ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಬಹುಕೋಟಿ ಬಿಟ್ಕಾಯಿನ್ ಹಗರಣದಲ್ಲಿ ಹೆಸರು ಕೇಳಿಬಂದಿದ್ದ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಗೃಹ ಇಲಾಖೆ ಬಿಗ್ ರಿಲೀಫ್ ನೀಡಿದೆ.
ಅಧಿಕಾರಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಅಗತ್ಯವಾಗಿದ್ದ ಅಭಿಯೋಜನಾ ಮಂಜೂರಾತಿಯನ್ನು (Prosecution Sanction) ಗೃಹ ಇಲಾಖೆ ನಿರಾಕರಿಸಿರುವ ಹಿನ್ನೆಲೆಯಲ್ಲಿ, ಸಿಐಡಿ–ಎಸ್ಐಟಿ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿ ಅವರನ್ನು ಪ್ರಕರಣದಿಂದ ಕೈಬಿಟ್ಟಿದೆ.
ಡಿವೈಎಸ್ಪಿ ಶ್ರೀಧರ್ ಪೂಜಾರ್, ಪೊಲೀಸ್ ಇನ್ಸ್ಪೆಕ್ಟರ್ಗಳಾದ ಚಂದ್ರಾಧರ್, ಡಿ.ಎಂ. ಪ್ರಶಾಂತ್ ಬಾಬು ಹಾಗೂ ಲಕ್ಷ್ಮೀ ಕಾಂತಯ್ಯ ವಿರುದ್ಧ ತನಿಖೆ ನಡೆಸಲಾಗುತ್ತಿತ್ತು. ಇದೀಗ ಅಭಿಯೋಜನಾ ಮಂಜೂರಾತಿ ದೊರೆಯದ ಕಾರಣ ಇವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಸಾಧ್ಯವಾಗಿಲ್ಲ.
ಏನಿದು ಪ್ರಕರಣ?
2020-21ರಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಿಟ್ಕಾಯಿನ್ ಹಗರಣದಲ್ಲಿ, ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಅವರನ್ನು ಅಕ್ರಮ ಬಂಧನದಲ್ಲಿರಿಸಿ, ಅವರ ಮೂಲಕ ಬಿಟ್ಕಾಯಿನ್ ವರ್ಗಾವಣೆ ಮಾಡಿಸಿಕೊಂಡ ಆರೋಪ ಈ ಅಧಿಕಾರಿಗಳ ವಿರುದ್ಧ ಕೇಳಿಬಂದಿತ್ತು.
ಎಸ್ಐಟಿ ತನಿಖೆ ಪ್ರಕಾರ, ಈ ಅಧಿಕಾರಿಗಳು ಸೈಬರ್ ತಜ್ಞ ಸಂತೋಷ್ ಕುಮಾರ್ ಅವರೊಂದಿಗೆ ಸೇರಿ, ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಅವರ ಕ್ರಿಪ್ಟೋ ವ್ಯಾಲೆಟ್ಗಳನ್ನು ದುರ್ಬಳಕೆ ಮಾಡಿಕೊಂಡು ಸುಮಾರು 1 ಕೋಟಿ 83 ಲಕ್ಷ 624 ರೂಪಾಯಿ ಮೌಲ್ಯದ ಬಿಟ್ಕಾಯಿನ್ ಅನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂಬ ಆರೋಪವಿತ್ತು.
ಸರ್ಕಾರಿ ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಲು ಗೃಹ ಇಲಾಖೆಯ ಪೂರ್ವಾನುಮತಿ ಕಡ್ಡಾಯವಾಗಿದೆ. ಆದರೆ, ಈ ನಾಲ್ವರು ಅಧಿಕಾರಿಗಳ ವಿರುದ್ಧದ ಅಭಿಯೋಜನಾ ಮಂಜೂರಾತಿ ಪ್ರಸ್ತಾವನೆಯನ್ನು ಗೃಹ ಇಲಾಖೆ ತಿರಸ್ಕರಿಸಿದೆ. ಇದರ ಪರಿಣಾಮವಾಗಿ ಸಿಐಡಿ–ಎಸ್ಐಟಿ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿ ಅಧಿಕಾರಿಗಳನ್ನು ಪ್ರಕರಣದ ದೋಷಾರೋಪ ಪಟ್ಟಿಯಿಂದ ಕೈಬಿಟ್ಟಿದೆ.
ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ರಿಲೀಫ್ ದೊರೆತಿದ್ದರೂ, ಪ್ರಕರಣದ ಎ-1 ಆರೋಪಿಯಾಗಿರುವ ಸೈಬರ್ ತಜ್ಞ ಸಂತೋಷ್ ಕುಮಾರ್ ವಿರುದ್ಧ ತನಿಖೆ ಮುಂದುವರಿದಿದೆ. ರಾಬಿನ್ ಖಂಡೇವಾಲ ಅವರ ಕ್ರಿಪ್ಟೋ ವ್ಯಾಲೆಟ್ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬಿಟ್ಕಾಯಿನ್ ಅಕ್ರಮ ವರ್ಗಾವಣೆ, ವಂಚನೆ ಹಾಗೂ ಸಾಕ್ಷ್ಯಾಧಾರ ತಿರುಚಿದ ಆರೋಪಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧ ಬಲವಾದ ಸಾಕ್ಷ್ಯಗಳು ಲಭ್ಯವಾಗಿವೆ ಎಂದು ತನಿಖಾ ಮೂಲಗಳು ತಿಳಿಸಿವೆ.
ರಾಜಕೀಯವಾಗಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಬಿಟ್ಕಾಯಿನ್ ಹಗರಣದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧದ ತನಿಖೆ ಈ ಹಂತದಲ್ಲಿ ಅಂತ್ಯಗೊಂಡಿರುವುದು ಮತ್ತೆ ರಾಜಕೀಯ ವಾಗ್ವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ.

