ಉಡುಪಿ: ಕೃಷ್ಣನ ನಾಡು ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಕ್ಕೆ ಸಜ್ಜಾಗಿದೆ.
ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಅರ್ಘ್ಯ ಪ್ರದಾನ ನಡೆಯಲಿದ್ದು, ಸೆಪ್ಟೆಂಬರ್ 5ರಂದು ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವ ವೈಭವದಿಂದ ನಡೆಯಲಿದೆ. ಅಷ್ಟಮಿ ಸಂಭ್ರಮಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ಕೃಷ್ಣ ಮಠದ ಸುತ್ತಮುತ್ತ ಹಾಗೂ ರಥಬೀದಿಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.
ಸೆಪ್ಟೆಂಬರ್ 4ರಂದು ರಾತ್ರಿ 12.12ಕ್ಕೆ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಭಕ್ತರು ಉಡುಪಿಗೆ ಆಗಮಿಸುವ ನಿರೀಕ್ಷೆಯಿದ್ದು, ಭಕ್ತರ ಸ್ವಾಗತಕ್ಕೆ ನಗರವನ್ನು ಸಿಂಗಾರಗೊಳಿಸಲಾಗುತ್ತಿದೆ.
ಅಷ್ಟಮಿಗೆ ಹುಲಿವೇಷದ ಮೆರುಗು:
ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ಕರಾವಳಿಯ ಸಾಂಪ್ರದಾಯಿಕ ಹುಲಿವೇಷಕ್ಕೂ ಸಿದ್ಧತೆಗಳು ಭರದಿಂದ ಸಾಗಿವೆ. ಕೃಷ್ಣ ರಥಬೀದಿಯಲ್ಲಿ ಹುಲಿಗಳ ಘರ್ಜನೆ, ಕುಣಿತ ಹಾಗೂ ಹೆಜ್ಜೆಗಳ ವೈಭವ ಕಣ್ಮನ ಸೆಳೆಯಲಿದೆ.
ಹಲವು ಹುಲಿವೇಷ ತಂಡಗಳು ಈಗಾಗಲೇ ತಾಲೀಮು ಆರಂಭಿಸಿದ್ದು, ಅಷ್ಟಮಿ ಅಂಗವಾಗಿ ವಿವಿಧ ತಂಡಗಳಿಂದ ಹುಲಿವೇಷ ಸೇವೆಗಳನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹುಲಿವೇಷದ ಜತೆಗೆ ಕರಾವಳಿಯ ಸಾಂಪ್ರದಾಯಿಕ ವೇಷಗಳು ಹಾಗೂ ಜನಪದ ಕಲಾ ಪ್ರದರ್ಶನಗಳು ಉತ್ಸವಕ್ಕೆ ಮತ್ತಷ್ಟು ಮೆರುಗು ನೀಡಲಿವೆ.
ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮ:
ಅಷ್ಟಮಿ ಪ್ರಯುಕ್ತ ಹುಲಿವೇಷ ಸ್ಪರ್ಧೆ, ಕೃಷ್ಣ ವೇಷ ಸ್ಪರ್ಧೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಕ್ಕಳಿಂದ ಹಿರಿಯರವರೆಗೆ ಎಲ್ಲರನ್ನೂ ಸೆಳೆಯುವಂತೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.
ರಾಜಾಂಗಣದಲ್ಲಿ ಹುಲಿವೇಷ ಕುಣಿತ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಎರಡು ದಿನಗಳ ಕಾಲ ವಿಶೇಷ ವೇದಿಕೆಯಲ್ಲಿ ಹುಲಿವೇಷ ಸ್ಪರ್ಧೆ ನಡೆಯಲಿದೆ.
ಸೆ.5ರಂದು ವಿಟ್ಲಪಿಂಡಿ ಉತ್ಸವ:
ಸೆಪ್ಟೆಂಬರ್ 5ರಂದು ಬೆಳಗ್ಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ಚಿನ್ನದ ರಥದಲ್ಲಿ ಶ್ರೀಕೃಷ್ಣನ ಮೃಣ್ಮಯ ವಿಗ್ರಹದ ಮೆರವಣಿಗೆ ನಡೆಯಲಿದೆ.
ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವದ ಅಂಗವಾಗಿ ರಥಬೀದಿಯ ವಿಶೇಷ ವೇದಿಕೆಯಲ್ಲಿ ಆಹ್ವಾನಿತ ಮಲ್ಲಯುದ್ಧ ಪ್ರವೀಣರಿಂದ ಮಲ್ಲಯುದ್ಧ ಪ್ರದರ್ಶನವೂ ನಡೆಯಲಿದೆ. ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಲಿರುವ ಈ ಪ್ರದರ್ಶನಕ್ಕೆ ಭಕ್ತರು ಸಾಕ್ಷಿಯಾಗಲಿದ್ದಾರೆ.
ಇದರೊಂದಿಗೆ ವಿಶೇಷ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮಗಳು ಹಾಗೂ ಅಂತರರಾಷ್ಟ್ರೀಯ ಮಟ್ಟದ ಕಲಾವಿದರಿಂದ ಕಲಾ ಪ್ರದರ್ಶನಗಳನ್ನು ಆಯೋಜಿಸಲಾಗಿದೆ.
ಸೆಪ್ಟೆಂಬರ್ 6ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮದ ಸಮಾರೋಪ ಸಮಾರಂಭ ನಡೆಯಲಿದ್ದು, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಗುತ್ತದೆ. ಅಷ್ಟಮಂಗಲ ಪ್ರಶ್ನೆಯ ಅನುಸಾರದಂತೆ ಕೋಟಿ ತುಳಸಿ ಅರ್ಚನೆಯನ್ನೂ ಕೈಗೊಳ್ಳಲಾಗಿದೆ.