಯಾರ್ಥಿಗಳ ಮನ ಗೆದ್ದ ಶಿಕ್ಷಕ ಎಸ್.ಎಚ್. ಶೆಟ್ಟಿನಾಯಕರ ಸೇವೆ ಸದಾ ಸ್ಮರಣೀಯ.”

– ಸಿ.ಸಿ. ಕುರಹಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯರು

ಸರ್ಕಾರಿ ಶಾಲೆಗಳನ್ನು ದುರ್ಬಲಗೊಳಿಸುವ ನಿರ್ಧಾರಗಳನ್ನು ಕೈಬಿಡಿ: ಬಸವರಾಜ ಗುರಿಕಾರ

0

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಣ ತಜ್ಞರು ಹಾಗೂ ಶಿಕ್ಷಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸರ್ಕಾರ ಕೈಗೊಳ್ಳುತ್ತಿರುವ ಅವೈಜ್ಞಾನಿಕ ನಿರ್ಧಾರಗಳಿಂದ ಸರ್ಕಾರಿ ಶಾಲೆಗಳು ದಿನದಿಂದ ದಿನಕ್ಕೆ ದುರ್ಬಲವಾಗುತ್ತಿವೆ ಎಂದು ಅಖಿಲ ಭಾರತ ಪ್ರಾಥಮಿಕ ಶಿಕ್ಷಕರ ಫೆಡರೇಷನ್ ಅಧ್ಯಕ್ಷ ಬಸವರಾಜ ಗುರಿಕಾರ ಕಳವಳ ವ್ಯಕ್ತಪಡಿಸಿದರು.

ನಗರದ ಕನಕ ಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಗದಗ ಜಿಲ್ಲಾ ಘಟಕ ಹಾಗೂ ಗದಗ ಗ್ರಾಮೀಣ ಶಿಕ್ಷಕರ ಸಂಘದ ಆಶ್ರಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ, ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಧನ್ಯತಾ ಸಮರ್ಪಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸರ್ಕಾರ ಜಾರಿಗೊಳಿಸಿರುವ ಕ್ಯಾಂಪ್ಸ್‌ (CAMPUS) ಹಾಗೂ ವೆಬ್‌ಕಾಸ್ಟ್ ಹಾಜರಾತಿ ವ್ಯವಸ್ಥೆ ಗುಣಾತ್ಮಕ ಶಿಕ್ಷಣಕ್ಕೆ ಯಾವುದೇ ನೆರವಾಗುವುದಿಲ್ಲ ಎಂದು ಟೀಕಿಸಿದ ಅವರು, ಶಾಲೆಗಳಲ್ಲಿ ವಿಷಯವಾರು ಶಿಕ್ಷಕರು, ಮುಖ್ಯ ಶಿಕ್ಷಕರು, ಕ್ಲರ್ಕ್ ಹಾಗೂ ಅಗತ್ಯ ಸಿಬ್ಬಂದಿಯ ಕೊರತೆ ಇರುವ ಸಂದರ್ಭದಲ್ಲಿ ಶಿಕ್ಷಕರ ಮೇಲೆ ಹೆಚ್ಚುವರಿ ಆಡಳಿತಾತ್ಮಕ ಹೊರೆ ಹಾಕುವುದು ಸರಿಯಲ್ಲ ಎಂದರು.

“ಕ್ಯಾಂಪ್ಸ್‌ ವ್ಯವಸ್ಥೆಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡುವ ಬದಲು ಆ ಹಣವನ್ನು ಸರ್ಕಾರಿ ಶಾಲೆಗಳಿಗೆ ನೀಡಿ ಕಂಪ್ಯೂಟರ್ ಆಪರೇಟರ್‌ಗಳನ್ನು ನೇಮಿಸಿದ್ದರೆ ಶಿಕ್ಷಣದ ಗುಣಮಟ್ಟ ಹೆಚ್ಚಾಗುತ್ತಿತ್ತು. ಈ ವ್ಯವಸ್ಥೆ ಕಲಿಕೆಗೆ ಪೂರಕವಾಗದಿದ್ದರೆ ಸರ್ಕಾರ ಕೂಡಲೇ ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

ಸೇವಾನಿರತ ಶಿಕ್ಷಕರಿಗೆ ಟೀಚರ್ ಎಲಿಜಿಬಿಲಿಟಿ ಟೆಸ್ಟ್ (ಟಿಇಟಿ) ಕಡ್ಡಾಯಗೊಳಿಸಿರುವ ಎನ್‌ಸಿಟಿಇ ನಿಯಮವನ್ನು ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿ ರದ್ದುಪಡಿಸಬೇಕು. ಇಲ್ಲವಾದರೆ ದೇಶದ ಸುಮಾರು 30 ಲಕ್ಷ ಶಿಕ್ಷಕರ ಉದ್ಯೋಗ ಭದ್ರತೆಗೆ ಧಕ್ಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ವಿ.ಎಂ. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಅವರ ಪ್ರಯತ್ನದಿಂದ 1997ರಿಂದ ಇದ್ದ ಟಿಇಟಿ ಸಮಸ್ಯೆಗೆ ಕಾನೂನು ತಿದ್ದುಪಡಿ ಸಾಧ್ಯವಾಗಿ ಸುಮಾರು 10 ಸಾವಿರ ಶಿಕ್ಷಕರಿಗೆ ಬಡ್ತಿ ದೊರೆತಿದೆ ಎಂದು ಹೇಳಿದರು.

ಉಪನಿರ್ದೇಶಕ ಆರ್.ಎಸ್. ಬುರಡಿ ಅವರ ಅಧಿಕಾರಾವಧಿಯಲ್ಲಿ ಗದಗ ಜಿಲ್ಲೆಯಲ್ಲಿ ಸುಮಾರು 180 ಪ್ರಾಥಮಿಕ ಶಿಕ್ಷಕರಿಗೆ ಮುಖ್ಯ ಶಿಕ್ಷಕರಾಗಿ, 48 ಮಂದಿಗೆ ಹಾಗೂ 15 ದೈಹಿಕ ಶಿಕ್ಷಕರಿಗೆ ಬಡ್ತಿ ನೀಡಲಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ದೈಹಿಕ ಶಿಕ್ಷಕರಿಗೆ ಬಡ್ತಿ ನೀಡಿದ ಜಿಲ್ಲೆ ಗದಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೇಳಿದರು.

ರಾಜ್ಯ ಮಹಿಳಾ ಘಟಕದ ಸಹ ಕಾರ್ಯದರ್ಶಿ ಪ್ರಮೀಳಾ ಕಾಮನಹಳ್ಳಿ ಮಾತನಾಡಿ, ಕಳೆದ ಹತ್ತು ತಿಂಗಳಲ್ಲಿ ರಾಜ್ಯ ಸಂಘವು ಶಿಕ್ಷಕರ ಪರವಾಗಿ 27 ಮಹತ್ವದ ಆದೇಶಗಳನ್ನು ಹೊರಡಿಸಿದ್ದು, ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸಿರುವುದು ಸಂಘದ ಮಹತ್ವದ ಸಾಧನೆ ಎಂದರು.

ಕಾರ್ಯಕ್ರಮದಲ್ಲಿ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ, ಡಿಡಿಪಿಐ ಆರ್.ಎಸ್. ಬುರಡಿ, ಬಿಇಒ ವಿ.ವಿ. ನಡುವಿನಮನಿ, ಡಯಟ್ ಪ್ರಾಚಾರ್ಯ ಕೆ.ಡಿ. ಬಡಿಗೇರ, ಅಕ್ಷರ ದಾಸೋಹ ಅಧಿಕಾರಿ ಶಂಕರ ಹಡಗಲಿ, ತಾಲೂಕು ಅಧ್ಯಕ್ಷ ಶಿವಯೋಗಿ ಬಂಡಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರತಿಭಾನ್ವಿತ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ, ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಲಾಯಿತು.

“ಶಿಕ್ಷಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕೈಗೊಳ್ಳುವ ಅವೈಜ್ಞಾನಿಕ ನಿರ್ಧಾರಗಳಿಂದ ಸರ್ಕಾರಿ ಶಾಲೆಗಳು ದುರ್ಬಲವಾಗುತ್ತಿವೆ. ಕಲಿಕೆಗೆ ಪೂರಕವಾಗದ ಕ್ಯಾಂಪ್ಸ್‌ ವ್ಯವಸ್ಥೆಯನ್ನು ಸರ್ಕಾರ ಹಿಂಪಡೆಯಬೇಕು.”

– ಬಸವರಾಜ ಗುರಿಕಾರ, ಅಖಿಲ ಭಾರತ ಪ್ರಾಥಮಿಕ ಶಿಕ್ಷಕರ ಫೆಡರೇಷನ್ ಅಧ್ಯಕ್ಷರು

ಮೂಲಸೌಲಭ್ಯಕ್ಕೆ ಕಲ್ಪಿಸದ ನಗರಸಭೆ ವಿರುದ್ಧ ಆಕ್ರೋಶ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರದ ಸ್ಲಂ ಪ್ರದೇಶಗಳ ಅಭಿವೃದ್ಧಿ ಹಾಗೂ ವಸತಿರಹಿತರ ಸಮಸ್ಯೆಗಳ ಪರಿಹಾರಕ್ಕೆ ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದು, ಸ್ಲಂ ಜನರ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿರುವ ಗದಗ ಜಿಲ್ಲಾ ಸ್ಲಂ ಸಮಿತಿ, ಶೀಘ್ರದಲ್ಲೇ ನಗರಸಭೆ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ನಗರಸಭೆ ಉದ್ಯಾನವನದಲ್ಲಿ ನಡೆದ ಸ್ಲಂ ನಿವಾಸಿಗಳು ಹಾಗೂ ವಸತಿರಹಿತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಮಿತಿಯ ಅಧ್ಯಕ್ಷ ಇಮ್ತಿಯಾಜ್ ಆರ್. ಮಾನ್ವಿ, 2014ರಿಂದ ವಸತಿರಹಿತ ಕುಟುಂಬಗಳಿಗೆ ಮನೆ ಸೌಲಭ್ಯ ಕಲ್ಪಿಸುವಂತೆ ನಿರಂತರ ಹೋರಾಟ ನಡೆಸುತ್ತಿದ್ದೇವೆ. 348 ಕುಟುಂಬಗಳಿಗೆ ಮನೆ ಮಂಜೂರಾತಿ ಪತ್ರ ನೀಡಲಾಗಿದ್ದರೂ, ಮನೆ ಹಂಚಿಕೆ ವೇಳೆ ನೈಜ ಫಲಾನುಭವಿಗಳನ್ನು ಕೈಬಿಟ್ಟು ಪ್ರಭಾವಿಗಳ ಒತ್ತಡಕ್ಕೆ ಮಣಿದು ಅನರ್ಹರಿಗೆ ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಇದಕ್ಕೆ ನಗರಸಭೆ ಪೌರಾಯುಕ್ತರು ಹಾಗೂ ಆಶ್ರಯ ಯೋಜನೆ ಸಿಬ್ಬಂದಿಯೇ ನೇರ ಹೊಣೆ ಎಂದು ಆರೋಪಿಸಿದರು.

ನಗರದ ಕೊಳಗೇರಿ ಪ್ರದೇಶಗಳನ್ನು ಅಧಿಕೃತವಾಗಿ ಘೋಷಿಸಲು ಅಗತ್ಯವಿರುವ ನಿರಾಕ್ಷೇಪಣಾ ಪತ್ರ ನೀಡುವಲ್ಲಿಯೂ ನಗರಸಭೆ ವಿಳಂಬ ನೀತಿ ಅನುಸರಿಸುತ್ತಿದೆ. ಅನೇಕ ಬಾರಿ ಮನವಿ ಸಲ್ಲಿಸಿದರೂ ಸ್ಲಂ ಪ್ರದೇಶಗಳ ಅಭಿವೃದ್ಧಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ನಗರಸಭೆ ಬಜೆಟ್‌ನಲ್ಲಿ ಸ್ಲಂ ಅಭಿವೃದ್ಧಿಗೆ ಪ್ರತ್ಯೇಕ ಅನುದಾನ ಮೀಸಲಿಡುವಂತೆ ಒತ್ತಾಯಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಸ್ಲಂ ಪ್ರದೇಶಗಳ ಅನೇಕ ಮಹಿಳೆಯರಿಗೆ ಶೌಚಾಲಯ ಸೌಲಭ್ಯವಿಲ್ಲದ ಕಾರಣ ಇಂದಿಗೂ ಬಯಲು ಶೌಚವನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇದೆ. ಈ ಗಂಭೀರ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದರೂ ಆರೋಗ್ಯ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಲಂ ನಿವಾಸಿಗಳು ಮತ್ತು ವಸತಿರಹಿತರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರಸಭೆ ಎದುರು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದ್ದು, ನಗರದ ಎಲ್ಲಾ ಸ್ಲಂ ನಿವಾಸಿಗಳು ಹಾಗೂ ವಸತಿರಹಿತರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟ ಯಶಸ್ವಿಗೊಳಿಸಬೇಕು ಎಂದು ಇಮ್ತಿಯಾಜ್ ಮಾನ್ವಿ ಕರೆ ನೀಡಿದರು.

ಸಭೆಯಲ್ಲಿ ಸಂಘಟನೆಯ ಮುಖಂಡ ಎಂ.ಬಿ. ನದಾಫ್ (ವಕೀಲರು), ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಇಬ್ರಾಹಿಂ ಮುಲ್ಲಾ, ಶರಣಪ್ಪ ಸೂಡಿ, ಮೌಲಾಸಾಬ ಗಚ್ಚಿ, ಮೆಹಬೂಬಸಾಬ ಬಳ್ಳಾರಿ, ಪುಷ್ಪಾ ಬಿಜಾಪೂರ, ಖಾಜಾಸಾಬ ಇಸ್ಮಾಯಿಲನವರ, ವಿಶಾಲಕ್ಷಿ ಹಿರೇಗೌಡ್ರ, ಲಕ್ಷ್ಮಿ ಮಳೆಕರ, ಮುನ್ನಾ ಅಗಡಿ, ನಜಮುನಿಸಾ ಮುರಗೋಡ, ಖಾಜಾಸಾಬ ಬಳ್ಳಾರಿ, ವೆಂಕಟೇಶ ಬಿಂಕದಕಟ್ಟಿ, ರವಿ ಗೋಸಾವಿ, ಮಕ್ತುಮಸಾಬ ಮುಲ್ಲಾನವರ, ಸಾಕ್ರುಬಾಯಿ ಗೋಸಾವಿ ಸೇರಿದಂತೆ ನಗರದ ವಿವಿಧ ಸ್ಲಂ ಪ್ರದೇಶಗಳ ಮುಖಂಡರು ಭಾಗವಹಿಸಿದ್ದರು.

“ಸ್ಲಂ ಜನರ ನ್ಯಾಯಸಮ್ಮತ ಬೇಡಿಕೆಗಳಿಗೆ ನಗರಸಭೆ ಸ್ಪಂದಿಸದಿದ್ದರೆ ಸಾವಿರಾರು ಸ್ಲಂ ನಿವಾಸಿಗಳೊಂದಿಗೆ ಬೃಹತ್ ಹೋರಾಟ ನಡೆಸಲಾಗುವುದು.”

– ಇಮ್ತಿಯಾಜ್ ಆರ್. ಮಾನ್ವಿ, ಅಧ್ಯಕ್ಷರು, ಗದಗ ಜಿಲ್ಲಾ ಸ್ಲಂ ಸಮಿತಿ

ಗುರುಭಕ್ತಿ ಇದ್ದರೆ ಬದುಕಿಗೆ ದಿಕ್ಕು: ವೀರಮುಕ್ತಿಮುನಿ ಶಿವಾಚಾರ್ಯರು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: “ಜೀವನ ಎಂಬ ಭವಸಾಗರವನ್ನು ದಾಟಿಸುವವನೇ ಗುರು. ಉಸಿರು ಇರುವವರೆಗೂ ದೇವರು, ಹೆತ್ತವರು ಹಾಗೂ ಗುರುವನ್ನು ಸ್ಮರಿಸುತ್ತ ಸನ್ಮಾರ್ಗದಲ್ಲಿ ಬದುಕಬೇಕು. ಗುರುನಾಮ ಸ್ಮರಣೆ ಜೀವನಕ್ಕೆ ಆತ್ಮಬಲ ಮತ್ತು ಸರಿದಾರಿಯನ್ನು ತೋರಿಸುತ್ತದೆ” ಎಂದು ಮುಕ್ತಿಮಂದಿರದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು ಹೇಳಿದರು.

ಪಟ್ಟಣದ ಶ್ರೀ ಬಾಳೇಹಳ್ಳಿಮಠ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಗುರುವಂದನೆ, ಸಾಧಕರ ಸನ್ಮಾನ, ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ಕಾರ್ಯಚಟುವಟಿಕೆಗಳು, ಚಿತ್ರಕಲಾ ಪ್ರದರ್ಶನ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಜಿ.ಎಂ. ಮುಂದಿನಮನಿ ಅವರ ನಿವೃತ್ತಿ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ತಂದೆ-ತಾಯಿ ಜನ್ಮ ನೀಡಿದರೆ, ಗುರು ಬದುಕಿಗೆ ದಿಕ್ಕು, ಗುರಿ ಮತ್ತು ಅರ್ಥ ಕಲ್ಪಿಸುತ್ತಾರೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗುವುದೇ ಗುರುಗಳಿಗೆ ಸಲ್ಲಿಸುವ ನಿಜವಾದ ಗೌರವ. ಹುಟ್ಟು ಅನಿಶ್ಚಿತ, ಸಾವು ನಿಶ್ಚಿತ. ಆದರೆ ಈ ಎರಡರ ನಡುವಿನ ಬದುಕಿನಲ್ಲಿ ಸಮಾಜಕ್ಕೆ ಸಲ್ಲಿಸುವ ಸೇವೆ, ಮಾನವೀಯ ಮೌಲ್ಯಗಳು ಹಾಗೂ ಶಿಕ್ಷಣದ ಮೂಲಕ ಮೂಡಿಸುವ ಸಂಸ್ಕಾರಗಳೇ ಶಾಶ್ವತವಾಗಿ ಉಳಿಯುತ್ತವೆ ಎಂದು ಶ್ರೀಗಳು ಹೇಳಿದರು.

ಟಿಬೇಟಿಯನ್ ಕ್ಯಾಂಪ್‌ನ ಜಂಪಾ ಲೋಬ್ಸಂಗ್ ಗುರೂಜಿ, ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ ಹಾಗೂ ಸಣ್ಣೀರಪ್ಪ ಹಳೆಪ್ಪನವರ ಮಾತನಾಡಿ, ನಿವೃತ್ತ ಶಿಕ್ಷಣಾಧಿಕಾರಿ ಜಿ.ಎಂ. ಮುಂದಿನಮನಿ ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಸ್ಮರಣೀಯವಾಗಿದೆ. “ಶಿಕ್ಷಕ ಎಂದಿಗೂ ನಿವೃತ್ತನಾಗುವುದಿಲ್ಲ; ಆತ ತನ್ನ ವಿದ್ಯಾರ್ಥಿಗಳ ಸಾಧನೆಗಳಲ್ಲಿ ಸದಾ ಜೀವಂತವಾಗಿರುತ್ತಾನೆ” ಎಂದು ಹೇಳಿದರು.

ಜಿ.ಎಂ. ಮುಂದಿನಮನಿ ಅವರು ತಮ್ಮ ಸುದೀರ್ಘ ಸೇವಾವಧಿಯಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣ, ಗುಣಮಟ್ಟದ ಶಿಕ್ಷಣದ ವಿಸ್ತರಣೆ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಶಿಕ್ಷಣದ ಮೂಲಕ ಸಮಾಜ ಪರಿವರ್ತನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಶಾಲೆಯನ್ನು ಉತ್ತಮ ನಾಗರಿಕರನ್ನು ರೂಪಿಸುವ ದೇವಾಲಯವನ್ನಾಗಿ ರೂಪಿಸುವಲ್ಲಿ ಅವರ ಸೇವೆ ಆದರ್ಶಪ್ರಾಯವಾಗಿದೆ ಎಂದು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್.ಎಸ್. ಪಟ್ಟಣಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಡಾ. ಎಂ. ರಾಮಚಂದ್ರ, ಐ.ಬಿ. ಬೆನಕೊಪ್ಪ, ಸುಲೇಮಾನ ಕಣಕೆ, ಮಂಜುನಾಥ ಮಾಗಡಿ, ತಿಮ್ಮರಡ್ಡಿ ಮರಡ್ಡಿ, ಸೋಮಣ್ಣ ಡಾಣಗಲ್, ಪ್ರವೀಣ ಬಾಳಿಕಾಯಿ, ಮಹೇಂದ್ರ ಉಡಚಪ್ಪನವರ, ಅಬ್ದುಲ್ ಸತ್ತೂರ, ಶರಣಪ್ರಕಾಶ ಪಾಟೀಲ, ಎಂ.ಕೆ. ಲಮಾಣಿ, ವಿ.ಎ. ಹುಡೇದ, ಜಿ.ಎನ್. ಉಪ್ಪಿನ, ಹರೀಶ ಲಕ್ಷ್ಮೇಶ್ವರ, ಬಸವರಾಜ ಹಿರೇಮನಿ, ಡಾ. ಸಂಗಮೇಶ ತಮ್ಮನಗೌಡ್ರ, ಬಿ.ಎಸ್. ಹರ್ಲಾಪೂರ, ವಿಜು ಕಿರೇಸೂರ, ಎಂ.ಎನ್. ಭರಮಗೌಡ್ರ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಲಿಸಿದ ಗುರುಗಳಿಗೆ ಗುರುವಂದನೆ ಸಲ್ಲಿಸಲಾಯಿತು. ಪುಸ್ತಕ ಬಿಡುಗಡೆ ನೆರವೇರಿತು. ಕು. ಪ್ರೀತಂ ಕಬ್ಬೇರಹಳ್ಳಿ, ಕು. ಜ್ಞಾನಾ ಗುರುರಾಜ, ಫಕ್ಕೀರಪ್ಪ ದೊಡ್ಡಮನಿ ಹಾಗೂ ಡಾ. ಎಚ್.ಸಿ. ದಿವುಶಂಕರ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಬಳಿಕ ಜಿ.ಎಂ. ಮುಂದಿನಮನಿ ದಂಪತಿಗಳನ್ನು ಅಭಿಮಾನಿ ಬಳಗ ಹಾಗೂ ಶಿಕ್ಷಕ ಬಳಗದವರು ಪಟ್ಟಣದಲ್ಲಿ ಸಾರೋಟ ಮೆರವಣಿಗೆ ನಡೆಸಿ ಅದ್ಧೂರಿಯಾಗಿ ಸನ್ಮಾನಿಸಿದರು.

“ಉಸಿರು ಇರುವವರೆಗೂ ದೇವರು, ಹೆತ್ತವರು ಹಾಗೂ ಗುರುವನ್ನು ಸ್ಮರಿಸುತ್ತ ಬದುಕಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ.”

– ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು, ಮುಕ್ತಿಮಂದಿರ